Home Blog

ನನ್ನ ವಿರುದ್ಧದ ಆರೋಪ ಈಗಾಗಲೇ ವಜಾ ಆಗಿದೆ, ಸುಳ್ಳು ಸುದ್ದಿ ಹರಡಿದರೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಸಚಿವ ಸಿ. ಪುಟ್ಟರಂಗಶೆಟ್ಟಿ ಎಚ್ಚರಿಕೆ!

ಚಾಮರಾಜನಗರ: ಮಂತ್ರಿ ಸ್ಥಾನಕ್ಕಾಗಿ ಹಣ ಪಾವತಿಸಲಾಗಿದೆ ಹಾಗೂ ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಮಾಜಿ ಸಚಿವ ತಿಮ್ಮಾಪುರ ಮತ್ತು ಕಾಂಗ್ರೆಸ್ ಮುಖಂಡ ಎಸ್.ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಕುರಿತು ಸಚಿವ ಸಿ. ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದರು.

“ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು? ಅವರಿಗೆ ಅಷ್ಟೊಂದು ಹಣ ಎಲ್ಲಿಂದ ಬಂತು ಎಂಬುದನ್ನು ಆರೋಪ ಮಾಡುವವರನ್ನೇ ಕೇಳಿ. ಇಲ್ಲವಾದರೆ ನಾನು ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಬೇಕಾಗುತ್ತದೆ” ಎಂದು ಅವರು ಕಿಡಿಕಾರಿದರು.

ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪದ ಕುರಿತು ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆದಿದೆ. ಈ ಸಂಬಂಧ ಅಗತ್ಯ ಕ್ರಮಗಳೂ ಆಗಿವೆ ಎಂದು ಸಚಿವರು ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಸುಳ್ಳು ಆರೋಪ ಹಾಗೂ ಅಪಪ್ರಚಾರ ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಅವರು, “ಈ ರೀತಿಯ ಸುಳ್ಳು ಪ್ರಚಾರ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ” ಎಂದು ಹೇಳಿದರು.

“ಆಡಿಯೋ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅದು ಯಾರ ಧ್ವನಿ, ಯಾರು ಆ ರೀತಿಯ ಹೇಳಿಕೆ ನೀಡಿದ್ದಾರೆ ಹಾಗೂ ಅದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ” ಎಂದು ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ನಾನು ದಲಿತ, ಹಿಂದುಳಿದ ನಾಯಕ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಬಿ. ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಯ ಚೆಳ್ಳಗುರ್ಕಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ ಇದೀಗ ಅವಕಾಶ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ” ಎಂದು ಹೇಳಿದರು.

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಒಬ್ಬ ದಲಿತ ಹಾಗೂ ಹಿಂದುಳಿದ ನಾಯಕ ಬೆಳೆಯುವುದನ್ನು ಬಿಜೆಪಿ ನಾಯಕರು ಸಹಿಸಿಕೊಳ್ಳುತ್ತಿಲ್ಲ” ಎಂದು ಆರೋಪಿಸಿದರು.

ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಹಿರಿಯ ನಾಯಕರು. ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರು ಎಷ್ಟು ಜನ ಇದ್ದಾರೆ ಎಂಬುದನ್ನು ಮೊದಲು ನೋಡಬೇಕು” ಎಂದು ತಿರುಗೇಟು ನೀಡಿದರು.

“ನನಗೆ ಎಸ್‌ಐಟಿ ತನಿಖೆಯಲ್ಲಿ ಕ್ಲೀನ್ ಚಿಟ್ ದೊರೆತಿದೆ. ಕೇಂದ್ರ ಸರ್ಕಾರದ ಕುತಂತ್ರದಿಂದ ನನ್ನನ್ನು ಬಲಿಪಶು ಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಅವರು ಆರೋಪಿಸಿದರು.

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಬಿ. ನಾಗೇಂದ್ರ, “ಅವರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು. ನಾನೂ ಅದೇ ರೀತಿ ಮಾತನಾಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಮೊದಲು ಹೇಗೆ ಮಾತನಾಡಬೇಕು ಎಂಬುದನ್ನು ಕಲಿಯಬೇಕು” ಎಂದು ವಾಗ್ದಾಳಿ ನಡೆಸಿದರು.

2027ರ ಏಕದಿನ ವಿಶ್ವಕಪ್ʼಗೆ ಸನ್ನಿ ಆಯ್ಕೆ ಮಾಡಿದ ಬಲಿಷ್ಠ ಟೀಂ ಇಂಡಿಯಾ: ಆಕಾಶ್ ಚೋಪ್ರಾ ಕೊಟ್ಟಿದ್ದು 10ಕ್ಕೆ 9 ಅಂಕ!

0

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಕೇವಲ 14 ತಿಂಗಳುಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಭಾರತ ತಂಡದ ಸಂಭಾವ್ಯ ಸಂಯೋಜನೆ ಕುರಿತು ಚರ್ಚೆಗಳು ಜೋರಾಗಿವೆ. ಈ ಮಧ್ಯೆ ಭಾರತದ ದಿಗ್ಗಜ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಸುನಿಲ್ ಗವಾಸ್ಕರ್, ಮುಂಬರುವ ವಿಶ್ವಕಪ್‌ಗೆ ತಮ್ಮ ನೆಚ್ಚಿನ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಅದು ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಭಾರತವು ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ನಂತರ 2023ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಅಜೇಯವಾಗಿ ಫೈನಲ್‌ಗೇರಿದರೂ, ಅಂತಿಮ ಹಣಾಹಣಿಯಲ್ಲಿ ಸೋತು ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬಳಿಕ ಭಾರತ 2024ರ ಟಿ20 ವಿಶ್ವಕಪ್, 2025ರ ಚಾಂಪಿಯನ್ಸ್ ಟ್ರೋಫಿ ಹಾಗೂ 2026ರ ಟಿ20 ವಿಶ್ವಕಪ್ ಗೆದ್ದು ಸತತ ಮೂರು ಐಸಿಸಿ ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದೆ. ಇದೀಗ ಶುಭ್ಮನ್ ಗಿಲ್ ನಾಯಕತ್ವದಲ್ಲಿ 2027ರ ಏಕದಿನ ವಿಶ್ವಕಪ್ ಗೆಲ್ಲುವತ್ತ ತಂಡದ ಗುರಿ ನೆಟ್ಟಿದೆ.

ಗವಾಸ್ಕರ್ ಆಯ್ಕೆ ಮಾಡಿದ ತಂಡದಲ್ಲಿ ಶುಭ್ಮನ್ ಗಿಲ್ ನಾಯಕರಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್. ರಾಹುಲ್ ಟಾಪ್-5 ಬ್ಯಾಟರ್‌ಗಳಾಗಿ ಸ್ಥಾನ ಪಡೆದಿದ್ದಾರೆ. ಬ್ಯಾಕ್‌ಅಪ್ ವಿಕೆಟ್‌ಕೀಪರ್ ಆಗಿ ಇಶಾನ್ ಕಿಶನ್‌ಗೆ ಅವಕಾಶ ನೀಡಲಾಗಿದೆ.

ಆಲ್‌ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಏಕೈಕ ತಜ್ಞ ಸ್ಪಿನ್ನರ್ ಆಗಿದ್ದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.

ಆದರೆ ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರಿಗೆ ಗವಾಸ್ಕರ್ ತಮ್ಮ ಸಂಭಾವ್ಯ ತಂಡದಲ್ಲಿ ಸ್ಥಾನ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ. 2027ರ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವುದರಿಂದ ಅನುಭವಿ ವೇಗಿಗಳ ಅಗತ್ಯವಿದೆ ಎಂಬ ಚರ್ಚೆ ಈಗಾಗಲೇ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

ಇದೇ ವೇಳೆ, ಗವಾಸ್ಕರ್ ಆಯ್ಕೆ ಮಾಡಿದ ತಂಡವನ್ನು ಮಾಜಿ ಕ್ರಿಕೆಟಿಗ ಹಾಗೂ ವಿಶ್ಲೇಷಕ ಆಕಾಶ್ ಚೋಪ್ರಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಾಪ್-5 ಬ್ಯಾಟರ್‌ಗಳ ಆಯ್ಕೆಯ ಜೊತೆಗೆ ಆಲ್‌ರೌಂಡರ್ ಮತ್ತು ಬೌಲಿಂಗ್ ವಿಭಾಗದಲ್ಲೂ ಉತ್ತಮ ಸಮತೋಲನ ಸಾಧಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಹಾರ್ದಿಕ್ ಪಾಂಡ್ಯಗೆ ಬೆಂಬಲವಾಗಿ ನಿತೀಶ್ ಕುಮಾರ್ ರೆಡ್ಡಿ, ಜಡೇಜಾ ಜೊತೆಗೆ ಅಕ್ಷರ್ ಪಟೇಲ್ ಹಾಗೂ ಎಡಗೈ ವೇಗಿ ಅರ್ಶದೀಪ್ ಸಿಂಗ್‌ರನ್ನು ಆಯ್ಕೆ ಮಾಡಿರುವುದು ತಂಡದ ಬಲ ಹೆಚ್ಚಿಸಿದೆ. ಬುಮ್ರಾ, ಸಿರಾಜ್, ಕುಲ್ದೀಪ್ ಹಾಗೂ ಹರ್ಷಿತ್ ರಾಣಾ ಕೂಡ ಬ್ಯಾಟಿಂಗ್‌ನಲ್ಲಿ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಈ ತಂಡಕ್ಕೆ ನಾನು 10ಕ್ಕೆ 8.5ರಿಂದ 9 ಅಂಕ ನೀಡುತ್ತೇನೆ,” ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಸುನಿಲ್ ಗವಾಸ್ಕರ್ ಆಯ್ಕೆ ಮಾಡಿದ ಸಂಭಾವ್ಯ 15 ಸದಸ್ಯರ ಭಾರತ ತಂಡ:

ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ.

ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಸೈಬರ್ ಭದ್ರತೆವರೆಗೆ ಎಐ ಬಳಕೆ: ಆಂಥ್ರೋಪಿಕ್ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಗುರುವಾರ ಭೇಟಿ ಮಾಡಿದ್ದರು.

ಜವಾಬ್ದಾರಿಯುತ ಬಳಕೆ, ಡೇಟಾ ಗೌಪ್ಯತೆ ಮತ್ತು ಡೇಟಾ ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳುವ ಮೂಲಕ, ಸರ್ಕಾರ ಹಾಗೂ ಉದ್ಯಮಗಳಿಗಾಗಿ ಅನ್ವಯಿಕ ಎಐ (Applied AI) ಪರಿಹಾರಗಳ “ಪ್ರಯೋಜನಕಾರಿ ಅಳವಡಿಕೆ”ಯ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಪ್ರಸ್ತಾವಿತ ‘ಎಐ ವಿಶ್ವವಿದ್ಯಾಲಯ’, ಬೃಹತ್ ಮಟ್ಟದ ಕೌಶಲ್ಯಾಭಿವೃದ್ಧಿ ಯೋಜನೆಗಳು ಮತ್ತು ಡೀಪ್-ಟೆಕ್ ಅನ್ವೇಷಣೆಗಳಿಗೆ ನೀಡುವ ಬೆಂಬಲವನ್ನು ಒಳಗೊಂಡಂತೆ ಸಮಗ್ರ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಕರ್ನಾಟಕದ ದೃಷ್ಟಿಕೋನವನ್ನು ಮುಖ್ಯಮಂತ್ರಿಗಳು ವಿವರಿಸಿದರು. ದೇಶದಲ್ಲೇ ಅತಿ ದೊಡ್ಡ ಎಐ ಪ್ರಮಾಣೀಕೃತ ಪ್ರತಿಭಾವಂತರನ್ನು ರೂಪಿಸಲು, ರಾಜ್ಯದ ‘ನಿಪುಣ’ (NIPUNA) ಕಾರ್ಯಕ್ರಮದಡಿ ‘ಕ್ಲಾಡ್’ (Claude) ಸರ್ಟಿಫಿಕೇಶನ್ ಸೇರಿದಂತೆ ಎಐ-ಸಂಬಂಧಿತ ಸರ್ಟಿಫಿಕೇಶನ್ ಕೋರ್ಸ್‌ಗಳನ್ನು ಪರಿಚಯಿಸುವ ಬಗ್ಗೆ ಚರ್ಚಿಸಿದರು.

ಆರೋಗ್ಯ ರಕ್ಷಣೆ ಮತ್ತು ಲೈಫ್ ಸೈನ್ಸಸ್ ಕ್ಷೇತ್ರಗಳಲ್ಲಿ ಎಐ ಬಳಕೆ, ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸಹಯೋಗದೊಂದಿಗೆ ವೈಜ್ಞಾನಿಕ ಸಂಶೋಧನೆಗಾಗಿ ಎಐ ಬಳಸುವ ಕುರಿತು ಚರ್ಚೆಗಳು ನಡೆದವು. ಉನ್ನತ ಶಿಕ್ಷಣದಲ್ಲಿ ಎಐ ಆಧಾರಿತ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ಆಂಥ್ರೋಪಿಕ್ ನಿಯೋಗವು ಆಸಕ್ತಿ ವ್ಯಕ್ತಪಡಿಸಿತು.

ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸ್ಥಳೀಯತೆ (Data Residency) ಮತ್ತು ಸಾರ್ವಭೌಮ ಸರ್ಕಾರಿ ಡೇಟಾವನ್ನು ರಾಜ್ಯದೊಳಗಿನ ಸರ್ವರ್‌ಗಳಲ್ಲೇ ಸಂಗ್ರಹಿಸುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆಯೂ ಪ್ರಮುಖವಾಗಿ ಚರ್ಚಿಸಲಾಯಿತು. ರಾಜ್ಯ ಸರ್ಕಾರವು ತನ್ನ “ಸರ್ಕಾರಕ್ಕೆ ಮೊದಲ ಆದ್ಯತೆ” (Government First) ನೀತಿಯನ್ನು ಪುನರುಚ್ಚರಿಸಿತು. ಎಐ ಆಧಾರಿತ ಸಾರ್ವಜನಿಕ ಪರಿಹಾರಗಳ ಅಭಿವೃದ್ಧಿಗೆ ಅನುಕೂಲವಾಗುವಂತೆ ಸರ್ಕಾರಿ ಡೇಟಾಸೆಟ್‌ಗಳನ್ನು ಸುರಕ್ಷಿತವಾಗಿಡುವ ಬಗ್ಗೆ ಚರ್ಚಿಸಿದರು.

ಇ-ಆಡಳಿತ, ಗೃಹ ಇಲಾಖೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಲ್ಲಿ ಎಐ ಅನ್ವಯಿಕೆಗಳನ್ನು ಗುರುತಿಸಲು ಇಲಾಖಾವಾರು ಕಾರ್ಯಪಡೆಗಳನ್ನು ರಚಿಸುವ ಕುರಿತೂ ಸಭೆಯಲ್ಲಿ ಪರಿಶೀಲಿಸಲಾಯಿತು. ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮಗಳು, ನಾಗರಿಕರ ಡೇಟಾ ಮತ್ತು ಗೌಪ್ಯತೆಯ ರಕ್ಷಣೆ ಸೇರಿದಂತೆ ಜವಾಬ್ದಾರಿಯುತ ಎಐ ಪದ್ಧತಿಗಳನ್ನು ಭವಿಷ್ಯದ ಯೋಜನಾ ಅಳವಡಿಕೆಗಳ ಅಗತ್ಯ ಅಂಶಗಳಾಗಿ ಚರ್ಚಿಸಲಾಯಿತು.

ಸರ್ಕಾರಿ ವ್ಯವಸ್ಥೆಗಳಲ್ಲಿ ನಡೆಯುವ ವಂಚನೆಗಳನ್ನು ತಡೆಯಲು ಹಾಗೂ ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ ಹೇಗೆ ನೆರವಾಗುತ್ತದೆ ಎಂಬುದರ ಕುರಿತು ಮುಖ್ಯಮಂತ್ರಿಗಳು ಆಂಥ್ರೋಪಿಕ್‌ನ ತಾಂತ್ರಿಕ ಸಲಹೆ ಕೋರಿದರು.

ಎಐ ಶಿಕ್ಷಣ ಮತ್ತು ಸಂಶೋಧನೆಯನ್ನು ಬಲಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಆಂಥ್ರೋಪಿಕ್‌ನ ‘ಕ್ಲಾಡ್ ಎಐ’ ವೇದಿಕೆಯ ಲಭ್ಯತೆಗೆ ರಿಯಾಯಿತಿ/ಸಬ್ಸಿಡಿ ನೀಡುವಂತೆ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು. ‘ಸಿಎಂ 100 ದಿನಗಳ’ ಮೈಲಿಗಲ್ಲನ್ನು ಈ ಸಹಯೋಗದೊಂದಿಗೆ ಸಾಧಿಸುವ ಕುರಿತೂ ಚರ್ಚಿಸಲಾಯಿತು.

ಕರ್ನಾಟಕದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗೆ ಬೆಂಬಲ ನೀಡಲು, ವಿಶೇಷವಾಗಿ ಡೀಪ್-ಟೆಕ್ ಕ್ಷೇತ್ರದಲ್ಲಿರುವ ರಾಜ್ಯದ 20,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಆಂಥ್ರೋಪಿಕ್‌ನಿಂದ ಬೆಂಬಲ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಯಿತು. ತೆರಿಗೆ ಸಂಗ್ರಹಣೆ ಮತ್ತು ಸಾರ್ವಜನಿಕ ಸೇವಾ ವಿತರಣೆಯಂತಹ ಕ್ಷೇತ್ರಗಳಲ್ಲಿ ಎಐ ಅನ್ವಯಿಕೆಗಳನ್ನು ಪ್ರಾಯೋಗಿಕ ಯೋಜನೆಗಳಾಗಿ (Pilot Projects) ಗುರುತಿಸಲಾಯಿತು.

ಎಐ ತಂತ್ರಜ್ಞಾನಗಳನ್ನು ವಿಶಾಲವಾದ ಸಾಮಾಜಿಕ ಒಳಿತಿಗಾಗಿ ಬಳಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರೇತರ ಸಂಸ್ಥೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳೊಂದಿಗಿನ ಸಹಭಾಗಿತ್ವದ ಕುರಿತೂ ಸಭೆಯು ಪರಿಶೀಲಿಸಿತು.

ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ ಎನ್., ಮುನೀಶ್ ಮೌದ್ಗಿಲ್ ಹಾಗೂ ಸಿಎಂ ಹಣಕಾಸು ಸಲಹೆಗಾರ ಎಲ್. ಕೆ. ಅತೀಕ್, ಆಂಥ್ರೋಪಿಕ್ ಸಂಸ್ಥೆಯ ಪರವಾಗಿ ಅಂತಾರಾಷ್ಟ್ರೀಯ ನೀತಿ ವಿಭಾಗದ ಮುಖ್ಯಸ್ಥ ಮೈಕೆಲ್ ಸೆಲ್ಲಿಟೋ, ಅಂತಾರಾಷ್ಟ್ರೀಯ ಮಾರುಕಟ್ಟೆಗಳ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ ಸಿಯೌರಿ, ಭಾರತದ ವ್ಯವಸ್ಥಾಪಕ ನಿರ್ದೇಶಕಿ ಐರಿನಾ ಘೋಷ್, ಭಾರತದ ನೀತಿ ವಿಭಾಗದ ಮುಖ್ಯಸ್ಥ ಆಮ್ಲಾನ್ ಮೊಹಾಂತಿ, ಮತ್ತು ಸಾರ್ವಜನಿಕ ವಲಯ, ಆರೋಗ್ಯ ಹಾಗೂ ಶಿಕ್ಷಣ ವಿಭಾಗದ ಗೋ-ಟು-ಮಾರ್ಕೆಟ್ ಉಸ್ತುವಾರಿ ಸಮರ್ಥ್ ಮಸ್ಸೋನ್ ಅವರು ಉಪಸ್ಥಿತರಿದ್ದರು.

ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿವೆ. ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ಇದೀಗ ಎ8 ಆರೋಪಿ ರವಿಶಂಕರ್ ಹಾಗೂ ಎ10 ಆರೋಪಿ ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಆಸಕ್ತಿ ತೋರಿಸಿದ್ದಾರೆ.

ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ಅರ್ಜಿಯ ವಿಚಾರಣೆ ನಡೆಯುವ ವೇಳೆ, ರವಿಶಂಕರ್ ಹಾಗೂ ವಿನಯ್ ಪರ ವಕೀಲರು ತಮ್ಮ ಕಕ್ಷಿದಾರರನ್ನೂ ಮಾಫಿ ಸಾಕ್ಷಿಗಳಾಗಿ ಪರಿಗಣಿಸುವಂತೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಪ್ರತ್ಯೇಕ ಅರ್ಜಿ ಸಲ್ಲಿಸಲಾಗುವುದು ಎಂದು ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಇಬ್ಬರೂ ಆರೋಪಿಗಳು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಪ್ರದೋಷ್ ಪರ ವಕೀಲ ದಿವಾಕರ್ ಈ ಬೆಳವಣಿಗೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರದೋಷ್ ಅವರ ಹೇಳಿಕೆಯನ್ನು ಮೊದಲು ನ್ಯಾಯಾಲಯ ದಾಖಲಿಸಿಕೊಳ್ಳಬೇಕು. ಉಳಿದ ಅರ್ಜಿಗಳನ್ನು ನಂತರ ಪರಿಗಣಿಸಬಹುದು ಎಂದು ಅವರು ವಾದಿಸಿದ್ದಾರೆ.

ನ್ಯಾಯಾಲಯ ಎರಡೂ ಕಡೆಗಳ ವಾದ ಆಲಿಸಿ ವಿಚಾರಣೆಯನ್ನು ಮುಂದೂಡಿದೆ. ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣದ ತನಿಖೆಗೆ ಮಹತ್ವದ ಮಾಹಿತಿ ಸಿಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳು ಕೂಡ ಇದೇ ನಿರ್ಧಾರಕ್ಕೆ ಮುಂದಾಗಿರುವುದು ಪ್ರಕರಣದ ಪ್ರಮುಖ ಆರೋಪಿಗಳಿಗೆ ಕಾನೂನು ಸಂಕಷ್ಟ ಹೆಚ್ಚಿಸುವ ಸಾಧ್ಯತೆಯನ್ನು ಮೂಡಿಸಿದೆ.

ಈ ಹಿಂದೆ ಪ್ರದೋಷ್ ಪರ ವಕೀಲರು, ದರ್ಶನ್ ಇರುವ ಕೊಠಡಿಯಿಂದ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರುಪಡಿಸುವಂತೆ ಮನವಿ ಮಾಡಿದ್ದರು. ದರ್ಶನ್ ಪ್ರಭಾವ ಬೀರುವ ಅಥವಾ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಈ ಮನವಿ ಸಲ್ಲಿಸಲಾಗಿತ್ತು.

‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಯುವಜನರ ರಕ್ತ ಹೀರಿ ಬದುಕುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಡಿಸಿಎಂ ಸಿ.ಎನ್. ಅಶ್ವಥ್ ನಾರಾಯಣ ಅವರ ಕಚೇರಿಗೆ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಖಂಡಿಸಿರುವ ಅವರು, ಇದು ಕಾಂಗ್ರೆಸ್‌ನ ಸಂಸ್ಕೃತಿ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಯಾವಾಗಲೂ ಪೋಸ್ಟರ್ ಚಳವಳಿಯ ಮೂಲಕ ರಾಜಕೀಯ ಮಾಡುತ್ತಿದೆ. ಆದರೆ, ಜೆನ್ ಜೀ (Gen Z) ಯುವ ಸಮೂಹ ದೇಶದ ಭವಿಷ್ಯವಾಗಿದ್ದು, ಯುವಕರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಪರೀಕ್ಷಾ ಅಕ್ರಮಗಳ ಕುರಿತು ಸರ್ಕಾರವನ್ನು ಪ್ರಶ್ನಿಸಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ನೀಟ್ ಪರೀಕ್ಷೆಗೆ ಸೀಮಿತವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲೇಜು ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಕೆಪಿಎಸ್‌ಸಿ ಅಕ್ರಮ ಖಂಡಿಸಿ ಪಶುವೈದ್ಯರು ಹಾಗೂ ಕೃಷಿ ವಿಶ್ವವಿದ್ಯಾಲಯದ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಅಕ್ರಮ ಪ್ರಕರಣಗಳನ್ನು ಸರ್ಕಾರ ಸಿಬಿಐ ತನಿಖೆಗೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಸಭಾಪತಿ ವಿಚಾರದಲ್ಲೂ ಕಾಂಗ್ರೆಸ್ ವಿರುದ್ಧ ಕಿಡಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರು ಎರಡು ಬಾರಿ ಹೊರಟ್ಟಿ ಅವರಿಗೆ ಕರೆ ಮಾಡಿ ರಾಜೀನಾಮೆ ಕೇಳಿದ್ದಾರೆ. ಅಲ್ಲದೇ, ಮನೆಗೆ ಕರೆಸಿಕೊಂಡು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು.

ಸಭಾಪತಿಗಳನ್ನು ಮುಖ್ಯಮಂತ್ರಿ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆ. ಮುಖ್ಯಮಂತ್ರಿಗಳೇ ಅವರ ಮನೆಗೆ ತೆರಳಿದ್ದರೆ ಅದು ಸೂಕ್ತವಾಗುತ್ತಿತ್ತು ಎಂದರು.

ಹಿಂದೆ ವಿರೋಧ ಪಕ್ಷದವರು ಸಭಾಪತಿ ಸ್ಥಾನದಲ್ಲಿದ್ದಾಗ ಅವರನ್ನು ಗೌರವಿಸುವ ಸಂಪ್ರದಾಯ ಇತ್ತು. ಆದರೆ, ಕಾಂಗ್ರೆಸ್ ಈಗ ಅವಿಶ್ವಾಸ ನಿರ್ಣಯದ ಬೆದರಿಕೆ ಹಾಕುತ್ತಿದೆ. ಎಐಸಿಸಿ ಲೆಟರ್ ಹೆಡ್‌ನಲ್ಲಿ ಸಭಾಪತಿಗಳ ಹೆಸರು ಉಲ್ಲೇಖಿಸಿರುವುದು ಸದನ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಆರೋಪಿಸಿದರು.

ಈ ವಿಚಾರದ ನೈತಿಕ ಹೊಣೆ ಹೊತ್ತು ಮಲ್ಲಿಕಾರ್ಜುನ ಖರ್ಗೆ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಬಸವರಾಜ ಹೊರಟ್ಟಿ ಅವರಿಗೆ ಬೆಂಬಲ ಸೂಚಿಸಿದ ಅವರು, ಯಾವುದೇ ಕಾರಣಕ್ಕೂ ಬೆದರದೆ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.

AI ಶಿಕ್ಷಣ ಮತ್ತು ಸಂಶೋಧನೆಗೆ ಹೊಸ ಹೆಜ್ಜೆ; ‘ನಿಪುಣ ಕರ್ನಾಟಕ’ ಯೋಜನೆಗೆ ₹300 ಕೋಟಿ ಮೀಸಲು ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲಿದೆ ಎಂದು ಗೃಹ ಹಾಗೂ ಐಟಿ-ಬಿಟಿ, ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿರುವ ವೋಲ್ವರ್‌ಹ್ಯಾಂಪ್ಟನ್-ಬೆಂಗಳೂರು ಸಂಶೋಧನೆ ಮತ್ತು ಅನ್ವೇಷಣೆ ಕೇಂದ್ರ ಹಾಗೂ ಇಂಗ್ಲೆಂಡ್‌ನ ವೋಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಕೃತಕ ಬುದ್ಧಿಮತ್ತೆಯ ಬಳಕೆ’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಭವಿಷ್ಯದ ಉದ್ಯೋಗ ಅವಕಾಶಗಳಿಗೆ ಅಗತ್ಯ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ‘ಸ್ಥಳೀಯ ಕೌಶಲಾಭಿವೃದ್ಧಿ ಮತ್ತು ಜಾಗತಿಕ ಉದ್ಯೋಗ ನಿರ್ವಹಣೆ’ ಪರಿಕಲ್ಪನೆಯಡಿ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಗೆ ಮೂಲಸೌಕರ್ಯ ಹಾಗೂ ಮಾರ್ಗದರ್ಶನ ಒದಗಿಸಲು ₹300 ಕೋಟಿಗೂ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಕೃತಕ ಬುದ್ಧಿಮತ್ತೆ ಆಧಾರಿತ ಪರ್ಸನಲ್ ಕಂಪ್ಯೂಟರ್‌ಗಳನ್ನು ಬಳಕೆಗೆ ತಂದ ವಿಶ್ವದ ಮೊದಲ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಇದರಿಂದ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿವೆ ಎಂದು ಅವರು ಹೇಳಿದರು.

ಸ್ಟಾರ್ಟಪ್ ಕಂಪನಿಗಳಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು ಮುಂದಿನ ವರ್ಷದಿಂದ ₹1 ಕೋಟಿಗೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ AI ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ರಾಜ್ಯದ ಇ-ಆಡಳಿತ ವ್ಯವಸ್ಥೆಯನ್ನು ಐ-ಆಡಳಿತ (Intelligent Governance) ಹಂತಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದರು.

2015ರಲ್ಲಿ ವಿಶ್ವದ 193 ದೇಶಗಳು ಒಪ್ಪಿಕೊಂಡಿರುವ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು 2030ರ ವೇಳೆಗೆ ಸಾಧಿಸುವ ಸವಾಲು ಎದುರಾಗಿದೆ. ಪರಿಸರ ಸ್ನೇಹಿ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಮತ್ತು ವಿವೇಚನಾತ್ಮಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಭೀಕರ ರಸ್ತೆ ಅಪಘಾತದಲ್ಲಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸೇರಿ ಮೂವರ ದುರ್ಮರಣ..!

0

ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜಕಾರಣಿ ಹಾಗೂ ಮಾಫಿಯಾ ಡಾನ್ ಆಗಿದ್ದ ಅತೀಕ್ ಅಹ್ಮದ್ ಅವರ ಕಿರಿಯ ಪುತ್ರ ಆಬಾನ್ ಅಹ್ಮದ್ ಸೇರಿದಂತೆ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಝಾನ್ಸಿಯ ಪುಂಚ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಬಾನ್ ಅಹ್ಮದ್ ಪ್ರಯಾಣಿಸುತ್ತಿದ್ದ ಕಾರು ಅತಿವೇಗದಲ್ಲಿ ಬಂದು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಮೃತರು ಪ್ರಯಾಗ್‌ರಾಜ್‌ನಿಂದ ಝಾನ್ಸಿ ಜೈಲಿನಲ್ಲಿರುವ ಅತೀಕ್ ಅಹ್ಮದ್ ಅವರ ಮತ್ತೊಬ್ಬ ಪುತ್ರ ಅಲಿ ಅಹ್ಮದ್ ಅವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಅತೀಕ್ ಅಹ್ಮದ್ ಹಿನ್ನೆಲೆ

ಅತೀಕ್ ಅಹ್ಮದ್ ಉತ್ತರ ಪ್ರದೇಶದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

ಅಪರಾಧ ಹಿನ್ನೆಲೆಯ ನಡುವೆಯೂ ಅವರು ರಾಜಕೀಯ ಪ್ರವೇಶಿಸಿ, ಉತ್ತರ ಪ್ರದೇಶದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಸಮಾಜವಾದಿ ಪಕ್ಷದ ಸಂಸದರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು 2023ರ ಫೆಬ್ರವರಿಯಲ್ಲಿ ಅತೀಕ್ ಅಹ್ಮದ್ ಗ್ಯಾಂಗ್ ಹತ್ಯೆ ಮಾಡಿತ್ತು ಎಂದು ಆರೋಪಿಸಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಅತೀಕ್ ಅಹ್ಮದ್ ಪುತ್ರ ಅಸದ್ ಅಹ್ಮದ್ ಅವರನ್ನು ಉತ್ತರ ಪ್ರದೇಶ ಪೊಲೀಸರು 2023ರ ಏಪ್ರಿಲ್ 13ರಂದು ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು.

ಅಸದ್ ಎನ್‌ಕೌಂಟರ್ ನಡೆದ ಎರಡು ದಿನಗಳ ಬಳಿಕ, 2023ರ ಏಪ್ರಿಲ್ 15ರಂದು ಪೊಲೀಸ್ ಭದ್ರತೆಯಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದ ವೇಳೆ ಅತೀಕ್ ಅಹ್ಮದ್ ಹಾಗೂ ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಮಾಧ್ಯಮ ಪ್ರತಿನಿಧಿಗಳ ವೇಷದಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಚಿನ್ನದ ಹೆಸರಿನಲ್ಲಿ ಉದ್ಯಮಿಯಿಂದ 1.5 ಕೋಟಿ ರೂ. ಪಡೆದು ಮೋಸ ಮಾಡಿದ ಬ್ಯಾಂಕ್ ಸಿಬ್ಬಂದಿ ಅರೆಸ್ಟ್!

0

ಬೆಂಗಳೂರು: ನಕಲಿ ಚಿನ್ನವನ್ನು ಅಡಮಾನ ಇಟ್ಟು ಬ್ಯಾಂಕ್‌ಗೆ ವಂಚನೆ ಎಸಗಿದ್ದ ಬ್ಯಾಂಕ್ ಅಪ್ರೈಸರ್, ಬಳಿಕ ಅದೇ ಪ್ರಕರಣದಿಂದ ಪಾರಾಗಲು ಉದ್ಯಮಿಯೊಬ್ಬರಿಗೆ ₹1.53 ಕೋಟಿ ವಂಚಿಸಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಂಧಿತನನ್ನು ಪೀಣ್ಯದ ಖಾಸಗಿ ಬ್ಯಾಂಕ್ ಶಾಖೆಯೊಂದರಲ್ಲಿ ಅಪ್ರೈಸರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ, ಸುಮಾರು 15 ಖಾತೆಗಳ ಮೂಲಕ ನಕಲಿ ಚಿನ್ನವನ್ನು ಅಡಮಾನ ಇಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಸಾಲ ಪಡೆದಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ನಾಗೇಶ್ ತನ್ನ ಸ್ನೇಹಿತರ ಸಹಾಯದಿಂದ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಡುತ್ತಿದ್ದ. ಚಿನ್ನದ ಸರಗಳ ಕೊಂಡಿ ಮಾತ್ರ ಅಸಲಿ ಚಿನ್ನದಿಂದ ಮಾಡಲಾಗಿದ್ದರೆ, ಉಳಿದ ಭಾಗ ನಕಲಿಯಾಗಿತ್ತು. ಬ್ಯಾಂಕ್ ಆಡಿಟ್ ವೇಳೆ ಈ ಅಕ್ರಮ ಬೆಳಕಿಗೆ ಬಂದಿದ್ದು, ಬ್ಯಾಂಕ್ ಅಧಿಕಾರಿಗಳು ಹಣ ಮರುಪಾವತಿಸದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಈ ಪ್ರಕರಣದಿಂದ ಪಾರಾಗಲು ಆರೋಪಿ ತನ್ನ ಸ್ನೇಹಿತರ ಮೂಲಕ ಉದ್ಯಮಿ ಜಗದೀಶ್ ಅವರನ್ನು ಪರಿಚಯಿಸಿಕೊಂಡಿದ್ದಾನೆ. ಬ್ಯಾಂಕ್‌ನಲ್ಲಿ ಕಡಿಮೆ ಬೆಲೆಗೆ ಹರಾಜಿಗೆ ಬಂದಿರುವ ಚಿನ್ನವನ್ನು ಖರೀದಿಸಿದರೆ ಸುಮಾರು ₹40 ಲಕ್ಷ ಲಾಭವಾಗುತ್ತದೆ ಹಾಗೂ ಹಿಂದಿನ ಸಾಲಗಾರರು ಚಿನ್ನವನ್ನು ಬಿಡಿಸಿಕೊಳ್ಳುವುದಿಲ್ಲ ಎಂದು ನಂಬಿಸಿ ಹಣ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾನೆ.

ಆರೋಪಿಯ ಮಾತನ್ನು ನಂಬಿದ ಉದ್ಯಮಿ ಜಗದೀಶ್, ₹1.53 ಕೋಟಿ ಹಣ ನೀಡಿದ್ದರು. ಉದ್ಯಮಿಯಿಂದ ಪಡೆದ ಹಣವನ್ನು ನಾಗೇಶ್ ಬ್ಯಾಂಕ್‌ಗೆ ಪಾವತಿಸಿ, ಬಳಿಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ತಾನು ವಂಚನೆಗೆ ಒಳಗಾಗಿರುವುದು ತಿಳಿದ ಬಳಿಕ ಜಗದೀಶ್ ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ನಾಗೇಶ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಂಕಿಪೊಟ್ಟಣ ಕೊಡಲಿಲ್ಲವೆಂದು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ? ಉದ್ಯಮಿ ಆದಿಕೇಶವುಲು ಮೊಮ್ಮಗ ವಿರುದ್ಧ ಮತ್ತೊಂದು ಆರೋಪ

0

ಬೆಂಗಳೂರು: ಉದ್ಯಮಿ ಆದಿಕೇಶವುಲು ಕುಟುಂಬದ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಕೇಳಿಬಂದಿದೆ. ಸಿಗರೇಟ್ ಹಚ್ಚಲು ಬೆಂಕಿಪೊಟ್ಟಣ ನೀಡಲಿಲ್ಲ ಎಂಬ ಕಾರಣಕ್ಕೆ ಅಪಾರ್ಟ್‌ಮೆಂಟ್‌ನ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿರುವ ಆರೋಪ ಆದಿಕೇಶವುಲು ಅವರ ಮೊಮ್ಮಗನ ವಿರುದ್ಧ ಕೇಳಿಬಂದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದರೂ, ಪೊಲೀಸರು ಎನ್‌ಸಿಆರ್ ಮಾತ್ರ ದಾಖಲಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ ಪ್ರಕೃತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ನ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ.

ಮಾಹಿತಿಯ ಪ್ರಕಾರ, ಆದಿಕೇಶವುಲು ಅವರ ಮೊಮ್ಮಗ ಸಿಗರೇಟ್ ಸೇದಲು ಬೆಂಕಿಪೊಟ್ಟಣ ಕೇಳಿದ್ದು, ಸೆಕ್ಯುರಿಟಿ ಗಾರ್ಡ್ “ಇಲ್ಲ” ಎಂದು ಉತ್ತರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಅಪಾರ್ಟ್‌ಮೆಂಟ್ ಪಾರ್ಕಿಂಗ್ ಪ್ರದೇಶದಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ನಿವಾಸಿಗಳ ಆತಂಕಕ್ಕೂ ಕಾರಣರಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಘಟನೆ ಬಳಿಕ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದೆ ಎನ್‌ಸಿಆರ್ ಮಾತ್ರ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಡಿಸಿಪಿಗೆ ಪ್ರತ್ಯೇಕ ದೂರು ಸಲ್ಲಿಸಲಾಗಿದೆ.

ಆದಿಕೇಶವುಲು ಕುಟುಂಬದ ಹೆಸರು ಈ ಹಿಂದೆ ಕೂಡ ಹಲವು ವಿವಾದಗಳಲ್ಲಿ ಕೇಳಿಬಂದಿತ್ತು. 2019ರಲ್ಲಿ ಅವರ ಆಪ್ತ ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣ, ಗೀತಾ ವಿಷ್ಣು ಮೇಲಿನ ಹಲ್ಲೆ ಪ್ರಕರಣ, 2017ರ ಎಸ್‌ಯುವಿ ಅಪಘಾತ ಹಾಗೂ ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಪ್ರಕರಣ, ನಾಯಿ ಮೇಲೆ ಕಾರು ಹತ್ತಿಸಿದ ಆರೋಪ ಸೇರಿದಂತೆ ಹಲವು ಪ್ರಕರಣಗಳು ಈ ಕುಟುಂಬದ ಸುತ್ತ ಸದ್ದು ಮಾಡಿದ್ದವು.