Home Blog

‘ದೃತರಾಷ್ಟ್ರ ಮುಂದೆ ದುರ್ಯೋಧನ ಪಟ್ಟಾಭಿಷೇಕ’: ಯಡಿಯೂರಪ್ಪ-ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

0

ಕೊಪ್ಪಳ: ಬಿಜೆಪಿ ಒಳರಾಜಕೀಯ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿದ್ದಾರೆ. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮವನ್ನು ಟೀಕಿಸಿದ ಅವರು, “ಇದು ಸಂಭ್ರಮೋತ್ಸವ ಅಲ್ಲ, ದೃತರಾಷ್ಟ್ರನ ಮುಂದೆ ದುರ್ಯೋಧನನ ಪಟ್ಟಾಭಿಷೇಕ” ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಪುನರುಚ್ಚರಿಸಿದ ಯತ್ನಾಳ್, “ಭ್ರಷ್ಟಾಚಾರ ಮಾಡಿ ಜೈಲುಗೂ ಹೋಗಿದ್ದವರು ಆದರ್ಶ ನಾಯಕನಾಗಲು ಸಾಧ್ಯವಿಲ್ಲ. ಬಿಜೆಪಿ ನಾಯಕತ್ವವನ್ನು ಒತ್ತಡಕ್ಕೆ ತರುವ ರಾಜಕೀಯ ನಾಟಕವೇ ಈ ಅಭಿಮಾನೋತ್ಸವ” ಎಂದು ಆರೋಪಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಹರಿಹಾಯ್ದ ಅವರು, “ತಮ್ಮ ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ಜನರನ್ನು ಸೇರಿಸುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷವನ್ನು ಕುಟುಂಬ ರಾಜಕಾರಣದ ಕೇಂದ್ರವನ್ನಾಗಿ ಮಾಡಿದ್ದಾರೆ” ಎಂದು ಟೀಕಿಸಿದರು.

ತಮ್ಮ ರಾಜಕೀಯ ಪ್ರಭಾವದ ಬಗ್ಗೆ ಮಾತನಾಡಿದ ಯತ್ನಾಳ್, “ನನ್ನ ಮಟ್ಟ ಸಿಎಂ ಮಟ್ಟಕ್ಕಿಂತ ಹೆಚ್ಚಾಗಿದೆ. ವಿಜಯಪುರದಲ್ಲಿ ಸಿಎಂ ಬಂದಾಗಿಗಿಂತ ನನಗೆ ಹೆಚ್ಚು ಚಪ್ಪಾಳೆ ಸಿಕ್ಕಿತ್ತು” ಎಂದು ಹೇಳಿದರು. ಜೊತೆಗೆ, “ನಾನು ಯಾರ ಮನೆಯಿಗೂ ಹೋಗಿ ಹೊಂದಾಣಿಕೆ ರಾಜಕಾರಣ ಮಾಡುವವನಲ್ಲ” ಎಂದು ಪರೋಕ್ಷವಾಗಿ ಯಡಿಯೂರಪ್ಪ ಹಾಗೂ ಇತರ ನಾಯಕರನ್ನು ಗುರಿಯಾಗಿಸಿದರು.

ಹೊಸ ಪಕ್ಷದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, “ರಾಜ್ಯಾದ್ಯಂತ ಪ್ರವಾಸ ಮಾಡಿ ಜನಾಭಿಪ್ರಾಯ ಪಡೆದು ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು.

‘ಬಂಗಾಳದಲ್ಲಿ ಬಿಜೆಪಿ ಸರ್ಕಾರ ಫಿಕ್ಸ್?’: ಅಮಿತ್ ಶಾ ಕೋಲ್ಕತ್ತಾ ಎಂಟ್ರಿ, ಸಿಎಂ ಆಯ್ಕೆಗಾಗಿ ಹೈವೋಲ್ಟೇಜ್ ಸಭೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರ ಗತಿಯನ್ನ ಪಡೆದುಕೊಂಡಿವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಆಗಮಿಸಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಆಯ್ಕೆಗೂ ಮುನ್ನ ಅಮಿತ್ ಶಾ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರನ್ನು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸ್ವಾಗತಿಸಿದರು. ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾ, “ಬಂಗಾಳ ಜನರು ಬಿಜೆಪಿಗೆ ನೀಡಿರುವ ಬೆಂಬಲಕ್ಕೆ ಕೃತಜ್ಞತೆಗಳು. ಜನರ ನಿರೀಕ್ಷೆಗಳನ್ನು ಈಡೇರಿಸಲು ಪಕ್ಷ ಬದ್ಧವಾಗಿದೆ” ಎಂದು ಹೇಳಿದರು.

ಈ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದೊಳಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಆಯ್ಕೆ ನಡೆಯಲಿದ್ದು, ಸಂಜೆ ವೇಳೆಗೆ ಸಿಎಂ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿರುವ ಈ ಬೆಳವಣಿಗೆ ಮೇಲೆ ದೇಶದ ಗಮನ ನೆಟ್ಟಿದೆ.

ಶ್ರೀದೇವಿ ಆಸ್ತಿ ವಿವಾದದಲ್ಲಿ ಬೋನಿ ಕಪೂರ್ ಕುಟುಂಬಕ್ಕೆ ಜಯ: 40 ವರ್ಷದ ದಾವೆ ಹೈಕೋರ್ಟ್ ವಜಾ

ಬಾಲಿವುಡ್‌ ಖ್ಯಾತ ನಟಿ ಶ್ರೀದೇವಿ ಖರೀದಿಸಿದ್ದ ಚೆನ್ನೈನ ಬಹುಮೌಲ್ಯದ ಭೂಮಿಗೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಬೋನಿ ಕಪೂರ್ ಕುಟುಂಬಕ್ಕೆ ಭಾರೀ ಜಯ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್, ಶೋಲಿಂಗನಲ್ಲೂರ್‌ನ 2.70 ಎಕರೆ ಆಸ್ತಿಯ ಮೇಲಿನ ದಾವೆಯನ್ನು ಸಂಪೂರ್ಣ ವಜಾಗೊಳಿಸಿದೆ.

1940ರ ದಾಖಲೆಗಳನ್ನು ಆಧಾರವಾಗಿಸಿಕೊಂಡು ಎಂ.ಸಿ. ಶಿವಕಾಮಿ ಹಾಗೂ ಇತರರು ಈ ಜಾಗ ತಮ್ಮ ಕುಟುಂಬಕ್ಕೆ ಸೇರಿದೆ ಎಂದು ವಾದಿಸಿದ್ದರು. 1988ರಲ್ಲಿ ಶ್ರೀದೇವಿ ನಡೆಸಿದ ಖರೀದಿ ವ್ಯವಹಾರ ಕಾನೂನುಬದ್ಧವಲ್ಲ ಎಂದು ಆರೋಪಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಆದರೆ ಬೋನಿ ಕಪೂರ್ ಪರ ವಕೀಲರು, ನಾಲ್ಕು ದಶಕಗಳ ಬಳಿಕ ಆಸ್ತಿ ಮೇಲೆ ಹಕ್ಕು ಹೇಳುವುದು ಕೇವಲ ಕಬಳಿಕೆ ಉದ್ದೇಶದ ಪ್ರಯತ್ನ ಎಂದು ತೀವ್ರವಾಗಿ ವಾದಿಸಿದ್ದರು. ದೂರುದಾರರು ಸಲ್ಲಿಸಿದ್ದ ವಾರಸುದಾರರ ದಾಖಲೆಗಳು ಮಾನ್ಯವಲ್ಲ ಎಂದು ಕೋರ್ಟ್ ಗಮನಕ್ಕೆ ತರಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಈ ದಾವೆ ಕಾಲಮಿತಿಯ ನಿಯಮಕ್ಕೆ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿದೆ. ಜೊತೆಗೆ ಕಾನೂನಿನ ದುರುಪಯೋಗದ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಈ ತೀರ್ಪಿನೊಂದಿಗೆ ಶ್ರೀದೇವಿ ಆಸ್ತಿ ಕಾನೂನುಬದ್ಧವಾಗಿ ಬೋನಿ ಕಪೂರ್ ಹಾಗೂ ಪುತ್ರಿಯರಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರಿಗೆ ಸೇರಿದೆ ಎಂಬುದು ಮತ್ತೊಮ್ಮೆ ದೃಢಪಟ್ಟಿದೆ.

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಗೆ ಸರ್ಕಾರ ಆದೇಶ: ಪ್ರತಿ ಕ್ವಿಂಟಾಲ್‌ʼಗೆ ₹7,721 ನಿಗದಿ

ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಕ್ವಿಂಟಾಲ್‌ ಸೂರ್ಯಕಾಂತಿಗೆ 7 ಸಾವಿರ 721 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಿರ್ದೇಶನ ನೀಡಲಾಗಿದೆ.

ಇದೇ ವೇಳೆ, ನಾಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳಾಗಿ ನೇಮಕ ಮಾಡಲಾಗಿದ್ದು, ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯಾಗಿ ಜವಾಬ್ದಾರಿ ನೀಡಲಾಗಿದೆ.

ರೈತರ ನೋಂದಣಿ ಅವಧಿಯನ್ನು 50 ದಿನಗಳ ಕಾಲ ಹಾಗೂ ಖರೀದಿ ಅವಧಿಯನ್ನು 60 ದಿನಗಳ ಕಾಲ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯ ಜೊತೆಯಲ್ಲೇ ಖರೀದಿ ಕಾರ್ಯವೂ ಆರಂಭವಾಗಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಹಾಗೂ ವೈಜ್ಞಾನಿಕ ಸೌಲಭ್ಯ ಹೊಂದಿರುವ ಗೋದಾಮುಗಳಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸರ್ಕಾರ ಸೂಚಿಸಿದೆ.

ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅಮಿತ್ ಶಾ ದುಡ್ಡು ಕೊಟ್ಟು ಮ್ಯಾಚ್ ನೋಡ್ತಾರಾ?: ಐಪಿಎಲ್ ಫೈನಲ್ ಸ್ಥಳಾಂತರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಗುಜರಾತ್‌ಗೆ ಸ್ಥಳಾಂತರಿಸಿರುವ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ದುಡ್ಡು ಕೊಟ್ಟು ಮ್ಯಾಚ್ ನೋಡ್ತಾರಾ ಅಥವಾ ಉಚಿತವಾಗಿ ನೋಡ್ತಾರಾ?” ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ಕಿಡಿಕಾರಿದರು.

ಐಪಿಎಲ್ ಟಿಕೆಟ್‌ಗಾಗಿ ರಾಜಕೀಯ ಒತ್ತಡ ಬಂದ ಹಿನ್ನೆಲೆ ಪಂದ್ಯ ಸ್ಥಳಾಂತರವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರು ಅಥವಾ ಸಂಸದರು ಟಿಕೆಟ್ ಕೇಳಿದ್ದಾರೆ ಎನ್ನುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ಮೊದಲು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ವಿಷಯ ಪ್ರಸ್ತಾಪಿಸಿದ್ದರು. ಬಳಿಕ ಎಲ್ಲರೂ ಅದಕ್ಕೆ ಧ್ವನಿಗೂಡಿಸಿದ್ದರು. ಹೀಗಾಗಿ ಇದನ್ನು ರಾಜಕೀಯವಾಗಿ ತಿರುಗಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಟಿಕೆಟ್ ನೀಡುವುದು ತಪ್ಪು ಎಂದು ಕೆಲವರು ಹೇಳುತ್ತಿದ್ದಾರೆ. ಈಗಾಗಲೇ ಐದಾರು ಪಂದ್ಯಗಳು ನಡೆದಿವೆ. ಅವು ಹೇಗೆ ನಡೆದವು ಎಂಬುದನ್ನು ಪ್ರಶ್ನಿಸಬೇಕು. ಈಗ ಹೆಚ್ಚಿನ ಲಾಭಕ್ಕಾಗಿ ಪಂದ್ಯವನ್ನು ಗುಜರಾತ್‌ಗೆ ಕರೆದೊಯ್ಯಲಾಗಿದೆ ಎಂದು ಆರೋಪಿಸಿದರು.

ಸದನದಲ್ಲೇ ಬಿಜೆಪಿ ವಿರೋಧ ಪಕ್ಷದ ನಾಯಕರೇ ಐಪಿಎಲ್ ಟಿಕೆಟ್ ಕೇಳಿದ್ದರು. ಹಾಗಾದರೆ ಪಂದ್ಯ ಸ್ಥಳಾಂತರಕ್ಕೆ ಬಿಜೆಪಿಯೇ ಕಾರಣವೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

ರಾಜ್ಯಕ್ಕೆ ಬಂಡವಾಳ ಹೂಡಿಕೆ ವಿಚಾರದಲ್ಲಿ ಅನ್ಯಾಯ ಮಾಡಿದಂತೆಯೇ, ಈಗ ಕ್ರೀಡಾ ಕ್ಷೇತ್ರದಲ್ಲಿಯೂ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭದ್ರತೆ ವಿಷಯದಲ್ಲಿ ಶಾಸಕರು ಅಥವಾ ಸಂಸದರ ಯಾವುದೇ ಒತ್ತಡ ಇರಲಿಲ್ಲ. ಯಾರು ಇ-ಮೇಲ್ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಪಂದ್ಯವನ್ನು ಮುಂಬೈನಲ್ಲಿ ನಡೆಸಬಹುದಾಗಿತ್ತು. ಆದರೂ ಗುಜರಾತ್‌ಗೆ ಏಕೆ ಸ್ಥಳಾಂತರ ಮಾಡಲಾಗಿದೆ ಎಂಬುದನ್ನು ಪ್ರಶ್ನಿಸಬೇಕು ಎಂದರು.

ಎಲ್ಲ ಪ್ರಮುಖ ಪಂದ್ಯಗಳನ್ನೂ ಗುಜರಾತ್‌ಗೆ ಕರೆದೊಯ್ಯುತ್ತಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಖಂಡಿಸಿದ್ದಾರೆ ಎಂದು ಹೇಳಿದರು.

4 ದಿನಗಳ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾದ ಪೀಣ್ಯ ಫ್ಲೈಓವರ್: ಲೋಡ್ ಟೆಸ್ಟಿಂಗ್ ಯಶಸ್ವಿ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಇದೀಗ ಮತ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕೇಬಲ್ ಅಳವಡಿಕೆ ಹಾಗೂ ಲೋಡ್ ಟೆಸ್ಟಿಂಗ್ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ ಇಂದಿನಿಂದ ಫ್ಲೈಓವರ್ ಮೇಲೆ ಸಂಚಾರ ಪುನರಾರಂಭಗೊಂಡಿದೆ.

ರಾಜ್ಯದ ಸುಮಾರು 22 ಜಿಲ್ಲೆಗಳ ಸಂಪರ್ಕಕ್ಕೆ ಪ್ರಮುಖ ಮಾರ್ಗವಾಗಿರುವ ಪೀಣ್ಯ ಫ್ಲೈಓವರ್‌ನಲ್ಲಿ ಮೇ 5ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿತ್ತು. ಸೇತುವೆಯ ಸುರಕ್ಷತೆ ಪರಿಶೀಲನೆಗಾಗಿ ಕೇಬಲ್ ಅಳವಡಿಕೆ ಮತ್ತು ಲೋಡ್ ಟೆಸ್ಟಿಂಗ್ ಕಾರ್ಯ ಕೈಗೊಳ್ಳಲಾಗಿತ್ತು.

ಈಗ ಕಾಮಗಾರಿ ಪೂರ್ಣಗೊಂಡಿದ್ದು, ಲೋಡ್ ಟೆಸ್ಟಿಂಗ್ ಕೂಡ ಯಶಸ್ವಿಯಾಗಿ ಮುಗಿದಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಫ್ಲೈಓವರ್ ಬಂದ್ ಆಗಿದ್ದ ನಾಲ್ಕು ದಿನಗಳ ಅವಧಿಯಲ್ಲಿ ಪರ್ಯಾಯ ಮಾರ್ಗಗಳಲ್ಲಿ ಭಾರೀ ಟ್ರಾಫಿಕ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ಅನುಭವಿಸಿದ್ದರು. ಇದೀಗ ಫ್ಲೈಓವರ್ ತೆರೆಯಲ್ಪಟ್ಟ ಹಿನ್ನೆಲೆ ವಾಹನ ಸವಾರರು ನಿರಾಳರಾಗಿದ್ದಾರೆ. ಸದ್ಯ ಪೀಣ್ಯ ಫ್ಲೈಓವರ್‌ನಲ್ಲಿ ಎರಡೂ ದಿಕ್ಕಿನಲ್ಲೂ ಎಂದಿನಂತೆ ವಾಹನ ಸಂಚಾರ ಸುಗಮವಾಗಿ ಆರಂಭವಾಗಿದೆ.

ಮೇ ತಿಂಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ: ದೆಹಲಿ ಭೇಟಿಯ ಬಳಿಕ ಅಂತಿಮ ನಿರ್ಧಾರ ಎಂದ ಸಲೀಂ ಅಹ್ಮದ್

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತು ಮತ್ತೆ ಚರ್ಚೆಗಳು ಜೋರಾಗಿರುವ ನಡುವೆ, ಕಾಂಗ್ರೆಸ್ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಮಹತ್ವದ ಹೇಳಿಕೆ ನೀಡಿದ್ದಾರೆ. ಆದಷ್ಟು ಬೇಗ ಸಚಿವ ಸಂಪುಟ ಪುನರ್‌ರಚನೆ ನಡೆಯಲಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ದೆಹಲಿ ಭೇಟಿ ಬಳಿಕ ಈ ಕುರಿತು ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸಬರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಪುಟ ಪುನರ್‌ರಚನೆ ಅಗತ್ಯವಿದೆ ಎಂದು ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.

ಕ್ಯಾಬಿನೆಟ್ ವಿಸ್ತರಣೆ ಖಚಿತವಾಗಿಯೇ ನಡೆಯಲಿದೆ. ಮೇ ತಿಂಗಳಲ್ಲೇ ಈ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್, ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತು ಮಾಡಿದೆ ಎಂದು ತಿಳಿಸಿದರು. ಉಪಚುನಾವಣೆಯಲ್ಲಿ ಮತಗಳ ಅಂತರ ಕಡಿಮೆಯಾಗಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.

ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದು, ಇದೇ ಕಾರಣಕ್ಕೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಎಂದು ಹೇಳಿದರು.

ಇನ್ನೂ ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಸಲೀಂ ಅಹ್ಮದ್, ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ ಮತಪತ್ರಗಳಲ್ಲಿ ತಿರುಚಾಟ ನಡೆದಿದೆ. ಇದರಲ್ಲಿ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿರುವ ಅನುಮಾನವಿದೆ ಎಂದು ಆರೋಪಿಸಿದರು.

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ.

ಪ್ರಸ್ತುತ ರೈಲ್ವೆ ಇಲಾಖೆಯ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿದ್ದು, ಇದು ಕನ್ನಡಿಗ ಉದ್ಯೋಗಿಗಳಿಗೆ ಅನ್ಯಾಯವಾಗಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 2024ರ ರೈಲ್ವೆ ಮಂಡಳಿ ಆದೇಶದ ಪ್ರಕಾರ ಕನ್ನಡವನ್ನು ಕೂಡ ಪರೀಕ್ಷಾ ಭಾಷೆಯಾಗಿ ಸೇರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿಯೂ ಈ ಪತ್ರವನ್ನು ಹಂಚಿಕೊಂಡಿದ್ದು, ರಾಜ್ಯದ ಉದ್ಯೋಗಿಗಳ ಹಿತಾಸಕ್ತಿ ರಕ್ಷಣೆ ತಮ್ಮ ಪ್ರಮುಖ ಗುರಿ ಎಂದು ತಿಳಿಸಿದ್ದಾರೆ. ಮುಂದಿನ ಎಲ್ಲ ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಮಾನ ಆದ್ಯತೆ ನೀಡಬೇಕು ಎಂಬುದು ಅವರ ಪ್ರಮುಖ ಆಗ್ರಹವಾಗಿದೆ.

ಗ್ರೇಟರ್ ಬೆಂಗಳೂರು ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 14–24ರ ನಡುವೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ಕೊನೆಗೂ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕಾಲಕಾಲಿಕ ಚಲನೆ ಸಿಕ್ಕಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕವನ್ನು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗವು ಸ್ಪಷ್ಟ ಸೂಚನೆ ನೀಡಿದೆ.

ಇಂದು ನಡೆದ ಮಹತ್ವದ ಸಭೆಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ಅವರು, ಚುನಾವಣಾ ಸಿದ್ಧತೆಗಳನ್ನು ಅಂತಿಮ ಹಂತಕ್ಕೆ ತರುವಂತೆ ನಿರ್ದೇಶನ ನೀಡಿದ್ದಾರೆ. GBA ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆ ಸಂಬಂಧ ನಡೆದ ಈ ಸಭೆಗೆ ಸಿಎಂ ಮತ್ತು ಡಿಸಿಎಂ ಗೈರಾಗಿದ್ದು ಗಮನ ಸೆಳೆದಿದೆ. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯ ನಂತರ ಮಾತನಾಡಿದ ಆಯುಕ್ತ ಸಂಗ್ರೇಶಿ ಅವರು, ಕಾನೂನು ಪ್ರಕಾರ ಜಿಬಿಎ ಜೊತೆ ಸಮಾಲೋಚನೆ ಮಾಡಿ ದಿನಾಂಕ ನಿಗದಿಪಡಿಸಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು. ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಕಾರ್ಯಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಎಲ್ಲ ಸಿದ್ಧತೆಗಳು ಪೂರ್ಣವಾಗಿವೆ ಎಂದರು.

ಅವರು ಮುಂದುವರಿದು, ಜೂನ್ 30ರೊಳಗೆ ದಿನಾಂಕ ಘೋಷಣೆ ಕಡ್ಡಾಯವಾಗಿದೆ ಎಂದು ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಚುನಾವಣೆಯನ್ನು ಮುಂದೂಡುವ ಅಧಿಕಾರ ಆಯೋಗಕ್ಕೆ ಇಲ್ಲ, ಆದ್ದರಿಂದ ನಿಗದಿತ ಅವಧಿಯೊಳಗೆ ದಿನಾಂಕ ಅಂತಿಮಗೊಳಿಸಬೇಕು ಎಂದು ಜಿಬಿಎಗೆ ಕಟ್ಟುನಿಟ್ಟಿನ ಸಂದೇಶ ನೀಡಲಾಗಿದೆ.

ಕ್ರಿಕೆಟಿಗ ಸೂರ್ಯಕುಮಾರ್ ಯಾದವ್-ದೇವಿಷಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ!

ಮುಂಬೈ: ಟೀಂ ಇಂಡಿಯಾದ ಟಿ20 ನಾಯಕ ಹಾಗೂ ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್ ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಅವರ ಪತ್ನಿ ದೇವಿಷಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸಂತಸದ ಸುದ್ದಿಯನ್ನು ಸೂರ್ಯಕುಮಾರ್ ಯಾದವ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. “ನಗು ಮತ್ತು ಕನಸುಗಳೊಂದಿಗೆ ನಮ್ಮ ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ” ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

ಕಾಲೇಜು ದಿನಗಳಲ್ಲೇ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಸೂರ್ಯಕುಮಾರ್ ಯಾದವ್ ಹಾಗೂ ದೇವಿಷಾ ಶೆಟ್ಟಿ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು 10 ವರ್ಷಗಳ ಬಳಿಕ ಈ ದಂಪತಿ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.

ಈ ಸುದ್ದಿ ಹೊರಬಿದ್ದ ತಕ್ಷಣವೇ ಅಭಿಮಾನಿಗಳು, ಕ್ರಿಕೆಟಿಗರು ಹಾಗೂ ವಿವಿಧ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ ಹರಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಿರುವುದು ಅಭಿಮಾನಿಗಳಲ್ಲೂ ಸಂತಸ ಮೂಡಿಸಿದೆ.

error: Content is protected !!