ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ತಮ್ಮ ಪ್ರಭುಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಿದೆ. ಆದ್ದರಿಂದ ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬ ನಾಗರಿಕ ತನ್ನ ಜವಾಬ್ದಾರಿ ಎಂದು ಅರಿತು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೆ.ಸಿ. ಕಡೂರ ಹೇಳಿದರು.
ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯಿತಿಯ ಸಂಕದಾಳ ಗ್ರಾಮದಲ್ಲಿಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶೇ.100ರಷ್ಟು ಪ್ರಮಾಣದಲ್ಲಿ ಮತ ಚಲಾಯಿಸುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಆದ್ದರಿಂದ ತಾಲೂಕು ವ್ಯಾಪ್ತಿಯಲ್ಲಿಯ, ಗ್ರಾಮೀಣ ಪ್ರದೇಶದಲ್ಲಿಯ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರಣೆ ನೀಡುವ ಕಾರ್ಯ ಮಾಡುತಿದ್ದೇವೆ. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನಕ್ಕೆ ನಿಗದಿಪಡಿಸಲಾಗಿದೆ. ಎಲ್ಲರೂ ಪ್ರಜಾಪ್ರಭುತ್ವದ ಮತದಾನ ಹಬ್ಬದಲ್ಲಿ ಭಾಗಿಯಾಗುವಂತೆ ತಿಳಿಸಿದರಲ್ಲದೆ, ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾ.ಪಂ ಕಾರ್ಯದರ್ಶಿ ಟಿ.ಆರ್. ಪವಾರ, ಸಿಬ್ಬಂದಿಗಳಾದ ಬಸಪ್ಪ ಲಮಾಣಿ, ತೀರಮಲಪ್ಪ ವಡ್ಡರ, ಟಿಆರ್ಎಂ ಗೌರಮ್ಮ ಎನ್.ಲಮಾಣಿ, ವಿಆರ್ಡಬ್ಲು ನಾಮದೇವ ಲಮಾಣಿ, ನರೇಗಾ ಕಾಯಕ ಬಂಧುಗಳು ಇದ್ದರು.