Home Blog

ಅಮೆರಿಕದಲ್ಲಿ ತಾಯಿ-ತಮ್ಮನ ಹತ್ಯೆ; ಕೊಲೆ ಸಂಚಿಗೆ ChatGPT ಬಳಸಿದ ಭಾರತೀಯ ಮೂಲದ ಯುವಕ!

0

ವಾಷಿಂಗ್ಟನ್: ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ತನ್ನ ತಾಯಿ ಹಾಗೂ ತಮ್ಮನನ್ನು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.

ಕೊಲೆ ಮಾಡಲು ಸಂಚು ರೂಪಿಸುವ ಸಂದರ್ಭದಲ್ಲಿ ಆತ ಇಂಟರ್ನೆಟ್ ಹಾಗೂ ChatGPT ಸೇರಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಬೋಸ್ಟನ್‌ನಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಆಕ್ಟನ್‌ನ ಮಾರ್ತಾ ಲೇನ್‌ನ ಮನೆಯೊಂದರಲ್ಲಿ ಆಗಸ್ಟ್ 11ರಂದು ಈ ಘಟನೆ ನಡೆದಿದೆ. ಆಕ್ಟನ್ ನಿವಾಸಿ ಅರ್ಜುನ್ ಅರವಿಂದ್ ಆರೋಪಿಯಾಗಿದ್ದು, ಆತನ ತಾಯಿ ಸುಧಾ ವೆಂಕಟೇಶನ್ (45) ಹಾಗೂ ತಮ್ಮ ಸಿದ್ಧಾರ್ಥ್ ಅರವಿಂದ್ (14) ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಆಕ್ಟನ್‌ನ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದ ಅರ್ಜುನ್ ಮನೆಯಲ್ಲೇ ತನ್ನ ತಾಯಿ ಮತ್ತು ತಮ್ಮನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಬಳಿಕ ತನ್ನ ತಾಯಿಯ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ನಡೆದ ದಿನ ಸಂಜೆ 6:30ರ ಸುಮಾರಿಗೆ ಟ್ಯೂಷನ್ ಶಿಕ್ಷಕರೊಬ್ಬರು ಮನೆಗೆ ಬಂದಿದ್ದರು. ಹಲವು ಬಾರಿ ಬಾಗಿಲು ತಟ್ಟಿದರೂ ಯಾರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅವರು ಅರ್ಜುನ್ ತಂದೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಕುಟುಂಬಸ್ಥರನ್ನು ಸಂಪರ್ಕಿಸಲು ತಂದೆ ಹಲವು ಬಾರಿ ಪ್ರಯತ್ನಿಸಿದರೂ ಯಾರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಆತಂಕಗೊಂಡ ಅವರು ಆಕ್ಟನ್ ಪೊಲೀಸರನ್ನು ಸಂಪರ್ಕಿಸಿ ಮನೆಯವರ ಸುರಕ್ಷತೆ ಬಗ್ಗೆ ಪರಿಶೀಲಿಸುವಂತೆ ಮನವಿ ಮಾಡಿದರು.

ಮಾಹಿತಿ ಪಡೆದ ಪೊಲೀಸರು ತಕ್ಷಣ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯ ನೆಲಮಾಳಿಗೆಯಲ್ಲಿ ಸುಧಾ ವೆಂಕಟೇಶನ್ ಅವರ ಮೃತದೇಹ ಹಾಗೂ ಮೊದಲ ಮಹಡಿಯಲ್ಲಿ ಸಿದ್ಧಾರ್ಥ್ ಅರವಿಂದ್ ಅವರ ಮೃತದೇಹ ಪತ್ತೆಯಾಗಿದೆ. ಇಬ್ಬರ ಮೃತದೇಹಗಳ ಮೇಲೂ ಗಾಯದ ಗುರುತುಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಅರ್ಜುನ್ ನಾಪತ್ತೆಯಾಗಿದ್ದ. ಆತ ಬಳಸಿದ್ದ ಕಾರಿನೊಂದಿಗೆ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು.

ಬಳಿಕ ವೇಲ್ಯಾಂಡ್‌ನ ಪಾರ್ಕಿಂಗ್ ಸ್ಥಳವೊಂದರಲ್ಲಿ ಕಾರು ಪತ್ತೆಯಾಗಿದೆ. ಕಾರಿನೊಳಗಿದ್ದ ಅರ್ಜುನ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತನಿಖೆಯ ವೇಳೆ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಲು ಅರ್ಜುನ್ ಇಂಟರ್ನೆಟ್‌ನಲ್ಲಿ ಮಾಹಿತಿ ಹುಡುಕಿದ್ದಾನೆ ಹಾಗೂ ChatGPT ಬಳಸಿದ್ದಾನೆ ಎಂಬುದು ಪೊಲೀಸರ ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ.

ಸದ್ಯ ಅರ್ಜುನ್ ವಿರುದ್ಧ ಎರಡು ಕೊಲೆ ಪ್ರಕರಣಗಳು ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ವಿಚಾರಣೆಗಾಗಿ ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸರ್ಕಾರ-ಪ್ರತಿಪಕ್ಷಗಳ ಜಿದ್ದಾಜಿದ್ದಿಗೆ ವೇದಿಕೆ ಸಜ್ಜು; ಇಂದಿನಿಂದ ಮುಂಗಾರು ಅಧಿವೇಶನ ಆರಂಭ!

0

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ.

ಆಗಸ್ಟ್ 27ರವರೆಗೆ ಒಟ್ಟು 15 ದಿನಗಳ ಕಾಲ, 10 ಕಾರ್ಯದಿನಗಳಲ್ಲಿ ಅಧಿವೇಶನ ನಡೆಯಲಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.

ಸಂಪುಟ ಸಹೋದ್ಯೋಗಿಗಳ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರ ಸಭೆ ನಡೆಸಿ, ಅಧಿವೇಶನದಲ್ಲಿ ಪ್ರತಿಪಕ್ಷಗಳ ದಾಳಿಯನ್ನು ಎದುರಿಸಲು ಅಗತ್ಯ ತಂತ್ರಗಾರಿಕೆ ರೂಪಿಸಿದ್ದಾರೆ. ಕಲಾಪ ಮುಗಿದ ಬಳಿಕ ಸಚಿವ ಸಂಪುಟ ಸಭೆಯೂ ನಡೆಯಲಿದ್ದು, ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಅಧಿವೇಶನದ ಮೊದಲ ದಿನವಾದ ಇಂದು ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಡಿ. ಸುಧಾಕರ್, ಚೆನ್ನಮ್ಮ ದೇವೇಗೌಡ ಸೇರಿದಂತೆ ಹಲವು ಗಣ್ಯರಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚಿಸಲಾಗುತ್ತದೆ.

ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿಧಾನ ಪರಿಷತ್‌ನ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ಅವರು ಕಾರ್ಯನಿರ್ವಹಿಸಲಿದ್ದಾರೆ.

ಆಗಸ್ಟ್ 14ರಂದು ಹೊಸ ವಿಧಾನಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್‌ನಿಂದ ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರು ಕೇಳಿಬರುತ್ತಿದೆ.

ಇನ್ನು ಉಪಸಭಾಧ್ಯಕ್ಷ ಹುದ್ದೆಗೆ ಸೂಚಿತರಾಗಿದ್ದ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಪರ್ಯಾಯ ಅಭ್ಯರ್ಥಿಯ ಹುಡುಕಾಟ ಮುಂದುವರಿದಿದೆ.

ಆರೋಪಗಳನ್ನು ಎದುರಿಸುತ್ತಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿದೆ. ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿಯೂ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿವೆ. ಪಾದಯಾತ್ರೆ ಸೇರಿದಂತೆ ಸದನದ ಒಳಗೂ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಮಳೆಹಾನಿ, ಕಾವೇರಿ ನೀರು ಹಂಚಿಕೆ ವಿವಾದ, ಪ್ರಮುಖ ವಿಧೇಯಕಗಳ ಮಂಡನೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಈ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಗಸ್ಟ್ 16ರಂದು ಭಾನುವಾರವಾಗಿರುವುದರಿಂದ ಸರ್ಕಾರಿ ರಜೆ ಇರಲಿದೆ. ಹೀಗಾಗಿ ಆಗಸ್ಟ್ 17ರಿಂದ ವಿಧಾನಮಂಡಲದ ಕಲಾಪ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

ಶಾಸಕರು ಸಚಿವರಾಗಿ ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಆಸನ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಸಿದ್ದರಾಮಯ್ಯ, ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖ ನಾಯಕರ ಆಸನಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಹಿರಿತನದ ಆಧಾರದ ಮೇಲೆ ಹೊಸ ಸಚಿವರಿಗೆ ಮುಂಭಾಗದ ಸಾಲಿನಲ್ಲಿ ಆಸನ ಕಲ್ಪಿಸಲಾಗಿದೆ.

ವಿಧಾನ ಪರಿಷತ್‌ನ ಹಂಗಾಮಿ ಸಭಾಪತಿ ಪುಟ್ಟಣ್ಣ ಅವರು ಈಗಾಗಲೇ ಕಲಾಪದ ಸಿದ್ಧತೆಗಳನ್ನು ಪರಿಶೀಲಿಸಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಬಸ್ ಸಂಚಾರ, ಬಿಗಿ ಪೊಲೀಸ್ ಬಂದೋಬಸ್ತ್

0

ಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಮುಖ ಕನ್ನಡಪರ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಹಾಗೂ ಸಾರ್ವಜನಿಕ ಜನಜೀವನ ಎಂದಿನಂತೆ ಮುಂದುವರಿದಿದೆ.

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಗರದ ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲೂ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಫ್ರೀಡಂ ಪಾರ್ಕ್‌ಗೆ ಮಾತ್ರ ಪ್ರತಿಭಟನೆ ಅವಕಾಶ:

ಪ್ರತಿಭಟನೆ ನಡೆಸಲು ಫ್ರೀಡಂ ಪಾರ್ಕ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಟೌನ್‌ಹಾಲ್ ಸೇರಿದಂತೆ ನಗರದ ಇತರೆ ಭಾಗಗಳಿಂದ ರ‍್ಯಾಲಿ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ನಿಯಮ ಉಲ್ಲಂಘಿಸಿ ರ‍್ಯಾಲಿ ನಡೆಸಲು ಯತ್ನಿಸಿದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಸಾರಿಗೆಗೆ ಅಡ್ಡಿಪಡಿಸುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ವರ್ತಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಯ ನೀಡಿದ್ದಾರೆ.

ಮೆಜೆಸ್ಟಿಕ್, ಶಾಂತಿನಗರದಲ್ಲಿ ಎಂದಿನಂತೆ ಬಸ್ ಸಂಚಾರ:

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ಬಸ್‌ಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆದರೆ ಸದ್ಯ ಪರಿಸ್ಥಿತಿ ಸಹಜವಾಗಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಸಾಗಿದೆ.

ಮೆಜೆಸ್ಟಿಕ್‌ನಲ್ಲಿ ಎಸಿಪಿ ದೀಪಕ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ಓಡಾಟಕ್ಕೂ ಯಾವುದೇ ವ್ಯತ್ಯಯವಾಗಿಲ್ಲ.

ಅತ್ತಿಬೆಲೆಯಲ್ಲಿ ರಸ್ತೆ ತಡೆ:

ಇನ್ನು ಬಂದ್‌ಗೆ ಬೆಂಬಲ ಸೂಚಿಸಿ ಬೆಂಗಳೂರು ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ‘ಕನ್ನಡ ಜಾಗೃತಿ ವೇದಿಕೆ’ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು.

ಕರ್ನಾಟಕದ ಹಿತದೃಷ್ಟಿಯಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾವುದೇ ರೀತಿಯ ಅಡ್ಡಿಪಡಿಸಬಾರದು ಎಂದು ಪ್ರತಿಭಟನಾಕಾರರು ತಮಿಳುನಾಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಲಬುರಗಿಯಲ್ಲಿ ದಾರುಣ ಘಟನೆ: ತಂದೆ ಬಟ್ಟೆ ಕೊಡಿಸದಿದ್ದಕ್ಕೆ ಇಬ್ಬರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ !

0

ಕಲಬುರಗಿ: ಹಬ್ಬಕ್ಕೆ ತಂದೆ ಬಟ್ಟೆ ಕೊಡಿಸದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಶಾಂತನಗರದಲ್ಲಿ ನಡೆದಿದೆ.

ಮೃತರನ್ನು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (17) ಹಾಗೂ ಹಣಮಂತಿ ಎಂದು ಗುರುತಿಸಲಾಗಿದೆ.

ಮನೆಯವರು ಇಲ್ಲದ ಸಮಯದಲ್ಲಿ ಇಬ್ಬರೂ ಸಹೋದರಿಯರು ಮನೆಯಲ್ಲೇ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಬಾಲಕಿಯರ ತಾಯಿ ಸುಮಾರು 10 ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಸಹೋದರ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಂದೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶಹಾಬಾದ್‌ನಲ್ಲೇ ವಾಸವಾಗಿದ್ದರು ಎನ್ನಲಾಗಿದೆ.

ತಂದೆಗೆ ಮದ್ಯಪಾನದ ಚಟವಿತ್ತು ಎಂದು ತಿಳಿದುಬಂದಿದೆ. ಹಬ್ಬದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಕೊಡಿಸುವಂತೆ ಇಬ್ಬರು ಸಹೋದರಿಯರು ತಂದೆಯನ್ನು ಕೇಳಿದ್ದರು ಎನ್ನಲಾಗಿದೆ. ಆದರೆ ತಂದೆ ಬಟ್ಟೆ ಕೊಡಿಸದ ಹಿನ್ನೆಲೆಯಲ್ಲಿ ಇಬ್ಬರೂ ಮನನೊಂದು ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೇವೆಯ ಹಾದಿಯಲ್ಲಿ ಸಾರ್ಥಕ ಪಯಣ: ಇಬ್ಬರು ಸಾಧಕರಿಗೆ ಜೀವಮಾನ ಗೌರವ

ವೃತ್ತಿಯಲ್ಲಿ ಯಶಸ್ಸು ಗಳಿಸುವುದು ಒಂದು ಸಾಧನೆಯಾದರೆ, ಆ ಯಶಸ್ಸನ್ನು ಸಮಾಜದ ಒಳಿತಿಗೆ ಬಳಸುವುದು ಅದಕ್ಕಿಂತ ದೊಡ್ಡ ಸಾಧನೆ. ವೃತ್ತಿಪರ ಬದ್ಧತೆ, ಉದ್ಯಮಶೀಲತೆ, ಸಂಘಟನಾ ನಾಯಕತ್ವ, ಶಿಕ್ಷಣ, ಆರೋಗ್ಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳ ಸೇವೆಯನ್ನು ಜೀವನದ ಭಾಗವಾಗಿಸಿಕೊಂಡಿರುವ ಆನಂದ ಲಕ್ಷ್ಮಣರಾವ್ ಪೋತ್ನೀಸ್ ಮತ್ತು ಈಶ್ವರಪ್ಪ ಚಂದ್ರಶೇಖರಪ್ಪ ಮುನವಳ್ಳಿ (ಈಶಣ್ಣ ಮುನವಳ್ಳಿ) ಅವರ ಸೇವೆಗೆ ಇದೀಗ ಮತ್ತೊಂದು ಪ್ರತಿಷ್ಠಿತ ಗೌರವ ಸಂದಿದೆ.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಆ.೧೪ರಿಂದ ೧೮ರವರೆಗೆ ನಡೆಯಲಿರುವ ‘ಗದಗ ಉತ್ಸವ–೨೦೨೬’ರ ಅಂಗವಾಗಿ ಆ.೧೬ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಇಬ್ಬರು ಹಿರಿಯ ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಉದ್ಯಮ–ವಾಣಿಜ್ಯ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುವುದರ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಇಬ್ಬರ ಸೇವಾ ಪಯಣ ಗದಗದ ಸಾರ್ವಜನಿಕ ಬದುಕಿನ ಹಲವು ಆಯಾಮಗಳನ್ನು ಒಳಗೊಂಡಿದೆ.

ವೃತ್ತಿಯ ಶಿಸ್ತು, ಸಮಾಜದ ಕಾಳಜಿ; ಆನಂದ ಪೋತ್ನೀಸ್

ಹಿರಿಯ ಲೆಕ್ಕ ಪರಿಶೋಧಕರಾಗಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಪರ ಸೇವೆ ಸಲ್ಲಿಸಿರುವ ಆನಂದ ಲಕ್ಷ್ಮಣರಾವ್ ಪೋತ್ನೀಸ್ ಅವರ ಕಾರ್ಯಕ್ಷೇತ್ರ ಕೇವಲ ಲೆಕ್ಕಪರಿಶೋಧನೆಗೆ ಸೀಮಿತವಾಗಿಲ್ಲ. ಶಿಕ್ಷಣ, ಉದ್ಯಮ, ಆರೋಗ್ಯ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

೧೫ ಮೇ ೧೯೫೯ರಂದು ಜನಿಸಿದ ಅವರು ಬಿಕಾಂ ಹಾಗೂ ಎಫ್‌ಸಿಎ ಪದವಿ ಪಡೆದಿದ್ದು, ೧೭ ಫೆಬ್ರವರಿ ೧೯೮೨ರಂದು ಚಾರ್ಟರ್ಡ್ ಅಕೌಂಟೆಂಟ್ ಆಗಿ ವೃತ್ತಿ ಜೀವನ ಆರಂಭಿಸಿದರು. ಪ್ರಸ್ತುತ ‘ಮೆ. ಎ. ರಾಘವೇಂದ್ರ ರಾವ್ & ಅಸೋಸಿಯೇಟ್ಸ್’ ಸಂಸ್ಥೆಯ ಪಾಲುದಾರರಾಗಿ ಸೇವೆ ಸಲ್ಲಿಸುತ್ತಿರುವ ಅವರು ಲೆಕ್ಕಪರಿಶೋಧನೆ ಹಾಗೂ ಮಾಹಿತಿ ವ್ಯವಸ್ಥೆಗಳ ಆಡಿಟ್ ಕ್ಷೇತ್ರದಲ್ಲಿ ಪರಿಣತಿ ಹೊಂದಿದ್ದಾರೆ.

ವೃತ್ತಿಯ ಜತೆಗೆ ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಪೋತ್ನೀಸ್ ಅವರು ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್, ಜಿಲ್ಲೆ ೩೨೪–ಡಿ೨ರಲ್ಲಿ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಹಾಗೂ ಜಿಲ್ಲಾ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಗದಗ–ಬೆಟಗೇರಿ ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಪೋತ್ನೀಸ್ ಅವರ ಸೇವೆ ಗಮನಾರ್ಹ. ಆದರ್ಶ ಶಿಕ್ಷಣ ಸಮಿತಿ, ಗದಗ–ಬೆಟಗೇರಿ ಲಯನ್ಸ್ ಎಜುಕೇಶನ್ ಸೊಸೈಟಿ, ವಿವೇಕಾನಂದ ಪಿಯು ವಿಜ್ಞಾನ ವಸತಿ ಕಾಲೇಜು ಹಾಗೂ ಎ.ಎಸ್.ಎಸ್. ಕಾಲೇಜ್ ಆಫ್ ಕಾಮರ್ಸ್ ಹಳೆಯ ವಿದ್ಯಾರ್ಥಿಗಳ ಸಂಘ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿದ್ದಾರೆ.

೨೦೨೦–೨೧ರಲ್ಲಿ ಗದಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಕೈಗಾರಿಕಾ ಪ್ರದರ್ಶನ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ, ಸ್ಥಳೀಯ ವ್ಯಾಪಾರ, ಉದ್ಯಮ ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಿದರು.

ಸಹಕಾರ ಕ್ಷೇತ್ರದಲ್ಲಿ ರಡ್ಡಿ ಕೋ-ಆಪ್ ಬ್ಯಾಂಕ್ ಲಿಮಿಟೆಡ್, ಧಾರವಾಡದ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅವರು, ಗದಗದ ಪಿ.ಜಿ. ಕೇಂದ್ರದಲ್ಲಿ ಕಾರ್ಪೊರೇಟ್ ತೆರಿಗೆ ಯೋಜನೆ ಕುರಿತು ಸಂಪನ್ಮೂಲ ಅಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಶ್ರೀ ವೀರನಾರಾಯಣ, ಶ್ರೀ ತ್ರಿಕೂಟೇಶ್ವರ ಹಾಗೂ ಜುಮ್ಮಾ ಮಸೀದಿ ಟ್ರಸ್ಟ್ ಕಮಿಟಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವುದು ಅವರ ಸಾಮಾಜಿಕ ಬದ್ಧತೆಗೆ ಮತ್ತೊಂದು ಉದಾಹರಣೆ.

‘ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್’ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಆನಂದ ಪೋತ್ನೀಸ್, ಮೂತ್ರಪಿಂಡ ಕಸಿ ಅಗತ್ಯವಿರುವವರಿಗೆ ಆರ್ಥಿಕ ನೆರವು ದೊರಕಿಸುವ ಹಾಗೂ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ.

ವೃತ್ತಿಪರತೆ, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಚಿಂತನೆಯ ಸಮನ್ವಯವಾಗಿರುವ ಅವರ ಸೇವೆಯನ್ನು ಗುರುತಿಸಿ ನೀಡಲಾಗುತ್ತಿರುವ ಜೀವಮಾನ ಸಾಧನೆ ಪ್ರಶಸ್ತಿ, ಗದಗದ ವಾಣಿಜ್ಯ ಹಾಗೂ ಸಾರ್ವಜನಿಕ ಬದುಕಿಗೆ ಸಲ್ಲಿಸಿದ ಕೊಡುಗೆಗೆ ಸಂದ ಗೌರವವಾಗಿದೆ.

ಉದ್ಯಮದ ಜತೆಗೆ ಸಮಾಜಸೇವೆ; ಈಶಣ್ಣ ಮುನವಳ್ಳಿಯ ವಿಭಿನ್ನ ಪಯಣ

ಉದ್ಯಮ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿರುವ ಈಶ್ವರಪ್ಪ ಚಂದ್ರಶೇಖರಪ್ಪ ಮುನವಳ್ಳಿ (ಈಶಣ್ಣ ಮುನವಳ್ಳಿ) ಅವರ ಸೇವಾ ಪಯಣ ಉದ್ಯಮದ ಗಡಿಯನ್ನು ಮೀರಿ ಶಿಕ್ಷಣ, ಸಮಾಜಸೇವೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೂ ವಿಸ್ತರಿಸಿದೆ.

೪ ಮೇ ೧೯೬೬ರಂದು ಕೊಪ್ಪಳದಲ್ಲಿ ಜನಿಸಿದ ಅವರು ಗದಗದ ಎಸ್.ಎಸ್. ಕಾಮರ್ಸ್ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ೧೯೮೫ರಲ್ಲಿ ಗಂಗಾವತಿಯ ಸಿದ್ಧಲಿಂಗೇಶ್ವರ ರೈಸ್ ಮಿಲ್ ಮೂಲಕ ಉದ್ಯಮ ಕ್ಷೇತ್ರಕ್ಕೆ ಪ್ರವೇಶಿಸಿದ ಅವರು, ನಂತರ ವಿವಿಧ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ತಮ್ಮ ವ್ಯಾಪಾರ ವಲಯವನ್ನು ವಿಸ್ತರಿಸಿಕೊಂಡರು.

೧೯೯೩ರಲ್ಲಿ ಸಿದ್ಧಲಿಂಗೇಶ್ವರ ಟ್ರೇಡರ್ಸ್, ೧೯೯೮ರಲ್ಲಿ ಸಿ.ಆರ್. ಮುನವಳ್ಳಿ & ಸನ್ಸ್ ಹಾಗೂ ಈಶ್ವರ ಎಂಟರ್‌ಪ್ರೈಸಸ್, ೨೦೦೨ರಲ್ಲಿ ಪೆಟ್ರೋಲ್ ಬಂಕ್, ೨೦೧೩ರಲ್ಲಿ ಹಾತಲಗೇರಿಯಲ್ಲಿ ಕಚ್ಚಾ–ಪಾಲಿಶ್ ಮಿಲ್ ಹಾಗೂ ಸೋಲಾರ್ ಉದ್ಯಮ ಸ್ಥಾಪಿಸಿ ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

೨೦೨೩–೨೪ರಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಚೇಂಬರ್ ಪತ್ರಿಕೆಯನ್ನು ಪುನರಾರಂಭಿಸುವ ಮೂಲಕ ಸಂಸ್ಥೆಯ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದರು.

ಉದ್ಯಮದ ಜತೆಗೆ ಸಮಾಜಸೇವೆಯಲ್ಲೂ ಸಕ್ರಿಯರಾಗಿರುವ ಅವರು, ವೀರಶೈವ–ಲಿಂಗಾಯತ ರುದ್ರಭೂಮಿಗೆ ಸ್ವಂತ ಶವಸಂಸ್ಕಾರ ವಾಹನ ಹಾಗೂ ಜೆಸಿಬಿ ವ್ಯವಸ್ಥೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ರೋಟರಿ ಕ್ಲಬ್‌ಗೆ ಸ್ವಂತ ಕಟ್ಟಡ ನಿರ್ಮಾಣದಲ್ಲಿಯೂ ಕೊಡುಗೆ ನೀಡಿರುವ ಅವರು, ಜಿಲ್ಲಾ ಬಣಜಿಗ ಸಮಾಜದ ಅಧ್ಯಕ್ಷರಾಗಿ ಸಂಭಾಪುರ ರಸ್ತೆಯಲ್ಲಿ ಸುಮಾರು ₹೫ ಕೋಟಿ ವೆಚ್ಚದ ಸಮಾಜದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ್ದಾರೆ.

ಕೆಎಲ್‌ಇ ಸಂಸ್ಥೆಯ ವಿವಿಧ ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರಾಗಿ, ಎಡೆಯೂರು ಹಾಗೂ ಹಾಲಕೇರಿ ಮಠಗಳ ಸದಸ್ಯರಾಗಿ ಹಾಗೂ ಬಸವೇಶ್ವರ ಮತ್ತು ಡಾ. ಪ್ರಭಾಕರ ಕೋರೆ ಬ್ಯಾಂಕ್‌ಗಳ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಸುಮಾರು ೮ ಸಾವಿರ ಜನರಿಗೆ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ದೊರಕುವಂತೆ ಮಾಡಿರುವ ಅವರು, ಎಡೆಯೂರು ದಾಸೋಹ ಟ್ರಸ್ಟ್ ಹಾಗೂ ಬೆಂಗಳೂರಿನ ಕಲ್ಯಾಣ ಮಂಟಪಕ್ಕೆ ಸ್ವಂತ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೂ ಸಹಕರಿಸಿದ್ದಾರೆ.

ಉದ್ಯಮದ ಯಶಸ್ಸಿನ ಜತೆಗೆ ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಮನೋಭಾವವನ್ನು ಬೆಳೆಸಿಕೊಂಡಿರುವ ಈಶಣ್ಣ ಮುನವಳ್ಳಿಯವರಿಗೆ ಸಂದಿರುವ ಜೀವಮಾನ ಸಾಧನೆ ಪ್ರಶಸ್ತಿ, ಅವರ ಬಹುಮುಖ ಸೇವೆಗೆ ಸಂದಿರುವ ಗೌರವವಾಗಿದೆ.

ಒಬ್ಬರು ವೃತ್ತಿಪರ ಸೇವೆ, ಶಿಕ್ಷಣ, ಆರೋಗ್ಯ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ತಮ್ಮದೇ ಕೊಡುಗೆ ನೀಡಿದ್ದರೆ, ಮತ್ತೊಬ್ಬರು ಉದ್ಯಮ, ಸಮಾಜಸೇವೆ, ಶಿಕ್ಷಣ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ.

ಗದಗದ ವಾಣಿಜ್ಯ–ಉದ್ಯಮ ಕ್ಷೇತ್ರದ ಬೆಳವಣಿಗೆಯೊಂದಿಗೆ ಸಮಾಜದ ವಿವಿಧ ವಲಯಗಳಿಗೂ ತಮ್ಮ ಸೇವೆಯನ್ನು ವಿಸ್ತರಿಸಿರುವ ಈ ಇಬ್ಬರು ಹಿರಿಯ ಸಾಧಕರನ್ನು ಒಂದೇ ವೇದಿಕೆಯಲ್ಲಿ ಗೌರವಿಸುತ್ತಿರುವುದು ‘ಗದಗ ಉತ್ಸವ–೨೦೨೬’ರ ಪ್ರಶಸ್ತಿ ಪ್ರದಾನ ಸಮಾರಂಭದ ವಿಶೇಷತೆಯಾಗಿದೆ.

ಆ.೧೬ರಂದು ನಡೆಯುವ ಸಮಾರಂಭದಲ್ಲಿ ಆನಂದ ಪೋತ್ನೀಸ್ ಹಾಗೂ ಈಶಣ್ಣ ಮುನವಳ್ಳಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನವಾಗಲಿದೆ.

– ಈರಣ್ಣ ಮುದಗಲ್, ನಾಗರಾಜ ನರಗುಂದ
ಉತ್ಸವದ ಪ್ರಚಾರ ಸಮಿತಿ

ಶಿಕ್ಷಕರಾಗಲು ಸುವರ್ಣಾವಕಾಶ; ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18ರಿಂದ ಆರಂಭವಾಗಲಿದ್ದು, ಸೆಪ್ಟೆಂಬರ್ 9ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ, ವಯೋಮಿತಿ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಎಲ್ಲ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಹಾಗೂ ಇತರ ಪ್ರಮುಖ ಮಾಹಿತಿಯನ್ನು ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅಭ್ಯರ್ಥಿಗಳು ಯಾವುದೇ ಮಾಹಿತಿ ಅಥವಾ ಅರ್ಜಿ ಸಲ್ಲಿಕೆ ಸಂಬಂಧಿತ ಗೊಂದಲಗಳಿಗೆ ಅಧಿಕೃತ ಮಾಹಿತಿಯನ್ನೇ ಆಧಾರವಾಗಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.

ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ schooleducation.karnataka.gov.in ಪರಿಶೀಲಿಸಬಹುದು.

ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಜೀವಬೆದರಿಕೆ ಹಾಕಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ವತಿಯಿಂದ ಮಹಿಳೆಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ನಗರದ ಆರ್.ಕೆ. ನಗರದ ಓಣಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೀವಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದರು. ಅಲ್ಲದೆ, ಕುಟುಂಬದವರ ಮೇಲೂ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ಅಲ್ಲಿಂದ ಹೊರಹಾಕಲಾಗಿದೆ ಎಂದು ದೂರಿದರು.

ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಕೂಡ ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಸಂತ್ರಸ್ತೆ ಹಾಗೂ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮೀ ಗದಗ ಮಾತನಾಡಿ, ಮಹಿಳೆಯರು, ಯುವತಿಯರು ಹಾಗೂ ಮಕ್ಕಳ ಮೇಲೆ ಇಂತಹ ದೌರ್ಜನ್ಯಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಜತೆಗೆ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷೆ ಮಮತಾಜ ಕಟ್ಟಿಮನಿ ಮಾತನಾಡಿ, ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ದೊರೆಯುವಂತೆ ಕಾನೂನು ಪ್ರಕ್ರಿಯೆ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷೆ ದಾವಲಬಿ ದೊಡ್ಡಮನಿ, ಜಿಲ್ಲಾ ಉಪಾಧ್ಯಕ್ಷರಾದ ಪರವೀನ ಹವಾಲ್ದಾರ, ವಜ್ರೇಶ್ವರಿ ಪವಾರ, ಖಜಾಂಚಿ ಪಾರ್ವತಿ ಪಾಟೀಲ, ವಕ್ತಾರೆ ನಾಗರತ್ನಾ ಬಣಕಾರ, ಸಂಚಾಲಕಿ ಸುಫಿಯಾ ನದಾಫ್, ಸಂಘಟನಾ ಕಾರ್ಯದರ್ಶಿ ಮಂಜುಳಾ ರೊಟ್ಟಿ, ಪ್ರಧಾನ ಕಾರ್ಯದರ್ಶಿ ಬಸೀರಾ ಕುಮನೂರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಮಹಿಳೆಯರು ಭಾಗವಹಿಸಿದ್ದರು.

“ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತೆಗೆ ನ್ಯಾಯ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.”

— ವಿಜಯಲಕ್ಷ್ಮೀ ಗದಗ, ರಾಜ್ಯಾಧ್ಯಕ್ಷೆ, ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ

ರಕ್ತದಲ್ಲೇ ಸಹಿ ಹಾಕಿದ ಗದಗದ ಯುವಕರು: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಜೆನ್‌-ಝಡ್‌ ಪಡೆ

0

ವಿಜಯಸಾಕ್ಷಿ ಸುದ್ದಿ, ಗದಗ: ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಜೆನ್‌-ಝಡ್‌ ಯುವಕರ ಹೋರಾಟ ದೇಶದ ಗಮನ ಸೆಳೆದ ಬೆನ್ನಲ್ಲೇ, ಅದೇ ಮಾದರಿಯಲ್ಲಿ ಗದಗ ಜಿಲ್ಲೆಯ ಯುವಪಡೆಯೂ ಹೋರಾಟದ ಹಾದಿ ಹಿಡಿದಿದೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು, ಗದಗ–ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸಬೇಕು ಹಾಗೂ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ ‘ರಕ್ತ ಸಹಿ ಅಭಿಯಾನ’ ಆರಂಭವಾಗಿದೆ.

ಗದಗ–ಬೆಟಗೇರಿ ಅವಳಿ ನಗರದ ಜೆನ್‌-ಝಡ್‌ ಮತದಾರರು ಮತ್ತು ನಾಗರಿಕರ ವೇದಿಕೆ ನೇತೃತ್ವದಲ್ಲಿ ಆರಂಭವಾಗಿರುವ ಅಭಿಯಾನದಲ್ಲಿ 13 ಸಾವಿರಕ್ಕೂ ಹೆಚ್ಚು ಯುವಕರು ರಕ್ತದ ಮೂಲಕ ಸಹಿ ಹಾಕುವ ಗುರಿಯೊಂದಿಗೆ ಬೀದಿಗಿಳಿದಿದ್ದಾರೆ. ನಗರದ ಪ್ರತಿಯೊಂದು ವಾರ್ಡ್‌ಗೂ ತೆರಳಿ ಸಹಿ ಸಂಗ್ರಹಿಸಲಾಗುತ್ತಿದ್ದು, ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಜಿಲ್ಲೆಯ ಏಳು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದೆ ಎಂಬುದು ಯುವಕರ ಆರೋಪ. ಕೃಷಿಯನ್ನೇ ಪ್ರಮುಖವಾಗಿ ಅವಲಂಬಿಸಿರುವ ಜಿಲ್ಲೆಯ ಜನರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ಗದಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಗೆ ದಶಕಗಳ ಬೇಡಿಕೆ

ಗದಗ–ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದೆ. ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಯುವಕರ ಪ್ರಮುಖ ಆಗ್ರಹವಾಗಿದೆ.

ಇದರ ಜತೆಗೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆಗಳ ಕೊರತೆಯಿಂದ ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ಹುಬ್ಬಳ್ಳಿ–ಧಾರವಾಡ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಅಭಿಯಾನಕಾರರು ಒತ್ತಾಯಿಸಿದ್ದಾರೆ.

40 ಸಾವಿರ ರಕ್ತ ಸಹಿ ಸಂಗ್ರಹದ ಗುರಿ

ಯುವ ಮುಖಂಡ ಅನಿಲ್ ಮೆಣಸಿನಕಾಯಿ ಅವರ ಮಾರ್ಗದರ್ಶನದಲ್ಲಿ ಆರಂಭವಾಗಿರುವ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಜಿಲ್ಲೆಯಾದ್ಯಂತ ಒಟ್ಟು 40 ಸಾವಿರ ರಕ್ತ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಸಂಗ್ರಹಿಸಿದ ಸಹಿಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರ?

ಜಿಲ್ಲೆಯ ಸುಮಾರು ಶೇ.80ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದು, ಪ್ರಸಕ್ತ ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು. ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು ಎಂಬುದು ಜೆನ್‌-ಝಡ್‌ ಯುವಪಡೆಯ ಆಗ್ರಹವಾಗಿದೆ.

ರಕ್ತದಲ್ಲಿ ಸಹಿ ಹಾಕಿ ಸರ್ಕಾರದ ಗಮನ ಸೆಳೆಯುತ್ತಿರುವ ಯುವಕರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆಯೇ? ಇಲ್ಲವೇ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆಯೇ? ಎಂಬುದು ಇದೀಗ ಕುತೂಹಲ ಮೂಡಿಸಿದೆ.

“ಒಂದು ಕಡೆ ಬರದ ಸಂಕಷ್ಟ, ಮತ್ತೊಂದೆಡೆ ಉದ್ಯೋಗದ ಕೊರತೆ. ಯುವಕರು ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ತಕ್ಷಣ ಸ್ಪಂದಿಸಬೇಕು. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ.”

— ಆನಂದ ಅಂಗಡಿ, ವಿದ್ಯಾರ್ಥಿ ಮುಖಂಡ

“ಗದಗದ ಅಭಿವೃದ್ಧಿಗಾಗಿ ನಡೆಯುತ್ತಿರುವ ರಕ್ತದ ಸಹಿ ಅಭಿಯಾನ ಉತ್ತಮ ನಿರ್ಧಾರ. ಗದಗ ಜನತೆಯ ಮೂಲಸೌಕರ್ಯಕ್ಕಾಗಿ ಹಲವು ಬಾರಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಜನತೆಯ ಹಕ್ಕುಗಳಿಗಾಗಿ ಜೆನ್‌-ಝಡ್‌ ಯುವಕರು ರಕ್ತದಲ್ಲಿ ಸಹಿ ಸಂಗ್ರಹಿಸುತ್ತಿರುವುದು ಕೊನೆಯ ಹೋರಾಟವಾಗಿದೆ.”

— ರಾಣಿ ಚಂದಾವರಿ, ಸಂಯುಕ್ತ ನೈತಿಕ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷರು

ಮೂಲಸೌಕರ್ಯ ವೈಫಲ್ಯಕ್ಕೆ ಗ್ರಾಮಸ್ಥರ ಆಕ್ರೋಶ: ಇಬ್ಬರು ಅಧಿಕಾರಿಗಳ ಬದಲಾವಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಸಮರ್ಪಕ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ನಡೆಸಿದ ಎರಡು ದಿನಗಳ ಪ್ರತಿಭಟನೆಗೆ ಸ್ಪಂದಿಸಿದ ತಾಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶರಣು ಗೋಗೇರಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪಿಡಿಒ ಅಮೀರನಾಯಕ ಅವರ ವರ್ಗಾವಣೆಗೆ ಕ್ರಮ ಕೈಗೊಂಡಿದ್ದಾರೆ.

ಅಸಮರ್ಪಕ ಕುಡಿಯುವ ನೀರು ಪೂರೈಕೆ, ಅವೈಜ್ಞಾನಿಕ ಜೆಜೆಎಂ ಕಾಮಗಾರಿ, ರಸ್ತೆಗಳ ಅಸ್ವಚ್ಛತೆ, ಬೀದಿ ದೀಪಗಳ ಸಮಸ್ಯೆ, ರಾಜಬೀದಿ ದುರಸ್ತಿ, ಸಿಬ್ಬಂದಿಗೆ ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸಿಬ್ಬಂದಿಯ ಮೇಲೆ ಅಧಿಕಾರಿಗಳ ಹಿಡಿತವಿಲ್ಲದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರು ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜನಗಿ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಅಹವಾಲು ಆಲಿಸಿದರು. ಗ್ರಾಮಸ್ಥರು ಕಳೆದ ಆರು ತಿಂಗಳಿಂದ ಗ್ರಾಮದ ಅಭಿವೃದ್ಧಿ ಕುಂಠಿತಗೊಂಡಿದ್ದು, ಆಡಳಿತಾಧಿಕಾರಿ ಹಾಗೂ ಪಿಡಿಒ ನಡುವೆ ಸಮನ್ವಯದ ಕೊರತೆಯಿಂದ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸಿವೆ ಎಂದು ಆರೋಪಿಸಿದರು.

ಗ್ರಾಮಸ್ಥರ ಅಸಮಾಧಾನ ಆಲಿಸಿದ ಬಳಿಕ ಅಧಿಕಾರಿಗಳು ಆಡಳಿತಾಧಿಕಾರಿ ಶರಣು ಗೋಗೇರಿ ಅವರಿಂದ ಕರ್ತವ್ಯ ಬಿಡುಗಡೆ ಪತ್ರ ಹಾಗೂ ಪಿಡಿಒ ಅಮೀರನಾಯಕ ಅವರಿಂದ ವರ್ಗಾವಣೆ ಮನವಿ ಪತ್ರ ಪಡೆದುಕೊಂಡರು.

ಲಕ್ಕುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಜಿ.ಪಂ. ಹಾಗೂ ತಾ.ಪಂ. ಮಟ್ಟದಲ್ಲಿ ಅಗತ್ಯ ಅನುದಾನವಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಐತಿಹಾಸಿಕ ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಡಾ. ಎಚ್.ಎಸ್. ಜನಗಿ ಭರವಸೆ ನೀಡಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ, ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ ಹಾಗೂ ನಜೀರಅಹ್ಮದ್ ಕಿರಿಟಗೇರಿ ಮಾತನಾಡಿ, ಗ್ರಾಮದ ಸಮಸ್ಯೆಗಳ ಕುರಿತು ಹಲವು ಬಾರಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಯಿತು ಎಂದರು.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಇಬ್ಬರು ಅಧಿಕಾರಿಗಳ ಬದಲಾವಣೆಗೆ ಕ್ರಮ ಕೈಗೊಂಡು, ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ಭರವಸೆ ನೀಡಿರುವುದರಿಂದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ವಿಬಿಜಿ ರಾಮ್‌ಜಿ ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಕಾರ್ಯದರ್ಶಿ ಗಣೇಶ ಪೂಜಾರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿವಪ್ಪ ಸಜ್ಜನರ, ಗ್ರಾ.ಪಂ. ಮಾಜಿ ಸದಸ್ಯ ಬಿ.ಬಿ. ಮಾಡಲಗೇರಿ, ಮರಿಯಪ್ಪ ವಡ್ಡರ, ಕಳಕೇಶ ಟೆಂಗಿನಕಾಯಿ, ಚಂದ್ರಗೌಡ ಪಾಟೀಲ, ಚನ್ನಪ್ಪ ಹುಬ್ಬಳ್ಳಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಮಂಜುನಾಥ ತಡಹಾಳ, ಬಸವರಾಜ ಕುಂಬಾರ, ವೀರಣ್ಣ ಅರಹುಣಶಿ, ಶಿವಪ್ಪ ಭಜಂತ್ರಿ, ರವಿ ಕವಲೂರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾಗೇಂದ್ರ ರಾಜೀನಾಮೆಗೆ ಆಗ್ರಹ: ಆ.17ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟ ಧರಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಆ.17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಎಚ್ಚರಿಸಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮಳೆಗಾಲದ ಅಧಿವೇಶನದ ಒಳಗೆ ಹಾಗೂ ಹೊರಗೆ ಹೋರಾಟ ಮುಂದುವರಿಸಲಾಗುವುದು ಎಂದರು.

ವಾಲ್ಮೀಕಿ ನಿಗಮದ ಸುಮಾರು ₹187 ಕೋಟಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಅವರು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹89 ಕೋಟಿ ಅಕ್ರಮ ನಡೆದಿದೆ ಎಂದು ಹೇಳಿದ್ದರು. ಹೀಗಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.

೩೧ ಪ್ರಕರಣಗಳ ತನಿಖೆ ನಡೆಯುತ್ತಿದ್ದರೂ ಮಂತ್ರಿಗಿರಿ ಏಕೆ?

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ಹಣವನ್ನು ತೆಲಂಗಾಣದಲ್ಲಿ ಬಳಸಲಾಗಿದೆ ಎಂಬ ಶಂಕೆ ಇದೆ. ಸಿಬಿಐ, ಲೋಕಾಯುಕ್ತ, ಎಸ್‌ಐಟಿ ಹಾಗೂ ಸಿಐಡಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳಲ್ಲಿ ಒಟ್ಟು 31 ಪ್ರಕರಣಗಳು ತನಿಖೆಯ ಹಂತದಲ್ಲಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದೇಕೆ? ಎಂದು ಪ್ರಶ್ನಿಸಿದರು.

ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೂ ಪಾಲು ಇದೆಯೇ ಎಂಬ ಅನುಮಾನ ಮೂಡುತ್ತಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ಲಿಂಗರಾಜಗೌಡ ಪಾಟೀಲ, ಶ್ರೀಪತಿ ಉಡುಪಿ, ಬೂದಪ್ಪ ಹಳ್ಳಿ, ಮಂಜುನಾಥ ಮುಳಗುಂದ, ನಾಗರಾಜ ತಳವಾರ, ಎಂ.ಎಂ. ಹಿರೇಮಠ ಹಾಗೂ ಅನಿಲ ಅಬ್ಬಿಗೇರಿ ಉಪಸ್ಥಿತರಿದ್ದರು.