Home Blog

ಮಂಗಳೂರಿನಲ್ಲಿ ದುರಂತ ಘಟನೆ: ಕೌಟುಂಬಿಕ ಕಲಹಕ್ಕೆ 3 ವರ್ಷದ ಮಗು ಬಲಿ!

0

ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದಿದೆ.

ನೂರುನ್ನೀಸಾ (28) ಹಾಗೂ ಅವರ ಪತಿ ಸಿನಾನ್ (32) ನಡುವೆ ಇಂದು ಫೋನ್‌ನಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನೀಸಾ, ಪತಿಯ ತಂಗಿಯ ಮಗುವಿನ ಜೊತೆಗೆ ತನ್ನ ಮಗುವನ್ನೂ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಬಾವಿಗೆ ಇಳಿದು ಇಬ್ಬರು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನೀಸಾ ಅವರ ಸುಮಾರು ಮೂರೂವರೆ ವರ್ಷದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ನೂರುನ್ನೀಸಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಐಷಾರಾಮಿ ಆಡಿ ಕಾರಿನೊಳಗೆ ರಿಯಲ್ ಎಸ್ಟೇಟ್ ಉದ್ಯಮಿ ಸಾವು: ಹೃದಯಾಘಾತ ಶಂಕೆ!

0

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಳಗ್ಗೆ ಕಾರಿನ ಬಳಿ ಬಂದ ಹೋಟೆಲ್ ಸಿಬ್ಬಂದಿ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ರಾತ್ರಿ ಸುಮಾರು 2.36ಕ್ಕೆ ಕೋರಮಂಗಲ ಠಾಣೆ ಮುಂಭಾಗದ ಫಾಸ್ಟ್‌ಫುಡ್ ಹೋಟೆಲ್ ಬಳಿ KA-51-MG-9786 ನೋಂದಣಿ ಸಂಖ್ಯೆಯ ಆಡಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಬೆಳಗ್ಗೆ ಕಾರಿನ ಬಾಗಿಲು ತೆರೆದಿರುವುದನ್ನು ಗಮನಿಸಿದ ಸಿಬ್ಬಂದಿ ಒಳಗಿದ್ದ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಕೋರಮಂಗಲ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರನ್ನು ಸಲೀಂ ಅಕ್ಬರ್ ಎಂದು ಗುರುತಿಸಲಾಗಿದ್ದು, ಅವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎನ್ನಲಾಗಿದೆ.

ವ್ಯವಹಾರ ಸಂಬಂಧ ಬೆಂಗಳೂರಿಗೆ ಬಂದಿದ್ದ ಸಲೀಂ ಅಕ್ಬರ್, ರಾತ್ರಿ ಕಾರನ್ನು ಹೋಟೆಲ್ ಮುಂಭಾಗ ನಿಲ್ಲಿಸಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಕೋರಮಂಗಲ ಪೊಲೀಸರು ಹಾಗೂ ಸೋಕೋ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ವ್ಹೀಲಿಂಗ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ!

0

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಿಕೊಳ್ಳಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ.

ನಿನ್ನೆ ಮಧ್ಯರಾತ್ರಿ ದೇವಸ್ಥಾನದ ಬಳಿಯ ರಿಂಗ್ ರಸ್ತೆಯಲ್ಲಿ ಕೆಲವರು ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಟಿಟಿ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಮನೋಜ್ ಎಂದು ಗುರುತಿಸಲಾಗಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಬೆಂಗಳೂರಿನಲ್ಲಿ 10 ಗ್ರಾಂಗೆ 1,42,850, ಬೆಳ್ಳಿ ದರವೂ ಹೆಚ್ಚಳ!

0

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಸುಮಾರು 275ರಷ್ಟು ಹೆಚ್ಚಾಗಿದ್ದು, ವಾರಾಂತ್ಯದಲ್ಲಿ ಪ್ರತಿ ಗ್ರಾಂಗೆ 130 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ಪ್ರತಿ ಗ್ರಾಂಗೆ ಸುಮಾರು 10 ರೂ. ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,584
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,285
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,688
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
  • ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ:
    • ಬೆಂಗಳೂರು: 14,285 ರೂ
    • ಚೆನ್ನೈ: 14,285 ರೂ
    • ಮುಂಬೈ: 14,285 ರೂ
    • ದೆಹಲಿ: 14,300
    • ಕೋಲ್ಕತಾ: 14,285 ರೂ
    • ಕೇರಳ: 14,285 ರೂ
    • ಅಹ್ಮದಾಬಾದ್: 14,290 ರೂ
    • ಜೈಪುರ್: 14,300
    • ಲಕ್ನೋ: 14,300
    • ಭುವನೇಶ್ವರ್: 14,285 ರೂ.

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

0

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಕೆಲವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಟಿ.ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗಳ ಬಳಿಕ ವಿವಾದ ತೀವ್ರಗೊಂಡಿತ್ತು. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೋಭಾಯಾತ್ರೆ ನಡೆಸಲಾಗಿದ್ದು, ಈ ವೇಳೆ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಗುಂಪುಗಳು ಹಾಗೂ ಸಮುದಾಯಗಳ ನಡುವೆ ದ್ವೇಷಕ್ಕೆ ಉತ್ತೇಜನ ನೀಡುವುದು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಕೃತ್ಯಗಳ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಬಿಎನ್‌ಎಸ್‌ನ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ನೇ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

KSRP ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಸಜ್ಜಾದ KEA: 1.81 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು, 418 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

0

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೆಪ್ಟೆಂಬರ್ 20ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಿಕ್ಕುಳಿದ ವೃಂದದ ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ ಒಟ್ಟು 1,42,912 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ. ಈ ವೃಂದದಲ್ಲಿ 38,332 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಕೆಇಎ ಸೂಚಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ ಮೂಲಕ ಕಣ್ಗಾವಲು ಇರಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ವೆಬ್‌ಕಾಸ್ಟಿಂಗ್ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಬಗ್ಗೆ ವಿಧಾನಸೌಧದಲ್ಲಿ ಕುಳಿತು ಚರ್ಚಿಸಿದ್ರೆ ಪ್ರಯೋಜನವಿಲ್ಲ: ಡಿ.ಕೆ. ಶಿವಕುಮಾರ್

0

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸೌಧದಲ್ಲಿ ಕುಳಿತು ಚರ್ಚೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ವಿಚಾರದಲ್ಲಿ ಜನರ ಅಭಿಪ್ರಾಯ ತಿಳಿದುಕೊಳ್ಳಲು ಹಾಗೂ ರೈತರ ಸಮಸ್ಯೆಗಳನ್ನು ಆಲಿಸಲು ತೀರ್ಥಹಳ್ಳಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತೀರ್ಥಹಳ್ಳಿಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಸ್ತೂರಿ ರಂಗನ್ ವರದಿ ಕುರಿತು ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಜನರೊಂದಿಗೆ ನೇರವಾಗಿ ಚರ್ಚಿಸುವ ವಿಶೇಷ ಅವಕಾಶವಾಗಿದೆ ಎಂದು ಹೇಳಿದರು.

“ರೈತರ ಸಮಸ್ಯೆ, ಬದುಕಿನ ಸಮಸ್ಯೆ ನಮ್ಮ ಮುಂದಿದೆ. ರೈತರ ಭೂಮಿಯನ್ನು ರಕ್ಷಣೆ ಮಾಡಬೇಕಿದೆ. ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಅಭಿಪ್ರಾಯ ಕೇಳಿದೆ. ಇಂತಹ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಕುಳಿತು ಚರ್ಚೆ ಮಾಡಿದರೆ ಪ್ರಯೋಜನವಿಲ್ಲ. ಅದಕ್ಕಾಗಿಯೇ ಜನರ ಬಳಿಗೆ ಬಂದಿದ್ದೇನೆ. ಜೊತೆಗೆ ಈ ವಿಚಾರದ ಕುರಿತು ವಿಶೇಷ ಅಧಿವೇಶನವನ್ನೂ ಕರೆದಿದ್ದೇನೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ರೈತರನ್ನು ರಕ್ಷಿಸುವ ಉದ್ದೇಶದಿಂದ ತೀರ್ಥಹಳ್ಳಿಗೆ ಬಂದಿದ್ದೇನೆ ಎಂದು ಹೇಳಿದ ಅವರು, ತಮ್ಮ ಭೇಟಿ ಸಂದರ್ಭದಲ್ಲಿ ಶಿವಮೊಗ್ಗದ ಶಾಸಕರು ಸ್ವಾಗತ ನೀಡಿದ ವಿಚಾರ ಹಾಗೂ ವಂದೇ ಮಾತರಂ ಕುರಿತ ಚರ್ಚೆಗೂ ಪ್ರತಿಕ್ರಿಯಿಸಿದರು.

“ನಾವು ಹಿಂದಿನಿಂದಲೂ ವಂದೇ ಮಾತರಂನ ಎರಡು ಪ್ಯಾರಾಗಳನ್ನು ಹಾಡಿಕೊಂಡು ಬಂದಿದ್ದೇವೆ. ಈಗ ಕೇಂದ್ರ ಸರ್ಕಾರ ಹೊಸ ಆದೇಶ ಮಾಡಿದೆ. ನಾವು ಕೂಡ ನಮ್ಮದೇ ಆದ ಆದೇಶ ಮಾಡಿದ್ದೇವೆ” ಎಂದು ಹೇಳಿದರು.

ಇದೇ ವೇಳೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಸ್ನೇಹಿತ ಚನ್ನಬಸಪ್ಪ ಯಾಕೆ ನನ್ನನ್ನು ಕೆಣಕುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಶಿವಮೊಗ್ಗಕ್ಕೆ ಬಂದಾಗ ಅವರು ಅಲ್ಲಿಯೇ ಈ ವಿಚಾರ ಮಾತನಾಡಬಹುದಿತ್ತು. ಆದರೆ ಇಲ್ಲಿ ಬಂದು ಮಾತನಾಡಿದ್ದಾರೆ” ಎಂದರು.

“ನಿಮ್ಮ ಪಕ್ಷದ ಸಿದ್ಧಾಂತ ನಿಮಗೆ, ನಮ್ಮ ಸಿದ್ಧಾಂತ ನಮಗೆ. ನಾನು ಈ ಬಗ್ಗೆ ಮಾತನಾಡಬೇಕಿಲ್ಲ. ಜನರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಬದುಕು ಮುಖ್ಯ. ಬದುಕಿನ ಮೇಲೆ ರಾಜಕಾರಣ ಮಾಡೋಣ. ಜನರ ಸಮಸ್ಯೆ ಬಗೆಹರಿಯುವುದು ಮುಖ್ಯ” ಎಂದು ಮುಖ್ಯಮಂತ್ರಿ ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ಸಾಕಷ್ಟು ಜನರು ಈಗಾಗಲೇ ಅಧ್ಯಯನ ನಡೆಸಿದ್ದಾರೆ. ಜನರ ಭಾವನೆ ಹಾಗೂ ಅಭಿಪ್ರಾಯವನ್ನು ಆಧರಿಸಿ ಸರ್ಕಾರ ನಡೆಯಬೇಕು ಎಂಬ ಉದ್ದೇಶದಿಂದಲೇ ಜನರೊಂದಿಗೆ ನೇರವಾಗಿ ಸಂವಾದ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ಅಭಿವೃದ್ಧಿ ಕಂಡು ತಳಮಳ: ಪ್ರಿಯಾಂಕ್ ಖರ್ಗೆ

0

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಹಾಗೂ ಕರಾವಳಿ ಭಾಗಕ್ಕೆ ಘೋಷಿಸಲಾದ ಅಭಿವೃದ್ಧಿ ಯೋಜನೆಗಳ ಕುರಿತು ಬಿಜೆಪಿ ನಾಯಕರ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಂಗಳೂರು ಕ್ಯಾಬಿನೆಟ್‌ ಅನ್ನು ‘ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್’ ಎಂದು ಬಿಜೆಪಿ ನಾಯಕರು ಟೀಕಿಸಿರುವುದು ಹತಾಶೆಯ ಹೇಳಿಕೆ ಎಂದು ಅವರು ಎಕ್ಸ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬಿಜೆಪಿ ಕರಾವಳಿ ಭಾಗವನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕ್‌ ಪ್ರದೇಶವಾಗಿ ನೋಡುತ್ತದೆ. ಆದರೆ ನಾವು ಕರಾವಳಿಯಲ್ಲಿರುವ ಅಭಿವೃದ್ಧಿ ಮತ್ತು ಪ್ರಗತಿಯ ಸಾಧ್ಯತೆಗಳನ್ನು ನೋಡುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರು ಕರಾವಳಿಗೆ ಬಂದಾಗ ‘ಹೊಡಿ, ಬಡಿ’ ಎಂಬ ಪ್ರಚೋದನಕಾರಿ ಭಾಷಣಗಳನ್ನು ಮಾಡುವುದಕ್ಕೆ ಮಾತ್ರ ಸೀಮಿತರಾಗಿದ್ದರು ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಕರಾವಳಿಗರ ಆತ್ಮಗೌರವವನ್ನು ಗೌರವಿಸುವ ಉದ್ದೇಶದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಸೇರಿದಂತೆ ವಿವಿಧ ಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು ₹32,611 ಕೋಟಿ ಮೊತ್ತದ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಪ್ರವಾಸೋದ್ಯಮ, ಬಂದರು, ರಸ್ತೆ, ಆರೋಗ್ಯ, ಶಿಕ್ಷಣ, ನೀರು ಸರಬರಾಜು ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಇದರಲ್ಲಿ ಸೇರಿವೆ.

ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ, “ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಘೋಷಣೆ ಐತಿಹಾಸಿಕವಾದುದು” ಎಂದು ಹೇಳಿದ್ದಾರೆ.

“ಕರಾವಳಿಯನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಬಿಜೆಪಿಗೆ ಇಂತಹ ಅಭಿವೃದ್ಧಿಪರ ನಿಲುವು ತಳೆಯಲು ಸಾಧ್ಯವಾಗಲಿಲ್ಲ ಏಕೆ?” ಎಂದು ಪ್ರಶ್ನಿಸಿರುವ ಅವರು, ಜನರು ಕೋಮು ವಿಚಾರಗಳನ್ನು ಬದಿಗಿಟ್ಟು ಪ್ರಗತಿಯ ವಿಚಾರಗಳತ್ತ ಚಿಂತನೆ ಆರಂಭಿಸಿರುವುದೇ ಬಿಜೆಪಿಗೆ ಅಸ್ತಿತ್ವದ ಭಯ ಕಾಡಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಕರಾವಳಿ ಭಾಗದಲ್ಲಿ ಡೇಟಾ ಸೆಂಟರ್, ವಾಟರ್ ಮೆಟ್ರೋ, ಪ್ರವಾಸೋದ್ಯಮ, ಮರೀನ್ ಬಯೋಟೆಕ್ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಅಭಿವೃದ್ಧಿ ಆಧಾರಿತ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ₹16,000 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಪ್ಯಾಕೇಜ್‌ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಅನುಮೋದನೆ ದೊರೆತಿದೆ.

“ಕೋಮು ಪ್ರಚೋದನೆ ಮತ್ತು ರಕ್ತ ಕಣ್ಣೀರು ಇವೆರಡನ್ನೂ ಹೊರತುಪಡಿಸಿದರೆ ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ” ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು ಕ್ಯಾಬಿನೆಟ್‌ ಅನ್ನು ಬಿಜೆಪಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ಅಭಿವೃದ್ಧಿ ಕಾರ್ಯಗಳನ್ನೂ ರಾಜಕೀಯ ದೃಷ್ಟಿಯಿಂದ ನೋಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರ ಜನರ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

0

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹುಚ್ಚರಿಗೆಲ್ಲ ತಾನು ಉತ್ತರ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್, “ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ ಎಂದು ಕೇಳಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

“ಗಣಿ ಲೂಟಿ ಮಾಡಿ ಜೈಲಿನಲ್ಲಿ ಇದ್ದವನಲ್ಲ ನಾನು. ರಾಜಕೀಯ ಹೋರಾಟ ಮಾಡಿಕೊಂಡು ಬಂದಿರುವವನು. ಇಂತಹವರ ಹೇಳಿಕೆಗಳಿಗೆಲ್ಲ ಉತ್ತರ ಕೊಡಲು ಹೋಗುವುದಿಲ್ಲ. ಅವರಿಗೆಲ್ಲ ಉತ್ತರ ಕೊಟ್ಟರೆ ನಾವೂ ಹುಚ್ಚರಾಗುತ್ತೇವೆ” ಎಂದು ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶಭಕ್ತಿ ಮತ್ತು ದೇಶಪ್ರೇಮದ ಬಗ್ಗೆ ಮಾತನಾಡುವವರು ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಗೀತೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹರಿಪ್ರಸಾದ್ ಹೇಳಿದರು. ಈ ವೇಳೆ ಜನಾರ್ದನ ರೆಡ್ಡಿ ವಿರುದ್ಧ ಅವರು ತೀವ್ರ ಟೀಕೆ ವ್ಯಕ್ತಪಡಿಸಿದರು.

ಇದೇ ವೇಳೆ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಶೀಘ್ರದಲ್ಲೇ ಪೊಲಿಟಿಕಲ್ ಅಫೇರ್ಸ್ ಕಮಿಟಿ ರಚನೆ ಮಾಡುವುದಾಗಿ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

“ಪೊಲಿಟಿಕಲ್ ಅಫೇರ್ಸ್ ಕಮಿಟಿ ಎಲ್ಲಾ ರಾಜ್ಯಗಳಲ್ಲೂ ಇದೆ. ಕರ್ನಾಟಕದಲ್ಲೂ ಸದ್ಯದಲ್ಲೇ ಈ ಸಮಿತಿಯನ್ನು ರಚನೆ ಮಾಡುತ್ತೇವೆ. ಇತ್ತೀಚೆಗೆ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆದಷ್ಟು ಬೇಗ ಪೊಲಿಟಿಕಲ್ ಅಫೇರ್ಸ್ ಕಮಿಟಿ ರಚಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ನಾವು ತಯಾರಿ ನಡೆಸುತ್ತಿದ್ದೇವೆ” ಎಂದು ಹೇಳಿದರು.

ಈ ಸಂಬಂಧ ಈಗಾಗಲೇ ಕಾಂಗ್ರೆಸ್‌ನ ಹಲವು ನಾಯಕರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆಯಲಾಗುತ್ತಿದೆ. ಶೀಘ್ರದಲ್ಲೇ ಚರ್ಚೆ ನಡೆಸಿ ಸಮಿತಿಯ ರಚನೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹರಿಪ್ರಸಾದ್ ಮಾಹಿತಿ ನೀಡಿದರು.

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

0

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ ನಡೆದಿದೆ. 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ.

ನಾಗರಾಜ್ ಹಲವು ವರ್ಷಗಳಿಂದ ನಾಗರತ್ನ ಅವರೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಕೆಲ ದಿನಗಳಿಂದ ಪದೇಪದೇ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ನಾಗರತ್ನ ಅವರು ಪತಿಯನ್ನು ತ್ಯಜಿಸಿ ತಮ್ಮ ಮೂವರು ಮಕ್ಕಳನ್ನು ಬೇರೆಡೆ ಮನೆ ಮಾಡಿಕೊಟ್ಟು, ತಾವು ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕಲ್ಯಾಣ ಮಂಟಪವೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರತ್ನ ಅವರಿಗೆ ನಾಗರಾಜ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು ಎಂದು ತಿಳಿದುಬಂದಿದೆ.

ಇಬ್ಬರ ನಡುವಿನ ಜಗಳದಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ನಾಗರತ್ನ ಅವರಿಗೆ ಮನೆ ಖಾಲಿ ಮಾಡಿಕೊಂಡು ಬೇರೆಡೆ ತೆರಳುವಂತೆ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಅವರು ಅಲ್ಲಿಯೇ ವಾಸವಾಗಿದ್ದರು.

ಸೆಪ್ಟೆಂಬರ್ 19ರಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ನಾಗರಾಜ್, ನಾಗರತ್ನ ಅವರ ಮನೆಗೆ ತೆರಳಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಗರತ್ನ ಅವರ ಕಿರುಚಾಟ ಕೇಳಿ ಸ್ಥಳೀಯರು ಅಲ್ಲಿಗೆ ಧಾವಿಸಿದ್ದಾರೆ.

ಈ ವೇಳೆ ಆರೋಪಿ ನಾಗರಾಜ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದ್ದು, ಸ್ಥಳೀಯರು ಆತನನ್ನು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಆರ್‌ಎಂಸಿ ಯಾರ್ಡ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗೆ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.