Home Blog

ನೊಣವಿನಕೆರೆ ಮಠಕ್ಕೆ ಡಿಕೆಶಿ ಭೇಟಿ: ಆರಾಧ್ಯ ದೈವ ಅಜ್ಜಯ್ಯನ ಸನ್ನಿಧಿಯಲ್ಲಿ ವಿಶೇಷ ಪೂಜೆ

0

ತುಮಕೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತಮ್ಮ ಆರಾಧ್ಯ ದೈವ ಅಜ್ಜಯ್ಯನ ಪೀಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆಯಲಿದ್ದಾರೆ.

ಧಾರ್ಮಿಕ ಆಚರಣೆಗಳು ಮತ್ತು ದೇವಸ್ಥಾನ ಭೇಟಿಗಳಿಗೆ ಹೆಚ್ಚಿನ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಇತ್ತೀಚೆಗೆ ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿಯ ದರ್ಶನ ಪಡೆದ ಬೆನ್ನಲ್ಲೇ ಇದೀಗ ನೊಣವಿನಕೆರೆ ಮಠದತ್ತ ಮುಖ ಮಾಡಿದ್ದಾರೆ.

ಸಂಜೆ 5 ಗಂಟೆಗೆ ಮಠಕ್ಕೆ ಆಗಮಿಸಲಿರುವ ಅವರು, ರಾತ್ರಿ 8 ಗಂಟೆಯವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಮಠದ ಪೂಜಾ ವಿಧಾನಗಳ ಪ್ರಕಾರ ವಿಶೇಷ ಸೇವೆಗಳನ್ನು ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿದೆ.

ಈ ಭೇಟಿ ಮೇ 28ರಂದು ನಿಗದಿಯಾಗಿದ್ದರೂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಮರುನಿಗದಿಯಂತೆ ಡಿ.ಕೆ. ಶಿವಕುಮಾರ್ ಮಠಕ್ಕೆ ಭೇಟಿ ನೀಡುತ್ತಿದ್ದಾರೆ.

ಇತ್ತೀಚೆಗೆ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ಮಾತನಾಡಿ, ಅವರು ಜನಪರ ನಾಯಕನಾಗಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಆಶೀರ್ವಾದ ವ್ಯಕ್ತಪಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಈ ಭೇಟಿ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಗಮನ ಸೆಳೆದಿದೆ.

ನನ್ನ ನಿರ್ಧಾರವನ್ನು ಈಗಾಗಲೇ ತಿಳಿಸಿದ್ದೇನೆ, ಏನು ಮಾಡ್ತಾರೆ ನೋಡೋಣ: ತಮ್ಮ ನಿಲುವು ಬಹಿರಂಗಪಡಿಸದ ರಾಮಲಿಂಗಾರೆಡ್ಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದೊಳಗಿನ ಅಸಮಾಧಾನ ಬಹಿರಂಗಗೊಂಡಿದ್ದು, ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಖಾತೆ ಹಂಚಿಕೆ ಕುರಿತ ಅಸಮಾಧಾನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಮಲಿಂಗಾರೆಡ್ಡಿ, “ನನ್ನ ನಿರ್ಧಾರವನ್ನು ಈಗಾಗಲೇ ತಿಳಿಸಿದ್ದೇನೆ. ಮುಂದೆ ಏನು ಮಾಡುತ್ತಾರೆ ಎಂಬುದನ್ನು ನೋಡೋಣ” ಎಂದು ಪ್ರತಿಕ್ರಿಯಿಸಿದ್ದಾರೆ.

ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಡರಾತ್ರಿವರೆಗೂ ಮನವೊಲಿಕೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.

ಈ ಬೆಳವಣಿಗೆಗಳ ಬಳಿಕ ಅಂತಿಮ ನಿರ್ಧಾರವನ್ನು ಇಂದು ತಿಳಿಸುವುದಾಗಿ ರಾಮಲಿಂಗಾರೆಡ್ಡಿ ಹೇಳಿದ್ದರು. ಇದರ ನಡುವೆಯೇ ಅವರು ತಮ್ಮ ನಿವಾಸಕ್ಕೆ ಬೆಂಬಲಿಗರನ್ನು ಆಹ್ವಾನಿಸಿ ಮಹತ್ವದ ಸಭೆ ನಡೆಸಿದ್ದಾರೆ.

ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಸೇರಿದಂತೆ ಹಲವು ಬೆಂಬಲಿಗರು ರಾಮಲಿಂಗಾರೆಡ್ಡಿ ಅವರ ಕೊರಮಂಗಲ ನಿವಾಸಕ್ಕೆ ಭೇಟಿ ನೀಡಿ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಬೆಂಬಲಿಗರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮುಂದಿನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಹಿಂಪಡೆಯುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ಬಹುತೇಕ ವಾಪಸ್ ಪಡೆಯಲು ಒಲವು ತೋರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವೊಲಿಕೆ ಪ್ರಯತ್ನದ ನಂತರ ರಾಮಲಿಂಗಾರೆಡ್ಡಿ ಅವರು ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯಲಿದ್ದಾರೆಯೇ ಅಥವಾ ಬೇರೆ ಯಾವುದೇ ತೀರ್ಮಾನ ಕೈಗೊಳ್ಳಲಿದ್ದಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವಿಶ್ವ ಚೆಸ್ ವೇದಿಕೆಯಲ್ಲಿ ಮತ್ತೊಂದು ಮೈಲುಗಲ್ಲು: ನಾರ್ವೆ ಚೆಸ್ 2026 ಕಿರೀಟ ಮುಡಿಗೇರಿಸಿಕೊಂಡ ಪ್ರಜ್ಞಾನಂದ

ಓಸ್ಲೋ: ಭಾರತದ ಯುವ ಚೆಸ್ ತಾರೆ ಹಾಗೂ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ನಾರ್ವೆ ಚೆಸ್-2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಭಾರತೀಯ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಈ ಸಾಧನೆಯೊಂದಿಗೆ ಪ್ರತಿಷ್ಠಿತ ನಾರ್ವೆ ಚೆಸ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ, ಟೂರ್ನಿಯ ಅಂತಿಮ ಸುತ್ತಿನಲ್ಲಿ ಜರ್ಮನಿಯ ಗ್ರ್ಯಾಂಡ್‌ಮಾಸ್ಟರ್ ವಿನ್ಸೆಂಟ್ ಕೀಮರ್ ಅವರನ್ನು ಸೋಲಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಅವರು, ಅಂತಿಮ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು.

ಈ ಮೂಲಕ ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಹಾಗೂ ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರನ್ನು ಹಿಂದಿಕ್ಕಿ ಐತಿಹಾಸಿಕ ಸಾಧನೆ ಮಾಡಿದರು.

ಟೂರ್ನಿಯ ಆರಂಭಿಕ ಹಂತದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಪ್ರಜ್ಞಾನಂದ, ದ್ವಿತೀಯಾರ್ಧದಲ್ಲಿ ಅದ್ಭುತ ಪುನರಾಗಮನ ಮಾಡಿ ಎಲ್ಲರ ಗಮನ ಸೆಳೆದರು. ವಿಶೇಷವಾಗಿ, ನಾರ್ವೆ ಚೆಸ್‌ನಲ್ಲಿ ಏಳು ಬಾರಿ ಚಾಂಪಿಯನ್ ಆಗಿರುವ ಹಾಗೂ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಎರಡು ಬಾರಿ ಮಣಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಅಂತಿಮ ಸುತ್ತಿನಲ್ಲಿ ಗುಕೇಶ್ ಪ್ರಶಸ್ತಿ ಸ್ಪರ್ಧೆಯಿಂದ ಹೊರಬಿದ್ದ ಹಿನ್ನೆಲೆಯಲ್ಲಿ ಪ್ರಜ್ಞಾನಂದ ಅವರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶ ಮತ್ತಷ್ಟು ಬಲವಾಯಿತು. ಅವರು ಆ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಭಾರತದ ಕೀರ್ತಿಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಎತ್ತರಕ್ಕೆ ಹಾರಿಸಿದರು.

ಅಂತಿಮ ಸುತ್ತಿಗೂ ಮುನ್ನ 15.5 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದ ಅಮೆರಿಕದ ಗ್ರ್ಯಾಂಡ್‌ಮಾಸ್ಟರ್ ವೆಸ್ಲಿ ಸೊ, ಫ್ರಾನ್ಸ್‌ನ ಅಲಿರೇಝಾ ಫಿರೋಜ್ಜಾ ವಿರುದ್ಧದ ಪಂದ್ಯವನ್ನು ಡ್ರಾಗೊಳಿಸಿದ್ದರು. ಪರಿಣಾಮ ಪಂದ್ಯ ಟೈ-ಬ್ರೇಕರ್ ಹಂತಕ್ಕೆ ತಲುಪಿದ್ದು, ಇದೇ ಪ್ರಜ್ಞಾನಂದ ಅವರಿಗೆ ಮುನ್ನಡೆಯ ಅವಕಾಶ ಕಲ್ಪಿಸಿತು.

ಟೈ-ಬ್ರೇಕರ್‌ನಲ್ಲಿ ವೆಸ್ಲಿ ಸೊ ಜಯ ಸಾಧಿಸಿದರೂ ಅವರಿಗೆ ಕೇವಲ 1.5 ಅಂಕಗಳು ಮಾತ್ರ ಲಭಿಸಿದ ಕಾರಣ ಒಟ್ಟು 17 ಅಂಕಗಳಿಗೆ ತೃಪ್ತಿಪಡಬೇಕಾಯಿತು. ಮತ್ತೊಂದೆಡೆ ಅಲಿರೇಝಾ ಫಿರೋಜ್ಜಾ 15.5 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು.

ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಕರಾವಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ, ಗುಡುಗು ಹಾಗೂ ಬಿರುಗಾಳಿಯ ಸಾಧ್ಯತೆ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದರ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಕೊಡಗು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ ಮತ್ತು ಸಿಡಿಲಿನ ಸಂದರ್ಭಗಳಲ್ಲಿ ಸಾರ್ವಜನಿಕರು ಮರಗಳ ಕೆಳಗೆ, ವಿದ್ಯುತ್ ಕಂಬಗಳ ಸಮೀಪ ಅಥವಾ ಅಪಾಯಕಾರಿ ಸ್ಥಳಗಳಲ್ಲಿ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರೈತರು ಸೇರಿದಂತೆ ಸಾರ್ವಜನಿಕರು ಸ್ಥಳೀಯ ಹವಾಮಾನ ಮಾಹಿತಿ ಮತ್ತು ಅಧಿಕಾರಿಗಳ ಸೂಚನೆಗಳನ್ನು ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಲಾಗಿದೆ.

ಇಂದು ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಎದುರು ನೋಡುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶ ಪ್ರಕಟಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರೂ ಆಗಿರುವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಅಧಿಕೃತ ವಿವರಗಳು, ಒಟ್ಟಾರೆ ಸಾಧನೆ ಹಾಗೂ ಟಾಪರ್‌ಗಳ ಪಟ್ಟಿಯನ್ನು ಪ್ರಕಟಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ, ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Register Number) ನಮೂದಿಸುವ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಹಾಗೂ ರ‍್ಯಾಂಕ್‌ ಕಾರ್ಡ್‌ ಅನ್ನು ವೀಕ್ಷಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಫಲಿತಾಂಶ ಪ್ರಕಟವಾದ ತಕ್ಷಣ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ವೇಳೆ ವೆಬ್‌ಸೈಟ್‌ಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಸರ್ವರ್ ಮೇಲೆ ಹೆಚ್ಚಿನ ಒತ್ತಡ ಉಂಟಾಗಬಹುದು. ಇದರಿಂದ ವೆಬ್‌ಸೈಟ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದ್ದು, ಅಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಆತಂಕಪಡದೆ ಸ್ವಲ್ಪ ಸಮಯದ ಬಳಿಕ ಮತ್ತೆ ಪ್ರಯತ್ನಿಸುವಂತೆ ಕೆಇಎ ಮನವಿ ಮಾಡಿದೆ.

ಮುಖ್ಯಮಂತ್ರಿ ಬದಲಾವಣೆ ಬಳಿಕ ರಾಜ್ಯ ರಾಜಕೀಯದ ಕುರಿತು ಮೋದಿ ವಾಗ್ದಾಳಿ!

ಗಾಂಧೀನಗರ: ಕರ್ನಾಟಕದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸಾರ್ವಜನಿಕ ಅಸಮಾಧಾನ ಹೆಚ್ಚಾಗಿದೆ ಎಂದು ಪ್ರಧಾನಿ ಪ್ರಧಾನಿ ಮೋದಿ ಹೇಳಿದ್ದಾರೆ.

ಗುಜರಾತ್ ಭೇಟಿಯ ವೇಳೆ ‘ಸ್ವಾವಲಂಬಿ ಭಾರತ’ ಅಭಿಯಾನದಡಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ದೇಶವು ಅವ್ಯವಸ್ಥೆ ಮತ್ತು ಅನಿಶ್ಚಿತತೆಯನ್ನು ಒಪ್ಪುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಅಥವಾ ರಾಹುಲ್ ಗಾಂಧಿಯ ಹೆಸರನ್ನು ನೇರವಾಗಿ ಉಲ್ಲೇಖಿಸದೇ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಅವ್ಯವಸ್ಥೆ ಮತ್ತು ಅನಿಶ್ಚಿತತೆಯನ್ನು ಹರಡುತ್ತಿದೆ ಎಂದು ಆರೋಪಿಸಿದರು. ಆದರೆ ದೇಶದ ಜನರು ಇದಕ್ಕೆ ಪದೇಪದೇ ಸೂಕ್ತ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾಂಗ್ರೆಸ್ ವಿರುದ್ಧವೂ ಸಾರ್ವಜನಿಕರ ತೀವ್ರ ಆಕ್ರೋಶವಿದೆ. ಹಿಮಾಚಲದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಉಲ್ಲೇಖಿಸಿ ಅಲ್ಲಿನ ಜನರು ಕಾಂಗ್ರೆಸ್‌ನ ದುರಾಡಳಿತವನ್ನು ತಿರಸ್ಕರಿಸಿದರು. ಕಳೆದ ವರ್ಷ, ಹರಿಯಾಣ ಮತ್ತು ಪಂಜಾಬ್‌ನ ಜನರು ಸಹ ಕಾಂಗ್ರೆಸ್‌ಗೆ ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದಾರೆ. ಗೊಂದಲದಲ್ಲಿ ಅವಕಾಶವನ್ನು ಕಂಡುಕೊಳ್ಳುವ ಕಾಂಗ್ರೆಸ್‌ನ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸಾರ್ವಜನಿಕರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಪರಶುರಾಮ ಗುಡದಾರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಲಕ್ಷ್ಮೇಶ್ವರ ಪುರಸಭೆ ವತಿಯಿಂದ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಮಾನವನು ಪರಿಸರ ಅವಲಂಬಿ ಜೀವಿಯಾಗಿದ್ದು, ಪರಿಸರದಿಂದಲೇ ಎಲ್ಲವನ್ನು ಪಡೆಯುತ್ತಿದ್ದೇವೆ. ಹೀಗಾಗಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಪಟ್ಟಣದ ಇಟ್ಟಿಗೆರೆ ದಂಡೆ, ಉಮಾ ವಿದ್ಯಾಲಯ ಹೈಸ್ಕೂಲ್, ಕಾಲೇಜು ಆವರಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೂರಾರು ಸಸಿಗಳನ್ನು ನೆಡುವ ಕಾರ್ಯ ನೆರವೇರಿಸಲಾಯಿತು. ಪ್ರತಿಯೊಬ್ಬರೂ ತಮ್ಮ ಮನೆ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.

ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗದೇ ನಿರಂತರ ಜಾಗೃತಿ ಅಭಿಯಾನವಾಗಬೇಕು. ನೆಟ್ಟ ಸಸಿಗಳನ್ನು ಕಾಳಜಿಯಿಂದ ಬೆಳೆಸಿದಾಗ ಮಾತ್ರ ಪರಿಸರ ದಿನಾಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಹನುಮಂತ ನಂದೆಣ್ಣವರ, ವ್ಯವಸ್ಥಾಪಕಿ ಮಂಜುಳಾ ಹೂಗಾರ, ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಪರಿಸರ ಕಾಪಾಡಿದರೆ ಭವಿಷ್ಯ ಸುರಕ್ಷಿತ: ಜೆ.ಡಿ. ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಜರುಗಿದವು.

ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗ ಸಂಸ್ಥೆಯ ಶ್ರೀಮತಿ ಪಿಎಸ್‌ಬಿಡಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯ ಜೆ.ಡಿ. ಲಮಾಣಿ, ಪರಿಸರ ಉತ್ತಮವಾಗಿದ್ದಾಗ ಮಾತ್ರ ಜಗತ್ತಿನ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯ. ಆದರೆ ಪರಿಸರವನ್ನು ಕಾಪಾಡುವ ಬದಲು ಹಾಳು ಮಾಡುವ ಸಂಸ್ಕೃತಿ ಹೆಚ್ಚುತ್ತಿರುವುದು ವಿಷಾದನೀಯ ಸಂಗತಿ ಎಂದು ಹೇಳಿದರು.

ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮತ್ತು ಹೊಣೆಗಾರಿಕೆ ಬೆಳೆಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಪ್ರತಿಜ್ಞೆ ಸ್ವೀಕರಿಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನೊಂದೆಡೆ ಉಮಾ ವಿದ್ಯಾಲಯ ಹೈಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಎಸ್.ಬಿ. ಸಂಗನಪೇಟ ಸಸಿ ನೆಡುವ ಮೂಲಕ ಪರಿಸರ ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಅಶೋಕ ಕಳ್ಳಿಮನಿ, ಅಶೋಕ ಲಿಂಗಶೆಟ್ಟಿ, ಶಿಕ್ಷಕ ವೃಂದ, ಪುರಸಭೆ ಸಿಬ್ಬಂದಿ ಹಾಗೂ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅದೇ ರೀತಿ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಯೋಧ ಎಚ್.ಡಿ. ಸಂಜೀವಣ್ಣ, “ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಕಾಡು ಬೆಳೆಸಿ ನಾಡು ಉಳಿಸಿ ಎನ್ನುವ ಧ್ಯೇಯ ಪ್ರತಿಯೊಬ್ಬರದ್ದಾಗಬೇಕು” ಎಂದು ಹೇಳಿದರು.

ವಿಶ್ರಾಂತ ಶಿಕ್ಷಕ ಐ.ಎಸ್. ಮಡಿವಾಳರ ಮಾತನಾಡಿ, ಪರಿಸರ ಸಂರಕ್ಷಣೆಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವುದು ಹಾಗೂ ಪ್ರಕೃತಿಯನ್ನು ರಕ್ಷಿಸಲು ಜನರನ್ನು ಪ್ರೇರೇಪಿಸುವುದೇ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಬಸವರಾಜ ಕುಂಬಾರ ಮಾತನಾಡಿದರು. ಶಿಕ್ಷಕರಾದ ಎಚ್.ಡಿ. ನಿಂಗರೆಡ್ಡಿ, ಆರ್.ಎಂ. ಶಿರಹಟ್ಟಿ, ಎಲ್.ಎ. ಬಣಕಾರ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

“ಪರಿಸರದ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಅದರ ಬಗ್ಗೆ ಪ್ರತಿಯೊಬ್ಬರಲ್ಲೂ ಪ್ರಬುದ್ಧತೆ ಬೆಳೆದು ಬರಬೇಕು.”

— ಜೆ.ಡಿ. ಲಮಾಣಿ

“ಪರಿಸರದಿಂದಲೇ ನಮ್ಮ ಆರೋಗ್ಯ ಮತ್ತು ಬದುಕು. ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.”

ಎಚ್.ಡಿ. ಸಂಜೀವಣ್ಣ

ಜೂನ್ 7ರಂದು ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವ ಅಂಗವಾಗಿ ವರ್ಷಪೂರ್ತಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಜೂನ್ ೭ರಂದು ಅಧಿಕೃತ ಚಾಲನೆ ದೊರೆಯಲಿದೆ.

ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಈ ಮಹೋತ್ಸವ ಕಾರ್ಯಕ್ರಮವನ್ನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಂಜೆ ೫:೩೦ಕ್ಕೆ ನಗರದ ಕಳಸಾಪುರ ರಸ್ತೆಯಲ್ಲಿರುವ ಶ್ರೀ ಬಯಲು ಆಂಜನೇಯ ದೇವಸ್ಥಾನ ಆವರಣದಲ್ಲಿ ಅಮೃತಹಸ್ತದಿಂದ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಾಯೋಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಸಿ ನೆಡುವ ಕಾರ್ಯಕ್ರಮ ಜರುಗಲಿವೆ ಎಂದು ರಜತ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ಬಹಿಷ್ಕಾರ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಈ ಬಾರಿ ಪದವಿ ಪರೀಕ್ಷಾ ಕಾರ್ಯ ಹಾಗೂ ಮೌಲ್ಯಮಾಪನ ಕಾರ್ಯವನ್ನು ರಾಜ್ಯಾದ್ಯಂತ ಬಹಿಷ್ಕರಿಸುವ ಮೂಲಕ ಸರ್ಕಾರ ಮತ್ತು ವಿಶ್ವವಿದ್ಯಾಲಯಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಕೊಪ್ಪಳ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷಾ ನಿರ್ವಹಣೆಗೆ ಅಡಚಣೆ ಉಂಟಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಅನಿವಾರ್ಯತೆ ಎದುರಾಗಿದೆ.

2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐದು ಹಂತದ ಕೌನ್ಸೆಲಿಂಗ್ ಮೂಲಕ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿತ್ತು. ಶೈಕ್ಷಣಿಕ ಅರ್ಹತೆಗೆ ಆದ್ಯತೆ ನೀಡಿ ನೇಮಕ ಪ್ರಕ್ರಿಯೆ ನಡೆಸಲಾಗಿದ್ದು, ಕೆಲ ಕೋರ್ಸ್‌ಗಳಿಗೆ ಅನುಭವ ಆಧಾರದ ಮೇಲೆ ನಾನ್-ಯುಜಿಸಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಈ ಬಾರಿ ನಕಲಿ ದಾಖಲೆಗಳ ಹಾವಳಿ ತಪ್ಪಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಇದರ ಪರಿಣಾಮ ಕೆಲವರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದು, ಪ್ರಕ್ರಿಯೆ ಇನ್ನೂ ಮುಂದುವರಿದಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ವರ್ಷದ ಅಂತ್ಯದ ಅವಧಿ ಏಕರೂಪದಲ್ಲಿಲ್ಲ. ಕೆಲವು ವಿವಿಗಳಲ್ಲಿ ಎಪ್ರಿಲ್, ಇನ್ನೂ ಕೆಲವು ಕಡೆ ಮೇ ಹಾಗೂ ಜೂನ್ ತಿಂಗಳಲ್ಲಿ ಅತಿಥಿ ಉಪನ್ಯಾಸಕರ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಈಗಾಗಲೇ ಸೇವೆಯಿಂದ ಬಿಡುಗಡೆಗೊಂಡಿರುವ ಉಪನ್ಯಾಸಕರು ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಪ್ರಶ್ನೆಪತ್ರಿಕೆ ಸಿದ್ಧತೆ, ಬಿಒಇ, ಸ್ಕ್ವಾಡ್ ಮೊದಲಾದ ಪರೀಕ್ಷಾ ಕಾರ್ಯಗಳಲ್ಲಿ ಬಳಸದೇ ಇರುವ ಧೋರಣೆ ವಿರುದ್ಧವೂ ಅಸಮಾಧಾನ ವ್ಯಕ್ತವಾಗಿದೆ. “ಪಾಠ ಮಾಡುವಾಗ ಸಮಸ್ಯೆಯಾಗದವರು ಪ್ರಶ್ನೆಪತ್ರಿಕೆ ಸಿದ್ಧಪಡಿಸುವಾಗ ಸಮಸ್ಯೆಯಾಗುತ್ತಾರೆಯೇ?” ಎನ್ನುವುದು ಅವರ ಪ್ರಶ್ನೆ.

ಅತಿಥಿ ಉಪನ್ಯಾಸಕರನ್ನು ಕೆಲವೆಡೆ ಕಾಯಂ ಬೋಧಕರು ‘ಜೀತದಾಳು’ಗಳಂತೆ ಕಾಣುತ್ತಿರುವುದು ಬೇಸರ ತಂದಿದೆ. ಹತ್ತು ತಿಂಗಳು ಸೇವೆಯಲ್ಲಿ ಮುಂದುವರಿಸಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಇದೀಗ ಕೆಲವು ಕಾಲೇಜುಗಳಲ್ಲಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷಾ ಕಾರ್ಯ ನಿರ್ವಹಣೆಗೆ ಪ್ರಾಚಾರ್ಯರು ಪರದಾಡುವಂತಾಗಿದೆ. ಪರ್ಯಾಯವಾಗಿ ಖಾಸಗಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಮೌಲ್ಯಮಾಪನ ಕಾರ್ಯವನ್ನು ಹೇಗೆ ನಿರ್ವಹಿಸುವುದು ಎಂಬುದು ವಿಶ್ವವಿದ್ಯಾಲಯಗಳಿಗೆ ದೊಡ್ಡ ಸವಾಲಾಗಿದೆ.

“ರಾಜ್ಯ ಸಂಘಟನೆಯ ಕರೆಯ ಮೇರೆಗೆ ಪರೀಕ್ಷಾ ಹಾಗೂ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಿದ್ದೇವೆ. ಕೆಲವರು ಬೆದರಿಕೆಗೆ ಹೆದರಿ ಕೆಲಸಕ್ಕೆ ಹಾಜರಾಗಿರುವುದು ಗೊತ್ತಾಗಿದೆ. ಯಾವುದಕ್ಕೂ ಅಂಜಬೇಡಿ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯುತ್ತದೆ.”

ಡಾ. ವೀರಣ್ಣ ಸಜ್ಜನರ

“ಜೂನ್‌ವರೆಗೂ ಸೇವೆಯಲ್ಲಿ ಮುಂದುವರಿಸಿದರೆ ಪರೀಕ್ಷಾ ಕಾರ್ಯದಲ್ಲಿ ಕೈಜೋಡಿಸುತ್ತೇವೆ. ಮನೆಯಿಂದ ಹೊರಗೆ ನೂಕಿ ಮನೆ ಕೆಲಸ ಮಾಡು ಎಂದರೆ ಹೇಗೆ ಸಾಧ್ಯ? ಗೌರವದಿಂದ ನಡೆಸಿಕೊಳ್ಳುವ ಪ್ರಾಚಾರ್ಯರೂ ಇದ್ದಾರೆ. ಕೆಲವರು ಸೇವಾ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಬೆದರಿಸುತ್ತಿದ್ದಾರೆ.”

ಡಾ. ಹನುಮಂತಗೌಡ ಕಲ್ಮನಿ

“ಜೂನ್ 4 ಮತ್ತು 5ರಂದು ಹೆಚ್ಚಿನ ವಿದ್ಯಾರ್ಥಿಗಳು ಹಾಜರಾಗುವ ಪರೀಕ್ಷೆಗಳಿದ್ದವು. ಸ್ವಲ್ಪ ಮಟ್ಟಿಗೆ ತೊಂದರೆ ಉಂಟಾಯಿತು. ಪರ್ಯಾಯವಾಗಿ ಖಾಸಗಿ ಪಿಯು ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡಿದ್ದೇವೆ. ಸದ್ಯ ಪರೀಕ್ಷೆಗಳು ಸುಗಮವಾಗಿ ನಡೆದಿವೆ.”

ಪ್ರೊ. ವೈ.ಬಿ. ಅಂಗಡಿ

“ಕೊಪ್ಪಳ ವಿವಿ ವ್ಯಾಪ್ತಿಯ ಗಂಗಾವತಿ ಹಾಗೂ ಕೊಪ್ಪಳ ಕಾಲೇಜುಗಳಲ್ಲಿ ಹೆಚ್ಚಿನ ಪರೀಕ್ಷಾ ಕೊಠಡಿಗಳಿವೆ. ಅಲ್ಲಿ ಸ್ವಲ್ಪ ತೊಂದರೆ ಆಗಬಹುದು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರದ ಉನ್ನತಾಧಿಕಾರಿಗಳಿಗೆ ತಿಳಿಸಿದ್ದೇವೆ.”

ಡಾ. ಎಸ್.ವಿ. ಡಾಣಿ

error: Content is protected !!