ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯ ಪುತ್ರನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರು ಡಿಕ್ಕಿಯಾಗಿ 70 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಮೃತರನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ.
ಮಾಮುರ್ಪುರದ ಹಿಮಾಲಯ ಅಪಾರ್ಟ್ಮೆಂಟ್ ಹೊರಭಾಗದಲ್ಲಿ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಅಪಘಾತ ಸಂಭವಿಸಿದೆ. ಬೆಳಗಿನ ವಾಕಿಂಗ್ಗೆ ತೆರಳಿದ್ದ ಊರ್ಮಿಳಾ ಅವರಿಗೆ ವೇಗವಾಗಿ ಬಂದ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರು ಮತ್ತೊಂದು ವಾಹನಕ್ಕೂ ಡಿಕ್ಕಿ ಹೊಡೆದಿದೆ.
ಮರ್ಸಿಡಿಸ್ ಕಾರನ್ನು ಹರಿಯಾಣ ಪೊಲೀಸ್ ಇಲಾಖೆಯ ಸಬ್ಇನ್ಸ್ಪೆಕ್ಟರ್ ಪುತ್ರ ಶುಭಂ ಚಲಾಯಿಸುತ್ತಿದ್ದ ಎನ್ನಲಾಗಿದೆ. ಅಪಘಾತದ ವೇಳೆ ಶುಭಂ ಕುಡಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಪೊಲೀಸರ ಪ್ರಕಾರ, ಮರ್ಸಿಡಿಸ್ ಕಾರು ವ್ಯಾಗನ್ಆರ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾಗನ್ಆರ್ ಕಾರು ಹಿಂದಕ್ಕೆ ಎಸೆಯಲ್ಪಟ್ಟು, ದೂರದಲ್ಲಿ ನಿಲ್ಲಿಸಿದ್ದ ತ್ರಿಚಕ್ರ ವಾಹನ ಲೋಡಿಂಗ್ ವ್ಯಾನ್ಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಊರ್ಮಿಳಾ ಅವರು ತ್ರಿಚಕ್ರ ವಾಹನ ಮತ್ತು ವ್ಯಾಗನ್ಆರ್ ನಡುವೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಕುಡಿದು ವಾಹನ ಚಲಾಯಿಸಿದ್ದ ಆರೋಪದಡಿ ಪೊಲೀಸ್ ಅಧಿಕಾರಿಯ ಪುತ್ರ ಶುಭಂನನ್ನು ಬಂಧಿಸಿರುವ ಪೊಲೀಸರು, ಅಪಘಾತದ ನಿಖರ ಕಾರಣ ಹಾಗೂ ಚಾಲಕನ ವಿರುದ್ಧದ ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

