Home Blog

ಗಣೇಶೋತ್ಸವಕ್ಕೆ PoP ಗಣೇಶ ಮೂರ್ತಿಗಳಿಗೆ ಬ್ರೇಕ್: ಮಣ್ಣಿನ ಗಣಪತಿಗೆ ಮಾತ್ರ ಅವಕಾಶ ನೀಡುವಂತೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ರಾಸಾಯನಿಕ ಬಣ್ಣ ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಗೆ ಅವಕಾಶ ನೀಡದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ, ಬಣ್ಣರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಮತ್ತು ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗಣೇಶನು ಮಣ್ಣಿನಿಂದ ರೂಪುಗೊಳ್ಳುವ ದೇವರಾಗಿರುವುದರಿಂದ ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಅವರು ತಿಳಿಸಿದ್ದಾರೆ.

ಗಣೇಶೋತ್ಸವದ ವೇಳೆ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಈಗಿನಿಂದಲೇ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆಯುವಂತೆ ಸೂಚಿಸಲಾಗಿದೆ. ಜೊತೆಗೆ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನೂ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರ ಪ್ರಕಾರ, ಪಿಒಪಿ ಮೂರ್ತಿಗಳು ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್‌ನಿಂದ ತಯಾರಾಗುತ್ತವೆ. ಇವುಗಳಲ್ಲಿ ಗಂಧಕ, ರಂಜಕ, ಜಿಪ್ಸಮ್, ಮ್ಯಾಗ್ನೀಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿದ್ದು, ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇತರ ರಾಸಾಯನಿಕ ಬಣ್ಣಗಳ ಬಳಕೆಯಿಂದ ಪರಿಸರಕ್ಕೆ ಗಂಭೀರ ಹಾನಿ ಉಂಟಾಗುತ್ತದೆ.

ಇಂತಹ ಮೂರ್ತಿಗಳನ್ನು ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದರೆ ಭಾರ ಲೋಹಗಳು ನೀರಿನಲ್ಲಿ ಕರಗಿ ಜಲಮಾಲಿನ್ಯ ಉಂಟುಮಾಡುವುದಲ್ಲದೆ, ಜಲಚರಗಳ ಸಾವಿಗೆ ಹಾಗೂ ಜನ-ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತವೆ ಎಂದು ಅವರು ಎಚ್ಚರಿಸಿದ್ದಾರೆ.

ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ನದಿ, ಕೆರೆ, ಸರೋವರ, ಕಟ್ಟೆ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂಬುದನ್ನೂ ಸಚಿವರು ನೆನಪಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳು ಪರಿಸರ ಮತ್ತು ಜಲಮೂಲಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಆಡಿಯೋ ಇದ್ದರೆ ದೂರು ಕೊಡಿ, ಸತ್ಯಾಸತ್ಯತೆ ಬಹಿರಂಗಪಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಮಾಜಿ ಸಚಿವ ತಿಮ್ಮಾಪುರ್ ಹಾಗೂ ನಂಜಯ್ಯಮಠ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಧಿಕೃತವಾಗಿ ದೂರು ನೀಡಿದರೆ ಫೊರೆನ್ಸಿಕ್ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಇಬ್ಬರೂ ಆಡಿಯೋ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರು ಅಧಿಕೃತವಾಗಿ ದೂರು ಸಲ್ಲಿಸಿದರೆ ಪ್ರಕರಣವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

“ನಾನೇ ಗೃಹ ಸಚಿವನಾಗಿದ್ದೇನೆ. ದೂರು ಕೊಡಿ. ಆಡಿಯೋವನ್ನು ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಪಡೆಯುತ್ತೇವೆ. ಆಡಿಯೋ ನಿಮಗೆ ಹೇಗೆ ಸಿಕ್ಕಿತು ಎಂಬುದನ್ನು ನೀವು ತಿಳಿಸಿ. ಅದು ನಿಜವಾಗಿಯೂ ಅವರ ಧ್ವನಿಯೇ ಅಥವಾ ಅಲ್ಲವೇ ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟಪಡಿಸುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಯಾವುದೇ ಅಧಿಕೃತ ದೂರು ಇಲ್ಲದೆ ಕೇವಲ ಆಡಿಯೋ ವೈರಲ್ ಆಗಿದೆ ಎಂಬ ಕಾರಣಕ್ಕೆ ಸರ್ಕಾರ ಪ್ರತಿಕ್ರಿಯಿಸುವುದು ಸರಿಯಲ್ಲ. ಛಲವಾದಿ ನಾರಾಯಣಸ್ವಾಮಿ ನನ್ನ ಆತ್ಮೀಯ ಸ್ನೇಹಿತರೂ ಆಗಿದ್ದಾರೆ. ಅವರು ನೀಡುವ ದೂರನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ತಿಳಿಸಿದರು.

ದೂರು ದಾಖಲಾದರೆ ತನಿಖೆ ನಡೆಸಿ, ಫೊರೆನ್ಸಿಕ್ ವರದಿಯ ಆಧಾರದ ಮೇಲೆ ಸತ್ಯಾಂಶವನ್ನು ವಿಧಾನಸಭೆಯಲ್ಲಿಯೂ ಮಂಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು.

“ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು ಅನುಮತಿ ಬೇಕು ಎಂದು ಪತ್ರ ಬರೆದಿದ್ದು, ಸಧ್ಯದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ. ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ.

ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ನಿರ್ಮಿಸಲು ಆಲೋಚಿಸಿದ್ದೇವೆ. ನಮ್ಮ ಕಾಲದಲ್ಲಿ ನಗರದ ಹಸಿರು ಕಾಪಾಡಿ, ಸಾರ್ವಜನಿಕರ ಬದುಕಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ನಾಗರಿಕರು ಬಂದು ಈ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಬೇಕು:

“ಲಾಲ್ ಬಾಗ್ ಕೇವಲ ಉದ್ಯಾನವನ ಮಾತ್ರವಲ್ಲ. ಇದೊಂದು ಇತಿಹಾಸ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಈ ಫಲಪುಷ್ಟ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ.

ಇದು ನಮ್ಮ ಸಂಸ್ಕೃತಿ, ರೈತರ ಬದುಕು ಹಾಗೂ ಕಲೆಯ ಸಂಭ್ರಮ. ಈ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ನಾಡಿನ ಜನತೆ ಈ ಫಲಪುಷ್ಟ ಪ್ರದರ್ಶನ ವೀಕ್ಷಿಸಿ ಆನಂದಿಸಬೇಕು. ಯುವಕರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಈ ಕಾರ್ಯಕ್ರಮವನ್ನು ನಾನು ಉದ್ಘಾಟಿಸಿರುವುದು ಸಂತೋಷ ತಂದಿದೆ. 10 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ. ಲಾಲ್‌ ಬಾಗ್‌ ಅನ್ನು ಹೈದರಾಲಿ ಸ್ಥಾಪಿಸಿದರು, ಬ್ರಿಟೀಷರು ಅಭಿವೃದ್ದಿ ಮಾಡಿದರು. ಈಗ ಕರ್ನಾಟಕ ಸರ್ಕಾರ ಮುಂದುವರಿಸುತ್ತಿದೆ” ಎಂದು ತಿಳಿಸಿದರು.

“ಈ ವರ್ಷ ಗಂಗ ಸಾಮ್ರಾಜ್ಯ ರೂಪುಗೊಂಡಿದೆ. ದಕ್ಷಿಣ ಭಾರತದ ಗಂಗರ ಸಾಮ್ರಾಜ್ಯದ ವೈಭವವನ್ನು ಪುಷ್ಪಗಳ ಮೂಲಕ ಮೂಡಿಸಲಾಗಿದೆ. ಅವರ ಹೋರಾಟ, ಸಂಸ್ಕೃತಿ ಎಲ್ಲವೂ ಇಲ್ಲಿ ಅನಾವರಣಗೊಂಡಿದೆ. ಗಂಗರ ಇತಿಹಾಸ ಕರ್ನಾಟಕ ರಾಜ್ಯದ ಇತಿಹಾಸದ ಭಾಗ. ತೋಟಗಾರಿಕಾ ಇಲಾಖೆಯವರು ಈ ಪರಿಕಲ್ಪನೆಯನ್ನು ಅತ್ಯುತ್ತಮವಾಗಿ ರೂಪಿಸಿದ್ದಾರೆ” ಎಂದು ಹೇಳಿದರು.

ಆಗಸ್ಟ್ 15ರಂದು ರೈತರು, ಸರ್ಕಾರದ ಪಾಲುದಾರಿಕೆ ಕಾರ್ಯಕ್ರಮ ಪ್ರಕಟ

“ರಾಜ್ಯದಲ್ಲಿ ಹಸಿರು ಹೆಚ್ಚಿಸಿ ರೈತರ ಬದುಕು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ. ಇದು ರೈತರು ಹಾಗೂ ಸರ್ಕಾರದ ನಡುವಿನ ಪಾಲುದಾರಿಕೆಯ ಕಾರ್ಯಕ್ರಮವಾಗಿದೆ. ಇದನ್ನು ಆಗಸ್ಟ್ 15ರಂದು ಪ್ರಕಟಿಸುತ್ತೇವೆ. ಸರ್ಕಾರದ 100 ದಿನಗಳ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಬದುಕಿಗೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಆಲೋಚಿಸಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ” ಎಂದು ತಿಳಿಸಿದರು.

ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು:

ಕಾಂಗ್ರೆಸ್ ಹಿರಿಯ ನಾಯಕರ ಮನೆಗೆ ಭೇಟಿ ನೀಡಿದ್ದು ಸಮಸ್ಯೆ ಬಗೆಹರಿಸಲಾಗಿದೆಯೇ ಎಂದು ಕೇಳಿದಾಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು. 140 ಶಾಸಕರು ಹಾಗೂ 40 ಪರಿಷತ್ ಸದಸ್ಯರಿದ್ದು, ಆ ಪೈಕಿ ನಾವು ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ ಮಾತ್ರ. ನಮ್ಮ ಪಕ್ಷದಲ್ಲಿ ಎಲ್ಲರೂ ಅರ್ಹರೆ. ನಾವು ಅವರ ಆಸೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿದ್ದು, ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಬಂಧನ!

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಈ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಹತ್ಯೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಯಾಗಿತ್ತು. ಈತನ ಬಂಧನಕ್ಕೆ ನೆರವಾಗುವ ಮಾಹಿತಿಯನ್ನು ನೀಡಿದವರಿಗೆ ಎನ್‌ಐಎ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ತನಿಖೆಯ ಪ್ರಕಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಸುಳ್ಯ ಕಚೇರಿಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಸಂಚು ಸಭೆಯಲ್ಲಿ ಉಮರ್ ಫಾರೂಕ್ ಇತರ ಆರೋಪಿಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದ ಎನ್ನಲಾಗಿದೆ.

ಹತ್ಯೆಗೂ ಮುನ್ನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಅವರ ಚಲನವಲನಗಳ ಮೇಲೆ ನಿಗಾ ಇಡಲು ಹಾಗೂ ದಾಳಿ ನಡೆಸುವ ಸ್ಥಳವನ್ನು ಗುರುತಿಸಲು ಸಹ-ಆರೋಪಿಯೊಬ್ಬನಿಗೆ ತನ್ನ ಬೈಕ್‌ನ್ನು ಉಮರ್ ಫಾರೂಕ್ ನೀಡಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಇದರ ಜೊತೆಗೆ, ಈ ಪ್ರಕರಣದ ಸಂರಕ್ಷಿತ ಸಾಕ್ಷಿದಾರನ (Protected Witness) ಮೇಲೆ ನಡೆದ ಕೊಲೆ ಯತ್ನದ ಸಂಚಿನಲ್ಲೂ ಉಮರ್ ಫಾರೂಕ್ ಭಾಗಿಯಾಗಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ನಾನು ಡಿಕೆ ಶಿವಕುಮಾರ್ ಅವರ ಮನೆ ಮಗ, ಶಿವನ ಮುಂದೆ ಇರುವ ಬಸವ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: “ನಾನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಮಗ. ಶಿವನ ಮುಂದೆ ಇರುವ ಬಸವನಂತೆ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆಯೇ, ಮನೆಮಗನ ಮೇಲೆ ಅವರ ಆಶೀರ್ವಾದ ಯಾವಾಗಲೂ ಇರುತ್ತದೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೊಂದಿದ್ದೆ. ಆದರೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಸಾಕಷ್ಟು ಅವಕಾಶಗಳಿದ್ದು, ಅದರ ಬಗ್ಗೆ ಕಾದು ನೋಡೋಣ ಎಂದು ಹೇಳಿದರು.

“ಪಕ್ಷದಲ್ಲಿ ಐದು-ಆರು ಬಾರಿ ಗೆದ್ದಿರುವ ಹಿರಿಯ ಶಾಸಕರು ಇದ್ದಾರೆ. ಅವರ ನಡುವೆ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇತ್ತು. ಆದರೆ ಈಗ ಅದರ ಬಗ್ಗೆ ಮಾತನಾಡುವುದಕ್ಕಿಂತ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವುದು ಮುಖ್ಯ” ಎಂದು ತಿಳಿಸಿದರು.

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಭ್ರಷ್ಟಾಚಾರದ ಆರೋಪ ಯಾರ ಮೇಲೆ ಇಲ್ಲ ಹೇಳಿ? ಬಿಜೆಪಿಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಇಲ್ಲ. ಆರೋಪ ಇರುವುದು ಬೇರೆ, ಅಪರಾಧ ಸಾಬೀತಾಗುವುದು ಬೇರೆ. ಕಾನೂನಿನ ಪ್ರಕಾರ ಬಂಧನವಾಗಿತ್ತು. ಈಗ ಅವರು ಹೊರಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಾದ ನಿರ್ಧಾರ” ಎಂದು ಸಮರ್ಥಿಸಿಕೊಂಡರು.

ಸಚಿವ ಸಂಪುಟದಲ್ಲಿ ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಆಪ್ತರಿಗೆ ಪ್ರತ್ಯೇಕವಾಗಿ ಸ್ಥಾನ ನೀಡಲಾಗಿದೆ ಎನ್ನುವ ಮಾತು ಸರಿಯಲ್ಲ. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ನಮ್ಮ ಭಾಗದ ಕೆ.ಎಸ್. ಬಸವಂತಪ್ಪ ಅವರಿಗೆ ಅವಕಾಶ ನೀಡಿರುವುದು ಸಂತಸದ ವಿಷಯ ಎಂದು ಹೇಳಿದರು.

ಇದೇ ವೇಳೆ, “ನಾನು ರೈತರ ಕೋಟಾದಡಿ ಸಚಿವ ಸ್ಥಾನ ಕೇಳಿದ್ದೆ. ಆದರೆ ಈ ಬಾರಿ ಸಿಗಲಿಲ್ಲ. ಇನ್ನೂ ರಾಜಕೀಯ ಜೀವನದ ಆರಂಭದ ಹಂತದಲ್ಲಿದ್ದೇನೆ. ಮುಂದೆಯೂ ಅವಕಾಶಗಳಿವೆ. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ತಮ್ಮ ಆಕಾಂಕ್ಷೆಯನ್ನು ಬಹಿರಂಗಪಡಿಸಿದರು.

ಮಧ್ಯರಾತ್ರಿ ಟೆಕ್ಕಿಯ ಹುಚ್ಚಾಟ! 45 ನಿಮಿಷ ಏರ್‌ಗನ್ ಫೈರಿಂಗ್: ಕಾರುಗಳ ಗಾಜು ಪುಡಿ ಪುಡಿ

ಆನೇಕಲ್: ಕುಡಿದ ಅಮಲಿನಲ್ಲಿ ಟೆಕ್ಕಿಯೊಬ್ಬ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಏರ್‌ಗನ್‌ನಿಂದ ಅಡ್ಡಾದಿಡ್ಡಿ ಫೈರಿಂಗ್ ನಡೆಸಿ ನಿವಾಸಿಗಳನ್ನು ಬೆಚ್ಚಿಬೀಳಿಸಿದ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಂಡಾಪುರ ಸಮೀಪದ ಸಿಪಾನಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಾರುಗಳು, ಪಾರ್ಕಿಂಗ್ ಪ್ರದೇಶ ಹಾಗೂ ಸೆಕ್ಯುರಿಟಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸುಮಾರು 45 ನಿಮಿಷಗಳ ಕಾಲ ನಡೆಸಿದ ಫೈರಿಂಗ್‌ನಿಂದ ಭಾರೀ ಆತಂಕ ಉಂಟಾಯಿತು. ಆರೋಪಿ ಅನುರಾಗ್ ತಿವಾರಿಯನ್ನು ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋ ಮೂಲದ 40 ವರ್ಷದ ಅನುರಾಗ್ ತಿವಾರಿ ವೈಟ್‌ಫೀಲ್ಡ್‌ನ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಕಳೆದ ಎಂಟು ತಿಂಗಳಿಂದ ಅಪಾರ್ಟ್‌ಮೆಂಟ್‌ನ B304 ಫ್ಲಾಟ್‌ನಲ್ಲಿ ವಾಸವಾಗಿದ್ದರು. ಘಟನೆ ನಡೆದ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಆತ ಮೊದಲು ಫ್ಲಾಟ್‌ನೊಳಗೆ ಜೋರಾಗಿ ಗಲಾಟೆ ನಡೆಸಿದ್ದಾನೆ.

ನಂತರ ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಬಾಲ್ಕನಿಗೆ ಬಂದು ಕೆಳಗಿದ್ದ ಕಾರುಗಳು ಹಾಗೂ ಪಾರ್ಕಿಂಗ್ ಶೆಡ್ ಮೇಲೆ ಏರ್‌ಗನ್‌ನಿಂದ ಗುಂಡು ಹಾರಿಸಲು ಆರಂಭಿಸಿದ್ದಾನೆ. ಫೈರಿಂಗ್ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸೆಕ್ಯುರಿಟಿ ಗಾರ್ಡ್‌ಗಳ ಮೇಲೆಯೂ ಶೂಟ್ ಮಾಡಿದ್ದಾನೆ. ಈ ಘಟನೆ ಸುಮಾರು 45 ನಿಮಿಷಗಳ ಕಾಲ ಮುಂದುವರಿದಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳು ಭಯಭೀತರಾಗಿದ್ದರು.

ಫೈರಿಂಗ್‌ನಲ್ಲಿ ಹಲವು ಕಾರುಗಳ ಗಾಜುಗಳು ಜಖಂಗೊಂಡಿವೆ. ಕಾರು ಮಾಲೀಕ ಬಿದ್ಯುತ್ ನೀಡಿದ ದೂರಿನ ಮೇರೆಗೆ ಸೂರ್ಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸೋಕೋ ತಂಡ ಏರ್‌ಗನ್ ಬಾಲ್ಸ್ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ಏರ್‌ಗನ್‌ನ್ನೂ ಜಪ್ತಿ ಮಾಡಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ನನ್ನ ವಿರುದ್ಧದ ಆರೋಪ ಈಗಾಗಲೇ ವಜಾ ಆಗಿದೆ, ಸುಳ್ಳು ಸುದ್ದಿ ಹರಡಿದರೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಸಚಿವ ಸಿ. ಪುಟ್ಟರಂಗಶೆಟ್ಟಿ ಎಚ್ಚರಿಕೆ!

ಚಾಮರಾಜನಗರ: ಮಂತ್ರಿ ಸ್ಥಾನಕ್ಕಾಗಿ ಹಣ ಪಾವತಿಸಲಾಗಿದೆ ಹಾಗೂ ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಮಾಜಿ ಸಚಿವ ತಿಮ್ಮಾಪುರ ಮತ್ತು ಕಾಂಗ್ರೆಸ್ ಮುಖಂಡ ಎಸ್.ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಕುರಿತು ಸಚಿವ ಸಿ. ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದರು.

“ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು? ಅವರಿಗೆ ಅಷ್ಟೊಂದು ಹಣ ಎಲ್ಲಿಂದ ಬಂತು ಎಂಬುದನ್ನು ಆರೋಪ ಮಾಡುವವರನ್ನೇ ಕೇಳಿ. ಇಲ್ಲವಾದರೆ ನಾನು ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಬೇಕಾಗುತ್ತದೆ” ಎಂದು ಅವರು ಕಿಡಿಕಾರಿದರು.

ವಿಧಾನಸೌಧದಲ್ಲಿ ಹಣ ಪಡೆದಿದ್ದಾರೆ ಎಂಬ ಆರೋಪದ ಕುರಿತು ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆದಿದೆ. ಈ ಸಂಬಂಧ ಅಗತ್ಯ ಕ್ರಮಗಳೂ ಆಗಿವೆ ಎಂದು ಸಚಿವರು ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಸುಳ್ಳು ಆರೋಪ ಹಾಗೂ ಅಪಪ್ರಚಾರ ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಅವರು, “ಈ ರೀತಿಯ ಸುಳ್ಳು ಪ್ರಚಾರ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ” ಎಂದು ಹೇಳಿದರು.

“ಆಡಿಯೋ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅದು ಯಾರ ಧ್ವನಿ, ಯಾರು ಆ ರೀತಿಯ ಹೇಳಿಕೆ ನೀಡಿದ್ದಾರೆ ಹಾಗೂ ಅದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ” ಎಂದು ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ನಾನು ದಲಿತ, ಹಿಂದುಳಿದ ನಾಯಕ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಬಿ. ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಯ ಚೆಳ್ಳಗುರ್ಕಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ ಇದೀಗ ಅವಕಾಶ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ” ಎಂದು ಹೇಳಿದರು.

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಒಬ್ಬ ದಲಿತ ಹಾಗೂ ಹಿಂದುಳಿದ ನಾಯಕ ಬೆಳೆಯುವುದನ್ನು ಬಿಜೆಪಿ ನಾಯಕರು ಸಹಿಸಿಕೊಳ್ಳುತ್ತಿಲ್ಲ” ಎಂದು ಆರೋಪಿಸಿದರು.

ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಹಿರಿಯ ನಾಯಕರು. ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರು ಎಷ್ಟು ಜನ ಇದ್ದಾರೆ ಎಂಬುದನ್ನು ಮೊದಲು ನೋಡಬೇಕು” ಎಂದು ತಿರುಗೇಟು ನೀಡಿದರು.

“ನನಗೆ ಎಸ್‌ಐಟಿ ತನಿಖೆಯಲ್ಲಿ ಕ್ಲೀನ್ ಚಿಟ್ ದೊರೆತಿದೆ. ಕೇಂದ್ರ ಸರ್ಕಾರದ ಕುತಂತ್ರದಿಂದ ನನ್ನನ್ನು ಬಲಿಪಶು ಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಅವರು ಆರೋಪಿಸಿದರು.

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಬಿ. ನಾಗೇಂದ್ರ, “ಅವರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು. ನಾನೂ ಅದೇ ರೀತಿ ಮಾತನಾಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಮೊದಲು ಹೇಗೆ ಮಾತನಾಡಬೇಕು ಎಂಬುದನ್ನು ಕಲಿಯಬೇಕು” ಎಂದು ವಾಗ್ದಾಳಿ ನಡೆಸಿದರು.

2027ರ ಏಕದಿನ ವಿಶ್ವಕಪ್ʼಗೆ ಸನ್ನಿ ಆಯ್ಕೆ ಮಾಡಿದ ಬಲಿಷ್ಠ ಟೀಂ ಇಂಡಿಯಾ: ಆಕಾಶ್ ಚೋಪ್ರಾ ಕೊಟ್ಟಿದ್ದು 10ಕ್ಕೆ 9 ಅಂಕ!

0

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಕೇವಲ 14 ತಿಂಗಳುಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಭಾರತ ತಂಡದ ಸಂಭಾವ್ಯ ಸಂಯೋಜನೆ ಕುರಿತು ಚರ್ಚೆಗಳು ಜೋರಾಗಿವೆ. ಈ ಮಧ್ಯೆ ಭಾರತದ ದಿಗ್ಗಜ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಸುನಿಲ್ ಗವಾಸ್ಕರ್, ಮುಂಬರುವ ವಿಶ್ವಕಪ್‌ಗೆ ತಮ್ಮ ನೆಚ್ಚಿನ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಅದು ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಭಾರತವು ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ನಂತರ 2023ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಅಜೇಯವಾಗಿ ಫೈನಲ್‌ಗೇರಿದರೂ, ಅಂತಿಮ ಹಣಾಹಣಿಯಲ್ಲಿ ಸೋತು ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬಳಿಕ ಭಾರತ 2024ರ ಟಿ20 ವಿಶ್ವಕಪ್, 2025ರ ಚಾಂಪಿಯನ್ಸ್ ಟ್ರೋಫಿ ಹಾಗೂ 2026ರ ಟಿ20 ವಿಶ್ವಕಪ್ ಗೆದ್ದು ಸತತ ಮೂರು ಐಸಿಸಿ ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದೆ. ಇದೀಗ ಶುಭ್ಮನ್ ಗಿಲ್ ನಾಯಕತ್ವದಲ್ಲಿ 2027ರ ಏಕದಿನ ವಿಶ್ವಕಪ್ ಗೆಲ್ಲುವತ್ತ ತಂಡದ ಗುರಿ ನೆಟ್ಟಿದೆ.

ಗವಾಸ್ಕರ್ ಆಯ್ಕೆ ಮಾಡಿದ ತಂಡದಲ್ಲಿ ಶುಭ್ಮನ್ ಗಿಲ್ ನಾಯಕರಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್. ರಾಹುಲ್ ಟಾಪ್-5 ಬ್ಯಾಟರ್‌ಗಳಾಗಿ ಸ್ಥಾನ ಪಡೆದಿದ್ದಾರೆ. ಬ್ಯಾಕ್‌ಅಪ್ ವಿಕೆಟ್‌ಕೀಪರ್ ಆಗಿ ಇಶಾನ್ ಕಿಶನ್‌ಗೆ ಅವಕಾಶ ನೀಡಲಾಗಿದೆ.

ಆಲ್‌ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಏಕೈಕ ತಜ್ಞ ಸ್ಪಿನ್ನರ್ ಆಗಿದ್ದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.

ಆದರೆ ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರಿಗೆ ಗವಾಸ್ಕರ್ ತಮ್ಮ ಸಂಭಾವ್ಯ ತಂಡದಲ್ಲಿ ಸ್ಥಾನ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ. 2027ರ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವುದರಿಂದ ಅನುಭವಿ ವೇಗಿಗಳ ಅಗತ್ಯವಿದೆ ಎಂಬ ಚರ್ಚೆ ಈಗಾಗಲೇ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

ಇದೇ ವೇಳೆ, ಗವಾಸ್ಕರ್ ಆಯ್ಕೆ ಮಾಡಿದ ತಂಡವನ್ನು ಮಾಜಿ ಕ್ರಿಕೆಟಿಗ ಹಾಗೂ ವಿಶ್ಲೇಷಕ ಆಕಾಶ್ ಚೋಪ್ರಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಾಪ್-5 ಬ್ಯಾಟರ್‌ಗಳ ಆಯ್ಕೆಯ ಜೊತೆಗೆ ಆಲ್‌ರೌಂಡರ್ ಮತ್ತು ಬೌಲಿಂಗ್ ವಿಭಾಗದಲ್ಲೂ ಉತ್ತಮ ಸಮತೋಲನ ಸಾಧಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಹಾರ್ದಿಕ್ ಪಾಂಡ್ಯಗೆ ಬೆಂಬಲವಾಗಿ ನಿತೀಶ್ ಕುಮಾರ್ ರೆಡ್ಡಿ, ಜಡೇಜಾ ಜೊತೆಗೆ ಅಕ್ಷರ್ ಪಟೇಲ್ ಹಾಗೂ ಎಡಗೈ ವೇಗಿ ಅರ್ಶದೀಪ್ ಸಿಂಗ್‌ರನ್ನು ಆಯ್ಕೆ ಮಾಡಿರುವುದು ತಂಡದ ಬಲ ಹೆಚ್ಚಿಸಿದೆ. ಬುಮ್ರಾ, ಸಿರಾಜ್, ಕುಲ್ದೀಪ್ ಹಾಗೂ ಹರ್ಷಿತ್ ರಾಣಾ ಕೂಡ ಬ್ಯಾಟಿಂಗ್‌ನಲ್ಲಿ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಈ ತಂಡಕ್ಕೆ ನಾನು 10ಕ್ಕೆ 8.5ರಿಂದ 9 ಅಂಕ ನೀಡುತ್ತೇನೆ,” ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಸುನಿಲ್ ಗವಾಸ್ಕರ್ ಆಯ್ಕೆ ಮಾಡಿದ ಸಂಭಾವ್ಯ 15 ಸದಸ್ಯರ ಭಾರತ ತಂಡ:

ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ.

ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಸೈಬರ್ ಭದ್ರತೆವರೆಗೆ ಎಐ ಬಳಕೆ: ಆಂಥ್ರೋಪಿಕ್ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಗುರುವಾರ ಭೇಟಿ ಮಾಡಿದ್ದರು.

ಜವಾಬ್ದಾರಿಯುತ ಬಳಕೆ, ಡೇಟಾ ಗೌಪ್ಯತೆ ಮತ್ತು ಡೇಟಾ ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳುವ ಮೂಲಕ, ಸರ್ಕಾರ ಹಾಗೂ ಉದ್ಯಮಗಳಿಗಾಗಿ ಅನ್ವಯಿಕ ಎಐ (Applied AI) ಪರಿಹಾರಗಳ “ಪ್ರಯೋಜನಕಾರಿ ಅಳವಡಿಕೆ”ಯ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಪ್ರಸ್ತಾವಿತ ‘ಎಐ ವಿಶ್ವವಿದ್ಯಾಲಯ’, ಬೃಹತ್ ಮಟ್ಟದ ಕೌಶಲ್ಯಾಭಿವೃದ್ಧಿ ಯೋಜನೆಗಳು ಮತ್ತು ಡೀಪ್-ಟೆಕ್ ಅನ್ವೇಷಣೆಗಳಿಗೆ ನೀಡುವ ಬೆಂಬಲವನ್ನು ಒಳಗೊಂಡಂತೆ ಸಮಗ್ರ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಕರ್ನಾಟಕದ ದೃಷ್ಟಿಕೋನವನ್ನು ಮುಖ್ಯಮಂತ್ರಿಗಳು ವಿವರಿಸಿದರು. ದೇಶದಲ್ಲೇ ಅತಿ ದೊಡ್ಡ ಎಐ ಪ್ರಮಾಣೀಕೃತ ಪ್ರತಿಭಾವಂತರನ್ನು ರೂಪಿಸಲು, ರಾಜ್ಯದ ‘ನಿಪುಣ’ (NIPUNA) ಕಾರ್ಯಕ್ರಮದಡಿ ‘ಕ್ಲಾಡ್’ (Claude) ಸರ್ಟಿಫಿಕೇಶನ್ ಸೇರಿದಂತೆ ಎಐ-ಸಂಬಂಧಿತ ಸರ್ಟಿಫಿಕೇಶನ್ ಕೋರ್ಸ್‌ಗಳನ್ನು ಪರಿಚಯಿಸುವ ಬಗ್ಗೆ ಚರ್ಚಿಸಿದರು.

ಆರೋಗ್ಯ ರಕ್ಷಣೆ ಮತ್ತು ಲೈಫ್ ಸೈನ್ಸಸ್ ಕ್ಷೇತ್ರಗಳಲ್ಲಿ ಎಐ ಬಳಕೆ, ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸಹಯೋಗದೊಂದಿಗೆ ವೈಜ್ಞಾನಿಕ ಸಂಶೋಧನೆಗಾಗಿ ಎಐ ಬಳಸುವ ಕುರಿತು ಚರ್ಚೆಗಳು ನಡೆದವು. ಉನ್ನತ ಶಿಕ್ಷಣದಲ್ಲಿ ಎಐ ಆಧಾರಿತ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ಆಂಥ್ರೋಪಿಕ್ ನಿಯೋಗವು ಆಸಕ್ತಿ ವ್ಯಕ್ತಪಡಿಸಿತು.

ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸ್ಥಳೀಯತೆ (Data Residency) ಮತ್ತು ಸಾರ್ವಭೌಮ ಸರ್ಕಾರಿ ಡೇಟಾವನ್ನು ರಾಜ್ಯದೊಳಗಿನ ಸರ್ವರ್‌ಗಳಲ್ಲೇ ಸಂಗ್ರಹಿಸುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆಯೂ ಪ್ರಮುಖವಾಗಿ ಚರ್ಚಿಸಲಾಯಿತು. ರಾಜ್ಯ ಸರ್ಕಾರವು ತನ್ನ “ಸರ್ಕಾರಕ್ಕೆ ಮೊದಲ ಆದ್ಯತೆ” (Government First) ನೀತಿಯನ್ನು ಪುನರುಚ್ಚರಿಸಿತು. ಎಐ ಆಧಾರಿತ ಸಾರ್ವಜನಿಕ ಪರಿಹಾರಗಳ ಅಭಿವೃದ್ಧಿಗೆ ಅನುಕೂಲವಾಗುವಂತೆ ಸರ್ಕಾರಿ ಡೇಟಾಸೆಟ್‌ಗಳನ್ನು ಸುರಕ್ಷಿತವಾಗಿಡುವ ಬಗ್ಗೆ ಚರ್ಚಿಸಿದರು.

ಇ-ಆಡಳಿತ, ಗೃಹ ಇಲಾಖೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಲ್ಲಿ ಎಐ ಅನ್ವಯಿಕೆಗಳನ್ನು ಗುರುತಿಸಲು ಇಲಾಖಾವಾರು ಕಾರ್ಯಪಡೆಗಳನ್ನು ರಚಿಸುವ ಕುರಿತೂ ಸಭೆಯಲ್ಲಿ ಪರಿಶೀಲಿಸಲಾಯಿತು. ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮಗಳು, ನಾಗರಿಕರ ಡೇಟಾ ಮತ್ತು ಗೌಪ್ಯತೆಯ ರಕ್ಷಣೆ ಸೇರಿದಂತೆ ಜವಾಬ್ದಾರಿಯುತ ಎಐ ಪದ್ಧತಿಗಳನ್ನು ಭವಿಷ್ಯದ ಯೋಜನಾ ಅಳವಡಿಕೆಗಳ ಅಗತ್ಯ ಅಂಶಗಳಾಗಿ ಚರ್ಚಿಸಲಾಯಿತು.

ಸರ್ಕಾರಿ ವ್ಯವಸ್ಥೆಗಳಲ್ಲಿ ನಡೆಯುವ ವಂಚನೆಗಳನ್ನು ತಡೆಯಲು ಹಾಗೂ ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ ಹೇಗೆ ನೆರವಾಗುತ್ತದೆ ಎಂಬುದರ ಕುರಿತು ಮುಖ್ಯಮಂತ್ರಿಗಳು ಆಂಥ್ರೋಪಿಕ್‌ನ ತಾಂತ್ರಿಕ ಸಲಹೆ ಕೋರಿದರು.

ಎಐ ಶಿಕ್ಷಣ ಮತ್ತು ಸಂಶೋಧನೆಯನ್ನು ಬಲಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಆಂಥ್ರೋಪಿಕ್‌ನ ‘ಕ್ಲಾಡ್ ಎಐ’ ವೇದಿಕೆಯ ಲಭ್ಯತೆಗೆ ರಿಯಾಯಿತಿ/ಸಬ್ಸಿಡಿ ನೀಡುವಂತೆ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು. ‘ಸಿಎಂ 100 ದಿನಗಳ’ ಮೈಲಿಗಲ್ಲನ್ನು ಈ ಸಹಯೋಗದೊಂದಿಗೆ ಸಾಧಿಸುವ ಕುರಿತೂ ಚರ್ಚಿಸಲಾಯಿತು.

ಕರ್ನಾಟಕದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗೆ ಬೆಂಬಲ ನೀಡಲು, ವಿಶೇಷವಾಗಿ ಡೀಪ್-ಟೆಕ್ ಕ್ಷೇತ್ರದಲ್ಲಿರುವ ರಾಜ್ಯದ 20,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಆಂಥ್ರೋಪಿಕ್‌ನಿಂದ ಬೆಂಬಲ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಯಿತು. ತೆರಿಗೆ ಸಂಗ್ರಹಣೆ ಮತ್ತು ಸಾರ್ವಜನಿಕ ಸೇವಾ ವಿತರಣೆಯಂತಹ ಕ್ಷೇತ್ರಗಳಲ್ಲಿ ಎಐ ಅನ್ವಯಿಕೆಗಳನ್ನು ಪ್ರಾಯೋಗಿಕ ಯೋಜನೆಗಳಾಗಿ (Pilot Projects) ಗುರುತಿಸಲಾಯಿತು.

ಎಐ ತಂತ್ರಜ್ಞಾನಗಳನ್ನು ವಿಶಾಲವಾದ ಸಾಮಾಜಿಕ ಒಳಿತಿಗಾಗಿ ಬಳಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರೇತರ ಸಂಸ್ಥೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳೊಂದಿಗಿನ ಸಹಭಾಗಿತ್ವದ ಕುರಿತೂ ಸಭೆಯು ಪರಿಶೀಲಿಸಿತು.

ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ ಎನ್., ಮುನೀಶ್ ಮೌದ್ಗಿಲ್ ಹಾಗೂ ಸಿಎಂ ಹಣಕಾಸು ಸಲಹೆಗಾರ ಎಲ್. ಕೆ. ಅತೀಕ್, ಆಂಥ್ರೋಪಿಕ್ ಸಂಸ್ಥೆಯ ಪರವಾಗಿ ಅಂತಾರಾಷ್ಟ್ರೀಯ ನೀತಿ ವಿಭಾಗದ ಮುಖ್ಯಸ್ಥ ಮೈಕೆಲ್ ಸೆಲ್ಲಿಟೋ, ಅಂತಾರಾಷ್ಟ್ರೀಯ ಮಾರುಕಟ್ಟೆಗಳ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ ಸಿಯೌರಿ, ಭಾರತದ ವ್ಯವಸ್ಥಾಪಕ ನಿರ್ದೇಶಕಿ ಐರಿನಾ ಘೋಷ್, ಭಾರತದ ನೀತಿ ವಿಭಾಗದ ಮುಖ್ಯಸ್ಥ ಆಮ್ಲಾನ್ ಮೊಹಾಂತಿ, ಮತ್ತು ಸಾರ್ವಜನಿಕ ವಲಯ, ಆರೋಗ್ಯ ಹಾಗೂ ಶಿಕ್ಷಣ ವಿಭಾಗದ ಗೋ-ಟು-ಮಾರ್ಕೆಟ್ ಉಸ್ತುವಾರಿ ಸಮರ್ಥ್ ಮಸ್ಸೋನ್ ಅವರು ಉಪಸ್ಥಿತರಿದ್ದರು.