Home Blog

ಭಾರತದಿಂದ ಆಮದು ಆಗುವ ಮಾವಿನ ಹಣ್ಣಿಗೆ ನೇಪಾಳ ತಾತ್ಕಾಲಿಕ ನಿಷೇಧ!

ಕಠ್ಮಂಡು: ಭಾರತದಿಂದ ಆಮದು ಮಾಡಿಕೊಳ್ಳಲಾಗುತ್ತಿರುವ ಮಾವಿನ ಹಣ್ಣಿನ ಮೇಲೆ ನೇಪಾಳ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ.

ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ಅನುಮತಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಕಂಡುಬಂದಿವೆ. ಗ್ರಾಹಕರ ಆರೋಗ್ಯ ರಕ್ಷಣೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.

ಈ ಕ್ರಮವು ಕೇವಲ ಆಹಾರ ಸುರಕ್ಷತೆಗೆ ಸಂಬಂಧಿಸಿದ್ದು, ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಯಾವುದೇ ಪರಿಣಾಮ ಬೀರುವ ಉದ್ದೇಶ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಜಪಾನ್ ಕೂಡ ಭಾರತೀಯ ಮಾವಿನ ಹಣ್ಣಿನ ಆಮದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆದರೆ ಜಪಾನ್‌ನ ನಿರ್ಧಾರ ಕೀಟನಾಶಕ ಅಂಶಗಳಿಗೆ ಸಂಬಂಧಿಸಿರಲಿಲ್ಲ. ಭಾರತದಲ್ಲಿನ ಕೆಲವು ಸಂಸ್ಕರಣಾ ಕೇಂದ್ರಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿನ ಕೊರತೆಯನ್ನು ಉಲ್ಲೇಖಿಸಿ ಆ ದೇಶ ನಿರ್ಬಂಧ ಹೇರಿತ್ತು.

ನೇಪಾಳದ ನಿರ್ಬಂಧದಿಂದ ಅಲ್ಫೋನ್ಸೋ, ಕೇಸರ್, ಲಂಗ್ರಾ ಹಾಗೂ ಬಂಗನಪಲ್ಲಿ ಸೇರಿದಂತೆ ಹಲವು ಜನಪ್ರಿಯ ಭಾರತೀಯ ಮಾವಿನ ತಳಿಗಳ ರಫ್ತಿಗೆ ಹೊಡೆತ ಬಿದ್ದಿದೆ. ಇದರಿಂದ ಭಾರತೀಯ ಹಣ್ಣು ವ್ಯಾಪಾರಿಗಳಲ್ಲಿ ಆತಂಕ ಮನೆಮಾಡಿದ್ದು, ಬೇಸಿಗೆ ಅವಧಿಯಲ್ಲಿ ಮಾವಿನ ಹಣ್ಣಿನ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ ದಿನಗಳಲ್ಲಿ ಪೂರೈಕೆ ಮತ್ತು ವ್ಯಾಪಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

ಭಾರಿ ಮಳೆ: ವಿಭೂತಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ಬಂದ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲ ತಾಲೂಕಿನ ಪ್ರಸಿದ್ಧ ವಿಭೂತಿ ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಹೇರಲಾಗಿದೆ.

ಯಾಣದ ಸಮೀಪದಲ್ಲಿರುವ ವಿಭೂತಿ ಜಲಪಾತ ಮಳೆಗಾಲದಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಹೊಸಕಂಬಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

ಈ ಹಿಂದೆ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಸಿಗರ ಜೀವಕ್ಕೆ ಅಪಾಯ ಉಂಟಾದ ಘಟನೆಗಳು ನಡೆದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜೂನ್ ಎರಡನೇ ವಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ತಡೆ ವಿಧಿಸಲಾಗಿದೆ.

ಅರಣ್ಯ ಇಲಾಖೆ ಆದೇಶದಂತೆ ಮುಂದಿನ ಸೂಚನೆ ಬರುವವರೆಗೆ ವಿಭೂತಿ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧವಾಗಿದ್ದು, ಪ್ರವಾಸಿಗರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉದ್ಯಾನ ನಗರಿ ಕಸದ ನಗರಿಯಾಗುತ್ತಿದೆಯೇ? ಬ್ಲ್ಯಾಕ್ ಸ್ಪಾಟ್‌ಗಳ ಸಂಖ್ಯೆ ಏರಿಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತೀವ್ರಗೊಂಡಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳುದ್ದಕ್ಕೂ ಕಸದ ರಾಶಿಗಳು ಕಂಡುಬರುತ್ತಿವೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಲೇವಾರಿಯಾಗದೆ ಬಿದ್ದಿರುವ ಕಸದಿಂದ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

ಎರಡು ತಿಂಗಳಿನಿಂದ ಹಲವು ಪ್ರದೇಶಗಳಲ್ಲಿ ಕಸ ಸಂಗ್ರಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಪರಿಣಾಮವಾಗಿ ಕಸದ ರಾಶಿಗಳು ರಸ್ತೆ ಮಧ್ಯಭಾಗದವರೆಗೂ ಹರಡಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟುಮಾಡುತ್ತಿದೆ.

ನಗರದ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಮಾರ್ಷಲ್‌ಗಳನ್ನು ನೇಮಿಸಲಾಗಿದ್ದರೂ, ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮನೆಗಳ ಬಳಿ ಕಸದ ವಾಹನಗಳು ನಿಯಮಿತವಾಗಿ ಬಾರದ ಕಾರಣ ಅನೇಕರು ರಸ್ತೆಗಳಲ್ಲೇ ಕಸ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಹಸಿ ಕಸ ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಆರೋಗ್ಯ ಸಮಸ್ಯೆಗಳ ಆತಂಕವೂ ಎದುರಾಗಿದೆ. ಕಸ ವಿಲೇವಾರಿಯಲ್ಲಿ ಉಂಟಾಗಿರುವ ಅವ್ಯವಸ್ಥೆ ಬಗ್ಗೆ ನಾಗರಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕಸಾ ಪೋರ್ಟಲ್’ ಅಂಕಿಅಂಶಗಳ ಪ್ರಕಾರ, ಒಂದು ತಿಂಗಳ ಹಿಂದೆ 3,200ರಷ್ಟಿದ್ದ ಸಕ್ರಿಯ ಕಸದ ಬ್ಲ್ಯಾಕ್ ಸ್ಪಾಟ್‌ಗಳ ಸಂಖ್ಯೆ ಇದೀಗ 5,445ಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆ ಉದ್ಯಾನ ನಗರಿ ಮತ್ತೆ ಕಸದ ನಗರಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.

ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗಲು ಕಳೆದ ಹಲವು ವರ್ಷಗಳಿಂದ ಕಸ ಸಂಗ್ರಹಣೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು, ಟಿಪ್ಪರ್ ವಾಹನಗಳ ಕೊರತೆ, ಸಿಬ್ಬಂದಿ ಅಭಾವ, ಸಂಬಳ ಪಾವತಿಯ ವಿಳಂಬ ಹಾಗೂ ವಾಹನಗಳ ದುರಸ್ತಿ ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಮೋದಿ ಸರ್ಕಾರಕ್ಕೆ 12 ವರ್ಷ ಪೂರ್ಣ; ನಾಳೆ ರಾಜ್ಯಾದ್ಯಂತ ವಿಶೇಷ ಪೂಜೆ ನಡೆಸಲಿರುವ ಬಿಜೆಪಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜೂನ್ 10ರಂದು ರಾಜ್ಯದಾದ್ಯಂತ ವಿಶೇಷ ಪೂಜೆಗಳನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ, ಪ್ರಧಾನಿ ಮೋದಿ ಅವರು ಕಳೆದ 12 ವರ್ಷಗಳಿಂದ ದೇಶದ ಪ್ರಧಾನ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶೇಷ ಪೂಜೆ ನೆರವೇರಿಸಲಿದ್ದು, ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬನಶಂಕರಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಶೇಷ ಪೂಜೆ ಸಲ್ಲಿಸಲಿದ್ದು, ಮಾಜಿ ಸಚಿವ ಗೋಪಾಲಯ್ಯ ಮಹಾಲಕ್ಷ್ಮಿ ಲೇಔಟ್‌ನ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಂತಿನಗರದ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಪ್ರಧಾನಿ ಮೋದಿ ಅವರು 12 ವರ್ಷಗಳ ಕಾಲ ದೇಶದ ಆಡಳಿತ ನಡೆಸಿ ಜನಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ, ಆಯಸ್ಸು ಹಾಗೂ ದೇಶದ ಅಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.

ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರು ವಿಶೇಷ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಣ್ಣಿನ ಆರೋಗ್ಯ ಕಾಪಾಡಿದರೆ ಕೃಷಿ ಉಳಿಯುತ್ತದೆ

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವಿಕೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಖೇತ್ ಬಚಾವೋ ಅಭಿಯಾನ’ಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಭೂಮಿಯ ಸಂರಕ್ಷಣೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಮಣ್ಣಿನ ಪರೀಕ್ಷೆ, ನೀರಿನ ಸಮರ್ಪಕ ಬಳಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

‘ಖೇತ್ ಬಚಾವೋ ಅಭಿಯಾನ’ದ ಮೂಲಕ ರೈತರಿಗೆ ಮಣ್ಣಿನ ಸವಕಳಿ ತಡೆ, ಬೆಳೆ ವೈವಿಧ್ಯತೆ, ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ರೈತ ಸಮುದಾಯವೂ ಸಕ್ರಿಯವಾಗಿ ಪಾಲ್ಗೊಂಡು ಇದರ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೆ., ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಎಂ.ವಿ. ಚಳಗೇರಿ, ಎಸ್.ಎಸ್. ಕಲ್ಮನಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರ ಸಭೆಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಕೃಷಿ ತಂತ್ರಜ್ಞಾನ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 “ಮಣ್ಣಿನ ಫಲವತ್ತತೆ ಉಳಿದರೆ ಮಾತ್ರ ರೈತರ ಬದುಕು ಮತ್ತು ಕೃಷಿಯ ಭವಿಷ್ಯ ಸುರಕ್ಷಿತವಾಗಿರುತ್ತದೆ.” — ಬಸವರಾಜ ಬೊಮ್ಮಾಯಿ

 

ಗಾಣಿಗ ಸಮಾಜ ಕಡೆಗಣನೆ ಸಹಿಸುವುದಿಲ್ಲ: ಬಸವರಾಜ ಬಿಂಗಿ

ವಿಜಯಸಾಕ್ಷಿ ಸುದ್ದಿ, ಗದಗ: ಹೊಸ ಸರ್ಕಾರದಲ್ಲಿ ಗಾಣಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ದುರ್ದೈವದ ಸಂಗತಿ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಣಿಗ ಸಮುದಾಯದ ಶಾಸಕರಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಗಾಣಿಗ ಸಮಾಜದ ಮುಖಂಡ ಬಸವರಾಜ ಬಿಂಗಿ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ ಸವದಿ, ವೀರೇಂದ್ರ ಪಪ್ಪಿ ಹಾಗೂ ಬಿ.ಕೆ. ಸಂಗಮೇಶ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸಮಾಜದ ಮುಖಂಡ ಡಾ. ಶೇಖರ್ ಸಜ್ಜನವರ ಮಾತನಾಡಿ, “ರಾಜ್ಯದಲ್ಲಿಯೇ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದಿರುವ ಹಾಗೂ ಅನುಭವಿ ಹೋರಾಟಗಾರರಾಗಿರುವ ಲಕ್ಷ್ಮಣ ಸವದಿ ರಾಜ್ಯದ ಪ್ರಮುಖ ನಾಯಕರಾಗಿದ್ದಾರೆ. ಅವರನ್ನು ಸಚಿವರನ್ನಾಗಿ ಮಾಡುವುದು ಸಮಾಜದ ಬಹುದಿನಗಳ ಬೇಡಿಕೆ,” ಎಂದರು.

ಬಿಜೆಪಿಯಿಂದ ಕಾಂಗ್ರೆಸ್‌ಗೆ ಕರೆತರುವ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಈಗ ಆ ಭರವಸೆ ಈಡೇರಿಸುವ ಸಮಯ ಬಂದಿದೆ ಎಂದು ಹೇಳಿದರು.

ನಿಂಗಪ್ಪ ಕೆಂಗಾರ ಮಾತನಾಡಿ, “ಹಿಂದಿನ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಉತ್ತಮ ಆಡಳಿತ ನೀಡಿದ್ದಾರೆ. ರಾಜ್ಯದಲ್ಲಿ ಗಾಣಿಗ ಸಮಾಜವನ್ನು ಒಗ್ಗೂಡಿಸುವ ನಾಯಕತ್ವ ಅವರದು. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟ ತೀವ್ರಗೊಳ್ಳಲಿದೆ,” ಎಂದು ಎಚ್ಚರಿಸಿದರು.

ಜಾತ್ಯತೀತ ಸರ್ಕಾರ ಹಿಂದುಳಿದ ಹಾಗೂ ತುಳಿತಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಉತ್ತರ ಕರ್ನಾಟಕದಲ್ಲಿ 30ರಿಂದ 40 ಶಾಸಕರನ್ನು ಗೆಲ್ಲಿಸುವ ಸಾಮರ್ಥ್ಯ ಗಾಣಿಗ ಸಮಾಜಕ್ಕಿದೆ. ಈ ಶಕ್ತಿಯನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು ಎಂದು ಮುಖಂಡರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಶೋಕ ಮಂದಾಲಿ, ಗಿರಿಯಪ್ಪ ಅಸೂಟಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಗಾಣಿಗ ಸಮಾಜದ ಶಕ್ತಿಯನ್ನು ಕಡೆಗಣಿಸಿದರೆ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾಗುತ್ತದೆ.” — ಬಸವರಾಜ ಬಿಂಗಿ

 

ಪ್ರಾಮಾಣಿಕ ನಾಯಕತ್ವಕ್ಕೆ ಗೌರವ ಕೊಡಿ: ಉಸ್ಮಾನ್ ಮಾಳೆಕೊಪ್ಪ

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಕರ್ನಾಟಕದ ಪ್ರಾಮಾಣಿಕ ಹಾಗೂ ಅನುಭವಿ ನಾಯಕರಾಗಿರುವ ಎಚ್.ಕೆ‌.ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಮೆಕ್ಯಾನಿಕಲ್ ಸಂಘದ ಅಧ್ಯಕ್ಷ ಉಸ್ಮಾನ್ ಮಾಳೆಕೊಪ್ಪ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೆಕ್ಯಾನಿಕಲ್ ಹುದ್ದೆ ಎನ್ನುವ ಕೀಳರಿಮೆಯಲ್ಲಿದ್ದ ನಮ್ಮನ್ನು ಒಂದೇ ವೇದಿಕೆಗೆ ತಂದು ಸಂಘಟಿಸುವಲ್ಲಿ ಶಾಸಕ ಎಚ್.ಕೆ. ಪಾಟೀಲರ ಪಾತ್ರ ಮಹತ್ವದ್ದಾಗಿದೆ” ಎಂದು ಹೇಳಿದರು.

ಸಂಘದ ಶಕ್ತಿ ಮತ್ತು ಸಾಮರ್ಥ್ಯದ ಅರಿವು ಮೂಡಿಸಿದ ಎಚ್.ಕೆ. ಪಾಟೀಲರು, ಸಂಘದ ಅಭಿವೃದ್ಧಿಗಾಗಿ 1.26 ಎಕರೆ ಜಾಗ ನೀಡಿ ಶೆಡ್ ನಿರ್ಮಾಣಕ್ಕೂ ಸಹಕಾರ ನೀಡಿದ್ದಾರೆ. ರಕ್ತದಾನ, ಅಂಗಾಂಗ ದಾನ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ನಮಗೆ ಪ್ರೇರಣೆ ನೀಡಿದ್ದಾರೆ ಎಂದು ತಿಳಿಸಿದರು.

“ಯಾವುದೇ ಕಪ್ಪು ಚುಕ್ಕೆ ಇಲ್ಲದ, ಜನಪರ ಕೆಲಸ ಮಾಡಿದ ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.

ಬಿ.ಎಂ. ನದ್ದಿಮುಲ್ಲಾ ಮಾತನಾಡಿ, “ಉತ್ತರ ಕರ್ನಾಟಕದಲ್ಲಿ ಪ್ರಾಮಾಣಿಕ ನಾಯಕತ್ವ ನೀಡುತ್ತಿರುವ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದಿರುವುದು ನೋವಿನ ಸಂಗತಿ. ಅವರ ಕುಟುಂಬ ಪೀಳಿಗೆಯಿಂದ ಜನಸೇವೆಯಲ್ಲಿ ತೊಡಗಿಕೊಂಡಿದ್ದು, ಇಂತಹ ಅನುಭವಿ ನಾಯಕರಿಗೆ ಸೂಕ್ತ ಸ್ಥಾನಮಾನ ಸಿಗಬೇಕು,” ಎಂದರು.

ಈ ವೇಳೆ ಮಹಮದ್ ಶಬ್ಬೀರ, ನಿಂಗಪ್ಪ ಎಂಬತ್ತನಾಳ, ಸೈಯದ್ ಜಮೀರ್ ಖಾಜಿ, ಮಹಮದ್ ಅಲಿ ನವಲಗುಂದ, ಅಬ್ದುಲ್ ಖಾದರ್, ಸಿರಾಜ್ ಬಾಗಲಕೋಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಮೆಕ್ಯಾನಿಕಲ್ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಿದ ನಾಯಕ ಎಚ್.ಕೆ. ಪಾಟೀಲರು. ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯ.”

ಉಸ್ಮಾನ್ ಮಾಳೆಕೊಪ್ಪ

 

ಕಳಂಕರಹಿತ ರಾಜಕಾರಣಿ ಎಚ್.ಕೆ.ಪಿಗೆ ಸಚಿವ ಸ್ಥಾನ ನೀಡಿ: ನ್ಯಾಯವಾದಿ ಮೋಹನ ಭಜಂತ್ರಿ

ವಿಜಯಸಾಕ್ಷಿ ಸುದ್ದಿ, ಗದಗ: ಕಳಂಕರಹಿತ ರಾಜಕಾರಣಿ, ಸರಳ ವ್ಯಕ್ತಿತ್ವ ಹಾಗೂ ದೂರದೃಷ್ಟಿಯ ಚಿಂತನೆ ಹೊಂದಿರುವ ಹಿರಿಯ ನಾಯಕ ಎಚ್. ಕೆ ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ನ್ಯಾಯವಾದಿ ಮೋಹನ ಭಜಂತ್ರಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಗದಗ ಜಿಲ್ಲೆಯನ್ನು ಮಾದರಿ ಅಭಿವೃದ್ಧಿಯತ್ತ ಕೊಂಡೊಯ್ದ ನಾಯಕ ಎಚ್.ಕೆ. ಪಾಟೀಲರು. ಇಂತಹ ನಾಯಕತ್ವ ಜಿಲ್ಲೆಗೂ ಹಾಗೂ ರಾಜ್ಯಕ್ಕೂ ಅಗತ್ಯವಾಗಿದೆ ಎಂದು ಹೇಳಿದರು.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಂತಹ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಎಚ್.ಕೆ. ಪಾಟೀಲರ ವಿಚಾರಧಾರೆ ಹಾಗೂ ಅನುಭವ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಕೀಲ ಎಸ್.ಕೆ. ಪಾಟೀಲ ಮಾತನಾಡಿ, “ಎಚ್.ಕೆ. ಪಾಟೀಲರ ಸರಳತೆ, ಅನುಭವ ಹಾಗೂ ಮುಂದಾಲೋಚನೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು. ನಾಲ್ಕು ದಶಕಗಳ ಸಾರ್ವಜನಿಕ ಸೇವೆಗೆ ಗೌರವ ಸಲ್ಲಿಸುವ ಸಮಯ ಇದು,” ಎಂದರು.

ವಕೀಲ ಹುಬ್ಬಳ್ಳಿ ಮಾತನಾಡಿ, 2004-06ರ ಅವಧಿಯಲ್ಲಿ ಕಾನೂನು ಸಚಿವರಾಗಿದ್ದಾಗ ಎಚ್.ಕೆ. ಪಾಟೀಲರು ಹಲವು ಮಹತ್ವದ ಕಾರ್ಯಗಳನ್ನು ಜಾರಿಗೊಳಿಸಿದ್ದರು. ಜಿಲ್ಲಾ ನ್ಯಾಯಾಲಯ ಸ್ಥಾಪನೆಗೂ ಅವರ ಶ್ರಮ ಕಾರಣವಾಗಿದೆ ಎಂದು ಹೇಳಿದರು.

ಯಾವುದೇ ಜಾತಿ-ಧರ್ಮಕ್ಕೆ ಸೀಮಿತವಾಗದೆ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ನಾಯಕತ್ವ ಅವರದ್ದಾಗಿದೆ. ಲಾ ಚೇಂಬರ್‌ಗಳ ಪರಿಕಲ್ಪನೆ ಸೇರಿದಂತೆ ಕಾನೂನು ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಪರಿಗಣಿಸಿ ಮತ್ತೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ವಕೀಲ ಸಮೂಹದಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ ಕಲ್ಲೂರ ಹಾಗೂ ಎಸ್.ಕೆ. ನದಾಫ್, ಕೆ.ಆರ್. ಚೆನ್ನಪ್ಪಗೌಡ,  ಅನಿಲ ಸಿಂಗಟಾಲಕೇರಿ, ಟಿ.ಆರ್. ಕೋಮತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 “ಗದಗ ಜಿಲ್ಲೆಯ ಅಭಿವೃದ್ಧಿಗೆ ಎಚ್.ಕೆ. ಪಾಟೀಲರ ಕೊಡುಗೆ ಅಪಾರ. ಇಂತಹ ಅನುಭವಿ ನಾಯಕತ್ವಕ್ಕೆ ಸಚಿವ ಸ್ಥಾನ ಅಗತ್ಯ.”

ಮೋಹನ ಭಜಂತ್ರಿ

ರೈತನಿಗೆ ಸಾಲ ಸಿಗದಿದ್ದರೆ ಅಭಿವೃದ್ಧಿ ಅಸಾಧ್ಯ: ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ: ಬ್ಯಾಂಕಿಂಗ್ ವ್ಯವಸ್ಥೆ ಕೇವಲ ಹಣಕಾಸು ವ್ಯವಹಾರಗಳಿಗೆ ಸೀಮಿತವಾಗದೇ ರೈತರು, ಬಡವರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಬಲ ತುಂಬಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ (ಡಿಎಲ್‌ಆರ್‌ಸಿ) ಹಾಗೂ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ (ಡಿಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿ ಕ್ಷೇತ್ರದಲ್ಲಿ ಒಂದು ಶೇಕಡಾ ಬೆಳವಣಿಗೆಯಾದರೆ ಉತ್ಪಾದನಾ ಕ್ಷೇತ್ರದಲ್ಲಿ ನಾಲ್ಕು ಶೇಕಡಾ ಹಾಗೂ ಸೇವಾ ಕ್ಷೇತ್ರದಲ್ಲಿ ಹತ್ತು ಶೇಕಡಾ ಬೆಳವಣಿಗೆ ಸಾಧ್ಯ. ರೈತರ ಕೊಳ್ಳುವ ಶಕ್ತಿ ಹೆಚ್ಚಿದಾಗ ದೇಶದ ಆರ್ಥಿಕ ಚಟುವಟಿಕೆಗಳೂ ವೇಗ ಪಡೆಯುತ್ತವೆ,” ಎಂದು ಹೇಳಿದರು.

ರಾಜ್ಯ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ನೀಡುತ್ತಿದ್ದರೂ ಎಲ್ಲ ರೈತರಿಗೆ ಅದರ ಲಾಭ ಸಿಗುತ್ತಿಲ್ಲ. ಹೀಗಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಸಾಲ ವಿತರಿಸಿ ರೈತರ ಬೆನ್ನಿಗೆ ನಿಲ್ಲಬೇಕು ಎಂದು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳ ವಿಸ್ತರಣೆ ಅಗತ್ಯ. ರಾಷ್ಟ್ರೀಕೃತ ಬ್ಯಾಂಕುಗಳು ಹೊಸ ಶಾಖೆ ಆರಂಭಿಸಿ ಜನರಿಗೆ ಸುಲಭ ಸೇವೆ ಒದಗಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮುದ್ರಾ ಯೋಜನೆಯಡಿ ಯುವ ಉದ್ಯಮಿಗಳಿಗೆ ಹೆಚ್ಚಿನ ಸಾಲ ವಿತರಿಸಬೇಕು ಎಂದರು.

ಸ್ವಸಹಾಯ ಸಂಘಗಳು, ಮಹಿಳಾ ಗುಂಪುಗಳು, ಸಣ್ಣ ಕೈಗಾರಿಕೆಗಳು ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ಸುಲಭ ಸಾಲ ಸೌಲಭ್ಯ ದೊರೆಯಬೇಕು. ಕ್ರೆಡಿಟ್ ಕಾರ್ಡ್ ಸೇರಿದಂತೆ ವಿವಿಧ ಹಣಕಾಸು ನೆರವು ನೀಡುವ ಮೂಲಕ ಅವರ ಜೀವನಮಟ್ಟ ಸುಧಾರಣೆಗೆ ಬ್ಯಾಂಕುಗಳು ಕೈಜೋಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಂತೋಷ್ ಎಂ.ವಿ. ಅವರು 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಬ್ಯಾಂಕಿಂಗ್ ಪ್ರಗತಿ ವರದಿ ಮಂಡಿಸಿದರು. ಜಿಲ್ಲೆಯಲ್ಲಿ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ಶೇ. 98.73ರಷ್ಟು ಗುರಿ ಸಾಧನೆಯಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ 7,093 ಅರ್ಜಿಗಳು ಮಂಜೂರಾಗಿದ್ದು, 6,944 ಫಲಾನುಭವಿಗಳಿಗೆ ಸಾಲ ವಿತರಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಆರ್‌ಬಿಐ ಅಧಿಕಾರಿ ವಿಜಯಶ್ರೀ, ನಬಾರ್ಡ್ ಎಜಿಎಂ ಹನುಮಂತರಾಜು, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ರಾಘವೇಂದ್ರ ರಾವ್ ಸೇರಿದಂತೆ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 “ರೈತ, ಬಡವರು ಮತ್ತು ಮಹಿಳೆಯರಿಗೆ ಹೆಚ್ಚು ಸಾಲ ಸೌಲಭ್ಯ ನೀಡಿದಾಗ ಮಾತ್ರ ಗ್ರಾಮೀಣ ಆರ್ಥಿಕತೆ ಬಲಿಷ್ಠವಾಗುತ್ತದೆ.”

ಬಸವರಾಜ ಬೊಮ್ಮಾಯಿ, ಸಂಸದ

 

ಮಳೆಗಾಗಿ ರೈತರ ವಿಶೇಷ ಪೂಜೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮುಂಗಾರು ವಿಳಂಬದಿಂದ ಆತಂಕಗೊಂಡಿರುವ ರೈತರು ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ವರುಣ ದೇವರ ಕೃಪೆಗೆ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು.

ಗ್ರಾಮದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಭಿಷೇಕ ಮತ್ತು ಪೂಜೆ ನೆರವೇರಿಸಲಾಯಿತು. ಬಳಿಕ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ದೇವರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

ದುರ್ಗಾದೇವಿ ಕೆರೆಯ ದಂಡೆಯಲ್ಲಿ ಮಣ್ಣಿನಿಂದ ಈಶ್ವರ ಲಿಂಗ ಹಾಗೂ ಬಸವಣ್ಣನ ಮೂರ್ತಿ ನಿರ್ಮಿಸಿ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿದರು. ಷಡಕ್ಷರಯ್ಯ ಬದ್ದಿಮಠ ಅವರು ಮಂತ್ರಘೋಷಗಳೊಂದಿಗೆ ಪೂಜಾ ವಿಧಿವಿಧಾನ ನಡೆಸಿಕೊಟ್ಟರು.

ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಹಾಗೂ ಗ್ರಾಮಸ್ಥರು ಭಕ್ತಿಭಾವದಿಂದ ಪೂಜೆಯಲ್ಲಿ ಭಾಗವಹಿಸಿ ವರುಣ ದೇವರಲ್ಲಿ ಮಳೆಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಿತು.

ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರಿಗೆ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿತ್ತು.

ಗ್ರಾಮದ ಸುತ್ತಮುತ್ತಲಿನ ಹಲವೆಡೆ ಮಳೆ ಸುರಿದು ಬಿತ್ತನೆ ಕಾರ್ಯ ಆರಂಭವಾಗಿದ್ದರೂ, ಲಕ್ಕುಂಡಿಯಲ್ಲಿ ಇನ್ನೂ ಮಳೆಯಾಗದ ಕಾರಣ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರೈತರಾದ ಪ್ರಭು ಕುಂಬಾರ, ಶಿವಪ್ಪ ಬಿನ್ನಾಳ, ಅಜ್ಜಪ್ಪ ಕವಲೂರು, ಬಸವರಾಜ ಹಣವಾಳ, ಈಶಪ್ಪ ಕುಂಬಾರ ಹಾಗೂ ಬಸಯ್ಯ ನರಗುಂದಮಠ ತಿಳಿಸಿದರು.

 

error: Content is protected !!