ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.
ಯುವ ಬ್ಯಾಟರ್ ಶುಭ್ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
2027ರ ಏಕದಿನ ವಿಶ್ವಕಪ್ ತಯಾರಿಯ ಭಾಗವಾಗಿ ಈ ಸರಣಿಯನ್ನು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದ್ದು, ಆಯ್ಕೆ ಸಮಿತಿಯು ಅನುಭವ ಮತ್ತು ಯುವ ಪ್ರತಿಭೆಗಳ ಸಮತೋಲನಕ್ಕೆ ಒತ್ತು ನೀಡಿದೆ. ಆದರೆ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆದಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಅವರ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ಗೆ ಅವಕಾಶ ನೀಡಲಾಗಿದೆ. ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಯುವ ವೇಗಿ ಗುರ್ನೂರ್ ಬ್ರಾರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಕೂಡ ಈ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನವನ್ನು ನಿತೀಶ್ ಕುಮಾರ್ ರೆಡ್ಡಿ ಉಳಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೂಡ ಈ ಬಾರಿ ಆಯ್ಕೆಯಾಗಿಲ್ಲ. ವಿರಾಟ್ ಕೊಹ್ಲಿಯ ಪುನರಾಗಮನದಿಂದಾಗಿ ಜೈಸ್ವಾಲ್ಗೆ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.
ಅಫ್ಘಾನಿಸ್ತಾನ ವಿರುದ್ಧ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಹರ್ಷ್ ದುಬೆ ಅವರನ್ನು ಕೈಬಿಡಲಾಗಿದ್ದು, ಅನುಭವಿ ಆಲ್ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುವ ಆಟಗಾರ ಪ್ರಿನ್ಸ್ ಯಾದವ್ ಕೂಡ ತಂಡದಿಂದ ಹೊರಬಿದ್ದಿದ್ದು, ಹರ್ಷಿತ್ ರಾಣಾಗೆ ಅವಕಾಶ ಕಲ್ಪಿಸಲಾಗಿದೆ.
ಭಾರತದ ಏಕದಿನ ತಂಡ:
ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಗುರ್ನೂರ್ ಬ್ರಾರ್.

