Home Blog

ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೀರಾ? ಮೂರ್ತಿ ಆಯ್ಕೆಯಿಂದ ಪೂಜಾ ವಿಧಿವರೆಗೆ ಈ ನಿಯಮ ಗಮನಿಸಿ

0

ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿಸರ್ಜನೆ ಮಾಡುವುದು ವಾಡಿಕೆ.

ಆದರೆ ಮನೆಗೆ ಗಣೇಶನ ಮೂರ್ತಿಯನ್ನು ತರುವಾಗ ವಿಗ್ರಹದ ಸೊಂಡಿಲಿನ ದಿಕ್ಕು, ಭಂಗಿ, ಬಣ್ಣ ಹಾಗೂ ಗಾತ್ರ ಸೇರಿದಂತೆ ಕೆಲವು ವಿಚಾರಗಳನ್ನು ಗಮನಿಸಬೇಕು ಎಂದು ವಾಸ್ತು ಮತ್ತು ಧಾರ್ಮಿಕ ನಂಬಿಕೆಗಳು ಹೇಳುತ್ತವೆ.

ಮನೆಗೆ ಗಣೇಶನ ಮೂರ್ತಿ ತರುವಾಗ ಸಾಮಾನ್ಯವಾಗಿ ಎಡಕ್ಕೆ ತಿರುಗಿರುವ ಸೊಂಡಿಲಿನ ವಿಗ್ರಹವನ್ನು ಆಯ್ಕೆ ಮಾಡುವುದು ಶುಭಕರ ಎಂದು ಪರಿಗಣಿಸಲಾಗುತ್ತದೆ. ಇಂತಹ ಮೂರ್ತಿ ಮನೆಗೆ ಸಂತೋಷ, ಸಮೃದ್ಧಿ ಹಾಗೂ ಶಾಂತಿ ತರುತ್ತದೆ ಎಂಬ ನಂಬಿಕೆ ಇದೆ. ಬಲಕ್ಕೆ ತಿರುಗಿರುವ ಸೊಂಡಿಲಿನ ಮೂರ್ತಿಗಳಿಗೆ ವಿಶೇಷ ಪೂಜಾ ವಿಧಿವಿಧಾನಗಳ ಅಗತ್ಯವಿರುವುದರಿಂದ ಅವುಗಳನ್ನು ಮನೆಗಳಲ್ಲಿ ಪ್ರತಿಷ್ಠಾಪಿಸುವುದು ಸಾಮಾನ್ಯವಲ್ಲ ಎನ್ನಲಾಗುತ್ತದೆ.

ಇನ್ನು ಗಣೇಶನ ಮೂರ್ತಿಯ ಭಂಗಿಯೂ ಮುಖ್ಯವಾಗಿದ್ದು, ಕುಳಿತಿರುವ ಭಂಗಿಯಲ್ಲಿರುವ ವಿಗ್ರಹವನ್ನು ಮನೆಗೆ ತರುವುದು ಶುಭಕರ ಎಂದು ನಂಬಲಾಗಿದೆ. ಇದು ಸ್ಥಿರತೆ ಮತ್ತು ಅಭಿವೃದ್ಧಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ.

ಮೂರ್ತಿಯ ಬಣ್ಣದ ವಿಚಾರದಲ್ಲೂ ಕೆಲವು ನಿಯಮಗಳಿವೆ ಎನ್ನಲಾಗುತ್ತದೆ. ಕೇಸರಿ, ಬಿಳಿ ಹಾಗೂ ಹಳದಿ ಬಣ್ಣದ ಗಣೇಶನ ಮೂರ್ತಿಗಳನ್ನು ಶ್ರೇಷ್ಠವೆಂದು ಪರಿಗಣಿಸಲಾಗುತ್ತದೆ. ಕಪ್ಪು ಬಣ್ಣದ ವಿಗ್ರಹವನ್ನು ಮನೆಯಲ್ಲಿ ಪ್ರತಿಷ್ಠಾಪಿಸಬಾರದು ಎಂಬ ನಂಬಿಕೆಯೂ ಇದೆ.

ಮೂರ್ತಿಯಲ್ಲಿ ನಾಲ್ಕು ಕೈಗಳು ಹಾಗೂ ಗಣೇಶನ ವಾಹನವಾದ ಮೂಷಕ ಇರಬೇಕು ಎಂದು ಹೇಳಲಾಗುತ್ತದೆ. ಏಕದಂತ ರೂಪದ ಗಣೇಶನ ಮೂರ್ತಿಯಲ್ಲಿ ಬಲ ದಂತ ಪೂರ್ಣವಾಗಿದ್ದು, ಎಡ ದಂತ ಸ್ವಲ್ಪ ಮುರಿದಿರುವಂತೆ ಇರಬೇಕು ಎಂಬುದು ಮತ್ತೊಂದು ನಂಬಿಕೆ.

ಮನೆಯ ಗಣೇಶ ಪೂಜೆಗೆ ಜೇಡಿಮಣ್ಣು, ಹಿತ್ತಾಳೆ, ತಾಮ್ರ, ಬೆಳ್ಳಿ ಅಥವಾ ಬಿಳಿ ಅಮೃತಶಿಲೆಯಿಂದ ತಯಾರಿಸಿದ ಮೂರ್ತಿಗಳನ್ನು ಆಯ್ಕೆ ಮಾಡಬಹುದು ಎಂದು ಹೇಳಲಾಗುತ್ತದೆ. ಮೂರ್ತಿಯನ್ನು ಖರೀದಿಸುವಾಗ ಯಾವುದೇ ಬಿರುಕು ಅಥವಾ ಹಾನಿ ಇಲ್ಲದಿರುವುದನ್ನು ಪರಿಶೀಲಿಸುವುದು ಮುಖ್ಯ.

ಇನ್ನು ಮನೆಯ ಪೂಜಾ ಸ್ಥಳದ ಗಾತ್ರಕ್ಕೆ ಅನುಗುಣವಾಗಿ ಸಣ್ಣ ಅಥವಾ ಮಧ್ಯಮ ಗಾತ್ರದ ಮೂರ್ತಿಯನ್ನು ಆಯ್ಕೆ ಮಾಡುವುದು ಸೂಕ್ತ ಎಂದು ವಾಸ್ತು ನಂಬಿಕೆಗಳು ಹೇಳುತ್ತವೆ. ಮನೆಯ ಈಶಾನ್ಯ ಮೂಲೆಯಲ್ಲಿ ಅಥವಾ ಪೂರ್ವ ದಿಕ್ಕಿನಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸುವುದು ಶುಭಕರ ಎಂದು ಪರಿಗಣಿಸಲಾಗುತ್ತದೆ.

ಪೂಜೆಯ ದಿನ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ಶುಚಿಯಾದ ಬಟ್ಟೆ ಧರಿಸಿ, ಮರದ ಪೀಠದ ಮೇಲೆ ಕೆಂಪು ಅಥವಾ ಹಳದಿ ಬಟ್ಟೆಯನ್ನು ಹಾಸಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದು. ಬಳಿಕ ಕಲಶ ಸ್ಥಾಪನೆ ಮಾಡಿ, ಗಣೇಶನಿಗೆ ಪ್ರಿಯವಾದ ಹೂವು, ಹಣ್ಣು, ಮೋದಕ ಅಥವಾ ಲಡ್ಡುಗಳನ್ನು ನೈವೇದ್ಯವಾಗಿ ಅರ್ಪಿಸಿ ಆರತಿ ಮಾಡಲಾಗುತ್ತದೆ.

ಇವೆಲ್ಲವೂ ಧಾರ್ಮಿಕ ಹಾಗೂ ವಾಸ್ತು ನಂಬಿಕೆಗಳನ್ನು ಆಧರಿಸಿದ ಆಚರಣೆಗಳಾಗಿದ್ದು, ಪ್ರದೇಶ ಮತ್ತು ಸಂಪ್ರದಾಯಕ್ಕೆ ಅನುಗುಣವಾಗಿ ವಿಧಿವಿಧಾನಗಳು ಬದಲಾಗಬಹುದು.

ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಜಗಳ; ಕತ್ತಿಯಿಂದ ಇರಿದು ವ್ಯಕ್ತಿ ಕೊಲೆ

0

ಹಾಸನ: ಹಣದ ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.

ಜಗಳದ ವೇಳೆ ಕತ್ತಿಯಿಂದ ಇರಿತಕ್ಕೊಳಗಾದ ಮಹಮದ್ ಸಿದ್ದಿಕ್ (33) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜೀತ್ (29) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಒಂದು ವರ್ಷದ ಹಿಂದೆ ದಿವ್ಯಾ ಅವರಿಗೆ ಅವರ ಅಕ್ಕ ರೇಷ್ಮಾ ₹50 ಸಾವಿರ ಸಾಲ ನೀಡಿದ್ದರು ಎನ್ನಲಾಗಿದೆ. ಹಣವನ್ನು ವಾಪಸ್ ನೀಡುವಂತೆ ರೇಷ್ಮಾ, ತಂಗಿ ದಿವ್ಯಾ ಅವರನ್ನು ಕೇಳಿದ್ದರು. ಇದೇ ವಿಚಾರವಾಗಿ ರೇಷ್ಮಾ ಪತಿ ಮಹಮದ್ ಸಿದ್ದಿಕ್ ಹಾಗೂ ದಿವ್ಯಾ ಪತಿ ಸುಜೀತ್ ನಡುವೆ ಜಗಳ ಶುರುವಾಗಿದೆ.

ಜಗಳ ತಾರಕಕ್ಕೇರಿದ ವೇಳೆ ಸುಜೀತ್ ತನ್ನ ಬಳಿಯಿದ್ದ ಕತ್ತಿಯಿಂದ ಮಹಮದ್ ಸಿದ್ದಿಕ್‌ಗೆ ಹಲವು ಬಾರಿ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಿಕ್ ಅವರನ್ನು ಅರೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸಿದ್ದಿಕ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆ ಮಾಹಿತಿ ತಿಳಿದು ಅರೇಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ದರ್ಶನ್ ಫಾರ್ಮ್‌ಹೌಸ್‌ನ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ!

0

ಬೆಂಗಳೂರು: ನಟ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕುಟುಂಬ ಇದೀಗ ಹೈಕೋರ್ಟ್‌ ಮೊರೆ ಹೋಗಿದೆ.

ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಟಿ. ನರಸೀಪುರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ವಿಜಯಲಕ್ಷ್ಮಿ ಹಾಗೂ ನಾಗರಾಜ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಇದನ್ನು ಪ್ರಶ್ನಿಸಿ ದರ್ಶನ್, ವಿಜಯಲಕ್ಷ್ಮಿ ಹಾಗೂ ನಾಗರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳನ್ನು ತಾವು ಸಾಕಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದಲ್ಲಿ ತಮ್ಮ ವಿರುದ್ಧ ಯಾವುದೇ ಆಧಾರವಿಲ್ಲ ಎಂದು ವಾದಿಸಿರುವ ಅರ್ಜಿದಾರರು, ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ FIR: ಇಲ್ಲಿದೆ ಕೇಸಿನ ಸಂಪೂರ್ಣ ವಿವರ

0

ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮುನಿರತ್ನ ಸೇರಿದಂತೆ ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ, ಲಕ್ಷ್ಮೀ ಜಯರಾಮ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಅಯ್ಯಣ್ಣ ರೆಡ್ಡಿ, ಬಿ.ಎನ್. ಲೋಹಿತ್ ಮತ್ತು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಚಂದ್ರಶೇಖರ್ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (SIT) ವರ್ಗಾವಣೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಪ್ರಕರಣದ ದಾಖಲೆಗಳನ್ನು SITಗೆ ಹಸ್ತಾಂತರಿಸಿದ್ದಾರೆ.

ದೂರಿನಲ್ಲಿ ಏನಿದೆ?

2018ರ ಜುಲೈನಲ್ಲಿ ಫೇಸ್‌ಬುಕ್ ಮೂಲಕ ರವಿಶಂಕರ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು ಎಂದು ದೂರುದಾರೆ ತಿಳಿಸಿದ್ದಾರೆ. 2019ರಲ್ಲಿ ಧಾರವಾಡದಲ್ಲಿ ರವಿಶಂಕರ್ ತಮ್ಮನ್ನು ಸರ್ಕಾರಿ ವಸತಿಗೃಹಕ್ಕೆ ಕರೆದೊಯ್ದು ಸುಮಾರು ಮೂರು ದಿನಗಳ ಕಾಲ ಅಲ್ಲಿಯೇ ಇರಿಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ 2021ರ ಅಕ್ಟೋಬರ್ 6ರಂದು ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ರವಿಶಂಕರ್ ವಿರುದ್ಧ ಅತ್ಯಾಚಾರ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ಬಳಿಕ ಪ್ರಕರಣವನ್ನು ಧಾರವಾಡಕ್ಕೆ ವರ್ಗಾಯಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂದೆ ಹನಿಟ್ರ್ಯಾಪ್ ಮಾಡಲು ಸಂಚು ರೂಪಿಸಿ ಕೆಲವರು ತಮ್ಮನ್ನು ಪರಿಚಯಿಸಿಕೊಂಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. 2021ರ ಆಗಸ್ಟ್ 12ರಂದು ಕಗ್ಗಲಿಪುರದ ರೆಸಾರ್ಟ್‌ಗೆ ಕೆಲವರು ಪೊಲೀಸರನ್ನು ಕರೆದುಕೊಂಡು ಹೋಗಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಅದೇ ವರ್ಷ ಸೆಪ್ಟೆಂಬರ್ 1ರಂದು ಹಾಗೂ ಮತ್ತೊಮ್ಮೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ರೆಸಾರ್ಟ್‌ಗೆ ಪೊಲೀಸರನ್ನು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಕಿರಣ್ ನಾಯ್ಡು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದರು ಹಾಗೂ ಇತರರು ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಮನೆ ಶೋಧ, ಬಂಧನದ ಆರೋಪ:

2021ರ ಅಕ್ಟೋಬರ್‌ನಲ್ಲಿ ರೋಹಿತ್ ಗೌಡ ಅಲಿಯಾಸ್ ಲೋಕೇಶ್ ಅವರು ತಮ್ಮ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಮಹಿಳೆ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 11ರಂದು ತಮ್ಮ ಮನೆಯ ಶೋಧ ನಡೆಸಿ ಲ್ಯಾಪ್‌ಟಾಪ್, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಹಾರ್ಡ್‌ಡಿಸ್ಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ತಮ್ಮನ್ನು ಬಂಧಿಸಿ ಅಕ್ಟೋಬರ್ 11ರಿಂದ 13ರವರೆಗೆ ಎರಡು ದಿನಗಳ ಕಾಲ ಪೊಲೀಸ್ ವಶದಲ್ಲಿರಿಸಲಾಗಿತ್ತು. ಅಕ್ಟೋಬರ್ 13ರಂದು ಜೈಲಿಗೆ ಕಳುಹಿಸಲಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಬಳಿಕ ಮುನಿರತ್ನ ಅವರು ತಮ್ಮನ್ನು ಹಾಗೂ ತಮ್ಮ ಸಹೋದರಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ, ಈ ಹಿಂದೆ ದಾಖಲಿಸಿದ್ದ ಪ್ರಕರಣವನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಎಲ್ಲಾ ಆರೋಪಗಳ ಕುರಿತು ಇದೀಗ SIT ತನಿಖೆ ನಡೆಸಲಿದ್ದು, ತನಿಖೆಯ ಬಳಿಕ ಪ್ರಕರಣದ ಸಂಪೂರ್ಣ ವಾಸ್ತವಾಂಶ ಹೊರಬರಬೇಕಿದೆ.

CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಮತದಾರರ ಪಟ್ಟಿಯಲ್ಲಿನ ಹೆಸರು ವ್ಯತ್ಯಾಸಕ್ಕೆ ಜಿಬಿಎ ಸ್ಪಷ್ಟನೆ

0

ಬೆಂಗಳೂರು: ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಪಷ್ಟಪಡಿಸಿದೆ.

2002ನೇ ಸಾಲಿನ ಮತದಾರರ ಪಟ್ಟಿಯಲ್ಲಿ ಪ್ರೊ. ಸಿಎನ್‌ಆರ್ ರಾವ್ ಅವರು 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಆಗ ಅವರ ಹೆಸರು ‘ರಾಮ’ ಎಂದು ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಕ್ರಮ ಸಂಖ್ಯೆ 187ರಲ್ಲಿ ‘ಸಿಎನ್‌ಆರ್ ರಾವ್’ ಎಂಬ ಹೆಸರಿನೊಂದಿಗೆ ಅವರು ಮತದಾರರಾಗಿ ನೋಂದಾಯಿತರಾಗಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಹಳೆಯ ಹಾಗೂ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ವಿಷಯ ಗಮನಕ್ಕೆ ಬಂದಿದೆ.

ಆದರೆ ಈ ವಿಚಾರದಲ್ಲಿ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಜಿಬಿಎ ತಿಳಿಸಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಗೊಳಿಸಲು ಶಿಫಾರಸು ಮಾಡಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಹೀಗಾಗಿ ಸಿಎನ್‌ಆರ್ ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ ಎಂಬ ವರದಿಗಳು ಸರಿಯಲ್ಲ ಎಂದು ಜಿಬಿಎ ಸ್ಪಷ್ಟನೆ ನೀಡಿದೆ.

ಸರಕಾರಿ ಪಿಯು ಕಾಲೇಜಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ರಾಜ್ಯದ ಅತ್ಯುತ್ತಮ ಕಾಲೇಜುಗಳ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಅದರಲ್ಲೂ 2025–26ನೇ ಶೈಕ್ಷಣಿಕ ಸಾಲಿನ ರಾಜ್ಯದ ಎಲ್ಲ ಸರಕಾರಿ ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಲಿಂಗ ನಗರ, ಗದಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿನ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬೆಳ್ಳಿ ಹಬ್ಬದ ಪೂರ್ವತಯಾರಿಗಾಗಿ ಪ್ರತಿ ಶನಿವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗುವುದು. ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿರುವ ಎಲ್ಲ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಬೆಳ್ಳಿ ಹಬ್ಬದ ಪೂರ್ವತಯಾರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ರಾಜ್ಯದ ಮಾದರಿ ಕಾಲೇಜಿನ 25 ವರ್ಷಗಳ ಶೈಕ್ಷಣಿಕ ಸಾಧನೆಯನ್ನು ಒಗ್ಗಟ್ಟಿನಿಂದ ಸಂಭ್ರಮಿಸೋಣ ಎಂದು ಅವರು ಹೇಳಿದರು.

ಸಭೆಯಲ್ಲಿ ವಿಶ್ರಾಂತ ಪ್ರಾಚಾರ್ಯ ಚಂದ್ರಶೇಖರ ವಸ್ತ್ರದ, ಪ್ರಾಚಾರ್ಯೆ ಪೂರ್ಣಿಮಾ ಹೊಸಮನಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸೋಣ. ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ಮಾಜಿ ಪ್ರಾಚಾರ್ಯರು, ಉಪನ್ಯಾಸಕರು ಎಲ್ಲರೂ ಕೈಜೋಡಿಸಬೇಕು.

— ಸಿದ್ಧಲಿಂಗೇಶ್ವರ ಪಾಟೀಲ, ಮಾಜಿ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ

ಮಂತ್ರಾಲಯದಲ್ಲಿ ಕಾಣಿಕೆ ಎಣಿಕೆ ಪೂರ್ಣ; 16 ದಿನದಲ್ಲೇ ₹3.30 ಕೋಟಿ ಸಂಗ್ರಹ!

0

ರಾಯಚೂರು: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್–ಸೆಪ್ಟೆಂಬರ್ ತಿಂಗಳ 16 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.

16 ದಿನಗಳಲ್ಲಿ ಒಟ್ಟು ₹3,30,69,139 ಕಾಣಿಕೆ ಸಂಗ್ರಹವಾಗಿದೆ. ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಕಾಣಿಕೆ ಪ್ರಮಾಣದಲ್ಲೂ ಏರಿಕೆಯಾಗಿದೆ.

ಒಟ್ಟು ಸಂಗ್ರಹದಲ್ಲಿ ₹3,20,66,639 ಮೌಲ್ಯದ ಕರೆನ್ಸಿ ನೋಟುಗಳು ಹಾಗೂ ₹10,02,500 ಮೌಲ್ಯದ ನಾಣ್ಯಗಳು ಸೇರಿವೆ. ಇದರ ಜೊತೆಗೆ ಭಕ್ತರು 47 ಗ್ರಾಂ ಚಿನ್ನ ಹಾಗೂ 632 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು.

ಹುಂಡಿ ಎಣಿಕೆ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಹುಉದ್ದೇಶದ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟರ್ಫ್ ಬೇಡ : ಕಾಮಗಾರಿ ಸ್ಥಗಿತಕ್ಕೆ ಕ್ರೀಡಾಪಟುಗಳ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪ್ರಮುಖ ಕ್ರೀಡಾ ತಾಣವಾಗಿರುವ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುತ್ತಿರುವ ಸಿಂಥೆಟಿಕ್ ಟರ್ಫ್ ಫುಟ್‌ಬಾಲ್ ಮೈದಾನ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಹಾಗೂ ಹಾಲಿ ಕ್ರೀಡಾಪಟುಗಳು ಹಾಗೂ ವಿವಿಧ ಕ್ರೀಡಾ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಜಿಲ್ಲಾ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಹುಉದ್ದೇಶದ ಕ್ರೀಡಾಂಗಣದಲ್ಲಿ ಟರ್ಫ್ ನಿರ್ಮಿಸುವುದರಿಂದ ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಲಭ್ಯವಿರುವ ಸ್ಥಳಾವಕಾಶ ಕಡಿಮೆಯಾಗಲಿದೆ. ಇಲ್ಲಿ ದಸರಾ ಕ್ರೀಡಾಕೂಟ, ಸರ್ಕಾರಿ ನೌಕರರ ಕ್ರೀಡಾಕೂಟ, ಶಾಲಾ-ಕಾಲೇಜುಗಳ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳು ನಡೆಯುತ್ತವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂತಹ ಸರ್ಕಾರಿ ಕಾರ್ಯಕ್ರಮಗಳಿಗೂ ಮೈದಾನ ಬಳಕೆಯಾಗುತ್ತಿದೆ. ಹೀಗಾಗಿ ಕಾಮಗಾರಿ ಸ್ಥಗಿತಗೊಳಿಸಿ, ಕ್ರೀಡಾ ಸಂಘಟನೆಗಳು, ತರಬೇತುದಾರರು, ಕ್ರೀಡಾಪಟುಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಟರ್ಫ್ ನಿರ್ಮಾಣವಾದರೆ ಶಾಟ್‌ಪುಟ್, ಡಿಸ್ಕಸ್ ಥ್ರೋ, ಜಾವೆಲಿನ್ ಥ್ರೋ, ಹ್ಯಾಮರ್ ಥ್ರೋ ಸೇರಿದಂತೆ ಅಥ್ಲೆಟಿಕ್ಸ್‌ನ ವಿವಿಧ ಎಸೆತ ವಿಭಾಗಗಳ ತರಬೇತಿ ಹಾಗೂ ಸ್ಪರ್ಧೆಗಳಿಗೆ ಸ್ಥಳಾವಕಾಶದ ಸಮಸ್ಯೆ ಎದುರಾಗಲಿದೆ. ಗ್ರಾಮೀಣ ಭಾಗದ ಕ್ರೀಡಾಪಟುಗಳು ಶಾಲಾ-ಕಾಲೇಜುಗಳ ಮೈದಾನಗಳನ್ನು ಅವಲಂಬಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಫುಟ್‌ಬಾಲ್ ಮೈದಾನ ನಿರ್ಮಾಣ ಅನಿವಾರ್ಯವಾಗಿದ್ದರೆ, ಸಿಂಥೆಟಿಕ್ ಟರ್ಫ್ ಬದಲಿಗೆ ನೈಸರ್ಗಿಕ ಹುಲ್ಲಿನ ಗ್ರಾಸ್ ಮೈದಾನ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದರು.

ಫುಟ್‌ಬಾಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಎಲ್ಲ ಕ್ರೀಡೆಗಳ ತರಬೇತಿ ಹಾಗೂ ಸ್ಪರ್ಧೆಗಳಿಗೆ ಬಳಕೆಯಾಗುತ್ತಿರುವ ಬಹುಉದ್ದೇಶದ ಜಿಲ್ಲಾ ಕ್ರೀಡಾಂಗಣವನ್ನು ಒಂದೇ ಕ್ರೀಡೆಗೆ ಸೀಮಿತಗೊಳಿಸುವುದು ಸರಿಯಲ್ಲ. ಟರ್ಫ್‌ನಿಂದ ಇತರ ಕ್ರೀಡೆಗಳಿಗೆ ಆಗುವ ತೊಂದರೆಯನ್ನು ಪರಿಗಣಿಸಿ, ಕಾಮಗಾರಿ ಸ್ಥಗಿತಗೊಳಿಸಿ ಸಮಗ್ರ ಯೋಜನೆ ರೂಪಿಸಬೇಕು.

— ರಾಜೂ ಖಾನಪ್ಪನವರ

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟರ್ಫ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಕ್ರೀಡಾ ಸಂಘಟನೆಗಳು ಹಾಗೂ ಕ್ರೀಡಾಪಟುಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ, ಎಲ್ಲ ಕ್ರೀಡೆಗಳಿಗೂ ತೊಂದರೆಯಾಗದಂತೆ ಸಮಗ್ರ ಕ್ರೀಡಾಂಗಣ ಯೋಜನೆ ರೂಪಿಸಬೇಕು.

— ಅರವಿಂದ ಹುಲ್ಲೂರ

ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿಯಿರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಕರೆ ನೀಡಿದರು.

ಗದಗ ನಗರದ ಜಿಲ್ಲಾ ನ್ಯಾಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ, ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಅಲ್ಲದೆ, ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಂಡ ಬಳಿಕ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದ ಪ್ರಕರಣ ಶಾಶ್ವತವಾಗಿ ಮುಕ್ತಾಯಗೊಳ್ಳುವುದರೊಂದಿಗೆ ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಬಹುದು ಮತ್ತು ಉಭಯ ಪಕ್ಷಗಾರರು ತಮ್ಮ ಹಿಂದಿನ ಬಾಂಧವ್ಯ ಉಳಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಒಟ್ಟು 22,229 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅವುಗಳಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಬಹುದಾದ 4,090 ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಿವಿಲ್ ದಾವೆಗಳು, ಜಮೀನು, ಮನೆ ಹಾಗೂ ನಿವೇಶನ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳಸಾಗಣೆ ಪ್ರಕರಣಗಳು, ಚೆಕ್‌ಬೌನ್ಸ್, ಮೋಟರ್ ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀಗೆ ಅರ್ಹವಾದ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಇದರಲ್ಲಿ ಸೇರಿವೆ.

ರಾಜಿಗಾಗಿ ಗುರುತಿಸಿರುವ ಪ್ರಕರಣಗಳ ಕುರಿತು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರಿಗೆ ಮುಂಚಿತವಾಗಿ ಮಾಹಿತಿ ನೀಡಿ, ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ಪ್ರಕರಣಗಳಿಗೆ ಸಂಬಂಧಿಸಿದ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೆ.19ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 3,647 ಚಾಲ್ತಿ ಪ್ರಕರಣಗಳು ಹಾಗೂ 75,808 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 79,455 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 11 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಉಪಸ್ಥಿತರಿದ್ದರು.

ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಂಡು ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಲು ಲೋಕ ಅದಾಲತ್ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

— ನಾಗವೇಣಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಸಿಗುತ್ತಿಲ್ಲ : ಎಚ್.ಕೆ. ಪಾಟೀಲ ಅಸಮಾಧಾನ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನಮಂಡಲದ ಉಭಯ ಸದನಗಳ ಕಲಾಪಗಳಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಮೀಸಲಾಗುತ್ತಿಲ್ಲ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಬುಧವಾರ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ ಹಾಗೂ ಉಪಸಭಾಪತಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ವಿಶ್ವವಿದ್ಯಾಲಯಗಳ ಸ್ಥಿತಿ ಶೋಚನೀಯವಾಗಿದ್ದು, ಸುಮಾರು ಶೇ.80ರಷ್ಟು ಹುದ್ದೆಗಳು ಖಾಲಿ ಇವೆ. ಮೂಲಸೌಕರ್ಯ ಹಾಗೂ ಕಟ್ಟಡಗಳು ಬಳಕೆಯಾಗದೆ ಪಾಳುಬಿದ್ದಿವೆ. ಇಂತಹ ಗಂಭೀರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ವಿಸ್ತೃತ ಚರ್ಚೆಯಾಗಬೇಕು ಎಂದರು.

ಉತ್ತರ ಕರ್ನಾಟಕದ ವಿಚಾರಗಳು ಕೇವಲ ಬೆಳಗಾವಿ ಅಧಿವೇಶನಕ್ಕೆ ಸೀಮಿತವಾಗಬಾರದು. ಬೆಳಗಾವಿ ಅಧಿವೇಶನದಲ್ಲಿ ಬೆಂಗಳೂರಿನ ಸಮಸ್ಯೆಗಳ ಬಗ್ಗೆಯೂ, ಬೆಂಗಳೂರಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆಯೂ ಚರ್ಚೆಯಾಗಬೇಕು. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರದೇಶವಾರು ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಸುವ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ತಾವು ಸಚಿವರಾಗಿದ್ದಾಗ ಉತ್ತರ ಕರ್ನಾಟಕದ ಹಿತದೃಷ್ಟಿಯಿಂದ ಅಂಗೀಕರಿಸಿದ್ದ ಎಂಟು ನಿರ್ಣಯಗಳು ದಿಕ್ಸೂಚಿಯಾಗಿವೆ. ಅವು ಯಾವ ಹಂತದಲ್ಲಿ ಅನುಷ್ಠಾನಗೊಂಡಿವೆ ಎಂಬುದನ್ನು ಪರಿಶೀಲಿಸಿ, ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಉಭಯ ಸದನಗಳ ಪೀಠಾಧ್ಯಕ್ಷರು ಮಾಡಬೇಕು ಎಂದರು.

‘ನಿರ್ಣಯಗಳು ಕಡತದಲ್ಲೇ ಉಳಿಯಬಾರದು’

ಸದನದಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನಗೊಳ್ಳಲು ಪೀಠಾಧ್ಯಕ್ಷರು ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಕ್ಷಾತೀತವಾಗಿರಬೇಕಾದರೂ ಜನರ ಪರವಾಗಿ ಮಾತನಾಡಲು ಯಾವುದೇ ನಿರ್ಬಂಧವಿಲ್ಲ ಎಂದು ಎಚ್.ಕೆ. ಪಾಟೀಲ ಹೇಳಿದರು.

ಸಭಾಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ಸರ್ಕಾರವನ್ನು ಎಚ್ಚರಿಸುವುದಾಗಿ ತಿಳಿಸಿದರು. ಬರ ಸಮೀಕ್ಷೆ ಬಳಿಕ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ತಾರತಮ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದರು.

ಸಭಾಪತಿ ಸಲೀಂ ಅಹ್ಮದ್, ಉಪಸಭಾಧ್ಯಕ್ಷೆ ಉಮಾಶ್ರೀ ಮಾತನಾಡಿದರು. ಜ.ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ಡಿ.ಆರ್. ಪಾಟೀಲ ಸ್ವಾಗತಿಸಿದರು.

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದಲ್ಲಿ ಶೇ.5ರಷ್ಟೂ ಸಮಯ ಸಿಗುತ್ತಿಲ್ಲ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರದೇಶವಾರು ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಸುವ ನಿಯಮ ರೂಪಿಸಬೇಕು. ಸದನದಲ್ಲಿ ಅಂಗೀಕರಿಸಿದ ನಿರ್ಣಯಗಳು ಕಡತದಲ್ಲೇ ಉಳಿಯದೆ ಅನುಷ್ಠಾನಗೊಳ್ಳುವಂತೆ ಪೀಠಾಧ್ಯಕ್ಷರು ಸರ್ಕಾರವನ್ನು ಎಚ್ಚರಿಸಬೇಕು.

— ಎಚ್.ಕೆ. ಪಾಟೀಲ, ಮಾಜಿ ಸಚಿವ

ನಾನು ಈ ಸಾಂವಿಧಾನಿಕ ಪೀಠದಲ್ಲಿ ಎಷ್ಟು ದಿನ ಇರುತ್ತೇನೆ ಎಂಬುದು ಗೊತ್ತಿಲ್ಲ. ಆದರೆ ಇರುವಷ್ಟು ದಿನ ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶಿಸ್ತು ಮತ್ತು ಒಗ್ಗಟ್ಟಿನಿಂದ ಮುನ್ನಡೆಯಬೇಕು.

— ಜಿ.ಎಸ್. ಪಾಟೀಲ, ಸಭಾಧ್ಯಕ್ಷರು