ಬೆಂಗಳೂರು: ಸಿಇಟಿ ಕೌನ್ಸೆಲಿಂಗ್ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಶೇಷ ಕಾರ್ಯಾಗಾರ ಆಯೋಜಿಸಿದೆ.
ರಾಜ್ಯದ 65 ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮೇ 25ರಿಂದ 30ರವರೆಗೆ “ಸೀಟು ಹಂಚಿಕೆ ಮಂಥನ” ಕಾರ್ಯಕ್ರಮ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಮೇ 28ರಂದು ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10ರಿಂದ 12 ಗಂಟೆವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆವರೆಗೆ ಎರಡು ಸೆಷನ್ಗಳಲ್ಲಿ ಕಾರ್ಯಾಗಾರ ನಡೆಯಲಿದೆ.
ಕೆಇಎಯಿಂದ ತರಬೇತಿ ಪಡೆದ ನುರಿತ ಸಂಪನ್ಮೂಲ ವ್ಯಕ್ತಿಗಳು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕೆಇಎ ವೆಬ್ಸೈಟ್ನಲ್ಲಿ ಮುಂಚಿತವಾಗಿ ಸ್ಲಾಟ್ ಬುಕ್ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ವೆಬ್ಸೈಟ್ನಲ್ಲಿ ನೀಡಿರುವ ಲಿಂಕ್ ಮೂಲಕ ಸಮಯ ಹಾಗೂ ಕಾರ್ಯಾಗಾರ ನಡೆಯುವ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೆಇಎ ತಿಳಿಸಿದೆ.
ಅನೇಕ ಬಾರಿ ಉತ್ತಮ ರ್ಯಾಂಕ್ ಬಂದಿದ್ದರೂ, ಆಪ್ಷನ್ ಎಂಟ್ರಿಯಲ್ಲಿನ ಸಣ್ಣಪುಟ್ಟ ತಪ್ಪುಗಳಿಂದ ವಿದ್ಯಾರ್ಥಿಗಳು ಇಷ್ಟದ ಕಾಲೇಜು ಕಳೆದುಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ.
ಸೈಬರ್ ಸೆಂಟರ್ಗಳ ಎಡವಟ್ಟುಗಳು ಹಾಗೂ ವಿದ್ಯಾರ್ಥಿ-ಪೋಷಕರ ಮಾಹಿತಿ ಕೊರತೆಯಿಂದ ಈ ಸಮಸ್ಯೆಗಳು ಉಂಟಾಗುತ್ತಿದ್ದು, ಅದನ್ನು ತಪ್ಪಿಸಲು ಕಳೆದ ವರ್ಷ “ಸೀಟು ಹಂಚಿಕೆ ಮಂಥನ” ಆರಂಭಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ಈ ಬಾರಿಯೂ ಇನ್ನಷ್ಟು ಅಚ್ಚುಕಟ್ಟಾಗಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಸೀಟು ಹಂಚಿಕೆ ಪ್ರಕ್ರಿಯೆ, ಆಪ್ಷನ್ ಎಂಟ್ರಿ, ಸೀಟ್ ಅಲಾಟ್ಮೆಂಟ್ ನಂತರ ಆಯ್ಕೆ ಮಾಡಬೇಕಾದ ಛಾಯ್ಸ್ಗಳು, ಉತ್ತಮ ಕಾಲೇಜಿನ ನಿರೀಕ್ಷೆಯಿದ್ದರೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶುಲ್ಕ ಪಾವತಿ ವಿಧಾನ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.
ಇನ್ನು ನೀಟ್ ಪರೀಕ್ಷೆಗೆ ಸಿದ್ಧತೆ ಮಾಡುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವ ಅಗತ್ಯವಿಲ್ಲ. ಬೇಕಾದರೆ ಅವರ ಪರವಾಗಿ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆಯಬಹುದು ಎಂದು ಕೆಇಎ ಸಲಹೆ ನೀಡಿದೆ.

