Home Blog

ಶ್ರಾವಣ ಮಾಸದಲ್ಲಿ ತಿಂಗಳಿಡೀ ಶರಣರ–ಸಂತರ ಚಿಂತನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶ್ರಾವಣ ಮಾಸದ ಸಂದರ್ಭದಲ್ಲಿ ಕಳೆದ ಎರಡು ದಶಕಗಳಿಂದ ಧಾರ್ಮಿಕ, ವೈಚಾರಿಕ ಹಾಗೂ ಸತ್ಸಂಗ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಅಕ್ಕನ ಬಳಗದ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಹಿತಿ ಲಲಿತಕ್ಕ ಕೆರಿಮನಿ ಹೇಳಿದರು.

ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಬುಧವಾರ ನಡೆದ ‘ಶ್ರಾವಣ ಸಂಜೆ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಕ್ಕನ ಬಳಗದ ಸಾಧಕಿ ದಿ. ಪ್ರೇಮಕ್ಕ ಬಿಂಕದಕಟ್ಟಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶರಣರು, ಸಾಹಿತಿಗಳು, ಸಾಮಾಜಿಕ ಚಿಂತಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ವಿಷಯಗಳ ಕುರಿತು ವಿಚಾರ ಮಂಡನೆಯಾಗುತ್ತಿದ್ದು, ‘ಶ್ರಾವಣ ಸಂಜೆ’ ಈ ಭಾಗದ ವಿಶಿಷ್ಟ ಕಾರ್ಯಕ್ರಮವಾಗಿ ರೂಪುಗೊಂಡಿದೆ ಎಂದರು.

ಈ ಬಾರಿ ‘ಶ್ರಾವಣ ಸಂಜೆ’ಯ ೨೦ನೇ ವರ್ಷದ ಸವಿನೆನಪಿಗಾಗಿ ಲಲಿತಕ್ಕ ಕೆರಿಮನಿ ಸಂಪಾದಕತ್ವದ ‘ಸಮಾನತೆ ಸಾರಿದ ವಚನಕಾರ್ತಿಯರು’ ಕೃತಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ನಿರ್ಮಲಾ ಅರಳಿ, ನಿವೃತ್ತ ಶಿಕ್ಷಕ ಪೂರ್ಣಾಜಿ ಖರಾಟೆ ಹಾಗೂ ಎಲ್.ಎಸ್. ಅರಳಹಳ್ಳಿ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯೂ ಹೊಸ ವಿಚಾರಗಳೊಂದಿಗೆ ಉಪನ್ಯಾಸ ಹಾಗೂ ವೈಚಾರಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಗುರುವಾರದಿಂದ ‘ಶ್ರಾವಣ ಸಂಜೆ’ ಆರಂಭ

ಗುರುವಾರ ಸಂಜೆ ೬ ಗಂಟೆಗೆ ಹೂವಿನ ಶಿಗ್ಲಿ ವೀರಕ್ತಮಠದ ಚನ್ನವೀರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಯೋಜನಾ ನಿರ್ದೇಶಕ ಪ್ರೊ. ಎನ್.ಎಂ. ತಳವಾರ ಉದ್ಘಾಟಿಸಲಿದ್ದು, ಎಸ್.ಪಿ. ಬಳಿಗಾರ ಅಧ್ಯಕ್ಷತೆ ವಹಿಸುವರು. ಚಂದ್ರಣ್ಣ ಮಹಾಜನಶೆಟ್ಟರ ಉಪನ್ಯಾಸ ನೀಡಲಿದ್ದಾರೆ. ಪ್ರಕಾಶ ಲಿಂಬಯ್ಯಸ್ವಾಮಿಮಠ, ಎಲ್.ಎಸ್. ಅರಳಹಳ್ಳಿ ಹಾಗೂ ನಿರ್ಮಲಾ ಅರಳಿ ಅತಿಥಿಗಳಾಗಿ ಭಾಗವಹಿಸುವರು.

ಒಂದು ತಿಂಗಳ ಕಾಲ ಪ್ರತಿದಿನ ಸಂಜೆ ೬ ಗಂಟೆಗೆ ‘ಶ್ರಾವಣ ಸಂಜೆ’ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಭೆಯಲ್ಲಿ ಕಾರ್ಯದರ್ಶಿ ರತ್ನಾ ಕರ್ಕಿ, ಶಕುಂತಲಾ ವಡಕಣ್ಣವರ, ನೀಲಕ್ಕ ಬೂದಿಹಾಳ, ಪಾರ್ವತಿ ಕಳ್ಳಿಮಠ, ಕುಸುಮಾ ಮಲ್ಲಾಡದ, ಕಾಂಚನಮಾಲಾ ಹಸರಡ್ಡಿ, ನಂದಿನಿ ಮಾಳವಾಡ, ಶೋಭಾ ಗಾಂಜಿ, ಮಹಾನಂದಾ ಕೊಣ್ಣೂರು, ನೀಲಾ ಕುಂಬಿ, ಪ್ರತಿಮಾ ಮಹಾಜನಶೆಟ್ಟರ, ಗಂಗಾಧರ ಅರಳಿ, ಎಂ.ಕೆ. ಕಳ್ಳಿಮಠ, ಜೆ.ಎಸ್. ರಾಮಶೆಟ್ರ, ಬಸವರಾಜ ಸಂಗಪ್ಪಶೆಟ್ಟರ, ಎನ್.ಆರ್. ಸಾತಪುತೆ, ವೆಂಕಟೇಶ ಮಾತಾಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಲಬುರಗಿಯಲ್ಲಿ ನಾಳೆಯಿಂದ 3 ದಿನ ನೀರಿನ ಸಮಸ್ಯೆ; ಯಾವೆಲ್ಲಾ ಬಡಾವಣೆಗಳಲ್ಲಿ ವ್ಯತ್ಯಯ? ಇಲ್ಲಿದೆ ಲಿಸ್ಟ್

0

ಕಲಬುರಗಿ: ಕಲಬುರಗಿ ನಗರದಲ್ಲಿ ನಾಳೆಯಿಂದ ಆಗಸ್ಟ್ 15ರವರೆಗೆ ಮೂರು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ನಗರಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯಲ್ಲಿ ನೀರಿನ ಹರಿವು ಸಂಪೂರ್ಣ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸರಡಗಿ ಪಂಪ್‌ಹೌಸ್‌ನಲ್ಲಿರುವ ಮೋಟಾರ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಸುವ ಕೋಟನೂರು (ಡಿ) ಹಾಗೂ ಶೋರಗುಂಬಜ್ ಜಲಶುದ್ಧೀಕರಣ ಕೇಂದ್ರಗಳಿಂದ ನೀರು ಸರಬರಾಜಾಗುವ ಬಡಾವಣೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‌ಎಂಪಿ-ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಂಡು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಹಾನಗರಪಾಲಿಕೆ, ಕೆಯುಡಬ್ಲ್ಯೂಎಸ್‌ಎಂಪಿ-ಕೆಯುಐಡಿಎಫ್‌ಸಿ ಹಾಗೂ ಎಲ್‌&ಟಿ ಸಂಸ್ಥೆಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಯಾವೆಲ್ಲ ಪ್ರದೇಶಗಳಲ್ಲಿ ನೀರಿನ ವ್ಯತ್ಯಯ?

ನಗರದ ಬಿದ್ದಾಪೂರ, ರಾಯರಗುಡ್ಡಿ, ವಿಶಾಲ ನಗರ, ಅಂಬಿಕಾ ನಗರ, ಪಿಂಪ್ಲಿ ಟೆಂಪಲ್, ಪಿ & ಟಿ ಕಾಲೋನಿ, ವಿದ್ಯಾನಗರ, ಯಶವಂತ ನಗರ, ಕರುಣೇಶ್ವರ ನಗರ, ಗಣೇಶ ನಗರ, ಭಾಗ್ಯವಂತಿ ನಗರ, ದೇವಾ ನಗರ, ತಿಲಕ್ ನಗರ, ಬನಶಂಕರಿ ನಗರ, ಹರಿ ನಗರ ಹಾಗೂ ಗಾಬರೆ ಲೇಔಟ್ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ.

ಇದರ ಜೊತೆಗೆ ಜೆಮಶೆಟ್ಟಿ ನಗರ, ಕೃಷ್ಣ ನಗರ, ತಾರಫೈಲ್, ಉದಯ ನಗರ, ಎನ್‌ಜಿಒ ಕಾಲೋನಿ, ಜೇವರ್ಗಿ ಕಾಲೋನಿ, ಮಾಕಾ ಲೇಔಟ್, ಸಂತೋಷ ಕಾಲೋನಿ, ಪಿಡಬ್ಲ್ಯೂಡಿ ಕಾಲೋನಿ, ಬ್ಯಾಂಕ್ ಕಾಲೋನಿ, ಬಾಲಾಜಿ ನಗರ, ರೆಹಮತ್ ನಗರ, ಸಂಪಿಗೆ ನಗರ ಹಾಗೂ ಬುದ್ಧ ನಗರ ಪ್ರದೇಶಗಳಲ್ಲೂ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರೇವಣಸಿದ್ದೇಶ್ವರ ಕಾಲೋನಿ, ಸಾಯಿ ನಗರ, ಓಜಾ ಲೇಔಟ್, ಸ್ವಾಮಿ ವಿವೇಕಾನಂದ ನಗರ, ಪ್ರಗತಿ ಕಾಲೋನಿ, ಸಿಐಬಿ ಕಾಲೋನಿ, ಶಕ್ತಿ ನಗರ, ಸ್ಟೇಷನ್ ಬಜಾರ್, ಐವಾನ್ ಶಾಹಿ, ಯತ್ತೀಮ್‌ಖಾನಾ, ಶಾಂತಿ ನಗರ, ವಿಠ್ಠಲ ನಗರ ಹಾಗೂ ಖುಬಾ ಪ್ಲಾಟ್ ಪ್ರದೇಶಗಳಿಗೂ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ.

ಅದೇ ರೀತಿ ಮಿಜಬಾ ನಗರ, ಅಜಮಿರ್ ಕಾಲೋನಿ, ಕರೀಂನಗರ, ಗಾಲಿಫ್ ಕಾಲೋನಿ, ಮಹಮ್ಮದ್ ಚೌಕ್, ಖಾದಿಲ್ ಚೌಕ್, ಶಿವನಗರ, ಸಿದ್ರಾಮೇಶ್ವರ ಕಾಲೋನಿ, ನಬಿ ಕಾಲೋನಿ, ಶೇಖ್ ರೋಜಾ ಹಾಗೂ ಕೈಲಾಸ ನಗರ ಪ್ರದೇಶಗಳಲ್ಲೂ ನೀರಿನ ವ್ಯತ್ಯಯ ಉಂಟಾಗಲಿದೆ.

ಇನ್ನು ಜಿ.ಆರ್. ನಗರ, ಕಸ್ತೂರಿ ನಗರ, ಆಶ್ರಯ ಕಾಲೋನಿ, ಪೂಜಾ ಕಾಲೋನಿ, ಜಾಗೃತಿ ಕಾಲೋನಿ, ಓಂ ನಗರ, ಜಂ ಜಂ ಕಾಲೋನಿ, ಜುಬೇರ್ ಕಾಲೋನಿ, ಆಜಾದಪುರ ಕಾಲೋನಿ, ನಾಯ್ಡು ಕಾಲೋನಿ ಹಾಗೂ ಮಿನಿ ಅಮ್ಮಲವಾಡಿ ಪ್ರದೇಶಗಳಲ್ಲಿಯೂ ನಾಳೆಯಿಂದ ಮೂರು ದಿನಗಳ ಕಾಲ ನೀರು ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.

ಭೀಮಾ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಪಂಪ್‌ಹೌಸ್‌ನ ಮೋಟಾರ್‌ಗಳನ್ನು ಸ್ಥಗಿತಗೊಳಿಸಿರುವುದೇ ನೀರು ಸರಬರಾಜಿನ ವ್ಯತ್ಯಯಕ್ಕೆ ಕಾರಣವಾಗಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ನೀರು ಪೂರೈಕೆ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಳೆಯಿಂದ ಮೂರು ದಿನಗಳ ಕಾಲ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಗ್ರಾಪಂ ಆಡಳಿತಾಧಿಕಾರಿ ಬದಲಾವಣೆಗೆ ಧರಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಲಕ್ಕುಂಡಿ ಗ್ರಾಮದ ಮೂಲಭೂತ ಸೌಲಭ್ಯಗಳ ನಿರ್ವಹಣೆಯಲ್ಲಿ ಆಡಳಿತಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಅವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ, ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ನಜೀರಅಹ್ಮದ್ ಕಿರಿಟಗೇರಿ, ಗ್ರಾಪಂ ಮಾಜಿ ಸದಸ್ಯ ಬಿ.ಬಿ. ಮಾಡಲಗೇರಿ ಹಾಗೂ ಶಿವಪ್ಪ ಸಜ್ಜನರ ನೇತೃತ್ವದಲ್ಲಿ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಪ್ರತಿಭಟನೆ ನಡೆಯಿತು.

ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ರಸ್ತೆಗಳ ಸ್ವಚ್ಛತೆ, ಸಾರ್ವಜನಿಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಹಲವು ಮೂಲಸೌಕರ್ಯಗಳ ಸಮಸ್ಯೆ ಇದೆ. ಪಂಚಾಯಿತಿ ಸಿಬ್ಬಂದಿಗೆ ವೇತನ ವಿಳಂಬವಾಗುತ್ತಿದ್ದು, ಸಿಬ್ಬಂದಿಯ ಕಾರ್ಯವೈಖರಿಯ ಮೇಲೂ ಸಮರ್ಪಕ ಹಿಡಿತವಿಲ್ಲ.

ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎನ್ನಲಾದ ವಾಲ್ಮನ್ ವಿರುದ್ಧ ಕ್ರಮ ಕೈಗೊಳ್ಳಲು ಆಡಳಿತಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು.

ಆಡಳಿತಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಏಳು ದಿನ ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಹೇಳಿದರು.

ಈ ನಡುವೆ ಕುಡಿಯುವ ನೀರು ಹಾಗೂ ಸ್ವಚ್ಛತೆ ಸಮಸ್ಯೆ ಕುರಿತು ಆಡಳಿತಾಧಿಕಾರಿ ಶರಣು ಗೋಗೇರಿ ಹಾಗೂ ಪಿಡಿಒ ಅಮೀರನಾಯಕ ಅವರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು. ಸಮಸ್ಯೆಗಳನ್ನು ಈಗಾಗಲೇ ಸಿಬ್ಬಂದಿಯೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ರತಿಭಟನೆ ಕೈಬಿಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಆದರೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಬಳಿಕ ವಿಬಿಜಿ ರಾಮ್‌ಜಿ ಯೋಜನೆಯ ಸಹಾಯಕ ನಿರ್ದೇಶಕ ಕುಮಾರ ಪೂಜಾರ ಸ್ಥಳಕ್ಕೆ ಆಗಮಿಸಿ, ಗ್ರಾಮಸ್ಥರ ಮನವಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿ ಬದಲಾವಣೆ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಪ್ರತಿಭಟನಾಕಾರರು, ಆಡಳಿತಾಧಿಕಾರಿ ಬದಲಾವಣೆಯ ಆದೇಶ ಹೊರಬರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿ ಧರಣಿ ಹಿಂಪಡೆದರು.

ಪ್ರತಿಭಟನೆಯಲ್ಲಿ ಅಶೋಕ ಮೇಟಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಅಶೋಕ ಗದಗಿನ, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಚಂದ್ರು ಚಬ್ಬರಭಾವಿ, ಪ್ರಶಾಂತ ಬಟ್ಟೂರ, ವೀರಣ್ಣ ಅರಹುಣಶಿ, ಮಲ್ಲಿಕಾರ್ಜುನ ರಾಯಚೂರು, ನಾಗರಾಜ ಜಾಡರ, ಮಹಮ್ಮದ್ ರಫೀಕ್ ಬೆಟಗೇರಿ, ರವಿ ಕವಲೂರು, ಕಲ್ಮೇಶ ಅಂಬಕ್ಕಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಉದ್ಯಮಶೀಲತೆಯತ್ತ ವಿದ್ಯಾರ್ಥಿಗಳು ಹೆಜ್ಜೆ ಇಡಲಿ: ಎನ್.ಎಸ್. ಕುಲಕರ್ಣಿ

0

ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜತೆಗೆ ಉದ್ಯಮಶೀಲತೆಯ ಜ್ಞಾನವನ್ನೂ ಪಡೆದುಕೊಂಡು ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತೆಯತ್ತ ಹೆಜ್ಜೆ ಇಡಬೇಕು ಎಂದು ಗದಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎನ್.ಎಸ್. ಕುಲಕರ್ಣಿ ಹೇಳಿದರು.

ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಆಯೋಜಿಸಿದ್ದ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯಮಶೀಲತಾ ತರಬೇತಿ ಮತ್ತು ಕಾರ್ಯಾಗಾರಗಳ ಮೂಲಕ ಯುವಜನರಿಗೆ ಸ್ವಯಂ ಉದ್ಯೋಗದ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಸದುಪಯೋಗ ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.

ಹುಲಕೋಟಿ ರೂರಲ್ ಎಂಜಿನಿಯರಿಂಗ್ ಕಾಲೇಜಿನ ಡಾ. ಶರಣಬಸವರಾಜ ಅಂಗಡಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿರಂತರ ಪ್ರಯತ್ನ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆ ಅಳವಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಸಿಡಾಕ್ ಧಾರವಾಡ ವಲಯದ ಜಂಟಿ ನಿರ್ದೇಶಕ ಚಂದ್ರಶೇಖರ ಅಂಗಡಿ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸಾರಿಕಾ ಪಾಟೀಲ ಮಾತನಾಡಿ, ಖಾಸಗಿ ವಲಯದಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ನಿರಂತರವಾಗಿ ಹೆಚ್ಚಿಸಿಕೊಳ್ಳಬೇಕು ಎಂದರು.

ಉದ್ಯಮಿದಾರೆ ಶಕುಂತಲಾ ಮುಳಗುಂದ ಅವರು ಉದ್ಯಮಶೀಲತಾ ತರಬೇತಿಯಿಂದ ಸ್ಫೂರ್ತಿ ಪಡೆದು ಉದ್ಯಮ ಆರಂಭಿಸಿ ಬೆಳೆಸಿಕೊಂಡ ತಮ್ಮ ಅನುಭವ ಹಂಚಿಕೊಂಡರು. ಆತ್ಮವಿಶ್ವಾಸ, ಸಾಮುದಾಯಿಕ ಸಹಕಾರ ಹಾಗೂ ವಿನೂತನ ಚಿಂತನೆಯಿಂದ ಯಶಸ್ಸು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿ ಪ್ರವೀಣ ದೇಶಪಾಂಡೆ ಹಾಗೂ ಎಸ್‌ಬಿಐ ಗದಗ ಶಾಖೆಯ ವ್ಯವಸ್ಥಾಪಕ ಹರೀಶ್ ಎಸ್. ಅವರು ಉದ್ಯಮ ಆರಂಭಿಸುವ ವಿಧಾನ, ಹಣಕಾಸು ಹಾಗೂ ಬ್ಯಾಂಕಿಂಗ್ ಸೌಲಭ್ಯ ಸೇರಿದಂತೆ ಹಲವು ಪ್ರಾಯೋಗಿಕ ವಿಷಯಗಳ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಅಪ್ಪಣ್ಣ ಹಂಜೆ, ಲಭ್ಯವಿರುವ ಸಂಪನ್ಮೂಲ ಹಾಗೂ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉದ್ಯಮಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉದ್ಯೋಗ ಮಾಹಿತಿ ಕೋಶದ ಸಂಯೋಜಕ ಡಾ. ಶ್ರೀಶವಿಠ್ಠಲ, ಸಿಡಾಕ್ ತರಬೇತುದಾರ ಮಂಜುನಾಥ ಮುಳಗುಂದ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಲಕ್ಷ್ಮಣ ಚನ್ನವೀರಪ್ಪ ಮುಳಗುಂದ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ. ಅಂತಿಮ ವರ್ಷದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದರು.

“ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜತೆಗೆ ಉದ್ಯಮಶೀಲತೆಯ ಜ್ಞಾನವನ್ನೂ ಪಡೆದುಕೊಂಡು ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತೆಯತ್ತ ಹೆಜ್ಜೆ ಇಡಬೇಕು. ಇಂತಹ ತರಬೇತಿಗಳ ಸದುಪಯೋಗ ಪಡೆದುಕೊಂಡು ತಮ್ಮ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು.”

— ಎನ್.ಎಸ್. ಕುಲಕರ್ಣಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಗದಗ

ನರಗುಂದ: ಬರದ ಸ್ಥಿತಿಗತಿ ಅವಲೋಕಿಸಿದ ರಾಯರಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸತತ ಮೂರನೇ ದಿನವೂ ಬರ ಪರಿಸ್ಥಿತಿ ಅವಲೋಕನ ಮುಂದುವರಿಸಿದ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಭಾನುವಾರ ನರಗುಂದ ತಾಲೂಕಿನ ಚಿಕ್ಕ ನರಗುಂದ ಸರಹದ್ದಿನ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.

ಹೆಸರು, ಈರುಳ್ಳಿ ಹಾಗೂ ಹತ್ತಿ ಬೆಳೆಗಳನ್ನು ಖುದ್ದಾಗಿ ವೀಕ್ಷಿಸಿದ ಸಚಿವರು, ಮಳೆಯ ಕೊರತೆಯಿಂದ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರೈತರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಥಳೀಯ ರೈತ ಮುಖಂಡರೊಂದಿಗೆ ಸಂವಾದ ನಡೆಸಿದ ಅವರು, ಬೆಳೆ ಹಾನಿಯ ಪ್ರಮಾಣ ಹಾಗೂ ರೈತರಿಗೆ ಅಗತ್ಯವಿರುವ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಬೆಳೆ ಹಾನಿಯ ವಾಸ್ತವಿಕ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದ್ದು, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಸಿ.ಸಿ. ಪಾಟೀಲ, ವಿವೇಕ ಯಾವಗಲ್, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಸಹಕಾರ ಅಗತ್ಯ: ಡಾ. ರೇಷ್ಮಾ

0

ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಸೇವೆ ನೀಡುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ಮೇಲಿನ ಯಾವುದೇ ರೀತಿಯ ಹಿಂಸಾಚಾರವನ್ನು ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮುಖ್ಯ ಅತಿಥಿಗಳಾದ ಡಾ. ರೇಷ್ಮಾ ಹಾಗೂ ಡಾ. ಸುನಿತಾ ಕೆ. ಕರೆ ನೀಡಿದರು.

ಗದಗ-ಬೆಟಗೇರಿಯ ಬಾಸೆಲ್ ಮಿಷನ್ ಸಿಎಸ್‌ಐ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜು, ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿ (IAP) ಗದಗ ಘಟಕ, ಐಎಂಎ ಲೇಡೀಸ್ ವಿಂಗ್ ಹಾಗೂ ಇನ್ನರ್‌ವೀಲ್ ಕ್ಲಬ್ ಗದಗ-ಬೆಟಗೇರಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ವೈದ್ಯರ ಮೇಲಿನ ಹಿಂಸಾಚಾರ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರೋಗ್ಯ ಸೇವೆಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ರೋಗಿಗಳು ಹಾಗೂ ಅವರ ಕುಟುಂಬಸ್ಥರು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಹಕಾರದಿಂದ ವರ್ತಿಸಬೇಕು. ಯಾವುದೇ ಕಾರಣಕ್ಕೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಅಜಯ ಎಸ್. ರಾಜು ಮಾತನಾಡಿ, ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಸ್ತನ್ಯಪಾನದ ಮಹತ್ವವನ್ನು ವಿವರಿಸಿದರು. ನವಜಾತ ಶಿಶುವಿಗೆ ತಾಯಿಯ ಹಾಲೇ ಅತ್ಯುತ್ತಮ ಪೌಷ್ಟಿಕ ಆಹಾರವಾಗಿದ್ದು, ಮಗುವಿನ ಜನನದ ನಂತರ ಮೊದಲ ಆರು ತಿಂಗಳು ತಾಯಿಯ ಹಾಲನ್ನೇ ನೀಡುವಂತೆ ತಾಯಂದಿರನ್ನು ಪ್ರೋತ್ಸಾಹಿಸಬೇಕು ಎಂದರು.

ಡಾ. ರೋಷ್ನಾ ಹಾಗೂ ಡಾ. ತೇಜಸ್ವಿನಿ ಎಚ್. ಅವರು ಸ್ತನ್ಯಪಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಯಿಯ ಹಾಲಿನಲ್ಲಿರುವ ಪೌಷ್ಟಿಕಾಂಶ, ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಅದರ ಪಾತ್ರ, ಸರಿಯಾದ ಸ್ತನ್ಯಪಾನ ವಿಧಾನ ಹಾಗೂ ತಾಯಂದಿರು ಎದುರಿಸುವ ಸಾಮಾನ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾದ ಡಾ. ರೇಷ್ಮಾ ಹಾಗೂ ಡಾ. ಸುನಿತಾ ಕೆ. ಅವರು ತಾಯಿ-ಮಗು ಆರೋಗ್ಯದ ಮಹತ್ವದ ಕುರಿತು ಮಾತನಾಡಿದರು.

ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ ಮಾತನಾಡಿ, ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ವೈದ್ಯರು ಮತ್ತು ಸಿಬ್ಬಂದಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಕಲ್ಪಿಸಬೇಕು. ಸಾರ್ವಜನಿಕರು, ರೋಗಿಗಳು ಹಾಗೂ ಅವರ ಕುಟುಂಬಸ್ಥರು ಸಹಕರಿಸುವ ಮೂಲಕ ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ವೈದ್ಯಕೀಯ ತಜ್ಞರಾದ ಡಾ. ಸಂಜೀವ್ ಜೋಶಿ, ಡಾ. ಸಾದಿಕಾ ನೂರಾನಿ, ಬಿಎಂ ಸಿಎಸ್‌ಐ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಪ್ರೊ. ಬ್ಯೂಲಾ ಪ್ರಿಯದರ್ಶಿನಿ ಉಪಸ್ಥಿತರಿದ್ದರು. ಇತರ ವೈದ್ಯರು, ನರ್ಸಿಂಗ್ ಸಿಬ್ಬಂದಿ, ವಿದ್ಯಾರ್ಥಿಗಳು, ಇನ್ನರ್‌ವೀಲ್ ಕ್ಲಬ್ ಸದಸ್ಯರು ಹಾಗೂ ಗಣ್ಯರು ಭಾಗವಹಿಸಿದ್ದರು.

ಶ್ರೀಮತಿ ಮರ್ಲಿನ್‌ಜೋ ಸೆಫಾ ಕಾರ್ಯಕ್ರಮ ನಿರೂಪಿಸಿದರು. ಡಾ. ಶಿಲ್ಪಾ ಧಡೂತಿ ವಂದನಾರ್ಪಣೆ ಸಲ್ಲಿಸಿದರು.

ಮಕ್ಕಳಿಗೆ ‘ಗಾಂಧಾರಿ ವಿದ್ಯೆ’ ಕಲಿಸಲು ಪಾಲಕರು ಮುಂದಾಗಬೇಕು: ಐ.ಎಸ್. ಪೂಜಾರ್

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳಲ್ಲಿ ವಿಶಿಷ್ಟ ಕೌಶಲ್ಯ ಹಾಗೂ ಏಕಾಗ್ರತೆ ಬೆಳೆಸುವ ‘ಗಾಂಧಾರಿ ವಿದ್ಯೆ’ಯನ್ನು ಕಲಿಸಲು ಪಾಲಕರು ಮುಂದಾಗಬೇಕು ಎಂದು ಐ.ಎಸ್. ಪೂಜಾರ್ ಕರೆ ನೀಡಿದರು.

ನಗರದ ಶ್ರೀ ವಾಸವಿ ಕನ್ನಡ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜ್ಞಾನವೃಕ್ಷ ಶಿಕ್ಷಣ ಹಾಗೂ ವಿವಿಧೋದ್ದೇಶಗಳ ಸಂಸ್ಥೆ (ರಿ), ಗದಗ ಇವರ ಆಶ್ರಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಗಾಂಧಾರಿ ವಿದ್ಯೆ’ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

6ರಿಂದ 16 ವರ್ಷದ ಮಕ್ಕಳಿಗೆ ಶ್ರೀ ವಾಸವಿ ಕನ್ನಡ ಪ್ರಾಥಮಿಕ ಶಾಲೆಯ ಆವರಣದಲ್ಲಿ ‘ಗಾಂಧಾರಿ ವಿದ್ಯೆ’ಯ ತರಬೇತಿ ನೀಡಲಾಗುತ್ತಿದೆ. ಮಕ್ಕಳು ಈ ವಿಶಿಷ್ಟ ಕಲೆಯನ್ನು ಕಲಿತು ತಮ್ಮಲ್ಲಿರುವ ಕೌಶಲ್ಯವನ್ನು ಬೆಳೆಸಿಕೊಳ್ಳಲು ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿವಿಧ ಕೌಶಲ್ಯಗಳನ್ನು ಪ್ರದರ್ಶಿಸುವ ‘ಗಾಂಧಾರಿ ವಿದ್ಯೆ’ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೇಮಗಿರೀಶ ಹಾವಿನಾಳ ಆಗಮಿಸಿದ್ದರು.

ಆನಂದಯ್ಯ ವಿರಕ್ತಮಠ ಮಾತನಾಡಿ, ಪೂಜ್ಯ ಪುಟ್ಟರಾಜ ಗವಾಯಿಗಳು ನಡೆದಾಡಿದ ಈ ನೆಲದಲ್ಲಿ ಮಕ್ಕಳು ವಿಭಿನ್ನ ಕಲೆಯನ್ನು ಕಲಿತು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಜಯಕುಮಾರ ಹಿರೇಮಠ, ವೈ.ಆರ್. ತಳವಾರ, ಶಿವಣ್ಣ ಬಳ್ಳಾರಿ, ಶಿವಾನಂದ ಮಾದಣ್ಣವರ, ಶ್ರೀ ವಾಸವಿ ಕನ್ನಡ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರಘುವೀರ ಫತ್ತೇಪೂರ, ಆಡಳಿತ ಮಂಡಳಿ ಸದಸ್ಯರಾದ ಶಂಕರ ಸಂಪಗಾವಿ, ವಿನಾಯಕ ಫತ್ತೇಪೂರ, ದೀಪಿಕಾ ಕಾಂಬಳೆ, ನವೀನ ಕುರ್ತಕೋಟಿ, ಕುಮಾರ ಹಿರೇಮಠ, ಜ್ಞಾನವೃಕ್ಷ ಸಂಸ್ಥೆಯ ಅಧ್ಯಕ್ಷೆ ರೇಣುಕಾ ಎಸ್. ಜಾಲಿಹಾಳ ಹಾಗೂ ತರಬೇತಿದಾರರಾದ ಸೌಮ್ಯ ಎಸ್. ಜಾಲಿಹಾಳ ಉಪಸ್ಥಿತರಿದ್ದರು.

ನಟರಂಗ ಸಂಸ್ಥೆಯ ಅಧ್ಯಕ್ಷ ಸೋಮಶೇಖರ ಚಿಕ್ಕಮಠ ನಿರೂಪಿಸಿದರು. ಶಾಲೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ರಾಷ್ಟ್ರಧ್ವಜದ ಚಿತ್ರ!

ಗಾಂಧಾರಿ ವಿದ್ಯೆಯ ಪ್ರದರ್ಶನದ ವೇಳೆ ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ರಾಷ್ಟ್ರಧ್ವಜದ ಚಿತ್ರ ಬಿಡಿಸಿ ತಮ್ಮ ವಿಶಿಷ್ಟ ಕೌಶಲ್ಯ ಪ್ರದರ್ಶಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.

ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ: ರಾಜಾರಾಮ ಎಸ್. ಪವಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಘೋಷಿತ ಹಾಗೂ ಅಘೋಷಿತ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ನಗರಸಭೆಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ರಾಜಾರಾಮ ಎಸ್. ಪವಾರ ಹೇಳಿದರು.

ನಗರಸಭೆಯಲ್ಲಿ ಸ್ಲಂ ಪ್ರದೇಶಗಳ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ಸ್ಲಂ ಸಮಿತಿ ಮುಖಂಡರೊಂದಿಗೆ ನಡೆದ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ನಗರದ ಸ್ಲಂ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಯುಜಿಡಿ, ಶೌಚಾಲಯ ಸೇರಿದಂತೆ ಹಲವು ಮೂಲಸೌಕರ್ಯಗಳ ಕೊರತೆಯಿದೆ. ಸ್ಲಂ ಸಮಿತಿ ಸಲ್ಲಿಸಿರುವ ಹಕ್ಕೊತ್ತಾಯಗಳನ್ನು ಹಂತ ಹಂತವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಸತಿರಹಿತರ ಬೇಡಿಕೆ ಕುರಿತು ಈಗಾಗಲೇ ನಗರಸಭೆಯಿಂದ 348 ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ. ಶೀಘ್ರ ಮನೆಗಳ ವಿತರಣೆಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಲಾಗುವುದು. ಸ್ಲಂ ಪ್ರದೇಶಗಳಲ್ಲಿ ಬಯಲು ಶೌಚಕ್ಕೆ ಕಡಿವಾಣ ಹಾಕಲು ಸ್ವಚ್ಛ ಭಾರತ ಯೋಜನೆಯಡಿ ಸಮೀಕ್ಷೆ ನಡೆಸಿ ಮನೆಗೊಂದು ಪ್ರತ್ಯೇಕ ಶೌಚಾಲಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ಪಡೆದು ನೋಂದಣಿ ಮಾಡಿಕೊಂಡಿರುವ ಕುಟುಂಬಗಳಿಗೆ ಫಾರ್ಮ್ ನಂ.3 ನೀಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.

ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ನಗರಸಭೆಗೆ ಸ್ಲಂ ಸೆಸ್ ಪಾವತಿಯಾಗುತ್ತಿದ್ದರೂ, ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಸಮರ್ಪಕ ಅನುದಾನ ಬಳಕೆಯಾಗುತ್ತಿಲ್ಲ. ವಸತಿರಹಿತರಿಗಾಗಿ ಕಳೆದ 14 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ನಗರಸಭೆ ನಡೆಸಿದ ಸಮೀಕ್ಷೆಯಲ್ಲಿ ಗುರುತಿಸಿರುವ 348 ವಸತಿರಹಿತ ಕುಟುಂಬಗಳಿಗೆ ಕೂಡಲೇ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ಪ್ರತಿ ವರ್ಷ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮನವಿ ಮಾಡಲಾಗುತ್ತಿದೆ. ಈ ಬಾರಿ ಬೇಡಿಕೆಗೆ ಆದ್ಯತೆ ನೀಡಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಲಕ್ಷ್ಮಣ ಎಂ. ಜೋಗದಂಡಕರ, ಪರಿಸರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆನಂದ ಬದಿ, ಕಂದಾಯ ಹಾಗೂ ಆಶ್ರಯ ಸಮಿತಿ ವಿಭಾಗದ ಸಿಬ್ಬಂದಿ, ಲೆಕ್ಕಾಧೀಕ್ಷಕರ ವಿಭಾಗದ ಅಧಿಕಾರಿಗಳು, ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಪುಷ್ಪಾ ಬಿಜಾಪೂರ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಹುಸೇನ ಮುಲ್ಲಾನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸ್ಲಂ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ನಗರಸಭೆ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು. 348 ವಸತಿರಹಿತ ಕುಟುಂಬಗಳಿಗೆ ಮನೆ ಒದಗಿಸುವ ಬಗ್ಗೆಯೂ ಆದ್ಯತೆಯಿಂದ ಕ್ರಮ ವಹಿಸಲಾಗುವುದು.”

— ರಾಜಾರಾಮ ಎಸ್. ಪವಾರ, ಪೌರಾಯುಕ್ತ, ಗದಗ-ಬೆಟಗೇರಿ ನಗರಸಭೆ

ಜಂತುಹುಳು ಮುಕ್ತ ಮಗು ಆರೋಗ್ಯವಂತ ಮಗು: ಡಾ. ಕೆ.ಎಸ್. ಮೀನಾಕ್ಷಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜಂತುಹುಳು ಸೋಂಕಿನಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ೧ರಿಂದ ೧೯ ವರ್ಷದೊಳಗಿನ ಎಲ್ಲ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ಸೇವಿಸುವ ಮೂಲಕ ಸೋಂಕಿನಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಕೆ.ಎಸ್. ಮೀನಾಕ್ಷಿ ಹೇಳಿದರು.

ಬೆಟಗೇರಿಯ ಸೇಂಟ್ ಜಾನ್ಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ಕಚೇರಿ, ಗದಗ ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸೇಂಟ್ ಜಾನ್ಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಜಂತುಹುಳುಗಳು ಮಕ್ಕಳ ದೇಹದಲ್ಲಿನ ಆಹಾರ ಹಾಗೂ ರಕ್ತದ ಪೌಷ್ಟಿಕಾಂಶವನ್ನು ಹೀರಿಕೊಳ್ಳುವುದರಿಂದ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸೋಂಕಿನ ಲಕ್ಷಣಗಳನ್ನು ಅರಿತು, ನಿಗದಿತ ಅವಧಿಯಲ್ಲಿ ಜಂತುಹುಳು ನಿವಾರಣಾ ಮಾತ್ರೆ ಸೇವಿಸುವುದು ಅಗತ್ಯ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೀತ್ ಖೋನಾ ಮಾತನಾಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಶುದ್ಧ ನೀರು ಸೇವಿಸುವುದು ಹಾಗೂ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಜಂತುಹುಳು ಸೋಂಕಿನಿಂದ ದೂರವಿರಬಹುದು ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಕರುಳಿನ ಜಂತುಹುಳು ಸೋಂಕು ನಿಯಂತ್ರಿಸುವುದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಕಡಿಮೆ ಮಾಡುವುದು ಮತ್ತು ಮಕ್ಕಳ ದೈಹಿಕ-ಮಾನಸಿಕ ಬೆಳವಣಿಗೆಗೆ ನೆರವಾಗುವುದು ಜಂತುಹುಳು ನಿವಾರಣಾ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಸೇಂಟ್ ಜಾನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಫಾದರ್ ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯೆ ಮೇರಿ ಮಸ್ಕರೇನಸ್, ಬೆಟಗೇರಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಮತಿ ಪಂಚಮುಖಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಯಿತು.

ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಅಳವಡಿಸದ ಆರೋಪ: ಕ್ರಮಕ್ಕೆ ಆಗ್ರಹಿಸಿ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಳಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸಿಲ್ಲ ಎಂದು ಆರೋಪಿಸಿ, ಜೈ ಭೀಮ ರಾಜ್ಯ ಸಂಘರ್ಷ ಸಮಿತಿಯ ಗದಗ ಜಿಲ್ಲಾ ಘಟಕವು ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಸಮಿತಿಯ ಜಿಲ್ಲಾಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ ಮಾತನಾಡಿ, ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಡಾ. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸದಿರುವುದು ಖಂಡನೀಯ. ಈ ಕುರಿತು ಸ್ಥಳೀಯ ದಲಿತ ಯುವ ಮುಖಂಡರು ಎರಡು ತಿಂಗಳ ಹಿಂದೆಯೇ ಕಾಲೇಜಿನ ಪ್ರಭಾರಿ ಪ್ರಾಚಾರ್ಯೆ ಮಂಜುಳಾದೇವಿ ಹಕ್ಕಂಡಿ ಅವರ ಗಮನಕ್ಕೆ ತಂದಿದ್ದರೂ, ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸರ್ಕಾರದ ಆದೇಶದಂತೆ ಸರ್ಕಾರಿ ಶಾಲೆ, ಕಾಲೇಜು ಹಾಗೂ ಕಚೇರಿಗಳಲ್ಲಿ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದು ಅಗತ್ಯವಾಗಿದ್ದರೂ, ಕಾಲೇಜಿನ ಆಡಳಿತದ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು. ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಪ್ರಾಚಾರ್ಯರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೂ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ದಲಿತ ಮುಖಂಡ ಶರೀಫ ಬಿಳೆಯಲಿ, ಡಿಎಸ್‌ಎಸ್ ಮುಖಂಡ ಬಾಲರಾಜ ಅರಬರ, ಛಲವಾದಿ ಮಹಾಸಭಾ ಅಧ್ಯಕ್ಷ ಆನಂದ ಸಿಂಗಾಡಿ, ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ರಾಘವೇಂದ್ರ ಪಿ. ಪರಾಪೂರ, ಪ್ರಜಾಶಕ್ತಿ ವೇದಿಕೆ ಅಧ್ಯಕ್ಷ ಮಂಜುನಾಥ ಎಫ್. ತೌಜಲ್, ರೋಣ ತಾಲೂಕು ಅಧ್ಯಕ್ಷ ಬಸವರಾಜ ಬದಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.