ತುಮಕೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತಮ್ಮ ಆರಾಧ್ಯ ದೈವ ಅಜ್ಜಯ್ಯನ ಪೀಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆಯಲಿದ್ದಾರೆ.
ಧಾರ್ಮಿಕ ಆಚರಣೆಗಳು ಮತ್ತು ದೇವಸ್ಥಾನ ಭೇಟಿಗಳಿಗೆ ಹೆಚ್ಚಿನ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಇತ್ತೀಚೆಗೆ ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿಯ ದರ್ಶನ ಪಡೆದ ಬೆನ್ನಲ್ಲೇ ಇದೀಗ ನೊಣವಿನಕೆರೆ ಮಠದತ್ತ ಮುಖ ಮಾಡಿದ್ದಾರೆ.
ಸಂಜೆ 5 ಗಂಟೆಗೆ ಮಠಕ್ಕೆ ಆಗಮಿಸಲಿರುವ ಅವರು, ರಾತ್ರಿ 8 ಗಂಟೆಯವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಮಠದ ಪೂಜಾ ವಿಧಾನಗಳ ಪ್ರಕಾರ ವಿಶೇಷ ಸೇವೆಗಳನ್ನು ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿದೆ.
ಈ ಭೇಟಿ ಮೇ 28ರಂದು ನಿಗದಿಯಾಗಿದ್ದರೂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಮರುನಿಗದಿಯಂತೆ ಡಿ.ಕೆ. ಶಿವಕುಮಾರ್ ಮಠಕ್ಕೆ ಭೇಟಿ ನೀಡುತ್ತಿದ್ದಾರೆ.
ಇತ್ತೀಚೆಗೆ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ಮಾತನಾಡಿ, ಅವರು ಜನಪರ ನಾಯಕನಾಗಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಆಶೀರ್ವಾದ ವ್ಯಕ್ತಪಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಈ ಭೇಟಿ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಗಮನ ಸೆಳೆದಿದೆ.

