Home Blog

ಹನೂರು ಭಾಗದ ಜನರೇ ಗಮನಿಸಿ: ಇಂದು 8 ಗಂಟೆ ಪವರ್‌ ಕಟ್!

0

ಹನೂರು: ಹನೂರು ಉಪವಿಭಾಗದ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಚೆಸ್ಕಾಂ ವತಿಯಿಂದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿದ್ಯುತ್ ಕಡಿತ ಘೋಷಿಸಲಾಗಿದೆ.

ಈ ಪ್ರದೇಶಗಳಲ್ಲಿ ಪವರ್‌ ಕಟ್:

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬಂಡಳ್ಳಿ, ಅಜ್ಜೀಪುರ, ರಾಮಾಪುರ, ಕೌದಳ್ಳಿ ಮತ್ತು ಮಾಟಳ್ಳಿ ಸೇರಿದಂತೆ ಸಂಬಂಧಿತ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಇದರಿಂದ ಈ ಪ್ರದೇಶಗಳ ಮನೆಗಳು, ಅಂಗಡಿಗಳು, ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಸುಮಾರು 8 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ಅವಲಂಬಿತ ದೈನಂದಿನ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಮುಂಚಿತವಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ನಿರ್ವಹಣಾ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ವಿದ್ಯುತ್ ಕಂಬಗಳು, ಹರಿದು ಬಿದ್ದಿರುವ ವಿದ್ಯುತ್ ತಂತಿಗಳು ಹಾಗೂ ಇತರ ವಿದ್ಯುತ್ ಉಪಕರಣಗಳ ಸಮೀಪ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನಿಗದಿತ ಸಮಯಕ್ಕಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸರಬರಾಜು ಪುನರಾರಂಭಿಸುವ ಸಾಧ್ಯತೆಯಿದೆ.

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಥವಾ ತುರ್ತು ಸಹಾಯಕ್ಕಾಗಿ ಹನೂರು ಉಪವಿಭಾಗದ 08224-295882 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ ಮನವಿ ಮಾಡಿದೆ.

ಶ್ರಾವಣ ಮಂಗಳವಾರ: ಮಂಗಳಗೌರಿ ವ್ರತದಂದು ಈ ತಪ್ಪುಗಳನ್ನು ಮಾಡಲೇಬೇಡಿ!

0

ಶ್ರಾವಣ ಮಾಸದ ಪ್ರತಿಯೊಂದು ದಿನವೂ ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶೇಷ ಮಹತ್ವ ಹೊಂದಿದೆ.

ಅದರಲ್ಲೂ ಶ್ರಾವಣ ಮಾಸದ ಮಂಗಳವಾರವನ್ನು ಮಂಗಳಗೌರಿ ವ್ರತಕ್ಕೆ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ವಿವಾಹಿತ ಮಹಿಳೆಯರು ಕುಟುಂಬದ ಶ್ರೇಯಸ್ಸು, ಸಮೃದ್ಧಿ ಹಾಗೂ ಅಖಂಡ ಸೌಭಾಗ್ಯಕ್ಕಾಗಿ ಮಂಗಳಗೌರಿ ದೇವಿಯನ್ನು ಭಕ್ತಿಯಿಂದ ಆರಾಧಿಸುತ್ತಾರೆ.

ಶ್ರಾವಣದ ಮೊದಲ ಮಂಗಳವಾರದಿಂದ ಆರಂಭವಾಗುವ ಈ ವ್ರತವನ್ನು ಶ್ರದ್ಧೆಯಿಂದ ಆಚರಿಸುವುದರಿಂದ ಕುಟುಂಬದಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಉಪವಾಸ, ಪೂಜೆ ಹಾಗೂ ಗೌರಿ ದೇವಿಯ ಆರಾಧನೆ ಈ ವ್ರತದ ಪ್ರಮುಖ ಭಾಗಗಳಾಗಿವೆ.

ಆದರೆ ಈ ಪವಿತ್ರ ದಿನದಂದು ಕೆಲವು ಕೆಲಸಗಳನ್ನು ಮಾಡಬಾರದು ಎಂಬ ಧಾರ್ಮಿಕ ನಂಬಿಕೆಯೂ ಇದೆ. ಅವುಗಳೇನು ಎಂಬ ಮಾಹಿತಿ ಇಲ್ಲಿದೆ.

ಮಂಗಳಗೌರಿ ವ್ರತದ ದಿನ ಮನೆಯಲ್ಲಿ ಸಾತ್ವಿಕ ವಾತಾವರಣವನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಧಾರ್ಮಿಕ ನಂಬಿಕೆಗಳು ಹೇಳುತ್ತವೆ.

ಈ ದಿನ ಮಾಂಸ, ಮೀನು, ಮೊಟ್ಟೆ ಹಾಗೂ ಮದ್ಯಪಾನ ಮಾಡುವುದನ್ನು ತಪ್ಪಿಸಬೇಕು ಎಂದು ಹಿರಿಯರು ಹಾಗೂ ಧಾರ್ಮಿಕ ಪಂಡಿತರು ಸಲಹೆ ನೀಡುತ್ತಾರೆ. ವ್ರತ ಆಚರಿಸುವವರು ವಿಶೇಷವಾಗಿ ಸಾತ್ವಿಕ ಆಹಾರವನ್ನೇ ಸೇವಿಸುವುದು ಸಂಪ್ರದಾಯವಾಗಿದೆ.

ಈರುಳ್ಳಿ, ಬೆಳ್ಳುಳ್ಳಿ ಸೇವನೆಗೂ ನಿರ್ಬಂಧ:

ವ್ರತ ಆಚರಿಸುವವರು ಆಹಾರದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸುವುದನ್ನು ತಪ್ಪಿಸುತ್ತಾರೆ. ಕೆಲವು ಧಾರ್ಮಿಕ ಸಂಪ್ರದಾಯಗಳಲ್ಲಿ ಬದನೆಕಾಯಿ ಹಾಗೂ ನಿರ್ದಿಷ್ಟ ಬಗೆಯ ಸೊಪ್ಪುಗಳನ್ನು ಕೂಡ ಈ ದಿನ ಸೇವಿಸಬಾರದು ಎಂದು ಹೇಳಲಾಗುತ್ತದೆ.

ಪ್ರದೇಶ ಹಾಗೂ ಕುಟುಂಬದ ಆಚರಣೆಗೆ ಅನುಗುಣವಾಗಿ ಆಹಾರ ಪದ್ಧತಿಯಲ್ಲಿ ವ್ಯತ್ಯಾಸಗಳಿರಬಹುದು.

ಉಗುರು, ಕೂದಲು ಕತ್ತರಿಸಬೇಡಿ:

ಶ್ರಾವಣ ಮಂಗಳವಾರದಂದು ಉಗುರು ಕತ್ತರಿಸುವುದು ಹಾಗೂ ಕೂದಲು ಕತ್ತರಿಸಿಕೊಳ್ಳುವುದನ್ನು ತಪ್ಪಿಸಬೇಕು ಎಂಬ ನಂಬಿಕೆ ಹಲವು ಕಡೆಗಳಲ್ಲಿ ಇದೆ.

ಇಂತಹ ಆಚರಣೆಗಳು ಧಾರ್ಮಿಕ ನಂಬಿಕೆಗಳಿಗೆ ಸಂಬಂಧಿಸಿದ್ದಾಗಿದ್ದು, ಈ ದಿನದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಇವುಗಳನ್ನು ಪಾಲಿಸಲಾಗುತ್ತದೆ.

ಕೋಪ, ಜಗಳದಿಂದ ದೂರವಿರಿ:

ಮಂಗಳಗೌರಿ ವ್ರತದಲ್ಲಿ ಪೂಜೆ ಹಾಗೂ ಉಪವಾಸದ ಜೊತೆಗೆ ಮನಸ್ಸಿನ ಶುದ್ಧತೆಗೂ ಮಹತ್ವ ನೀಡಲಾಗುತ್ತದೆ.

ಹೀಗಾಗಿ ಈ ದಿನ ಯಾರನ್ನೂ ಅವಮಾನಿಸುವುದು, ಕೆಟ್ಟ ಮಾತುಗಳನ್ನಾಡುವುದು, ಜಗಳ ಮಾಡುವುದು ಅಥವಾ ಅನಗತ್ಯವಾಗಿ ಕೋಪಗೊಳ್ಳುವುದನ್ನು ತಪ್ಪಿಸಬೇಕು ಎಂದು ನಂಬಲಾಗಿದೆ.

ಶಾಂತ ಮನಸ್ಸಿನಿಂದ ದೇವರನ್ನು ಸ್ಮರಿಸಿ, ಕುಟುಂಬದವರೊಂದಿಗೆ ಸಂತೋಷದಿಂದ ಸಮಯ ಕಳೆಯುವುದು ವ್ರತದ ಭಾಗವೆಂದು ಪರಿಗಣಿಸಲಾಗುತ್ತದೆ.

ಭಕ್ತಿಯಿಂದ ಆಚರಿಸಿ:

ಮಂಗಳಗೌರಿ ವ್ರತದ ಆಚರಣೆಗಳು ಕುಟುಂಬದ ಸಂಪ್ರದಾಯ ಮತ್ತು ಸ್ಥಳೀಯ ಪದ್ಧತಿಗೆ ಅನುಗುಣವಾಗಿ ಬದಲಾಗಬಹುದು. ಹೀಗಾಗಿ ತಮ್ಮ ಕುಟುಂಬದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯಗಳನ್ನು ಪಾಲಿಸುವುದು ಸೂಕ್ತ.

ಶ್ರಾವಣ ಮಂಗಳವಾರದಂದು ಶ್ರದ್ಧೆ, ಸಾತ್ವಿಕತೆ ಹಾಗೂ ಸಂಯಮದಿಂದ ಮಂಗಳಗೌರಿ ದೇವಿಯನ್ನು ಆರಾಧಿಸುವುದು ಮುಖ್ಯ ಎಂಬುದು ಭಕ್ತರ ನಂಬಿಕೆಯಾಗಿದೆ.

ಮೂವರ ಎನ್‌ಕೌಂಟರ್‌ಗೆ ಟ್ವಿಸ್ಟ್: ಘಟನಾ ಸ್ಥಳದಲ್ಲಿ ಸಿಕ್ಕ ಹೊಸ ಚಪ್ಪಲಿ ಬಗ್ಗೆ ACF ಹೇಳಿದ್ದೇನು?

0

ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಜಪ್ತಿ ಮಾಡಲಾದ ವಸ್ತುಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ.

ವಿಶೇಷವಾಗಿ, ಸ್ಟಿಕ್ಕರ್ ಕೂಡ ಕಳಚದ ಹೊಸ ಚಪ್ಪಲಿ ಪತ್ತೆಯಾಗಿರುವುದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ಕಾವೇರಿ ವನ್ಯಧಾಮದ ಎಸಿಎಫ್ ಮರಿಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಚೀಲಗಳು ಪತ್ತೆಯಾಗಿದ್ದು, ಅವುಗಳಲ್ಲಿ ಮಾಂಸ, ಬಂದೂಕು, ಚಪ್ಪಲಿ, ಟಾರ್ಚ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಘಟನಾ ಸ್ಥಳದಲ್ಲಿ ಹೊಸ ಚಪ್ಪಲಿ ಪತ್ತೆಯಾಗಿರುವ ಕುರಿತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಕಾಡಿಗೆ ಬೇಟೆಗೆ ತೆರಳಿದವರು ಹೊಸ ಚಪ್ಪಲಿಗಳನ್ನು ತೆಗೆದುಕೊಂಡು ಹೋಗಿದ್ದರೇ? ಅವುಗಳನ್ನು ಬಳಸದೇ ಏಕೆ ಬಿಟ್ಟು ಹೋಗಿದ್ದರು ಎಂಬ ಅನುಮಾನಗಳು ವ್ಯಕ್ತವಾಗಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸಿಎಫ್ ಮರಿಸ್ವಾಮಿ, “ನಮ್ಮ ಸಿಬ್ಬಂದಿ ಅಲ್ಲಿಗೆ ಹೊಸ ಚಪ್ಪಲಿ ತೆಗೆದುಕೊಂಡು ಹೋಗಿ ಇಟ್ಟಿಲ್ಲ. ಘಟನಾ ಸ್ಥಳದಲ್ಲಿ ನಾಲ್ಕು ಜೊತೆ ಚಪ್ಪಲಿಗಳು ಸಿಕ್ಕಿವೆ. ಕಿತ್ತುಹೋದರೆ ಇರಲಿ ಎಂದು ತಂದಿಟ್ಟುಕೊಂಡಿರಬಹುದು” ಎಂದು ತಿಳಿಸಿದ್ದಾರೆ.

ಬ್ಯಾಗ್‌ಗಳಲ್ಲಿ ದಿನಸಿ ಪದಾರ್ಥಗಳು, ಟಾರ್ಚ್ ಸೇರಿದಂತೆ ಬೇಟೆಗೆ ಬಳಸುವ ಸಲಕರಣೆಗಳು ಪತ್ತೆಯಾಗಿವೆ. ಅರಣ್ಯಕ್ಕೆ ಬಂದಿದ್ದವರು ಬೇಟೆಗಾರರು ಎಂದು ಹೇಳಿದ್ದಾರೆ.

“ಅವರು ದನ ಮೇಯಿಸಲು ಅಥವಾ ಹುಡುಕಲು ಅರಣ್ಯಕ್ಕೆ ಪ್ರವೇಶಿಸಿರಲಿಲ್ಲ. ಬೇಟೆಯಾಡುವ ಉದ್ದೇಶದಿಂದಲೇ ಅರಣ್ಯಕ್ಕೆ ಬಂದಿದ್ದರು. ಅವರು ಸುಮಾರು 8ರಿಂದ 10 ಕಿಲೋಮೀಟರ್‌ವರೆಗೆ ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರು. ಎನ್‌ಕೌಂಟರ್ ನಡೆದ ಸ್ಥಳದಿಂದ ಸುಮಾರು 75 ಮೀಟರ್ ದೂರದಲ್ಲಿ ಎರಡು ಬ್ಯಾಗ್‌ಗಳಲ್ಲಿ ಮಾಂಸ ಪತ್ತೆಯಾಗಿದೆ ಎಂದು ಎಸಿಎಫ್ ಮಾಹಿತಿ ನೀಡಿದ್ದಾರೆ.

ಒಬ್ಬನೇ ಸಿಬ್ಬಂದಿ ಗುಂಡು ಹಾರಿಸಿದ್ದ?

ಮೂವರ ಮೇಲೆ ಗುಂಡು ಹಾರಿಸಿದವರು ಒಬ್ಬನೇ ಅರಣ್ಯ ಸಿಬ್ಬಂದಿ. ಉಳಿದ ಸಿಬ್ಬಂದಿ ಆತನೊಂದಿಗೆ ಇದ್ದರು ಎಂದು ಅವರು ತಿಳಿಸಿದ್ದಾರೆ.

ಆತ್ಮರಕ್ಷಣೆಗಾಗಿ ಶೂಟೌಟ್ ನಡೆಸಲಾಗಿದೆ ಎಂಬುದು ಅರಣ್ಯ ಇಲಾಖೆಯ ನಿಲುವಾಗಿದ್ದು, ಪ್ರಕರಣದ ಕುರಿತು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ವಿವಿಧ ಪ್ರಶ್ನೆಗಳು ಕೇಳಿಬಂದಿವೆ.

ಶೂಟೌಟ್ ಪ್ರಕರಣದ ಬಳಿಕ ಅರಣ್ಯ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ವಿಚಾರವೂ ಚರ್ಚೆಗೆ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಎಸಿಎಫ್, ಯಾವುದೇ ದುರ್ಘಟನೆ ನಡೆಯಬಾರದು ಎಂಬ ಕಾರಣಕ್ಕೆ ಅವರನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿತ್ತು ಎಂದು ತಿಳಿಸಿದ್ದಾರೆ.

“ಅವರು ಹೆದರಿ ಓಡುವ ಪರಿಸ್ಥಿತಿ ಇಲ್ಲ. ತನಿಖಾ ತಂಡದ ಮುಂದೆ ಹಾಜರುಪಡಿಸಿ ಹೇಳಿಕೆ ಪಡೆಯಲಾಗಿದೆ” ಎಂದು ಮರಿಸ್ವಾಮಿ ಹೇಳಿದ್ದಾರೆ.

ಕಾವೇರಿ ವನ್ಯಧಾಮದ ಶೂಟೌಟ್ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಪ್ರಾಥಮಿಕ ವರದಿ ಇಂದು ಅಥವಾ ನಾಳೆ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಶೂಟೌಟ್ ನಡೆಸಿದ ಅರಣ್ಯ ಸಿಬ್ಬಂದಿಯನ್ನೂ ಅರಣ್ಯಾಧಿಕಾರಿಗಳ ಕಣ್ಗಾವಲಿನಲ್ಲಿ ಇರಿಸಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿ ಘಟನೆಯ ಕುರಿತು ಹೇಳಿಕೆ ಪಡೆಯಲಾಗಿದೆ.

ಘಟನಾ ಸ್ಥಳದಲ್ಲಿ ಪತ್ತೆಯಾದ ವಸ್ತುಗಳು, ಶೂಟೌಟ್ ನಡೆದ ಸಂದರ್ಭ, ಅರಣ್ಯ ಸಿಬ್ಬಂದಿಯ ಹೇಳಿಕೆಗಳು ಹಾಗೂ ಮೃತರ ಹಿನ್ನೆಲೆ ಸೇರಿದಂತೆ ಹಲವು ಅಂಶಗಳನ್ನು ತನಿಖಾ ತಂಡ ಪರಿಶೀಲಿಸುತ್ತಿದೆ. ತನಿಖಾ ವರದಿ ಬಳಿಕ ಶೂಟೌಟ್ ಪ್ರಕರಣದಲ್ಲಿ ನಿಜವಾಗಿ ಯಾರ ತಪ್ಪಿದೆ ಎಂಬುದು ಸ್ಪಷ್ಟವಾಗಲಿದೆ.

ಕೇದಾರನಾಥದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ!

0

ಬೆಂಗಳೂರು: ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಪವಿತ್ರ ಕೇದಾರನಾಥ ಕ್ಷೇತ್ರದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಗುರುಲಿಂಗಯ್ಯ (76) ಅವರು ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಕಳೆದ ಕೆಲವು ದಿನಗಳಿಂದ ಬಳಲುತ್ತಿದ್ದ ಗುರುಲಿಂಗಯ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೇದಾರನಾಥ ಕ್ಷೇತ್ರದಲ್ಲಿ ದಶಕಗಳ ಕಾಲ ಶಿವನ ಆರಾಧನೆ ಹಾಗೂ ಪೂಜಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ಅರ್ಚಕರ ನಿಧನಕ್ಕೆ ಭಕ್ತರು ಹಾಗೂ ಧಾರ್ಮಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕ ಬಾಗೇವಾಡಿ ಗ್ರಾಮದವರಾದ ಗುರುಲಿಂಗಯ್ಯ ಅವರ ಕುಟುಂಬ ಕಳೆದ ಮೂರು ತಲೆಮಾರುಗಳಿಂದ ಉತ್ತರಾಖಂಡದಲ್ಲಿ ನೆಲೆಸಿದೆ.

ಕೇದಾರಪೀಠದ 322ನೇ ಜಗದ್ಗುರು ರಾವಲ್ ಶಾಂತ ಶಿವಾಚಾರ್ಯ ಭಗವತ್ಪಾದರ ಕಾಲದಲ್ಲಿ ಗುರುಲಿಂಗಯ್ಯ ಅವರು ಕೇದಾರನಾಥ ಕ್ಷೇತ್ರದಲ್ಲಿ ಅರ್ಚಕರಾಗಿ ಸೇವೆ ಆರಂಭಿಸಿದ್ದರು.

1970ರಿಂದ ಸುಮಾರು 40 ವರ್ಷಗಳ ಕಾಲ ಕೇದಾರನಾಥೇಶ್ವರನ ಪ್ರಧಾನ ಅರ್ಚಕರಾಗಿ ನಿಷ್ಠೆ, ಶ್ರದ್ಧೆ ಹಾಗೂ ಭಕ್ತಿಯಿಂದ ಸೇವೆ ಸಲ್ಲಿಸಿದ್ದರು. ತಮ್ಮ ಸರಳತೆ ಹಾಗೂ ಧಾರ್ಮಿಕ ಸೇವೆಯ ಮೂಲಕ ಭಕ್ತರು ಹಾಗೂ ಕ್ಷೇತ್ರದೊಂದಿಗೆ ನಿಕಟ ಸಂಬಂಧ ಹೊಂದಿದ್ದರು.

ಕೇದಾರನಾಥ ಪೀಠದ ಸಾಂಪ್ರದಾಯಿಕ ನಿಯಮಗಳ ಪ್ರಕಾರ, ದಕ್ಷಿಣ ಭಾರತ, ವಿಶೇಷವಾಗಿ ಕರ್ನಾಟಕದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜಂಗಮ ಅರ್ಚಕರೇ ಕೇದಾರನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುವ ರಾವಲ್ ಅಥವಾ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುವ ಪರಂಪರೆ ಇದೆ.

ಈ ಪವಿತ್ರ ಧಾರ್ಮಿಕ ಪರಂಪರೆಯಲ್ಲಿ ಗುರುಲಿಂಗಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದರು. ದಶಕಗಳ ಕಾಲ ಕೇದಾರನಾಥೇಶ್ವರನ ಆರಾಧನೆ ಹಾಗೂ ಪೂಜಾ ಕೈಂಕರ್ಯದಲ್ಲಿ ತೊಡಗಿಸಿಕೊಂಡು ಧಾರ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಗೌರವ ಪಡೆದಿದ್ದರು.

ಗುರುಲಿಂಗಯ್ಯ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಚಿಕ್ಕ ಬಾಗೇವಾಡಿಗೆ ತರಲಾಗಿದೆ.

ಇಂದು ಸಂಜೆ 4 ಗಂಟೆಗೆ ವೀರಶೈವ ಲಿಂಗಾಯತ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಸಕಲ ಗೌರವಗಳೊಂದಿಗೆ ಅವರ ಕ್ರಿಯಾ ಸಮಾಧಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ.

ನಾಲ್ಕು ದಶಕಗಳ ಕಾಲ ಕೇದಾರನಾಥ ಕ್ಷೇತ್ರದಲ್ಲಿ ಶಿವನ ಸೇವೆ ಸಲ್ಲಿಸಿದ ಹಿರಿಯ ಅರ್ಚಕರ ಅಗಲಿಕೆಯಿಂದ ಧಾರ್ಮಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಭಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

“ನೀವು ಸಾಕು ಎನ್ನುವ ಮೊದಲೇ ನಾನೇ ಮುಗಿಸಿದ್ದೇನೆ”: ಆ್ಯಂಕರಿಂಗ್‌ಗೆ ಅನುಪಮಾ ಗೌಡ ಗುಡ್‌ಬೈ!

0

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಅವರು ಆ್ಯಂಕರಿಂಗ್‌ಗೆ ವಿದಾಯ ಹೇಳಿದ್ದಾರೆ.

ಹಲವು ವರ್ಷಗಳಿಂದ ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳನ್ನು ನಿರೂಪಿಸುತ್ತಿದ್ದ ಅವರು, ಇದೀಗ ಅನಿವಾರ್ಯ ಕಾರಣಗಳಿಂದ ಆ್ಯಂಕರಿಂಗ್ ಜರ್ನಿಯನ್ನು ಅಪೂರ್ಣವಾಗಿ ಅಂತ್ಯಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ಆ್ಯಂಕರಿಂಗ್ ಕ್ಷೇತ್ರದಲ್ಲಿ ಅನುಪಮಾ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಅನುಪಮಾ ಗೌಡ ಅವರು ಕಲರ್ಸ್ ಕನ್ನಡ ಸೇರಿದಂತೆ ಹಲವು ವಾಹಿನಿಗಳ ಜನಪ್ರಿಯ ಕಾರ್ಯಕ್ರಮಗಳನ್ನು ನಿರೂಪಿಸಿ ಪ್ರೇಕ್ಷಕರ ಮನಗೆದ್ದಿದ್ದರು.

ಹಲವು ಜನಪ್ರಿಯ ಶೋಗಳ ನಿರೂಪಕಿ:

ಅನುಪಮಾ ಗೌಡ ಅವರು ‘ಮಜಾ ಭಾರತ್’, ‘ಕನ್ನಡ ಕೋಗಿಲೆ’, ‘ರಾಜಾ ರಾಣಿ’, ‘ನಮ್ಮಮ್ಮ ಸೂಪರ್ ಸ್ಟಾರ್’, ‘ಸುವರ್ಣ ಸೂಪರ್‌ಸ್ಟಾರ್ಸ್’, ‘ಸುವರ್ಣ ಜ್ಯಾಕ್‌ಪಾಟ್’, ‘ಗರ್ಲ್ಸ್ vs ಬಾಯ್ಸ್’ ಹಾಗೂ ‘ಕ್ವಾಟ್ಲೆ ಕಿಚನ್’ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರೂಪಿಸಿದ್ದಾರೆ.

ಆದರೆ, ತಮ್ಮ ಕೊನೆಯ ಶೋವನ್ನು ಸಂಪೂರ್ಣವಾಗಿ ಮುಗಿಸುವ ಅವಕಾಶ ಸಿಗದಿರುವುದು ಅವರಿಗೆ ಬೇಸರ ತಂದಿದೆ. ಈ ಕುರಿತು ಮಾತನಾಡಿರುವ ಅವರು ತಮ್ಮ ಆ್ಯಂಕರಿಂಗ್ ಪಯಣವನ್ನು ನೆನಪಿಸಿಕೊಂಡಿದ್ದಾರೆ.

ತಮ್ಮ ವಿಡಿಯೋದಲ್ಲಿ ಅನುಪಮಾ ಗೌಡ ಅವರು, ಆ್ಯಂಕರಿಂಗ್‌ಗೆ ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

“ನಾನು ನಿಮ್ಮೆಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಹೊಸ ಶೋನಲ್ಲಿ ನಾನು ಇರಬೇಕಿತ್ತು. ಆದರೆ, ಇಲ್ಲ. ವಾಹಿನಿಯವರು ಏನೇನೋ ಪ್ರಾಮಿಸ್ ಮಾಡಿಕೊಂಡಿದ್ದಾರೆ. ಅದೇನು ಎಂಬುದು ನಾನು ಮಾಡಿಲ್ಲ. ಅಪೂರ್ಣವಾಗಿ ಈ ಪ್ರಯಾಣ ಕೊನೆ ಮಾಡುತ್ತಿದ್ದೇನೆ. ನೀವೆಲ್ಲ ‘ಸಾಕಮ್ಮ’ ಎನ್ನುವುದರೊಳಗೆ ನಾನೇ ಆ್ಯಂಕರಿಂಗ್ ಮುಗಿಸಿದ್ದೇನೆ” ಎಂದು ಭಾವುಕರಾಗಿ ಹೇಳಿದ್ದಾರೆ.

ಅಲ್ಲದೆ, ಮುಂದೆ ಮತ್ತೆ ಸೀರಿಯಲ್‌ಗೆ ಬರುತ್ತಾರೋ ಇಲ್ಲವೋ ಎಂಬುದು ತಮಗೂ ಗೊತ್ತಿಲ್ಲ ಎಂದು ಅನುಪಮಾ ತಿಳಿಸಿದ್ದಾರೆ.

ಅನುಪಮಾ ಗೌಡ ಅವರ ಈ ನಿರ್ಧಾರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಕೆಲವರು ತಮ್ಮ ನಿರ್ಧಾರವನ್ನು ಬದಲಿಸಿಕೊಳ್ಳುವಂತೆ ಮನವಿ ಮಾಡಿದರೆ, ಮತ್ತಷ್ಟು ಅಭಿಮಾನಿಗಳು ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲೂ ಅನುಪಮಾ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರ ಆ್ಯಂಕರಿಂಗ್ ಶೈಲಿಯನ್ನು ಮೆಚ್ಚಿಕೊಂಡಿರುವ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಅನುಪಮಾ ಗೌಡ ಅವರು 2003ರಲ್ಲಿ ಬಿಡುಗಡೆಯಾದ ‘ಲಂಕೇಶ್ ಪತ್ರಿಕೆ’ ಸಿನಿಮಾದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದರು. ಬಳಿಕ 2014ರಲ್ಲಿ ಪ್ರಸಾರವಾದ ‘ಅಕ್ಕ’ ಧಾರಾವಾಹಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ತಂದುಕೊಟ್ಟಿತು. ಈ ಧಾರಾವಾಹಿಯಲ್ಲಿ ಅವರು ದ್ವಿಪಾತ್ರದಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

2017-18ರಲ್ಲಿ ಪ್ರಸಾರವಾದ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸಿನಿಮಾಗಳಲ್ಲೂ ಅಭಿನಯಿಸಿರುವ ಅನುಪಮಾ ಗೌಡ ಅವರು ತಮ್ಮ ಅಭಿನಯಕ್ಕಾಗಿ ರಾಜ್ಯ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ನಟನೆ, ನಿರೂಪಣೆ ಹಾಗೂ ವಿವಿಧ ಕಿರುತೆರೆ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಅನುಪಮಾ ಗೌಡ ಅವರ ಆ್ಯಂಕರಿಂಗ್ ಜರ್ನಿ ಸದ್ಯಕ್ಕೆ ಅಂತ್ಯಗೊಂಡಿದ್ದು, ಮುಂದಿನ ದಿನಗಳಲ್ಲಿ ಅವರು ಯಾವ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 50 ಕಿ.ಮೀ ವೇಗದಲ್ಲಿ ಗಾಳಿ, ಈ ಜಿಲ್ಲೆಗಳಿಗೆ ಎಚ್ಚರಿಕೆ!

0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದರೊಂದಿಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಮತ್ತು ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 18ರಿಂದ 21ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಗುಡುಗು-ಮಿಂಚು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಆಗಸ್ಟ್ 22ರಿಂದ ಈ ಎಚ್ಚರಿಕೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಸದ್ಯದ IMD ಮುನ್ಸೂಚನೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಎಚ್ಚರಿಕೆ ನೀಡಲಾಗಿಲ್ಲ.

ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 18ರಿಂದ 21ರವರೆಗೆ ಗುಡುಗು-ಮಿಂಚು ಮತ್ತು ಬಲವಾದ ಮೇಲ್ಮೈ ಗಾಳಿಯ ಮುನ್ಸೂಚನೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲೂ ಗುಡುಗು-ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಮಳೆಯ ಸಂದರ್ಭದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ. ಗಾಳಿ ಬೀಸುವ ವೇಳೆ ಮರಗಳ ಕೆಳಗೆ, ವಿದ್ಯುತ್ ಕಂಬಗಳ ಸಮೀಪ ಹಾಗೂ ದುರ್ಬಲ ಕಟ್ಟಡಗಳ ಬಳಿ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲೂ ಒಂದೇ ರೀತಿಯ ಮಳೆಯಾಗುವುದಿಲ್ಲ. ಕೆಲವು ಜಿಲ್ಲೆಗಳಲ್ಲಿ ಚದುರಿದ ಮಳೆಯಾದರೆ, ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾವಾರು ಹವಾಮಾನ ಮುನ್ಸೂಚನೆಯನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವುದು ಮುಖ್ಯವಾಗಿದೆ.

ಒಟ್ಟಿನಲ್ಲಿ, ಕರ್ನಾಟಕದಲ್ಲಿ ಮಳೆ ಚಟುವಟಿಕೆ ಮುಂದುವರಿಯಲಿದ್ದು, ಆಗಸ್ಟ್ 18ರಿಂದ 21ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

‘ನಾನು ಬದುಕಿದ್ದೇನೆ’ ಎಂದರೂ ದಾಖಲೆಗಳಲ್ಲಿ ಸಾವು! ಆಸ್ತಿ ಉಳಿಸಿಕೊಳ್ಳಲು 70ರ ವೃದ್ಧನ ಹೋರಾಟ

0

ರಾಯಚೂರು: ಬದುಕಿರುವ 70 ವರ್ಷದ ವೃದ್ಧನನ್ನು ದಾಖಲೆಗಳಲ್ಲಿ ಸತ್ತಿದ್ದಾನೆ ಎಂದು ಬಿಂಬಿಸಿ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಆರೋಪ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಕೇಳಿಬಂದಿದೆ.

ತಮ್ಮದೇ ದುಡಿಮೆಯಿಂದ ಸಂಪಾದಿಸಿದ ಆಸ್ತಿಯನ್ನು ಮರಳಿ ಪಡೆಯಲು ಮೊಹಮ್ಮದ್ ಶರ್ಫುದ್ದಿನ್ ಎಂಬ ವೃದ್ಧ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದು, ನ್ಯಾಯಕ್ಕಾಗಿ ಕಣ್ಣೀರು ಹಾಕುವಂತಾಗಿದೆ.

ಶರ್ಫುದ್ದಿನ್ ಅವರು ಮುಂಬೈ ಹಾಗೂ ಬಹ್ರೇನ್‌ನಲ್ಲಿ ಅಧಿಕಾರಿಯಾಗಿ ಸುದೀರ್ಘ ಕಾಲ ಕೆಲಸ ಮಾಡಿದ್ದರು. ಅಲ್ಲಿನ ದುಡಿಮೆಯಿಂದ ಬಂದ ಹಣವನ್ನು ಪತ್ನಿ ರಸೂಲ್ ಬೀ ಅವರಿಗೆ ಕಳುಹಿಸುತ್ತಿದ್ದು, ಮಾನ್ವಿ ಪಟ್ಟಣದಲ್ಲಿ 6 ಮನೆಗಳು ಹಾಗೂ 2 ಅಂಗಡಿಗಳನ್ನು ಖರೀದಿಸಿದ್ದರು ಎನ್ನಲಾಗಿದೆ.

ಪತ್ನಿ ರಸೂಲ್ ಬೀ ನಿಧನರಾದ ಬಳಿಕ, ‘ಕರೀಷ್ಮಾ’ ಎಂಬುವವರು ಜೀವಂತವಾಗಿರುವ ಶರ್ಫುದ್ದಿನ್ ಅವರ ಹೆಸರಿನಲ್ಲಿ ಮಾನ್ವಿ ಪುರಸಭೆಯಿಂದ ನಕಲಿ ಮರಣ ಪ್ರಮಾಣ ಪತ್ರ ಪಡೆದು ಆಸ್ತಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮರಣ ಪ್ರಮಾಣ ಪತ್ರದಲ್ಲೇ ಹೆಸರು ವ್ಯತ್ಯಾಸ:

ಶರ್ಫುದ್ದಿನ್ ಅವರ ನೈಜ ದಾಖಲೆಗಳಲ್ಲಿ ‘ಮೊಹಮ್ಮದ್ ಶರ್ಫುದ್ದಿನ್, ತಂದೆ ಖಾಜಾ ಪಿರ್ ಸಾಬ್’ ಎಂದು ನಮೂದಿಸಲಾಗಿದೆ. ಆದರೆ ನಕಲಿ ಎಂದು ಆರೋಪಿಸಲಾಗಿರುವ ಮರಣ ಪ್ರಮಾಣ ಪತ್ರದಲ್ಲಿ ‘ಶರ್ಫುದ್ದಿನ್, ತಂದೆ ಪಿರ್ ಸಾಬ್’ ಎಂದು ದಾಖಲಾಗಿದೆ.

ಈ ಕುರಿತು ತನಿಖೆ ನಡೆಸಿದ ಮಾನ್ವಿ ತಹಶೀಲ್ದಾರ್, ಮರಣ ಪ್ರಮಾಣ ಪತ್ರದಲ್ಲಿರುವ ಹೆಸರಿನ ವ್ಯಕ್ತಿ ಆ ಸ್ಥಳದಲ್ಲಿ ವಾಸವಾಗಿಲ್ಲ ಎಂದು ಪೊಲೀಸರಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನು 2025ರಲ್ಲಿ ಕಂದಾಯ ಇಲಾಖೆ ನೀಡಿರುವ ವರದಿಯಲ್ಲೂ ಶರ್ಫುದ್ದಿನ್ ಅವರು ಜೀವಂತವಾಗಿದ್ದಾರೆ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆದರೂ ಇದುವರೆಗೆ ನ್ಯಾಯ ದೊರೆತಿಲ್ಲ ಎಂಬುದು ವೃದ್ಧನ ಅಳಲು.

ಅಧಿಕಾರಿಗಳ ವಿರುದ್ಧವೂ ಆರೋಪ:

ಮಾನ್ವಿ ಪುರಸಭೆಯ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಮೀಲಾಗಿ ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ವೃದ್ಧ ಶರ್ಫುದ್ದಿನ್ ಅವರಿಗೆ ತಕ್ಷಣ ನ್ಯಾಯ ಒದಗಿಸಬೇಕು ಎಂದು ಸ್ಥಳೀಯ ಹೋರಾಟಗಾರ ಶಿವರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾನ್ವಿ ಪುರಸಭೆ ಆಯುಕ್ತ ಪರಶುರಾಮ್ ದೇವಮಾನೆ, ದಾಖಲೆಗಳಲ್ಲಿ ಪರಸ್ಪರ ವ್ಯತ್ಯಾಸಗಳಿದ್ದು, ಈ ಹಿಂದೆ ನ್ಯಾಯಾಲಯ ಹಾಗೂ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಅರ್ಜಿಗಳು ವಜಾಗೊಂಡಿವೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ವರದಿ ಕುರಿತು ಮಾಹಿತಿ ಇಲ್ಲ. ಅಗತ್ಯವಿದ್ದರೆ ನ್ಯಾಯಾಲಯದ ಮೂಲಕ ಪ್ರಶ್ನಿಸಬಹುದು ಎಂದು ಅವರು ಹೇಳಿದ್ದಾರೆ.

ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಲಾಗಿದೆ ಎಂಬ ಆರೋಪ ಗಂಭೀರ ಸ್ವರೂಪ ಪಡೆದಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರತರಬೇಕೆಂಬ ಆಗ್ರಹ ಕೇಳಿಬಂದಿದೆ.

ಬೆಂಗಳೂರು ವಾಹನ ಸವಾರರೇ ಗಮನಿಸಿ: ಫ್ರೀಡಂ ಪಾರ್ಕ್ ಸುತ್ತಮುತ್ತ ಇಂದು ಸಂಚಾರ ನಿರ್ಬಂಧ!

0

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್‌ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ರಸ್ತೆಗಳ ಸಂಚಾರದಲ್ಲಿ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಜಾರಿಯಲ್ಲಿರಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕೆ.ಜಿ. ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಮಹಾರಾಣಿ ಅಂಡರ್‌ಪಾಸ್ ಮಾರ್ಗವನ್ನು ಬಳಸಬೇಕಾಗಿದೆ.

ಇನ್ನು ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್. ಸರ್ಕಲ್ ಕಡೆಗೆ ತೆರಳುವ ವಾಹನ ಸವಾರರು ಸಂಚಾರ ದಟ್ಟಣೆ ತಪ್ಪಿಸಲು ಹಳೆಯ ಜೆಡಿಎಸ್ ಕಚೇರಿ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸಬಹುದಾಗಿದೆ.

ಗಾಂಧಿನಗರ ಕಡೆಗೆ ತೆರಳುವ ವಾಹನಗಳ ಅನುಕೂಲಕ್ಕಾಗಿ ಸುಬ್ಬಣ್ಣ ಜಂಕ್ಷನ್‌ನಿಂದ ಎಂ.ಟಿ.ಆರ್. ಜಂಕ್ಷನ್‌ವರೆಗೆ ಇರುವ ಏಕಮುಖ ಸಂಚಾರ ರಸ್ತೆಯನ್ನು ತಾತ್ಕಾಲಿಕವಾಗಿ ದ್ವಿಮುಖ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಪಾರ್ಕಿಂಗ್‌ಗೆ ನಿರ್ಬಂಧ:

ಇದೇ ವೇಳೆ ಸುಗಮ ಸಂಚಾರದ ದೃಷ್ಟಿಯಿಂದ ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವೈ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಯಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡಲು ಅವಕಾಶವಿರುವುದಿಲ್ಲ ಎಂದು ಸಂಚಾರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನ ಸವಾರರು ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

ಸ್ವಾತಂತ್ರ್ಯದ ಮೌಲ್ಯ ಅರಿತು ಕರ್ತವ್ಯ ಪಾಲಿಸೋಣ: ತಹಸೀಲ್ದಾರ್ ಧನಂಜಯ ಎಂ. ಕರೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸ್ವತಂತ್ರ ಭಾರತದ ಶತಮಾನೋತ್ಸವದತ್ತ ದೇಶ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ‘ನಾವೆಲ್ಲ ಭಾರತಮಾತೆಯ ಮಕ್ಕಳು’ ಎಂಬ ಒಗ್ಗಟ್ಟಿನ ಮಂತ್ರದೊಂದಿಗೆ ನವಭಾರತ ನಿರ್ಮಾಣದ ಸಂಕಲ್ಪ ಕೈಗೊಂಡು ದೇಶದ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಹಸೀಲ್ದಾರ್ ಧನಂಜಯ ಎಂ. ಕರೆ ನೀಡಿದರು.

ಪಟ್ಟಣದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ನಡೆದ ೮೦ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

೧೯೪೭ರ ಆಗಸ್ಟ್ ೧೫ರಂದು ಭಾರತ ಸ್ವಾತಂತ್ರ್ಯ ಪಡೆದಿದ್ದು, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನದ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ವಿಶ್ವದ ಗಮನ ಸೆಳೆಯುತ್ತಿದೆ. ಆದರೆ ಭ್ರಷ್ಟಾಚಾರ, ಭಯೋತ್ಪಾದನೆ, ಜಾತೀಯತೆ ಹಾಗೂ ಕೋಮುವಾದದಂತಹ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ. ದೇಶದ ಸಂಪತ್ತಾಗಿರುವ ಯುವಜನತೆ ದುಶ್ಚಟಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿದ್ದು, ಪ್ರಜ್ಞಾವಂತ ನಾಗರಿಕರಾಗಿ ದೇಶದ ಶ್ರೇಷ್ಠತೆ, ಏಕತೆ, ಸ್ವಚ್ಛತೆ ಹಾಗೂ ಪ್ರಗತಿಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಲಕ್ಷ್ಮೇಶ್ವರ ತಾಲೂಕನ್ನು ಸ್ವಚ್ಛ, ಹಸಿರು ಹಾಗೂ ಅಭಿವೃದ್ಧಿ ಹೊಂದಿದ ತಾಲೂಕನ್ನಾಗಿ ರೂಪಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ, ನೀರಿನ ಉಳಿತಾಯ ಹಾಗೂ ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಆದ್ಯತೆ ನೀಡಬೇಕು. ‘ದೇಶ ನನಗಾಗಿ ಏನು ಮಾಡಿದೆ ಎನ್ನುವುದಕ್ಕಿಂತ, ನಾನು ದೇಶಕ್ಕಾಗಿ ಏನು ಮಾಡಬಹುದು’ ಎಂಬ ಚಿಂತನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಮಾತನಾಡಿ, ಈ ಭಾಗದ ಅನೇಕ ಗ್ರಾಮಗಳ ನೂರಾರು ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುತ್ತಾ ದೇಶಕ್ಕಾಗಿ ನಮ್ಮ ಕೊಡುಗೆ ಏನು ಎಂಬುದನ್ನು ಪ್ರತಿಯೊಬ್ಬರೂ ಚಿಂತಿಸಬೇಕು ಎಂದು ಹೇಳಿದರು.

ಧ್ವಜಾರೋಹಣದ ಬಳಿಕ ಪೊಲೀಸ್, ಎನ್‌ಸಿಸಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಥಸಂಚಲನದ ನೇತೃತ್ವವನ್ನು ಪ್ರೊ. ಪಿಎಸ್‌ಐ ರಮಾಕಾಂತ ಗುಗ್ಗರಿ ವಹಿಸಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಬಿ.ಡಿ. ತಟ್ಟಿ ಕಿವುಡ ಮಕ್ಕಳ ಶಾಲೆ ಹಾಗೂ ಅರಳು ವಿಶೇಷಚೇತನ ಮಕ್ಕಳಿಂದ ನಡೆದ ವೇಷಭೂಷಣ ಮತ್ತು ದೇಶಭಕ್ತಿ ಗೀತೆಗಳ ನೃತ್ಯ ಗಮನ ಸೆಳೆಯಿತು. ಸ್ಕೂಲ್ ಚಂದನ ಶಾಲೆಯ ವಿದ್ಯಾರ್ಥಿಗಳ ವಿಶೇಷ ಬ್ಯಾಂಡ್ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಕಾರ್ಯಕ್ರಮದಲ್ಲಿ ಗ್ರೇಡ್–೨ ತಹಸೀಲ್ದಾರ ಮಂಜುನಾಥ ಅಮಾಸಿ, ತಾಪಂ ಇಒ ಮಂಜುಳಾ ಹಕಾರಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಉಪನೋಂದಣಾಧಿಕಾರಿ ಎಸ್.ಕೆ. ಜಲರಡ್ಡಿ, ಪಿಎಸ್‌ಐ ನಾಗರಾಜ ಗಡದ, ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ, ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಸಿಡಿಪಿಒ ಮೃತ್ಯುಂಜಯ ಜಿ., ಪ್ರಶಾಂತ ಕಿಮಾಯಿ, ರೇಣುಕಾ ಶಿರಹಟ್ಟಿ, ಆರ್.ಬಿ. ಜೋಶಿ, ಬಿ.ಎಂ. ಯರಗುಪ್ಪಿ, ಉಮೇಶ ನೇಕಾರ, ಎನ್.ಎ. ಮುಲ್ಲಾ, ನವೀನ ಅಂಗಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಂದಾಯ ನಿರೀಕ್ಷಕ ಎಂ.ಎ. ನಧಾಪ್ ಸ್ವಾಗತಿಸಿದರು. ಶಿರಸ್ತೇದಾರ ಜಮೀರ ಮನಿಯಾರ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಕಾರ್ಯಕ್ರಮ ನಿರ್ವಹಿಸಿದರು.

“ಸ್ವಾತಂತ್ರ್ಯ ನಮಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ನೀಡಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು.”

— ಧನಂಜಯ ಎಂ., ತಹಸೀಲ್ದಾರ

ಯುವಜನತೆ ದೇಶದ ಭವಿಷ್ಯ; ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಉಪತಹಶೀಲ್ದಾರ್ ಎಸ್.ಎಸ್. ಬಿಚ್ಚಾಲಿ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಇಂದಿನ ಯುವಜನತೆ ದೇಶದ ಭವಿಷ್ಯವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು, ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಉಪತಹಶೀಲ್ದಾರ್ ಎಸ್.ಎಸ್. ಬಿಚ್ಚಾಲಿ ಹೇಳಿದರು.

ಡಂಬಳ ಗ್ರಾಮದ ಇಂಗ್ಲಿಷ್ ಮಾಧ್ಯಮ ಉರ್ದು ಶಾಲೆಯಲ್ಲಿ ನಡೆದ ೮೦ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ, ಧರ್ಮ, ಭಾಷೆ ಹಾಗೂ ಪ್ರದೇಶದ ಭೇದಗಳನ್ನು ಮೀರಿ ‘ನಾವು ಭಾರತೀಯರು’ ಎಂಬ ಭಾವನೆಯೊಂದಿಗೆ ಮುನ್ನಡೆಯಬೇಕು. ದೇಶದ ಸಂವಿಧಾನ ನಮಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ನೀಡಿದೆ. ಪ್ರತಿಯೊಬ್ಬ ನಾಗರಿಕರೂ ಕಾನೂನುಗಳನ್ನು ಗೌರವಿಸುವುದು, ಪರಿಸರ ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಬೆಳೆಸುವುದು ತಮ್ಮ ಜವಾಬ್ದಾರಿ ಎಂದು ಅವರು ಹೇಳಿದರು.

ಸಮಾಜದ ಹಿರಿಯರಾದ ಹುಸೇನಸಾಬ ಹೊಸಬಾವಿ ಹಾಗೂ ಸಮಾಜಸೇವಕ ಬುಡ್ನೆಸಾಬ ಅತ್ತಾರ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಜಿಲ್ಲೆಯ ಹೋರಾಟಗಾರರ ಪಾತ್ರ ಮಹತ್ವದ್ದಾಗಿದೆ. ಮುಂಡರಗಿ ಭೀಮರಾಯ, ಹಮ್ಮಿಗೆ ಕೆಂಚನಗೌಡ, ಇಟಗಿಯ ವೀರಭದ್ರಯ್ಯ, ಶಿರೂರು ವೀರಭದ್ರಪ್ಪ, ಶಿವಮೂರ್ತಿಸ್ವಾಮಿ ಅಳವಂಡಿ, ಜನಾರ್ದನರಾಯ ದೇಸಾಯಿ, ಎಲ್.ಕೆ. ಷರೀಫ್, ಬಿಂದು ಮಾಧವರಾವ್, ಕಂಪ್ಲಿಮನಿ, ಬಿ.ಕೆ. ಪ್ರಾಣೇಶಾಚಾರ್ಯ, ಮುರಡಿ ಭೀಮಜ್ಜ ಸೇರಿದಂತೆ ಅನೇಕ ಹೋರಾಟಗಾರರ ತ್ಯಾಗವನ್ನು ಸ್ಮರಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರರು ಜಾತಿ, ಮತ, ಪಂಥದ ಭೇದವಿಲ್ಲದೆ ಜನರನ್ನು ಒಗ್ಗೂಡಿಸಿ ಹೋರಾಡಿದರು. ಅವರ ತ್ಯಾಗ, ಹೋರಾಟ ಹಾಗೂ ದೇಶಭಕ್ತಿಯ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂಜುಮನ ಸಮಿತಿ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ ಅವರು ಶಾಲೆಯ ಒಂದನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ತಲಾ ₹೧,೦೦೦ ವಿತರಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಹಬೂಬ ಕಾಸ್ತಾರ, ಅಂಜುಮನ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ, ಕಂದಾಯ ಅಧಿಕಾರಿ ಪ್ರಭು ಬಾಗಲಿ, ಮುಖ್ಯೋಪಾಧ್ಯಾಯ ಎಸ್.ಎಂ. ಶೇಖ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮಣ ಗುಡಸಲಮನಿ, ಎಂ.ಎಂ. ವಿಭೂತಿ, ಸಾಗರ ಚಿತ್ರಗಾರ, ಮುದಕೇಶ ತಳಗೇರಿ, ಎನ್.ಬಿ. ಶೇಖ, ಎಸ್.ಬಿ. ಕನವಳ್ಳಿ, ಹಸೀನಾ ಬಿ., ಎಸ್‌ಡಿಎಂಸಿ ಸದಸ್ಯರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಇದ್ದರು.