Home Blog

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70 ವರ್ಷದ ಆರೋಪಿಗೆ ಸ್ಥಳೀಯ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜೊತೆಗೆ ಆರೋಪಿಗೆ 5 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಭಾರತೀಯ ದಂಡ ಸಂಹಿತೆ (IPC) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಪೋಕ್ಸೋ (POCSO) ಕಾಯ್ದೆಯ ವಿವಿಧ ವಿಧಿಗಳ ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥನೆಂದು ನ್ಯಾಯಾಲಯ ಘೋಷಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

2023ರ ಮೇ 11ರಂದು ಬಾಲಕಿ ಹಾಲು ಖರೀದಿಸಲು ಸಮೀಪದ ಅಂಗಡಿಗೆ ತೆರಳಿದ್ದ ವೇಳೆ ಆರೋಪಿ ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಘಟನೆಯ ಬಳಿಕ ಅಳುತ್ತಾ ಮನೆಗೆ ಬಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಚಂದ್ರಾಯನಗುಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ನ್ಯಾಯವ್ಯಾಪ್ತಿಯ ಆಧಾರದ ಮೇಲೆ ಸಂತೋಷ್‌ನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಕೊಡಗು ಮೂಲಕ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಊಹಾಪೋಹಗಳಿಗೆ ಸಂಸದ ಯದುವೀರ್ ಸ್ಪಷ್ಟನೆ

ಮೈಸೂರು: ಕೊಡಗು ಜಿಲ್ಲೆಯ ಮೂಲಕ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರೈಲ್ವೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಹಾಗೂ ಸಂಪರ್ಕ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಕುರಿತು ಕೆಲವು ವರದಿಗಳು ಹಾಗೂ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದವು. ಆದರೆ ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ, ಇಂತಹ ಯಾವುದೇ ಯೋಜನೆ ಅಥವಾ ಪ್ರಸ್ತಾವನೆ ಪ್ರಸ್ತುತ ರೈಲ್ವೆ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಯದುವೀರ್ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಮೂಲಸೌಕರ್ಯ ಯೋಜನೆ ಕೈಗೊಳ್ಳುವ ಸಂದರ್ಭ ಬಂದರೆ, ಅದಕ್ಕೂ ಮೊದಲು ಎಲ್ಲಾ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಜೊತೆಗೆ ಜಿಲ್ಲೆಯ ಪರಿಸರ, ಭೌಗೋಳಿಕ ಪರಿಸ್ಥಿತಿ ಹಾಗೂ ಅಭಿವೃದ್ಧಿ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ಮಾತ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೊಡಗಿನ ಸಮತೋಲಿತ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಜಿಲ್ಲೆಯ ವಿಶಿಷ್ಟ ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯನ್ನೂ ಖಚಿತಪಡಿಸಿಕೊಳ್ಳಲಾಗುವುದು. ಉತ್ತಮ ಸಂಪರ್ಕ ವ್ಯವಸ್ಥೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ರೈಲ್ವೆ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಂಸದರು ಭರವಸೆ ನೀಡಿದ್ದಾರೆ.

ಊಹಾಪೋಹಗಳು ಮತ್ತು ಅಪೂರ್ಣ ಮಾಹಿತಿಗಳ ಆಧಾರದ ಮೇಲೆ ಹರಿದಾಡುತ್ತಿರುವ ವರದಿಗಳಿಂದ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು. ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಬೆಳವಣಿಗೆಗಳಿದ್ದರೆ, ಅವುಗಳನ್ನು ಪಾರದರ್ಶಕವಾಗಿ ಹಾಗೂ ಅಧಿಕೃತ ಮಾರ್ಗಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಬಡವರ ಅನ್ನಕ್ಕೆ ಕನ್ನ..! ರೋಣದಲ್ಲಿ ಆಹಾರ ಇಲಾಖೆಯ ಮಧ್ಯರಾತ್ರಿ ರೇಡ್ –ಪಿಡಿಎಸ್ ಅಕ್ಕಿ ಜಪ್ತಿ

ರೋಣ: ಬಡವರ ಹೊಟ್ಟೆ ತುಂಬಿಸಬೇಕಾದ ಸರ್ಕಾರದ ಪಡಿತರ ಅಕ್ಕಿಯನ್ನೇ ಹಣ ಮಾಡುವ ದಂಧೆಗೆ ಬಳಸಲು ಯತ್ನಿಸಿದ್ದ ಅಕ್ರಮ ಜಾಲವನ್ನು ರೋಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಭಾರಿ ಪ್ರಮಾಣದ ಪಿಡಿಎಸ್ ಅಕ್ಕಿ ಜಪ್ತಿಯಾಗಿದ್ದು, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಜೂನ್ 1ರಂದು ರಾತ್ರಿ ಆಹಾರ ನಿರೀಕ್ಷಕಿ ಸುವರ್ಣಾ ಮುಕ್ಕಣ್ಣ ಜಮ್ಮನಕಟ್ಟಿ ನೇತೃತ್ವದ ಅಧಿಕಾರಿಗಳ ತಂಡ ರೋಣ ಪಟ್ಟಣದ ಶಿವಾನಂದನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿತು. ದಾಳಿ ವೇಳೆ ಮನೆಯಲ್ಲಿ ರಾಶಿರಾಶಿಯಾಗಿ ಸಂಗ್ರಹಿಸಲಾಗಿದ್ದ 35 ಚೀಲಗಳಲ್ಲಿನ 14 ಕ್ವಿಂಟಲ್ 40 ಕೆಜಿ ಪಿಡಿಎಸ್ ಅಕ್ಕಿ ಪತ್ತೆಯಾಗಿ ಅಧಿಕಾರಿಗಳೇ ಬೆಚ್ಚಿಬಿದ್ದರು.

ಪರಿಶೀಲನೆ ನಡೆಸಿದಾಗ, ಜಪ್ತಿಯಾದ ಅಕ್ಕಿ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಅಕ್ಕಿಯೇ ಆಗಿರುವುದು ಬಹಿರಂಗವಾಗಿದೆ. ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಸಿದ್ಧತೆ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ದಾಳಿಯ ವೇಳೆ ಮನೆಯೊಳಗೆ ಅಕ್ಕಿ ಚೀಲಗಳು ಗುಡ್ಡದಂತೆ ರಾಶಿಯಾಗಿದ್ದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅಧಿಕಾರಿಗಳು ತಕ್ಷಣವೇ ಅಕ್ಕಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಜಪ್ತಿಯಾದ ಅಕ್ಕಿಯ ಮೌಲ್ಯ ಸುಮಾರು ₹31,500 ಎಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಮೆಹಬೂಬ್ ಭಾಷಾಸಾಬ್ ಮುಲ್ಲಾ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಬಡವರ ಪಾಲಿನ ಅನ್ನಕ್ಕೆ ಕನ್ನ ಹಾಕಿದ ಆರೋಪ ಎದುರಿಸುತ್ತಿದ್ದಾನೆ. ಆಹಾರ ಇಲಾಖೆ ನೀಡಿದ ದೂರಿನ ಮೇರೆಗೆ ರೋಣ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 99/2026 ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಕಲಂ 3 ಮತ್ತು 7 ಹಾಗೂ ಪಿಡಿಎಸ್ ನಿಯಂತ್ರಣ ಆದೇಶ-1992ರ ಕಲಂ 18 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ; 55ಕ್ಕೂ ಹೆಚ್ಚು ಧರ್ಮ ಪ್ರತಿನಿಧಿಗಳಿಗೆ ಆಹ್ವಾನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದ ವಿಶೇಷವೆಂದರೆ ವಿವಿಧ ಧರ್ಮಗಳ ಸ್ವಾಮೀಜಿಗಳು, ಮಠಾಧೀಶರು, ಫಾದರ್‌ಗಳು ಹಾಗೂ ಮೌಲ್ವಿಗಳ ಸಮ್ಮುಖದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ವಧರ್ಮ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಯೊಬ್ಬರು ಪ್ರಮಾಣವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಸರ್ವಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಹಾಗೂ ಸೌಹಾರ್ದತೆಯ ಸಂದೇಶವನ್ನು ರಾಜ್ಯದ ಜನತೆಗೆ ನೀಡುವ ಉದ್ದೇಶವನ್ನು ಡಿಕೆ ಶಿವಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ವಿವಿಧ ಜಾತಿ, ಧರ್ಮ ಹಾಗೂ ಸಮುದಾಯಗಳನ್ನು ಪ್ರತಿನಿಧಿಸುವ ಸುಮಾರು 55ಕ್ಕೂ ಹೆಚ್ಚು ಧರ್ಮಗುರುಗಳನ್ನು ಆಹ್ವಾನಿಸಲು ಸೂಚನೆ ನೀಡಲಾಗಿದೆ. ಸ್ವಾಮೀಜಿಗಳು, ಫಾದರ್‌ಗಳು, ಮೌಲ್ವಿಗಳು ಹಾಗೂ ವಿವಿಧ ಮಠಗಳ ಮುಖ್ಯಸ್ಥರಿಗೆ ಸರ್ಕಾರದ ವತಿಯಿಂದಲೇ ಅಧಿಕೃತ ಆಹ್ವಾನ ಪತ್ರ ಕಳುಹಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಸಂಬಂಧ ಶಿಷ್ಟಾಚಾರ ವಿಭಾಗವು ಡಿಕೆ ಶಿವಕುಮಾರ್ ಕಚೇರಿಯಿಂದ ಧರ್ಮಗುರುಗಳ ಪಟ್ಟಿಯನ್ನು ಪಡೆದುಕೊಂಡಿದೆ.

ಇನ್ನೊಂದೆಡೆ, ಜ್ಯೋತಿಷ್ಯ ಹಾಗೂ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುವ ಡಿಕೆ ಶಿವಕುಮಾರ್, ಧರ್ಮಗುರುಗಳು ಸೂಚಿಸಿರುವ ಶುಭ ದಿನ ಮತ್ತು ಮುಹೂರ್ತದ ಅನ್ವಯವೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಅದರಂತೆ ಅವರು ಪೂರ್ವಾಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಲಿದ್ದು, ಗಾಜಿನ ಮನೆಯಲ್ಲಿ ಅದಕ್ಕೆ ಅನುಗುಣವಾಗಿ ವೇದಿಕೆ ಸಿದ್ಧಪಡಿಸಲಾಗಿದೆ.

ಲೋಕಭವನದ ಗಾಜಿನ ಮನೆಯಲ್ಲಿ ಸುಮಾರು 1,100 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ನಾಯಕರು ಹಾಗೂ ಗಣ್ಯರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ನೂತನ ಸರ್ಕಾರದ ಅಧಿಕಾರ ಸ್ವೀಕಾರ ಸಮಾರಂಭವನ್ನು ವಿಭಿನ್ನ ಹಾಗೂ ಸರ್ವಧರ್ಮ ಸಮನ್ವಯದ ಸಂಕೇತವಾಗಿ ರೂಪಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಕಾರ್ಯಕ್ರಮ ರಾಜ್ಯ ರಾಜಕೀಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ.

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ವಾಪಸ್: ಸರ್ಕಾರದ ನಿರ್ಧಾರ ರದ್ದುಪಡಿಸಲು ರಾಜ್ಯಪಾಲರಿಗೆ BJP ಮನವಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜ್ಯಪಾಲರ ಬಳಿ ಅಧಿಕೃತ ದೂರು ಸಲ್ಲಿಸಿದೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಪ್ರಕರಣ ಹಿಂಪಡೆಯುವ ಸರ್ಕಾರದ ಕ್ರಮವನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ದೂರಿನಲ್ಲಿ, ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಗಂಭೀರ ಪ್ರಕರಣವನ್ನು ಹಿಂಪಡೆಯುವ ನಿರ್ಧಾರವನ್ನು ಮರುಪರಿಶೀಲಿಸಿ, ಅದನ್ನು ರದ್ದುಗೊಳಿಸಲು ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಲಾಗಿದೆ.

ಜೊತೆಗೆ, ಪ್ರಕರಣ ವಾಪಸ್ ಪಡೆಯಲು ಕೈಗೊಂಡಿರುವ ನಿರ್ಣಯವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಬಿಜೆಪಿ ನಿಯೋಗ ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.

ಈ ಬೆಳವಣಿಗೆಯೊಂದಿಗೆ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರವನ್ನು ಬಿಜೆಪಿ ಪ್ರಶ್ನಿಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಐಪಿಎಲ್ ಗೆಲುವಿನ ಬಳಿಕ ವೃಂದಾವನಕ್ಕೆ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಭೇಟಿ!

ಲಕ್ನೋ: ಐಪಿಎಲ್ 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ವೃಂದಾವನಕ್ಕೆ ಭೇಟಿ ನೀಡಿ ಆಧ್ಯಾತ್ಮಿಕ ಆಶೀರ್ವಾದ ಪಡೆದಿದ್ದಾರೆ.

ವೃಂದಾವನದಲ್ಲಿರುವ ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ ‘ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ ಆಗಮಿಸಿದ ದಂಪತಿ, ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದರು. ಆಶ್ರಮದಲ್ಲಿ ಕೆಲ ಸಮಯ ಕಳೆದ ಅವರು ಸರಳ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು.

ಪ್ರಸ್ತುತ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಆಶ್ರಮಕ್ಕೆ ಭೇಟಿ ನೀಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಕ್ರಿಕೆಟ್ ಮೈದಾನದಲ್ಲಿ ತನ್ನ ಆಕ್ರಮಣಕಾರಿ ಆಟದ ಮೂಲಕ ಗಮನ ಸೆಳೆಯುವ ಕೊಹ್ಲಿ, ಆಶ್ರಮದಲ್ಲಿ ವಿನಮ್ರವಾಗಿ ಕೈಮುಗಿದು ನಿಂತಿರುವ ದೃಶ್ಯ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ವೃಂದಾವನಕ್ಕೆ ಈ ಜೋಡಿ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ಕೆಲವು ವರ್ಷಗಳಿಂದಲೂ ವಿರಾಟ್ ಮತ್ತು ಅನುಷ್ಕಾ ಹಲವು ಬಾರಿ ವೃಂದಾವನಕ್ಕೆ ಭೇಟಿ ನೀಡಿ ಪ್ರೇಮಾನಂದ್ ಮಹಾರಾಜರ ಆಶೀರ್ವಾದ ಪಡೆಯುತ್ತಿದ್ದಾರೆ. ಪ್ರಮುಖ ಸಾಧನೆಗಳ ಬಳಿಕ ಅಥವಾ ವಿಶೇಷ ಸಂದರ್ಭಗಳಲ್ಲಿ ಅವರು ಆಶ್ರಮಕ್ಕೆ ತೆರಳಿ ಆಧ್ಯಾತ್ಮಿಕ ಶಾಂತಿಯನ್ನು ಅರಸುವುದು ಗಮನಾರ್ಹವಾಗಿದೆ.

ಇದಕ್ಕೂ ಮುನ್ನ ಐಪಿಎಲ್ ಪ್ರಶಸ್ತಿ ಗೆಲುವಿನ ಸಂಭ್ರಮದಲ್ಲಿ ಅನುಷ್ಕಾ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಫೋಟೋ ಹಂಚಿಕೊಂಡಿದ್ದರು. ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಅವರು, ವಿರಾಟ್ ಕೊಹ್ಲಿಯೊಂದಿಗೆ ಟ್ರೋಫಿ ಹಿಡಿದು ನಿಂತಿರುವ ಚಿತ್ರವನ್ನು ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು.

ಐಪಿಎಲ್‌ನಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದ ಖುಷಿಯ ನಡುವೆಯೇ ಆಧ್ಯಾತ್ಮಿಕ ತಾಣಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ವಿರಾಟ್-ಅನುಷ್ಕಾ ದಂಪತಿಯ ಈ ನಡೆ ಅಭಿಮಾನಿಗಳಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಡಿಜಿಟಲ್ ಆಗುತ್ತಿದೆ ಕರ್ನಾಟಕ ವಿಧಾನಮಂಡಲ: ಕಾಗದದ ಬದಲು ಶಾಸಕರಿಗೆ ಸಿಗಲಿದೆ ಐಪ್ಯಾಡ್

0

ಮಂಗಳೂರು: ಕರ್ನಾಟಕ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಐತಿಹಾಸಿಕ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ಆರು ತಿಂಗಳಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಿ ಕಾಗದರಹಿತ ವ್ಯವಸ್ಥೆ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಯೋಜನೆಯಡಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಇನ್ನು ಮುಂದೆ ಕಾಗದದ ದಾಖಲೆಗಳ ಬದಲಿಗೆ ಐಪ್ಯಾಡ್‌ಗಳ ಮೂಲಕವೇ ಕಲಾಪಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪಡೆಯಲಿದ್ದಾರೆ. ಅಧಿವೇಶನದ ಕಾರ್ಯಸೂಚಿ, ಪ್ರಶ್ನೋತ್ತರಗಳು, ವಿಧೇಯಕಗಳು ಹಾಗೂ ಇತರ ದಾಖಲೆಗಳು ಡಿಜಿಟಲ್ ರೂಪದಲ್ಲೇ ಸದಸ್ಯರಿಗೆ ತಲುಪಲಿವೆ.

ಈ ಉದ್ದೇಶಕ್ಕಾಗಿ ಕರ್ನಾಟಕ ವಿಧಾನಮಂಡಲವು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (NeVA) ಯೋಜನೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರು ಮತ್ತು ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಸಭೆ ಡಿಜಿಟಲೀಕರಣಕ್ಕೆ 78 ಕೋಟಿ ರೂ. ಹಾಗೂ ವಿಧಾನಪರಿಷತ್ ಡಿಜಿಟಲೀಕರಣಕ್ಕೆ 52 ಕೋಟಿ ರೂ. ಸೇರಿದಂತೆ ಒಟ್ಟು 130 ಕೋಟಿ ರೂ. ವೆಚ್ಚವಾಗಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.60ರಷ್ಟು ಆರ್ಥಿಕ ನೆರವು ನೀಡಲಿದೆ.

ಇದರ ಜೊತೆಗೆ ಶಾಸಕರ ಹಾಜರಾತಿ ವ್ಯವಸ್ಥೆಯನ್ನೂ ಸಂಪೂರ್ಣ ಡಿಜಿಟಲ್ ಮಾದರಿಗೆ ಪರಿವರ್ತಿಸಲಾಗುತ್ತಿದೆ. ವಿಧಾನಸೌಧದ ವಿವಿಧ ಕಚೇರಿಗಳು, ಅಧಿಕಾರಿಗಳ ವಿವರಗಳು ಹಾಗೂ ಸಾರ್ವಜನಿಕ ಮಾಹಿತಿ ನೀಡಲು ಸೌಧದ ಆವರಣದಲ್ಲಿ ಡಿಜಿಟಲ್ ಮಾಹಿತಿ ಕೇಂದ್ರಗಳು (ಕಿಯೋಸ್ಕ್‌ಗಳು) ಸ್ಥಾಪಿಸಲಾಗುತ್ತದೆ.

ಕಲಾಪದ ದಾಖಲೆಗಳು ಕಳೆದುಹೋಗುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಈ ಯೋಜನೆ, ಆಡಳಿತದ ವೇಗ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

₹1.10 ಕೋಟಿ ಹೂಡಿಕೆ, ವಾಪಸ್ ಬಂದದ್ದು ₹34.97 ಕೋಟಿ: ಸೂರ್ಯವಂಶಿಗೆ ಜಾಕ್ ಪಾಟ್!

ನವದೆಹಲಿ: ರಾಜಸ್ಥಾನ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ 2026ರ ಆವೃತ್ತಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೇವಲ 15ನೇ ವಯಸ್ಸಿನಲ್ಲೇ ಟೂರ್ನಿಯ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಅವರು, ವಿವಿಧ ಪ್ರಶಸ್ತಿಗಳು, ಪಂದ್ಯ ಶುಲ್ಕ ಹಾಗೂ ನಗದು ಬಹುಮಾನಗಳ ಮೂಲಕ ಒಟ್ಟು 3.10 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಿರುವುದಾಗಿ ವರದಿಯಾಗಿದೆ.

2025ರ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ 1.10 ಕೋಟಿ ರೂ. ಮೊತ್ತಕ್ಕೆ ಅವರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಆ ಹೂಡಿಕೆಗೆ ತಕ್ಕ ಪ್ರತಿಫಲವಾಗಿ ವೈಭವ್ ಇಡೀ ಟೂರ್ನಿಯಲ್ಲಿ ಬ್ಯಾಟ್‌ನಿಂದ ರನ್ ಮಳೆ ಸುರಿಸಿದರು. 776 ರನ್ ಕಲೆಹಾಕುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡ ಅವರು, ಟೂರ್ನಿಯ ಅತ್ಯಂತ ಮೌಲ್ಯಯುತ ಆಟಗಾರ (ಎಂವಿಪಿ) ಪ್ರಶಸ್ತಿಯನ್ನೂ ಗೆದ್ದರು.

ಆರೆಂಜ್ ಕ್ಯಾಪ್ ವಿಜೇತರಾಗಿ 10 ಲಕ್ಷ ರೂ. ನಗದು ಬಹುಮಾನ ಪಡೆದ ವೈಭವ್, ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ 15 ಲಕ್ಷ ರೂ. ಬಹುಮಾನ ಪಡೆದರು. ಜೊತೆಗೆ ಅತ್ಯುತ್ತಮ ಸ್ಟ್ರೈಕ್‌ರೇಟ್ ದಾಖಲಿಸಿ ‘ಸೂಪರ್ ಸ್ಟ್ರೈಕರ್’ ಗೌರವಕ್ಕೂ ಪಾತ್ರರಾದರು. ಈ ಪ್ರಶಸ್ತಿಯೊಂದಿಗೆ ಟಾಟಾ ಸಿಯೆರಾ ಕಾರು ಕೂಡ ಅವರಿಗೆ ಲಭಿಸಿದೆ.

ಇದೇ ವೇಳೆ, ಟೂರ್ನಿಯಲ್ಲಿ 75 ಸಿಕ್ಸರ್‌ಗಳನ್ನು ಸಿಡಿಸಿ ‘ಸೂಪರ್ ಸಿಕ್ಸರ್’ ಪ್ರಶಸ್ತಿಯನ್ನು ಗೆದ್ದ ಅವರು 10 ಲಕ್ಷ ರೂ. ನಗದು ಬಹುಮಾನ ಪಡೆದರು. ಟೂರ್ನಿಯ ಅತ್ಯುತ್ತಮ ಉದಯೋನ್ಮುಖ ಆಟಗಾರ ಪ್ರಶಸ್ತಿಯೂ ವೈಭವ್ ಪಾಲಾಗಿದ್ದು, ಇದಕ್ಕಾಗಿ ಮತ್ತೊಂದು 10 ಲಕ್ಷ ರೂ. ಬಹುಮಾನ ದೊರಕಿದೆ.

ರಾಜಸ್ಥಾನ ರಾಯಲ್ಸ್ ಪರ ಆಡಿದ 16 ಪಂದ್ಯಗಳಿಗೆ ಪಂದ್ಯ ಶುಲ್ಕ ಹಾಗೂ ಪ್ಲೇಆಫ್ ಬೋನಸ್ ಸೇರಿ ಸುಮಾರು 1.20 ಕೋಟಿ ರೂ. ಗಳಿಸಿದ್ದಾರೆ. ಇದಲ್ಲದೆ, ವಿವಿಧ ಪಂದ್ಯಗಳಲ್ಲಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಸೇರಿದಂತೆ ಪಡೆದ ವೈಯಕ್ತಿಕ ಪ್ರಶಸ್ತಿಗಳ ನಗದು ಮೊತ್ತವೂ ಅವರ ಒಟ್ಟು ಆದಾಯವನ್ನು 3.10 ಕೋಟಿ ರೂ. ಗಡಿ ದಾಟಿಸಿದೆ.

ವೈಭವ್ ಸೂರ್ಯವಂಶಿ ಈ ಆವೃತ್ತಿಯಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಕೇವಲ 15ನೇ ವಯಸ್ಸಿನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೊತೆಗೆ ಪವರ್‌ಪ್ಲೇ ಅವಧಿಯಲ್ಲೇ 500ಕ್ಕೂ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ಕೂಡ ನಿರ್ಮಿಸಿದ್ದಾರೆ.

ಇನ್ನೂ ಒಂದೇ ಐಪಿಎಲ್ ಸೀಸನ್‌ನಲ್ಲಿ 72ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ವೆಸ್ಟ್ ಇಂಡೀಸ್ ದಿಗ್ಗಜ ಬ್ಯಾಟರ್ ಕ್ರಿಸ್ ಗೇಲ್ ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಬ್ಯಾಟಿಂಗ್‌ನಲ್ಲಿ ತೋರಿದ ಅಸಾಧಾರಣ ಪ್ರದರ್ಶನದಿಂದ ರಾಜಸ್ಥಾನ ರಾಯಲ್ಸ್ ಹೂಡಿಕೆ ಮಾಡಿದ 1.10 ಕೋಟಿ ರೂ. ಮೊತ್ತಕ್ಕೆ ಪ್ರತಿಯಾಗಿ ಸುಮಾರು 34.97 ಕೋಟಿ ರೂ. ಮೌಲ್ಯದ ಪ್ರದರ್ಶನ ನೀಡಿದ್ದಾರೆ ಎಂದು ಕ್ರೀಡಾ ವಿಶ್ಲೇಷಕರು ಅಂದಾಜಿಸಿದ್ದಾರೆ.

ಈ ಅಂಕಿ-ಅಂಶಗಳ ಆಧಾರದಲ್ಲಿ ಐಪಿಎಲ್ 2026ರಲ್ಲಿ ಅತ್ಯಂತ ಲಾಭದಾಯಕ ಹೂಡಿಕೆಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಮೂರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶುಭಮನ್ ಗಿಲ್ ಮೊದಲ ಹಾಗೂ ರಜತ್ ಪಾಟಿದಾರ್ ಎರಡನೇ ಸ್ಥಾನದಲ್ಲಿದ್ದಾರೆ. ಯುವ ವಯಸ್ಸಿನಲ್ಲೇ ವೈಭವ್ ತೋರಿದ ಈ ಸಾಧನೆ ಭಾರತೀಯ ಕ್ರಿಕೆಟ್ ಭವಿಷ್ಯದ ಭರವಸೆಯ ಸಂಕೇತವೆಂದು ಪರಿಗಣಿಸಲಾಗುತ್ತಿದೆ.

ಐಪಿಎಲ್ ಬೆಟ್ಟಿಂಗ್‌ಗೆ ಬಿಗ್ ಶಾಕ್: 8,750 ಅಕ್ರಮ ವೆಬ್‌ಸೈಟ್‌ಗಳು ಬಂದ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯದ ವೇಳೆ ಅಕ್ರಮ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಚಟುವಟಿಕೆಗಳ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಸೈಬರ್ ಕ್ರೈಮ್ ವಿಭಾಗ ಭಾರಿ ಕಾರ್ಯಾಚರಣೆ ನಡೆಸಿದ್ದು, ದೇಶಾದ್ಯಂತ ಸಕ್ರಿಯವಾಗಿದ್ದ 8,750ಕ್ಕೂ ಹೆಚ್ಚು ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳು ಮತ್ತು ಲಿಂಕ್‌ಗಳನ್ನು ಬ್ಲಾಕ್ ಮಾಡಲಾಗಿದೆ.

ಐಪಿಎಲ್ ಫೈನಲ್ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಬೆಟ್ಟಿಂಗ್ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಐಡಿ ಸೈಬರ್ ಕ್ರೈಮ್ ಅಧಿಕಾರಿಗಳು ವಿಶೇಷ ನಿಗಾ ವಹಿಸಿದ್ದರು. ತಾಂತ್ರಿಕ ವಿಶ್ಲೇಷಣೆ ಮೂಲಕ ಸಾರ್ವಜನಿಕರನ್ನು ಹಣದ ಆಮಿಷಕ್ಕೆ ಸೆಳೆದು ವಂಚಿಸುತ್ತಿದ್ದ ಸಾವಿರಾರು ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಪತ್ತೆ ಹಚ್ಚಲಾಗಿದೆ.

ಕರ್ನಾಟಕ ಪೊಲೀಸರ ವರದಿ ಮತ್ತು ಶಿಫಾರಸಿನ ಆಧಾರದ ಮೇಲೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ದೇಶಾದ್ಯಂತ ಈ ಅಕ್ರಮ ವೆಬ್‌ಸೈಟ್‌ಗಳ ವಿರುದ್ಧ ನಿರ್ಬಂಧ ಕ್ರಮ ಜಾರಿಗೆ ತಂದಿದೆ.

ಅನಧಿಕೃತ ಬೆಟ್ಟಿಂಗ್ ತಾಣಗಳು ಹಣದ ನಷ್ಟದ ಜೊತೆಗೆ ಬ್ಯಾಂಕಿಂಗ್ ಮಾಹಿತಿ ಹಾಗೂ ವೈಯಕ್ತಿಕ ಡೇಟಾ ಕಳವು ಸೇರಿದಂತೆ ಸೈಬರ್ ವಂಚನೆಗಳಿಗೆ ಕಾರಣವಾಗುತ್ತಿವೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳು ಇಂತಹ ಆನ್‌ಲೈನ್ ಬೆಟ್ಟಿಂಗ್ ಜಾಲಗಳಿಗೆ ಬಲಿಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ.

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳ ವಿರುದ್ಧ ಮುಂದೆಯೂ ಕಟ್ಟುನಿಟ್ಟಿನ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸೈಬರ್ ಕ್ರೈಮ್ ವಿಭಾಗ ತಿಳಿಸಿದೆ.

ಹಸು ಮೇಯ್ದ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ರಾಮನಗರ: ತರಕಾರಿ ಗಿಡಗಳನ್ನು ಹಸು ಮೇಯ್ದ ವಿಚಾರಕ್ಕೆ ನೆರೆಮನೆಯವರ ನಡುವೆ ನಡೆದ ಗಲಾಟೆ ದುರಂತ ಅಂತ್ಯ ಕಂಡಿದೆ. ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರಾಮನಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಗೇರಿಯಲ್ಲಿ ನಡೆದಿದೆ.

ಮೃತರನ್ನು ಜಯಮ್ಮ (55) ಎಂದು ಗುರುತಿಸಲಾಗಿದೆ. ಜಯಮ್ಮ ಹಾಗೂ ಪಕ್ಕದ ಮನೆಯ ನಿವಾಸಿ ಶ್ರೀನಿವಾಸ್ ಕುಟುಂಬದ ನಡುವೆ ಈ ಹಿಂದೆ ಕೂಡ ಸಣ್ಣಪುಟ್ಟ ವಿಚಾರಗಳಿಗೆ ಮನಸ್ತಾಪ ಇತ್ತು ಎನ್ನಲಾಗಿದೆ.

ಘಟನೆ ದಿನ ಜಯಮ್ಮ ತಮ್ಮ ಮನೆಯ ಪಕ್ಕದಲ್ಲಿ ಬೆಳೆಸಿದ್ದ ತರಕಾರಿ ಗಿಡಗಳನ್ನು ಶ್ರೀನಿವಾಸ್‌ಗೆ ಸೇರಿದ ಹಸು ಮೇಯ್ದಿದೆ. ಇದನ್ನು ಪ್ರಶ್ನಿಸಿದ ವೇಳೆ ಎರಡೂ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿ ಗಲಾಟೆಗೆ ತಿರುಗಿದೆ.

ಗಲಾಟೆ ವೇಳೆ ಶ್ರೀನಿವಾಸ್ ಜಯಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದು, ಕಪಾಳಕ್ಕೆ ಹೊಡೆದ ಪರಿಣಾಮ ಅವರು ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಮ್ಮ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಶ್ರೀನಿವಾಸ್‌ನನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ರಾಮನಗರ ಟೌನ್ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

error: Content is protected !!