Home Blog

ಇದು ಮೋದಿ ಕೊಡುಗೆ: ಇಂಧನ ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದನ್ನು ‘ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ’ ಎಂದು ವ್ಯಂಗ್ಯವಾಡಿದ್ದಾರೆ.

ಇಂಧನ ದರ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿಫಲ ವಿದೇಶಾಂಗ ನೀತಿಯೇ ಪ್ರಮುಖ ಕಾರಣ ಎಂದು ಆರೋಪಿಸಿದ ಅವರು, ಇತರ ದೇಶಗಳೊಂದಿಗೆ ಸಮರ್ಪಕ ಸಂಬಂಧ ಕಾಪಾಡಿಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಜನರು ತಮ್ಮ ದುಡಿಮೆಯ ಹಣದಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನರಿಗೆ ಪರಿಹಾರ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದರು.

ಈ ವೇಳೆ ಪ್ರಧಾನಿ ನೀಡಿರುವ ಕೆಲ ಹೇಳಿಕೆಗಳನ್ನು ಉಲ್ಲೇಖಿಸಿದ ಡಿ.ಕೆ. ಶಿವಕುಮಾರ್, ಚಿನ್ನ ಖರೀದಿಸಬೇಡಿ, ಎಣ್ಣೆ ಬಳಸಬೇಡಿ ಎಂದು ಹೇಳುವುದು ವಾಸ್ತವಿಕತೆಯಿಂದ ದೂರವಾದ ಮಾತು. ಮಾಂಗಲ್ಯ ಸರವು ಪ್ರತಿಯೊಬ್ಬರ ಜೀವನದಲ್ಲೂ ಮಹತ್ವದ್ದು. ಅದನ್ನು ಖರೀದಿಸಬೇಡಿ ಎಂದು ಹೇಳುವುದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಇದೇ ವೇಳೆ ಬಿಡದಿ ಟೌನ್‌ಶಿಪ್ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ತಾವು ಬಿಡದಿಗೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು.

ನಾನು ಬಿಡದಿಗೆ ಹೋಗುತ್ತೇನೆ. ರೈತರು ನನ್ನ ವಿರುದ್ಧ ಘೋಷಣೆ ಕೂಗಬಹುದು, ಕಲ್ಲು ತೂರಾಟ ನಡೆಸಬಹುದು. ಅದಕ್ಕೆ ನಾನು ಹೆದರುವುದಿಲ್ಲ. ಕುಮಾರಸ್ವಾಮಿಯವರು ಈ ಹಿಂದೆ ಆರಂಭಿಸಿದ್ದ ಕೆಲಸವನ್ನೇ ನಾನು ಮುಂದುವರಿಸುತ್ತಿದ್ದೇನೆ ಎಂದು ಹೇಳಿದರು.

ಬಿಡದಿ ಯೋಜನೆ ಕುರಿತು ಚರ್ಚೆಗೆ ದಿನಾಂಕ ನಿಗದಿಪಡಿಸಿದರೆ ತಾವು ಸಿದ್ಧ ಎಂದು ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು ಹಾಕಿದರು.

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಜಾರಿ: ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸುವ ಉದ್ದೇಶದಿಂದ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿದ್ದು, ಪರೀಕ್ಷೆಗೆ ಮುನ್ನ ಕೆಲವೆಡೆ ಹಂಚಿಕೆಯಾಗಿದ್ದ ‘ಗೆಸ್ ಪೇಪರ್’ಗಳಲ್ಲಿ ಪರೀಕ್ಷೆಯಲ್ಲಿ ಬಂದ ಹಲವು ಪ್ರಶ್ನೆಗಳು ಇದ್ದವು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವಾಲಯ ತಕ್ಷಣವೇ ತನಿಖೆ ಆರಂಭಿಸಿ, ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಿತ್ತು.

ಮೇ 12ರಂದು ‘ಗೆಸ್ ಪೇಪರ್’ ಹೆಸರಿನಲ್ಲಿ ಮೂಲ ಪ್ರಶ್ನೆಪತ್ರಿಕೆಯೇ ಸೋರಿಕೆಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೇ 13ರಂದು ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ವಿದ್ಯಾರ್ಥಿಗಳ ಹಕ್ಕುಗಳಿಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಹಲವು ವರ್ಷಗಳಿಂದ ಸಕ್ರಿಯವಾಗಿರುವ ಪರೀಕ್ಷಾ ಮಾಫಿಯಾ ವಿರುದ್ಧ ಕಠಿಣ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ದರ್ಶನ್‌ಗೆ ಹೆಚ್ಚಾಯ್ತು ಸಂಕಷ್ಟ: 2028ರವರೆಗೂ ಬಿಡುಗಡೆಯಾಗಲ್ಲ ದಾಸನ ಸಿನಿಮಾ?

ಬೆಂಗಳೂರು: ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅವರು ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರಬೇಕಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ತೀರ್ಪು ಅವರ ಸಿನಿಮಾ ವೃತ್ತಿಜೀವನದ ಮೇಲೆ ನೇರ ಪರಿಣಾಮ ಬೀರಲಿದೆ.

ದರ್ಶನ್ ತಮ್ಮ ಅರ್ಜಿಯಲ್ಲಿ, ತಾವು ವರ್ಷಕ್ಕೆ 2–3 ಸಿನಿಮಾಗಳಲ್ಲಿ ನಟಿಸುತ್ತಿದ್ದೆವು. ಈಗಾಗಲೇ ದೊಡ್ಡ ನಿರ್ಮಾಣ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಸುಮಾರು 6 ಕೋಟಿ ರೂ. ಹೂಡಿಕೆ ಆಗಿದೆ ಎಂದು ತಿಳಿಸಿದ್ದಾರೆ. ಆದರೆ ದೀರ್ಘ ಜೈಲುವಾಸವು ತಮ್ಮ ಸಿನಿ ಭವಿಷ್ಯಕ್ಕೆ ಹಾನಿ ಮಾಡುತ್ತಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಆದರೆ ಸುಪ್ರೀಂ ಕೋರ್ಟ್ ಈ ಮನವಿಯನ್ನು ಪರಿಗಣಿಸದೇ, ಸಾಕ್ಷ್ಯ ವಿಚಾರಣೆಗೆ ವೇಗ ನೀಡುವಂತೆ ಸೂಚಿಸಿದೆ. ಪ್ರಕರಣದಲ್ಲಿ 272 ಸಾಕ್ಷಿಗಳಿದ್ದು, ಇದುವರೆಗೆ ಕೇವಲ 10 ಮಂದಿಯ ವಿಚಾರಣೆ ನಡೆದಿರುವುದು ಗಮನ ಸೆಳೆದಿದೆ.

ನ್ಯಾಯಾಲಯದ ಆದೇಶದಂತೆ ಮುಂದಿನ ಒಂದು ವರ್ಷದಲ್ಲಿ ಕನಿಷ್ಠ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳಬೇಕು. ನಂತರವೇ ಜಾಮೀನು ಅರ್ಜಿ ವಿಚಾರಣೆಗೆ ಅವಕಾಶ ಸಿಗಲಿದೆ.

ಈ ಬೆಳವಣಿಗೆಯಿಂದ ದರ್ಶನ್ ನಟನೆಯ ಹೊಸ ಸಿನಿಮಾಗಳು ಕನಿಷ್ಠ 2028ರ ಬಳಿಕ ಮಾತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂಬ ಚರ್ಚೆ ಶುರುವಾಗಿದೆ.

ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ?: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು: ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ವಿಚಾರಣೆಗೆ ಒಂದು ವರ್ಷದ ಗಡುವು ನೀಡಿದೆ. ಆ ಅವಧಿಯೊಳಗೆ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳ್ಳದಿದ್ದರೆ ಮಾತ್ರ ಜಾಮೀನು ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್, ಜೈಲಿನಲ್ಲಿನ ಕಿರುಕುಳ, ಆರೋಗ್ಯ ಸಮಸ್ಯೆ ಹಾಗೂ ಪ್ರಕರಣದ ವಿಚಾರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ದರ್ಶನ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ, “272 ಸಾಕ್ಷಿಗಳ ಪೈಕಿ ಕೇವಲ 10 ಮಂದಿಯ ವಿಚಾರಣೆ ಮಾತ್ರ ನಡೆದಿದೆ. ಈ ವೇಗದಲ್ಲಿ ವಿಚಾರಣೆ ಮುಗಿಯುವುದು ಅಸಾಧ್ಯ” ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ವಾದಿಸಿದ ಸಿದ್ಧಾರ್ಥ್ ಲೂತ್ರಾ, “ಆರೋಪಿಗಳು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯತ್ನ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ನ್ಯಾಯಮೂರ್ತಿಗಳು ಪ್ರಕರಣದ ಗಂಭೀರತೆ ಗಮನಿಸಿ, “ಒಂದು ವರ್ಷದೊಳಗೆ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು. ನಂತರ ದರ್ಶನ್ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು” ಎಂದು ಸೂಚಿಸಿದರು. ಈ ಆದೇಶದಿಂದ ದರ್ಶನ್ ಇನ್ನೂ ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರಬೇಕಾಗುವ ಸಾಧ್ಯತೆ ಹೆಚ್ಚಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಭವಿಷ್ಯ ನಿರ್ಧಾರ: ಇಂದಾದ್ರು ಸಿಗುತ್ತಾ ದಾಸನಿಗೆ ಬಿಡುಗಡೆ ಭಾಗ್ಯ?

ಬೆಂಗಳೂರು: ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಇದು ಅವರ ಪಾಲಿಗೆ ಮಹತ್ವದ ದಿನವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬಳಿಕ ದರ್ಶನ್ ಸುಮಾರು ಎಂಟು ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಅವ್ಯವಸ್ಥೆ, ಮಾನಸಿಕ ಹಿಂಸೆ ಹಾಗೂ ತನಿಖೆ ವಿಳಂಬದ ಆಧಾರದ ಮೇಲೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಪರ್ದಿವಾಲಾ ಪೀಠದಲ್ಲಿ ನಡೆಯಲಿದೆ.

ಕಾರಾಗೃಹ ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ, “ದರ್ಶನ್ ಅವರನ್ನು ನಿರ್ಲಕ್ಷ್ಯ ಮಾಡಿಲ್ಲ. ಎಲ್ಲ ಕೈದಿಗಳಿಗೆ ಇರುವ ನಿಯಮಗಳನ್ನೇ ಪಾಲಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದೆ. ಭದ್ರತೆ ದೃಷ್ಟಿಯಿಂದ ಪ್ರತ್ಯೇಕ ಬ್ಯಾರಕ್‌ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.

ಪ್ರಕರಣದ ವಿಚಾರಣೆ ನಿಯಮಿತವಾಗಿ ನಡೆಯುತ್ತಿದೆ. ವಾರಕ್ಕೆ ಎರಡು ಬಾರಿ ವಿಚಾರಣೆ ನಡೆಯುತ್ತಿರುವುದರಿಂದ ವಿಳಂಬ ಎಂಬ ಆರೋಪ ಸತ್ಯವಲ್ಲ ಎಂದು ಎಸ್‌ಪಿಪಿ ವರದಿಯಲ್ಲಿ ಹೇಳಲಾಗಿದೆ.

ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಲಿದ್ದು, ಇಂದು ಜಾಮೀನು ಸಿಕ್ಕರೆ ಅವರು ಜೈಲಿನಿಂದ ಹೊರಬರುವ ಸಾಧ್ಯತೆ ಇದೆ.

ಕೇದಾರನಾಥ ಯಾತ್ರೆಗೆ ಭಾರೀ ಜನಸಾಗರ: 5 ಲಕ್ಷಕ್ಕೂ ಹೆಚ್ಚು ಭಕ್ತರು, ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳು ಆರಂಭ

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಈ ಬಾರಿ ಭಕ್ತರ ಮಹಾಸಾಗರವೇ ಹರಿದು ಬರುತ್ತಿದ್ದು, ಯಾತ್ರಾರ್ಥಿಗಳ ಸಂಖ್ಯೆ ದಾಖಲೆ ಮಟ್ಟ ತಲುಪಿದೆ. ಪ್ರಸ್ತುತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ‘ಹೈ ಅಲರ್ಟ್’ ಘೋಷಿಸಿದೆ.

ಹಿಮಾಲಯ ಪರ್ವತ ಶ್ರೇಣಿಯ ಮಧ್ಯದಲ್ಲಿರುವ ಕೇದಾರನಾಥಕ್ಕೆ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಯಾತ್ರೆಯ ಆರಂಭಿಕ ಹಂತದಲ್ಲೇ ಇಷ್ಟು ದೊಡ್ಡ ಪ್ರಮಾಣದ ಜನಸಂದಣಿ ದಾಖಲಾಗಿರುವುದು ಪ್ರವಾಸೋದ್ಯಮ ಇಲಾಖೆಯಲ್ಲೂ ಅಚ್ಚರಿ ಮೂಡಿಸಿದೆ. ಆದರೆ ಹೆಚ್ಚುತ್ತಿರುವ ದಟ್ಟಣೆಯಿಂದ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಾಗಿದೆ.

ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಆರೋಗ್ಯ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಯಾತ್ರಾ ಮಾರ್ಗದುದ್ದಕ್ಕೂ ಸುಮಾರು 52 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದುವರೆಗೆ 62 ಸಾವಿರಕ್ಕೂ ಹೆಚ್ಚು ಯಾತ್ರಿಕರು ಒಪಿಡಿ ಸೇವೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ 26 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ತುರ್ತುವಾಗಿ ಏರ್‌ಲಿಫ್ಟ್ ಮಾಡಿ ಉನ್ನತ ಚಿಕಿತ್ಸೆಗೆ ಕಳುಹಿಸಲಾಗಿದೆ.

ಎತ್ತರ ಪ್ರದೇಶಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಿರುವುದರಿಂದ ಈ ಬಾರಿ ಇಸಿಜಿ ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ 8 ಮಂದಿಯಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ರಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರುದ್ರಪ್ರಯಾಗದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಮ್ ಪ್ರಕಾಶ್, “ಎತ್ತರ ಪ್ರದೇಶಗಳ ಹವಾಮಾನ ವೈಪರೀತ್ಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಶ್ವಾಸಕೋಶ ಸಮಸ್ಯೆ ಇರುವವರು ಹಾಗೂ ಸಣ್ಣ ಮಕ್ಕಳನ್ನು ಈ ಕಠಿಣ ಯಾತ್ರೆಗೆ ಕರೆತರದಿರುವುದು ಒಳಿತು” ಎಂದು ಮನವಿ ಮಾಡಿದ್ದಾರೆ.

NEET UG 2026 ಮರು ಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಪರೀಕ್ಷೆ ನಡೆಸಲು NTA ನಿರ್ಧಾರ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್‌ಟಿಎ, NEET (UG) 2026 ಮರು ಪರೀಕ್ಷೆಯನ್ನು ಜೂನ್ 21, 2026 ರಂದು ನಡೆಸಲಾಗುವುದು ಎಂದು ಅಧಿಕೃತವಾಗಿ ಘೋಷಿಸಿದೆ. ಭಾರತ ಸರ್ಕಾರದ ಅನುಮೋದನೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿರುವ ಎನ್‌ಟಿಎ, “ಭಾರತ ಸರ್ಕಾರದ ಅನುಮೋದನೆಯೊಂದಿಗೆ NEET (UG) 2026 ಮರು ಪರೀಕ್ಷೆಯನ್ನು ಭಾನುವಾರ, ಜೂನ್ 21ರಂದು ನಡೆಸಲು ತೀರ್ಮಾನಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಪರೀಕ್ಷೆಗೆ ಸಂಬಂಧಿಸಿದ ಎಲ್ಲ ನವೀಕರಣಗಳು ಮತ್ತು ಮಾಹಿತಿಗಾಗಿ ಅಭ್ಯರ್ಥಿಗಳು ಹಾಗೂ ಪೋಷಕರು ಅಧಿಕೃತ ಸಂವಹನ ಮಾರ್ಗಗಳನ್ನೇ ಅವಲಂಬಿಸಬೇಕು ಎಂದು ಎನ್‌ಟಿಎ ಸೂಚಿಸಿದೆ. ಯಾವುದೇ ಗೊಂದಲ ಅಥವಾ ಪ್ರಶ್ನೆಗಳಿದ್ದರೆ ಅಧಿಕೃತ ಇಮೇಲ್ ಹಾಗೂ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಲು ಅವಕಾಶ ನೀಡಲಾಗಿದೆ.

ಈ ಘೋಷಣೆಗೆ ಒಂದು ದಿನ ಮೊದಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿತ್ತು. ಮರು ಪರೀಕ್ಷೆಯ ಸಿದ್ಧತೆಗಳು ಹಾಗೂ ಹೊಸ ಪರೀಕ್ಷಾ ನಡವಳಿಕೆ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ನಡೆದ ಈ ಸಭೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾರದರ್ಶಕತೆ, ಭದ್ರತೆ ಮತ್ತು ಪರೀಕ್ಷಾ ಪ್ರಕ್ರಿಯೆಯ ಸುಧಾರಣೆ ಸೇರಿದಂತೆ ಹಲವು ಮಹತ್ವದ ಅಂಶಗಳ ಕುರಿತು ಚರ್ಚೆ ನಡೆದಿತ್ತು ಎಂದು ತಿಳಿದುಬಂದಿದೆ.

ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರ ಭರ್ಜರಿ ಏರಿಕೆ: ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ ಆಗಿದ್ದು, ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಹೊಸ ದರಗಳನ್ನು ಘೋಷಿಸಿದ್ದು, ಪರಿಷ್ಕೃತ ಬೆಲೆಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.77 ರೂ.ಗಳಿಂದ 97.77 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ 87.67 ರೂ.ಗಳಿಂದ 90.67 ರೂ.ಗೆ ಹೆಚ್ಚಳವಾಗಿದೆ. ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ರಾಜ್ಯಾವಾರು ಇಂಧನ ದರಗಳಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರಲಿದೆ.

ಬೆಂಗಳೂರುನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 3.27 ರೂ. ಏರಿಕೆಯಾಗಿ 106.17 ರೂ.ಗೆ ತಲುಪಿದೆ. ಇದೇ ವೇಳೆ ಡೀಸೆಲ್ ದರ 3.12 ರೂ. ಹೆಚ್ಚಳವಾಗಿ 94.10 ರೂ. ಆಗಿದೆ. ಈ ಹಿಂದೆ ನಗರದಲ್ಲಿ ಪೆಟ್ರೋಲ್ ದರ 102.90 ರೂ. ಮತ್ತು ಡೀಸೆಲ್ ದರ 90.98 ರೂ. ಇತ್ತು.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 3.29 ರೂ. ಏರಿಕೆಯಾಗಿದ್ದು, ಹೊಸ ದರ 108.74 ರೂ. ಆಗಿದೆ. ಡೀಸೆಲ್ ದರ 95.13 ರೂ.ಗೆ ತಲುಪಿದೆ.

ಮುಂಬೈನಲ್ಲಿ ಪೆಟ್ರೋಲ್ ದರ 3.14 ರೂ. ಹೆಚ್ಚಳವಾಗಿ 106.68 ರೂ. ಆಗಿದ್ದು, ಡೀಸೆಲ್ ದರ 93.14 ರೂ.ಗೆ ಏರಿಕೆಯಾಗಿದೆ.

ಇದೇ ವೇಳೆ ಚೆನ್ನೈನಲ್ಲಿ ಪೆಟ್ರೋಲ್ ದರ 2.83 ರೂ. ಏರಿಕೆಯಾಗಿ 103.67 ರೂ.ಗೆ ತಲುಪಿದೆ. ಡೀಸೆಲ್ ದರವೂ 2.86 ರೂ. ಹೆಚ್ಚಳವಾಗಿ 95.25 ರೂ. ಆಗಿದೆ.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಳವಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ವಿಜಯಪುರದಲ್ಲಿ ಮಳೆಯ ರೌದ್ರನರ್ತನ: ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು!

ವಿಜಯಪುರ: ಭಾರೀ ಗಾಳಿ ಸಹಿತ ಸುರಿದ ಮಳೆಗೆ ಮನೆ ಮೇಲ್ಚಾವಣಿ ಕುಸಿದು ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಮೊರಟಗಿ ಗ್ರಾಮದಲ್ಲಿ ನಡೆದಿದೆ.

ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದ ಈ ದುರಂತದಲ್ಲಿ ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಮಕ್ಕಳಾದ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು.

ತಮ್ಮ ಮನೆಯ ದುರಸ್ಥಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ವಾಸವಾಗಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರೂ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದುರಂತದಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮನಕಲುಕುವಂತಿತ್ತು.

ಜೆ.ಕೆ. ಬಾರ್‌ನಿಂದ ಹೊಂಬಳಕ್ಕೆ ಮದ್ಯ ಸಪ್ಲೈ..? ಮನೆ ಮುಂದೆಯೇ ‘ಟೆಟ್ರಾ ಪ್ಯಾಕ್’ ದಂಧೆ!

ಪರವಾನಗಿ ಇಲ್ಲದೆ ಮದ್ಯ ವ್ಯಾಪಾರ : ಗದಗ ಗ್ರಾಮೀಣ ಪೊಲೀಸರ ದಾಳಿ

ಗದಗ: ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಮನೆ ಮುಂದೆಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ದಂಧೆ ಮೇಲೆ ಗದಗ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಸಾವಿರಾರು ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮದ್ಯ ಪೂರೈಕೆಯ ಹಿಂದೆ ಬಾರ್ ಸಂಪರ್ಕವಿದೆಯೇ ಎಂಬ ಅನುಮಾನವೂ ಮೂಡಿದ್ದು, ತನಿಖೆ ಚುರುಕುಗೊಂಡಿದೆ.

ಗದಗ ತಾಲೂಕಿನ ಹೊಂಬಳ ಗ್ರಾಮದ ಜನತಾ ಕಾಲೋನಿಯಲ್ಲಿ ಮನೋಹರ ಮಲ್ಲಪ್ಪ ಹರಣಶಿಕಾರಿ ಎಂಬಾತ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ರಾತ್ರಿ ಕಾರ್ಯಾಚರಣೆ ನಡೆಸಿದರು.

ದಾಳಿ ವೇಳೆ ಆರೋಪಿಯ ವಶದಿಂದ 94 “ಒರಿಜಿನಲ್ ಚಾಯ್ಸ್” ವಿಸ್ಕಿ 90 ಎಂ.ಎಲ್ ಟೆಟ್ರಾ ಪ್ಯಾಕೆಟ್‌ಗಳು ಹಾಗೂ 48 “ಒರಿಜಿನಲ್ ಚಾಯ್ಸ್ ಡಿಲಕ್ಸ್” 180 ಎಂ.ಎಲ್ ಟೆಟ್ರಾ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಮದ್ಯದ ಒಟ್ಟು ಮೌಲ್ಯ ₹9,260 ಎಂದು ಅಂದಾಜಿಸಲಾಗಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಆರೋಪಿಯು ಹೆಚ್ಚುವರಿ ಲಾಭದ ಆಸೆಗೆ ಗ್ರಾಮದಲ್ಲೇ ಅಕ್ರಮ ಮದ್ಯ ಮಾರಾಟ ಜಾಲ ನಡೆಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ “ಜೆ.ಕೆ. ಬಾರ್” ಹೆಸರು ಕೇಳಿಬಂದ ಹಿನ್ನೆಲೆ, ಮದ್ಯ ಪೂರೈಕೆ ಯಾವ ಮಾರ್ಗದಿಂದ ನಡೆಯುತ್ತಿತ್ತು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.116/2026ರಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ಜಾಲದ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿದ್ದು, ಇಂತಹ ದಂಧೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ಎಚ್ಚರಿಸಿವೆ.

error: Content is protected !!