ಬೆಂಗಳೂರು: ನಗರದ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದಾಗಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಕಡೆಗೆ ಕಾಲ್ನಡಿಗೆಯ ಮೆರವಣಿಗೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಫ್ರೀಡಂ ಪಾರ್ಕ್ ಜಂಕ್ಷನ್ನಿಂದ ಕನಕದಾಸ ವೃತ್ತದ ನಡುವಿನ ರಸ್ತೆ ಭಾಗವನ್ನು ಎರಡೂ ದಿಕ್ಕಿನಿಂದ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಖೋಡೆ ಜಂಕ್ಷನ್ನಿಂದ ಕೆಆರ್ ಸರ್ಕಲ್ ಕಡೆಗೆ ಸಂಚರಿಸುವ ವಾಹನಗಳಿಗೆ ಹಳೇ ಜೆಡಿಎಸ್ ಕಚೇರಿ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸುವಂತೆ ಸೂಚಿಸಲಾಗಿದೆ. ಮೈಸೂರು ಬ್ಯಾಂಕ್ ವೃತ್ತದಿಂದ ಕೆಜಿ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಮಹಾರಾಣಿ ಅಂಡರ್ಪಾಸ್ ಹಾಗೂ ಪ್ಯಾಲೇಸ್ ಕ್ರಾಸ್ ರಸ್ತೆಯ ಮೂಲಕ ಸಾಗುವಂತೆ ಸೂಚನೆ ನೀಡಲಾಗಿದೆ.
ಸಂಚಾರ ಪೊಲೀಸರ ಪ್ರಕಾರ, ಗಾಂಧಿನಗರ ಭಾಗದಲ್ಲಿ ಒನ್ವೇ ರಸ್ತೆಯಾಗಿದ್ದ ಸುಬ್ಬಣ್ಣ ಜಂಕ್ಷನ್–ಎಂಟಿಆರ್ ಜಂಕ್ಷನ್ ಮಾರ್ಗವನ್ನು ಇಂದು ತಾತ್ಕಾಲಿಕವಾಗಿ ಟೂ-ವೇ ಸಂಚಾರಕ್ಕೆ ಪರಿವರ್ತಿಸಲಾಗಿದೆ.
ಇದಲ್ಲದೆ, ಫ್ರೀಡಂ ಪಾರ್ಕ್ ಸುತ್ತಮುತ್ತ ಪ್ರಮುಖ ರಸ್ತೆಗಳಾದ ವಿ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆಜಿ ರಸ್ತೆಯಲ್ಲಿ ವಾಹನ ಪಾರ್ಕಿಂಗ್ಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ನಗರದ ಪ್ರಮುಖ ಭಾಗಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

