ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಗೃಹ ಸಚಿವ ಸ್ಥಾನದ ರೇಸ್ನಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,
ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಪಕ್ಷ ಅಥವಾ ಸರ್ಕಾರ ಯಾವ ಜವಾಬ್ದಾರಿಯನ್ನು ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಕರ್ನಾಟಕದ ಜನರಿಗೆ ಸೇವೆ ಸಲ್ಲಿಸುವುದೇ ಮುಖ್ಯ. ಅದಕ್ಕಾಗಿ ಯಾವುದೇ ಸ್ಥಾನಮಾನ ದೊಡ್ಡದು ಅಥವಾ ಚಿಕ್ಕದು ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಈಗಾಗಲೇ ಚರ್ಚೆ ನಡೆಸಿದ್ದು, ಇಂದು ಸಂಜೆಯೊಳಗೆ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಗೃಹ ಸಚಿವ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಮಾತನಾಡಿದ ಅವರು, ಯಾರು ಗೃಹ ಸಚಿವರಾದರೂ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಅದನ್ನು ಮೀರಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಮರ್ಪಕ ಅವಕಾಶ ನೀಡಿಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಅವರಿಗೆ ಇಷ್ಟ ಬಂದಂತೆ ಮಾತನಾಡಲಿ. ಮೊದಲು ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ತಮ್ಮ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಿ. ಆರ್ಎಸ್ಎಸ್ನಲ್ಲಿ ಮಹಿಳೆಯರನ್ನು ಸಹಸಂಚಾಲಕರನ್ನಾಗಿ ನೇಮಿಸಲಿ. ನಂತರ ಈ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ತಿರುಗೇಟು ನೀಡಿದರು.

