Home Blog

ಗ್ರಾಹಕರ ಜೇಬಿಗೆ ಮತ್ತೊಂದು ಹೊರೆ? ಬೇಕರಿ ಉತ್ಪನ್ನಗಳ ಬೆಲೆ ಶೀಘ್ರದಲ್ಲೇ ಏರಿಕೆ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ಇದೀಗ ಬೇಕರಿ ಉದ್ಯಮದ ಮೇಲೂ ಬಿದ್ದಿದೆ.

ತುಪ್ಪ, ಬೆಣ್ಣೆ, ಹಾಲಿನ ಉತ್ಪನ್ನಗಳು, ಅಡುಗೆ ಎಣ್ಣೆ, ಮೈದಾ, ಸಕ್ಕರೆ ಸೇರಿದಂತೆ ಬೇಕರಿ ಉತ್ಪನ್ನಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಬೆಲೆ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಹೆಚ್ಚಳವಾಗಿದೆ.

ಇದರ ಜೊತೆಗೆ ವಿದ್ಯುತ್ ದರ, ವಾಣಿಜ್ಯ ಗ್ಯಾಸ್ ಸಿಲಿಂಡರ್ ವೆಚ್ಚ, ಕಾರ್ಮಿಕರ ವೇತನ, ಸಾರಿಗೆ ಹಾಗೂ ಅಂಗಡಿ ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಬೇಕರಿ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಳೆಯ ದರದಲ್ಲೇ ಉತ್ಪನ್ನಗಳನ್ನು ಮಾರಾಟ ಮಾಡಿದರೆ ಲಾಭವಿರಲಿ, ಮೂಲ ವೆಚ್ಚ ಭರಿಸುವುದೂ ಕಷ್ಟವಾಗುತ್ತಿದೆ ಎಂದು ಬೇಕರಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಉತ್ಪನ್ನಗಳ ದರ ಹೆಚ್ಚಳದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ವಿಶೇಷವಾಗಿ ತುಪ್ಪ ಬಳಸಿ ತಯಾರಿಸುವ ಮೈಸೂರು ಪಾಕ್, ತುಪ್ಪದ ಲಡ್ಡು, ಬಾದೂಷಾ, ಕಾಜು ಸ್ವೀಟ್ಸ್, ಡ್ರೈಫ್ರೂಟ್ ಐಟಂಗಳು ಹಾಗೂ ಪ್ರೀಮಿಯಂ ಕೇಕ್‌ಗಳ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಗುಣಮಟ್ಟದ ತುಪ್ಪ ಬಳಸುವ ಬೇಕರಿಗಳಿಗೆ ಇದರ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಗುಣಮಟ್ಟವನ್ನು ಕಾಪಾಡಿಕೊಳ್ಳಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಬೇಕರಿ ಮಾಲೀಕರು ತಿಳಿಸಿದ್ದಾರೆ. ಕೋವಿಡ್ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಬೇಕರಿ ಉದ್ಯಮಕ್ಕೆ ಇದೀಗ ಕಚ್ಚಾ ವಸ್ತುಗಳ ದರ ಏರಿಕೆ ಮತ್ತೊಂದು ಹೊಡೆತ ನೀಡಿದೆ.

ಗ್ರಾಹಕರನ್ನು ಕಳೆದುಕೊಳ್ಳುವ ಭಯದಿಂದ ಹಲವು ಬೇಕರಿಗಳು ಇದುವರೆಗೆ ದರ ಹೆಚ್ಚಳ ಮಾಡದೆ ನಷ್ಟದಲ್ಲೇ ವ್ಯಾಪಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬೇಕರಿ ಅಸೋಸಿಯೇಷನ್ ಶೀಘ್ರದಲ್ಲೇ ಸಭೆ ನಡೆಸಿ ದರ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸಭೆಯಲ್ಲಿ ಜಿಲ್ಲಾ ಬೇಕರಿ ಸಂಘಗಳ ಪ್ರತಿನಿಧಿಗಳು ಹಾಗೂ ಉದ್ಯಮಿಗಳೊಂದಿಗೆ ಚರ್ಚಿಸಿ ಹೊಸ ದರ ನಿಗದಿ ಮಾಡುವ ನಿರೀಕ್ಷೆಯಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೇಕರಿ ಉತ್ಪನ್ನಗಳ ಬೆಲೆಯಲ್ಲಿ ಪ್ರತಿ ವಸ್ತುವಿಗೆ ₹3 ರಿಂದ ₹5ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ದರ ಏರಿಕೆ ಜಾರಿಯಾದರೆ ಪ್ರೀಮಿಯಂ ಸ್ವೀಟ್ಸ್ ಹಾಗೂ ತುಪ್ಪ ಆಧಾರಿತ ಉತ್ಪನ್ನಗಳ ಬೆಲೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಇದರ ಪರಿಣಾಮ ಸಾಮಾನ್ಯ ಗ್ರಾಹಕರ ಜೇಬಿನ ಮೇಲೂ ಬೀಳಲಿದೆ.

 

Gold Rate Today: ವಾರಾಂತ್ಯದಲ್ಲಿ ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯೂ ಹೆಚ್ಚಳ!

ನವದೆಹಲಿ: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ₹270 ಕುಸಿದಿದ್ದ ಚಿನ್ನದ ದರ, ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ.

ಇಂದು ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ ₹55 ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ 100 ಗ್ರಾಂಗೆ ₹5 ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,870 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ 

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
    • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
    • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ.

ಮಳೆ ಕೊರತೆಯ ಎಫೆಕ್ಟ್: ಏಷ್ಯಾದ ಮೊದಲ ಜಲವಿದ್ಯುತ್ ಕೇಂದ್ರ ಶಿವನಸಮುದ್ರದಲ್ಲಿ ಉತ್ಪಾದನೆ ಬಂದ್!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯ ಪರಿಣಾಮ ಇದೀಗ ಕೃಷಿಯ ಜೊತೆಗೆ ಜಲವಿದ್ಯುತ್ ಉತ್ಪಾದನೆಯ ಮೇಲೂ ಗಂಭೀರ ಪರಿಣಾಮ ಬೀರಿದೆ.

ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಎಂಬ ಹೆಗ್ಗಳಿಕೆ ಹೊಂದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ.

ಕಾವೇರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ ಸಂಪೂರ್ಣ ನಿಲ್ಲಿಸಲಾಗಿದೆ.

ಕೆಆರ್‌ಎಸ್‌ ಅಥವಾ ಕಬಿನಿ ಜಲಾಶಯಗಳಿಂದ ನೀರು ಹರಿಸಿದಾಗ ಮಾತ್ರ ಶಿವನಸಮುದ್ರ ವಿದ್ಯುತ್ ಕೇಂದ್ರದಲ್ಲಿ ಉತ್ಪಾದನೆ ಸಾಧ್ಯವಾಗುತ್ತದೆ. ಇಲ್ಲಿ ಪ್ರತಿದಿನ ಸುಮಾರು 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಇದಕ್ಕಾಗಿ ದಿನಕ್ಕೆ 1,450 ಕ್ಯೂಸೆಕ್ ನೀರಿನ ಅವಶ್ಯಕತೆ ಇತ್ತು.

ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ನದಿಯಲ್ಲಿ ನೀರಿನ ಹರಿವು ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಘಟಕದ ಕಾರ್ಯಾಚರಣೆ ಸ್ಥಗಿತಗೊಂಡಿದೆ.

CJP ಪ್ರತಿಭಟನೆ ಅಂತ್ಯ; ಜಂತರ್ ಮಂತರ್ ಸ್ವಚ್ಛತೆಗೆ ಇಳಿದ NDMC, 500 ಕಾರ್ಮಿಕರ ನಿಯೋಜನೆ!

0

ನವದೆಹಲಿ: ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ಅಂತ್ಯಗೊಂಡ ಬೆನ್ನಲ್ಲೇ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ CJP ಹೋರಾಟವನ್ನು ಅಂತ್ಯಗೊಳಿಸಿತ್ತು. ಶನಿವಾರ ಸಂಜೆ ಪ್ರತಿಭಟನಾಕಾರರು ಸ್ಥಳ ಖಾಲಿ ಮಾಡುತ್ತಿದ್ದಂತೆ NDMC ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಉಳಿದಿದ್ದ ತ್ಯಾಜ್ಯ, ಮುರಿದ ಅವಶೇಷಗಳು, ತಾತ್ಕಾಲಿಕ ಡೇರೆಗಳು, ಆಹಾರ ಸಾಮಗ್ರಿಗಳಿಂದ ಸಂಗ್ರಹವಾಗಿದ್ದ ಕಸ ಸೇರಿದಂತೆ ವಿವಿಧ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ.

500ಕ್ಕೂ ಹೆಚ್ಚು ಕಾರ್ಮಿಕರ ನಿಯೋಜನೆ:

NDMC ಅಧಿಕಾರಿಗಳ ಪ್ರಕಾರ, ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿದೆ. ಬ್ಯಾನರ್‌ಗಳು, ಡೇರೆಗಳು, ನಿರ್ಮಾಣ ಅವಶೇಷಗಳು ಹಾಗೂ ಇತರೆ ತ್ಯಾಜ್ಯಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಸ್ಥಳವನ್ನು 24 ಗಂಟೆಗಳೊಳಗೆ ಸಂಪೂರ್ಣ ಸ್ವಚ್ಛಗೊಳಿಸಿ ಹಿಂದಿನ ಸ್ಥಿತಿಗೆ ತರಲು ಗುರಿ ಹೊಂದಲಾಗಿದೆ. ಇದಕ್ಕಾಗಿ ಟ್ರಕ್‌ಗಳು, ಆಟೋ ಟಿಪ್ಪರ್‌ಗಳು ಹಾಗೂ ಸ್ವಚ್ಛತಾ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.

ಹಲವು ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ:

ಜಂತರ್ ಮಂತರ್ ರಸ್ತೆ, ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಹಾಗೂ ಕನ್ನಾಟ್ ಪ್ಲೇಸ್‌ನ ಕೆಲವು ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಕಳೆದ ಎರಡು ದಿನಗಳಲ್ಲಿ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು NDMC ತಿಳಿಸಿದೆ.

NEET ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಅಮಿತ್ ಶಾ ಹೇಳಿದ್ದೇನು?

0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಹುದ್ದೆಗೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಹುದ್ದೆಗಿಂತ ರಾಷ್ಟ್ರದ ಹಿತಾಸಕ್ತಿ, ಯುವಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂಬ ತತ್ವಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅಧಿಕಾರಕ್ಕಿಂತ ದೇಶದ ಹಿತವೇ ಮೊದಲ ಆದ್ಯತೆ ಎಂದು ಉಲ್ಲೇಖಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಪ್ರಧಾನಿ ಮೋದಿ ಅವರ ಕ್ರಮಗಳನ್ನು ಅವರು ಶ್ಲಾಘಿಸಿದ್ದು, ಇದರಿಂದ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ಪಿಎಂ ಶ್ರೀ ಶಾಲೆಗಳ ವಿಸ್ತರಣೆ, ಡಿಜಿಟಲ್ ಶಿಕ್ಷಣ ಉತ್ತೇಜನ, ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ-ಶಿಕ್ಷಣ ಕ್ಷೇತ್ರದ ಸಮನ್ವಯದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಅಮಿತ್ ಶಾ ಸ್ಮರಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ ಹಾಗೂ ವಿದ್ಯಾರ್ಥಿ ಕೇಂದ್ರಿತವಾಗಿಸಲು ಪ್ರಧಾನ್ ಕೈಗೊಂಡ ಕ್ರಮಗಳು ಗಮನಾರ್ಹವಾಗಿವೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿಗೆ ಅವರ ಸೇವೆ ಸಾಕ್ಷಿಯಾಗಿದೆ ಎಂದು ಅಮಿತ್ ಶಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Jamakhandi Car Blast: ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ; ಬಾಗಲಕೋಟೆಯಲ್ಲಿ ಆತಂಕ

ಬಾಗಲಕೋಟೆ: ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟಗೊಂಡ ಘಟನೆ ನಡೆದಿದೆ.

ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾಗಿದೆ. ಕಾರಿನ ಬಿಡಿಭಾಗಗಳು ಛಿದ್ರಗೊಂಡು ಸುತ್ತಮುತ್ತಲ ಪ್ರದೇಶದಲ್ಲಿ ಬಿದ್ದಿವೆ.

ಸ್ಫೋಟದಿಂದ ಓರ್ವ ವ್ಯಕ್ತಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಅವರು ಕಾರನ್ನು ತಂದಿದ್ದರು ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಸೊಕೊ ತಂಡ ಹಾಗೂ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಸ್ಫೋಟಕ್ಕೂ ಮುನ್ನ ಯಾವುದೇ ಹಾನಿಯಾಗಿರಲಿಲ್ಲ. ಹೀಗಾಗಿ ಯಾರೋ ಕಾರಿನಲ್ಲಿ ಸ್ಫೋಟಕ ಇಟ್ಟಿರಬಹುದು ಎಂದು ಹನುಮಂತ ಸಂಗೊಂಡ ಶಂಕೆ ವ್ಯಕ್ತಪಡಿಸಿದ್ದಾರೆ.

ಅದೃಷ್ಟವಶಾತ್ ಕಾರು ಚಾಲನೆಯಲ್ಲಿದ್ದ ವೇಳೆ ಈ ಘಟನೆ ಸಂಭವಿಸಿಲ್ಲ. ಒಂದು ವೇಳೆ ಚಲಿಸುತ್ತಿದ್ದಾಗ ಸ್ಫೋಟವಾಗಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅವರು ತಿಳಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ; ಲಕ್ಷ್ಮೇಶ್ವರದಲ್ಲಿ ಭಕ್ತರ ಸಾಗರ

0

ಲಕ್ಷ್ಮೇಶ್ವರ: ಆಷಾಢ ಮಾಸದ ಅಂಗವಾಗಿ ಲಕ್ಷ್ಮೇಶ್ವರದ ಸವಣೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.

ಸ್ಮಶಾನ ಸ್ವಚ್ಛಗೊಳಿಸಿದ ಪತ್ರಕರ್ತರು

0
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಲಕ್ಷ್ಮೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಪಟ್ಟಣದ ಸರ್ಕಾರಿ ಪ್ರೌಢಶಾಲೆ ಸಮೀಪದ ನಿರ್ಲಕ್ಷ್ಯಕ್ಕೊಳಗಾಗಿದ್ದ ಸ್ಮಶಾನ ಭೂಮಿಯನ್ನು ಸ್ವಚ್ಛಗೊಳಿಸುವ ಮೂಲಕ ಸಮಾಜಮುಖಿ ಸೇವೆ ಸಲ್ಲಿಸಿದರು.
ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಮಶಾನ ಭೂಮಿಯಲ್ಲಿ ಆಳೆತ್ತರದ ಜಾಲಿ, ಮುಳ್ಳಿನ ಗಿಡಗಳು ಹಾಗೂ ತ್ಯಾಜ್ಯ ತುಂಬಿಕೊಂಡಿದ್ದರಿಂದ ಅಂತ್ಯಸಂಸ್ಕಾರಕ್ಕೆ ಬರುವ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, “ಸಮಸ್ಯೆಯನ್ನು ಕೇವಲ ಸುದ್ದಿಯಾಗಿಸುವುದಲ್ಲ, ಪರಿಹಾರಕ್ಕೂ ಕೈಜೋಡಿಸೋಣ” ಎಂಬ ಉದ್ದೇಶದಿಂದ ಪತ್ರಕರ್ತರು ಜನರ ಸಹಕಾರದೊಂದಿಗೆ ಜೆಸಿಬಿ ಯಂತ್ರ ಬಳಸಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಗಿಡಗಂಟಿಗಳನ್ನು ತೆರವುಗೊಳಿಸಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಸ್ಮಶಾನ ಭೂಮಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಮಾತನಾಡಿದ ಚಂಬಣ್ಣ ಬಾಳಿಕಾಯಿ, ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸ್ಮಶಾನ ಭೂಮಿಯನ್ನು ಸ್ವಚ್ಛಗೊಳಿಸುವ ಮೂಲಕ ಪತ್ರಕರ್ತರು ಮಾದರಿ ಸೇವೆ ಸಲ್ಲಿಸಿದ್ದಾರೆ ಎಂದರು.
ಚಂದ್ರು ಮಾಗಡಿ ಮಾತನಾಡಿ, ಶಾಲೆಯ ಪಕ್ಕದಲ್ಲಿದ್ದ ಸ್ಮಶಾನದಲ್ಲಿ ಗಿಡಗಂಟೆ ಹಾಗೂ ತ್ಯಾಜ್ಯ ತುಂಬಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಕಳೆದ ವರ್ಷ ಪತ್ರಿಕಾ ದಿನಾಚರಣೆ ಅಂಗವಾಗಿ 30ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ ಮಾಡಿಸಿದ್ದ ಪತ್ರಕರ್ತರು, ಈ ವರ್ಷ ಸಾರ್ವಜನಿಕ ಆಸ್ತಿಯ ಸಂರಕ್ಷಣೆಗೆ ಸ್ವಚ್ಛತಾ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದರು.
ಸ್ವಚ್ಛತಾ ಕಾರ್ಯದಲ್ಲಿ ನಾಗಪ್ಪ ಮಂಜುನಾಥ ಮಾಗಡಿ, ನಾಗಪ್ಪ ಓಂಕಾರಿ, ಹೊನ್ನಪ್ಪ ವಡ್ಡರ, ವೆಂಕರಡ್ಡಿ ಪಾಟೀಲ, ಪುರಸಭೆಯ ಪರಶುರಾಮ ಪಶುಪತಿಹಾಳ, ಓಣಿಯ ನಾಗರಿಕರು ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.
ಪತ್ರಕರ್ತರ ಈ ಸಮಾಜಮುಖಿ ಸೇವೆಯನ್ನು ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹಿರಿಯ ನಾಗರಿಕರು ಮುಕ್ತಕಂಠದಿಂದ ಪ್ರಶಂಸಿಸಿದರು.

ಪತ್ರಿಕೆ ಓದುವ ಹವ್ಯಾಸ ಬೆಳೆಸಿ: ಶ್ರೀ ಚನ್ನವೀರ ಮಹಾಸ್ವಾಮೀಜಿ

0
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಗತ್ತಿನ ಆಗುಹೋಗುಗಳ ಮಾಹಿತಿ ನೀಡುವುದರ ಜೊತೆಗೆ ಸಮಾಜದ ಎಲ್ಲ ಕ್ಷೇತ್ರಗಳ ಪ್ರತಿಬಿಂಬವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗಕ್ಕೆ ಸಮಾಜ ಇನ್ನಷ್ಟು ಶಕ್ತಿ ತುಂಬಬೇಕು ಎಂದು ಹೂವಿನಶಿಗ್ಲಿಯ ಶ್ರೀ ಚನ್ನವೀರ ಮಹಾಸ್ವಾಮೀಜಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, “ಸತ್ಯದ ಹುಡುಕಾಟವೇ ಪತ್ರಿಕೋದ್ಯಮದ ಧರ್ಮ. ನೊಂದ ಜನರ ಧ್ವನಿಯಾಗಿರುವ ಪತ್ರಿಕೆಗಳು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿವೆ” ಎಂದರು.
ವಿನಾಕಾರಣ ಅನೇಕ ವಿಷಯಗಳಿಗೆ ಹಣ ಖರ್ಚು ಮಾಡುವ ಜನರು ಜ್ಞಾನ ವೃದ್ಧಿಗೆ ದಿನಪತ್ರಿಕೆಗಳನ್ನು ಖರೀದಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕಾ ದಿನಾಚರಣೆ ಅಂಗವಾಗಿ ರುದ್ರಭೂಮಿಯನ್ನು ಸ್ವಚ್ಛಗೊಳಿಸಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿಎಸ್‌ಐ ನಾಗರಾಜ ಗಡಾದ, ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗಗಳು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಾಗ ಸಮಾಜವನ್ನು ಎಚ್ಚರಿಸುವ ಕೆಲಸವನ್ನು ಪತ್ರಿಕಾ ರಂಗ ಮಾಡುತ್ತದೆ. ವಿದ್ಯಾರ್ಥಿಗಳಲ್ಲಿ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸುವುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯಗತ್ಯ ಎಂದು ಹೇಳಿದರು.
ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಆನಂದಯ್ಯ ವಿರಕ್ತಮಠ ಮಾತನಾಡಿ, ಪತ್ರಕರ್ತರು ಕೇವಲ ಸುದ್ದಿ ನೀಡುವವರಲ್ಲ, ಸಮಾಜದ ಬದಲಾವಣೆಯ ರೂವಾರಿಗಳಾಗಿದ್ದಾರೆ.
ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಂಡರೆ ವಿವಿಧ ಕ್ಷೇತ್ರಗಳ ಸಮಗ್ರ ಜ್ಞಾನ ದೊರೆಯುತ್ತದೆ ಎಂದು ತಿಳಿಸಿದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಸೊರಟೂರ ಅಧ್ಯಕ್ಷತೆ ವಹಿಸಿದ್ದರು. ಗುರುರಾಜ ಪಾಟೀಲ ಕುಲಕರ್ಣಿ, ಮಲ್ಲು ಕಳಸಾಪುರ, ಸುರೇಶ ಕಡ್ಲಿಮಟ್ಟಿ, ಬಿ.ಸಿ. ಪಟ್ಟೇದ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
“ಸತ್ಯದ ಹುಡುಕಾಟವೇ ಪತ್ರಿಕೋದ್ಯಮದ ಧರ್ಮ. ಸಮಾಜದ ಧ್ವನಿಯಾಗಿರುವ ಪತ್ರಿಕೆಗಳನ್ನು ಓದುವ ಸಂಸ್ಕೃತಿ ಇನ್ನಷ್ಟು ಬೆಳೆಯಬೇಕು.”
– ಶ್ರೀ ಚನ್ನವೀರ ಮಹಾಸ್ವಾಮೀಜಿ, ಹೂವಿನಶಿಗ್ಲಿ

ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಪಿ.ಟಿ. ಪರಮೇಶ್ವರ ನಾಯ್ಕ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.

ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲಿನ ನಂತರವೂ ಪಕ್ಷದ ಕೆಲಸ ಮಾಡಲು ಬಯಸಿದ್ದ ನನಗೆ ಪಕ್ಷದ ವರಿಷ್ಠರು ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ತಕ್ಕಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವಿಭಾಗ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರೂ, ಅವರ ಪಕ್ಷದವರೇ ಈ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಟೀಕೆ ಮಾಡುವುದನ್ನು ಬಿಟ್ಟು ಯೋಜನೆಗಳ ಲಾಭ ಪಡೆಯುವುದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು.

ನೀಟ್ ಪರೀಕ್ಷೆಯ ಅಕ್ರಮವನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವುದು ಖಂಡನೀಯ. ಹೋರಾಟವನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ತಮ್ಮ ಜನ್ಮದಿನದ ಅಂಗವಾಗಿ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯೆ ಹಗರಿ ಆಂಜನೇಯ ದೇವಸ್ಥಾನದ ಬಳಿ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸೊನ್ನದ ಮಹೇಶ್, ಸಕ್ರಹಳ್ಳಿ ಮಲ್ಲಿಕಾರ್ಜುನ, ಏಣಿಗಿ ಪಕ್ಕೀರ್ ಸಾಬು, ಬೋವಿ ಈರಣ್ಣ, ಬೋವಿ ಹುಲುಗಪ್ಪ, ಕೆ.ಎಸ್. ಉಡುಚಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಕೊಟ್ರೇಶ್, ಸಿ. ಬಸವರಾಜ್, ದಾದಾಪೀರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.”

ಪಿ.ಟಿ. ಪರಮೇಶ್ವರ ನಾಯ್ಕ, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ