Home Blog

ಜೈಲಲ್ಲಿ ಮಾನಸಿಕವಾಗಿ ಕುಗ್ಗಿರುವ ದರ್ಶನ್ ಫೋಟೋ ವೈರಲ್! ದಾಸನ ಸ್ಥಿತಿ ಕಂಡು ಮರುಗಿನ ಫ್ಯಾನ್ಸ್!

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಟನ ಸ್ಥಿತಿ ಕಂಡು ಅಭಿಮಾನಿಗಳು ಗಾಬರಿಗೊಂಡಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ದರ್ಶನ್ ಅವರ ಆರೋಗ್ಯ ಮತ್ತು ಮಾನಸಿಕ ಸ್ಥಿತಿ ಕುರಿತು ವಿವಿಧ ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೇ ವೇಳೆ ವೈರಲ್ ಆಗಿರುವ ಫೋಟೋ ಕೂಡ ಸಾಕಷ್ಟು ಗಮನ ಸೆಳೆದಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ 1 ವರ್ಷ ಜಾಮೀನು ತಿರಸ್ಕಾರ ಮಾಡಿರುವ ಹಿನ್ನೆಲೆ ದರ್ಶನ್ ಅವರು ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ತಮ್ಮ ನೆಚ್ಚಿನ ನಾಯಕ ನಟನ ಇಂದಿನ ಪರಿಸ್ಥಿತಿ ಕಂಡು ಅಭಿಮಾನಿಗಳು ಆತಂಕ ಮತ್ತು ಭಾವುಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಆದರೆ, ದರ್ಶನ್ ಅವರ ಮಾನಸಿಕ ಸ್ಥಿತಿ ಅಥವಾ ಆರೋಗ್ಯದ ಬಗ್ಗೆ ಅಧಿಕೃತ ಮೂಲಗಳಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು Ai ಫೋಟೋ ಆಗಿರಬಹುದು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಗಮನ ನೆಟ್ಟಿದೆ.

ಭ್ರೂಣದ ನರಮಂಡಲದಲ್ಲಿ ಗಂಭೀರ ದೋಷ: 32 ವಾರಗಳ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮಹಿಳೆಯ ದೈಹಿಕ ಸ್ವಾಯತ್ತತೆ ಹಾಗೂ ಸಂತಾನೋತ್ಪತ್ತಿ ಹಕ್ಕುಗಳಿಗೆ ಮಹತ್ವ ನೀಡಿರುವ ಕರ್ನಾಟಕ ಹೈಕೋರ್ಟ್, ಗಂಭೀರ ನರಮಂಡಲದ (ನ್ಯೂರೋಲಾಜಿಕಲ್) ದೋಷಗಳಿಂದ ಬಳಲುತ್ತಿರುವ 32 ವಾರಗಳ ಭ್ರೂಣವನ್ನು ವೈದ್ಯಕೀಯವಾಗಿ ಗರ್ಭಪಾತ ಮಾಡಲು ಅನುಮತಿ ನೀಡಿದೆ. ವೈದ್ಯಕೀಯ ಮಂಡಳಿ ಸಲ್ಲಿಸಿದ್ದ ವರದಿಯ ಆಧಾರದ ಮೇಲೆ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದೆ.

ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ, ಪ್ರಕರಣದ ವೈದ್ಯಕೀಯ ಹಾಗೂ ಮಾನವೀಯ ಅಂಶಗಳನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮೋದನೆ ನೀಡಿದೆ. ಆದೇಶದ ಸಂಪೂರ್ಣ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ವಿಚಾರಣೆ ವೇಳೆ, ಭ್ರೂಣದಲ್ಲಿ ಪತ್ತೆಯಾಗಿರುವ ಗಂಭೀರ ನರಮಂಡಲದ ದೋಷಗಳಿಂದ ಮಗು ಜನಿಸಿದ ಬಳಿಕ ತೀವ್ರ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮಂಡಳಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮಗುವಿನ ಜೀವನಪರ್ಯಂತದ ಸಂಕಷ್ಟ, ಪೋಷಕರು ಅನುಭವಿಸಬೇಕಾದ ಮಾನಸಿಕ ವೇದನೆ ಹಾಗೂ ಆರ್ಥಿಕ ಹೊರೆಗಳನ್ನು ಗಮನದಲ್ಲಿಟ್ಟುಕೊಂಡು ಗರ್ಭಪಾತಕ್ಕೆ ಅನುಮತಿ ನೀಡುವುದು ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಾಮಾನ್ಯವಾಗಿ ವೈದ್ಯಕೀಯ ಗರ್ಭಪಾತಕ್ಕೆ 24 ವಾರಗಳವರೆಗೆ ಕಾನೂನು ಅವಕಾಶ ನೀಡುತ್ತದೆ. ಆದರೆ ಈ ಪ್ರಕರಣದಲ್ಲಿ ಗರ್ಭಧಾರಣೆಯ 32ನೇ ವಾರದಲ್ಲಿ ಮಾತ್ರ ಭ್ರೂಣದ ಗಂಭೀರ ದೋಷಗಳು ಪತ್ತೆಯಾಗಿದ್ದರಿಂದ ಮಹಿಳೆ ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಅಂತಿಮವಾಗಿ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ, ಅರ್ಜಿಯಲ್ಲಿ ಉಲ್ಲೇಖಿಸಲಾದ ಆಸ್ಪತ್ರೆಯಲ್ಲಿಯೇ ವೈದ್ಯಕೀಯ ಗರ್ಭಪಾತ ಪ್ರಕ್ರಿಯೆ ನಡೆಸಲು ಅನುಮತಿ ನೀಡಿದೆ. ಜೊತೆಗೆ ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಆಸ್ಪತ್ರೆ ತಕ್ಷಣ ಆದೇಶವನ್ನು ಜಾರಿಗೊಳಿಸುವಂತೆ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ವಿವರಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ ನಡೆಸಲಾಗಿದ್ದ ಅಲ್ಟ್ರಾಸೌಂಡ್ ಪರೀಕ್ಷೆಯಲ್ಲಿ ಯಾವುದೇ ಅಸಹಜತೆ ಕಂಡುಬಂದಿರಲಿಲ್ಲ. ಆದರೆ ಮೇ ತಿಂಗಳಲ್ಲಿ ನಡೆದ ಸ್ಕ್ಯಾನಿಂಗ್ ವೇಳೆ ಭ್ರೂಣದಲ್ಲಿ ಗಂಭೀರ ನರಮಂಡಲದ ವೈಕಲ್ಯಗಳಿರುವುದು ವೈದ್ಯರಿಗೆ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಮಹಿಳೆಯ ಕುಟುಂಬಸ್ಥರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಆದೇಶ ನೀಡಿತ್ತು.

ನಂತರ ಮಂಡಳಿ ಸಲ್ಲಿಸಿದ ವರದಿಯಲ್ಲಿ, ಮಗು ಜನಿಸಿದರೆ ಗಂಭೀರ ನರಮಂಡಲದ ವೈಕಲ್ಯಗಳಿಂದ ಬಳಲುವ ಸಾಧ್ಯತೆ ಹೆಚ್ಚಿದ್ದು, ಜೀವಿತಾವಧಿಯವರೆಗೂ ನಿರಂತರ ವೈದ್ಯಕೀಯ ಆರೈಕೆಯ ಅಗತ್ಯ ಉಂಟಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿತ್ತು.

ವಿಚಾರಣೆ ಸಂದರ್ಭದಲ್ಲಿ ಮಹಿಳೆಯ ಪತಿ ನ್ಯಾಯಾಲಯದ ಮುಂದೆ ಹಾಜರಾಗಿ, ವೈದ್ಯರ ಸಲಹೆ ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಭ್ರೂಣದ ಆರೋಗ್ಯ ವರದಿಗಳು ಸಾಮಾನ್ಯವಾಗಿದ್ದರೆ ಗರ್ಭಪಾತದ ಬಗ್ಗೆ ಯೋಚಿಸುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ ಎಂದು ಅವರು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

ಝೋಜಿಲಾ ಸುರಂಗ ಕಾಮಗಾರಿಗೆ ಐತಿಹಾಸಿಕ ಮೈಲಿಗಲ್ಲು: ಜೂನ್ 9ಕ್ಕೆ ಉತ್ಖನನ ಪೂರ್ಣ

ಶ್ರೀನಗರ: ಕಾಶ್ಮೀರ ಮತ್ತು ಲಡಾಖ್ ನಡುವಿನ ವರ್ಷಪೂರ್ತಿ ಸಂಪರ್ಕಕ್ಕೆ ದಾರಿ ಮಾಡಿಕೊಡುವ ಮಹತ್ವಾಕಾಂಕ್ಷಿ ಝೋಜಿಲಾ ಸುರಂಗ ಯೋಜನೆ ಐತಿಹಾಸಿಕ ಮೈಲಿಗಲ್ಲಿನತ್ತ ಸಾಗುತ್ತಿದೆ.

ಹಿಮಾಲಯದ ದುರ್ಗಮ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಈ ಬೃಹತ್ ಸುರಂಗದ ಉತ್ಖನನ ಕಾರ್ಯ ಅಂತಿಮ ಹಂತ ತಲುಪಿದ್ದು, ಜೂನ್ 9ರ ವೇಳೆಗೆ ಸಂಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಸಮುದ್ರಮಟ್ಟದಿಂದ ಸುಮಾರು 11,578 ಅಡಿ ಎತ್ತರದಲ್ಲಿ ನಿರ್ಮಾಣವಾಗುತ್ತಿರುವ 13.15 ಕಿಲೋಮೀಟರ್ ಉದ್ದದ ಸುರಂಗವನ್ನು ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ನಿರ್ಮಿಸುತ್ತಿದೆ. ಬಾಲ್ಟಾಲ್ ಮತ್ತು ಮಿನಮಾರ್ಗ್ ಭಾಗಗಳಿಂದ ನಡೆಯುತ್ತಿರುವ ಸುರಂಗ ಕೊರೆತ ಕಾರ್ಯದ ಅಂಚುಗಳು ಮೇ ಅಂತ್ಯದ ವೇಳೆಗೆ ಒಂದಾಗಲಿದ್ದು, ಇದನ್ನು ಎಂಜಿನಿಯರ್‌ಗಳು “ಹ್ಯಾಂಡ್‌ಶೇಕ್ ಮೊಮೆಂಟ್” ಎಂದು ಬಣ್ಣಿಸಿದ್ದಾರೆ.

ತೀವ್ರ ಹಿಮಪಾತ, ಮೈನಸ್ ತಾಪಮಾನ ಹಾಗೂ ಸಂಕೀರ್ಣ ಭೂವೈಜ್ಞಾನಿಕ ಸವಾಲುಗಳ ನಡುವೆಯೂ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಯೋಜನೆಯು ಅಂತಿಮ ಹಂತ ತಲುಪಿದೆ.

ಗಡಿ ಭದ್ರತೆಗೆ ಬಲ:

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ 6,809.69 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಸೆಪ್ಟೆಂಬರ್ 2026ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸುರಂಗ ಪೂರ್ಣಗೊಂಡ ಬಳಿಕ ಚಳಿಗಾಲದಲ್ಲಿ ಹಿಮಪಾತದಿಂದ ಮುಚ್ಚಲ್ಪಡುವ ಝೋಜಿಲಾ ಪಾಸ್ ಅವಲಂಬನೆ ಕಡಿಮೆಯಾಗಲಿದೆ.

ಚೀನಾ ಹಾಗೂ ಪಾಕಿಸ್ತಾನದೊಂದಿಗೆ ಸೂಕ್ಷ್ಮ ಗಡಿಯನ್ನು ಹಂಚಿಕೊಂಡಿರುವ ಲಡಾಖ್ ಪ್ರದೇಶಕ್ಕೆ ವರ್ಷಪೂರ್ತಿ ನಿರಂತರ ಸಂಪರ್ಕ ಕಲ್ಪಿಸುವ ಮೂಲಕ ಸೇನಾ ಸಿಬ್ಬಂದಿ, ರಕ್ಷಣಾ ಸಾಮಗ್ರಿಗಳು ಹಾಗೂ ತುರ್ತು ಸೇವೆಗಳ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಸ್ಥಳೀಯ ಆರ್ಥಿಕತೆಗೆ ಉತ್ತೇಜನ:

ಯೋಜನೆಯಿಂದ ಈಗಾಗಲೇ ಸಾವಿರಕ್ಕೂ ಹೆಚ್ಚು ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆತಿದೆ. ಸುರಂಗ ಕಾರ್ಯಾರಂಭವಾದ ಬಳಿಕ ಸೋನಾಮಾರ್ಗ್, ಡ್ರಾಸ್, ಕಾರ್ಗಿಲ್ ಮತ್ತು ಲೇಹ್ ಪ್ರದೇಶಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಹಾಗೂ ಸಾರಿಗೆ ಕ್ಷೇತ್ರಗಳಿಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆ ಇದೆ.

ದೇಶದ ಅತ್ಯಂತ ಪ್ರಮುಖ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾಗಿ ಪರಿಗಣಿಸಲ್ಪಟ್ಟಿರುವ ಝೋಜಿಲಾ ಸುರಂಗ, ಕಾಶ್ಮೀರ ಮತ್ತು ಲಡಾಖ್ ನಡುವಿನ ಸಂಪರ್ಕ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಬರೆಯಲಿದ್ದು, ರಾಷ್ಟ್ರೀಯ ಭದ್ರತೆ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ.

ನಡೆಯಿರಿ, ಮಾಲಿನ್ಯ ತಡೆಯಿರಿ: ಜೂನ್ ಪೂರ್ತಿ ಜಿಬಿಎ ವಿಶೇಷ ಅಭಿಯಾನ!

ಬೆಂಗಳೂರು: ವಾಹನ ದಟ್ಟಣೆ ಮತ್ತು ವಾಯು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಹೊಸ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದೆ.

ಜೂನ್ ತಿಂಗಳ ಪೂರ್ತಿ ನಡೆಯಲಿರುವ ಈ ಅಭಿಯಾನಕ್ಕೆ #1KmChallenge ಎಂದು ಹೆಸರಿಡಲಾಗಿದ್ದು, ಒಂದು ಕಿಲೋಮೀಟರ್ ವ್ಯಾಪ್ತಿಯೊಳಗಿನ ಸಂಚಾರಕ್ಕೆ ವಾಹನ ಬಳಸದೇ ನಡೆದುಕೊಂಡು ಹೋಗುವಂತೆ ನಾಗರಿಕರಿಗೆ ಕರೆ ನೀಡಲಾಗಿದೆ.

ಜಿಬಿಎಯ ಕ್ಲೈಮೇಟ್ ಆಕ್ಷನ್ ಸೆಲ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಅಭಿಯಾನದ ಉದ್ದೇಶ, ನಗರದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಿ ಮಾಲಿನ್ಯ ನಿಯಂತ್ರಿಸುವುದಾಗಿದೆ. ಸಣ್ಣ ದೂರಗಳಿಗೂ ಬೈಕ್ ಹಾಗೂ ಕಾರುಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭಿಯಾನದ ಭಾಗವಾಗಿ, ಒಂದು ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸುವಂತೆ ಜನರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ ಎಂಬುದು ಜಿಬಿಎ ಅಭಿಪ್ರಾಯವಾಗಿದೆ.

ಅಭಿಯಾನದ ಪ್ರಮುಖ ಉದ್ದೇಶಗಳು:

  • ವಾಹನ ಬಳಕೆ ಕಡಿಮೆ ಮಾಡಿ ವಾಯು ಮಾಲಿನ್ಯ ನಿಯಂತ್ರಿಸುವುದು.
  • ದೈನಂದಿನ ನಡಿಗೆಯನ್ನು ಉತ್ತೇಜಿಸಿ ಸಾರ್ವಜನಿಕರ ಆರೋಗ್ಯ ಸುಧಾರಿಸುವುದು.
  • ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆಯನ್ನು ತಗ್ಗಿಸುವುದು.

ಅಭಿಯಾನ ಘೋಷಣೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ. ಪರಿಸರ ಕಾಳಜಿಯ ದೃಷ್ಟಿಯಿಂದ ಈ ಯೋಜನೆಯನ್ನು ಹಲವರು ಮೆಚ್ಚಿಕೊಂಡಿದ್ದರೆ, ಮತ್ತೊಂದೆಡೆ ನಗರದ ಪಾದಚಾರಿ ವ್ಯವಸ್ಥೆಯ ದುಸ್ಥಿತಿಯನ್ನು ನೆನಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಅನೇಕ ಪ್ರದೇಶಗಳಲ್ಲಿ ಫುಟ್‌ಪಾತ್‌ಗಳು ಹಾಳಾಗಿದ್ದು, ಕಸದ ರಾಶಿಗಳು, ತೆರೆದ ಚರಂಡಿಗಳು ಹಾಗೂ ಗುಂಡಿ ಬಿದ್ದ ರಸ್ತೆಗಳ ನಡುವೆ ಸುರಕ್ಷಿತವಾಗಿ ನಡೆಯುವುದು ಕಷ್ಟಕರವಾಗಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಪಾದಚಾರಿಗಳಿಗೆ ಸುರಕ್ಷಿತ, ವಿಶಾಲ ಹಾಗೂ ನಿರಂತರ ಫುಟ್‌ಪಾತ್‌ಗಳನ್ನು ನಿರ್ಮಿಸಿದ ಬಳಿಕ ಇಂತಹ ಅಭಿಯಾನಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಜಿಬಿಎ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಒಟ್ಟಾರೆ, ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಕಂಡುಬರುತ್ತಿರುವ #1KmChallenge ಅಭಿಯಾನ, ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಡೀಪ್‌ಫೇಕ್ ಬಿಕಿನಿ ವಿಡಿಯೋ ವೈರಲ್: ಕಿಡಿಗೇಡಿಗಳ ವಿರುದ್ಧ ನಟಿ ರುಕ್ಮಿಣಿ ವಸಂತ್ ದೂರು!

0

ನಟಿ ರುಕ್ಮಿಣಿ ವಸಂತ್‌ ಅವರ ಹೆಸರಿನಲ್ಲಿ ಎಐ ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ನಕಲಿ ಬಿಕಿನಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್‌ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಐಟಿ ಕಾಯ್ದೆ ಹಾಗೂ ಬಿಎನ್‌ಎಸ್‌ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ತನಿಖೆ ಆರಂಭಿಸಲಾಗಿದೆ.

ದೂರಿನಲ್ಲಿ ಅವರು, ತಮ್ಮ ಫೋಟೋಗಳನ್ನು ಅನಧಿಕೃತವಾಗಿ ಬಳಸಿ ಎಐ ತಂತ್ರಜ್ಞಾನದಿಂದ ಬೇರೆಯವರ ದೇಹಕ್ಕೆ ಮುಖವನ್ನು ಅಳವಡಿಸಿ ನಕಲಿ ವಿಡಿಯೋ ಮತ್ತು ಚಿತ್ರಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದು ತಮ್ಮ ಗೌರವಕ್ಕೆ ಧಕ್ಕೆ ತರುವ ಹಾಗೂ ಮಾನಹಾನಿ ಮಾಡುವ ಕೃತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು 29 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ದೂರು ನೀಡಲಾಗಿದ್ದು, ಅದರಲ್ಲಿ 9 ಇನ್‌ಸ್ಟಾಗ್ರಾಂ ಖಾತೆಗಳು, 14 ಎಕ್ಸ್ (X) ಖಾತೆಗಳು ಹಾಗೂ 6 ಫೇಸ್‌ಬುಕ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಸೈಬರ್ ಕ್ರೈಮ್ ಪೊಲೀಸರು ಸಂಬಂಧಿತ ಖಾತೆಗಳ ಮೂಲವನ್ನು ಪತ್ತೆಹಚ್ಚಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕುರ್ಚಿ ಮೇಲೆ ಬಟ್ಟೆ ರಾಶಿ ಹಾಕುತ್ತಿದ್ದೀರಾ? ವಾಸ್ತು ಎಚ್ಚರಿಕೆ ಏನು ಹೇಳುತ್ತದೆ ನೋಡಿ

ದಿನನಿತ್ಯದ ಜೀವನದಲ್ಲಿ ಸಾಮಾನ್ಯವಾಗಿ ಕಂಡುಬರುವ ಒಂದು ಸಣ್ಣ ಅಭ್ಯಾಸವೇ ಮನೆಯ ವಾಸ್ತು ಮತ್ತು ಧನಾತ್ಮಕ ಶಕ್ತಿಯ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ವಾಸ್ತು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆಫೀಸ್ ಅಥವಾ ಹೊರಗಿನಿಂದ ಸುಸ್ತಾಗಿ ಮನೆಗೆ ಬಂದ ನಂತರ, ಬಟ್ಟೆಗಳನ್ನು ಬದಲಾಯಿಸಿ ಅವುಗಳನ್ನು ಸರಿಯಾದ ಜಾಗದಲ್ಲಿ ಇಡುವ ಬದಲು ಕುರ್ಚಿ ಅಥವಾ ಸೋಫಾದ ಮೇಲೆ ಎಸೆದುಬಿಡುವ ಅಭ್ಯಾಸ ಹಲವರಲ್ಲಿ ಕಂಡುಬರುತ್ತದೆ. ಆರಂಭದಲ್ಲಿ ಇದು ಸಾಮಾನ್ಯ ಸೋಮಾರಿತನವಾಗಿ ಕಂಡರೂ, ಕ್ರಮೇಣ ಇದು ಮನೆಯ ಶಾಂತಿ ಮತ್ತು ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ.

ವಾಸ್ತು ಶಾಸ್ತ್ರದ ಪ್ರಕಾರ, ಕುರ್ಚಿ ಮತ್ತು ಸೋಫಾಗಳನ್ನು ಸದಾ ಸ್ವಚ್ಛ ಮತ್ತು ಖಾಲಿಯಾಗಿ ಇಟ್ಟುಕೊಳ್ಳಬೇಕು. ಅವುಗಳ ಮೇಲೆ ಬಟ್ಟೆಗಳನ್ನು ರಾಶಿಯಾಗಿ ಇಡುವುದರಿಂದ ಆ ಸ್ಥಳದ ಶಕ್ತಿಯ ಹರಿವು ಅಡ್ಡಿಯಾಗುತ್ತದೆ ಎಂದು ವಾಸ್ತು ತಜ್ಞರು ಅಭಿಪ್ರಾಯಪಡುತ್ತಾರೆ. ಇದರ ಪರಿಣಾಮವಾಗಿ ಮನೆಯಲ್ಲಿ ಅಶಾಂತಿ, ಕಿರಿಕಿರಿ, ವಿನಾಕಾರಣ ಜಗಳಗಳು ಮತ್ತು ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದೇ ರೀತಿಯಾಗಿ, ಈ ಅಸ್ತವ್ಯಸ್ತತೆ ಮನೆಯ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ. ಧನಾತ್ಮಕ ಶಕ್ತಿ ಕಡಿಮೆಯಾಗುವುದರಿಂದ ಅನಿರೀಕ್ಷಿತ ಖರ್ಚುಗಳು ಹೆಚ್ಚಾಗಿ ಹಣ ಉಳಿಸಿಕೊಳ್ಳುವುದು ಕಷ್ಟವಾಗಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಮನೋವಿಜ್ಞಾನಿಗಳ ಪ್ರಕಾರವೂ, ಸುತ್ತಮುತ್ತಲಿನ ಅಸ್ತವ್ಯಸ್ತ ವಾತಾವರಣವು ಮನಸ್ಸಿನಲ್ಲಿ ಗೊಂದಲವನ್ನು ಉಂಟುಮಾಡಿ, ಗಮನ ಕೇಂದ್ರೀಕರಿಸಲು ಅಡಚಣೆ ತರಬಹುದು ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ತಜ್ಞರು ಕೆಲವು ಸರಳ ಸಲಹೆಗಳನ್ನು ನೀಡುತ್ತಿದ್ದಾರೆ. ಕುಳಿತುಕೊಳ್ಳುವ ಜಾಗವನ್ನು ಸದಾ ಖಾಲಿ ಮತ್ತು ಸ್ವಚ್ಛವಾಗಿಡುವುದು, ಬಟ್ಟೆಗಳನ್ನು ತಕ್ಷಣ ಮಡಚಿ ಸರಿಯಾದ ಸ್ಥಳದಲ್ಲಿ ಇಡುವುದು ಹಾಗೂ ಕೊಳಕು ಬಟ್ಟೆಗಳಿಗೆ ಪ್ರತ್ಯೇಕ ಲಾಂಡ್ರಿ ಬಾಸ್ಕೆಟ್ ಬಳಸುವುದು ಸೇರಿದಂತೆ ದಿನಕ್ಕೆ ಕೆಲವೇ ನಿಮಿಷಗಳನ್ನು ಮನೆ ಸ್ವಚ್ಛತೆಗೆ ಮೀಸಲಿಡುವುದರಿಂದ ಪರಿಸರದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ಸಲಹೆ ನೀಡಲಾಗಿದೆ.

ಹಿಂದಿ ಚಿತ್ರರಂಗದ ಸ್ವರಸಾಮ್ರಾಜ್ಞಿ ಸುಮನ್ ಕಲ್ಯಾಣ್‌ಪುರ್ ಇನ್ನಿಲ್ಲ

ಮುಂಬೈ: ಭಾರತೀಯ ಸಂಗೀತ ಲೋಕದ ಹಿರಿಯ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೇ 31ರಂದು ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಭಾರತೀಯ ಚಿತ್ರಸಂಗೀತದ ಸುವರ್ಣಯುಗದ ಮತ್ತೊಂದು ಅಧ್ಯಾಯ ಅಂತ್ಯಗೊಂಡಂತಾಗಿದೆ.

ಸುಮಾರು ಆರು ದಶಕಗಳ ಕಾಲ ಗಾಯನ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸುಮನ್ ಕಲ್ಯಾಣ್‌ಪುರ್, ಹಿಂದಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳಿಗೆ ಧ್ವನಿಯಾಗಿದ್ದರು. ಬಾಂಗ್ಲಾದೇಶದ ಢಾಕಾದಲ್ಲಿ ಜನಿಸಿದ್ದ ಅವರು ನಂತರ ಮುಂಬೈನಲ್ಲಿ ನೆಲೆಸಿ, ಭಾರತೀಯ ಚಿತ್ರರಂಗದ ಪ್ರಮುಖ ಹಿನ್ನೆಲೆ ಗಾಯಕಿಯಾಗಿ ಹೊರಹೊಮ್ಮಿದ್ದರು.

‘ಆಜ್‌ಕಲ್ ತೇರೆ ಮೇರೆ ಪ್ಯಾರ್ ಕೆ ಚರ್ಚೇ’, ‘ನಾ ನಾ ಕರ್ತೆ ಪ್ಯಾರ್ ತುಮ್ಹೀ ಸೆ’, ‘ತುಮ್ನೆ ಪುಕಾರಾ ಔರ್ ಹಮ್ ಚಲೆ ಆಯೇ’ ಮೊದಲಾದ ಹಾಡುಗಳ ಮೂಲಕ ಅವರು ಕೋಟ್ಯಂತರ ಸಂಗೀತ ಪ್ರೇಮಿಗಳ ಮನ ಗೆದ್ದಿದ್ದರು. ಶಾಸ್ತ್ರೀಯ ಸಂಗೀತದ ಗಾಢ ಜ್ಞಾನ ಮತ್ತು ಮಧುರ ಕಂಠ ಅವರ ಯಶಸ್ಸಿನ ಮೂಲವಾಗಿತ್ತು.

ಕನ್ನಡ ಚಿತ್ರರಂಗದಲ್ಲೂ ಅವರು ‘ಒಡನಾಡಿ ಬೇಕೆಂದು’, ‘ಹನಿ ಹನಿ ಹೀರಿ ತಣಿ ಹರೆಯ’ ಹಾಗೂ ‘ತಲ್ಲಣ ನೂರು ಬಗೆ’ ಹಾಡುಗಳ ಮೂಲಕ ವಿಶೇಷ ಗುರುತು ಮೂಡಿಸಿದ್ದರು. ಕನ್ನಡಿಗರ ಹೃದಯದಲ್ಲಿ ತಮ್ಮದೇ ಸ್ಥಾನ ನಿರ್ಮಿಸಿಕೊಂಡಿದ್ದ ಸುಮನ್, ಬಹುಭಾಷಾ ಗಾಯಕಿಯಾಗಿ ಅಪಾರ ಜನಪ್ರಿಯತೆ ಗಳಿಸಿದ್ದರು.

ಕೊನೆಯ ಕ್ಷಣಗಳವರೆಗೂ ಸಂಗೀತದೊಂದಿಗೆ ಬದುಕಿದ್ದ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ದೇಶದಾದ್ಯಂತ ಕಲಾವಿದರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಹಾಡುಗಳು ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯಾಗಲಿವೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಮಳೆಯ ನಿರೀಕ್ಷೆ! ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ:

ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ 40–50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್:

ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30–40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, 30–40 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ.

ಇತರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ:

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗ 40–50 ಕಿ.ಮೀ ಇರಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ:

ಮಳೆ ಮತ್ತು ಬಿರುಗಾಳಿ ಸಮಯದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಹಳೆಯ ಕಟ್ಟಡಗಳು ಮತ್ತು ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ರೈತರು ತಮ್ಮ ಬೆಳೆ ಹಾಗೂ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.

ಗುಲಾಬಿ ಹೂವಿನ ಸ್ವಾಗತಕ್ಕೆ ಖುಷಿಯಾದ ಮಕ್ಕಳು

ವಿಜಯಸಾಕ್ಷಿ ಸುದ್ದಿ, ಗದಗ: ಎರಡು ತಿಂಗಳ ಬೇಸಿಗೆ ರಜೆಯ ನಂತರ ಸೋಮವಾರ ಜಿಲ್ಲೆಯಾದ್ಯಂತ ಶಾಲೆಗಳು ಪುನಃ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಆಗಮನದಿಂದ ಶಾಲಾ ಆವರಣಗಳು ಮತ್ತೆ ಕಲರವದಿಂದ ಜೀವಂತಗೊಂಡವು. ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ ಶಾಲಾ ಪ್ರಾರಂಭೋತ್ಸವವನ್ನು ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಂಭ್ರಮ, ಸಡಗರ ಮತ್ತು ವಿಶೇಷ ಸ್ವಾಗತದೊಂದಿಗೆ ಆಚರಿಸಲಾಯಿತು.
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಸಿಬ್ಬಂದಿ ಗುಲಾಬಿ ಹೂವು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಕೆಲವೆಡೆ ಸಿಹಿ ಹಂಚುವ ಮೂಲಕ ಮಕ್ಕಳಿಗೆ ಸ್ವಾಗತ ಕೋರಲಾಯಿತು. ಮೊದಲ ದಿನವೇ ಶಾಲಾ ವಾತಾವರಣ ಹಬ್ಬದ ಸಂಭ್ರಮದಂತೆ ಕಂಗೊಳಿಸಿತು.
ಹೊಸ ಪುಸ್ತಕ, ಹೊಸ ತರಗತಿ… ಮಕ್ಕಳ ಮುಖದಲ್ಲಿ ಸಂಭ್ರಮ
ಎಪ್ರಿಲ್ ಹಾಗೂ ಮೇ ತಿಂಗಳ ಬೇಸಿಗೆ ರಜೆಯನ್ನು ಖುಷಿಯಿಂದ ಕಳೆದ ವಿದ್ಯಾರ್ಥಿಗಳು ಹೊಸ ಉತ್ಸಾಹದೊಂದಿಗೆ ಶಾಲೆಯತ್ತ ಮುಖ ಮಾಡಿದರು. ಹೊಸ ಪುಸ್ತಕಗಳು, ಹೊಸ ತರಗತಿ ಕೊಠಡಿಗಳು ಹಾಗೂ ಸ್ನೇಹಿತರೊಂದಿಗೆ ಮತ್ತೆ ಕಲಿಕೆ ಆರಂಭಿಸುವ ಸಂತಸ ಮಕ್ಕಳ ಮುಖದಲ್ಲಿ ಎದ್ದು ಕಾಣುತ್ತಿತ್ತು.
ವಿಶೇಷವಾಗಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ತರಗತಿಗೆ ಕಾಲಿಟ್ಟ ಖುಷಿ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಕಂಡುಬಂತು.
ನಗರದ ಗಂಗಾಪುರ ಪೇಟೆ, ಶಹಾಪುರ ಪೇಟೆ, ಗಂಗಿಮಡಿ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಶಾಲಾ ಆವರಣಗಳನ್ನು ಸ್ವಚ್ಛಗೊಳಿಸಿ ವರ್ಣರಂಜಿತವಾಗಿ ಅಲಂಕರಿಸಲಾಗಿತ್ತು.
ಪುಟ್ಟ ಮಕ್ಕಳಿಗೆ ಶಿಕ್ಷಕರ ಆತ್ಮೀಯ ಸ್ಪರ್ಶ
ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಲು ಶಾಲೆಗಳು ವಿಶೇಷ ಗಮನ ಹರಿಸಿದ್ದವು. ಶಾಲೆಗೆ ಮೊದಲ ದಿನ ಬಂದ ಪುಟ್ಟ ಮಕ್ಕಳ ಆತಂಕ ದೂರವಾಗುವಂತೆ ಶಿಕ್ಷಕರು ಪ್ರೀತಿಯಿಂದ ಮಾತನಾಡಿ ಆತ್ಮವಿಶ್ವಾಸ ತುಂಬಿದರು.
ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ವಿವಿಧ ಸ್ವಾಗತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಿಕ್ಷಕರ ಆತ್ಮೀಯತೆ ಹಾಗೂ ಮಕ್ಕಳ ಉತ್ಸಾಹದಿಂದ ಈ ಬಾರಿಯ ಶಾಲಾ ಪ್ರಾರಂಭೋತ್ಸವ ಗದಗ ಜಿಲ್ಲೆಯಲ್ಲಿ ವಿಶೇಷ ಮೆರುಗು ಪಡೆದಿದ್ದು, ಹೊಸ ಶೈಕ್ಷಣಿಕ ವರ್ಷಕ್ಕೆ ಭರವಸೆಯ ಆರಂಭ ದೊರೆತಂತಾಗಿದೆ.
ಮಾವಿನ ಶಿಕರಣಿ ಸವಿದು ಖುಷಿಯಾದ ಮಕ್ಕಳು
ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ. ೨ರಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದೊಂದಿಗೆ ವಿಶೇಷವಾಗಿ ಮಾವಿನ ಹಣ್ಣಿನ ಶಿಕರಣಿ ತಯಾರಿಸಿ ಬಡಿಸಲಾಯಿತು. ಈ ವಿಶೇಷ ಉಪಹಾರ ಮಕ್ಕಳ ಮನ ಗೆದ್ದಿತು.

ಎತ್ತಿನಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳು!

ವಿಜಯಸಾಕ್ಷಿ ಸುದ್ದಿ ಗದಗ: ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ, ಉತ್ಸಾಹ ಮತ್ತು ಆತ್ಮೀಯತೆ ಮೂಡಿಸುವ ಉದ್ದೇಶದಿಂದ ಗದಗ ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭೋತ್ಸವವನ್ನು ಅದ್ದೂರಿಯಾಗಿ ಹಾಗೂ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಭವ್ಯ ಮೆರವಣಿಗೆ ನಡೆಯಿತು. ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಶಾಲೆಗೆ ಕರೆತರಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಹರ್ಷೋದ್ಗಾರಗಳೊಂದಿಗೆ ಮಕ್ಕಳನ್ನು ಸ್ವಾಗತಿಸಿದರು.
ಶಾಲೆಯ ಮುಖ್ಯ ದ್ವಾರದಲ್ಲಿ ಅತಿಥಿಗಳು ಹಾಗೂ ಶಿಕ್ಷಕರು ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ವಿಶೇಷವಾಗಿ ನಿರ್ಮಿಸಲಾಗಿದ್ದ ಸೆಲ್ಫಿ ಕಾರ್ನರ್ ವಿದ್ಯಾರ್ಥಿಗಳು ಮತ್ತು ಪಾಲಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, “ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು. ಮಕ್ಕಳಿಗೆ ಸುರಕ್ಷಿತ, ಸಂತೋಷದಾಯಕ ಹಾಗೂ ಪ್ರೇರಣಾದಾಯಕ ವಾತಾವರಣದಲ್ಲಿ ಶಿಕ್ಷಣ ದೊರೆಯಬೇಕು” ಎಂದು ಹೇಳಿದರು.
“ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ ಮತ್ತು ಆತ್ಮೀಯತೆ ಮೂಡಬೇಕು. ಅದಕ್ಕಾಗಿ ಶಿಕ್ಷಕರು, ಪಾಲಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಕಲಿಕಾ ಸೌಲಭ್ಯಗಳು, ಗುಣಮಟ್ಟದ ಶಿಕ್ಷಕರು, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆಗಳು ಲಭ್ಯವಿವೆ. ಗ್ರಾಮೀಣ ವಿದ್ಯಾರ್ಥಿಗಳೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಹೊಂದುವಂತೆ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.
ಶಿಕ್ಷಣದ ಮಹತ್ವವನ್ನು ವಿಶಿಷ್ಟವಾಗಿ ವಿವರಿಸಿದ ಅವರು, “ಶಿಕ್ಷಣ ಕೊತ್ತಂಬರಿ ಸೊಪ್ಪಿನಂತಿದ್ದು, ಅದು ಎಲ್ಲೆ ಇದ್ದರೂ ತನ್ನ ಸುವಾಸನೆ ಹರಡುತ್ತದೆ. ಮಕ್ಕಳು ತಾವು ಓದುತ್ತಿರುವ ಶಾಲೆಯನ್ನು ಹೆಮ್ಮೆಯಿಂದ ಕಾಣಬೇಕು” ಎಂದು ಕರೆ ನೀಡಿದರು.
ನಿವೃತ್ತ ಉಪನಿರ್ದೇಶಕ ಎ.ಎನ್. ನಾಗರಳ್ಳಿ ಮಾತನಾಡಿ, “ಶಿಕ್ಷಕರು ಬದ್ಧತೆಯಿಂದ ಪಾಠ ಮಾಡಿದರೆ ಮಕ್ಕಳು ಖಂಡಿತ ಕಲಿಯುತ್ತಾರೆ. ಮಕ್ಕಳಲ್ಲಿ ಜ್ಞಾನ ಮತ್ತು ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದರು.
ಅತಿಥಿಯಾಗಿ ಭಾಗವಹಿಸಿದ್ದ ಎಚ್.ಕೆ. ಬೂಮ್ಮಕ್ಕನವರ ಮಾತನಾಡಿ, “ಖಾಸಗಿ ಶಾಲೆಗಳ ಹೆಚ್ಚಳದ ನಡುವೆಯೂ ಸರ್ಕಾರಿ ಶಾಲೆಗಳ ಅಸ್ತಿತ್ವ ಉಳಿಯಬೇಕು. ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸಮಾಜದ ಎಲ್ಲ ವರ್ಗದವರು ಕೈಜೋಡಿಸಬೇಕು” ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಕೆ.ಡಿ. ಬಡಿಗೇರ ಮಾತನಾಡಿ, “ಒಂದು ಮಗುವೂ ಸರ್ಕಾರಿ ಶಾಲೆಯಿಂದ ಖಾಸಗಿ ಶಾಲೆಗೆ ಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೆ.ಎ. ಭಾವಿಕಟ್ಟಿ, ರವಿ ಪ್ರಕಾಶ, ಬಿ.ಎಫ್. ಪೂಜಾರ, ವಿ.ಎಂ. ಹಿರೇಮಠ, ರವಿರಾಜ ಪವಾರ, ಶ್ರೀಮತಿ ಗೀತಾ ಕುಲಕರ್ಣಿ, ಎಂ.ಡಿ. ಹೊಸಮನಿ, ವಿ.ಎಫ್. ಕಲಕುಂಬಿ, ಶಂಕರ ಹಡಗಲಿ, ಶ್ರೀಮತಿ ಶೈಲಜಾ ಮಟ್ಟಿ, ಡಾ. ಬಸವರಾಜ ವಿ.ಎಚ್. ಬಳ್ಳಾರಿ, ಎಚ್.ವೈ. ಹೊನ್ನಿನಾಯ್ಕರ, ಸೋಮರೆಡ್ಡಿ ರಾಮೇನಳ್ಳಿ, ಶಿವಾನಂದ ಕರಿಗಾರ, ಫಕಿರೆಡ್ಡಿ ಮಾಡಳ್ಳಿ, ತಾಜುದ್ದೀನ್ ಓಲೇಕಾರ, ಶ್ರೀಮತಿ ರೇಖಾ ತಿಮ್ಮನಗೌಡ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಎಪಿಸಿಒ ಶಿವಕುಮಾರ ಕುರಿ ಸ್ವಾಗತಿಸಿದರು. ವಿ.ವಿ. ನಡುವಿನಮನಿ ವಂದಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಡಿ.ಎಚ್. ಪರಂಗಿ ಕಾರ್ಯಕ್ರಮ ನಿರೂಪಿಸಿದರು.
 “ಶಾಲೆಯ ಮೊದಲ ದಿನ ಮಕ್ಕಳ ಮುಖದಲ್ಲಿ ಮೂಡುವ ಸಂತಸವೇ ವರ್ಷಪೂರ್ತಿ ಕಲಿಕೆಯ ಉತ್ಸಾಹಕ್ಕೆ ಅಡಿಪಾಯವಾಗುತ್ತದೆ.”
ಆರ್.ಎಸ್. ಬುರಡಿ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ
ಹೊಸ ಪುಸ್ತಕ-ಸಮವಸ್ತ್ರ ಪಡೆದು ಖುಷಿಯಾದ ಮಕ್ಕಳು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಹೊಸ ಪುಸ್ತಕ ಹಾಗೂ ಸಮವಸ್ತ್ರ ಪಡೆದ ಮಕ್ಕಳ ಮುಖದಲ್ಲಿ ಸಂತಸ ಮನೆ ಮಾಡಿತ್ತು.
ಅಸುಂಡಿ ಶಾಲಾ ಮಕ್ಕಳಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು. ಮಲ್ಲಸಮುದ್ರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ತಂಡದಿಂದ ನೃತ್ಯ ಪ್ರದರ್ಶನ ನಡೆಯಿತು.
error: Content is protected !!