Home Blog

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

0

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ ಘಟನೆ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕವನ್ ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಕಳೆದುಕೊಂಡಿದ್ದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಸದ್ಯ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ನನಗೆ ಅಧಿಕಾರ ಇದ್ದರೆ KAT, KPSCಯನ್ನೇ ರದ್ದು ಮಾಡುತ್ತಿದ್ದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷರ ಪುತ್ರಿ ವಿರುದ್ಧ ನಕಲಿ ಆದಾಯ ಪ್ರಮಾಣ ಪತ್ರದ ಆರೋಪದಡಿ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಅಧಿಕಾರ ಇದ್ದರೆ ಕೆಎಟಿ (KAT) ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ” ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನಕಲಿ ಆದಾಯ ಪ್ರಮಾಣ ಪತ್ರದ ಕುರಿತು ದೂರು ದಾಖಲಾಗಿದ್ದು, ಬುಧವಾರ ರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ. ಕೆಪಿಎಸ್ಸಿ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಅದರ ವಿರುದ್ಧ ಯಾವುದೇ ಕ್ರಮವನ್ನು ಕಾನೂನು ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿಯೇ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

“ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡುವುದು? ಇದು ನಮ್ಮ ಕೈಯಲ್ಲಿಲ್ಲ. ನನಗೆ ಅಧಿಕಾರ ಇದ್ದರೆ ಕೆಎಟಿ ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ. ಆದರೆ ಅದಕ್ಕಾಗಿ ಹೊಸ ಕಾನೂನು ತರಬೇಕಾಗುತ್ತದೆ. ಕಾನೂನು ರೂಪಿಸುವ ಅಧಿಕಾರ ಶಾಸನಸಭೆಗೆ ಇದೆ. ಎಲ್ಲರೂ ಒಟ್ಟಾಗಿ ನಿರ್ಧಾರ ಕೈಗೊಂಡರೆ ವ್ಯವಸ್ಥೆಯನ್ನು ಶುದ್ಧೀಕರಿಸಬಹುದು” ಎಂದು ಹೇಳಿದರು.

ಯುವಕರ ಭವಿಷ್ಯದೊಂದಿಗೆ ಆಟವಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಹೇಳಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲದೆ ಯುವಕರು ನಡೆಸಿದ ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಬೆಳವಣಿಗೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಕರಣದ ಸತ್ಯಾಸತ್ಯತೆ ದಾಖಲೆಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಲಿದೆ. ದಾಖಲೆಗಳನ್ನು ಪರಿಶೀಲಿಸದೇ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಮುಖ್ಯಮಂತ್ರಿ ಕೂಡ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಈಗಾಗಲೇ ಕಾನೂನು ತರಲಾಗಿದ್ದು, ಅದರ ನಿಯಮಾವಳಿಗಳನ್ನು ಒಂದು ವಾರದಿಂದ ಹತ್ತು ದಿನಗಳೊಳಗೆ ಅಂತಿಮಗೊಳಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು.

ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ ನಕಲಿ ಆದಾಯ ಪ್ರಮಾಣ ಪತ್ರದ ಆರೋಪವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅಗತ್ಯ ದಾಖಲೆಗಳನ್ನು ಸರ್ಕಾರ ರಾಜ್ಯಪಾಲರಿಗೆ ಸಲ್ಲಿಸಲಿದೆ. ಆಯೋಗದೊಳಗಿನ ಪಾರದರ್ಶಕತೆ ಮತ್ತು ಹೊಂದಾಣಿಕೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿದ್ದು, ಆಯೋಗವೇ ತನ್ನ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಇಂತಹ ಬೆಳವಣಿಗೆಗಳು ಯಾವುದೇ ಸರ್ಕಾರಕ್ಕೂ ಒಳ್ಳೆಯದಲ್ಲ. ಇತರೆ ರಾಜ್ಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿಗಳನ್ನು ಪರಿಶೀಲಿಸಿ, ಕರ್ನಾಟಕದಲ್ಲಿಯೂ ಸೂಕ್ತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ವೀಸಾ ಅವಧಿ ಮುಗಿದರೂ ಭಾರತದಲ್ಲೇ ವಾಸ: ಪಾಕಿಸ್ತಾನ ಮೂಲದ ಮಹಿಳೆ, ಪುತ್ರ ಬಂಧನ

ಚಿಕ್ಕಬಳ್ಳಾಪುರ: ಪಾಕಿಸ್ತಾನ ಮೂಲದ ಮಹಿಳೆ ಮತ್ತು ಆಕೆಯ ಪುತ್ರ ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬಾಗೇಪಲ್ಲಿ ಪೊಲೀಸರು ಫರ್ಹಾನಾಜ್ ಹಾಗೂ ಪುತ್ರ ಮೊಹಮ್ಮದ್ ಫರ್ದೀನ್ ಖಾನ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ತನಿಖೆಯ ವೇಳೆ, ಆರೋಪಿಗಳು ಭಾರತೀಯ ಪೌರತ್ವ ಹೊಂದಿಲ್ಲದಿದ್ದರೂ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಬ್ಯಾಂಕ್ ಖಾತೆಗಳನ್ನು ಹೊಂದಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ದಾಖಲೆಗಳು ಹೇಗೆ ಸೃಷ್ಟಿಯಾಗಿವೆ ಎಂಬ ಕುರಿತು ತನಿಖೆ ನಡೆಯುತ್ತಿದೆ.

ಫರ್ಹಾನಾಜ್ ಅವರು ಬಾಗೇಪಲ್ಲಿ ತಾಲೂಕಿನ ನಿವಾಸಿ ಅಯೂಬ್ ಖಾನ್ ಅವರನ್ನು ವಿವಾಹವಾಗಿದ್ದು, ಅವರ ಪತಿ ಪ್ರಸ್ತುತ ಕತಾರ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಕುಟುಂಬವು ದಾಸಗಾರೆಪಲ್ಲಿ ಗ್ರಾಮದಲ್ಲೇ ವಾಸಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವೀಸಾ ಅವಧಿ ನವೀಕರಣವಾಗದೇ ಇದ್ದರೂ ಭಾರತದಲ್ಲೇ ಉಳಿದಿರುವ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಕ್ರಮ ವಾಸ ಹಾಗೂ ದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ತನಿಖೆಯ ವ್ಯಾಪ್ತಿಗೆ ಒಳಪಡಿಸಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

0

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ನಡೆದಿದೆ.

ರಾಜ್‌ಕುಮಾರ್ (35) ಎಂಬಾತ ಈ ಪ್ರಕರಣದ ಪ್ರಮುಖ ಆರೋಪಿ. ಆತ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ ನಾಲ್ಕು ಮತ್ತು ಒಂದು ವರ್ಷದ ಇಬ್ಬರು ಪುತ್ರರನ್ನು ಮನೆಯಲ್ಲಿ ಹತ್ಯೆ ಮಾಡಿದ್ದಾನೆ.

ಬಳಿಕ ತನ್ನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದ 17 ವರ್ಷದ ಬಾಲಕಿಯ ಮನೆಗೆ ತೆರಳಿ, ಆಕೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಅಪಹರಿಸುವ ಮುನ್ನ ಆಕೆಯ 45 ವರ್ಷದ ತಾಯಿ ಹಾಗೂ 65 ವರ್ಷದ ಅಜ್ಜಿಯನ್ನೂ ಹತ್ಯೆ ಮಾಡಿದ್ದಾನೆ. ಘಟನೆಯ ವೇಳೆ ಮನೆಯಲ್ಲಿದ್ದ ಅಂಗವಿಕಲ 20 ವರ್ಷದ ಯುವತಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗಳ ಬಳಿಕ ರಾಜ್‌ಕುಮಾರ್ ತನ್ನ ತಂದೆಗೆ ಕರೆ ಮಾಡಿ ತಾನು ಆರು ಮಂದಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಪರಾರಿಯಾಗಿದ್ದಾನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಕರಣ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ತರುಣ್ ಜೋಶಿ, ಆರೋಪಿಯ ಇರುವಿಕೆ ಕುರಿತು ಕೆಲವು ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್‌ಕುಮಾರ್ ಮತ್ತು ಪಾರ್ವತಿ 2018ರಲ್ಲಿ ಪ್ರೇಮ ವಿವಾಹವಾಗಿದ್ದರು. ಆರಂಭದಲ್ಲಿ ಗ್ರಾಮದ ಹೊರವಲಯದಲ್ಲಿ ವಾಸಿಸುತ್ತಿದ್ದ ದಂಪತಿ ನಂತರ ಶಾಬಾದ್ ಹಾಗೂ ದೇವಲಗುಡದಲ್ಲಿರುವ ಮನೆಗಳಲ್ಲಿ ನೆಲೆಸಿದ್ದರು.

ಈ ವರ್ಷದ ಮೇ ತಿಂಗಳಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜ್‌ಕುಮಾರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆತ ತಲೆಮರೆಸಿಕೊಂಡಿದ್ದರೂ, ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸುವ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದ ಕಾರಣ 20 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ಪಡೆದಿದ್ದ.

ಆರೋಪಿಯ ಮಾನಸಿಕ ಸ್ಥಿತಿ ಸ್ಥಿರವಾಗಿರಲಿಲ್ಲ ಹಾಗೂ ಜೂಜಾಟದ ಚಟ ಮತ್ತು ಸಾಲದ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಲವು ಬಾರಿ ಕೌನ್ಸೆಲಿಂಗ್‌ಗೆ ಕರೆಯಲಾಗಿದ್ದರೂ ಆತ ಹಾಜರಾಗಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ನಿಯ ಶವ ಪತ್ತೆಯಾದ ಕೋಣೆಯಲ್ಲಿ ಹಲ್ಲೆ ನಡೆಸಿದ ಕುರುಹುಗಳು ಪತ್ತೆಯಾಗಿದ್ದು, ಮಕ್ಕಳು ನಿದ್ರೆಯಲ್ಲಿದ್ದಾಗಲೇ ಹತ್ಯೆಗೀಡಾಗಿರುವ ಸಾಧ್ಯತೆ ಇದೆ ಎಂದು ಸಂಬಂಧಿಕರು ಶಂಕಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.

ಲೋಕಾಯುಕ್ತರಿಗೆ ನಿಂದನಾತ್ಮಕ ಪತ್ರ ಬರೆದ ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಮತ್ತು ಉಪಲೋಕಾಯುಕ್ತ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಪದಗಳನ್ನು ಬಳಸಿ ಪತ್ರ ಬರೆದ ಪ್ರಕರಣದಲ್ಲಿ ಬಳ್ಳಾರಿ ಮೂಲದ ವ್ಯಕ್ತಿಯೊಬ್ಬರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿದೆ.

ಶಿಕ್ಷೆಗೆ ಗುರಿಯಾದವರು ಬಳ್ಳಾರಿಯ ಹಾವಿನಾಳ ಬಸಣ್ಣ ಕಾಂಪೌಂಡ್ ನಿವಾಸಿ ಎಸ್.ಜಿ. ಶಂಕರ್ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕರಣದ ವಿವರಗಳ ಪ್ರಕಾರ, ಎಸ್.ಜಿ. ಶಂಕರ್ ಅವರು 2015ರಲ್ಲಿ ಬಳ್ಳಾರಿ ಮುಜರಾಯಿ ಇಲಾಖೆಯ ಜಂಟಿ ಆಯುಕ್ತರ ವಿರುದ್ಧ ಅಧಿಕಾರ ದುರುಪಯೋಗ ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೇವಸ್ಥಾನದ ಸಮೀಪದ ಅಂಗಡಿಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಆದರೆ, ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ ಜಂಟಿ ಆಯುಕ್ತರು ಕಾನೂನುಬದ್ಧವಾಗಿಯೇ ಅಂಗಡಿಗಳನ್ನು ತೆರವುಗೊಳಿಸಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಪ್ರಕರಣವನ್ನು ಮುಕ್ತಾಯಗೊಳಿಸಿ, ಅದರ ಮಾಹಿತಿ ನೀಡುವ ಪತ್ರವನ್ನು ದೂರುದಾರರಿಗೆ ಕಳುಹಿಸಿದ್ದರು.

ಪ್ರಕರಣ ಮುಕ್ತಾಯಗೊಂಡಿದ್ದರಿಂದ ಅಸಮಾಧಾನಗೊಂಡ ಶಂಕರ್, 2022ರಲ್ಲಿ ಉಪಲೋಕಾಯುಕ್ತರಿಗೆ ಹಾಗೂ 2023ರಲ್ಲಿ ಲೋಕಾಯುಕ್ತರಿಗೆ ಅವಹೇಳನಕಾರಿ ಮತ್ತು ನಿಂದನಾತ್ಮಕ ಪದಗಳನ್ನು ಬಳಸಿ ಪತ್ರಗಳನ್ನು ಬರೆದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಸಂಸ್ಥೆ, ಅವರ ವಿರುದ್ಧ ಕಾನೂನು ಕ್ರಮ ಏಕೆ ಕೈಗೊಳ್ಳಬಾರದು ಎಂದು ನೋಟಿಸ್ ಜಾರಿ ಮಾಡಿತ್ತು. ಆದರೆ, ನೋಟಿಸ್‌ಗೆ ಉತ್ತರಿಸುವ ಬದಲಿಗೆ ಮತ್ತೊಮ್ಮೆ ನಿಂದನಾತ್ಮಕ ಭಾಷೆಯಲ್ಲೇ ಪತ್ರ ಬರೆದು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ, ಎಸ್.ಜಿ. ಶಂಕರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳಗಾವಿಯ ಐತಿಹಾಸಿಕ ಯಲ್ಲಮ್ಮ ದೇವಿ ದೇವಸ್ಥಾನವನ್ನು ಸಾರ್ವಜನಿಕ ಟ್ರಸ್ಟ್‌ ಎಂದು ಘೋಷಿಸಿದ ಹೈಕೋರ್ಟ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಐತಿಹಾಸಿಕ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವನ್ನು ಸಾರ್ವಜನಿಕ ಟ್ರಸ್ಟ್ ಎಂದು ಘೋಷಿಸಿರುವ ಕರ್ನಾಟಕ ಹೈಕೋರ್ಟ್, 1950ರ ಬಾಂಬೆ ಪಬ್ಲಿಕ್ ಟ್ರಸ್ಟ್ (ಬಿಪಿಟಿ) ಕಾಯ್ದೆಯಡಿ ದೇವಾಲಯವನ್ನು ಸಾರ್ವಜನಿಕ ಟ್ರಸ್ಟ್ ಆಗಿ ನೋಂದಾಯಿಸಲು ಆದೇಶ ನೀಡಿದೆ.

ಜಲಾಲಪುರ ಗ್ರಾಮದ ಮಲ್ಲಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ. ದತ್ತಿ ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾ ನ್ಯಾಯಾಲಯ ದೇವಾಲಯವನ್ನು ಸಾರ್ವಜನಿಕ ಟ್ರಸ್ಟ್ ಎಂದು ಪರಿಗಣಿಸಲು ನಿರಾಕರಿಸಿ ನೀಡಿದ್ದ ಆದೇಶಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ತೀರ್ಪಿನಲ್ಲಿ, ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವು ಪ್ರಾಚೀನ ಧಾರ್ಮಿಕ ಕ್ಷೇತ್ರವಾಗಿದ್ದು, ಹಿಂದೂ ಸಮುದಾಯದ ಸಾರ್ವಜನಿಕರು ಪೂಜೆ ಸಲ್ಲಿಸಲು ಹಾಗೂ ದೇವರಿಗೆ ಸಮರ್ಪಣೆ ಸಲ್ಲಿಸಲು ಹಕ್ಕಿನ ಆಧಾರದ ಮೇಲೆ ಬಳಸುತ್ತಿರುವ ಸಾರ್ವಜನಿಕ ಆರಾಧನಾ ಸ್ಥಳವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬಾಂಬೆ ಪಬ್ಲಿಕ್ ಟ್ರಸ್ಟ್ ಕಾಯ್ದೆಯ ಸೆಕ್ಷನ್ 2(17)ರ ಪ್ರಕಾರ ಈ ದೇವಾಲಯವು ‘ದೇವಾಲಯ’ದ ವ್ಯಾಖ್ಯಾನಕ್ಕೆ ಒಳಪಡುವುದರಿಂದ, ಸೆಕ್ಷನ್ 2(13)ರ ಅಡಿಯಲ್ಲಿ ಸಾರ್ವಜನಿಕ ಟ್ರಸ್ಟ್ ಎಂದು ಪರಿಗಣಿಸಲು ಅಗತ್ಯವಾದ ಎಲ್ಲಾ ಕಾನೂನು ಮಾನದಂಡಗಳನ್ನು ಪೂರೈಸಿದೆ ಎಂದು ಪೀಠ ತಿಳಿಸಿದೆ.

ದೇವಾಲಯದಲ್ಲಿ ಕೆಲವು ಕುಟುಂಬಗಳಿಗೆ ಪೂಜೆ ನಡೆಸುವ ಆನುವಂಶಿಕ ಹಕ್ಕುಗಳಿರುವ ಕಾರಣ ಅದು ಖಾಸಗಿ ಆಸ್ತಿ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಭಕ್ತರು ಸ್ವತಂತ್ರವಾಗಿ ಪ್ರವೇಶಿಸಿ ಪೂಜೆ ಸಲ್ಲಿಸುವ ಹಕ್ಕು ಹೊಂದಿರುವುದರಿಂದ ಅದನ್ನು ಸಾರ್ವಜನಿಕ ಟ್ರಸ್ಟ್ ಆಗಿಯೇ ನೋಂದಾಯಿಸಬೇಕು ಎಂದು ಆದೇಶಿಸಿದೆ.

ಅಲ್ಲದೆ, ಅರ್ಚಕರು ಅಥವಾ ಪೂಜಾರಿಗಳು ಟ್ರಸ್ಟಿಗಳಾಗಲು ಯಾವುದೇ ಕಾನೂನು ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಭಕ್ತರು ಮತ್ತು ದೇವರ ನಡುವೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುವ ಅರ್ಚಕರು ದೇವಾಲಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರಣ ಟ್ರಸ್ಟಿಗಳಾಗಲು ಅರ್ಹರು ಎಂದು ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, 1994ರ ಮೂಲ ಅರ್ಜಿಯಲ್ಲಿ ಉಲ್ಲೇಖಿಸಲಾದ ಟ್ರಸ್ಟಿಗಳ ಜೊತೆಗೆ ಅರ್ಚಕರ ಎರಡು ಕುಟುಂಬಗಳಿಂದ ತಲಾ ಒಬ್ಬರನ್ನು ದೇವಾಲಯದ ಟ್ರಸ್ಟಿಗಳಾಗಿ ಪರಿಗಣಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗೆಪಾಳ್ಯದ ಗಣೇಶ ದೇವಸ್ಥಾನದ ಸಮೀಪದ ಮನೆಯಲ್ಲಿ ತಾಯಿ, ಅಜ್ಜಿ ಹಾಗೂ ಮಾವನನ್ನು ಬರ್ಬರವಾಗಿ ಹತ್ಯೆಗೈದ ಬಳಿಕ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಮಂಗಳಮ್ಮ (55), ನಂಜಮ್ಮ (65) ಹಾಗೂ ಸತೀಶ್ (50) ಎಂದು ಗುರುತಿಸಲಾಗಿದೆ. ಆರೋಪಿ ಪ್ರಶಾಂತ್ (34) ಎಂಬಾತ ಈ ಕೃತ್ಯ ಎಸಗಿದ್ದಾನೆ.

ಕುಟುಂಬ ಕಳೆದ ಏಳೆಂಟು ವರ್ಷಗಳಿಂದ ಕೊಟ್ಟಿಗೆಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಪ್ರಶಾಂತ್ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ, ಕಳೆದ ಒಂದು ವರ್ಷದಿಂದ ಉದ್ಯೋಗಕ್ಕೆ ಹೋಗುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಶನಿವಾರ ಬೆಳಿಗ್ಗೆ ಕುಟುಂಬದ ಮುಖ್ಯಸ್ಥ ಕೆಲಸಕ್ಕೆ ತೆರಳಿದ್ದ ವೇಳೆ, ಪ್ರಶಾಂತ್ ಮನೆಯಲ್ಲಿ ಇದ್ದ ತಾಯಿ, ಅಜ್ಜಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮನೆಯ ಮುಖ್ಯದ್ವಾರದಲ್ಲೇ ತಾಯಿ ಮತ್ತು ಅಜ್ಜಿಯನ್ನು ಹತ್ಯೆ ಮಾಡಿದ್ದರೆ, ಮಾವ ಸತೀಶ್ ಅವರನ್ನು ಮನೆಯ ಕೋಣೆಯೊಳಗೆ ಕೊಚ್ಚಿ ಕೊಲೆ ಮಾಡಿದ್ದಾನೆ.

ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಗಮನಿಸಿದ ಮನೆ ಮಾಲೀಕರು ಆತನನ್ನು ಮನೆಯೊಳಗೆ ಕೂಡಿಹಾಕಿದ್ದಾರೆ. ಈ ವೇಳೆ ಪ್ರಶಾಂತ್ ಮನೆಯೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಲ್ಲಿಯೂ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದರೂ, ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಲಘು ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.

ಇದೇ ವೇಳೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

 

ದಸರಾದಲ್ಲಿ ಕಂಬಳ ಆಯೋಜನೆಗೆ ಸರ್ಕಾರ ಚಿಂತನೆ: ಯದುವೀರ್-ಪ್ರತಾಪ್ ಸಿಂಹ ಆಕ್ಷೇಪ

0

ಬೆಂಗಳೂರು/ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಕಂಬಳ ಕ್ರೀಡೆಯನ್ನು ಸೇರಿಸುವ ಪ್ರಸ್ತಾವ ವಿವಾದಕ್ಕೆ ಕಾರಣವಾಗಿದೆ. ಸರ್ಕಾರ ಈ ಕುರಿತು ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ, ಕಂಬಳ ಪರ ಮತ್ತು ವಿರೋಧದ ಧ್ವನಿಗಳು ಜೋರಾಗಿವೆ.

ವಿಧಾನಸೌಧದಲ್ಲಿ ನಡೆದ ದಸರಾ ಸಿದ್ಧತಾ ಸಭೆಯಲ್ಲಿ ಕಂಬಳ ಆಯೋಜನೆ ವಿಷಯ ಪ್ರಸ್ತಾಪವಾಗಿದ್ದು, ಅಂತಿಮ ನಿರ್ಧಾರವನ್ನು ಮುಂದಿನ ಸಭೆಗೆ ಮುಂದೂಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಲ್ಲಾ ಅಭಿಪ್ರಾಯಗಳನ್ನು ಪರಿಗಣಿಸಿ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪುತ್ತೂರು ಶಾಸಕ ಅಶೋಕ್ ರೈ, ಬೆಂಗಳೂರಿನ ಬಳಿಕ ಮೈಸೂರು ದಸರಾದಲ್ಲೂ ಕಂಬಳ ಆಯೋಜಿಸುವ ಮೂಲಕ ಕರಾವಳಿಯ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕಾಗಿ 5ರಿಂದ 6 ಕೋಟಿ ರೂ. ಅಗತ್ಯವಿದ್ದು, ಜುಲೈ 15ರಿಂದಲೇ ಸಿದ್ಧತೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಆದರೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ದಸರಾದ ಪರಂಪರೆಯಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರಾವಳಿಯ ಹೆಮ್ಮೆಯ ಕಂಬಳವನ್ನು ಅದರ ಮೂಲ ನೆಲೆಯಲ್ಲೇ ವಿಜೃಂಭಣೆಯಿಂದ ನಡೆಸಬೇಕು ಎಂಬುದು ಅವರ ಅಭಿಪ್ರಾಯ.

ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಇದೇ ನಿಲುವು ವ್ಯಕ್ತಪಡಿಸಿದ್ದು, ದಸರಾ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಂದಿದೆ. ಕಂಬಳದಂತಹ ಬೇರೆ ಆಚರಣೆಗಳನ್ನು ದಸರಾ ಕಾರ್ಯಕ್ರಮದೊಳಗೆ ಸೇರಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಸರ್ಕಾರ ಅಂತಿಮ ತೀರ್ಮಾನವನ್ನು ಇನ್ನೂ ಪ್ರಕಟಿಸದಿದ್ದರೂ, ದಸರಾದಲ್ಲಿ ಕಂಬಳ ಆಯೋಜನೆ ಕುರಿತ ಚರ್ಚೆ ಈಗಾಗಲೇ ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿಜಯ್ ಬಳಿಕ ಕೊಲ್ಲೂರಿಗೆ ಕೇರಳ ಸಿಎಂ ಸತೀಶನ್ ಭೇಟಿ: ಮೂಕಾಂಬಿಕಾ ದರ್ಶನಕ್ಕೆ ರಾಜಕೀಯ ಮಹತ್ವ

0

ಉಡುಪಿ: ತಮಿಳುನಾಡಿನ ರಾಜಕೀಯ ನಾಯಕ ವಿಜಯ್ ಭೇಟಿ ಬಳಿಕ ಇದೀಗ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರದ ಅವರ ಮೊದಲ ಕ್ಷೇತ್ರ ಭೇಟಿ ಇದಾಗಿದ್ದು, ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಿಸಿದ ಸತೀಶನ್, ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿ ಗೌರವಿಸಿತು.

ಅವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. Z-ಪ್ಲಸ್ ಭದ್ರತೆಯಲ್ಲಿ ಆಗಮಿಸಿದ ಮುಖ್ಯಮಂತ್ರಿಯವರ ಸಂಚಾರಕ್ಕೆ ಅಗತ್ಯ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೂಜೆ ಬಳಿಕ ಅವರು ಮಂಗಳೂರಿಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಹಲವು ರಾಜಕೀಯ ನಾಯಕರ ಆಧ್ಯಾತ್ಮಿಕ ನಂಬಿಕೆಯ ಕೇಂದ್ರವಾಗಿದೆ. ಚುನಾವಣೆ, ಅಧಿಕಾರ ಸ್ವೀಕಾರ ಅಥವಾ ಮಹತ್ವದ ರಾಜಕೀಯ ನಿರ್ಧಾರಗಳ ಮುನ್ನ ಅನೇಕ ನಾಯಕರು ದೇವಿಯ ದರ್ಶನ ಪಡೆಯುವುದು ಸಾಮಾನ್ಯ. ಇತ್ತೀಚೆಗೆ ವಿಜಯ್ ಭೇಟಿ ನೀಡಿದ್ದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಸತೀಶನ್ ಆಗಮನವೂ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ.