ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಯುವತಿಯ ತಾಯಿ ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಯುವತಿಯೊಂದಿಗೆ ಹೋಂಸ್ಟೇಗೆ ಬಂದಿದ್ದ ಕೇರಳ ಮೂಲದ ಸಂಜೀತ್ ಅಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶನಿವಾರ ಹೋಂಸ್ಟೇಗೆ ಬಂದಿದ್ದ ಇಬ್ಬರೂ ಸೋಮವಾರ ಚೆಕ್ಔಟ್ ಮಾಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊಠಡಿ ಪರಿಶೀಲಿಸಿದಾಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಳದಲ್ಲಿ ಹಗ್ಗ ಕತ್ತರಿಸಿದ ಸ್ಥಿತಿ, ಕೆಲವು ಮಾತ್ರೆಗಳು ಹಾಗೂ ಡೈರಿಯೊಂದು ಪತ್ತೆಯಾಗಿರುವುದರಿಂದ ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಳ ಮರಣಕ್ಕೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಾಗಿ ಕಾಯಲಾಗುತ್ತಿದೆ. ಸಂಜೀತ್ ಅಲಿಯ ಹೇಳಿಕೆ ದಾಖಲಿಸಿದ ಬಳಿಕವೇ ಆತ್ಮಹತ್ಯೆಯೋ, ಕೊಲೆಯೋ ಅಥವಾ ಬೇರೆ ಯಾವುದೇ ಕಾರಣವಿದೆಯೋ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ, ಮೃತಳ ತಾಯಿ ಗೀತಾ ಭಾವುಕರಾಗಿ ಪ್ರತಿಕ್ರಿಯಿಸಿ, ಸಂಜೀತ್ ಅಲಿ ಹಲವು ವರ್ಷಗಳಿಂದ ತನ್ನ ಪುತ್ರಿಯನ್ನು ಹಿಂಬಾಲಿಸುತ್ತಿದ್ದ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಹಾಗೂ ಡ್ರಗ್ಸ್ ವ್ಯಸನಕ್ಕೆ ದೂಡಿದ್ದಾನೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಚಿಕಿತ್ಸೆಯಿಂದ ಗುಣಮುಖಳಾಗಿದ್ದ ಪುತ್ರಿಯನ್ನು ಮತ್ತೊಮ್ಮೆ ತನ್ನೊಂದಿಗೆ ಕರೆದುಕೊಂಡು ಹೋಗಿ ಸಂಚು ರೂಪಿಸಿ ಕೊಲೆ ಮಾಡಿದ್ದಾನೆ ಎಂದು ಅವರು ದೂರಿದ್ದಾರೆ.
ಮೃತಳ ಸಂಬಂಧಿಕರು ಕೂಡ ಸಂಜೀತ್ ಅಲಿ ವಿರುದ್ಧ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

