ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯ ವೇಗವಾಗಿ ತುಂಬುತ್ತಿದೆ.
ಇದರ ಪರಿಣಾಮ ಹಿನ್ನೀರಿನಲ್ಲಿರುವ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ಈ ವಿಠ್ಠಲ ದೇವಸ್ಥಾನ 1978ರಲ್ಲಿ ಹಿಡಕಲ್ ಜಲಾಶಯ ನಿರ್ಮಾಣವಾದ ಬಳಿಕ ನೀರಿನಲ್ಲೇ ಉಳಿದಿದೆ. ಗ್ರಾಮವನ್ನು ಸ್ಥಳಾಂತರ ಮಾಡಲಾಗಿದ್ದರೂ, ಐತಿಹಾಸಿಕ ದೇವಾಲಯವನ್ನು ಸ್ಥಳಾಂತರಿಸಿರಲಿಲ್ಲ.
ಈ ವರ್ಷ ಬೇಸಿಗೆಯಲ್ಲಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಇಳಿಕೆಯಾಗಿದ್ದಾಗ ದೇವಸ್ಥಾನ ಮತ್ತೆ ಭಕ್ತರಿಗೆ ದರ್ಶನ ನೀಡಿತ್ತು. ಸಾವಿರಾರು ಭಕ್ತರು ಭೇಟಿ ನೀಡಿ ಶ್ರೀ ವಿಠ್ಠಲನ ದರ್ಶನ ಪಡೆದಿದ್ದರು. ಆದರೆ ಈಗ ಮಳೆ ತೀವ್ರಗೊಂಡು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾದ ಪರಿಣಾಮ ದೇವಸ್ಥಾನ ಮತ್ತೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
ವರ್ಷಗಳ ಕಾಲ ನೀರಿನಲ್ಲೇ ಇದ್ದರೂ ದೇವಸ್ಥಾನದ ಕಟ್ಟಡಕ್ಕೆ ಯಾವುದೇ ಗಮನಾರ್ಹ ಹಾನಿಯಾಗದಿರುವುದು ವಿಶೇಷ. ಇದೇ ಕಾರಣದಿಂದ ಈ ಅಪರೂಪದ ದೇವಾಲಯವನ್ನು ನೋಡಲು ಹಾಗೂ ದರ್ಶನ ಪಡೆಯಲು ಪ್ರತಿ ವರ್ಷ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಸದ್ಯ ಘಟಪ್ರಭಾ ನದಿಯ ನೀರಿನ ಹರಿವು ನಿರಂತರವಾಗಿ ಹೆಚ್ಚುತ್ತಿದ್ದು, ಹಿಡಕಲ್ ಜಲಾಶಯವೂ ಭರ್ತಿಯಾಗುವ ಹಂತ ತಲುಪಿದೆ. ಹಿನ್ನೀರಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

