ಬೆಂಗಳೂರು: ಸಚಿವ ಸಂಪುಟ ಪುನರ್ರಚನೆಯ ಬಳಿಕ ಸಾರಿಗೆ ಇಲಾಖೆಯ ಜವಾಬ್ದಾರಿ ಪಡೆದಿರುವ ಸಚಿವ ಬೈರತಿ ಸುರೇಶ್, ಖಾತೆ ಹಂಚಿಕೆ ಕುರಿತು ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಂತೋಷದಿಂದ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೈರತಿ ಸುರೇಶ್, ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ನನಗೆ ಸಚಿವ ಸ್ಥಾನ ದೊರೆತಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ದೇವರು ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಈ ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದು ಇಲಾಖೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದೇನೆ. ಅದೇ ರೀತಿಯಲ್ಲಿ ಸಾರಿಗೆ ಇಲಾಖೆಯಲ್ಲಿಯೂ ಜನಪರ ಹಾಗೂ ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದರು.
ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಮ್ಮ ರಾಜ್ಯದವರೇ ಆಗಿದ್ದಾರೆ. ಈ ಇಲಾಖೆಯನ್ನು ರಾಮಲಿಂಗಾರೆಡ್ಡಿ ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ. ಅವರ ಕೆಲಸವನ್ನು ಮುಂದುವರಿಸಿಕೊಂಡು ಇಲಾಖೆಯ ಸಮಸ್ಯೆಗಳನ್ನು ಪರಿಹರಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.
ಖಾತೆ ಹಂಚಿಕೆ ಕುರಿತು ತಮ್ಮ ನಿಲುವನ್ನು ಪುನರುಚ್ಚರಿಸಿದ ಅವರು, ಯಾವುದೇ ಇಲಾಖೆ ನೀಡಿದರೂ ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ. ನಮ್ಮ ನಾಯಕರು ಹಾಗೂ ಹೈಕಮಾಂಡ್ ಸಾಕಷ್ಟು ಚಿಂತನೆ ನಡೆಸಿಯೇ ಈ ಮಹತ್ವದ ಖಾತೆಯನ್ನು ನೀಡಿದ್ದಾರೆ. ಆದ್ದರಿಂದ ನನಗೆ ಯಾವುದೇ ಬೇಸರ ಇಲ್ಲ ಎಂದು ಸ್ಪಷ್ಟಪಡಿಸಿದರು.

