Home Blog

ಹಾಸಿಗೆಯಲ್ಲಿ ಗಂಟೆಗಟ್ಟಲೆ ಮಲಗಿದರೂ ನಿದ್ರೆ ಬರ್ತಿಲ್ವಾ? ಇಲ್ಲಿವೆ ಸುಲಭ ಪರಿಹಾರಗಳು!

0

ಇಂದಿನ ಬ್ಯುಸಿ ಜೀವನಶೈಲಿ, ತಡರಾತ್ರಿವರೆಗೆ ಮೊಬೈಲ್ ಬಳಕೆ, ಅನಿಯಮಿತ ಆಹಾರ ಪದ್ಧತಿ ಹಾಗೂ ಒತ್ತಡದ ಕಾರಣದಿಂದ ಅನೇಕರು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಉತ್ತಮ ನಿದ್ರೆ ಕೇವಲ ಆಯಾಸವನ್ನು ಕಡಿಮೆ ಮಾಡುವುದಷ್ಟೇ ಅಲ್ಲ, ಮನಸ್ಥಿತಿ, ಏಕಾಗ್ರತೆ ಹಾಗೂ ದೈನಂದಿನ ಕಾರ್ಯಕ್ಷಮತೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಹೀಗಾಗಿ ಉತ್ತಮ ನಿದ್ರೆಗಾಗಿ ಈ 8 ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಸಹಾಯಕವಾಗಬಹುದು.

ಉತ್ತಮ ನಿದ್ರೆಗಾಗಿ ಈ ಅಭ್ಯಾಸಗಳನ್ನು ಪಾಲಿಸಿ:

  • ಪ್ರತಿದಿನ ಒಂದೇ ಸಮಯಕ್ಕೆ ಮಲಗಿ, ಏಳಿ: ನಿಯಮಿತ ನಿದ್ರೆಯ ಸಮಯ ದೇಹದ ನೈಸರ್ಗಿಕ ಬಾಡಿ ಕ್ಲಾಕ್ ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ.

  • ಮಲಗುವ ಮುನ್ನ ಮೊಬೈಲ್ ಬಳಕೆ ಕಡಿಮೆ ಮಾಡಿ: ಮಲಗುವ 30–60 ನಿಮಿಷಗಳ ಮೊದಲು ಮೊಬೈಲ್, ಟಿವಿ ಮತ್ತು ಲ್ಯಾಪ್‌ಟಾಪ್ ಬಳಕೆ ಕಡಿಮೆ ಮಾಡುವುದು ಉತ್ತಮ.

  • ರಾತ್ರಿ ಹಗುರವಾದ ಆಹಾರ ಸೇವಿಸಿ: ಮಲಗುವ ಮುನ್ನ ಅತಿಯಾಗಿ ಅಥವಾ ಭಾರವಾದ ಆಹಾರ ಸೇವಿಸುವುದನ್ನು ತಪ್ಪಿಸಿ.

  • ಸಂಜೆಯ ಬಳಿಕ ಚಹಾ-ಕಾಫಿ ಕಡಿಮೆ ಮಾಡಿ: ಕ್ಯಾಫೀನ್ ಕೆಲವರಲ್ಲಿ ನಿದ್ರೆಯನ್ನು ತಡಮಾಡಬಹುದು.

  • ಹಗಲಿನಲ್ಲಿ ವ್ಯಾಯಾಮ ಮಾಡಿ: ನಿಯಮಿತ ವಾಕಿಂಗ್ ಅಥವಾ ವ್ಯಾಯಾಮ ನಿದ್ರೆಯ ಗುಣಮಟ್ಟ ಸುಧಾರಿಸಲು ಸಹಾಯ ಮಾಡಬಹುದು.

  • ಮಲಗುವ ಕೋಣೆಯನ್ನು ಆರಾಮದಾಯಕವಾಗಿಡಿ: ಶಾಂತ, ಕತ್ತಲೆ ಮತ್ತು ತಂಪಾದ ವಾತಾವರಣ ಉತ್ತಮ ನಿದ್ರೆಗೆ ನೆರವಾಗುತ್ತದೆ.

  • ಮಲಗುವ ಮುನ್ನ ಮನಸ್ಸನ್ನು ಶಾಂತಗೊಳಿಸಿ: ಪುಸ್ತಕ ಓದುವುದು ಅಥವಾ ನಿಧಾನವಾದ ಸಂಗೀತ ಕೇಳುವುದು ಒತ್ತಡ ಕಡಿಮೆ ಮಾಡಲು ಸಹಾಯ ಮಾಡಬಹುದು.

  • ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡಬೇಡಿ: ದೀರ್ಘ ಹಗಲಿನ ನಿದ್ರೆ ರಾತ್ರಿ ನಿದ್ರೆಗೆ ಅಡ್ಡಿಯಾಗಬಹುದು.

    ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ನಿರಂತರವಾಗಿ ನಿದ್ರೆ ಬರದಿರುವುದು, ರಾತ್ರಿ ಪದೇಪದೇ ಎಚ್ಚರವಾಗುವುದು, ಜೋರಾಗಿ ಗೊರಕೆ ಹೊಡೆಯುವುದು, ಉಸಿರಾಟದಲ್ಲಿ ತೊಂದರೆ ಉಂಟಾಗುವುದು ಅಥವಾ ಹಗಲಿನಲ್ಲಿ ಅತಿಯಾದ ನಿದ್ರೆ ಹಾಗೂ ಆಯಾಸ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.

ಗುರು ರಾಘವೇಂದ್ರ ಸ್ವಾಮಿ ಪವಾಡ? 7 ತಿಂಗಳ ಬಳಿಕ ಮತ್ತೆ ಎದ್ದು ನಡೆದಾಡಿದ MBBS ವಿದ್ಯಾರ್ಥಿನಿ!

0

ಹಾವೇರಿ: ಕಳೆದ ಏಳು ತಿಂಗಳಿಂದ ಅಪರೂಪದ ಆಟೋ ಇಮ್ಯೂನ್ ಸಮಸ್ಯೆಯಿಂದ ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್‌ಚೇರ್‌ಗೆ ಸೀಮಿತವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಇದೀಗ ಮತ್ತೆ ನಡೆದಾಡುತ್ತಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಗಮನ ಸೆಳೆದಿದೆ.

ಕುಟುಂಬಸ್ಥರು ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹವೆಂದು ನಂಬಿದ್ದು, ವೈದ್ಯಕೀಯ ಚಿಕಿತ್ಸೆ ಕೂಡ ಈ ಅವಧಿಯಲ್ಲಿ ಮುಂದುವರಿದಿತ್ತು.

ಹಾವೇರಿ ತಾಲೂಕಿನ ನೆಗಳೂರು ಗ್ರಾಮದ 22 ವರ್ಷದ ನಿವೇದಿತಾ ಶಿವಪ್ಪ ನೆಗಳೂರು ಈ ವಿದ್ಯಾರ್ಥಿನಿ. ಕೆಲವು ತಿಂಗಳ ಹಿಂದೆ ಅವರಿಗೆ ಪದೇ ಪದೇ ಮೂರ್ಚೆ ಹೋಗುವ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಸ್ಥಿತಿ ಹದಗೆಟ್ಟು ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್‌ಚೇರ್ ಬಳಸುವ ಪರಿಸ್ಥಿತಿ ಎದುರಾಗಿತ್ತು.

ವೈದ್ಯಕೀಯ ಪರೀಕ್ಷೆ ವೇಳೆ ಆಟೋ ಇಮ್ಯೂನ್ ಸಮಸ್ಯೆಯಿಂದ ಉಂಟಾದ ಪ್ರತಿಕಾಯಗಳು (ಆ್ಯಂಟಿಬಾಡಿ) ಮೆದುಳಿನ ಮೇಲೆ ಪರಿಣಾಮ ಬೀರುತ್ತಿರುವುದು ಪತ್ತೆಯಾಗಿತ್ತು. ಕುಟುಂಬಸ್ಥರು ಹಾವೇರಿ ಹಾಗೂ ಹುಬ್ಬಳ್ಳಿಯ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದು, ಸುಮಾರು ಐದರಿಂದ ಆರು ಲಕ್ಷ ರೂಪಾಯಿ ವೆಚ್ಚ ಮಾಡಿದ್ದರು. ವೈದ್ಯರ ಸಲಹೆಯಂತೆ ಚಿಕಿತ್ಸೆ ಮುಂದುವರಿದಿದ್ದರೂ ಆರಂಭದಲ್ಲಿ ನಿರೀಕ್ಷಿತ ಚೇತರಿಕೆ ಕಾಣಿಸಿರಲಿಲ್ಲ.

ಕುಟುಂಬಸ್ಥರು ನಿವೇದಿತಾಳನ್ನು ಹೊಸರಿತ್ತಿ ರಾಯರ ಮಠಕ್ಕೆ ಕರೆದೊಯ್ದಿದ್ದರು. ಅಲ್ಲಿ ನಡೆದ 100ನೇ ಸುಶೀಲೇಂದ್ರ ತೀರ್ಥ ಆರಾಧನೆಯ ಸಂದರ್ಭದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿಗಳು ಮಂತ್ರಾಕ್ಷತೆ ಮತ್ತು ರಾಯರ ಭಾವಚಿತ್ರ ನೀಡಿ ಐದು ವಾರಗಳ ಕಾಲ ರಾಯರ ಮಠಕ್ಕೆ ನಡೆದುಕೊಳ್ಳುವಂತೆ ಸಲಹೆ ನೀಡಿದ್ದರು.

ಕುಟುಂಬದ ಹೇಳಿಕೆಯ ಪ್ರಕಾರ, ಮೂರು ವಾರಗಳಲ್ಲೇ ನಿವೇದಿತಾಳ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡಿದ್ದು, ಐದು ವಾರಗಳ ಹರಕೆಯ ಬಳಿಕ ಅವರು ಸ್ವತಃ ನಡೆಯುವ ಮಟ್ಟಿಗೆ ಚೇತರಿಸಿಕೊಂಡಿದ್ದಾರೆ.

ಮಗಳ ಆರೋಗ್ಯದಲ್ಲಿ ಕಂಡುಬಂದ ಬದಲಾವಣೆಯಿಂದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಕೃಪೆ ಮತ್ತು ಆಶೀರ್ವಾದವೆಂದು ನಂಬಿದ್ದಾರೆ. ಚಿಕಿತ್ಸೆ ಮತ್ತು ಚೇತರಿಕೆಯ ಬಳಿಕ ಅವರು ಮಂತ್ರಾಲಯಕ್ಕೂ ಭೇಟಿ ನೀಡುವಂತೆ ಸೂಚನೆ ದೊರೆತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಸಹಿಸುವುದಿಲ್ಲ: ಕೊಪ್ಪಳದಲ್ಲಿ ಅಧಿಕಾರಿಗಳಿಗೆ ಸಚಿವ ತಂಗಡಗಿ ತರಾಟೆ

0

ಕೊಪ್ಪಳ: ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬೊಮ್ಮಾಸಾಗರ ತಾಂಡದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಮಳೆ ಕೊರತೆಯ ಈ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸೂಚಿಸಿದರು.

ವಿಬಿ-ಜಿ ರಾಮ್-ಜಿ ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿ ಹೆಚ್ಚಿನ ಜನರಿಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಉದ್ಯೋಗದ ಕೊರತೆಯಿಂದ ಗ್ರಾಮೀಣ ಜನರು ಗುಳೆ ಹೋಗುವ ಪರಿಸ್ಥಿತಿ ಬರಬಾರದು ಎಂದು ಹೇಳಿದರು.

ಕಾರ್ಯಕ್ರಮದ ವೇಳೆ ಗ್ರಾಮಕ್ಕೆ ದಿನಕ್ಕೆ ಒಂದೇ ಬಸ್ ಸಂಚಾರವಿರುವುದರಿಂದ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು.

ಇದರಿಂದ ಅಸಮಾಧಾನಗೊಂಡ ಸಚಿವ ತಂಗಡಗಿ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, “ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಅಧಿಕಾರಿಗಳಾಗಿ ಇಲ್ಲಿ ಏಕೆ ಇರಬೇಕು? ಮತ್ತೆ ಇಂತಹ ದೂರುಗಳು ಬಂದರೆ ಅಮಾನತು ಕ್ರಮ ಕೈಗೊಳ್ಳಲಾಗುವುದು” ಎಂದು ಖಡಕ್ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಸ್ಪಂದಿಸದಿದ್ದರೆ ಸಾರ್ವಜನಿಕರು ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತ್ ಗೌಡ, ತಹಸೀಲ್ದಾರ್ ಚಂದ್ರಶೇಖರ್ ಗಾಳಿ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

0

ಜಕಾರ್ತಾ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಭೂಕಂಪದ ಪರಿಣಾಮ ಹಲವು ಮನೆಗಳು ಹಾಗೂ ಕಟ್ಟಡಗಳು ಕುಸಿದು ಭಾರೀ ಹಾನಿಯಾಗಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಇಂಡೋನೇಷ್ಯಾ ಸಮಯ ಬೆಳಿಗ್ಗೆ 5:58ಕ್ಕೆ ಫ್ಲೋರ್ಸ್ ಪ್ರದೇಶದಲ್ಲಿ ಭೂಮಿಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದ ತೀವ್ರತೆಗೆ ಕಟ್ಟಡಗಳು ಕುಸಿಯುತ್ತಿದ್ದಂತೆ ಜನರು ಭಯಭೀತರಾಗಿ ರಸ್ತೆಗಳತ್ತ ಓಡಿ ಜೀವ ಉಳಿಸಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಭೂಕಂಪದ ಬಳಿಕ ಇಂಡೋನೇಷ್ಯಾದ ಹವಾಮಾನಶಾಸ್ತ್ರ ಮತ್ತು ಭೂಭೌತಶಾಸ್ತ್ರ ಸಂಸ್ಥೆ (BMKG) ಸುನಾಮಿ ಅಲೆಗಳ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿತ್ತು. ಕರಾವಳಿ ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿತ್ತು. ಬಳಿಕ ಪರಿಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನು ಹಿಂತೆಗೆದುಕೊಂಡರು.

ಫ್ಲೋರ್ಸ್ ದ್ವೀಪವು ಭೂಕಂಪ ಪೀಡಿತ ಪ್ರದೇಶವಾಗಿದ್ದು, 1992ರಲ್ಲಿ ಇದೇ ಭಾಗದಲ್ಲಿ 7 ತೀವ್ರತೆಯ ಭೂಕಂಪ ಸಂಭವಿಸಿ ಸುಮಾರು 2,500 ಮಂದಿ ಮೃತಪಟ್ಟಿದ್ದರು. ಈಗಿನ ಭೂಕಂಪದ ಬಳಿಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹಾನಿಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ನಾನು ಸಚಿವನಾಗಿರುವುದೇ ಶ್ರೀರಾಮುಲುಗೆ ಹೊಟ್ಟೆಕಿಚ್ಚು: ಆರೋಪಗಳಿಗೆ ಸದನದಲ್ಲೇ ತಕ್ಕ ಉತ್ತರ ನೀಡುತ್ತೇನೆ ಎಂದ ಬಿ. ನಾಗೇಂದ್ರ

0

ಬಳ್ಳಾರಿ: ನಾನು ಸಚಿವನಾಗಿರುವುದನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ನನ್ನ ವಿರುದ್ಧ ವಿನಾಕಾರಣ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಸ್ಪಷ್ಟನೆ ನೀಡಿದರು. ನನ್ನ ಮೇಲಿರುವುದು ಆರೋಪವೇ ಹೊರತು ನಾನು ಅಪರಾಧಿಯಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಕಾನೂನಾತ್ಮಕವಾಗಿ ನ್ಯಾಯಾಲಯದ ಮುಂದೆ ತಮ್ಮ ವಾದ ಮಂಡಿಸಲು ಎಲ್ಲರಿಗೂ ಅವಕಾಶವಿದೆ ಎಂದು ಹೇಳಿದರು.

ಸದನದಲ್ಲಿ ಪ್ರತಿಪಕ್ಷಗಳಿಗೆ ತಮ್ಮ ವಿರುದ್ಧ ಆರೋಪಗಳನ್ನು ಮಾಡುವುದು ಹಾಗೂ ಹೋರಾಟ ನಡೆಸುವುದು ಹಕ್ಕಾಗಿದೆ. ಅದನ್ನು ಸರ್ಕಾರ ಗೌರವಿಸುತ್ತದೆ. ಆದರೆ, ಮೊದಲು ಸದನದಲ್ಲಿ ಈ ವಿಚಾರ ಚರ್ಚೆಯಾಗಲಿ. ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೆ ಸದನದಲ್ಲೇ ತಕ್ಕ ಉತ್ತರ ನೀಡುತ್ತೇನೆ ಎಂದು ಬಿ. ನಾಗೇಂದ್ರ ತಿಳಿಸಿದರು.

ರಾಜ್ಯ ಬಿಜೆಪಿ ಹಾಗೂ ಕೇಂದ್ರ ಸರ್ಕಾರದಲ್ಲಿಯೂ ಹಲವು ಸಚಿವರ ವಿರುದ್ಧ ಪ್ರಕರಣಗಳಿವೆ. ಹಾಗೆಂದು ಎಲ್ಲರೂ ರಾಜೀನಾಮೆ ನೀಡುವುದಿಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ತಾವು ದಲಿತ ಕುಟುಂಬದಿಂದ ಬಂದಿರುವುದನ್ನು ಮುಂದಿಟ್ಟುಕೊಂಡು ತಮ್ಮನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ನಾಗೇಂದ್ರ, ನಾನು ದಲಿತನೆಂಬುದಕ್ಕೆ ಹೆಮ್ಮೆಪಡುತ್ತೇನೆ. ಆದರೆ, ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬರಗಾಲ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳಿವೆ. ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಿದೆ. ಪ್ರತಿಪಕ್ಷಗಳೂ ಜನರ ಸಮಸ್ಯೆಗಳ ಕುರಿತು ನಡೆಯುವ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಕ್ಕೆ ಜಮೀರ್ ಗೈರು: ಖಾದರ್ ಸಮರ್ಥನೆ, ಚೌಟ ಆಕ್ರೋಶ

0

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಸಚಿವ ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮಕ್ಕೆ ಗೈರುಹಾಜರಾದ ವಿಚಾರ ಇದೀಗ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಜಮೀರ್ ಪರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬ್ಯಾಟ್ ಬೀಸಿದ್ದರೆ, ಸಂಸದ ಬ್ರಿಜೇಶ್ ಚೌಟ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಬಳಿಕ ಮಾತನಾಡಿದ ಯು.ಟಿ. ಖಾದರ್, ಜಮೀರ್ ಅಹ್ಮದ್ ಖಾನ್ ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೆ ಪತ್ರ ಬರೆದಿದ್ದಾರೆ. ಅವರ ಪತ್ರದ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಕೆಲ ಪದಗಳನ್ನು ಮಾತ್ರ ಹಿಡಿದುಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವುದು ಸರಿಯಲ್ಲ ಎಂದರು.

ಜಮೀರ್ ದೇಶದ ಸತ್ಪ್ರಜೆಯಾಗಿದ್ದು, ದೇಶಪ್ರೇಮ ಮತ್ತು ಸೌಹಾರ್ದತೆಯನ್ನು ಸದಾ ಎತ್ತಿಹಿಡಿದಿದ್ದಾರೆ. ಅವರ ದೇಶಪ್ರೇಮವನ್ನು ಪ್ರಶ್ನಿಸುವಂತಿಲ್ಲ ಎಂದು ಖಾದರ್ ಹೇಳಿದರು.

ಕಾರ್ಯಕ್ರಮಕ್ಕೆ ಜಮೀರ್ ಹಾಜರಾಗುತ್ತಾರೆ ಎಂಬ ಮಾಹಿತಿ ಆಧರಿಸಿ ಅವರನ್ನು ನಿಯೋಜಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಗೈರಾಗಬೇಕಾದ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

ಪಾನ್ ಮಸಾಲಾ ನಿಷೇಧದ ವಿಚಾರದಲ್ಲೂ ಮಾತನಾಡಿದ ಖಾದರ್, ತಂಬಾಕು, ನಿಕೋಟಿನ್ ಹಾಗೂ ಗುಟ್ಕಾ ಮಿಶ್ರಿತ ಉತ್ಪನ್ನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ನಷ್ಟವಾಗುವುದಿಲ್ಲ ಎಂದು ಹೇಳಿದರು. 2014ರಲ್ಲಿ ಗುಟ್ಕಾ ನಿಷೇಧಿಸಿದ ಸಂದರ್ಭದಲ್ಲೂ ಅಡಿಕೆ ಬೆಲೆ ಕುಸಿಯಲಿದೆ ಎಂಬ ಅಪಪ್ರಚಾರ ನಡೆದಿತ್ತು. ಆದರೆ ಬಳಿಕ ಅಡಿಕೆ ಧಾರಣೆ ಹೆಚ್ಚಾಗಿತ್ತು ಎಂದು ಅವರು ತಿಳಿಸಿದರು.

ಆರೋಗ್ಯದ ಉದ್ದೇಶದಿಂದ ಕೈಗೊಂಡ ನಿರ್ಧಾರವನ್ನು ರಾಜಕೀಯಗೊಳಿಸಬಾರದು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಖಾದರ್, ಧಾರ್ಮಿಕ ಸಭೆ-ಸಮಾರಂಭಗಳ ಕುರಿತು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಇತ್ತ ಸಂಸದ ಬ್ರಿಜೇಶ್ ಚೌಟ, ಜಮೀರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡಲು ಸಮಯವಿಲ್ಲ ಎಂಬ ರೀತಿಯ ಹೇಳಿಕೆ ಜವಾಬ್ದಾರಿಯುತ ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಹ ಹೇಳಿಕೆಯನ್ನು ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿಗಳು ಜಮೀರ್ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕಿತ್ತು. ಅವರ ಕೋರಿಕೆಯನ್ನು ಮನ್ನಿಸಿ ಬದಲಿಗೆ ಮತ್ತೊಬ್ಬರನ್ನು ಧ್ವಜಾರೋಹಣಕ್ಕೆ ನೇಮಿಸಿರುವುದು ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಚೌಟ ವಾಗ್ದಾಳಿ ನಡೆಸಿದರು.

ಜಮೀರ್ ಗೈರುಹಾಜರಿ ಸುತ್ತ ಆಡಳಿತ ಪಕ್ಷದ ಸಮರ್ಥನೆ ಮತ್ತು ಪ್ರತಿಪಕ್ಷದ ವಾಗ್ದಾಳಿ ಮುಂದುವರಿದಿದ್ದು, ಈ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

‘2028ರಲ್ಲಿ ಡಿಕೆಶಿ ಸಿಎಂ ಆಗೋದು ಖಚಿತ’: ಕಾಂಗ್ರೆಸ್ ನಾಯಕತ್ವದ ಬಗ್ಗೆ ಸಚಿವ ತಂಗಡಗಿ ವಿಶ್ವಾಸ

0

ಕೊಪ್ಪಳ: 2028ರ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಮುಂದುವರಿಯಲಿದೆ. ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಶಿವರಾಜ್ ಎಸ್. ತಂಗಡಗಿ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್‌ನ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ವ್ಯಕ್ತಪಡಿಸುತ್ತಿರುವುದು ಸಹಜ. ಪ್ರತಿಯೊಬ್ಬ ಹಿರಿಯ ನಾಯಕನಿಗೂ ತನ್ನ ರಾಜಕೀಯ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ. ಆದರೆ 2028ರಲ್ಲೂ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್ ಅವರದ್ದೇ ಎಂದು ತಂಗಡಗಿ ಹೇಳಿದ್ದಾರೆ.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಸಚಿವ ಸ್ಥಾನದ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಹಿಟ್ನಾಳ್ ಮುಂದಿನ ದಿನಗಳಲ್ಲಿ ಸಚಿವರಾಗುವ ವಿಶ್ವಾಸವಿದೆ ಎಂದರು. ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಅಸಮಾಧಾನ ಅಥವಾ ಮುನಿಸಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡ ತಂಗಡಗಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಇದೀಗ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಗ್ಯಾರಂಟಿ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ ಅವರು, ತಮ್ಮ ಪಕ್ಷದೊಳಗಿನ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳುವಂತೆ ಬಿಜೆಪಿಗೆ ಸಲಹೆ ನೀಡಿದರು.

ಅಶೋಕ್, ಸುನೀಲ್ ಕುಮಾರ್ ಹಾಗೂ ಸಿ.ಟಿ. ರವಿ ಅವರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳಿವೆ ಎಂದು ಆರೋಪಿಸಿದ ತಂಗಡಗಿ, ಬಿಜೆಪಿ ತನ್ನದೇ ಪಕ್ಷದ ಸಮಸ್ಯೆಗಳನ್ನು ಸರಿಪಡಿಸಿಕೊಂಡ ಬಳಿಕ ಕಾಂಗ್ರೆಸ್ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು.

2028ರಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ, ಡಿಕೆಶಿ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ: ಸಚಿವ ತಂಗಡಗಿ

0

ಕೊಪ್ಪಳ: 2028ರ ವಿಧಾನಸಭಾ ಚುನಾವಣೆಯ ಬಳಿಕವೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ತಂಗಡಗಿ, 2028ರ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿರುವುದಾಗಿ ಕಾಂಗ್ರೆಸ್‌ನ ಹಿರಿಯ ನಾಯಕರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.

ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಆದರೆ 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ತಂಗಡಗಿ ಹೇಳಿದರು.

ಕೊಪ್ಪಳ ಜಿಲ್ಲೆಯ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಚಿವ ಸ್ಥಾನಕ್ಕಾಗಿ ಆಕಾಂಕ್ಷೆ ವ್ಯಕ್ತಪಡಿಸಿರುವ ವಿಚಾರಕ್ಕೂ ಸಚಿವ ತಂಗಡಗಿ ಪ್ರತಿಕ್ರಿಯಿಸಿದರು. ಹಿಟ್ನಾಳ್ ಅವರು ಸಚಿವ ಸ್ಥಾನ ಪಡೆಯುವ ಆಕಾಂಕ್ಷೆ ಹೊಂದಿದ್ದರು. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಂಗಡಗಿ ಹೇಳಿದರು.

ಜಿಲ್ಲೆಯ ಶಾಸಕರ ನಡುವೆ ಯಾವುದೇ ಮುನಿಸಿಲ್ಲ. ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ತಂಗಡಗಿ, ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ಮಾದರಿ ಎಂದು ಹೇಳಿದ ಅವರು, ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಟೀಕೆ-ಟಿಪ್ಪಣಿ ಮಾಡಿದ್ದ ಬಿಜೆಪಿಯವರು ಇದೀಗ ಬಿಜೆಪಿ ನೇತೃತ್ವದ ಸರ್ಕಾರಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಇದೇ ರೀತಿಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳನ್ನೂ ಪ್ರಸ್ತಾಪಿಸಿದ ತಂಗಡಗಿ, “ಬಿಜೆಪಿಯಲ್ಲಿ ಅಶೋಕ್ ಅವರನ್ನು ಕಂಡರೆ ಸುನೀಲ್ ಕುಮಾರ್ ಅವರಿಗೆ ಆಗುವುದಿಲ್ಲ, ಸುನೀಲ್ ಕುಮಾರ್ ಅವರನ್ನು ಕಂಡರೆ ಸಿ.ಟಿ. ರವಿ ಅವರಿಗೆ ಆಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ಮೊದಲು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ. ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಶಿವರಾಜ್ ಎಸ್. ತಂಗಡಗಿ ತಿರುಗೇಟು ನೀಡಿದರು.

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

0

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಮಹಿಳಾ ಸಚಿವ ಸ್ಥಾನವನ್ನು ಸದ್ಯ ಮುಖ್ಯಮಂತ್ರಿ ನಿರ್ವಹಿಸಲಿದ್ದಾರೆ. ಮೂವರೂ ಸಮರ್ಥರಾಗಿರುವುದರಿಂದ ಯಾರನ್ನು ಆಯ್ಕೆ ಮಾಡಬೇಕು ಎಂಬ ವಿಚಾರದಲ್ಲಿ ಗೊಂದಲವಿದ್ದು, ಈ ಕಾರಣದಿಂದ ನಿರ್ಧಾರ ವಿಳಂಬವಾಗುತ್ತಿದೆ ಎಂದು ಹೇಳಿದರು.

ಮಹಿಳಾ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವವರೆಗೆ ಮುಖ್ಯಮಂತ್ರಿ ಖಾತೆಯನ್ನು ನಿರ್ವಹಿಸಲಿದ್ದಾರೆ. ಪಕ್ಷವು ಮೂವರಲ್ಲಿ ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡುತ್ತದೆಯೋ, ಅವರ ಪರವಾಗಿ ನಾವೆಲ್ಲರೂ ನಿಲ್ಲುತ್ತೇವೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಖಾತೆ ಹಂಚಿಕೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠ ಹಿಡಿದಿದ್ದರೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಧಿವೇಶನ ಮುಗಿದ ಬಳಿಕ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಜಮೀರ್‌ ಅಹಮದ್‌ ಅವರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಹಿಂದೇಟು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ಜಮೀರ್‌ ಅವರು ತಮ್ಮ ಪತ್ರದಲ್ಲಿ ಬಿಬಿಎಂಪಿ ಚುನಾವಣೆ ವಿಚಾರದ ಬಗ್ಗೆ ಬರೆದಿದ್ದಾರೆ. ಈ ಕುರಿತು ಅವರನ್ನೇ ಕೇಳಬೇಕು ಎಂದು ಹೇಳಿದರು.

ಬಿಜೆಪಿಯವರು ಮಾಡುತ್ತಿರುವ ಆರೋಪಗಳ ಕುರಿತು ಮಾತನಾಡಿದ ಅವರು, ಬಿಜೆಪಿಯವರ ಕಚೇರಿಯಲ್ಲಿಯೇ ಬಿಜೆಪಿ ನಾಯಕರು ಧ್ವಜ ಹಾರಿಸುವುದಿಲ್ಲ. ಹೀಗಿರುವಾಗ ನಮ್ಮ ಮೇಲೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.

ಕಳೆದ 70 ವರ್ಷಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ಹಿಂದೇಟು ಹಾಕುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದ ಸಚಿವರಿದ್ದು, ಈಗಾಗಲೇ ಅವರ ಹಾಗೂ ಸರ್ಕಾರದ ಗಮನಕ್ಕೆ ವಿಷಯ ಬಂದಿದೆ ಎಂದು ತಿಳಿಸಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಬೇಕು ಎನ್ನುವುದು ಬಹಳ ದಿನಗಳ ಬೇಡಿಕೆಯಾಗಿದೆ. ಆದರೆ, ಪಾಲಿಕೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿಂದೆ ತಾವು ಹಾಗೂ ಜಿಲ್ಲಾಧಿಕಾರಿಗಳು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಬಾರಿ ಸಲಹೆಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಕಳೆದ ಮೂರು ತಿಂಗಳಿನಿಂದ ಸಭೆ ನಡೆಸಿಲ್ಲ. ಉದ್ದೇಶಪೂರ್ವಕವಾಗಿಯೇ ಸಭೆ ನಡೆಸುತ್ತಿಲ್ಲ ಎಂಬ ಅನುಮಾನವಿದೆ. ಈ ವಿಚಾರದಲ್ಲಿ ಮಾಧ್ಯಮಗಳು ಬೆಳಕು ಚೆಲ್ಲಬೇಕು ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

4 ಸಾರಿಗೆ ನಿಗಮಗಳಿಂದ 15 ಸಾವಿರಕ್ಕೂ ಹೆಚ್ಚು ಹೊಸ ಬಸ್ʼಗಳ ಖರೀದಿಗೆ ಚಾಲನೆ: ಬೈರತಿ ಸುರೇಶ್

0

ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನವು ಬ್ರಿಟಿಷರ ದಾಸ್ಯದಿಂದ ಭಾರತ ಮುಕ್ತಗೊಂಡ ಐತಿಹಾಸಿಕ ದಿನ. ನಮ್ಮದೇ ಸಂವಿಧಾನ ಹಾಗೂ ನಮ್ಮದೇ ಆಶೋತ್ತರಗಳಿಗೆ ರೆಕ್ಕೆ ನೀಡಿದ ದಿನ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳ ಖರೀದಿ

ತಾವು ಸಾರಿಗೆ ಸಚಿವರಾದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸುವ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ₹286 ಕೋಟಿ ವೆಚ್ಚದಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲಾಗಿದೆ ಎಂದು ತಿಳಿಸಿದರು.

ಇದರ ಜೊತೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಹಾಗೂ ಈಗಿರುವ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಹೊಸ ಬಸ್‌ಗಳನ್ನು ಖರೀದಿಸಿ, ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಬೈರತಿ ಸುರೇಶ್ ತಿಳಿಸಿದರು.

ಇ-ಖಾತೆ ಸುಲಭಗೊಳಿಸಲು ಕ್ರಮ

ಈ ಹಿಂದೆ ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದ ಆರನೇ ಗ್ಯಾರಂಟಿಯಾದ ಭೂ-ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ (KTCP Act), 1961ರಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

ಎಲ್ಲರಿಗೂ ಸುಲಭವಾಗಿ ಇ-ಖಾತೆ ದೊರೆಯುವಂತೆ ಇ-ಖಾತೆ ರೋಲ್‌ಔಟ್‌ ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಲು ಅಗತ್ಯ ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದರು.