Home Blog

ಖಾಕಿ ಪವರ್‌ಗೆ ಸಿಕ್ಕಿತು ಭರ್ಜರಿ ಯಶಸ್ಸು..! ಕಲಬುರಗಿಯಲ್ಲಿ 785 ಕಳೆದುಹೋದ ಮೊಬೈಲ್ ರಿಕವರಿ

ಕಲಬುರಗಿ: ಕಳೆದುಹೋದ ಮೊಬೈಲ್ ಫೋನ್ ಮರಳಿ ಸಿಗೋದು ಕನಸೇ ಸರಿ ಎನ್ನುವ ಕಾಲದಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಬರೋಬ್ಬರಿ 785 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ ಅಸಲಿ ಮಾಲೀಕರ ಕೈಗೆ ಒಪ್ಪಿಸಿದ್ದಾರೆ.

ಈ ಮೊಬೈಲ್‌ಗಳ ಒಟ್ಟು ಮೌಲ್ಯ 1 ಕೋಟಿ 44 ಲಕ್ಷ 90 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಿಇಐಆರ್ ಪೋರ್ಟಲ್ ಸಹಾಯದಿಂದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಟ್ರೇಸ್ ಮಾಡಿ ಪೊಲೀಸರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಈ ಆಪರೇಷನ್ ಸಾರ್ವಜನಿಕರಲ್ಲಿ ಭಾರೀ ವಿಶ್ವಾಸ ಮೂಡಿಸಿದೆ. ಮೊಬೈಲ್ ಕಳೆದುಕೊಂಡು ನಿರಾಶರಾಗಿದ್ದ ನೂರಾರು ಮಂದಿ ಮತ್ತೆ ತಮ್ಮ ಫೋನ್ ಪಡೆದು ಖುಷಿಪಟ್ಟಿದ್ದಾರೆ.

“ಪೊಲೀಸರು ಇಷ್ಟು ವೇಗವಾಗಿ ಮೊಬೈಲ್ ಹುಡುಕಿ ಕೊಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿದ ಕಲಬುರಗಿ ಪೊಲೀಸರ ಈ ಸಾಧನೆ ಈಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

‘ದಿ ಯಶ್ ಎಫೆಕ್ಟ್’ ಜಾಗತಿಕ ಸಂಚಲನ..! ವೆರೈಟಿ ಕವರ್ ಪೇಜ್ ಮೇಲೆ ಮಿಂಚಿದ ಕನ್ನಡದ ರಾಕಿಂಗ್ ಸ್ಟಾರ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಈಗ ಕೇವಲ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲ, ಗ್ಲೋಬಲ್ ಸಿನೆಮಾ ಐಕಾನ್ ಆಗಿ ಹೊರಹೊಮ್ಮುತ್ತಿದ್ದಾರೆ. ‘ಕೆಜಿಎಫ್’ ಬಳಿಕ ವಿಶ್ವ ಸಿನಿರಂಗದ ಗಮನ ಸೆಳೆದಿದ್ದ ಯಶ್, ಇದೀಗ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮ್ಯಾಗಜೀನ್ ‘ವೆರೈಟಿ’ ಕವರ್ ಪೇಜ್ ಮೇಲೆ ಮಿಂಚಿ ಮತ್ತೊಮ್ಮೆ ಭಾರತೀಯ ಸಿನೆಮಾದ ಶಕ್ತಿ ಪ್ರದರ್ಶಿಸಿದ್ದಾರೆ.

‘ದಿ ಯಶ್ ಎಫೆಕ್ಟ್’ ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾದ ಈ ಕವರ್ ಫೋಟೋದಲ್ಲಿ ಯಶ್ ಅತ್ಯಂತ ಸ್ಟೈಲಿಶ್ ಮತ್ತು ಕ್ಲಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಳಿ ಸೂಟ್, ಹ್ಯಾಟ್ ಹಾಗೂ ಐಷಾರಾಮಿ ಕಾರಿನೊಳಗಿನ ಅವರ ರಾಯಲ್ ಪೋಸ್ ಅಭಿಮಾನಿಗಳಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿದೆ.

ಈ ವಿಶೇಷ ಲೇಖನದಲ್ಲಿ ಯಶ್ ಅವರ ಜಾಗತಿಕ ಮಾರುಕಟ್ಟೆ, ಅವರ ನಿರ್ಮಾಣ ಸಂಸ್ಥೆ ಮತ್ತು ‘ಟಾಕ್ಸಿಕ್’ ಚಿತ್ರದ ಮಹತ್ವದ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಭಾರತೀಯ ಸಿನೆಮಾವನ್ನು ಹೊಸ ಹಂತಕ್ಕೆ ಕೊಂಡೊಯ್ಯಲಿದೆ ಎಂಬ ಭರವಸೆ ವ್ಯಕ್ತವಾಗಿದೆ.

ಸಾಮಾನ್ಯ ಮಾಸ್ ಸಿನಿಮಾಗಳ ಹಾದಿ ಬಿಟ್ಟು, ಕಲಾತ್ಮಕತೆ ಮತ್ತು ಗ್ಲೋಬಲ್ ಕಥಾಹಂದರದತ್ತ ಯಶ್ ಸಾಗುತ್ತಿರುವುದು ಸಿನಿಪ್ರಿಯರನ್ನು ಸೆಳೆಯುತ್ತಿದೆ. ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಮೂಲಕ ನಿರ್ಮಾಪಕರಾಗಿಯೂ ಯಶ್ ತಮ್ಮ ಪ್ರಭಾವ ವಿಸ್ತರಿಸುತ್ತಿದ್ದಾರೆ.

ವೆರೈಟಿ ಕವರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸೋಶಿಯಲ್ ಮೀಡಿಯಾ ಸ್ಫೋಟಗೊಂಡಿದ್ದು, #YashBOSS ಮತ್ತು #ToxicTheMovie ಟ್ರೆಂಡಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿವೆ. ಕನ್ನಡದ ನಟನೊಬ್ಬ ಹಾಲಿವುಡ್ ಮಟ್ಟದ ವೇದಿಕೆಯಲ್ಲಿ ಸದ್ದು ಮಾಡುತ್ತಿರುವುದು ಈಗ ಭಾರತೀಯ ಚಿತ್ರರಂಗಕ್ಕೆ ಹೊಸ ಹೆಮ್ಮೆ ತಂದಿದೆ.

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ಸಚಿವರ ಪ್ರಮಾಣ ವಚನ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರ ತನ್ನ ನೂತನ ಸಂಪುಟವನ್ನು ವಿಸ್ತರಿಸಿದೆ. ಒಟ್ಟು 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಕ್ಷಿಯಾಗಿದ್ದು, ಎನ್‌ಡಿಎ ಮೈತ್ರಿಕೂಟದ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಯಿತು.

ನೂತನ ಸಂಪುಟದಲ್ಲಿ ಮಾಜಿ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಸೇರ್ಪಡೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಜೊತೆಗೆ ಬಿಜೆಪಿ, ಜೆಡಿ(ಯು), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ ಹಾಗೂ ಇತರೆ ಮೈತ್ರಿ ಪಕ್ಷಗಳ ನಾಯಕರಿಗೆ ಅವಕಾಶ ನೀಡಲಾಗಿದೆ.

ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಹಿರಿಯ ನಾಯಕರು ಶ್ರಾವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಸೇರಿದಂತೆ ಅನುಭವಿಗಳಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅನುಭವ ಮತ್ತು ಯುವ ನಾಯಕರ ಸಮತೋಲನ ಸಾಧಿಸುವ ಉದ್ದೇಶದಿಂದ ಸಂಪುಟ ರಚನೆ ಮಾಡಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರ ನೇತೃತ್ವದಲ್ಲಿ ಸಂಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಮುಂಬರುವ ಚುನಾವಣೆಗೆ ಎನ್‌ಡಿಎ ಒಗ್ಗಟ್ಟಿನ ಸಂದೇಶ ರವಾನಿಸಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ: ಅರ್ಜಿ ವಿಚಾರಣೆ ಮೇ 26ಕ್ಕೆ ಮುಂದೂಡಿಕೆ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 15ನೇ ಅಪರಾಧಿ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಹಾಗೂ ನ್ಯಾಯಮೂರ್ತಿ ರಾಜೇಶ್ ರೈ ಕೆ. ಅವರಿದ್ದ ವಿಭಾಗೀಯ ಪೀಠ ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.

ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಅಗತ್ಯವಿದೆ ಎಂದು ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.

ಇದೇ ಪ್ರಕರಣದಲ್ಲಿ 7 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಪೊಲೀಸ್ ವೃತ್ತ ನಿರೀಕ್ಷಕ ಚನ್ನಕೇಶವ ಟಿಂಗರೀಕರ್ ಪರ ವಕೀಲರು ಪ್ರತ್ಯೇಕ ಮನವಿ ಸಲ್ಲಿಸಿ, ಅವರ ವಿರುದ್ಧ ಜಾಮೀನು ನೀಡಬಹುದಾದ ಅಪರಾಧಗಳಷ್ಟೇ ಇರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಈ ಕುರಿತು ವಾದ ಆಲಿಸಿದ ನ್ಯಾಯಪೀಠ, ಟಿಂಗರೀಕರ್ ಅವರ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬಹುದೆಂದು ಸೂಚಿಸಿ, ಅದನ್ನು ಮೇ 14ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೇಶ್‌ಗೌಡ ಹತ್ಯೆಗೀಡಾಗಿದ್ದರು. ಬೆಳಗ್ಗೆ ಜಿಮ್‌ನಲ್ಲಿ ಪತ್ರಿಕೆ ಓದುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸರು ತನಿಖೆ ನಡೆಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ ತನಿಖೆ ಸಮರ್ಪಕವಾಗಿಲ್ಲ ಎಂದು ಆರೋಪಿಸಿ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು.

2019ರಲ್ಲಿ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಯೋಗೇಶ್‌ಗೌಡ ಕುಟುಂಬಸ್ಥರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು.

ಬಳಿಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು. ನಂತರ 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯತ್ನ ನಡೆದಿದೆ ಎಂಬ ವಿಶ್ವಾಸಾರ್ಹ ಸಾಕ್ಷ್ಯಗಳ ಆಧಾರದ ಮೇಲೆ 2025ರ ಜೂನ್ 7ರಂದು ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿತ್ತು.

ನಂತರ ನ್ಯಾಯಾಲಯದ ಸೂಚನೆ ಮೇರೆಗೆ ವಿನಯ್ ಕುಲಕರ್ಣಿ ಶರಣಾಗಿದ್ದು, ನ್ಯಾಯಾಂಗ ಬಂಧನಕ್ಕೊಳಗಾಗಿದ್ದರು. 2026ರ ಫೆಬ್ರುವರಿ 27ರಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಿ, ವಿನಯ್ ಕುಲಕರ್ಣಿ ಸೇರಿದಂತೆ ಪ್ರಮುಖ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೊತೆಗೆ 19ನೇ ಆರೋಪಿ ಚನ್ನಕೇಶವ ಟಿಂಗರೀಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು.

ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ: ಪಕ್ಕದ ಮನೆಯ ಯುವಕ ಅರೆಸ್ಟ್!

ಬೆಂಗಳೂರು: ಟೆಕ್ಕಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಬಾತ್‌ರೂಂ ಕಿಟಕಿ ಬಳಿ ನಿಂತು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಲು ಯತ್ನಿಸಿದ ಆರೋಪಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಕಳೆದ ಏಪ್ರಿಲ್ 30ರಂದು ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್‌ನಲ್ಲಿ ನಡೆದಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕೆಲಸ ಮುಗಿಸಿ ಮನೆಗೆ ಬಂದ ಯುವತಿ ರಾತ್ರಿ ಸುಮಾರು 9.30ರ ವೇಳೆಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಮನೆಯ ಬಾತ್‌ರೂಂ ಕಿಟಕಿ ಬಳಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಿಸಲಾಗುತ್ತಿರುವುದನ್ನು ಅವರು ಗಮನಿಸಿದ್ದಾರೆ.

ತಕ್ಷಣವೇ ಯುವತಿ ಕಿರುಚಿಕೊಂಡಿದ್ದು, ಇದರಿಂದ ಗಾಬರಿಗೊಂಡ ಆರೋಪಿ ಸ್ಥಳದಿಂದ ಮೊಬೈಲ್ ಸಮೇತ ಪರಾರಿಯಾಗಿದ್ದಾನೆ.

ಘಟನೆಯ ಬಳಿಕ ಯುವತಿ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಕಾರ್ತಿಕ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಕಾರ್ತಿಕ್ ಮೂಲತಃ ಕೇರಳದವನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಕಾರ್ತಿಕ್, ದೂರುದಾರ ಯುವತಿಯ ಮನೆಯ ಪಕ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ. ಪ್ರಕರಣ ಸಂಬಂಧ ಮಹದೇವಪುರ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದು, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಕೇಸ್: ನಿವೃತ್ತಿ ಸಮೀಪವಾಗಿದ್ದರಿಂದ ಅಮಾನತು ವಾಪಸ್ – ಪರಮೇಶ್ವರ್

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅವರ ಅಮಾನತು ಆದೇಶ ಹಿಂಪಡೆಯಲು ಅವರ ಈ ತಿಂಗಳಲ್ಲಿನ ನಿವೃತ್ತಿಯೇ ಪ್ರಮುಖ ಕಾರಣ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಅನುಮತಿ ಪಡೆದು ಡಿಪಿಎಆರ್ ವತಿಯಿಂದ ಅಮಾನತು ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಈ ತಿಂಗಳ ಅಂತ್ಯಕ್ಕೆ ರಾಮಚಂದ್ರರಾವ್ ನಿವೃತ್ತಿಯಾಗಲಿದ್ದಾರೆ. ಅದಕ್ಕಾಗಿ ಅಮಾನತು ವಾಪಸ್ ಪಡೆಯಲಾಗಿದೆ. ನಿವೃತ್ತಿಗೆ ಮುನ್ನ ಪಿಂಚಣಿ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳಿಗೆ ರಾಮಚಂದ್ರರಾವ್ ವಿವರಣೆ ಸಲ್ಲಿಸಿದ್ದು, ತನಿಖೆ ಮುಂದುವರಿಯಲಿ, ಆದರೆ ನಿವೃತ್ತಿಗೆ ಸಂಬಂಧಿಸಿದ ಪಿಂಚಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು ಎಂದು ಪರಮೇಶ್ವರ್ ತಿಳಿಸಿದರು.

ಈ ವಿಚಾರ ನನಗೂ ತಿಳಿದಿತ್ತು. ಆದರೆ ಅಮಾನತು ಹಿಂಪಡೆಯುವುದು ಸರಿಯೋ ತಪ್ಪೋ ಎಂದು ನಾನು ಹೇಳಲು ಸಾಧ್ಯವಿಲ್ಲ. ಇದು ಡಿಪಿಎಆರ್ ಮತ್ತು ಮುಖ್ಯಮಂತ್ರಿಗಳ ವ್ಯಾಪ್ತಿಗೆ ಒಳಪಡುವ ವಿಷಯ. ಅಂತಿಮ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ರಾಮಚಂದ್ರರಾವ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ತನಿಖೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ವಿಜಯ್‌ಗೆ ಸಿಎಂ ಕುರ್ಚಿ ಕೊಡಲೇಬೇಕು..! ರಾಜ್ಯಪಾಲರ ನಡೆ ವಿರುದ್ಧ ಕಮಲ್ ಹಾಸನ್ ಕಿಡಿ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅತಂತ್ರ ಸ್ಥಿತಿ ಮುಂದುವರಿದಿರುವ ಬೆನ್ನಲ್ಲೇ ನಟ ಕಮಲ್ ಹಾಸನ್ ಸಿಡಿದೆದ್ದಿದ್ದಾರೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿರುವ ಅವರು, ರಾಜ್ಯಪಾಲರ ವಿಳಂಬ ಧೋರಣೆ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಟಿವಿಕೆ 108 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಕಾಂಗ್ರೆಸ್ ಬೆಂಬಲದೊಂದಿಗೆ ಸಂಖ್ಯೆ 112ಕ್ಕೆ ಏರಿದೆ. ಆದರೂ ಬಹುಮತಕ್ಕೆ ಬೇಕಾದ 118 ಸಂಖ್ಯೆಯಿಂದ ಇನ್ನೂ 6 ಸ್ಥಾನ ದೂರದಲ್ಲಿದೆ. ಇದೇ ಕಾರಣಕ್ಕೆ ಸರ್ಕಾರ ರಚನೆ ಪ್ರಕ್ರಿಯೆ ಗೊಂದಲಕ್ಕೆ ಸಿಲುಕಿದೆ.

ಈ ಕುರಿತು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಕಮಲ್ ಹಾಸನ್, “ಜನರು ಯಾರನ್ನೂ ಸಂಪೂರ್ಣ ಬಹುಮತದೊಂದಿಗೆ ಆಯ್ಕೆ ಮಾಡಿಲ್ಲ. ಆದರೆ ಅತಿದೊಡ್ಡ ಪಕ್ಷವನ್ನು ಸರ್ಕಾರ ರಚನೆಗೆ ಕರೆಯದಿರುವುದು ಜನರ ಆದೇಶಕ್ಕೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಹುಮತ ಪರೀಕ್ಷೆ ರಾಜಭವನದಲ್ಲಿ ಅಲ್ಲ, ವಿಧಾನಸಭೆಯಲ್ಲಿ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟಪಡಿಸಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಕರ್ತವ್ಯವನ್ನು ಮರೆಯಬಾರದು” ಎಂದು ಅವರು ರಾಜ್ಯಪಾಲರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಎಂ.ಕೆ. ಸ್ಟಾಲಿನ್ ಅವರನ್ನು ಉಲ್ಲೇಖಿಸಿದ ಕಮಲ್ ಹಾಸನ್, “ಜನರ ತೀರ್ಪನ್ನು ಗೌರವಿಸುತ್ತೇವೆ ಎಂದು ಹೇಳಿರುವ ಸ್ಟಾಲಿನ್ ಅವರ ನಿಲುವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿದೆ” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಲೆ ಎಬ್ಬಿಸಿರುವ ವಿಜಯ್, ಕೇವಲ ಎರಡು ವರ್ಷದಲ್ಲಿ ಪಕ್ಷವನ್ನು ಅಧಿಕಾರದ ಬಾಗಿಲಿಗೆ ತಂದು ನಿಲ್ಲಿಸಿದ್ದಾರೆ. ಈಗ ರಾಜ್ಯಪಾಲರ ನಿರ್ಧಾರವೇ ವಿಜಯ್ ರಾಜಕೀಯ ಭವಿಷ್ಯ ಮಾತ್ರವಲ್ಲ, ತಮಿಳುನಾಡಿನ ಮುಂದಿನ ಸರ್ಕಾರದ ದಿಕ್ಕನ್ನೂ ನಿರ್ಧರಿಸಲಿದೆ.

ಬೇಸಿಗೆಯ ಬಿಸಿಗೆ ಬತ್ತಿದ ಕೃಷ್ಣಾ ನದಿ; ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಭಕ್ತರು, ರೈತರು

ಯಾದಗಿರಿ: ಮಳೆಗಾಲದಲ್ಲಿ ಪ್ರವಾಹದ ಅಬ್ಬರದಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ, ಇದೀಗ ಬೇಸಿಗೆಯ ತೀವ್ರ ಬಿಸಿಲಿನಿಂದ ಸಂಪೂರ್ಣ ಬರಿದಾಗಿರುವ ದೃಶ್ಯ ಯಾದಗಿರಿ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.

ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣಾ ನದಿ ನೀರಿನ ಕೊರತೆಯಿಂದ ಒಣಗಿದ್ದು, ರೈತರು ಹಾಗೂ ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿರುವ ಮೌನೇಶ್ವರ ದೇಗುಲ ‘ದಕ್ಷಿಣ ಕಾಶಿ’ ಎಂದೇ ಪ್ರಸಿದ್ಧಿ ಪಡೆದಿದೆ. ಕೃಷ್ಣಾ ನದಿ ತೀರದಲ್ಲಿರುವ ಈ ದೇವಸ್ಥಾನಕ್ಕೆ ಪ್ರತಿನಿತ್ಯ ಅನೇಕ ಭಕ್ತರು ಆಗಮಿಸಿ, ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವರ ದರ್ಶನ ಪಡೆಯುವುದು ಸಂಪ್ರದಾಯವಾಗಿದೆ.

ಆದರೆ ಇದೀಗ ನದಿ ಬತ್ತಿಹೋಗಿರುವುದರಿಂದ ಭಕ್ತರು ಪುಣ್ಯಸ್ನಾನ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ.

ನದಿಯಲ್ಲಿ ನೀರಿನ ಮಟ್ಟ ಕುಸಿದ ಪರಿಣಾಮ ಮೀನುಗಳ ಸಂಖ್ಯೆಯೂ ಕಡಿಮೆಯಾಗಿದ್ದು, ಇದರಿಂದ ಪಕ್ಷಿಗಳಿಗೆ ಆಹಾರದ ಕೊರತೆ ಎದುರಾಗಿದೆ. ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದೆ.

ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ತಕ್ಷಣ ನೀರು ಹರಿಸುವಂತೆ ಸ್ಥಳೀಯರು ಹಾಗೂ ಭಕ್ತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪ್ರವಾಹದ ಅಬ್ಬರದಿಂದ ಹೆಸರುವಾಸಿಯಾಗಿದ್ದ ಕೃಷ್ಣಾ ನದಿ ಇಂದು ಬರಿದಾದ ಸ್ಥಿತಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಪರಿಸರ ಪ್ರೇಮಿಗಳಲ್ಲೂ ಆತಂಕ ಮೂಡಿಸಿದೆ.

ಬಂಡವಾಳದಿಂದ ಐಪಿಎಲ್ ತನಕ ಎಲ್ಲವೂ ಗುಜರಾತ್ʼಗೆ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ದೇಶದ ಬಂಡವಾಳ ಹೂಡಿಕೆಗಳಿಂದ ಹಿಡಿದು ಐಪಿಎಲ್ ಪಂದ್ಯಗಳವರೆಗೆ ಎಲ್ಲವೂ ಗುಜರಾತ್‌ಗೆ ಕೇಂದ್ರೀಕೃತವಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಗೊಂಡ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಐಪಿಎಲ್ ಪಂದ್ಯಗಳನ್ನೂ ಗುಜರಾತ್‌ಗೆ ಕೊಂಡೊಯ್ಯಲಾಗುತ್ತಿದೆ. ದೇಶದ ಬಂಡವಾಳವೂ ಅಲ್ಲಿಗೆ ಹರಿದು ಹೋಗುತ್ತಿದೆ. ಬಿಸಿಸಿಐ ಮತ್ತು ಐಸಿಸಿಯಲ್ಲಿ ಜಯ್ ಶಾ ಇದ್ದಾರೆ. ಅವರಿಗೆ ಇಷ್ಟ ಬಂದಂತೆ ನಿರ್ಧಾರ ಮಾಡುತ್ತಾರೆ. ಬೆಂಗಳೂರಿನಿಂದ ಪಂದ್ಯವನ್ನು ಎತ್ತಿ ಹೈದರಾಬಾದ್‌ಗೆ ಅಥವಾ ಗುಜರಾತ್‌ಗೆ ಸ್ಥಳಾಂತರಿಸುತ್ತಾರೆ. ಇಲ್ಲಿ ಭದ್ರತೆ ಇಲ್ಲವೇ? ಹಾಗಿದ್ದರೆ ಪಂದ್ಯ ಯಾಕೆ ಶಿಫ್ಟ್ ಮಾಡಲಾಗಿದೆ? ಎಂದು ಪ್ರಶ್ನಿಸಿದರು.

ಹೂಡಿಕೆ ಯೋಜನೆಗಳ ವಿಷಯದಲ್ಲೂ ಗುಜರಾತ್‌ಗೆ ಅನಗತ್ಯ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಗುಜರಾತ್‌ಗೆ ಆರು ಸೆಮಿಕಂಡಕ್ಟರ್ ಯೋಜನೆಗಳು ಹೋಗಿವೆ. ಕಂಪನಿಗಳು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸುವಾಗ ಮೊದಲ ಆದ್ಯತೆಯ ರಾಜ್ಯವಾಗಿ ಕರ್ನಾಟಕ ಅಥವಾ ತಮಿಳುನಾಡನ್ನು ನಮೂದಿಸಿದ್ದರೂ, ಅಂತಿಮವಾಗಿ ಯೋಜನೆಗಳು ಗುಜರಾತ್ ಅಥವಾ ಅಸ್ಸಾಂಗೆ ಹೋಗುತ್ತಿವೆ. ಇದು ಹೇಗೆ ಸಾಧ್ಯ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟತೆ ನೀಡಲಿ; ಕಾಂಗ್ರೆಸ್ ಗೊಂದಲಕ್ಕೆ ರಾಜಣ್ಣ ಬೇಸರ

ಮೈಸೂರು: ಮುಖ್ಯಮಂತ್ರಿ ಸ್ಥಾನ ಕುರಿತ ಗೊಂದಲಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಶೀಘ್ರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತಾವು ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರೂ, ಹೈಕಮಾಂಡ್‌ನಿಂದ ಸ್ಪಷ್ಟ ಸಂದೇಶ ಹೊರಬರಬೇಕೆಂದು ತಿಳಿಸಿದ್ದಾರೆ.

ನಾನು ಸಿಎಂ ಬದಲಾಗುತ್ತಾರೆ ಎಂದೂ ಹೇಳಲ್ಲ, ಮುಂದುವರಿಯುತ್ತಾರೆ ಎಂದೂ ಹೇಳಲ್ಲ. ಆದರೆ ಹೈಕಮಾಂಡ್ ಸಿಎಂಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಅಧಿಕಾರ ಮುಂದುವರಿಸಿ ಎಂದು ಗ್ರೀನ್ ಸಿಗ್ನಲ್ ನೀಡಲಿ. ಇಲ್ಲವೇ ಬದಲಾವಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಲಿ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಅನಿಶ್ಚಿತತೆ ಮುಂದುವರಿದರೆ ಅದು ಸರ್ಕಾರ ಮತ್ತು ಪಕ್ಷ ಎರಡಕ್ಕೂ ಹಲವು ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಜಣ್ಣ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ಜಾಗರೂಕತೆಯಿಂದ ನಿರ್ಧಾರ ಕೈಗೊಳ್ಳಬೇಕು. ತೀರ್ಮಾನ ತಡವಾದಷ್ಟು ಅದು ಸರ್ಕಾರದ ಕಾರ್ಯಕ್ಷಮತೆ ಮತ್ತು ಪಕ್ಷದ ಸಂಘಟನೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟರು.

error: Content is protected !!