Home Blog

ಧಾರವಾಡ ಜಿಲ್ಲಾ ಕೋರ್ಟ್ʼಗೆ ಮತ್ತೆ ಬಾಂಬ್ ಬೆದರಿಕೆ: ವಾರದೊಳಗೆ 2ನೇ ಬಾರಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿರುವ ಇ-ಮೇಲ್‌ನಲ್ಲಿ ಕೋರ್ಟ್ ಹಾಗೂ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಕೋರ್ಟ್ ಆವರಣದಿಂದ ಹೊರಗೆ ತೆರಳುವಂತೆ ಸೂಚಿಸಲಾಯಿತು. ಬಳಿಕ ಪೊಲೀಸರು ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣದಲ್ಲಿ ಸಮಗ್ರ ತಪಾಸಣೆ ನಡೆಸಿದರು.

ಇದೇ ರೀತಿಯ ಬೆದರಿಕೆ ಸಂದೇಶ ಜೂನ್ 19ರಂದು ಕೂಡ ಧಾರವಾಡ ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿತ್ತು. ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದಲ್ಲಿ 23 ಸೈನೈಡ್ ಅನಿಲ ಗುಂಡುಗಳು ಸ್ಫೋಟಗೊಳ್ಳಲಿವೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಈ ಬೆದರಿಕೆ ಸಂದೇಶದಿಂದ ನ್ಯಾಯಾಲಯದ ಸುತ್ತಮುತ್ತ ಆತಂಕದ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತ್ತು. ಸದ್ಯ ಮತ್ತೊಮ್ಮೆ ಬಂದಿರುವ ಬೆದರಿಕೆ ಸಂದೇಶದ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿದ್ದಾರೆ.

ರಾಜ್ಯದೊಂದಿಗೆ ಚರ್ಚಿಸದೇ NCERT ಪುಸ್ತಕ ಬಿಡುಗಡೆ: 6ನೇ ತರಗತಿ ಕನ್ನಡ ಪಠ್ಯಕ್ಕೆ ಮಧು ಬಂಗಾರಪ್ಪ ಆಕ್ಷೇಪ

ಬೆಂಗಳೂರು: 6ನೇ ತರಗತಿಗಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಬಿಡುಗಡೆ ಮಾಡಿರುವ ಕನ್ನಡ ಪಠ್ಯಪುಸ್ತಕಕ್ಕೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಅಥವಾ ಸಂಬಂಧಿತ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಪುಸ್ತಕ ಪ್ರಕಟಿಸಲಾಗಿದೆ ಎಂದುಆರೋಪಿಸಿದ್ದಾರೆ.

‘ಕೃಷ್ಣ’ ಎಂಬ ಹೆಸರಿನ ಈ ಪಠ್ಯಪುಸ್ತಕದಲ್ಲಿ ಕನ್ನಡದ ವೈಚಾರಿಕ ಪರಂಪರೆ, ಪ್ರಾದೇಶಿಕ ಸಂಸ್ಕೃತಿ ಹಾಗೂ ಸ್ಥಳೀಯ ಜೀವನಶೈಲಿಗೆ ಅಗತ್ಯವಾದ ಪ್ರಾಮುಖ್ಯತೆ ನೀಡಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಹಾಗೂ ಹಳೆ ಮೈಸೂರು ಭಾಗಗಳ ಜಾನಪದ ಪರಂಪರೆ, ಸಾಹಿತ್ಯ, ಸಂಸ್ಕೃತಿ ಮತ್ತು ಜೀವನ ಪದ್ಧತಿಯನ್ನು ಪುಸ್ತಕದಲ್ಲಿ ಸಮರ್ಪಕವಾಗಿ ಪ್ರತಿಬಿಂಬಿಸಲಾಗಿಲ್ಲ ಎಂದು ಆರೋಪಿಸಿದರು.

ಪಠ್ಯದಲ್ಲಿರುವ ಸಮತೋಲನ ಆಹಾರದ ಕುರಿತ ಪಾಠದಲ್ಲಿಯೂ ಮೊಟ್ಟೆ, ಮೀನು ಹಾಗೂ ಮಾಂಸಾಹಾರದ ಉಲ್ಲೇಖವಿಲ್ಲದೆ ಕೇವಲ ಸಸ್ಯಾಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದು ಸಮತೋಲಿತ ಮತ್ತು ಸಮಗ್ರ ನಿರೂಪಣೆಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

“ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವನು. ಶ್ರೀಕೃಷ್ಣನ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಶಿಕ್ಷಣ ಮತ್ತು ಧರ್ಮವನ್ನು ಬೆರೆಸಿ ಮಕ್ಕಳಿಗೆ ಪಾಠ ಮಾಡುವುದು ಸೂಕ್ತವಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಮತ್ತು ವೈವಿಧ್ಯತೆ ಪ್ರತಿಬಿಂಬಿಸಬೇಕು” ಎಂದು ಮಧು ಬಂಗಾರಪ್ಪ ಹೇಳಿದರು.

ರಾಜ್ಯದ ಪಠ್ಯಕ್ರಮ ಅಭಿವೃದ್ಧಿ ಸಂಸ್ಥೆ (ಡಿಎಸ್‌ಇಆರ್‌ಟಿ) ಈಗಾಗಲೇ ‘ಸವಿ ಕನ್ನಡ’, ‘ಸಿರಿ ಕನ್ನಡ’ ಮತ್ತು ‘ತಿಳಿ ಕನ್ನಡ’ ಸೇರಿದಂತೆ ಹಲವು ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿದೆ. ಇಂತಹ ಪುಸ್ತಕಗಳನ್ನು ಪರಿಗಣಿಸದೇ ಹೊಸ ಪಠ್ಯವನ್ನು ಜಾರಿಗೆ ತರಲು ಮುಂದಾಗಿರುವುದು ಕನ್ನಡದ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದರು.

ಕರ್ನಾಟಕದ ಸಂಸ್ಕೃತಿ, ಆಚಾರ-ವಿಚಾರ, ಸಾಹಿತ್ಯ ಪರಂಪರೆ ಹಾಗೂ ಸ್ಥಳೀಯ ಜೀವನ ಮೌಲ್ಯಗಳನ್ನು ಒಳಗೊಂಡ ಹೊಸ ಪಠ್ಯಪುಸ್ತಕವನ್ನು ಸಿದ್ಧಪಡಿಸಬೇಕು. ಪ್ರಸ್ತುತ ಬಿಡುಗಡೆಯಾಗಿರುವ ಪುಸ್ತಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಪತ್ರ ಬರೆಯುವಂತೆ ಮನವಿ ಮಾಡುವುದಾಗಿ ತಿಳಿಸಿದ ಮಧು ಬಂಗಾರಪ್ಪ, ಅಗತ್ಯವಿದ್ದರೆ ಈ ವಿಷಯವನ್ನು ಹೋರಾಟದ ರೂಪದಲ್ಲೂ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ, ಪಠ್ಯಪುಸ್ತಕ ರಚನಾ ಸಮಿತಿಯಲ್ಲಿ ಕೆಲವು ಖಾಸಗಿ ಶಾಲೆ ಮತ್ತು ಕಾಲೇಜುಗಳ ಪ್ರತಿನಿಧಿಗಳನ್ನು ಸೇರಿಸಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಪಠ್ಯ ರಚನಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ರಾಜ್ಯದ ಪ್ರತಿನಿಧಿತ್ವ ಇರಬೇಕೆಂದು ಆಗ್ರಹಿಸಿದರು.

1975ರ ತುರ್ತು ಪರಿಸ್ಥಿತಿ ಈಗ ಶಾಲಾ ಪಠ್ಯದಲ್ಲಿ: ಮೊದಲ ಬಾರಿಗೆ 9ನೇ ತರಗತಿ NCERT ಪುಸ್ತಕದಲ್ಲಿ ಸೇರ್ಪಡೆ

0

ನವದೆಹಲಿ: ದೇಶದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯೊಂದನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಜಾರಿಗೊಳಿಸಿದ್ದು, 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿ (ಎಮರ್ಜೆನ್ಸಿ) ಕುರಿತ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಸೇರ್ಪಡೆಗೊಳಿಸಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ ಪರಿಷ್ಕರಿಸಲಾದ ಪಠ್ಯಪುಸ್ತಕಗಳನ್ನು ದೇಶಾದ್ಯಂತ ಜಾರಿಗೆ ತರಲಾಗುತ್ತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ಹೊಸ ಪಠ್ಯಕ್ರಮದ ಅಧ್ಯಯನ ಆರಂಭಿಸಲಿದ್ದಾರೆ.

ಹೊಸ ಸಮಾಜ ವಿಜ್ಞಾನ ಪಠ್ಯದಲ್ಲಿನ ‘ಪ್ರಜಾಪ್ರಭುತ್ವ ರಾಜಕೀಯ-1’ ಪುಸ್ತಕದ 5ನೇ ಅಧ್ಯಾಯದಲ್ಲಿ 1975ರ ತುರ್ತು ಪರಿಸ್ಥಿತಿಯನ್ನು “ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು” ಎಂದು ವಿವರಿಸಲಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಬಿದ್ದ ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಗಿದೆ.

ಅಧ್ಯಾಯದಲ್ಲಿ ಮಾಧ್ಯಮಗಳ ಮೇಲೆ ಹೇರಲಾಗಿದ್ದ ಸೆನ್ಸಾರ್ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳು, ವಿರೋಧ ಪಕ್ಷದ ನಾಯಕರ ಬಂಧನಗಳು ಹಾಗೂ ಆ ಅವಧಿಯಲ್ಲಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿವರಿಸಲಾಗಿದೆ. ಜೊತೆಗೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷಗಳು ಹಾಗೂ ಅಧಿಕಾರದ ದುರ್ಬಳಕೆಯ ಆರೋಪಗಳ ಕುರಿತ ಉಲ್ಲೇಖಗಳನ್ನೂ ಸೇರಿಸಲಾಗಿದೆ.

ಇದುವರೆಗೆ ತುರ್ತು ಪರಿಸ್ಥಿತಿಯ ಇತಿಹಾಸ ಮತ್ತು ಅದರ ರಾಜಕೀಯ ಪರಿಣಾಮಗಳ ಕುರಿತು ಪಾಠಗಳು ಮುಖ್ಯವಾಗಿ 12ನೇ ತರಗತಿಯ ರಾಜಕೀಯ ವಿಜ್ಞಾನ ವಿಷಯದಲ್ಲಷ್ಟೇ ಒಳಗೊಂಡಿದ್ದವು. ಆದರೆ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಎದುರಾಗಬಹುದಾದ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೈಸ್ಕೂಲ್ ಹಂತದಲ್ಲಿಯೇ ಅರಿವು ಮೂಡಿಸುವ ಉದ್ದೇಶದಿಂದ ಈ ಅಧ್ಯಾಯವನ್ನು 9ನೇ ತರಗತಿಗೆ ಸೇರಿಸಲಾಗಿದೆ ಎಂದು ತಿಳಿಸಲಾಗಿದೆ.

ಆದರೆ ಎನ್‌ಸಿಇಆರ್‌ಟಿ ಈ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಈ ಕ್ರಮವನ್ನು ಟೀಕಿಸಿದ್ದು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ. ಕಾಂಗ್ರೆಸ್ ಇತಿಹಾಸವನ್ನು ನಕಾರಾತ್ಮಕವಾಗಿ ಬಿಂಬಿಸಲು ಹಾಗೂ ನಿರ್ದಿಷ್ಟ ರಾಜಕೀಯ ದೃಷ್ಟಿಕೋನವನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಪ್ರಯತ್ನಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಇದಕ್ಕೆ ಪ್ರತಿಯಾಗಿ, ಪ್ರಜಾಪ್ರಭುತ್ವದ ಇತಿಹಾಸದಲ್ಲಿನ ಮಹತ್ವದ ಘಟನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವುದು ಶಿಕ್ಷಣದ ಭಾಗವಾಗಿದ್ದು, ಇತಿಹಾಸದ ವಿವಿಧ ಆಯಾಮಗಳನ್ನು ತಿಳಿಸುವ ಉದ್ದೇಶದಿಂದಲೇ ಈ ಅಧ್ಯಾಯವನ್ನು ಸೇರಿಸಲಾಗಿದೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗುತ್ತಿವೆ.

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ: ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯ

0

ಮಂಡ್ಯ: ಕಾವೇರಿ ನದಿ ತೀರದ ಮುತ್ತತ್ತಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿರುವ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿದೆ. ಫೋಟೋ ತೆಗೆದುಕೊಳ್ಳುವ ಉದ್ದೇಶದಿಂದ ನದಿಗೆ ಇಳಿದಿದ್ದ ವೇಳೆ ಸಂಭವಿಸಿದ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬುಧವಾರ ಸಂಜೆ ನಡೆದ ಘಟನೆಯ ನಂತರ ಶೋಧ ಕಾರ್ಯಾಚರಣೆಯಲ್ಲಿ ಐವರ ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ಗುರುವಾರ ಮಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರನ್ನು ಚೈತ್ರಾ, ಶ್ವೇತಾ, ವಿಜಯಮ್ಮ, ಪ್ರಿಯಾಂಕಾ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ.

ಘಟನೆ ನಂತರ ಆಸ್ಪತ್ರೆಯ ಶವಗಾರದಲ್ಲಿ ಕುಟುಂಬಸ್ಥರ ಆಕ್ರಂದನ ದೃಶ್ಯಗಳು ಮನಕಲಕುವಂತಾಗಿದ್ದವು. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರು ಭಾವುಕರಾಗಿ ದುಃಖ ವ್ಯಕ್ತಪಡಿಸಿದರು.

ಪಾರಾದ ರವಿ ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕುಟುಂಬವು ಮುತ್ತತ್ತಿಗೆ ಭೇಟಿ ನೀಡಿದ್ದು ಫೋಟೋ ಸೆಷನ್ ವೇಳೆ ವಿಜಯಮ್ಮ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಿದ ಇತರರು ಸಹ ನದಿಯ ಹರಿವಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಈ ಪ್ರದೇಶದಲ್ಲಿ ಸುರಕ್ಷತಾ ಸೂಚನೆ ಫಲಕಗಳ ಕೊರತೆ ಹಾಗೂ ಜೀವ ರಕ್ಷಕ ಸಿಬ್ಬಂದಿಯಿಲ್ಲದಿರುವ ಬಗ್ಗೆ ಸ್ಥಳೀಯರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿರುವ ಮುತ್ತತ್ತಿಯಲ್ಲಿ ಮೂಲಭೂತ ಸುರಕ್ಷತಾ ವ್ಯವಸ್ಥೆಗಳ ಕೊರತೆ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿ, ಘಟನೆಯನ್ನು ಅಚಾತುರ್ಯ ಎಂದು ವರ್ಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿ ತಾಪಂಡ ನಿವಾಸದಲ್ಲಿ ನೇಣಿಗೆ ಶರಣಾದ ಗೆಳೆಯ ವೈಶಾಖ್: ತನಿಖೆ ಆರಂಭಿಸಿದ ಪೊಲೀಸರು

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಅವರ ಆಪ್ತ ಗೆಳೆಯ ಹಾಗೂ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ವ್ಯಾಪ್ತಿಯಲ್ಲಿರುವ ನಟಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈಶಾಕ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ವೈಶಾಕ್ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿದೆಯೇ ಎಂಬ ಕುರಿತು ಪೊಲೀಸರು ಮಾಹಿತಿ ಬಹಿರಂಗಪಡಿಸಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದ ಬಿಗ್ ರಿಲೀಫ್; 1.30 ಲಕ್ಷ ಮೆಟ್ರಿಕ್ ಟನ್ ತೋತಾಪುರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆಯಲ್ಲಿ ಭಾರೀ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಕುರಿತು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಗಮನಿಸಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತಾವು ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ರೈತರಿಗೆ ನೆರವು ನೀಡುವಂತೆ ಮನವಿ ಮಾಡಿದ್ದೆ. ಆ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಇದೀಗ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ ರೈತರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಜೋಶಿ ತಿಳಿಸಿದ್ದಾರೆ.

ರಾಜ್ಯದ ಸಾವಿರಾರು ಮಾವು ಬೆಳೆಗಾರರಿಗೆ ಈ ನಿರ್ಧಾರ ಆರ್ಥಿಕ ಬಲ ತುಂಬಲಿದ್ದು, ಬೆಲೆ ಕುಸಿತದಿಂದ ಉಂಟಾಗಿರುವ ನಷ್ಟವನ್ನು ಭಾಗಶಃ ಸರಿದೂಗಿಸಲು ನೆರವಾಗಲಿದೆ. ವಿಶೇಷವಾಗಿ ತೋತಾಪುರಿ ಮಾವು ಉತ್ಪಾದಕರಿಗೆ ಇದು ದೊಡ್ಡ ಮಟ್ಟದ ಪರಿಹಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತ್ವರಿತ ನಿರ್ಧಾರ ಕೈಗೊಂಡಿರುವುದಕ್ಕೆ ಪ್ರಹ್ಲಾದ್ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ. ಜೊತೆಗೆ ರೈತರ ಕಲ್ಯಾಣಕ್ಕೆ ನಿರಂತರ ಆದ್ಯತೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾವಿನ ಬೆಲೆ ಕುಸಿತ ಮತ್ತು ಮಾರುಕಟ್ಟೆ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಬೆಳೆಗಾರರಿಗೆ ಕೇಂದ್ರ ಸರ್ಕಾರದ ಈ ನಿರ್ಧಾರವು ಮಹತ್ವದ ಆರ್ಥಿಕ ಆಸರೆಯಾಗಿ ಪರಿಣಮಿಸುವ ಸಾಧ್ಯತೆ ಇದೆ.

ಫುಟ್ ಪಾತ್ ಒತ್ತುವರಿ ತೆರವಿಗೆ ಡೆಡ್ ಲೈನ್ ಘೋಷಿಸಿದ ಕೃಷ್ಣ ಭೈರೇಗೌಡ! ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ

ಬೆಂಗಳೂರು: ನಗರದಲ್ಲಿ ಪಾದಚಾರಿಗಳಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರು “ಸುರಕ್ಷಿತ ಪಾದಚಾರಿ ಅಭಿಯಾನ”ಕ್ಕೆ ಚಾಲನೆ ನೀಡಿದ್ದು, ನಗರದ ಸುಮಾರು 2,000 ಕಿಲೋಮೀಟರ್ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಆದ್ಯತೆ ಮೇರೆಗೆ ಗುರುತಿಸಲಾಗಿದೆ.

ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡಿರುವವರಿಗೆ ಜುಲೈ 1ರವರೆಗೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಅವಕಾಶ ನೀಡಲಾಗಿದೆ. ಗಡುವಿನ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಜುಲೈ 1ರಿಂದ ಜಾರಿಗೆ ಬರುವ ಪ್ರಮುಖ ನಿಯಮಗಳು

  • ಫುಟ್‌ಪಾತ್ ಒತ್ತುವರಿ ತೆರವುಗೊಳಿಸದಿದ್ದರೆ ₹250 ರಿಂದ ₹10,000ವರೆಗೆ ದಂಡ ವಿಧಿಸಲಾಗುವುದು.
  • ಪಾದಚಾರಿ ಮಾರ್ಗಗಳಲ್ಲಿ ಜಾಹೀರಾತು ಫಲಕಗಳು ಅಥವಾ ಬೋರ್ಡ್‌ಗಳನ್ನು ಅಳವಡಿಸಿದರೆ ದಂಡ ಹಾಕಲಾಗುವುದು.
  • ಅಂಗಡಿಗಳು ಫುಟ್‌ಪಾತ್ ಅತಿಕ್ರಮಿಸಿಕೊಂಡಿರುವುದು ಕಂಡುಬಂದರೆ, ಅಗತ್ಯವಿದ್ದಲ್ಲಿ ವ್ಯಾಪಾರ ಪರವಾನಿಗೆ ರದ್ದುಪಡಿಸುವ ಕ್ರಮ ಕೈಗೊಳ್ಳಬಹುದು.
  • ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ.
  • ಫುಟ್‌ಪಾತ್ ಮೇಲೆ ನಿಲ್ಲಿಸಿರುವ ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು.

ಬಿಡಾಡಿ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ

ನಗರದ ರಸ್ತೆ ಬದಿಗಳು ಹಾಗೂ ಫುಟ್‌ಪಾತ್‌ಗಳಲ್ಲಿ ವಾರಸುದಾರರಿಲ್ಲದೆ ಬಿಟ್ಟುಹೋಗಿರುವ ವಾಹನಗಳ ವಿರುದ್ಧವೂ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ.

  • ಜುಲೈ 1ರಿಂದ ಇಂತಹ ವಾಹನಗಳಿಗೆ ಸ್ಟಿಕರ್ ಅಂಟಿಸಿ ನೋಟಿಸ್ ನೀಡಲಾಗುವುದು.
  • ಜುಲೈ 10ರೊಳಗೆ ವಾಹನಗಳನ್ನು ತೆರವುಗೊಳಿಸದಿದ್ದರೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದು ಹರಾಜು ಪ್ರಕ್ರಿಯೆ ಆರಂಭಿಸಲಿದ್ದಾರೆ.

ಬಸ್ ನಿಲ್ದಾಣಗಳಿಗೂ ಹೊಸ ನಿಯಮ

ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯೊಳಗೆ ಬಸ್ ನಿಲ್ದಾಣಗಳನ್ನು ಸ್ಥಾಪಿಸಬಾರದು ಎಂಬ ನಿಯಮವನ್ನೂ ಸಚಿವ ಕೃಷ್ಣ ಭೈರೇಗೌಡ ಘೋಷಿಸಿದ್ದಾರೆ.

ನಗರದಲ್ಲಿ ಪಾದಚಾರಿಗಳ ಸುರಕ್ಷತೆ, ಸುಗಮ ಸಂಚಾರ ಹಾಗೂ ಸಾರ್ವಜನಿಕ ಸ್ಥಳಗಳ ಸಮರ್ಪಕ ಬಳಕೆಗೆ ಈ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ನಾಗರಿಕರು ನಿಯಮ ಪಾಲನೆ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಕ್ರಮ ಬಡ್ಡಿ ದಂಧೆಕೋರ ಮನೋಹರ ಕಟ್ಟಿಮನಿ ಬಂಧನ..!

ಗದಗ: ಅಕ್ರಮ ಬಡ್ಡಿ ದಂಧೆ ವಿರುದ್ಧ ಸಮರ ಸಾರಿರುವ ಗದಗ ಜಿಲ್ಲಾ ಪೊಲೀಸರಿಗೆ ಮತ್ತೊಂದು ಮಹತ್ವದ ಯಶಸ್ಸು ಸಿಕ್ಕಿದ್ದು, ನಿನ್ನೆ ಬೆಟಗೇರಿ ಭಾಗದಲ್ಲಿ ನಡೆದ ಭರ್ಜರಿ ದಾಳಿಯ ಬೆನ್ನಲ್ಲೇ ಅಕ್ರಮ ಹಣಕಾಸು ವ್ಯವಹಾರದ ಪ್ರಮುಖ ಆರೋಪಿ ಮನೋಹರ ಕಟ್ಟಿಮನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮುರ್ತಾಜಾ ಖಾದ್ರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯ ವಿರುದ್ಧ ಮಹತ್ವದ ದಾಖಲೆಗಳು ಮತ್ತು ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಬಂಧನ ಕ್ರಮ ಕೈಗೊಳ್ಳಲಾಗಿದೆ.

ನಿನ್ನೆ ಆರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದ ಪೊಲೀಸರು, ಅಕ್ರಮ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದ ನೂರಾರು ಚೆಕ್‌ಗಳು, ಖಾಲಿ ಬಾಂಡ್‌ಗಳು, ಒಪ್ಪಂದ ಪತ್ರಗಳು, ಪಾಸ್‌ಬುಕ್‌ಗಳು, ಎಟಿಎಂ ಕಾರ್ಡ್‌ಗಳು, ಲೆಕ್ಕವಿಲ್ಲದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ ಕಾಯ್ದೆಯಡಿ ದಬ್ಬಾಳಿಕೆ (Extortion), ಬೆದರಿಕೆ (Criminal Intimidation) ಹಾಗೂ ಮೈಕ್ರೋಫೈನಾನ್ಸ್ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ, ತನಿಖೆ ಚುರುಕುಗೊಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಬೆಟಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧೀರಜ್ ಸಿಂಧೆ, ಬಡಾವಣೆ ಠಾಣೆಯ ಪಿಎಸ್‌ಐ ಮಾರುತಿ ಜೋಗದಂಡಕರ್, ಬೆಟಗೇರಿ ಠಾಣೆಯ ಪಿಎಸ್‌ಐ ಆರಿ, ಎಎಸ್‌ಐ ಗುಡ್ಲಾನೂರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆ ಮತ್ತು ಸಮಾಜಕ್ಕೆ ಹಾನಿಕಾರಕವಾಗಿರುವ ಅಕ್ರಮ ಹಣಕಾಸು ವ್ಯವಹಾರಗಳ ವಿರುದ್ಧ ಇಂತಹ ಕಾರ್ಯಾಚರಣೆಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಎಸ್‌ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಪೀಠಾಧಿಪತಿಗೇ ಜೀವ ಬೆದರಿಕೆ..! ಕಣ್ಣೀರಿಟ್ಟ ಕಲ್ಲಯ್ಯಜ್ಜನವರ ಗಂಭೀರ ಆರೋಪ

0

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಗಂಭೀರ ಆರೋಪ ಮಾಡಿದ್ದು, ಮಠದ ಮೂವರು ಟ್ರಸ್ಟಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮೂವರು ಸದಸ್ಯರಿಂದ ಜೀವ ಬೆದರಿಕೆ ಮತ್ತು ಮಾನಸಿಕ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ.

ನಗರದ ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾವುದೇ ಕ್ಷಣದಲ್ಲಾದರೂ ನನ್ನ ಮೇಲೆ ಹಲ್ಲೆ ನಡೆಯುವ ಸಾಧ್ಯತೆಯಿದೆ. ನನಗೆ ಏನಾದರೂ ಅನಾಹುತವಾದರೆ ಅದಕ್ಕೆ ಈ ಆರು ಜನರೇ ಹೊಣೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಠದ ಆರ್ಥಿಕ ವ್ಯವಹಾರಗಳ ಕುರಿತು ಮಾತನಾಡಿದ ಕಲ್ಲಯ್ಯಜ್ಜನವರು, “ನಾನು ಪೀಠಾಧಿಪತಿಯಾದಾಗ ಆಶ್ರಮಕ್ಕೆ 59 ಲಕ್ಷ ರೂ. ಸಾಲವಿತ್ತು. ಅದನ್ನು ಸಂಪೂರ್ಣ ತೀರಿಸಿ, ಈಗ 4 ಕೋಟಿಗೂ ಅಧಿಕ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸಿದ್ದೇನೆ. ದೇಣಿಗೆಯಾಗಿ ಬಂದ ಪ್ರತಿಯೊಂದು ರೂಪಾಯಿಗೂ ಲೆಕ್ಕ ಇಟ್ಟಿದ್ದೇನೆ. ಎಲ್ಲ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನಿರ್ವಹಿಸಿದ್ದೇನೆ” ಎಂದು ಹೇಳಿದರು.

ಇದೇ ವಿಚಾರ ಕೆಲವರಿಗೆ ಅಸಮಾಧಾನ ಉಂಟುಮಾಡಿದೆ ಎಂದು ಆರೋಪಿಸಿದ ಅವರು, “ಟ್ರಸ್ಟಿಯೊಬ್ಬರು ನನಗೆ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿದರು. ಮಠದ ಹಣವನ್ನು ವೈಯಕ್ತಿಕವಾಗಿ ನೀಡಲು ನಾನು ನಿರಾಕರಿಸಿದ್ದರಿಂದ ನನ್ನ ವಿರುದ್ಧ ಸುಳ್ಳು ಆರೋಪ, ಅಪಪ್ರಚಾರ ನಡೆಸಿ ತೇಜೋವಧೆಗೆ ಯತ್ನಿಸುತ್ತಿದ್ದಾರೆ” ಎಂದು ದೂರಿದರು.

“ಅನೇಕ ವರ್ಷಗಳಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಈಗ ಭಕ್ತರು ಹಾಗೂ ಟ್ರಸ್ಟ್ ಸಮಿತಿಯ ಗಮನಕ್ಕೆ ತರಲು ಮಾಧ್ಯಮಗಳ ಮುಂದೆ ಬಂದಿದ್ದೇನೆ. ಈ ಸಂಬಂಧ ಶೀಘ್ರದಲ್ಲೇ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಇದೇ ವೇಳೆ, “ನನ್ನ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ ಪೀಠ ತ್ಯಾಗಕ್ಕೂ ನಾನು ಸಿದ್ಧ” ಎಂದು ಘೋಷಿಸಿದ ಕಲ್ಲಯ್ಯಜ್ಜನವರು, ಆರೋಪಗಳಿಂದ ಮನನೊಂದು ಸುದ್ದಿಗೋಷ್ಠಿಯಲ್ಲೇ ಭಾವುಕರಾಗಿ ಕಣ್ಣೀರು ಹಾಕಿದರು.

AI ಬಳಸಿ ಗೃಹಿಣಿಯ ಅಶ್ಲೀಲ ಫೋಟೋ ಸೃಷ್ಟಿಸಿ ₹30 ಲಕ್ಷಕ್ಕೆ ಬೇಡಿಕೆ: ಬ್ಲ್ಯಾಕ್ ಮೇಲ್ʼನಿಂದ ಮನನೊಂದು ಆತ್ಮಹತ್ಯೆಗೆ ಯತ್ನ

0

ಚಿಕ್ಕಮಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ₹30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಬ್ಲ್ಯಾಕ್‌ಮೇಲ್‌ಗೆ ಮಣಿಯದ ಹಿನ್ನೆಲೆಯಲ್ಲಿ ಆರೋಪಿಗಳು ಎಡಿಟ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದರಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಗಳು ಎಐ ತಂತ್ರಜ್ಞಾನ ಬಳಸಿ ಗೃಹಿಣಿಯ ಫೋಟೋಗಳನ್ನು ವಿಕೃತವಾಗಿ ಪರಿವರ್ತಿಸಿದ್ದಾರೆ. ಬಳಿಕ ಆ ಫೋಟೋಗಳನ್ನು ಮಹಿಳೆಯ ಮೊಬೈಲ್‌ಗೆ ಕಳುಹಿಸಿ ₹30 ಲಕ್ಷ ನೀಡುವಂತೆ ಒತ್ತಾಯಿಸಿದ್ದಾರೆ. ಹಣ ನೀಡದಿದ್ದರೆ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಆದರೆ ಗೃಹಿಣಿ ಹಾಗೂ ಅವರ ಕುಟುಂಬಸ್ಥರು ಈ ಬೆದರಿಕೆಗೆ ಮಣಿಯದಿದ್ದಾಗ, ಆರೋಪಿಗಳು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆ ತೆರೆದು ಎಡಿಟ್ ಮಾಡಿದ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಅಲ್ಲದೆ, ಮಹಿಳೆಯ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಮಾಹಿತಿಯನ್ನು ಪ್ರಕಟಿಸಿರುವ ಆರೋಪವೂ ಕೇಳಿಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ತನ್ನ ಹೆಸರಿನಲ್ಲಿ ಹರಿದಾಡಿದ ವಿಕೃತ ಚಿತ್ರಗಳನ್ನು ಕಂಡು ಗೃಹಿಣಿ ತೀವ್ರವಾಗಿ ಮನನೊಂದಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಸಂತ್ರಸ್ತೆಯ ಪತಿ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾವಿಕೆರೆ ಗ್ರಾಮದ ಅಕ್ಷಯ್ ಹಾಗೂ ಸಾಹುಲ್ ಹಮೀದ್ ಎಂಬ ಇಬ್ಬರು ಯುವಕರ ವಿರುದ್ಧ ನೇರ ಆರೋಪ ಮಾಡಲಾಗಿದೆ. ಗೃಹಿಣಿಯ ಮೊಬೈಲ್‌ಗೆ ಬಂದಿದ್ದ ಸಂದೇಶಗಳು ಹಾಗೂ ಸಂಪರ್ಕ ಸಂಖ್ಯೆಗಳ ಆಧಾರದ ಮೇಲೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ದೂರಿನಲ್ಲಿ, ಇದೇ ಆರೋಪಿಗಳು ಈ ಹಿಂದೆ ಕೂಡ ಇತರ ಮಹಿಳೆಯರನ್ನು ಇದೇ ರೀತಿಯಲ್ಲಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ರೀತಿಯ ಕೃತ್ಯಗಳ ಹಿಂದೆ ಸಂಘಟಿತ ಜಾಲವಿರುವ ಸಾಧ್ಯತೆಯನ್ನೂ ಕುಟುಂಬಸ್ಥರು ಉಲ್ಲೇಖಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಲಕ್ಕವಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ಉಂಟುಮಾಡಿ, ಮಾನಸಿಕ ಹಿಂಸೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

error: Content is protected !!