Home Blog

ಬಿಎಂಟಿಸಿ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಮಾಸಿಕ ಪಾಸ್ ದುಬಾರಿ!

ಬೆಂಗಳೂರು: ಬಿಎಂಟಿಸಿ ಬಸ್‌ಗಳ ಕಾರ್ಯವ್ಯಾಪ್ತಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ದೀರ್ಘ ಪ್ರಯಾಣದ ಮಾಸಿಕ ಬಸ್ ಪಾಸ್ ದರವನ್ನು 1200 ರೂಪಾಯಿಯಿಂದ 1500 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಪರಿಷ್ಕೃತ ದರ ಸೋಮವಾರದಿಂದಲೇ ಜಾರಿಗೆ ಬಂದಿದೆ. ಬೆಂಗಳೂರು ನಗರ ವ್ಯಾಪ್ತಿಯ ಸಾಮಾನ್ಯ ಮಾಸಿಕ ಬಸ್ ಪಾಸ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಈ ಪಾಸ್‌ನ ದರ 1200 ರೂಪಾಯಿಯಲ್ಲೇ ಮುಂದುವರಿಯಲಿದೆ.

ಬೆಂಗಳೂರು ಹೊರವಲಯದ ಜಿಲ್ಲೆಗಳು ಹಾಗೂ ತಾಲೂಕುಗಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ‘ವಿಸ್ತಾರ ಮಾಸಿಕ ಪಾಸ್’ ಅನ್ನು ಪರಿಚಯಿಸಲಾಗಿದ್ದು, ಇದರ ದರವನ್ನು 1500 ರೂಪಾಯಿಗೆ ನಿಗದಿಪಡಿಸಲಾಗಿದೆ.

ಟಿಕೆಟ್ ದರ ಏರಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿರುವ ನಡುವೆಯೇ ಬಿಎಂಟಿಸಿ ಪಾಸ್ ದರ ಹೆಚ್ಚಿಸಿರುವುದು ಪ್ರಯಾಣಿಕರಲ್ಲಿ ಗೊಂದಲ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ವೇಳೆ ವಜ್ರ ಬಸ್‌ಗಳ ಮಾಸಿಕ ಪಾಸ್ ದರವನ್ನೂ ಹೆಚ್ಚಿಸುವ ಚಿಂತನೆ ನಿಗಮದಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಪ್ರಸ್ತುತ 2000 ರೂಪಾಯಿ ಇರುವ ಎಸಿ ಬಸ್ ಪಾಸ್ ದರವನ್ನು 2500 ರೂಪಾಯಿಗೆ ಏರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿರುವ ಸಂದರ್ಭದಲ್ಲಿ, ನಿಗಮದ ಆರ್ಥಿಕ ಹೊರೆ ಸರಿದೂಗಿಸಲು ಪುರುಷ ಪ್ರಯಾಣಿಕರ ಮೇಲೆ ಪರೋಕ್ಷವಾಗಿ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ ಎಂದು ಕೆಲ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ!

0

ಲಂಡನ್: ಭಾರತ ವಿರುದ್ಧ ಜುಲೈ 1ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ 17 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಯುವ ಬ್ಯಾಟರ್ ಹ್ಯಾರಿ ಬ್ರೂಕ್ ತಂಡದ ನಾಯಕತ್ವ ವಹಿಸಲಿದ್ದಾರೆ.

ತಂಡದಲ್ಲಿ ಸಸೆಕ್ಸ್‌ನ 22 ವರ್ಷದ ಯುವ ಆಲ್‌ರೌಂಡರ್ ಜೇಮ್ಸ್ ಕೋಲ್ಸ್‌ಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಇಂಗ್ಲೆಂಡ್ ಲಯನ್ಸ್ ಪರ ದೇಶಿ ಕ್ರಿಕೆಟ್‌ನಲ್ಲಿ ತೋರಿದ ಉತ್ತಮ ಪ್ರದರ್ಶನದ ಆಧಾರದ ಮೇಲೆ ಅವರಿಗೆ ಸ್ಥಾನ ಲಭಿಸಿದೆ.

ಇನ್ನು ಅನುಭವಿ ಆಟಗಾರರಾದ ಜೋಸ್ ಬಟ್ಲರ್, ಫಿಲ್ ಸಾಲ್ಟ್, ಜೋಫ್ರಾ ಆರ್ಚರ್ ಹಾಗೂ ಆದಿಲ್ ರಶೀದ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಉಪನಾಯಕರಾಗಿದ್ದಾರೆ. ಎರಡು ಬಲಿಷ್ಠ ತಂಡಗಳ ನಡುವಿನ ಈ ಸರಣಿ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಇಂಗ್ಲೆಂಡ್ ಟಿ20 ತಂಡ:

ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್, ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್, ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಸಚಿವ ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಡಿಕೆಶಿ; ಹೊಸಬರಿಗೆ ಅವಕಾಶ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತಿನ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸಬರಿಗೆ ಅವಕಾಶ ನೀಡುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಶಿವಾನಂದ ಸರ್ಕಲ್ ಸಮೀಪದ ತಮ್ಮ ಸರ್ಕಾರಿ ನಿವಾಸದಲ್ಲಿ ದರ್ಗಾಗಳ ಧರ್ಮಗುರುಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

“ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ. ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಪಕ್ಷದ ಹೈಕಮಾಂಡ್ ಮೇಲಿದೆ ಎಂದು ಸ್ಪಷ್ಟಪಡಿಸಿದರು.

“ಈ ವಿಚಾರವಾಗಿ ಈಗಾಗಲೇ ನವದೆಹಲಿಯಲ್ಲಿ ಪಕ್ಷದ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ” ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

ನ್ಯಾಯ ಸಿಗದಿದ್ದರೆ ದಯಾಮರಣ ಕೊಡಿ; ಜಿಲ್ಲಾಧಿಕಾರಿಗೆ ವೃದ್ಧ ದಂಪತಿ ಮನವಿ!

0

ಸೂರತ್: ಕಳೆದ ಐದು ವರ್ಷಗಳಿಂದ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರಿಂದ ಕಿರುಕುಳ ಅನುಭವಿಸುತ್ತಿದ್ದು, ನ್ಯಾಯ ಸಿಗದಿದ್ದರೆ ದಯಾಮರಣಕ್ಕೆ ಅನುಮತಿ ನೀಡುವಂತೆ ಗುಜರಾತ್‌ನ ಸೂರತ್ ನಗರದ ವೃದ್ಧ ದಂಪತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಘಟನೆ ಭಾರಿ ಸಂಚಲನ ಮೂಡಿಸಿದೆ.

ಸೂರತ್ ನಿವಾಸಿಗಳಾದ ಶ್ಯಾಮ್‌ಭಾಯಿ ಗೆಹ್ಲೋಟ್ ಮತ್ತು ಅವರ ಪತ್ನಿ ಮಧುಬೆನ್, ತಮಗೆ ಬದುಕುವ ಆಸೆ ಉಳಿದಿಲ್ಲ. ನಿರಂತರ ಕಿರುಕುಳದಿಂದ ಜೀವನ ದುಸ್ತರವಾಗಿದೆ. ನ್ಯಾಯ ಸಿಗದಿದ್ದರೆ ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಪತ್ರ ಬರೆದು ಕೋರಿದ್ದಾರೆ.

ಈ ದಂಪತಿಯ ಬದುಕು ಈಗಾಗಲೇ ದುರಂತಗಳಿಂದ ಕೂಡಿದೆ. 2016ರ ನವೆಂಬರ್ 7ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಏಕೈಕ ಪುತ್ರ, ಸೊಸೆ, ಮೊಮ್ಮಕ್ಕಳು, ಪುತ್ರಿ ಹಾಗೂ ಅಳಿಯ ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದರು. ಆ ಘಟನೆಯ ಬಳಿಕ ಒಂಟಿಯಾಗಿರುವ ದಂಪತಿ ಪರಸ್ಪರ ಆಸರೆಯೊಂದಿಗೆ ಜೀವನ ಸಾಗಿಸುತ್ತಿದ್ದಾರೆ.

ಜೀವನ ನಿರ್ವಹಣೆಗಾಗಿ 2006ರಲ್ಲಿ ಖರೀದಿಸಿದ್ದ 11 ಸಣ್ಣ ಅಂಗಡಿಗಳ ಬಾಡಿಗೆ ಆದಾಯವನ್ನೇ ಅವಲಂಬಿಸಿದ್ದರು. ಆದರೆ 2021ರಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡದೆ ಅಂಗಡಿಗಳಿಗೆ ಬೀಗ ಜಡಿದಿದ್ದರು. ಇದನ್ನು ಪ್ರಶ್ನಿಸಿ ದಂಪತಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.

ಅಗ್ನಿಶಾಮಕ ಇಲಾಖೆಯ ಅನುಕೂಲಕರ ವರದಿ ಆಧರಿಸಿ ಈ ವರ್ಷದ ಜನವರಿ 31ರಂದು ಅಂಗಡಿಗಳನ್ನು ತೆರೆಯಲು ಅನುಮತಿ ದೊರೆತಿತ್ತು. ಆದರೆ ನ್ಯಾಯಾಲಯದ ಆದೇಶದ ಕೆಲವೇ ತಿಂಗಳ ಬಳಿಕ ಮೇ 30ರಂದು ಮತ್ತೆ ಯಾವುದೇ ಲಿಖಿತ ನೋಟಿಸ್ ನೀಡದೆ ಅಂಗಡಿಗಳಿಗೆ ಬೀಗ ಹಾಕಲಾಗಿದೆ ಎಂದು ದಂಪತಿ ಆರೋಪಿಸಿದ್ದಾರೆ.

ಸ್ಥಳೀಯ ರಾಜಕೀಯ ಮುಖಂಡರನ್ನು ಭೇಟಿಯಾಗುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದು, ತಮ್ಮ ಆಸ್ತಿಯನ್ನು ಕಬಳಿಸಲು ಅಧಿಕಾರಿಗಳು ಮತ್ತು ರಾಜಕಾರಣಿಗಳು ಸಂಚು ರೂಪಿಸಿದ್ದಾರೆ ಎಂದು ಶ್ಯಾಮ್‌ಭಾಯಿ ಗೆಹ್ಲೋಟ್ ದೂರಿದ್ದಾರೆ. ಅಂಗಡಿಗಳಿಗೆ ಸೀಲ್ ಹಾಕಲು ಯಾವುದೇ ಅಧಿಕೃತ ಕಾರಣವನ್ನೂ ಮಹಾನಗರ ಪಾಲಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಜೀವನೋಪಾಯದ ಏಕೈಕ ಮೂಲವಾಗಿದ್ದ ಅಂಗಡಿಗಳು ಮುಚ್ಚಲ್ಪಟ್ಟ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದಂಪತಿ, ಅಧಿಕಾರಿಗಳ ಕ್ರಮದಿಂದ ಮಾನಸಿಕವಾಗಿ ಕುಗ್ಗಿದ್ದು, ಕೊನೆಗೆ ಜಿಲ್ಲಾಧಿಕಾರಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಈ ಘಟನೆ ಸದ್ಯ ಗುಜರಾತ್ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ವೃದ್ಧ ದಂಪತಿಯ ಮನವಿಗೆ ಅಧಿಕಾರಿಗಳು ಯಾವ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

 

ರಾಜ್ಯದಲ್ಲಿ ಮತ್ತೆ ಮಳೆ ಚುರುಕು; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಲಘು ಹಾಗೂ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯೂ ಸುರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಡಿಕೆ ಶಿವಕುಮಾರ್!

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ರಾತ್ರಿ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಶಾಸಕ ರವಿ ಗಣಿಗ ಕೂಡ ಮುಖ್ಯಮಂತ್ರಿ ಅವರೊಂದಿಗೆ ಉಪಸ್ಥಿತರಿದ್ದರು. ಸಿಎಂ ಹಾಗೂ ಇತರ ನಾಯಕರು ಶ್ರೀಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಶಾಸಕ ರವಿ ಗಣಿಗ, ಈ ಭೇಟಿಗೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಮುಖ್ಯಮಂತ್ರಿ ಅವರೊಂದಿಗೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಸಚಿವ ಎನ್. ಚಲುವರಾಯಸ್ವಾಮಿ ಕೂಡ ಇದೇ ಮಾತನ್ನು ಪುನರುಚ್ಚರಿಸಿ, ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಆದ್ದರಿಂದ ಸಿಎಂ ಅವರೊಂದಿಗೆ ಬಂದು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇವೆ. ಈ ವೇಳೆ ಯಾವುದೇ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾದರೂ, ನಾಯಕರು ಇದು ಕೇವಲ ಸೌಹಾರ್ದ ಹಾಗೂ ಆಶೀರ್ವಾದ ಪಡೆಯುವ ಉದ್ದೇಶದ ಭೇಟಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿ ಪ್ರಕಟ: ರಾಜ್ಯದ 200 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಗೌರವ!

ಬೆಂಗಳೂರು: 2025-26ನೇ ಸಾಲಿನ ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ವರ್ಷಪೂರ್ತಿ ಸಲ್ಲಿಸಿದ ಅತ್ಯುತ್ತಮ ಸೇವೆ, ಕರ್ತವ್ಯ ನಿಷ್ಠೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಡಿಜಿ ಹಾಗೂ ಐಜಿಪಿ ಎಂ.ಎ. ಸಲೀಂ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಐಜಿಪಿ ಶಶಿಕುಮಾರ್, ಡಿಐಜಿಪಿ ಭೀಮಾಶಂಕರ್ ಗುಳೇದ್, ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಎಸಿಪಿ ರಾಜೇಶ್ ಎಲ್.ವೈ ಸೇರಿದಂತೆ ಒಟ್ಟು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಾನ ಪಡೆದಿದ್ದಾರೆ.

ಈ ಪ್ರಶಸ್ತಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ, ಸೇವಾ ಮನೋಭಾವ ಹಾಗೂ ಇಲಾಖೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ.

 

ಚಿನ್ನ ಬಿಡಿಸಿಕೊಳ್ಳಲು ಹೋದ ಅಪ್ಪ-ಮಗನ ಮೇಲೆ ಗುಂಡಿನ ದಾಳಿ; ಶಾಲಾ ಬಾಲಕಿಗೂ ತಗುಲಿದ ಗುಂಡು!

ಧಾರವಾಡ: ಗಿರವಿ ಇಟ್ಟಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ಗಲಾಟೆ ನಡೆದು, ಚಿನ್ನದಂಗಡಿ ಮಾಲೀಕ ಗುಂಡು ಹಾರಿಸಿದ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಅಪ್ಪ-ಮಗ ಗಂಭೀರವಾಗಿ ಗಾಯಗೊಂಡಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ 10 ವರ್ಷದ ಬಾಲಕಿಯೊಬ್ಬಳಿಗೂ ಗುಂಡು ತಗುಲಿದೆ.

ಜೀರಿಗವಾಡ ಗ್ರಾಮದ ನಿಂಗಪ್ಪ ಹೊರಕೇರಿ ಹಾಗೂ ಅವರ ಪುತ್ರ ಸಿದ್ದಪ್ಪ ಹೊರಕೇರಿ ನಾಲ್ಕು ವರ್ಷಗಳ ಹಿಂದೆ ಗರಗ ಗ್ರಾಮದ ಚಿನ್ನದಂಗಡಿ ಮಾಲೀಕ ಮೌನೇಶ್ ಬಳಿ ಸುಮಾರು 40 ಗ್ರಾಂ ಚಿನ್ನವನ್ನು 60 ಸಾವಿರ ರೂ. ಸಾಲಕ್ಕೆ ಗಿರವಿ ಇಟ್ಟಿದ್ದರು. ಇದೀಗ ಹಣವನ್ನು ಮರುಪಾವತಿಸಿ ಚಿನ್ನವನ್ನು ಬಿಡಿಸಿಕೊಳ್ಳಲು ಮುಂದಾದ ಅವರು, ಚಿನ್ನವನ್ನು ಹಿಂದಿರುಗಿಸುವಂತೆ ಅಥವಾ ಪ್ರಸ್ತುತ ಮಾರುಕಟ್ಟೆ ದರದ ಹಣವನ್ನು ನೀಡುವಂತೆ ಕೇಳಿದ್ದಾರೆ.

ಆದರೆ, ಗಿರವಿ ಇಟ್ಟಿದ್ದ ಚಿನ್ನವನ್ನು ಮುರುಗಡೆ ಮಾಡಲಾಗಿದೆ ಎಂದು ಮೌನೇಶ್ ತಿಳಿಸಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೇ ವೇಳೆ ಮೌನೇಶ್ ತನ್ನ ಬಳಿ ಇದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಸಿದ್ದಪ್ಪ ಹೊರಕೇರಿಗೆ ಹೊಟ್ಟೆ ಭಾಗಕ್ಕೆ, ನಿಂಗಪ್ಪ ಹೊರಕೇರಿಗೆ ಹೊಟ್ಟೆ ಹಾಗೂ ಕಾಲಿಗೆ ಗುಂಡು ತಗುಲಿದ್ದು, ಗಂಭೀರ ಗಾಯಗಳಾಗಿವೆ. ಇದೇ ವೇಳೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಗರಗ ಗ್ರಾಮದ 10 ವರ್ಷದ ಬಾಲಕಿಯ ಕಾಲಿಗೂ ಗುಂಡು ತಗುಲಿದೆ.

ಗಾಯಾಳುಗಳನ್ನು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗುಂಜನ್ ಆರ್ಯ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಿನ್ನದ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಲಾಟೆ ನಡೆದಿದ್ದು, ರಿವಾಲ್ವರ್‌ನಿಂದ ಗುಂಡು ಹಾರಿಸಲಾಗಿದೆ. ಎಷ್ಟು ಸುತ್ತು ಗುಂಡು ಹಾರಿಸಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬಾಲಕಿಗೆ ಗುಂಡು ತಗುಲಿರುವುದು ದುರದೃಷ್ಟಕರವಾಗಿದ್ದು, ಆಕೆಗೆ ಈ ವಿವಾದದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಮೌನೇಶ್‌ನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

 

ಹಲ್ಲು, ಹೃದಯ, ಜೀರ್ಣಕ್ರಿಯೆ… ಲವಂಗದಿಂದ ಸಿಗುವ 5 ಪ್ರಮುಖ ಆರೋಗ್ಯ ಪ್ರಯೋಜನಗಳು!

0

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.

ಇದು ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಅನೇಕ ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಲವಂಗದಲ್ಲಿರುವ ಯೂಜಿನಾಲ್, ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ನೆರವಾಗುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಳ:

ಲವಂಗದಲ್ಲಿ ವಿಟಮಿನ್ ಸಿ ಹಾಗೂ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಇದರಿಂದ ಸೋಂಕುಗಳು ಹಾಗೂ ಋತುಮಾನದ ಕಾಯಿಲೆಗಳ ವಿರುದ್ಧ ಹೋರಾಡಲು ಸಹಕಾರಿಯಾಗುತ್ತದೆ.

ಬಾಯಿ ಮತ್ತು ಹಲ್ಲಿನ ಆರೋಗ್ಯಕ್ಕೆ ಉತ್ತಮ:

ಲವಂಗದಲ್ಲಿ ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಹಾಗೂ ಆಂಟಿಫಂಗಲ್ ಗುಣಗಳಿವೆ. ಲವಂಗವನ್ನು ಜಗಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಹಲ್ಲಿನ ನೋವು, ಒಸಡುಗಳ ಉರಿಯೂತ ಹಾಗೂ ಬಾಯಿಯಲ್ಲಿನ ಬ್ಯಾಕ್ಟೀರಿಯಾಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ:

ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಬಳಲುವವರಿಗೆ ಲವಂಗ ಉತ್ತಮ ನೆರವಾಗುತ್ತದೆ. ಇದು ಜೀರ್ಣರಸಗಳ ಉತ್ಪಾದನೆಯನ್ನು ಉತ್ತೇಜಿಸಿ ಆಹಾರ ಸುಲಭವಾಗಿ ಜೀರ್ಣವಾಗಲು ಸಹಕಾರಿಯಾಗುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ನೆರವು:

ಕೆಲವು ಅಧ್ಯಯನಗಳ ಪ್ರಕಾರ, ಲವಂಗದಲ್ಲಿರುವ ಯೂಜಿನಾಲ್ ಮತ್ತು ಫ್ಲೇವನಾಯ್ಡ್‌ಗಳು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಸುಧಾರಿಸಲು ನೆರವಾಗಬಹುದು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯವಾಗುತ್ತದೆ.

ಹೃದಯ ಮತ್ತು ಯಕೃತ್ತಿನ ಆರೋಗ್ಯಕ್ಕೆ ಸಹಕಾರಿ:

ಲವಂಗದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತವೆ. ಜೊತೆಗೆ ಯಕೃತ್ತಿನಲ್ಲಿ ಸಂಗ್ರಹವಾಗುವ ಹಾನಿಕಾರಕ ವಿಷಪದಾರ್ಥಗಳನ್ನು ಹೊರಹಾಕುವಲ್ಲಿ ಸಹಕಾರಿಯಾಗುತ್ತದೆ.

ಲವಂಗವನ್ನು ಹೇಗೆ ಸೇವಿಸಬಹುದು?

  • ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ 1–2 ಲವಂಗಗಳನ್ನು ಜಗಿಯಬಹುದು.
  • ಲವಂಗವನ್ನು ನೀರಿನಲ್ಲಿ ಕುದಿಸಿ ಅದರ ನೀರನ್ನು ಕುಡಿಯಬಹುದು.
  • ಚಹಾ ಅಥವಾ ಕಷಾಯದಲ್ಲಿ ಸೇರಿಸಿ ಸೇವಿಸಬಹುದು.

ಲವಂಗ ಆರೋಗ್ಯಕ್ಕೆ ಪ್ರಯೋಜನಕಾರಿಯಾದರೂ, ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಯಾವುದೇ ಆರೋಗ್ಯ ಸಮಸ್ಯೆ, ಮಧುಮೇಹ ಅಥವಾ ಔಷಧ ಸೇವನೆ ಇದ್ದರೆ ವೈದ್ಯರ ಸಲಹೆಯೊಂದಿಗೆ ಬಳಸುವುದು ಉತ್ತಮ.

ಸಮಾಜಮುಖಿ ವ್ಯಕ್ತಿಗಳು ಸದಾ ಸ್ಮರಣೀಯರು: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿಯ ಬದುಕಿನ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ಅವರನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದ ಗಿಡ್ನಂದಿ ಅವರ ಸಂಸ್ಮರಣ ಗ್ರಂಥ ‘ಸದಾಶಿವಾನಂದ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಕರಾಗಿದ್ದ ಶಿವಾನಂದ ಗಿಡ್ನಂದಿ ಅವರು ಬೋಧನೆಯ ಜೊತೆಗೆ ಸಾಹಿತ್ಯ, ಸಂಸ್ಕೃತಿ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕವಿಯಾಗಿ, ಸಂಘಟಕರಾಗಿ ಹಾಗೂ ಉತ್ತಮ ಬೋಧಕರಾಗಿ ಗದಗದ ಸಾಂಸ್ಕೃತಿಕ ಶ್ರೀಮಂತಿಕೆಗೆ ತಮ್ಮದೇ ಆದ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಾಗದೆ ಸಮಾಜ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲೂ ಪಾತ್ರ ವಹಿಸಬೇಕು. ಶಿವಾನಂದ ಗಿಡ್ನಂದಿ ಅವರು ಉತ್ತಮ ಶಿಕ್ಷಕ, ಸಾಹಿತಿ ಹಾಗೂ ಸಂಘಟಕರಾಗಿ ಸಮಾಜಕ್ಕೆ ಮಾದರಿಯಾಗಿದ್ದರು ಎಂದರು.

ಪ್ರೊ. ಚಂದ್ರಶೇಖರ ವಸ್ತ್ರದ ಮಾತನಾಡಿ, ಗಿಡ್ನಂದಿ ಅವರು ಉತ್ತಮ ವಾಗ್ಮಿ, ನಿರೂಪಕ ಹಾಗೂ ಕವಿಯಾಗಿದ್ದು ಸಾಹಿತ್ಯ ವಲಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹೇಳಿದರು.

ಗ್ರಂಥವನ್ನು ಪರಿಚಯಿಸಿದ ಡಾ. ಎಚ್.ಬಿ. ಪೂಜಾರ ಅವರು, ಈ ಕೃತಿಯಲ್ಲಿ ಶಿವಾನಂದ ಗಿಡ್ನಂದಿ ಅವರ ವ್ಯಕ್ತಿತ್ವ, ಸಾಹಿತ್ಯ ಸಾಧನೆ, ಕವಿತೆಗಳು ಹಾಗೂ ಲೇಖನಗಳನ್ನು ಒಳಗೊಂಡ ಸಮಗ್ರ ಚಿತ್ರಣ ನೀಡಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಗಿಡ್ನಂದಿ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಪರಂಪರೆಯನ್ನು ಕುಟುಂಬ ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.

ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ದೊರೆಸ್ವಾಮಿಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಸಾಹಿತ್ಯ ಪರಿಷತ್ತಿನಲ್ಲಿ ಗಿಡ್ನಂದಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾಗಿದ್ದು, ಅವರ ಜೀವನ ಸಾಧನೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಆಶಿಸಿದರು.

ನಿವೃತ್ತ ಉಪನ್ಯಾಸಕ ಎಸ್.ಜಿ. ಕಡೇಮನಿ ಮಾತನಾಡಿ, ಶಿವಾನಂದ ಗಿಡ್ನಂದಿ ಅವರು ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಬಹುಮುಖ ಪ್ರತಿಭೆಯಾಗಿದ್ದರು ಎಂದು ಹೇಳಿದರು.

ವೇದಿಕೆಯಲ್ಲಿ ಮಹಾದೇವಪ್ಪ ಕಡೇಮನಿ, ಶಕುಂತಲಾ ಗಿಡ್ನಂದಿ ಉಪಸ್ಥಿತರಿದ್ದರು. ಮಂಜುಳಾ ವೆಂಕಟೇಶಯ್ಯ ಕವನ ವಾಚಿಸಿದರು. ಡಾ. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ರಾಹುಲ ಗಿಡ್ನಂದಿ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು.

“ಬದುಕಿರುವ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ವ್ಯಕ್ತಿಯನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ.”

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

error: Content is protected !!