ತುಮಕೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಅಸಮಾಧಾನದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ್, ಸಚಿವ ಸ್ಥಾನ ನೀಡಬೇಕು ಎಂದು ಜನರು ಹೇಳುತ್ತಾರೆ. ಆದರೆ ಯಾರಿಂದ ಹೇಳಿಸಬೇಕಿತ್ತೋ ಅವರು ಹೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
“ರಾಜಕೀಯದಲ್ಲಿ ನಮ್ಮಂತಹ ಸಾಮಾನ್ಯ ರೈತನ ಮಕ್ಕಳು ಮೇಲೆ ಬರುವುದು ಕಷ್ಟ. ನಮಗೆ ಗಾಡ್ಫಾದರ್ ಇರಲಿಲ್ಲ. ಹೀಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಅನಿಸುತ್ತಿದೆ. ಜಗಳ ಮಾಡಿ ಸ್ಥಾನ ಪಡೆಯಲು ಅದೇನು ನಮ್ಮ ಅಪ್ಪನ ಆಸ್ತಿಯಲ್ಲ. ನಮಗೆ ಯೋಗ್ಯತೆ ಇಲ್ಲ ಎಂಬ ಅರ್ಥವೂ ಆಗುತ್ತದೆ” ಎಂದು ಅಸಮಾಧಾನ ಹೊರಹಾಕಿದರು.
ರಾಜಕೀಯದ ಹೊಸ ಪಾಠ ಈಗ ಅರ್ಥವಾಗುತ್ತಿದೆ. ಪ್ರಾಮಾಣಿಕತೆಗೆ ಎಷ್ಟು ಬೆಲೆ ಇದೆ ಎಂಬುದರ ಬಗ್ಗೆ ಈಗ ಪ್ರಶ್ನೆ ಮೂಡಿದೆ. ರಾಜಕೀಯದಲ್ಲಿ ಡಬಲ್ ಗೇಮ್ ಹಾಗೂ ಮೋಸ ನಡೆಯುತ್ತಿದೆ ಎಂದು ಆರೋಪಿಸಿದರು.
“ನನಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ ಈಗ ಅವಕಾಶ ವಂಚಿತನಾಗಿದ್ದೇನೆ. ನಮ್ಮ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡಬಹುದಿತ್ತು. ಬಡವನ ಕೋಪ ದವಡೆಗೆ ಮೂಲ. ಇನ್ನೂ ಒಂದೂವರೆ ವರ್ಷ ಸಮಯ ಇದೆ. ಕಾರ್ಯಕರ್ತರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ” ಎಂದು ಹೇಳಿದರು.
ಇದೇ ವೇಳೆ ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ ಅವರು, “ಕೆಎಸ್ಆರ್ಟಿಸಿ ನಷ್ಟದಲ್ಲಿದೆ. ಯಾವುದೇ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾಳೆ ತೆರಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆ, ಇದೀಗ ಎಸ್.ಆರ್. ಶ್ರೀನಿವಾಸ್ ಅವರ ರಾಜೀನಾಮೆ ಘೋಷಣೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

