ಯಾದಗಿರಿ: ಬಡವರಿಗಾಗಿ ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಂಧೆ ನಡೆಸುತ್ತಿದ್ದ ಪ್ರಕರಣ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾ ಬಳಿ ಇರುವ ಅಕ್ರಮ ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 82 ಕ್ವಿಂಟಾಲ್ ಸರ್ಕಾರಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಬಿರಾದಾರ್ ನೇತೃತ್ವದ ತಂಡ, ಪೊಲೀಸರ ಸಹಕಾರದೊಂದಿಗೆ ಸೋಮವಾರ ರಾತ್ರಿ ದಾಳಿ ನಡೆಸಿದೆ. ಈ ವೇಳೆ ಗೋಡೌನ್ನಲ್ಲಿ 202 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 82 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ.
ಜಪ್ತಿ ಮಾಡಿದ ಅಕ್ಕಿಯನ್ನು ಲಾರಿಗೆ ತುಂಬಿಸಿ ಸಾಗಿಸಲು ಮುಂದಾದಾಗ ಸ್ಥಳಕ್ಕೆ ಬಂದ ಕೆಲವರು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. “ಲಾರಿ ಸಮೇತ ಅಕ್ಕಿಯನ್ನು ಸುಟ್ಟು ಹಾಕುತ್ತೇವೆ” ಎಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಲಾರಿಯನ್ನು ಗೋಗಿ ಪೊಲೀಸ್ ಠಾಣೆ ಆವರಣದಲ್ಲಿ ರಾತ್ರಿ ನಿಲ್ಲಿಸಿದ್ದಾರೆ.
ಬಳಿಕ ಮಂಗಳವಾರ ಬೆಳಗ್ಗೆ ಲಾರಿಯನ್ನು ಆಹಾರ ಇಲಾಖೆಯ ಮುಖ್ಯ ಗೋಡೌನ್ಗೆ ಕೊಂಡೊಯ್ದು ಅಕ್ಕಿಯನ್ನು ಅನ್ಲೋಡ್ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಿಶನ್ ರಾಠೋಡ್ ಅವರ ಪುತ್ರ ಲೋಹಿತ್ ರಾಠೋಡ್ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ, ಅದನ್ನು ಅಕ್ರಮವಾಗಿ ಸಂಗ್ರಹಿಸಿ ನೆರೆ ರಾಜ್ಯಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ಕಿಯನ್ನು ರೈಸ್ ಮಿಲ್ಗಳಲ್ಲಿ ಪಾಲಿಶ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಡವರಿಗಾಗಿ ಮೀಸಲಾದ ಪಡಿತರ ಅಕ್ಕಿ ಅಕ್ರಮ ದಂಧೆಗೆ ಬಳಕೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಕ್ರಮ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

