Home Blog

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್: ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ

ದಾವಣಗೆರೆ/ಕಲಬುರಗಿ/ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ದಾಳಿ ನಡೆಸಿದ್ದಾರೆ. ದಾವಣಗೆರೆ, ಕಲಬುರಗಿ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ ವಿರುದ್ಧ 12 ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಹುಬ್ಬಳ್ಳಿಯ ಕೆಎಸ್ಆರ್‌ಟಿಸಿ (ವಾಯವ್ಯ) ವಿಭಾಗದ ಮುಖ್ಯ ಮೆಕ್ಯಾನಿಕ್ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸಂಬಂಧಿಸಿದ ದಾವಣಗೆರೆ ಹಾಗೂ ಹುಬ್ಬಳ್ಳಿಯ ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.

ದಾಳಿಯ ವೇಳೆ ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಸುಮಾರು ₹40 ಲಕ್ಷ ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದೇ ವೇಳೆ ಚಿತ್ರದುರ್ಗ ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರಿಗೆ ಸಂಬಂಧಿಸಿದ ದಾವಣಗೆರೆ ಮತ್ತು ಚಿತ್ರದುರ್ಗದ ಐದು ಸ್ಥಳಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಬೆಳಗಾವಿಯ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಚಿತ್ರದುರ್ಗ, ದಾವಣಗೆರೆ ಹಾಗೂ ಬೆಳಗಾವಿಯ ವಿವಿಧ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ.

ಕಲಬುರಗಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ನಗರದ ಗೋದುತಾಯಿ ನಗರದಲ್ಲಿರುವ ನಿವಾಸ, ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್‌ನಲ್ಲಿರುವ ಎರಡು ವಾಣಿಜ್ಯ ಸಂಕೀರ್ಣಗಳು ಹಾಗೂ ತೋಟದ ಮನೆಯನ್ನು ಪರಿಶೀಲಿಸಿದೆ.

ಚಿಕ್ಕಮಗಳೂರಿನಲ್ಲಿಯೂ ಭ್ರಷ್ಟಾಚಾರ ಆರೋಪದಡಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಿರುಮಲೇಶ್ ನೇತೃತ್ವದ ತಂಡ ಏಕಕಾಲಕ್ಕೆ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಂಡಿದ್ದು, ಕಡೂರಿನಲ್ಲಿರುವ ಸಂಬಂಧಿಕರ ನಿವಾಸದಲ್ಲಿಯೂ ಪರಿಶೀಲನೆ ನಡೆಸಿದೆ.

ದಾಳಿ ವೇಳೆ ವಶಪಡಿಸಿಕೊಳ್ಳಲಾದ ದಾಖಲೆಗಳು, ನಗದು ಹಾಗೂ ಆಸ್ತಿ ವಿವರಗಳ ಪರಿಶೀಲನೆ ಮುಂದುವರಿದಿದ್ದು, ಅಕ್ರಮ ಆಸ್ತಿ ಗಳಿಕೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಜನರನ್ನು ಬೀದಿ ನಾಯಿಗಳಿಗೆ ಹೋಲಿಸಿದ್ರಾ ರಾಘವ ಲಾರೆನ್ಸ್? ವಿವಾದದ ಬಳಿಕ ಸ್ಪಷ್ಟನೆ ನೀಡಿದ ನಟ

ಚೆನ್ನೈ: ನಟ, ನೃತ್ಯ ನಿರ್ದೇಶಕ ಹಾಗೂ ರಾಜಕೀಯ ಪ್ರವೇಶದ ಬಗ್ಗೆ ಇತ್ತೀಚೆಗೆ ಸುಳಿವು ನೀಡಿದ್ದ ರಾಘವ ಲಾರೆನ್ಸ್, ತಮ್ಮ ಹೇಳಿಕೆಯೊಂದರ ಕಾರಣದಿಂದ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ಹೊಸ ಸರ್ಕಾರದ ಆಡಳಿತವನ್ನು ಸಮರ್ಥಿಸುವ ವೇಳೆ ನೀಡಿದ ಉದಾಹರಣೆಯನ್ನು ಸಾಮಾಜಿಕ ಜಾಲತಾಣ ಬಳಕೆದಾರರು ತೀವ್ರವಾಗಿ ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ್ದ ಲಾರೆನ್ಸ್, ಹೊಸ ಸರ್ಕಾರ ಕೇವಲ ಒಂದು ತಿಂಗಳಷ್ಟೇ ಆಡಳಿತ ನಡೆಸಿದ್ದು, ಅದರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಇನ್ನಷ್ಟು ಸಮಯ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಈ ವೇಳೆ ಹೊಸ ಮನೆಗೆ ಸ್ಥಳಾಂತರವಾದಾಗ ಅಲ್ಲಿನ ವಾತಾವರಣ, ಸೌಲಭ್ಯಗಳು ಮತ್ತು ಸುತ್ತಮುತ್ತಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ ಎಂಬ ಉದಾಹರಣೆ ನೀಡಿದ್ದರು. ಜೊತೆಗೆ ಬೀದಿ ನಾಯಿಗಳ ಉದಾಹರಣೆಯನ್ನೂ ಉಲ್ಲೇಖಿಸಿದ್ದರು.

ಈ ಹೇಳಿಕೆಯ ವಿಡಿಯೋ ತುಣುಕುಗಳು ವೈರಲ್ ಆದ ಬಳಿಕ, ಜನರನ್ನು ಬೀದಿ ನಾಯಿಗಳಿಗೆ ಹೋಲಿಸಲಾಗಿದೆ ಎಂಬ ಆರೋಪಗಳು ಕೇಳಿಬಂದವು. ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ರಾಜಕೀಯ ವಲಯದವರು ಲಾರೆನ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿವಾದದ ಬೆನ್ನಲ್ಲೇ ಪೂರ್ಣ ವಿಡಿಯೋವನ್ನು ಹಂಚಿಕೊಂಡಿರುವ ಲಾರೆನ್ಸ್, ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳುವ ಪ್ರಕ್ರಿಯೆಯನ್ನು ವಿವರಿಸುವ ಸಲುವಾಗಿ ಮಾತ್ರ ಆ ಉದಾಹರಣೆಯನ್ನು ಬಳಸಿದ್ದು, ಜನರನ್ನು ಅವಹೇಳನ ಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸದ್ಯ ಲಾರೆನ್ಸ್ ಅವರ ಹೇಳಿಕೆ ಮತ್ತು ಅದಕ್ಕೆ ಸಂಬಂಧಿಸಿದ ಸ್ಪಷ್ಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ಹಾಗೂ ಸಿನಿ ವಲಯದಲ್ಲೂ ಗಮನ ಸೆಳೆದಿದೆ.

ಕಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ಕನ್ನಡದ ನಟಿ ಸಂಯುಕ್ತಾ ಹೆಗಡೆ ಎಂಟ್ರಿ: ಕಿರಿಕ್‌ ಬೆಡಗಿಗೆ ಸಿಕ್ತು ಕರಿಯರ್‌ನ ಬಿಗ್ ಆಫರ್

ಚೆನ್ನೈ: ಕನ್ನಡ ಚಿತ್ರರಂಗದಿಂದ ಆರಂಭವಾದ ಸಂಯುಕ್ತಾ ಹೆಗಡೆ ಅವರ ಸಿನಿಪಯಣ ಇದೀಗ ಮತ್ತೊಂದು ಮಹತ್ವದ ಹಂತ ತಲುಪಿದೆ. ಚಿಯಾನ್ ವಿಕ್ರಮ್ ನಾಯಕನಾಗಿ ನಟಿಸುತ್ತಿರುವ ‘ಚಿಯಾನ್ 63’ ಸಿನಿಮಾದ ಪ್ರಮುಖ ಪಾತ್ರಕ್ಕೆ ಸಂಯುಕ್ತಾ ಆಯ್ಕೆಯಾಗಿದ್ದು, ಇದು ಅವರ ಕರಿಯರ್‌ನ ಅತಿದೊಡ್ಡ ಅವಕಾಶಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತಿದೆ.

ಆನಂದ್ ಶಂಕರ್ ನಿರ್ದೇಶನದ ಈ ಚಿತ್ರ ಸಂಪೂರ್ಣ ಫ್ಯಾಮಿಲಿ ಆ್ಯಕ್ಷನ್ ಎಂಟರ್‌ಟೈನರ್ ಆಗಿ ನಿರ್ಮಾಣವಾಗುತ್ತಿದೆ. ‘ಇರು ಮುಗನ್’ ಚಿತ್ರದ ಬಳಿಕ ಸುಮಾರು ಹತ್ತು ವರ್ಷಗಳ ನಂತರ ವಿಕ್ರಮ್-ಆನಂದ್ ಶಂಕರ್ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದರಿಂದ ಸಿನಿಮಾ ಮೇಲೆ ಭಾರೀ ನಿರೀಕ್ಷೆ ನಿರ್ಮಾಣವಾಗಿದೆ.

‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ಸಂಯುಕ್ತಾ, ಬಳಿಕ ತೆಲುಗು ಮತ್ತು ತಮಿಳು ಚಿತ್ರರಂಗಗಳಲ್ಲಿ ಸಕ್ರಿಯರಾದರು. ‘ಕೋಮಾಲಿ’, ‘ಮನ್ಮಥ ಲೀಲೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ಸ್ಥಾನ ನಿರ್ಮಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲೂ ಅವಕಾಶಗಳನ್ನು ಪಡೆದುಕೊಂಡಿರುವ ಅವರು, ಈಗ ಕಾಲಿವುಡ್‌ನ ಬಿಗ್‌ಸ್ಟಾರ್ ವಿಕ್ರಮ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ಒಮ್ಮೆ ಕನ್ನಡ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ವಿವಾದಕ್ಕೆ ಸಿಲುಕಿ ಮಧ್ಯದಲ್ಲೇ ಹೊರಬಿದ್ದಿದ್ದ ಸಂಯುಕ್ತಾ, ಬಳಿಕ ಸಂಪೂರ್ಣವಾಗಿ ತಮ್ಮ ವೃತ್ತಿಜೀವನದತ್ತ ಗಮನ ಹರಿಸಿದ್ದರು. ಇದೀಗ ‘ಚಿಯಾನ್ 63’ ಮೂಲಕ ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ.

ಚಿತ್ರದಲ್ಲಿ ವಿಕ್ರಮ್ ಜೊತೆಗೆ ಊರ್ವಶಿ, ಎಂ.ಎಸ್. ಭಾಸ್ಕರ್, ರಿಯಾ ಶಿಬು ಸೇರಿದಂತೆ ಪ್ರಮುಖ ಕಲಾವಿದರು ನಟಿಸುತ್ತಿದ್ದು, ಚಿತ್ರತಂಡ ಶೀಘ್ರದಲ್ಲೇ ಅಧಿಕೃತವಾಗಿ ಉಳಿದ ಪಾತ್ರವರ್ಗದ ಮಾಹಿತಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

‘ನಟಿ ಸಂಚಿತಾ ಉಗಾಲೆ ನನ್ನ ಪ್ರೇಯಸಿ ಅಲ್ಲ’: ಸಹನಟನ ಸ್ಪೋಟಕ ಹೇಳಿಕೆ

ಮುಂಬೈ: ಹಿಂದಿ ಕಿರುತೆರೆ ನಟಿ ಸಂಚಿತಾ ಉಗಾಲೆ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 22 ವರ್ಷದ ನಟಿ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಅವರ ವೈಯಕ್ತಿಕ ಜೀವನದ ಕುರಿತು ಹಲವು ಮಾಹಿತಿ ಹೊರಬಿದ್ದಿವೆ.

ಪ್ರಕರಣದ ಬೆನ್ನಲ್ಲೇ ಸಹನಟ ಉಜ್ವಲ್ ಶರ್ಮಾ ಪ್ರತಿಕ್ರಿಯೆ ನೀಡಿದ್ದು, ತಮ್ಮ ಮತ್ತು ಸಂಚಿತಾ ನಡುವಿನ ಪ್ರೇಮ ಸಂಬಂಧದ ಸುದ್ದಿಗಳನ್ನು ಸಂಪೂರ್ಣ ತಳ್ಳಿಹಾಕಿದ್ದಾರೆ. “ನಮ್ಮ ನಡುವೆ ಯಾವುದೇ ಪ್ರೇಮ ಸಂಬಂಧ ಇರಲಿಲ್ಲ. ಸಂಚಿತಾ ಬೇರೊಬ್ಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು. ಇತ್ತೀಚಿನ ದಿನಗಳಲ್ಲಿ ಆ ಸಂಬಂಧದಿಂದಾಗಿ ಅವರು ಮಾನಸಿಕವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು” ಎಂದು ಹೇಳಿದ್ದಾರೆ.

ಅವರು ಮುಂದುವರಿದು, ಕಳೆದ ಕೆಲವು ದಿನಗಳಿಂದ ಊರಿನಲ್ಲಿ ಇದ್ದ ಕಾರಣ ಸಂಚಿತಾ ಅವರೊಂದಿಗೆ ಸಂಪರ್ಕದಲ್ಲಿರಲಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ, ನಟಿಯ ಪರಿಸ್ಥಿತಿಯನ್ನು ಅರಿತಿದ್ದ ನಿರ್ಮಾಣ ಸಂಸ್ಥೆ ಕೂಡ ಅವರಿಗೆ ಮಾನಸಿಕ ಧೈರ್ಯ ತುಂಬುವ ಪ್ರಯತ್ನ ಮಾಡಿತ್ತು ಎಂದು ಹೇಳಿದ್ದಾರೆ.

ನಟಿ ಸಾವಿನ ಹಿಂದೆ ವೈಯಕ್ತಿಕ ಸಂಬಂಧಗಳ ಒತ್ತಡ ಕಾರಣವಾಗಿದೆಯೇ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಚಿತಾ ಅವರ ವೈಯಕ್ತಿಕ ಜೀವನ, ಆಪ್ತರ ಸಂಪರ್ಕ ಮತ್ತು ಮಾಜಿ ಸಂಗಾತಿಯ ಹಿನ್ನೆಲೆಯನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣದ ತನಿಖಾ ವರದಿ ಬಳಿಕವೇ ಸಾವಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ನಟ ವಿಜಯ್ ರಾಘವೇಂದ್ರ-ಶ್ರೀಮುರಳಿ ತಾಯಿ ಜಯಮ್ಮ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಜಯಮ್ಮ ಅವರ ನಿಧನದಿಂದ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಕುಟುಂಬ ತೀವ್ರ ಶೋಕಕ್ಕೊಳಗಾಗಿದೆ. ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯವಾಗಿರುವ ಈ ಕುಟುಂಬದ ಯಶಸ್ಸಿನ ಹಿಂದೆ ಜಯಮ್ಮ ಅವರ ಪ್ರೋತ್ಸಾಹ, ತ್ಯಾಗ ಮತ್ತು ನೈತಿಕ ಬೆಂಬಲ ಪ್ರಮುಖ ಪಾತ್ರ ವಹಿಸಿತ್ತು.

ಬಾಲನಟನಾಗಿ ರಾಷ್ಟ್ರ ಪ್ರಶಸ್ತಿ ಗೆದ್ದು ಬಳಿಕ ಪ್ರಮುಖ ನಟನಾಗಿ ಬೆಳೆದ ವಿಜಯ್ ರಾಘವೇಂದ್ರ ಹಾಗೂ ‘ಉಗ್ರಂ’ ಚಿತ್ರದ ಮೂಲಕ ಹೊಸ ಇಮೇಜ್ ಕಟ್ಟಿಕೊಂಡು ‘ರೋರಿಂಗ್ ಸ್ಟಾರ್’ ಆಗಿ ಗುರುತಿಸಿಕೊಂಡ ಶ್ರೀಮುರಳಿ ಅವರ ಸಿನಿ ಬದುಕಿಗೆ ಜಯಮ್ಮ ಅವರ ಬೆಂಬಲ ನಿರಂತರವಾಗಿತ್ತು. ಕುಟುಂಬದ ಎಲ್ಲ ಹಂತಗಳಲ್ಲೂ ಅವರು ಬೆನ್ನೆಲುಬಾಗಿ ನಿಂತಿದ್ದರು.

ರಾಜ್‌ಕುಮಾರ್ ಕುಟುಂಬದ ಸಂಬಂಧಿಕರಾಗಿರುವ ಚಿನ್ನೇಗೌಡರ ಕುಟುಂಬದಲ್ಲಿ ಸಂಭವಿಸಿರುವ ಈ ದುರ್ಘಟನೆ ಸ್ಯಾಂಡಲ್‌ವುಡ್ ವಲಯದಲ್ಲಿ ನೋವು ಮೂಡಿಸಿದೆ. ಚಿತ್ರರಂಗದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಜಯಮ್ಮ ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ಯೋಗ ದಿನಾಚರಣೆ ಅರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯುಷ್ ಇಲಾಖೆಯ ವತಿಯಿಂದ ನಡೆದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಒತ್ತಡದ ಬದುಕಿನಲ್ಲಿ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಾಭ್ಯಾಸ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಯೋಗ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ನೆನಪಿನ ಶಕ್ತಿ ಹಾಗೂ ಆರೋಗ್ಯ ವೃದ್ಧಿಗೆ ನಿರಂತರ ಅಭ್ಯಾಸವಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಯೋಗ ಸಂಸ್ಥೆಗಳು ಪ್ರಮುಖ ಪಾತ್ರವಹಿಸಬೇಕು. ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ಯೋಗಾಸಕ್ತರು ಯಾವುದೇ ವಯೋಮಿತಿ ಇಲ್ಲದೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಜುಬೇದ ಬೇಗಂ ಮಾತನಾಡಿ, ಜೂನ್ 21ರಂದು ಬೆಳಿಗ್ಗೆ 6.15ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಯೋಗ ದಿನಾಚರಣೆ ಅಂಗವಾಗಿ ಜೂನ್ 20ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9.30ಕ್ಕೆ ಗದಗ-ಬೆಟಗೇರಿ ನಗರ ಆವರಣದಿಂದ ಹೊರಟು ಟಾಂಗಾ ಕೂಟ, ರೋಟರಿ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ನಗರಸಭೆ ಆವರಣ ತಲುಪಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಯೋಗವು ಆರೋಗ್ಯಕರ ಜೀವನದ ಮೂಲಮಂತ್ರ. ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ದೇಶದ ಚಿತ್ರಣ ಬದಲಿಸಿದ ಮೋದಿ ನಾಯಕತ್ವ: ಡಿ.ವಿ. ಸದಾನಂದಗೌಡ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತವು ಕೇವಲ ತನ್ನ ಚಿತ್ರಣವನ್ನಷ್ಟೇ ಅಲ್ಲ, ತನ್ನ ಅದೃಷ್ಟವನ್ನೂ ಬದಲಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಿಂದ ಆರಂಭವಾದ ಮೋದಿ ಸರ್ಕಾರದ ಆಡಳಿತವು ಸುಶಾಸನ, ಅಭಿವೃದ್ಧಿ ಹಾಗೂ ಜನಕಲ್ಯಾಣದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. 2014, 2019 ಮತ್ತು 2024ರಲ್ಲಿ ಸತತ ಮೂರು ಬಾರಿ ಜನರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅಧಿಕಾರ ನೀಡಿರುವುದು ಪ್ರಧಾನಿ ಮೋದಿ ಅವರ ಮೇಲಿನ ಜನವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ದೇಶದ ಕೋಟ್ಯಂತರ ಜನರ ಬದುಕಿನಲ್ಲಿ ಬದಲಾವಣೆ ಕಂಡುಬಂದಿದೆ. ಜನ್‌ಧನ್ ಯೋಜನೆ, ಆಯುಷ್ಮಾನ್ ಭಾರತ, ಉಜ್ವಲ ಯೋಜನೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಪಿಎಂ ಆವಾಸ್ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಬಡವರು, ರೈತರು, ಮಹಿಳೆಯರು ಹಾಗೂ ಯುವಕರ ಬದುಕಿಗೆ ಹೊಸ ಆಶಾಕಿರಣವಾಗಿವೆ ಎಂದು ತಿಳಿಸಿದರು.

ಡಿಜಿಟಲ್ ಆಡಳಿತ ವ್ಯವಸ್ಥೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದ್ದು, ನೇರ ಹಣ ವರ್ಗಾವಣೆ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಸೋರಿಕೆಯನ್ನು ತಡೆಗಟ್ಟಲಾಗಿದೆ. ದೇಶದ ಗಡಿ ಭದ್ರತೆ ಬಲಗೊಂಡಿದ್ದು, ಸರ್ಜಿಕಲ್ ಸ್ಟ್ರೈಕ್ ಹಾಗೂ ಏರ್ ಸ್ಟ್ರೈಕ್ ಮೂಲಕ ಭಾರತ ತನ್ನ ಶಕ್ತಿಯನ್ನು ಜಗತ್ತಿಗೆ ತೋರಿಸಿದೆ ಎಂದು ಹೇಳಿದರು.

ಕಳೆದ 12 ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ, ಮೆಟ್ರೋ, ವಿಮಾನ ನಿಲ್ದಾಣಗಳು ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಐತಿಹಾಸಿಕ ಬೆಳವಣಿಗೆ ಕಂಡುಬಂದಿದೆ. ಗ್ರಾಮೀಣ ರಸ್ತೆ, ನೀರಾವರಿ ಹಾಗೂ ಡಿಜಿಟಲ್ ಸಂಪರ್ಕ ವ್ಯವಸ್ಥೆಗಳ ಮೂಲಕ ಅಭಿವೃದ್ಧಿಯ ಫಲಗಳನ್ನು ಕೊನೆಯ ವ್ಯಕ್ತಿಯವರೆಗೂ ತಲುಪಿಸಲಾಗಿದೆ ಎಂದು ಹೇಳಿದರು.

ಭಾರತ ಇಂದು ಜಾಗತಿಕ ಮಟ್ಟದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಜಿ-20 ಯಶಸ್ವಿ ಅಧ್ಯಕ್ಷತೆ, ಯೋಗ ದಿನಾಚರಣೆಗೆ ವಿಶ್ವದ ಬೆಂಬಲ ಹಾಗೂ ವಿದೇಶಿ ಹೂಡಿಕೆಗಳ ಹೆಚ್ಚಳ ದೇಶದ ಮೇಲಿನ ಜಾಗತಿಕ ವಿಶ್ವಾಸವನ್ನು ತೋರಿಸುತ್ತವೆ ಎಂದು ಸದಾನಂದಗೌಡ ಅಭಿಪ್ರಾಯಪಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸುತ್ತಿದ್ದು, ಅವರ ನಾಯಕತ್ವದಲ್ಲಿ ವಿಕಸಿತ ಭಾರತದ ಕನಸು ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

“ಮೋದಿ ಸರ್ಕಾರದ 12 ವರ್ಷಗಳು ಕೇವಲ ಆಡಳಿತದ ಅವಧಿಯಲ್ಲ; ಅದು ಬಡವರ ಬದುಕು ಬದಲಿಸಿದ, ದೇಶದ ಆತ್ಮವಿಶ್ವಾಸ ಹೆಚ್ಚಿಸಿದ ಮತ್ತು ವಿಕಸಿತ ಭಾರತದ ಅಡಿಪಾಯ ಹಾಕಿದ ಸುವರ್ಣಯುಗವಾಗಿದೆ.”

ಡಿ.ವಿ. ಸದಾನಂದಗೌಡ

ಮಾಜಿ ಮುಖ್ಯಮಂತ್ರಿ

ಜಿ.ಎಸ್. ಪಾಟೀಲರನ್ನು ಸಂಪುಟಕ್ಕೆ ಸೇರಿಸಿ: ಡಾ. ಶಿವಕುಮಾರ ಸ್ವಾಮೀಜಿ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಕ್ಷೇತ್ರದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಜಿ.ಎಸ್. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಸಿದ್ಧನಕೊಳ್ಳ ಮಠದ ಡಾ. ಶಿವಕುಮಾರ ಸ್ವಾಮೀಜಿ ಆಗ್ರಹಿಸಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಈ ಬಾರಿ ಆ ಭಾಗದ ಸಮರ್ಥ ನಾಯಕರಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು.

ಜನಪರ ಹೋರಾಟಗಳು, ಸಂಘಟನಾ ಸಾಮರ್ಥ್ಯ ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವ ಜಿ.ಎಸ್. ಪಾಟೀಲ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಅವರಂತಹ ಅನುಭವಿ ನಾಯಕನನ್ನು ಸಚಿವ ಸಂಪುಟದಿಂದ ದೂರವಿಡುವುದು ಸಮಂಜಸವಲ್ಲ. ಕಾಂಗ್ರೆಸ್ ಪಕ್ಷವನ್ನು ಗದಗ ಜಿಲ್ಲೆಯಲ್ಲಿ ಬಲಿಷ್ಠವಾಗಿ ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದು, ಹಿಂದುಳಿದ ವರ್ಗಗಳು, ಬಡವರು ಹಾಗೂ ದಲಿತರ ಪರ ಸದಾ ಧ್ವನಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನಕ್ಕೆ ಬದ್ಧವಾಗಿದ್ದರೆ, ಉತ್ತರ ಕರ್ನಾಟಕದ ಪ್ರಬಲ ಪ್ರತಿನಿಧಿಯಾಗಿ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ತನ್ನ ಬದ್ಧತೆಯನ್ನು ಸಾಬೀತುಪಡಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಅಲ್ಲದೆ, ಜಿ.ಎಸ್. ಪಾಟೀಲ ಅವರನ್ನು ಸಚಿವ ಸಂಪುಟಕ್ಕೆ ಸೇರಿಸದಿದ್ದರೆ ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

“ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ಕೇವಲ ಒಬ್ಬ ವ್ಯಕ್ತಿಗೆ ಸಿಗುವ ಗೌರವವಲ್ಲ, ಅದು ಉತ್ತರ ಕರ್ನಾಟಕದ ಜನರಿಗೆ ದೊರೆಯುವ ನ್ಯಾಯವಾಗಿದೆ.”

ಡಾ. ಶಿವಕುಮಾರ ಸ್ವಾಮೀಜಿ

ವಿದ್ಯಾರ್ಥಿಗಳ ಯಶಸ್ಸಿಗೆ ಶಿಕ್ಷಕ-ಪಾಲಕರ ಸಮನ್ವಯ ಅಗತ್ಯ: ಪ್ರೊ. ರಾಜೇಶ ಕುಲಕರ್ಣಿ

0
ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಶೈಕ್ಷಣಿಕ ಸಾಧನೆಗೆ ಶಿಕ್ಷಕರು ಮತ್ತು ಪಾಲಕರ ನಡುವಿನ ಸಮನ್ವಯ ಅತ್ಯಂತ ಅಗತ್ಯವಾಗಿದೆ ಎಂದು ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಅಧ್ಯಕ್ಷ ಪ್ರೊ. ರಾಜೇಶ ಕುಲಕರ್ಣಿ ಹೇಳಿದರು.
ನಗರದ ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ಸಾಲಿನ ಪಾಲಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಲೇಜಿನ ಮೇಲೆ ವಿಶ್ವಾಸವಿಟ್ಟು ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಒಪ್ಪಿಸಿರುವ ಎಲ್ಲ ಪಾಲಕರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಘಟ್ಟವಾಗಿದ್ದು, ಅವರಿಗೆ ಅಗತ್ಯವಾದ ಜ್ಞಾನ, ಕೌಶಲ್ಯ ಹಾಗೂ ಮೌಲ್ಯಗಳನ್ನು ನೀಡಲು ಸಂಸ್ಥೆ ಬದ್ಧವಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ನಿರ್ದೇಶಕ ಹಾಗೂ ಭೌತಶಾಸ್ತ್ರ ಉಪನ್ಯಾಸಕರಾದ ಪ್ರೊ. ರೋಹಿತ್ ಒಡೆಯರ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಉತ್ತಮ ಮೌಲ್ಯಗಳನ್ನು ಅವರಲ್ಲಿ ಬೆಳೆಸುವುದು ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪ್ರಯತ್ನದ ಜೊತೆಗೆ ಪಾಲಕರ ಸಹಭಾಗಿತ್ವವೂ ಅನಿವಾರ್ಯವಾಗಿದೆ ಎಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಪುನೀತ್ ದೇಶಪಾಂಡೆ ಸಮಾರೋಪ ಭಾಷಣದಲ್ಲಿ ಮಾತನಾಡಿ, ಸನ್ಮಾರ್ಗ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸನ್ನಡತೆ ಹಾಗೂ ಬೌದ್ಧಿಕ ಸಾಮರ್ಥ್ಯ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಯಶಸ್ಸಿಗೆ ಪಾಲಕರು ಮತ್ತು ಶಿಕ್ಷಕರ ಸಹಸ್ಪಂದನೆ ಅಗತ್ಯವಾಗಿದೆ ಎಂದು ಹೇಳಿದರು. ಸಿಇಟಿ ಹಾಗೂ ನೀಟ್ ಪರೀಕ್ಷೆಗಳಿಗಾಗಿ ಮಹಾವಿದ್ಯಾಲಯ ಕೈಗೊಂಡಿರುವ ವಿಶೇಷ ಸಿದ್ಧತೆಗಳು, ತರಬೇತಿ ಕ್ರಮಗಳು ಹಾಗೂ ಇತ್ತೀಚೆಗೆ ಅಳವಡಿಸಿಕೊಂಡಿರುವ ಹೊಸ ಸಾಫ್ಟ್‌ವೇರ್‌ನ ಉಪಯೋಗಗಳ ಕುರಿತು ಪಾಲಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ರಜತ್ ತೇಂಬದಮನಿ, ಕಿರಣ ಹಿರೇಮಠ, ಶಿವರಾಮಚೈತನ್ಯ ಕುಲಕರ್ಣಿ ಹಾಗೂ ಅನನ್ಯ ಜೋಶಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.
ಪ್ರೊ. ಮುರಳೀಧರ ಸಂಕನೂರ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರೊ. ಪರಶುರಾಮ ಕೊಟ್ನಿಕಲ್ ವಂದಿಸಿದರು. ಸಭೆಯಲ್ಲಿ ಪಾಲಕರು ತಮ್ಮ ಸಲಹೆ ಮತ್ತು ಸೂಚನೆಗಳನ್ನು ಮುಕ್ತವಾಗಿ ಹಂಚಿಕೊಂಡರು.
“ವಿದ್ಯಾರ್ಥಿಯ ಯಶಸ್ಸು ಕೇವಲ ಶಿಕ್ಷಕರ ಅಥವಾ ಪಾಲಕರ ಜವಾಬ್ದಾರಿಯಲ್ಲ; ಇಬ್ಬರ ಸಮನ್ವಯ ಮತ್ತು ಸಹಕಾರದಿಂದಲೇ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ”
ಪ್ರೊ. ರಾಜೇಶ ಕುಲಕರ್ಣಿ
ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಅಧ್ಯಕ್ಷ

ಅಮೆರಿಕದ ಉತ್ತಮ ಮಾದರಿಗಳು ಭಾರತದಲ್ಲೂ ಜಾರಿಯಾಗಲಿ: ಡಿ.ಆರ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದೇಶ ಪ್ರವಾಸ ಕೇವಲ ಪ್ರವಾಸೋದ್ಯಮಕ್ಕೆ ಸೀಮಿತವಾಗದೆ, ಅಲ್ಲಿನ ಉತ್ತಮ ಆಡಳಿತ, ಶಿಸ್ತು, ತಂತ್ರಜ್ಞಾನ ಹಾಗೂ ನಾಗರಿಕ ವ್ಯವಸ್ಥೆಗಳನ್ನು ಅಧ್ಯಯನ ಮಾಡಿ ಸ್ವದೇಶದಲ್ಲಿ ಜಾರಿಗೊಳಿಸುವ ಪ್ರಯತ್ನಗಳು ನಡೆಯಬೇಕು ಎಂದು ರಾಜ್ಯ ವಿಕೇಂದ್ರೀಕರಣ ಹಾಗೂ ಯೋಜನಾ ಮಂಡಳಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನದಲ್ಲಿ ಆಯೋಜಿಸಿದ್ದ ಲೇಖಕಿ ವೀಣಾ ತಿರ್ಲಾಪೂರ ಅವರ ‘ಸೀಮೆಯಾಚೆಗೆ ಒಂದು ಅಮೆರಿಕಾ ಪಯಣ’ ಪ್ರವಾಸ ಕಥನ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ವಿದೇಶಗಳಲ್ಲಿ ಕಂಡ ಉತ್ತಮ ವ್ಯವಸ್ಥೆಗಳು, ತಂತ್ರಜ್ಞಾನ ಹಾಗೂ ಅಭಿವೃದ್ಧಿ ಮಾದರಿಗಳನ್ನು ನಮ್ಮ ದೇಶದಲ್ಲೂ ಅಳವಡಿಸಿಕೊಂಡರೆ ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯುತ್ತದೆ ಎಂದು ಡಿ.ಆರ್. ಪಾಟೀಲ ಹೇಳಿದರು.

ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ವಿದೇಶಗಳಿಗೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಿ, ಅಲ್ಲಿನ ಉತ್ತಮ ಅಂಶಗಳನ್ನು ಇಲಾಖೆಗಳ ಮೂಲಕ ಜಾರಿಗೊಳಿಸುವ ವ್ಯವಸ್ಥೆ ಕಡ್ಡಾಯಗೊಳಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೃತಿ ಪರಿಚಯ ಮಾಡಿದ ಪ್ರಾಧ್ಯಾಪಕ ರಾಮಚಂದ್ರ ಪಡೆಸೂರ ಮಾತನಾಡಿ, ಅಮೆರಿಕದ ವಿವಿಧ ಪ್ರದೇಶಗಳು, ಅಲ್ಲಿನ ಜೀವನ ಶೈಲಿ, ಮೂಲಸೌಕರ್ಯಗಳು, ರಸ್ತೆ ವ್ಯವಸ್ಥೆ ಹಾಗೂ ನಾಗರಿಕ ಶಿಸ್ತು ಕುರಿತ ಸಮಗ್ರ ಚಿತ್ರಣವನ್ನು ಕೃತಿ ಒಳಗೊಂಡಿದೆ ಎಂದು ಹೇಳಿದರು.

“ಪ್ರವಾಸ ಕಥನವು ಕೇವಲ ಪ್ರವಾಸದ ಅನುಭವಗಳ ಸಂಕಲನವಲ್ಲ; ಅದು ಓದುಗರನ್ನು ಹೊಸ ಜಗತ್ತಿನತ್ತ ಕರೆದೊಯ್ಯುವ ಕಿಟಕಿಯಾಗಿದೆ” ಎಂದು ಅಭಿಪ್ರಾಯಪಟ್ಟರು.

ಲೇಖಕಿ ವೀಣಾ ತಿರ್ಲಾಪೂರ ಮಾತನಾಡಿ, ಅಮೆರಿಕದ ಜನರ ಪರಿಸರ ಕಾಳಜಿ ಮತ್ತು ಜೀವ ಸಂಕುಲದ ಮೇಲಿನ ಪ್ರೀತಿ ತಮ್ಮನ್ನು ಹೆಚ್ಚು ಆಕರ್ಷಿಸಿತು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಪ್ರವಾಸ ಕಥನ ಸಾಹಿತ್ಯ ಪ್ರಕಾರದಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದು, ಲೇಖಕಿ ತಮ್ಮ ಅನುಭವಗಳನ್ನು ಅಕ್ಷರ ರೂಪದಲ್ಲಿ ದಾಖಲಿಸುವ ಮೂಲಕ ಓದುಗರಿಗೆ ಹೊಸ ಅನುಭವವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು.

ಅಲ್ಲಿನ ನಾಗರಿಕ ಶಿಸ್ತು, ನಿಯಮ ಪಾಲನೆ ಹಾಗೂ ಪರಿಸರ ಕಾಳಜಿಯನ್ನು ಅಳವಡಿಸಿಕೊಂಡು ಭಾರತವನ್ನು ಇನ್ನಷ್ಟು ಸುಂದರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ಮೂಲಿಮನಿ ಮಾತನಾಡಿದರು. ದತ್ತಪ್ರಸನ್ನ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಸುರೇಶ ಕುಂಬಾರ ಸ್ವಾಗತಿಸಿದರು. ಡಿ.ಎಸ್. ಬಾಪುರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಗಣ್ಯರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಭಾಗವಹಿಸಿದ್ದರು.

“ಪ್ರಾಣಿ, ಪಕ್ಷಿ ಸೇರಿದಂತೆ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ ಎಂಬ ಮೌಲ್ಯವನ್ನು ಅಮೆರಿಕದ ಜನರು ಆಚರಣೆಯಲ್ಲಿ ಪಾಲಿಸುತ್ತಿದ್ದಾರೆ. ಪರಿಸರದ ಮೇಲಿನ ಅವರ ಬದ್ಧತೆ ಮಾದರಿಯಾಗಿದೆ.”

ವೀಣಾ ತಿರ್ಲಾಪೂರ, ಲೇಖಕಿ

error: Content is protected !!