ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕುಡಿಯುವ ನೀರಿನ ಪೂರೈಕೆ, ಮಳೆ ಹಾನಿ ಪರಿಹಾರ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೀಜ ಮತ್ತು ರಸಗೊಬ್ಬರಗಳ ಲಭ್ಯತೆ ಕುರಿತು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಳೆಯಿಂದ ಉಂಟಾಗುವ ಹಾನಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ, ನಿರ್ಲಕ್ಷ್ಯ ಅಥವಾ ನಿಷ್ಕಾಳಜಿಯನ್ನು ಜಿಲ್ಲಾಡಳಿತ ಸಹಿಸುವುದಿಲ್ಲ” ಎಂದು ಎಚ್ಚರಿಸಿದರು.
ಸಭೆಯಲ್ಲಿ ಮನೆ ಹಾನಿ, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಪೂರ್ಣ ಅಥವಾ ಸುಳ್ಳು ಮಾಹಿತಿ ನೀಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.
ತಾಲ್ಲೂಕುವಾರು ಮಳೆಯಿಂದ ಹಾನಿಗೀಡಾದ ಮನೆಗಳು, ಬೆಳೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಮಾಹಿತಿ ಪಡೆದು ಅರ್ಹ ಫಲಾನುಭವಿಗಳಿಗೆ ತ್ವರಿತ ಪರಿಹಾರ ವಿತರಣೆ ಮಾಡಬೇಕು ಎಂದು ಸೂಚಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯತ್ಯಯವಾಗದಂತೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ಪ್ರವಾಹ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ಕುಟುಂಬಗಳನ್ನು ಮುಂಚಿತವಾಗಿ ಗುರುತಿಸಿ ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ನಿರ್ದೇಶನ ನೀಡಿದರು.
ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ 23 ಕೆರೆಗಳ ನಿರ್ವಹಣೆ, ನೀರು ಸಂಗ್ರಹ ಸಾಮರ್ಥ್ಯ ವೃದ್ಧಿ ಹಾಗೂ ಅಗತ್ಯ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರಕ್ಕೆ ಅಗತ್ಯ ಅನುದಾನ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಗಳಿಗೆ ಅಗ್ನಿಶಾಮಕ ಇಲಾಖೆಗೆ ಅಗತ್ಯ ಬೋಟ್ಗಳ ಖರೀದಿಗಾಗಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಮೇ 18ರಂದು ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಗದಗ ಮತ್ತು ಲಕ್ಷ್ಮೇಶ್ವರ ತಾಲ್ಲೂಕುಗಳಲ್ಲಿ ತಲಾ ಒಬ್ಬರಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ವಿತರಿಸಲಾಗಿದೆ.
ಮಳೆಯಿಂದ ಮೃತಪಟ್ಟ 31 ಸಣ್ಣ ಸಾಕು ಪ್ರಾಣಿಗಳ ಮಾಲೀಕರಿಗೆ ₹1.52 ಲಕ್ಷ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 14 ಮನೆಗಳು ಭಾಗಶಃ ಹಾನಿಗೀಡಾಗಿದ್ದು ₹91 ಸಾವಿರ ಪರಿಹಾರ ವಿತರಿಸಲಾಗಿದೆ. 96 ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ₹4.80 ಲಕ್ಷ ಪರಿಹಾರ ನೀಡಲಾಗಿದೆ.
ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 907 ವಿದ್ಯುತ್ ಕಂಬಗಳು ಹಾಗೂ 10 ಶಾಲಾ ಕೊಠಡಿಗಳು ಹಾನಿಗೀಡಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಮಾನದಂಡಗಳ ಪ್ರಕಾರ ₹69.35 ಲಕ್ಷ ನಷ್ಟ ಅಂದಾಜಿಸಲಾಗಿದೆ.
ಜಿಲ್ಲೆಯ 92 ರೈತರಿಗೆ ಸೇರಿದ 34.58 ಎಕರೆ ತೋಟಗಾರಿಕೆ ಪ್ರದೇಶ ಹಾನಿಗೀಡಾಗಿದ್ದು, ₹6.70 ಲಕ್ಷ ನಷ್ಟ ಅಂದಾಜಿಸಲಾಗಿದೆ.
ಜಿಲ್ಲೆಯ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ನವಿಲುತೀರ್ಥ ಜಲಾಶಯದಲ್ಲಿ 5.905 ಟಿಎಂಸಿ, ಭದ್ರಾ ಜಲಾಶಯದಲ್ಲಿ 16.497 ಟಿಎಂಸಿ ಹಾಗೂ ಹಮ್ಮಿಗಿ ಬ್ಯಾರೇಜ್ನಲ್ಲಿ 1.978 ಟಿಎಂಸಿ ನೀರು ಸಂಗ್ರಹವಿದ್ದು, ಮುಂದಿನ 90 ದಿನಗಳವರೆಗೆ ಕುಡಿಯುವ ನೀರು ಪೂರೈಸಲು ಸಾಧ್ಯವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಡಿಪಿಐ ಆರ್.ಎಸ್. ಬುರಡಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣನವರ, ಪೌರಾಯುಕ್ತ ರಾಜಾರಾಮ್ ಪವಾರ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಮಳೆ ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.”
ಸಿ.ಎನ್. ಶ್ರೀಧರ, ಜಿಲ್ಲಾಧಿಕಾರಿ
ಗೈರಾದ ಅಧಿಕಾರಿಗೆ ಶೋಕಾಸ್ ನೋಟಿಸ್
ಸಭೆಗೆ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿಗಳು ಗೈರಾಗಿದ್ದಲ್ಲದೇ ಅಗತ್ಯ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸದಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದರು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ಸೂಚನೆ ನೀಡಿದರು.
ರೈತರಿಗೆ ಗೊಬ್ಬರಕ್ಕಾಗಿ ಬಲವಂತ ಬೇಡ!
ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಅಗತ್ಯ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಯೂರಿಯಾ ವಿತರಣೆಯ ವೇಳೆ ರೈತರಿಗೆ ಅನಗತ್ಯವಾಗಿ ಇತರೆ ಗೊಬ್ಬರ ಖರೀದಿಸಲು ಒತ್ತಾಯಿಸಿದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.