ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದಲ್ಲಿ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಗಾಜಿಯಾಬಾದ್ನ ಇಂದಿರಾಪುರಂ ನಿವಾಸಿ ಹರ್ಷಿತ್ ಭಟ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಅಮಿಟಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ಪರೀಕ್ಷೆಗಳ ನಂತರ ಪಾರ್ಟಿಗಾಗಿ ಸೂಪರ್ನೋವಾ ಸಮೀಪದ ನಿರ್ಜನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಹರ್ಷಿತ್ ನೀರು ತುಂಬಿದ ಹೊಂಡದ ಬಳಿ ಸ್ನಾನಕ್ಕೆ ಇಳಿದಾಗ ಅಕಸ್ಮಾತ್ ಆಳವಾದ ನೀರಿಗೆ ಜಾರಿ ಮುಳುಗಲು ಆರಂಭಿಸಿದ್ದಾನೆ.
ಆತನನ್ನು ರಕ್ಷಿಸಲು ಮೂವರು ಸ್ನೇಹಿತರು ಕೂಡ ನೀರಿಗೆ ಇಳಿದರೂ, ಅವರು ಸಹ ಸಂಕಷ್ಟಕ್ಕೆ ಸಿಲುಕಿದ್ದರು. ಇವರ ಕಿರುಚಾಟ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಹರ್ಷಿತ್ ಭಟ್ ಅವರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಇನ್ನು ಉಳಿದ ಮೂವರು ಸ್ನೇಹಿತರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಿಖರ ಕಾರಣ ತಿಳಿಯಲು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

