Home Blog

ರಸ್ತೆ ಅಭಿವೃದ್ಧಿಗೆ ಸಚಿವ ಎಚ್‌ಕೆಪಿ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ದೊಡ್ಡ ಹೆಜ್ಜೆಯಾಗಿ ಕಳಸಾಪುರ ರಸ್ತೆ, ಬೆಟಗೇರಿ ಹಾಗೂ ಕುರಹಟ್ಟಿ ಪೇಟೆ ಭಾಗಗಳಲ್ಲಿ ಒಟ್ಟು ₹3 ಕೋಟಿ ವೆಚ್ಚದ ಸಿ.ಸಿ ರಸ್ತೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ನಗರದ ವಾರ್ಡ್ ಸಂಖ್ಯೆ 34 ಮತ್ತು 35ರ ಕಳಸಾಪುರ ರಸ್ತೆಯ ಇಂಡಿಯನ್ ಬ್ಯಾಂಕ್ ಸಮೀಪ, ವಾರ್ಡ್ ಸಂಖ್ಯೆ 06ರ ಬೆಟಗೇರಿ ಹಾಗೂ ವಾರ್ಡ್ ಸಂಖ್ಯೆ 10ರ ಕುರಹಟ್ಟಿ ಪೇಟೆಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಯಾವುದೇ ರಾಜಿ ಆಗಬಾರದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
“ಸಾರ್ವಜನಿಕರು ವರ್ಷಗಳ ಕಾಲ ಸುಗಮವಾಗಿ ಸಂಚಾರ ಮಾಡಲು ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಡೆಯಬೇಕು. ನಾಲ್ಕು ತಿಂಗಳೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು,” ಎಂದು ಸೂಚಿಸಿದರು.
ನಗರ ಅಭಿವೃದ್ಧಿಗೆ ಸರ್ಕಾರ ಬದ್ಧ
ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಹಂತದಲ್ಲೂ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಸ್ತೆ, ಕುಡಿಯುವ ನೀರು, ಉದ್ಯಾನವನ ಹಾಗೂ ಶಿಕ್ಷಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಕಳಸಾಪುರ ಭಾಗದ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ ಸಚಿವರು, ಜಿಮ್ ಸಾಮಗ್ರಿ ಖರೀದಿಗೆ ₹5 ಲಕ್ಷ ಅನುದಾನ ಘೋಷಿಸಿದರು.
ಬೆಟಗೇರಿ ಹಾಗೂ ಕುರಹಟ್ಟಿ ಪೇಟೆ ಭಾಗಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ತಾನ ಯೋಜನೆಯಡಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡಗಳನ್ನು ಸಚಿವರು ಲೋಕಾರ್ಪಣೆ ಮಾಡಿದರು.
“ಅಂಗನವಾಡಿಗಳು ಕೇವಲ ಪೋಷಣಾ ಕೇಂದ್ರಗಳಲ್ಲ, ಮಕ್ಕಳ ಭವಿಷ್ಯದ ಅಡಿಪಾಯ ನಿರ್ಮಿಸುವ ಮೊದಲ ಪಾಠಶಾಲೆಗಳು,” ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ವಾರ್ಡ್‌ನ 35 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ನೀಲವ್ವ ಪರಸಪ್ಪ ಬಜಂತ್ರಿ, ರೇಖವ್ವ ರಾಜಪ್ಪ ಬಜಂತ್ರಿ, ಅನಂತ ಬೋಜಪ್ಪ ಬಜಂತ್ರಿ, ಯಮನವ್ವ ಬಜಂತ್ರಿ, ಮಾಯವ್ವ ಬಜಂತ್ರಿ, ಗವಿಸಿದ್ದಪ್ಪ ಬಜಂತ್ರಿ ಸೇರಿದಂತೆ ಹಲವರು ಸಚಿವರಿಂದ ಹಕ್ಕುಪತ್ರ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.
ಗುಣಮಟ್ಟದಲ್ಲಿ ರಾಜಿ ಬೇಡ
ಕುರಹಟ್ಟಿ ಪೇಟೆ ಕಾಮಗಾರಿಯ ವೇಳೆ ಮಾತನಾಡಿದ ಸಚಿವರು, “ರಸ್ತೆ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಪ್ರತಿಯೊಂದು ಹಂತದಲ್ಲೂ ಅಧಿಕಾರಿಗಳು ನಿಗಾ ವಹಿಸಬೇಕು,” ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಉಷಾ ದಾಸರ, ಅನಿಲ ಗರಗ, ದುರಗೇಶ್ ವಿಭೂತಿ, ನಗರಸಭಾ ಸದಸ್ಯೆ ಲಕ್ಷ್ಮವ್ವ ಬಜಂತ್ರಿ, ನಗರಸಭಾ ಸದಸ್ಯ ಇಮ್ತಿಯಾಜ್ ಶಿರಹಟ್ಟಿ, ಜಾಂಗೀರ ಅಣ್ಣಿಗೇರಿ, ಈಶ್ವರ ಗದುಗಿನ, ಹಣಗಿ ಭಾಷಾ, ಇಬ್ರಾಹಿಂ ಶಿರಹಟ್ಟಿ, ಸೋಪೀನ್ ಅಣ್ಣಿಗೇರಿ, ಫಾರುಕ್ ಮಖಾಂದಾರ್, ಯಾಶೀನ್, ಬಸವರಾಜ ಕಡೇಮನಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
 “ನಗರದ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಮತ್ತು ಮೂಲಸೌಕರ್ಯಗಳೇ ಅಡಿಪಾಯ.”
ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಗ್ಯಾರಂಟಿ ಯೋಜನೆಗಳಲ್ಲಿ ಗೊಂದಲ ಬೇಡ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು. ಯಾವುದೇ ಅರ್ಹರು ಯೋಜನೆಗಳಿಂದ ವಂಚಿತರಾಗಬಾರದು ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾತ್ರಿ ವೇಳೆ ಲಾರಿಗಳ ಮೂಲಕ ಅಕ್ಕಿ ಸಾಗಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅದನ್ನು ತಡೆಗಟ್ಟುವ ಕೆಲಸ ಆಗಬೇಕು ಎಂದು ಸೂಚಿಸಿದರು.
ಯುವನಿಧಿ ಯೋಜನೆ ಕುರಿತು ನಗರ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಮಳೆಗಾಲ ಹಿನ್ನೆಲೆಯಲ್ಲಿ ಹೆಸ್ಕಾಂ ಇಲಾಖೆ ವಿದ್ಯುತ್ ಅವಘಡಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪಟ್ಟಣದ ಬಸ್ ಡಿಪೋಗೆ ಹೆಚ್ಚಿನ ಆದಾಯ ಇದ್ದರೂ ಹೊಸ ಬಸ್‌ಗಳು ಪದೇಪದೆ ಕೆಟ್ಟು ನಿಲ್ಲುತ್ತಿರುವುದನ್ನು ಸರಿಪಡಿಸಬೇಕು. ಬಸ್ ನಿಲ್ದಾಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಾರಿಗೆ ಇಲಾಖೆಗೆ ಸೂಚಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ವೃದ್ಧರಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯ ಶಿವರಾಜಗೌಡ ಪಾಟೀಲ ಮಾತನಾಡಿ, ನ್ಯಾಯಬೆಲೆ ಅಂಗಡಿಗಳ ಮೂಲಕ ಅನ್ನಭಾಗ್ಯ ಅಕ್ಕಿ ಸರಿಯಾಗಿ ವಿತರಣೆ ಆಗುವಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಸದಸ್ಯೆ ಶಶಿಕಲಾ ಬಡಿಗೇರ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸುವ ಅಕ್ಕಿಯಲ್ಲಿ ಕಸ-ಕಡ್ಡಿ ಬರುತ್ತಿರುವ ಬಗ್ಗೆ ದೂರಿದ್ದು, ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಜನೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
ತಾಲೂಕು ಪಂಚಾಯತ್ ಇಒ ಮಂಜುಳಾ ಹಕಾರಿ, ಎಡಿ ಕೃಷ್ಣಪ್ಪ ಧರ್ಮರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಿಡಿಪಿಓ ಮೃತ್ಯುಂಜಯ ಗುಡ್ಡದಅನ್ಬೇರಿ, ಹೆಸ್ಕಾಂ ಇಲಾಖೆಯ ಆಂಜನಪ್ಪ, ಆಹಾರ ಇಲಾಖೆಯ ಜಗದೀಶ್ ಕುರುಬರ, ಸಾರಿಗೆ ಇಲಾಖೆಯ ಅಶೋಕ, ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು, ಪಂಚ ಗ್ಯಾರಂಟಿ ಸಮಿತಿ ಸದಸ್ಯರಾದ ರಮಜಾನಸಾಬ್ ನದಾಫ, ಕಲ್ಲಪ್ಪ ಗಂಗಣ್ಣವರ, ರಮೇಶ ಬಾರಕೇರ, ಖಾದರಸಾಬ್ ರಿತ್ತಿ, ಹಸನಸಾಬ್ ಜಂಗ್ಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
 “ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿದಾಗಲೇ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ.”
ನಾಗರಾಜ ಮಡಿವಾಳರ

ಕರ್ನಾಟಕ ಮಾದರಿ ದೇಶಕ್ಕೆ ಮಾದರಿ!

ವಿಜಯಸಾಕ್ಷಿ ಸುದ್ದಿ, ಗದಗ: ಜನಪರ ಗ್ಯಾರಂಟಿ ಯೋಜನೆಗಳು, ಕೈಗಾರಿಕಾ ಕ್ರಾಂತಿ, ಉದ್ಯೋಗ ಸೃಷ್ಟಿ ಹಾಗೂ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಕರ್ನಾಟಕವನ್ನು ದೇಶದ ಮಾದರಿ ರಾಜ್ಯವನ್ನಾಗಿ ರೂಪಿಸಿದೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ಶೇ. 10.2ರೊಂದಿಗೆ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ತೆರಿಗೆ ಸಂಗ್ರಹ ಹಾಗೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ತಿಳಿಸಿದ್ದಾರೆ.
“1.31 ಲಕ್ಷ ಕೋಟಿ ನೇರವಾಗಿ ಜನರ ಖಾತೆಗೆ”
ಗ್ಯಾರಂಟಿ ಯೋಜನೆಗಳ ಮೂಲಕ 1.31 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೊತ್ತವನ್ನು ನೇರವಾಗಿ ಜನರಿಗೆ ತಲುಪಿಸಲಾಗಿದೆ. ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಂದ ಸುಮಾರು 4.5 ಕೋಟಿ ಕನ್ನಡಿಗರ ಬದುಕಿಗೆ ಆರ್ಥಿಕ ಬಲ ಸಿಕ್ಕಿದೆ ಎಂದು ಹೇಳಿದರು.
ಗೃಹಲಕ್ಷ್ಮೀ ಯೋಜನೆಗೆ 74,180 ಕೋಟಿ ರೂ., ಗೃಹಜ್ಯೋತಿಗೆ 28,657 ಕೋಟಿ ರೂ., ಶಕ್ತಿ ಯೋಜನೆಗೆ 18,625 ಕೋಟಿ ರೂ., ಅನ್ನಭಾಗ್ಯಕ್ಕೆ 20,211 ಕೋಟಿ ರೂ. ಹಾಗೂ ಯುವನಿಧಿಗೆ 950 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ವಿವರಿಸಿದರು.
ಕೈಗಾರಿಕೆ-ಉದ್ಯೋಗದಲ್ಲಿ ದಾಖಲೆ
ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 117 ಕೈಗಾರಿಕಾ ಒಪ್ಪಂದಗಳ ಮೂಲಕ 6.70 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಿ, 2.47 ಲಕ್ಷ ನೇರ ಉದ್ಯೋಗ ಸೃಷ್ಟಿಸಿದೆ.
ಇನ್ವೆಸ್ಟ್ ಕರ್ನಾಟಕ-2025 ಕಾರ್ಯಕ್ರಮದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆ ಘೋಷಣೆಯಾಗಿದ್ದು, 6 ಲಕ್ಷ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳು, ಸೆಮಿಕಂಡಕ್ಟರ್ ಪಾರ್ಕ್, ಜವಳಿ ಪಾರ್ಕ್, ಎಲೆಕ್ಟ್ರಿಕ್ ವಾಹನ ಕ್ಲಸ್ಟರ್ ಹಾಗೂ ಜಿಸಿಸಿ ಕೇಂದ್ರಗಳ ಸ್ಥಾಪನೆಯಿಂದ ರಾಜ್ಯದ ಆರ್ಥಿಕತೆ ಮತ್ತಷ್ಟು ಬಲಗೊಳ್ಳಲಿದೆ ಎಂದರು.
ರೈತರು, ಕಾರ್ಮಿಕರು, ಮಹಿಳೆಯರಿಗೆ ವಿಶೇಷ ಯೋಜನೆ
ರೈತರಿಗೆ ಬೆಳೆ ಪರಿಹಾರ, ಹನಿ-ತುಂತುರು ನೀರಾವರಿ, ಕೃಷಿ ಹೊಂಡ, ಆಹಾರ ಸಂಸ್ಕರಣಾ ಘಟಕ, ತೋಟಗಾರಿಕಾ ಕಿಸಾನ್ ಮಾಲ್ ಯೋಜನೆಗಳಿಂದ ನೆರವು ನೀಡಲಾಗಿದೆ.
ಒಂದೇ ಬಾರಿ 20 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಿ ಮಾಸಿಕ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ 30 ಸಾವಿರ ಮಹಿಳೆಯರಿಗೆ ಉದ್ಯೋಗಾಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಆರೋಗ್ಯ-ಶಿಕ್ಷಣದಲ್ಲಿ ಹೊಸ ಹೆಜ್ಜೆ
ಆರೋಗ್ಯ ಕ್ಷೇತ್ರಕ್ಕೆ 17,473 ಕೋಟಿ ರೂ. ಮೀಸಲಿಟ್ಟು ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕ, 26 ಸರ್ಕಾರಿ ಮಹಿಳಾ ಕಾಲೇಜುಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕಕ್ಕೂ ಭರಪೂರ ಯೋಜನೆ
ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಮೌಲ್ಯದ ನೀರಾವರಿ, ರಸ್ತೆ, ಕುಡಿಯುವ ನೀರು ಹಾಗೂ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಸೇರಿದಂತೆ ಹಲವು ಯೋಜನೆಗಳಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
 “ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಸಿಯುತ್ತದೆ ಎಂದವರಿಗೆ ಕರ್ನಾಟಕದ ಸಾಧನೆಗಳೇ ಉತ್ತರವಾಗಿವೆ.”
ಅಶೋಕ ಮಂದಾಲಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ
ಕಾಂಗ್ರೆಸ್ ಸರ್ಕಾರದ ಪ್ರಮುಖ ಸಾಧನೆಗಳು
  • ಜಿಎಸ್‌ಡಿಪಿ ಬೆಳವಣಿಗೆಯಲ್ಲಿ ದೇಶದಲ್ಲೇ 1ನೇ ಸ್ಥಾನ
  • 1.31 ಲಕ್ಷ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವೆಚ್ಚ
  • 10.27 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಣೆ
  • 6 ಲಕ್ಷ ಉದ್ಯೋಗ ಸೃಷ್ಟಿ ಗುರಿ
  • 20 ಸಾವಿರ ಪೌರಕಾರ್ಮಿಕರ ಕಾಯಂಗೊಳಿಸುವಿಕೆ
  • 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಲಾಭ
  • 17 ಡೆಂಗೀ, ಆರೋಗ್ಯ ಸೇವೆ, ಗೃಹ ಆರೋಗ್ಯ ಯೋಜನೆ ಜಾರಿ
  • ರೈತರಿಗೆ ಸಾವಿರಾರು ಕೋಟಿ ರೂ. ಬೆಳೆ ಪರಿಹಾರ ಹಾಗೂ ನೀರಾವರಿ ಯೋಜನೆಗಳು
ಕನ್ನಡಿಗರಿಗೆ ನುಡಿದಂತೆ ನಡೆದ ಸರ್ಕಾರ
2023ರ ಚುನಾವಣೆಯಲ್ಲಿ ನೀಡಿದ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿ ಶೇ. 40ರಷ್ಟು ಗುರಿ ಸಾಧಿಸಲಾಗಿದೆ. ಅಭಿವೃದ್ಧಿ, ಉದ್ಯೋಗ ಹಾಗೂ ಸಾಮಾಜಿಕ ಭದ್ರತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗುತ್ತಿದೆ ಎಂದು ಅಶೋಕ ಮಂದಾಲಿ ತಿಳಿಸಿದ್ದಾರೆ.

ಬಸವಾದಿ ಶರಣರ ಹೆಸರಲ್ಲಿ ಹಿಂದೂ ಸಮಾವೇಶ ಯಾಕೆ?

ವಿಜಯಸಾಕ್ಷಿ ಸುದ್ದಿ, ಗದಗ: ಸಮಾನತೆ ಮತ್ತು ಜಾತಿ ವಿರೋಧದ ತತ್ವ ಸಾರಿದ ಬಸವಾದಿ ಶರಣರ ಹೆಸರಿನಲ್ಲಿ ‘ಹಿಂದೂ ಸಮಾವೇಶ’ ನಡೆಸುತ್ತಿರುವುದು ಖೇದಕರವಾಗಿದ್ದು, ಮೇ 31ರಂದು ಗದಗದಲ್ಲಿ ನಡೆಯಲಿರುವ ಸಮಾವೇಶಕ್ಕೆ ಆಗಮಿಸುತ್ತಿರುವ ಕನ್ಹೇರಿ ಮಠದ ಶ್ರೀ ಕಾಡಸಿದ್ಧೇಶ್ವರ ಸ್ವಾಮೀಜಿಗಳಿಗೆ ಜಿಲ್ಲಾಡಳಿತ ಗದಗ ಪ್ರವೇಶ ನಿರ್ಬಂಧಿಸಿ ಶಾಂತಿ ಕಾಪಾಡಬೇಕು ಎಂದು ಸಾಹಿತಿ ಬಸವರಾಜ ಸೂಳಿಬಾವಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರು ಸಮಾನತೆಗಾಗಿ ಹಿಂದುತ್ವದ ಜಾತಿ ವ್ಯವಸ್ಥೆಗೆ ವಿರುದ್ಧವಾಗಿ ಹೋರಾಡಿದವರು. ಅಂತಹ ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ನಡೆಸುವುದು ಶರಣ ಚಿಂತನೆಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.
“ಈ ಸಮಾವೇಶ ರೈತರಿಗೆ ಸಲಹೆ ನೀಡಲು ಎಂದಾದರೆ ಅದನ್ನು ‘ರೈತ ಹಿಂದೂ ಸಮಾವೇಶ’ ಎಂದು ಕರೆಯಬಹುದಿತ್ತು. ಹಿಂದುತ್ವಕ್ಕೂ ಬಸವಾದಿ ಶರಣರಿಗೂ ಯಾವುದೇ ಸಂಬಂಧವಿಲ್ಲ. ಹಿಂದುತ್ವಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡದ್ದೇ ಲಿಂಗಾಯತ ಧರ್ಮ,” ಎಂದು ಹೇಳಿದರು.
ಜಾತಿ ವ್ಯವಸ್ಥೆಯನ್ನು ಒಪ್ಪದ ಶರಣ ಚಳವಳಿಯನ್ನು ಹಿಂದುತ್ವದ ಚೌಕಟ್ಟಿಗೆ ಸೇರಿಸಲು ಕೆಲವರು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ. ಈ ಸಮಾವೇಶ ಲಿಂಗಾಯತ ಧರ್ಮ ಹಾಗೂ ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ನಾವೆಲ್ಲ ಹಿಂದೂ-ನಾವೆಲ್ಲ ಒಂದು” ಎಂಬ ಘೋಷಣೆ ನೀಡುವವರೊಂದಿಗೆ ಕಾಣಿಸಿಕೊಳ್ಳುತ್ತಿರುವ ಕನ್ಹೇರಿ ಮಠದ ಶ್ರೀ ಕಾಡಸಿದ್ಧೇಶ್ವರ ಸ್ವಾಮೀಜಿ ಸಮಾನತೆ ಸಾಧ್ಯವಿಲ್ಲ ಎನ್ನುವ ನಿಲುವು ವ್ಯಕ್ತಪಡಿಸುತ್ತಿದ್ದಾರೆ. ಅವರು ಮಠಾಧೀಶರಂತೆ ಅಲ್ಲ, ವಿಶ್ವ ಹಿಂದೂ ಪರಿಷತ್ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ. ಹೀಗಾಗಿ ಪೀಠ ತ್ಯಜಿಸಿ ಅದರ ಪ್ರಚಾರಕರಾಗಲಿ,” ಎಂದು ಸವಾಲು ಹಾಕಿದರು.
ಬಸವ ಅನುಯಾಯಿ ಅಶೋಕ ಬರಗುಂಡಿ ಮಾತನಾಡಿ, ಬಸವಾದಿ ಶರಣರು ವೈದಿಕ ವ್ಯವಸ್ಥೆಯ ವಿರುದ್ಧ ಹೋರಾಡಿದವರು. ಅಂತಹ ಶರಣರ ಹೆಸರಿನಲ್ಲಿ ನಡೆಯುವ ಈ ಸಮಾವೇಶ ವಚನ ಚಳವಳಿಯ ಹಿಂದೂಕರಣದ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಶೇಖಣ್ಣ ಕವಳಿಕಾಯಿ, ಪ್ರೊ. ಡಿ.ಜಿ. ಜೋಗಣ್ಣವರ, ಗಿರಿಜಾ ಹಸಬಿ, ನಿವೃತ್ತ ಶಿಕ್ಷಕ ಡಿಎಸ್‌ಎಸ್‌ನ ಎಸ್.ಎನ್. ಬಳ್ಳಾರಿ, ಕರಿಗೌಡರ, ಪ್ರಕಾಶ ಅಸುಂಡಿ, ಲಿಂಗರಾಜ, ಡಾ. ರಾಮಚಂದ್ರ ಹಂಸನೂರ, ಶಿವನಗೌಡ ಗೌಡರ, ಕಳಸಾಪೂರಶೆಟ್ಟರ, ಗಂಗವ್ವ ಹೂಗಾರ, ಮುತ್ತು ಬಿಳೆಯಲಿ, ಶರೀಫ ಬಿಳೆಯಲಿ, ಸುಜಾತಾ ವಾರದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಬಸವಾದಿ ಶರಣರ ತತ್ವ ಸಮಾನತೆಗಾಗಿ, ಅದನ್ನು ಹಿಂದೂತ್ವದ ರಾಜಕೀಯಕ್ಕೆ ಬಳಸುವುದು ಸರಿಯಲ್ಲ.”
ಬಸವರಾಜ ಸೂಳಿಬಾವಿ, ಬಂಡಾಯ ಸಾಹಿತಿ
ಮೇ 31ಕ್ಕೆ ಸಾಮೂಹಿಕ ವಚನ ಪಠಣ
ಮೇ 31ರಂದು ಬೆಳಿಗ್ಗೆ 11 ಗಂಟೆಗೆ ಗದಗದ ಗಾಂಧಿ ವೃತ್ತದಲ್ಲಿ ‘ಬಸವಾದಿ ಶರಣರ ಹಿಂದೂ ಸಮಾವೇಶ’ ವಿರೋಧಿಸಿ ಸಾಮೂಹಿಕ ವಚನ ಪಠಣ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಸೂಳಿಬಾವಿ ತಿಳಿಸಿದರು. ಮುಂದಿನ ದಿನಗಳಲ್ಲಿ ಅವಳಿ ನಗರದ ಪ್ರತಿ ವಾರ್ಡ್ ಹಾಗೂ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿ, ರಾಜ್ಯಮಟ್ಟದ ‘ಸಮಾನತಾ ಸಮಾವೇಶ’ ಆಯೋಜಿಸುವ ಚಿಂತನೆಯೂ ನಡೆದಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು.

ಅಂಬಾಭವಾನಿ ಸನ್ನಿಧಿಯಲ್ಲಿ 111 ಮುತ್ತೈದೆಯರ ಕುಂಕುಮಾರ್ಚನೆ ವೈಭವ!

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಮೂರು ವರ್ಷಕ್ಕೊಮ್ಮೆ ಬರುವ ಅಧಿಕ ಮಾಸದ ಪುಣ್ಯಪರ್ವದ ಅಂಗವಾಗಿ ಬೆಟಗೇರಿಯ ಐತಿಹಾಸಿಕ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ಮಂಗಳವಾರ ಭಕ್ತಿ, ಪರಂಪರೆ ಮತ್ತು ಆಧ್ಯಾತ್ಮಿಕತೆಯ ವೈಭವ ಮೆರೆದಿತು. ಎಸ್‌ಎಸ್‌ಕೆ ಸಮಾಜದ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ 111 ಮುತ್ತೈದೆಯರು ಭಾಗವಹಿಸಿ ದೇವಿ ಆರಾಧನೆ ನೆರವೇರಿಸಿದರು.
ಕೆಂಪು ಸೀರೆ ಧರಿಸಿದ ಮುತ್ತೈದೆಯರು ದೇವಿಯ ಸನ್ನಿಧಿಯಲ್ಲಿ ಸಾಲಾಗಿ ಕುಳಿತು ಭಕ್ತಿಭಾವದಿಂದ ಕುಂಕುಮಾರ್ಚನೆ ನೆರವೇರಿಸಿದ ದೃಶ್ಯ ದೇವಸ್ಥಾನ ಆವರಣಕ್ಕೆ ವಿಶೇಷ ಕಳೆ ತಂದಿತು. ಕೆಂಪು ಬಣ್ಣವನ್ನು ಶಕ್ತಿ, ಮಂಗಳ ಹಾಗೂ ಸೌಭಾಗ್ಯದ ಪ್ರತೀಕವೆಂದು ಪರಿಗಣಿಸಲಾಗಿದ್ದು, 111 ಸಂಖ್ಯೆಯನ್ನು ಶುಭ ಸಂಕೇತವಾಗಿ ಆಯ್ಕೆ ಮಾಡಲಾಗಿತ್ತು.
ದೇವಿಯ ಸಹಸ್ರ ಅಂಬಾಭವಾನಿ ನಾಮಾವಳಿ ಪಠಣದ ನಡುವೆ ಪ್ರತಿಯೊಂದು ನಾಮಕ್ಕೂ ಮಹಿಳೆಯರು ಕುಂಕುಮ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಧ್ಯಾತ್ಮಿಕ ವಾತಾವರಣ ಭಕ್ತರನ್ನು ಭಾವಪರವಶಗೊಳಿಸಿತು.
ಬೆಳಗ್ಗಿನಿಂದಲೇ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ನೂರಾರು ಮಂದಿ ಈ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾದರು. ಊರಿನ ಸುಖ-ಶಾಂತಿ, ಉತ್ತಮ ಮಳೆ-ಬೆಳೆ ಹಾಗೂ ಜನರ ಸಂಕಲ್ಪ ಸಿದ್ಧಿಯಾಗಲಿ ಎಂಬ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ನೆರವೇರಿತು.

ಜನಸೇವೆಗೆ ಡಾಕ್ಟರೇಟ್ ಗೌರವ!

ಗದಗ: ಸಮಾಜ ಸೇವೆ, ಜನಪರ ಆಡಳಿತ ಹಾಗೂ ಗ್ರಾಮೀಣ ಅಭಿವೃದ್ಧಿಯ ಮೂಲಕ ಜನಮನ ಗೆದ್ದಿರುವ ಗದಗ ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)  ಅಮೀರ ನಾಯಕರಿಗೆ ಬೆಂಗಳೂರಿನ ಪ್ರತಿಷ್ಠಿತ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರಲ್ ಅಕಾಡೆಮಿ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಅವರಿಗೆ ಈ ಗೌರವ ನೀಡಿ ಸನ್ಮಾನಿಸಲಾಯಿತು. ಗ್ರಾಮೀಣ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಜನಪರ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅಮೀರ ನಾಯಕ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ವಿಶಿಷ್ಟ ಗುರುತಿಸಿಕೊಂಡಿದ್ದಾರೆ.
ಅಧಿಕಾರವೆಂದರೆ ಕೇವಲ ಕಚೇರಿಯ ಗಡಿಗಳೊಳಗಿನ ವ್ಯವಸ್ಥೆಯಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಸೇವಾ ಧರ್ಮ ಎಂಬ ನಂಬಿಕೆಯನ್ನು ಅಮೀರ ನಾಯಕರು ತಮ್ಮ ಕಾರ್ಯಶೈಲಿಯಲ್ಲಿ ಅಳವಡಿಸಿಕೊಂಡಿದ್ದಾರೆ.
ಲಕ್ಕುಂಡಿ ಗ್ರಾಮ ಪಂಚಾಯಿತಿಯಲ್ಲಿ ಅವರ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸಮಸ್ಯೆಗಳ ತ್ವರಿತ ಪರಿಹಾರ ಹಾಗೂ ಸಮಾಜಮುಖಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.
ಅಕಾಡೆಮಿಯ ಪದಾಧಿಕಾರಿಗಳು ಮಾತನಾಡಿ, “ಗ್ರಾಮೀಣ ಜನರ ಬದುಕಿಗೆ ಹತ್ತಿರವಾಗಿ ಕೆಲಸ ಮಾಡಿದ ಅಮೀರ ನಾಯಕರ ಸೇವಾ ಪಯಣಕ್ಕೆ ಈ ಗೌರವ ಡಾಕ್ಟರೇಟ್ ಮಹತ್ವದ ಮಾನ್ಯತೆ,” ಎಂದು ಅಭಿಪ್ರಾಯಪಟ್ಟರು.
ಆಡಳಿತ ಕ್ಷೇತ್ರದ ಜೊತೆಗೆ ಸಾಹಿತ್ಯ, ಸಾಮಾಜಿಕ ಜಾಗೃತಿ ಹಾಗೂ ಮಾನವೀಯ ಮೌಲ್ಯಗಳ ಪ್ರಚಾರದಲ್ಲಿಯೂ ಅಮೀರ ನಾಯಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಬಡವರು, ಹಿಂದುಳಿದವರು ಹಾಗೂ ಸಂಕಷ್ಟದಲ್ಲಿರುವ ಜನರ ಪರ ಸದಾ ಸ್ಪಂದಿಸುವ ಅವರ ಸೇವಾ ಮನೋಭಾವ ಅನೇಕರಿಗೆ ಪ್ರೇರಣೆಯಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಗದಗ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಮಾತನಾಡಿ, “ಗ್ರಾಮೀಣ ಭಾರತದ ನಿಜವಾದ ಶಕ್ತಿ ಜನಪರ ಅಧಿಕಾರಿಗಳಲ್ಲಿದೆ. ಅಮೀರ ನಾಯಕರಿಗೆ ದೊರೆತಿರುವ ಗೌರವ ಡಾಕ್ಟರೇಟ್ ಗ್ರಾಮೀಣ ಸೇವಾ ಕ್ಷೇತ್ರಕ್ಕೇ ಸಂದ ಗೌರವ,” ಎಂದು ಹೇಳಿದರು.
ಸಮಾರಂಭದಲ್ಲಿ ಹಿರಿಯ ಸಾಹಿತಿ ಎ.ಎಸ್. ಮಕಾನದಾರ, ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ರಾಜು ಕಂಟಿಗೊಣ್ಣವರ, ರಾಜ್ಯ ಸಂಘದ ಕ್ರೀಡಾ ಕಾರ್ಯದರ್ಶಿ ಐ.ಎ. ಗಾಡಗೋಳಿ, ಜಿಲ್ಲಾ ಸಂಘದ ಕಾರ್ಯದರ್ಶಿ ಎಂ.ವೈ. ಮಲಕಶೆಟ್ಟಿ, ಸಮಾಜ ಸೇವಕ ಕರೀಮಸಾಬ ಸುಣಗಾರ, ಎಸ್.ಎಸ್. ಪಾರ್ವತಿಮಠ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಅಮೀರ ನಾಯಕರ ಸಾಧನೆಗೆ ಗದಗ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು, ಸಾಹಿತ್ಯ ವಲಯದ ಗಣ್ಯರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.
“ಈ ಗೌರವ ನನ್ನೊಬ್ಬರದ್ದಲ್ಲ; ಗ್ರಾಮಸ್ಥರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಕುಟುಂಬದವರ ಬೆಂಬಲದ ಫಲ ಇದು. ಜನರ ನೋವಿಗೆ ಸ್ಪಂದಿಸುವ ಆಡಳಿತವೇ ನಿಜವಾದ ಸೇವೆ. ಈ ಸನ್ಮಾನ ಇನ್ನಷ್ಟು ಜನಪರ ಸೇವೆ ಮಾಡಲು ಹೊಸ ಪ್ರೇರಣೆ ನೀಡಿದೆ.”
ಅಮೀರ ನಾಯಕ, ಪಿಡಿಒ

ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!? ಗುರುವಾರವೇ ಅಧಿಕಾರ ತೊರೆಯಲಿದ್ದಾರೆ ಸಿಎಂ? ಮುಂದಿನ ಮುಖ್ಯಮಂತ್ರಿ ಡಿಕೆಶಿ!?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಸಸ್ಪೆನ್ಸ್ ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ದೆಹಲಿಯಲ್ಲಿ ನಡೆದ ಸುದೀರ್ಘ ಹೈಕಮಾಂಡ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸಾಧ್ಯತೆ ವ್ಯಕ್ತವಾಗಿದೆ.

ಮೂಲಗಳ ಪ್ರಕಾರ, ಸುಮಾರು 6 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯತ್ವ ಹಾಗೂ ರಾಷ್ಟ್ರ ರಾಜಕಾರಣಕ್ಕೆ ತೆರಳುವಂತೆ ಹೈಕಮಾಂಡ್ ಆಫರ್ ನೀಡಿದೆ ಎನ್ನಲಾಗಿದೆ. ಆದರೆ ಈ ಪ್ರಸ್ತಾವಕ್ಕೆ ಅವರು ತಕ್ಷಣ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಬೆಂಗಳೂರಿಗೆ ವಾಪಸಾದ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಜಾರ್ಜ್ ನಿವಾಸದಲ್ಲಿ ರಹಸ್ಯ ಚರ್ಚೆ ನಡೆಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಈ ವೇಳೆ ಸಿಎಂ ಸ್ಥಾನದಿಂದ ರಾಜೀನಾಮೆ ನೀಡುವ ಕುರಿತು ಚರ್ಚೆ ನಡೆದಿದ್ದು, ಆರಂಭದಲ್ಲಿ ಆಪ್ತರು ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದರೆಂದು ಮೂಲಗಳು ತಿಳಿಸಿವೆ. ನಿಮ್ಮ ಪರವಾಗಿ ಹೈಕಮಾಂಡ್ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಧಾರವನ್ನು ನೇರವಾಗಿ ನಿರಾಕರಿಸಲು ಸಾಧ್ಯವಿಲ್ಲ ಎಂಬ ನಿಲುವು ವ್ಯಕ್ತಪಡಿಸಿ, ಅಗತ್ಯವಿದ್ದರೆ ರಾಜೀನಾಮೆ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಧಿಕೃತ ಸ್ಪಷ್ಟೀಕರಣ ಬಂದಿಲ್ಲ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ! ಸಾವಿಗೆ ಸ್ನೇಹಿತನ ಕಿರುಕುಳ ಕಾರಣವಾಯ್ತಾ?

ಬೆಂಗಳೂರು: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿ (RJ) ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೃತರನ್ನು 49 ವರ್ಷದ ಮನೀಷಾ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮಾನ್ಯತಾ ಟೆಕ್ ಪಾರ್ಕ್ ಸಮೀಪದ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ಮನೀಷಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಮೇ 23ರಂದು ನಡೆದಿದ್ದು, ಸಂಬಂಧಿಕರು ಹಲವು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮನೀಷಾ ಅವರು ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, 2024ರಲ್ಲಿ ವಿಚ್ಛೇದನ ಪಡೆದ ನಂತರ ಇತ್ತೀಚೆಗೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಳೆದ ಏಪ್ರಿಲ್ ತಿಂಗಳಲ್ಲಿ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬ ವ್ಯಕ್ತಿಯ ಮಾನಸಿಕ ಕಿರುಕುಳವೇ ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಬಂಧದಲ್ಲಿದ್ದಾಗ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವೂ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ.

ಈ ಸಂಬಂಧ ಅಮೃತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್‌ನೋಟ್ ಮತ್ತು ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 108 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಕೊಹ್ಲಿ ಜೊತೆಗಿನ ವೈರಲ್ ರೀಲ್ಸ್ ಡಿಲೀಟ್ ಮಾಡಿದ ಅರ್ಷದೀಪ್ ಸಿಂಗ್!

ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ನಂತರ, ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ 200ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಅರ್ಷದೀಪ್ ತಮ್ಮ ಖಾತೆಯಿಂದ ಹಲವು ಹಳೆಯ ಫೋಟೋಗಳು ಹಾಗೂ ರೀಲ್ಸ್‌ಗಳನ್ನು ತೆಗೆದುಹಾಕಿದ್ದು, ವಿರಾಟ್ ಕೊಹ್ಲಿ ಜೊತೆಗಿನ ವೈರಲ್ ರೀಲ್ಸ್ ಕೂಡ ಡಿಲೀಟ್ ಆಗಿದೆ. ಆ ರೀಲ್ಸ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಹಂಚಲಾಗಿದ್ದು, ಸುಮಾರು 1.5 ಕೋಟಿ ವೀಕ್ಷಣೆ ಪಡೆದಿತ್ತು.

ಐಪಿಎಲ್ 2026ರಲ್ಲಿ ಅರ್ಷದೀಪ್ ಸಿಂಗ್ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ ಎಂದು ಹೇಳಲಾಗುತ್ತಿದ್ದು, 14 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಪಡೆದಿದ್ದಾರೆ ಎಂಬ ಅಂಕಿಅಂಶಗಳು ವರದಿಯಾಗಿವೆ.

ಸದ್ಯ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕೇವಲ 44 ಪೋಸ್ಟ್‌ಗಳು ಮಾತ್ರ ಉಳಿದಿವೆ. ಈ ಹಠಾತ್ ಬದಲಾವಣೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ಕಾರಣವೇ ಅಥವಾ ಸೋಶಿಯಲ್ ಮೀಡಿಯಾ ರೀಸೆಟ್ ಆಗಿರಬಹುದೆಂಬ ಊಹೆಗಳು ಮಾತ್ರ ಹರಿದಾಡುತ್ತಿವೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಅರ್ಷದೀಪ್ ಸಿಂಗ್ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಬೆಂಗಳೂರಿನಲ್ಲಿ ಮಳೆ ಅಬ್ಬರ: ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ವೇಳೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ನಗರ ಜೀವನ ಅಸ್ತವ್ಯಸ್ತಗೊಂಡಿದೆ.

ಹಲವೆಡೆ ಅವಾಂತರಗಳು ಸಂಭವಿಸಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ಅನುಭವಿಸಿದ್ದಾರೆ.

ಮರದ ಕೊಂಬೆ ಹಳಿ ಮೇಲೆ ಬಿದ್ದ ಪರಿಣಾಮ ಐಟಿಪಿಎಲ್–ಸತ್ಯಸಾಯಿ ಆಸ್ಪತ್ರೆ ಮಾರ್ಗದ ನೇರಳೆ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ವೈಟ್‌ಫೀಲ್ಡ್–ಗರುಡಾಚಾರಪಾಳ್ಯ ನಡುವಿನ ಸೇವೆ ಸಂಜೆ 6 ಗಂಟೆಯಿಂದ ಬಂದ್ ಆಗಿದ್ದು, ಪ್ರಸ್ತುತ ಗರುಡಾಚಾರಪಾಳ್ಯ–ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ಸಂಚಾರ ಲಭ್ಯವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮನೆಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.

ಸ್ಥಗಿತಗೊಂಡ ಸೇವೆ ಪುನಃ ಆರಂಭಿಸಲು ಬಿಎಂಆರ್‌ಸಿಎಲ್ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಸೇವೆ ಪುನರಾರಂಭವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಇದೇ ವೇಳೆ ನಗರದೆಲ್ಲೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ.ನಗರ, ವಸಂತನಗರ, ಕೆ.ಆರ್.ಮಾರ್ಕೆಟ್, ಬನಶಂಕರಿ, ಯಲಹಂಕ, ಹೆಬ್ಬಾಳ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಅನ್ನು ಪೊಲೀಸರು ತಾತ್ಕಾಲಿಕವಾಗಿ ಬಂದ್ ಮಾಡಿದ್ದಾರೆ. ಸಾಮಾನ್ಯ ಮಳೆಗೆ ಸಹ ಜಲಾವೃತವಾಗುವ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧಿಸಲಾಗಿದೆ.

ನಗರದ ಹಲವೆಡೆ ಮಳೆ ಮುಂದುವರಿಯುತ್ತಿರುವುದರಿಂದ ಜನಜೀವನ ಇನ್ನೂ ಕೆಲಕಾಲ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.

error: Content is protected !!