Home Blog

CET ಸೀಟು ಹಂಚಿಕೆ ಮಂಥನಕ್ಕೆ KEA ಸಜ್ಜು: ಮೇ 25ರಿಂದ ರಾಜ್ಯಾದ್ಯಂತ ಕಾರ್ಯಾಗಾರ

ಬೆಂಗಳೂರು: ಸಿಇಟಿ ಕೌನ್ಸೆಲಿಂಗ್ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಶೇಷ ಕಾರ್ಯಾಗಾರ ಆಯೋಜಿಸಿದೆ.

ರಾಜ್ಯದ 65 ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮೇ 25ರಿಂದ 30ರವರೆಗೆ “ಸೀಟು ಹಂಚಿಕೆ ಮಂಥನ” ಕಾರ್ಯಕ್ರಮ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಮೇ 28ರಂದು ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10ರಿಂದ 12 ಗಂಟೆವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆವರೆಗೆ ಎರಡು ಸೆಷನ್‌ಗಳಲ್ಲಿ ಕಾರ್ಯಾಗಾರ ನಡೆಯಲಿದೆ.

ಕೆಇಎಯಿಂದ ತರಬೇತಿ ಪಡೆದ ನುರಿತ ಸಂಪನ್ಮೂಲ ವ್ಯಕ್ತಿಗಳು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕೆಇಎ ವೆಬ್‌ಸೈಟ್‌ನಲ್ಲಿ ಮುಂಚಿತವಾಗಿ ಸ್ಲಾಟ್ ಬುಕ್ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೂಲಕ ಸಮಯ ಹಾಗೂ ಕಾರ್ಯಾಗಾರ ನಡೆಯುವ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೆಇಎ ತಿಳಿಸಿದೆ.

ಅನೇಕ ಬಾರಿ ಉತ್ತಮ ರ್ಯಾಂಕ್ ಬಂದಿದ್ದರೂ, ಆಪ್ಷನ್ ಎಂಟ್ರಿಯಲ್ಲಿನ ಸಣ್ಣಪುಟ್ಟ ತಪ್ಪುಗಳಿಂದ ವಿದ್ಯಾರ್ಥಿಗಳು ಇಷ್ಟದ ಕಾಲೇಜು ಕಳೆದುಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ.

ಸೈಬರ್ ಸೆಂಟರ್‌ಗಳ ಎಡವಟ್ಟುಗಳು ಹಾಗೂ ವಿದ್ಯಾರ್ಥಿ-ಪೋಷಕರ ಮಾಹಿತಿ ಕೊರತೆಯಿಂದ ಈ ಸಮಸ್ಯೆಗಳು ಉಂಟಾಗುತ್ತಿದ್ದು, ಅದನ್ನು ತಪ್ಪಿಸಲು ಕಳೆದ ವರ್ಷ “ಸೀಟು ಹಂಚಿಕೆ ಮಂಥನ” ಆರಂಭಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ಈ ಬಾರಿಯೂ ಇನ್ನಷ್ಟು ಅಚ್ಚುಕಟ್ಟಾಗಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಸೀಟು ಹಂಚಿಕೆ ಪ್ರಕ್ರಿಯೆ, ಆಪ್ಷನ್ ಎಂಟ್ರಿ, ಸೀಟ್ ಅಲಾಟ್ಮೆಂಟ್ ನಂತರ ಆಯ್ಕೆ ಮಾಡಬೇಕಾದ ಛಾಯ್ಸ್‌ಗಳು, ಉತ್ತಮ ಕಾಲೇಜಿನ ನಿರೀಕ್ಷೆಯಿದ್ದರೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶುಲ್ಕ ಪಾವತಿ ವಿಧಾನ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಇನ್ನು ನೀಟ್ ಪರೀಕ್ಷೆಗೆ ಸಿದ್ಧತೆ ಮಾಡುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವ ಅಗತ್ಯವಿಲ್ಲ. ಬೇಕಾದರೆ ಅವರ ಪರವಾಗಿ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆಯಬಹುದು ಎಂದು ಕೆಇಎ ಸಲಹೆ ನೀಡಿದೆ.

IPL 2026: ಪಂಜಾಬ್ ಗೆ ಇಂದು ಅಗ್ನಿ ಪರೀಕ್ಷೆ: ಲಕ್ನೋ ವಿರುದ್ಧ ಗೆದ್ದರೆ ಮಾತ್ರ ಪ್ಲೇಆಫ್ ಕನಸು ಜೀವಂತ

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ಸತತ ಸೋಲಿನಿಂದ ಒತ್ತಡಕ್ಕೆ ಸಿಲುಕಿರುವ ಶ್ರೇಯಸ್ ಅಯ್ಯರ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ 13 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಪಂಜಾಬ್ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪಂಜಾಬ್ 15 ಅಂಕಗಳೊಂದಿಗೆ 4ನೇ ಸ್ಥಾನಕ್ಕೇರಲಿದೆ.

ಆಗ ರಾಜಸ್ಥಾನ್ ರಾಯಲ್ಸ್ 5ನೇ ಸ್ಥಾನಕ್ಕೆ ಕುಸಿಯಲಿದೆ.ನಂತರ ರಾಜಸ್ಥಾನ್ ತಂಡದ ಕೊನೆಯ ಪಂದ್ಯದ ಫಲಿತಾಂಶದ ಮೇಲೆ ಪಂಜಾಬ್ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ರಾಜಸ್ಥಾನ್ ತನ್ನ ಅಂತಿಮ ಪಂದ್ಯದಲ್ಲಿ ಸೋತರೆ ಪಂಜಾಬ್ ನಾಕೌಟ್ ಹಂತಕ್ಕೇರಲಿದೆ.

ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಪಂಜಾಬ್

ಟೂರ್ನಿಯ ಆರಂಭದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡಿತ್ತು. ಮೊದಲ 7 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದು ಅಂಕ ಲಭಿಸಿತ್ತು.ಆದರೆ ನಂತರ ಪಂಜಾಬ್ ತಂಡದ ಗೆಲುವಿನ ನಾಗಾಲೋಟಕ್ಕೆ ರಾಜಸ್ಥಾನ್ ರಾಯಲ್ಸ್ ಬ್ರೇಕ್ ಹಾಕಿತ್ತು. ಅದಾದ ಬಳಿಕ ಆಡಿದ 6 ಪಂದ್ಯಗಳಲ್ಲೂ ಪಂಜಾಬ್ ಗೆಲುವು ಸಾಧಿಸಲು ವಿಫಲವಾಗಿದೆ.

ಪಿಚ್ ರಿಪೋರ್ಟ್ ಹೇಗಿದೆ?

ಏಕನಾ ಕ್ರಿಕೆಟ್ ಸ್ಟೇಡಿಯಂ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ನೆರವಾಗುವ ಪಿಚ್ ಆಗಿದೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡ 200ಕ್ಕೂ ಹೆಚ್ಚು ರನ್ ಗಳಿಸಿದರೆ ಉತ್ತಮ ಪೈಪೋಟಿ ನೀಡಲು ಸಾಧ್ಯವಾಗುತ್ತದೆ.

ಇಲ್ಲದಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲವಾಗುವ ಸಾಧ್ಯತೆ ಹೆಚ್ಚು. ವೇಗದ ಬೌಲರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಹೆಚ್ಚು ಪ್ರಭಾವ ಬೀರುವ ನಿರೀಕ್ಷೆಯಿದ್ದು, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆ ಇದೆ.

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ತಂಡ

ಅರ್ಶಿನ್ ಕುಲಕರ್ಣಿ, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ.

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ
ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಸಿಂಗ್, ಬ್ರಾಕ್, ಎಫ್ ಬ್ರಾಕ್, ಯುಜ್ವೇಂದ್ರ ಚಹಲ್.

ರಹಸ್ಯ ಮದುವೆ ಗಾಸಿಪ್‌ಗೆ ಕಂಗನಾ ರಣಾವತ್ ಖಡಕ್ ಉತ್ತರ: ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ಸ್ಪಷ್ಟನೆ

ಮಂಗಳಸೂತ್ರ ಮತ್ತು ಹಸಿರು ಬಳೆ ಧರಿಸಿ ಕಾಣಿಸಿಕೊಂಡ ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಸೀಕ್ರೆಟ್ ಮ್ಯಾರೇಜ್ ರೂಮರ್‌ಗಳಿಂದ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ “ಕಂಗನಾ ಯಾರಿಗೂ ತಿಳಿಯದಂತೆ ಮದುವೆಯಾಗಿದ್ದಾರೆ” ಎಂಬ ಚರ್ಚೆ ಜೋರಾಗಿದ್ದರೂ, ಈಗ ಅದಕ್ಕೆ ನಟಿಯೇ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ.

ಗುಲಾಬಿ ಬಣ್ಣದ ಡ್ರೆಸ್‌ನಲ್ಲಿ ಮಂಗಳಸೂತ್ರ ಧರಿಸಿ ಕಾರಿನತ್ತ ತೆರಳುತ್ತಿದ್ದ ಕಂಗನಾ ಅವರ ವಿಡಿಯೋ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು ಮದುವೆ ಗಾಸಿಪ್ ಹಬ್ಬಿಸಿದ್ದರು. ಆದರೆ ಕಂಗನಾ ಇದನ್ನೆಲ್ಲಾ ತಳ್ಳಿಹಾಕಿದ್ದು, ಅದು ಸಿನಿಮಾದ ಕ್ಯಾರೆಕ್ಟರ್ ಲುಕ್ ಮಾತ್ರ ಎಂದು ಹೇಳಿದ್ದಾರೆ.

“ಶೂಟಿಂಗ್ ವೇಳೆ ತೆಗೆದ ಫೋಟೋಗಳನ್ನು ನೋಡಿ ಜನರು ಊಹಾಪೋಹ ಹರಡಿಸುತ್ತಿದ್ದಾರೆ. ನಾನು ನಟಿ. ಪಾತ್ರಕ್ಕಾಗಿ ವಿಭಿನ್ನ ಲುಕ್‌ಗಳಲ್ಲಿ ಕಾಣಿಸಿಕೊಳ್ಳಬೇಕು. ಅದನ್ನೇ ಮದುವೆ ಎಂದು ಕಲ್ಪಿಸಿಕೊಳ್ಳುವುದು ವಿಚಿತ್ರ. ನಾನು ರಹಸ್ಯವಾಗಿ ಮದುವೆಯಾಗುವುದಿಲ್ಲ” ಎಂದು ಕಂಗನಾ ಹೇಳಿದ್ದಾರೆ.

ಇದೇ ವೇಳೆ ಬಿಸಿಲಿನ ನಡುವೆ ನಡೆಯುತ್ತಿರುವ ಔಟ್‌ಡೋರ್ ಶೂಟಿಂಗ್ ಬಗ್ಗೆ ಮಾತನಾಡಿದ ಅವರು, “ಎಸಿ ರೂಮ್‌ನಲ್ಲಿ ಕುಳಿತು ಹವಾಮಾನ ಬಗ್ಗೆ ಮಾತನಾಡುವುದು ಸುಲಭ. ಆದರೆ ನಾವು ಬಿಸಿಲಿನ ಮಧ್ಯೆ ಕೆಲಸ ಮಾಡುತ್ತಿದ್ದೇವೆ. ಜೀವನ ಸವಾಲಿನಿಂದಲೇ ಸುಂದರವಾಗುತ್ತದೆ” ಎಂದು ಹೇಳಿದ್ದಾರೆ.

‘ಎಮರ್ಜೆನ್ಸಿ’ ಚಿತ್ರದ ಬಳಿಕ ಕಂಗನಾ ಇದೀಗ ‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ನಟಿಸುತ್ತಿದ್ದು, ಮುಂಬೈ ಉಗ್ರ ದಾಳಿಯ ಹಿನ್ನೆಲೆಯ ಕಥೆಯನ್ನು ಹೊಂದಿರುವ ಈ ಚಿತ್ರ ಜೂನ್ 12ರಂದು ತೆರೆಗೆ ಬರಲಿದೆ.

‘ಆ ಸಮಯದಲ್ಲಿ ನಾನು ತುಂಬಾ ಕುಗ್ಗಿದ್ದೆ’: ನಟ ರಾಮ್ ಚರಣ್ ಭಾವುಕ

ರಾಮ್ ಚರಣ್ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದರೂ, ಅವರ ಸಿನಿ ಪಯಣ ಸುಲಭವಾಗಿರಲಿಲ್ಲ. ಆರಂಭದಲ್ಲಿ ‘ಮಗಧೀರ’ ಚಿತ್ರದಿಂದ ಭರ್ಜರಿ ಯಶಸ್ಸು ಕಂಡರೂ, ನಂತರದ ಕೆಲವು ಸಿನಿಮಾಗಳ ಸೋಲುಗಳಿಂದ ಟಾಲಿವುಡ್‌ನಲ್ಲಿ ಅವರ ಸ್ಥಾನವೇ ಪ್ರಶ್ನೆಗೆ ಒಳಗಾಗಿತ್ತು ಎಂಬ ಮಾತುಗಳೂ ಕೇಳಿಬಂದಿದ್ದವು.

ಈ ನಡುವೆ ‘ಆರ್‌ಆರ್‌ಆರ್’ ಚಿತ್ರದ ಚಿತ್ರೀಕರಣ ಆರಂಭವಾದ ವೇಳೆಯಲ್ಲೇ ಕೋವಿಡ್ ಲಾಕ್‌ಡೌನ್ ಘೋಷಣೆಯಾಗಿದ್ದು, ಇಡೀ ಚಿತ್ರರಂಗವೇ ಸ್ಥಗಿತಗೊಂಡಿತ್ತು. ಆ ಸಂದರ್ಭದಲ್ಲಿ ಮಾನಸಿಕವಾಗಿ ತೀವ್ರ ಒತ್ತಡ ಮತ್ತು ಅನಿಶ್ಚಿತತೆ ಎದುರಿಸಿದ್ದೆ ಎಂದು ರಾಮ್ ಚರಣ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಆ ಕಠಿಣ ದಿನಗಳಲ್ಲಿ ತಮಗೆ ಧೈರ್ಯ ನೀಡಿದ್ದು ನಿರ್ದೇಶಕ ಎಸ್ಎಸ್ ರಾಜಮೌಳಿ ಎಂದು ತಿಳಿಸಿದ್ದಾರೆ. “ಭವಿಷ್ಯದ ಬಗ್ಗೆ ಯೋಚಿಸಿ ಆತಂಕಪಡಬೇಡ, ನಿನ್ನನ್ನು ನೀನು ಸಿದ್ಧಪಡಿಸಿಕೋ” ಎಂದು ರಾಜಮೌಳಿ ನೀಡಿದ ಸಲಹೆ ತನ್ನಲ್ಲಿ ಹೊಸ ಶಕ್ತಿ ತುಂಬಿತು ಎಂದು ಚರಣ್ ಹೇಳಿದ್ದಾರೆ.

ಲಾಕ್‌ಡೌನ್ ಬಳಿಕ ‘ಆರ್‌ಆರ್‌ಆರ್’ ಸಿನಿಮಾ ಮತ್ತೆ ಚುರುಕುಗೊಂಡು ಭಾರೀ ಯಶಸ್ಸು ಕಂಡಿದ್ದು, ರಾಮ್ ಚರಣ್ ಅವರನ್ನು ಪ್ಯಾನ್ ಇಂಡಿಯಾ ಮಟ್ಟದ ಸ್ಟಾರ್ ನಟನನ್ನಾಗಿ ರೂಪಿಸಿದೆ.

ಇದೀಗ ಅವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಎ.ಆರ್. ರೆಹಮಾನ್ ಮ್ಯೂಸಿಕ್ ಮ್ಯಾಜಿಕ್! ಧೂಳೆಬ್ಬಿಸಿದ ‘ಪೆದ್ದಿ’ ಮೂರನೇ ಹಾಡಿನ ಪ್ರೋಮೋ

ಟಾಲಿವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಮತ್ತೊಮ್ಮೆ ಸಿನಿಪ್ರಿಯರ ಗಮನ ಸೆಳೆದಿದೆ. ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಈ ಚಿತ್ರದ ಮೂರನೇ ಹಾಡು ‘ಹೆಲ್ಲಲ್ಲಲ್ಲೋ’ ಪ್ರೋಮೋ ಬಿಡುಗಡೆ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ನಿರ್ದೇಶಕ ಬುಚ್ಚಿ ಬಾಬು ಸನಾ ಮತ್ತು ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಕಾಂಬಿನೇಷನ್‌ನ ಈ ಹಾಡು, ರಾ ಎನರ್ಜಿ ಮತ್ತು ಮ್ಯೂಸಿಕಲ್ ಮ್ಯಾಜಿಕ್‌ನ ಮಿಶ್ರಣವಾಗಿ ಮೂಡಿಬಂದಿದೆ. ಈಗಾಗಲೇ ಬಿಡುಗಡೆಯಾದ ಮೊದಲ ಎರಡು ಹಾಡುಗಳು ಸೂಪರ್ ಹಿಟ್ ಆಗಿದ್ದು, ಇದೀಗ ಮೂರನೇ ಹಾಡಿನ ಮೇಲೂ ಭಾರೀ ನಿರೀಕ್ಷೆ ಮೂಡಿದೆ.

ಪ್ರೋಮೋದಲ್ಲಿ ವೇದಿಕೆಯೊಂದರ ಮೇಲೆ ನೂರಾರು ಜನರ ನಡುವೆ ರಾಮ್ ಚರಣ್, ಜಾನ್ವಿ ಕಪೂರ್ ಮತ್ತು ಶ್ರುತಿ ಹಾಸನ್ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿರುವುದು ಕಂಡುಬಂದಿದೆ. ರಾಮ್ ಚರಣ್ ರಗಡ್ ಲುಕ್‌ನಲ್ಲಿ ಮಿಂಚಿದ್ದರೆ, ಶ್ರುತಿ ಹಾಸನ್ ಗ್ಲಾಮರಸ್ ಅವತಾರದಲ್ಲಿ ಗಮನ ಸೆಳೆದಿದ್ದಾರೆ. ಜಾನ್ವಿ ಕಪೂರ್ ಕೂಡ ಸ್ಟೈಲಿಷ್ ಡ್ಯಾನ್ಸ್ ಮೂಲಕ ಫ್ಯಾನ್ಸ್ ಮನಗೆದ್ದಿದ್ದಾರೆ.

ಕ್ರೀಡಾ ಹಿನ್ನೆಲೆಯ ಕಥಾಹಂದರ ಹೊಂದಿರುವ ‘ಪೆದ್ದಿ’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ. ಜೊತೆಗೆ ಜಗಪತಿ ಬಾಬು ಮತ್ತು ದಿವ್ಯೇಂದು ಶರ್ಮಾ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಬಿಡುಗಡೆಯಾಗಿರುವುದು ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ಮಾತ್ರ. ಪೂರ್ಣ ಹಾಡನ್ನು ಮೇ 23ರಂದು ಭೋಪಾಲ್‌ನಲ್ಲಿ ನಡೆಯಲಿರುವ ಅದ್ಧೂರಿ ಸಂಗೀತ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ವಿಶ್ವದಾದ್ಯಂತ ತೆರೆಕಾಣಲಿದ್ದು, ಜೂನ್ 3ರಿಂದಲೇ ಪ್ರೀಮಿಯರ್ ಶೋಗಳು ಆರಂಭವಾಗಲಿವೆ.

ಕೊಲೆಯಾ? ಆತ್ಮಹತ್ಯೆಯಾ? ನಟಿ ತ್ವಿಶಾ ಶರ್ಮಾ ಪ್ರಕರಣದಲ್ಲಿ ಎರಡನೇ ಮರಣೋತ್ತರ ಪರೀಕ್ಷೆ ಆರಂಭ

ನವದೆಹಲಿ: ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿರುವ ನಡುವೆ, ಪ್ರಮುಖ ಆರೋಪಿ ಹಾಗೂ ಪತಿ ಸಮರ್ಥ್ ಸಿಂಗ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ದೆಹಲಿ ಏಮ್ಸ್ ಮೂಲಕ ಎರಡನೇ ಮರಣೋತ್ತರ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪ್ರಕರಣ ಮತ್ತೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕಳೆದ 10 ದಿನಗಳಿಂದ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ ಸಮರ್ಥ್ ಸಿಂಗ್, ಮಧ್ಯಪ್ರದೇಶದ ಸ್ಥಳೀಯ ಕೋರ್ಟ್‌ಗೆ ಹಾಜರಾಗಿದ್ದಾರೆ. ಮುಂಗಡ ಜಾಮೀನು ಅರ್ಜಿಯನ್ನು ಈಗಾಗಲೇ ಹಿಂಪಡೆದಿದ್ದ ಅವರು, ಬಂಧನ ಮತ್ತು ಕಠಿಣ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಶರಣಾಗುವ ಮಾರ್ಗ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತ್ವಿಶಾ ಶರ್ಮಾ ಕುಟುಂಬಸ್ಥರು ಆರಂಭದಿಂದಲೇ ಇದು ಆತ್ಮಹತ್ಯೆಯಲ್ಲ, ಪೂರ್ವನಿಯೋಜಿತ ಕೊಲೆ ಎಂದು ಆರೋಪಿಸುತ್ತಿದ್ದರು. ಮೊದಲ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅನುಮಾನಾಸ್ಪದ ಅಂಶಗಳಿದ್ದು, ಸತ್ಯವನ್ನು ಮರೆಮಾಚುವ ಪ್ರಯತ್ನ ನಡೆದಿದೆ ಎಂದು ಅವರು ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆ ದೆಹಲಿ ಏಮ್ಸ್ ತಜ್ಞರಿಂದ ಎರಡನೇ ಮರಣೋತ್ತರ ಪರೀಕ್ಷೆ ನಡೆಸಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ ಸಮರ್ಥ್ ಸಿಂಗ್ ಶರಣಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಸಮರ್ಥ್ ಸಿಂಗ್ ಕೋರ್ಟ್ ಆವರಣಕ್ಕೆ ಕಾಲಿಟ್ಟ ತಕ್ಷಣವೇ ಪೊಲೀಸರು ಹಾಗೂ ತನಿಖಾಧಿಕಾರಿಗಳು ಚುರುಕುಗೊಂಡಿದ್ದು, ಆತನನ್ನು ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.

ಇದೀಗ ಎರಡನೇ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪೊಲೀಸ್ ವಿಚಾರಣೆಯ ಬಳಿಕ ತ್ವಿಶಾ ಶರ್ಮಾ ಅವರ ಸಾವಿನ ನಿಜವಾದ ರಹಸ್ಯ ಬಯಲಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಅಪಘಾತಕ್ಕೆ ಕಾರಣವಾದರೂ ಗಾಯಾಳುವಿನ ನೆರವಿಗೆ ಬಂದ ಚಾಲಕ : ಶಿಕ್ಷೆ ತಗ್ಗಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗದೆ ಗಾಯಾಳುವನ್ನು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕನೊಬ್ಬನಿಗೆ ವಿಧಿಸಲಾಗಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಒಂದು ದಿನಕ್ಕೆ ಕಡಿತಗೊಳಿಸಿ ಮಹತ್ವದ ಆದೇಶ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯ ನಿವಾಸಿ ರಿಯಾಜ್ ಅಹ್ಮದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಅಜಾಗರೂಕತೆಯಿಂದ ವಾಹನ ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಪರಿಷ್ಕರಿಸಿ, ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಮಾತ್ರ ಶಿಕ್ಷೆ ಅನುಭವಿಸುವಂತೆ ಪೀಠ ಸೂಚಿಸಿದೆ.

ಅಪಘಾತ ಸಂಭವಿಸಿದ ತಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗದೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿರುವುದು ಶಿಕ್ಷೆ ಕಡಿತಗೊಳಿಸಲು ಪ್ರಮುಖ ಕಾರಣವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ಶಿಕ್ಷೆಗೆ ಗುರಿಯಾಗಿರುವ ರಿಯಾಜ್ ನಂತರದ ದಿನಗಳಲ್ಲಿ ಮತ್ತೊಂದು ಅಪಘಾತಕ್ಕೊಳಗಾಗಿ ಬಲಗಾಲಿಗೆ ರಾಡ್ ಅಳವಡಿಸಿಕೊಂಡಿದ್ದು, ಸದ್ಯ ವೃತ್ತಿಪರ ಚಾಲನೆ ಮಾಡಲು ಸಾಧ್ಯವಾಗದೆ ಸಣ್ಣಪುಟ್ಟ ಕೆಲಸ ಮಾಡಿಕೊಂಡಿರುವುದೂ ದಾಖಲೆಗಳಿಂದ ತಿಳಿದುಬಂದಿದೆ ಎಂದು ಪೀಠ ಉಲ್ಲೇಖಿಸಿದೆ.

ನ್ಯಾಯಾಲಯದ ಸಲಹೆಯಂತೆ, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡಿದರೆ ಶಿಕ್ಷೆ ಕಡಿತಗೊಳಿಸಲು ಮೃತರ ಕುಟುಂಬದವರು ಸಹ ಒಪ್ಪಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಮೃತರ ಪತ್ನಿ ಮತ್ತು ಮಗನಿಗೆ ಒಟ್ಟು 1 ಲಕ್ಷ ರೂ. ಹೆಚ್ಚುವರಿ ಪರಿಹಾರ ಪಾವತಿಸುವಂತೆ ನ್ಯಾಯಪೀಠ ಆದೇಶಿಸಿದೆ. ಈ ಮೊತ್ತವನ್ನು ತಲಾ 50 ಸಾವಿರ ರೂ.ಗಳಂತೆ ಎರಡು ಕಂತುಗಳಲ್ಲಿ ಜೂನ್ 30ರೊಳಗೆ ಪಾವತಿಸಬೇಕು ಎಂದು ಸೂಚಿಸಲಾಗಿದೆ.

ಒಂದು ವೇಳೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಲು ವಿಫಲವಾದರೆ, ಈ ಹಿಂದೆ ವಿಧಿಸಲಾಗಿದ್ದ ಒಂದು ವರ್ಷದ ಜೈಲು ಶಿಕ್ಷೆ ತಾನಾಗಿಯೇ ಜಾರಿಯಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ:
2015ರ ಜುಲೈ 15ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬೀಚ್ ರಸ್ತೆ ಬಳಿ ರಿಯಾಜ್ ಅಹ್ಮದ್ ಚಲಾಯಿಸುತ್ತಿದ್ದ ಕಾರು ಆನಂದ್ ಶೆಟ್ಟಿ ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿತ್ತು.

ಅಪಘಾತದ ತಕ್ಷಣ ರಿಯಾಜ್ ಹಾಗೂ ಅವರ ಮಗ ಗಾಯಗೊಂಡಿದ್ದ ಆನಂದ್ ಶೆಟ್ಟಿ ಅವರನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆನಂದ್ ಶೆಟ್ಟಿ ಮರುದಿನ ಸಾವನ್ನಪ್ಪಿದ್ದರು.

ಈ ಪ್ರಕರಣದಲ್ಲಿ ಮಂಗಳೂರಿನ ಸೆಷನ್ಸ್ ನ್ಯಾಯಾಲಯ ರಿಯಾಜ್‌ಗೆ ಒಂದು ವರ್ಷದ ಸಾಧಾರಣ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಶಿರಸಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್‌ವಾರ್: 6 ಮಂದಿ ವಿರುದ್ಧ ದೂರು ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಎರಡು ಯುವಕರ ಗುಂಪುಗಳ ನಡುವೆ ನಡೆದ ಮಾರಾಮಾರಿ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಬೈಕ್ ಅಪಘಾತದ ಸಣ್ಣ ವಿಚಾರವಾಗಿ ಆರಂಭವಾದ ಗಲಾಟೆ, ಬಳಿಕ ನಡುರಸ್ತೆಯಲ್ಲೇ ಗ್ಯಾಂಗ್‌ವಾರ್ ರೂಪ ಪಡೆದುಕೊಂಡಿದೆ.

ಮೇ 21ರ ರಾತ್ರಿ ದೇವಿಕೆರೆ ಬಳಿ ಸಂಭವಿಸಿದ್ದ ದ್ವಿಚಕ್ರ ವಾಹನ ಅಪಘಾತದ ವೇಳೆ ಎರಡು ಕೋಮುಗಳ ಯುವಕರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ಘಟನೆ ಬಳಿಕ ಉಂಟಾದ ದ್ವೇಷ, ಸಿಂಪಿಗಲ್ಲಿಯಲ್ಲಿ ಮತ್ತೆ ಮುಖಾಮುಖಿಯಾದಾಗ ಸ್ಫೋಟಗೊಂಡಿದೆ. ಯುವಕರು ಸಾರ್ವಜನಿಕರ ಎದುರೇ ಪರಸ್ಪರ ಹಲ್ಲೆ ನಡೆಸಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಿಸಿದ್ದಾರೆ.

ಗಲಾಟೆಯ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಪೊಲೀಸರು ಅವುಗಳ ಆಧಾರದಲ್ಲಿ ತನಿಖೆ ಆರಂಭಿಸಿದ್ದಾರೆ. ಪ್ರಕರಣದಲ್ಲಿ ಅಯಾನ್ ಟಿನಮೇಕರ್, ಸರ್ಫರಾಜ್ ಟಿನಮೇಕರ್, ಆದಿಲ್ ಸಕ್ಕರಖಾನ್, ಅಭಯ್ ಹುದಾರ್, ಸರ್ವೇಶ ಹಿರೇಮಠ ಹಾಗೂ ಆಕಾಶ್ ಕುಂದನಗಾರ ವಿರುದ್ಧ ಶಿರಸಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಬಳಿಕ ನಗರದಲ್ಲಿ ಪೊಲೀಸ್ ನಿಗಾವನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಬಾಂಗ್ಲಾ ವಲಸಿಗರು ಬಂದಿದ್ದಾರೆ’ ಅಲರ್ಟ್: ಬೆಳಗಾವಿ ಬಸ್ ಸ್ಟ್ಯಾಂಡ್‌ನಲ್ಲಿ ಪೊಲೀಸರ ಮೆಗಾ ಆಪರೇಷನ್

0

ಬೆಳಗಾವಿ: ಅಕ್ರಮ ಬಾಂಗ್ಲಾದೇಶಿ ವಲಸಿಗರು ಬೆಳಗಾವಿಗೆ ಪ್ರವೇಶಿಸಿದ್ದಾರೆ ಎಂಬ ಗಂಭೀರ ಶಂಕೆ ಹಿನ್ನೆಲೆ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸರು, ಕೇಂದ್ರ ಬಸ್ ನಿಲ್ದಾಣದಲ್ಲಿ ಭಾರಿ ಕಾರ್ಯಾಚರಣೆ ನಡೆಸಿ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.

ಡಿಸಿಪಿ ನಾರಾಯಣ ಭರಮನಿ ನೇತೃತ್ವದ ತಂಡ, ಮಾಳಮಾರುತಿ ಠಾಣೆಯಲ್ಲಿ ವಶಕ್ಕೆ ಪಡೆದವರ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಈ ಕಾರ್ಯಾಚರಣೆಗೆ ಕಾರಣವಾಗಿದ್ದು ಶ್ರೀರಾಮಸೇನೆ ನೀಡಿದ ಮಾಹಿತಿ. “ಹುಬ್ಬಳ್ಳಿಯಿಂದ ಮೂರು ಬಸ್‌ಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಬಂದಿದ್ದಾರೆ” ಎಂಬ ಆರೋಪದ ಮೇರೆಗೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದರು.

ವಿಚಾರಣೆ ವೇಳೆ ವಶಕ್ಕೆ ಪಡೆದವರು ತಾವು ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಎಂದು ಹೇಳಿಕೊಂಡಿದ್ದಾರೆ. ಶಹಾಪುರ ಭಾಗದಲ್ಲಿ ಬಂಗಾರದ ಕೆಲಸ ಮಾಡುತ್ತಿರುವುದಾಗಿ ಹಾಗೂ ಮತದಾನಕ್ಕಾಗಿ ಊರಿಗೆ ತೆರಳಿ ಈಗ ಮರಳಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪೊಲೀಸರು ಆಧಾರ್ ಕಾರ್ಡ್‌, ವೋಟರ್ ಐಡಿ, ಮೊಬೈಲ್ ವಿವರಗಳು ಸೇರಿದಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ್ದು, ಯಾವುದೇ ತಾಂತ್ರಿಕ ವ್ಯತ್ಯಾಸ ಮೇಲ್ನೋಟಕ್ಕೆ ಪತ್ತೆಯಾಗಿಲ್ಲ. ಆದರೂ ಭದ್ರತಾ ದೃಷ್ಟಿಯಿಂದ ಎಲ್ಲರ ಬೆರಳಚ್ಚುಗಳನ್ನು ಪಡೆದು ಮತ್ತಷ್ಟು ತನಿಖೆ ಮುಂದುವರಿಸಲಾಗಿದೆ.

ಪ್ರಾಥಮಿಕ ಪರಿಶೀಲನೆಯಲ್ಲಿ ಅನುಮಾನಾಸ್ಪದ ಅಂಶಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ಬಳಿಕ ಎಲ್ಲ ಕಾರ್ಮಿಕರನ್ನು ಬಿಡುಗಡೆ ಮಾಡಲಾಗಿದೆ. ಆದರೆ ನಕಲಿ ದಾಖಲೆಗಳ ಬಳಕೆ ನಡೆದಿದೆಯೇ ಎಂಬ ಕುರಿತು ಪೊಲೀಸರು ಆಂತರಿಕ ತನಿಖೆ ಮುಂದುವರಿಸಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್ ಸರ್ಕಾರ ತೊಡಗಿದೆ: ಆರ್ ಅಶೋಕ್ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣದಲ್ಲೇ ತೊಡಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದಕ್ಕಾಗಿಯೇ ಹಿಜಾಬ್ ಮರು ಜಾರಿ ಮಾಡಲಾಗಿದೆ. ಆಳಂದ ಗಲಭೆ ಪ್ರಕರಣಗಳನ್ನು ಕೂಡ ವಾಪಸ್ ಪಡೆಯಲಾಗಿದೆ ಎಂದು ಆರೋಪಿಸಿದರು.

ಸರ್ಫ್ ಹಾಕಿ, ಡೆಟ್ಟಾಲ್ ಹಾಕಿ ತೊಳೆದರೂ ಈ ಸರ್ಕಾರದ ದುಷ್ಟ ಬುದ್ಧಿ ಹೋಗಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪೊಲೀಸರ ಮೇಲೆ ಹಲ್ಲೆ ನಡೆಸಿದವರು ಹಾಗೂ ಕೇಂದ್ರ ಸಚಿವರ ಕಾರು ಒಡೆದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರೋಪಿಸಿದ ಅಶೋಕ್, ಕೋಮುಗಲಭೆ ಪ್ರಚೋದಿಸಿದವರ ಮೇಲಿನ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ ಎಂದರು.

ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ಸರ್ಕಾರದ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.

ದೇಶದ ಭದ್ರತೆಗೆ ಅಪಾಯ ಉಂಟುಮಾಡುವ ಇಂತಹ ನಿರ್ಧಾರಗಳನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹಿಜಾಬ್ ಮರು ಜಾರಿಯನ್ನೂ ಮುಸ್ಲಿಂ ಓಲೈಕೆಯ ಭಾಗವೆಂದೇ ಆರೋಪಿಸಿದ ಅಶೋಕ್, ರೈತರು ಹಾಗೂ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲಿ ಎಂದು ಸರ್ಕಾರಕ್ಕೆ ಸವಾಲು ಹಾಕಿದರು.

ಕೋಮುಗಲಭೆಗೆ ಪ್ರಚೋದನೆ ನೀಡಿದವರ ಮೇಲಿನ ಪ್ರಕರಣಗಳನ್ನು ಕೈಬಿಟ್ಟು ಸರ್ಕಾರ ಬಹುಸಂಖ್ಯಾತ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಆರ್ ಅಶೋಕ್ ಆರೋಪಿಸಿದರು.

error: Content is protected !!