ಬೀದರ್: ಆರೈಕೆ ಮಾಡಲು ಸಾಧ್ಯವಾಗದೆ 50 ದಿನದ ಹಸುಗೂಸನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವ ಆರೋಪದ ಮೇಲೆ ತಾಯಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ದೇಗಲೂರು ತಾಲೂಕಿನ ಕವಳಗಡ್ಡ ಗ್ರಾಮದ ಸಂಜು ಹಾಗೂ ವಾಣಿಶ್ರೀ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮದುವೆಯ ಬಳಿಕ ದಂಪತಿ ತೆಲಂಗಾಣದ ನಿಜಾಮಾಬಾದ್ನಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಹೆರಿಗೆಗಾಗಿ ವಾಣಿಶ್ರೀ ತನ್ನ ತವರು ಮನೆಗೆ ಬಂದಿದ್ದರು. ದಂಪತಿಗೆ 50 ದಿನದ ಗಂಡು ಮಗು ಇದ್ದು, ಮಗುವಿಗೆ ಓಂಕಾರ ಎಂದು ಹೆಸರಿಟ್ಟಿದ್ದರು ಎನ್ನಲಾಗಿದೆ.
ಆದರೆ ಕೆಲ ದಿನಗಳ ಹಿಂದೆ ಮಗು ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಪತ್ನಿ ಶೌಚಕ್ಕೆ ತೆರಳಿದ್ದ ವೇಳೆ ಮಗು ಕಾಣೆಯಾಗಿದ್ದು, ದೇವರು ಮಗುವನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಪತಿ ಸಂಜುಗೆ ಹೇಳಲಾಗಿತ್ತು ಎನ್ನಲಾಗಿದೆ.
ಕುಟುಂಬಸ್ಥರ ಹೇಳಿಕೆ ಬಗ್ಗೆ ಅನುಮಾನಗೊಂಡ ಸಂಜು ಸಂತಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ತನಿಖೆ ವೇಳೆ ಮಗು ಕೊಲೆಯಾಗಿರುವುದು ಬೆಳಕಿಗೆ ಬಂದಿದ್ದು, ಆರೋಪಿಗಳ ವಿಚಾರಣೆ ನಡೆಸಿದಾಗ ಮಗುವನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವಿನ ಆರೈಕೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ, ಘಟನೆಗೆ ಮೂಢನಂಬಿಕೆಯೂ ಕಾರಣವಾಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ವಾಣಿಶ್ರೀ ಸೇರಿದಂತೆ ಮಾವ ಬಸವರಾಜ್, ಅತ್ತೆ ರತ್ನಮಾ ಹಾಗೂ ಸಹೋದರ ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

