ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಬಹಿರಂಗವಾಗಿದ್ದ ಸಚಿವ ಎಂ.ಬಿ. ಪಾಟೀಲ್ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ನಡುವಿನ ಅಸಮಾಧಾನ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವ ಎಂ.ಬಿ. ಪಾಟೀಲ್ ಆಗಮಿಸಿದ ವೇಳೆ ಶಾಸಕ ಯಶವಂತರಾಯಗೌಡ ಪಾಟೀಲ್ ಗೈರಾಗಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ನೂತನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಬರ ವೀಕ್ಷಣೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಇಂಡಿ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದರು. ಆದರೆ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಸಚಿವ ಸ್ಥಾನ ಕೈತಪ್ಪಿದ ಬಳಿಕ ಎಂ.ಬಿ. ಪಾಟೀಲ್ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಯಶವಂತರಾಯಗೌಡ ಪಾಟೀಲ್, ತಮ್ಮ ರಾಜೀನಾಮೆಯನ್ನೂ ಸಲ್ಲಿಸಿದ್ದರು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ನ ಹಲವು ನಾಯಕರು ಮಧ್ಯಪ್ರವೇಶಿಸಿ ಅವರನ್ನು ಮನವೊಲಿಸಿದ್ದರು.
ರಾಜ್ಯ ಮಟ್ಟದಲ್ಲಿ ಅಸಮಾಧಾನ ಶಮನವಾದಂತೆ ಕಂಡುಬಂದಿದ್ದರೂ, ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ನಾಯಕರ ನಡುವಿನ ಮುನಿಸು ಮುಂದುವರಿದಿರುವುದು ಇದೀಗ ಬರ ವೀಕ್ಷಣೆ ವೇಳೆ ಮತ್ತೆ ಬಹಿರಂಗವಾಗಿದೆ.
ಮೊದಲ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಯಿಂದ ಎಂ.ಬಿ. ಪಾಟೀಲ್ ಅವರಿಗೆ ಮಾತ್ರ ಸಚಿವ ಸ್ಥಾನ ದೊರೆತಿತ್ತು. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದರು. ಆದರೆ ಇಬ್ಬರಿಗೂ ಸಚಿವ ಸ್ಥಾನ ಸಿಗಲಿಲ್ಲ.
ಸಚಿವ ಸ್ಥಾನ ಕೈತಪ್ಪಲು ಎಂ.ಬಿ. ಪಾಟೀಲ್ ಅವರೇ ಕಾರಣ ಎಂದು ಯಶವಂತರಾಯಗೌಡ ಪಾಟೀಲ್ ಈ ಹಿಂದೆ ಬಹಿರಂಗವಾಗಿ ಆರೋಪಿಸಿದ್ದರು. ಇದೀಗ ಬರ ವೀಕ್ಷಣೆಯ ಕಾರ್ಯಕ್ರಮದಿಂದ ದೂರ ಉಳಿದಿರುವುದು ಜಿಲ್ಲೆಯ ಕಾಂಗ್ರೆಸ್ ರಾಜಕೀಯದಲ್ಲಿ ಅಸಮಾಧಾನ ಇನ್ನೂ ಸಂಪೂರ್ಣವಾಗಿ ಶಮನವಾಗಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ.
ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಇಬ್ಬರು ಪ್ರಮುಖ ನಾಯಕರ ನಡುವಿನ ಈ ಭಿನ್ನಾಭಿಪ್ರಾಯ ಕಾಂಗ್ರೆಸ್ ಸಂಘಟನೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.



