Home Blog

2030 ಗುರಿ ಸಾಕಾರಕ್ಕೆ ಭಾರತ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಸುಸ್ಥಿರ ಅಭಿವೃದ್ಧಿ ಗುರಿಗಳ (SDGs) ಅನುಷ್ಠಾನದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, 2030ರ ಗುರಿ ತಲುಪುವ ವಿಶ್ವಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಹೇಳಿದರು.

ಗದಗ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ವ್ಯಾಪ್ತಿಯ ವಿವಿಧ ಇಲಾಖೆಗಳ ‘ಸಿ’ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಎರಡು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳ ಪರಿಚಯಾತ್ಮಕ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ 24.8 ಕೋಟಿ ಜನರು ಬಹುಮಟ್ಟದ ಬಡತನದಿಂದ ಹೊರಬಂದಿರುವುದು, ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ, ಉಚಿತ ಆಹಾರ ಧಾನ್ಯ ವಿತರಣೆ, ಪೋಷಣ ಅಭಿಯಾನ, ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಹಾಗೂ ಗ್ರಾಮೀಣ ಭಾಗದಲ್ಲಿ ತಾಯಿ-ಮಗು ಆರೋಗ್ಯ ಸೇವೆಗಳ ವಿಸ್ತರಣೆಯಂತಹ ಕ್ರಮಗಳು ಸುಸ್ಥಿರ ಅಭಿವೃದ್ಧಿಯ ಮಹತ್ವದ ಮೈಲಿಗಲ್ಲುಗಳಾಗಿವೆ ಎಂದು ತಿಳಿಸಿದರು.

“ಸಮಾನತೆ ಮತ್ತು ಹಸಿರು ಭವಿಷ್ಯದತ್ತ ಭಾರತ ಮುನ್ನಡೆ”

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಜಯದೇವಿ ಅಡಕೇರಿಮಠ ಮಾತನಾಡಿ, ಶುದ್ಧ ಇಂಧನ, ಡಿಜಿಟಲ್ ಮೂಲಸೌಕರ್ಯ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸಮಾನತೆಯ ಮೂಲಕ ಭಾರತ ಸಮಗ್ರ ಅಭಿವೃದ್ಧಿಯತ್ತ ಸಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಗುರಿಗಳು ದೇಶದ ಹಸಿರು ಮತ್ತು ಸಮೃದ್ಧ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ ಮಾತನಾಡಿ, ರಾಷ್ಟ್ರೀಯ ಗ್ರೀನ್ ಹೈಡ್ರೋಜನ್ ಮಿಷನ್, ಪಿಎಂ-ಕುಸುಮ್ ಯೋಜನೆ, ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಹಾಗೂ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ ಮೂಲಕ ದೇಶ ಅಭಿವೃದ್ಧಿಯ ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ವಿವರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ ಮಾತನಾಡಿ, ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಜನಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಉಪಪ್ರಾಚಾರ್ಯ ಐ.ಜೆ. ಪಾಪಣ್ಣ ಮಾತನಾಡಿ, 2030ರೊಳಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಅಗತ್ಯ ವಾತಾವರಣ ಈಗಾಗಲೇ ನಿರ್ಮಾಣವಾಗಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ನಿರೀಕ್ಷಿತ ಸಾಧನೆ ಸಾಧ್ಯವಾಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಕರ್ನಾಟಕ ಕೇಂದ್ರದ ಸಂಯೋಜಕ ಡಾ. ಸಿದ್ದರಾಮ ಎಚ್.ಎಂ. ವಿಶೇಷ ಉಪನ್ಯಾಸ ನೀಡಿದರು. ತರಬೇತಿ ಸಂಸ್ಥೆಯ ಬೋಧಕರಾದ ಎಸ್.ಎಂ. ಸುಣಗಾರ, ಆರ್.ಎಂ. ಹರಿಜನ, ಮಂಜುನಾಥ ಪತ್ತಾರ, ಶಂಕರ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

“ಸುಸ್ಥಿರ ಅಭಿವೃದ್ಧಿ ಗುರಿಗಳ ಅನುಷ್ಠಾನದಲ್ಲಿ ಭಾರತ ಸಾಧಿಸಿರುವ ಪ್ರಗತಿ ವಿಶ್ವದ ಗಮನ ಸೆಳೆದಿದ್ದು, 2030ರ ಗುರಿ ತಲುಪುವ ವಿಶ್ವಾಸ ಮತ್ತಷ್ಟು ಬಲಗೊಂಡಿದೆ.”

ಎ.ಎ. ಕಂಬಾಳಿಮಠ, ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಪಂಚಾಯತ್, ಗದಗ

ಮೊದಲು ಶಿಕ್ಷಣ… ನಂತರ ಜೀವನದ ನಿರ್ಧಾರ!

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿನಿಯರು ಮೊದಲು ಶಿಕ್ಷಣ ಪೂರ್ಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ತಮ್ಮ ಕಾಲ ಮೇಲೆ ತಾವು ನಿಲ್ಲುವವರೆಗೆ ಪ್ರೀತಿ, ಪ್ರಣಯ ಅಥವಾ ಮದುವೆಯಂತಹ ನಿರ್ಧಾರಗಳಿಗೆ ಮುಂದಾಗದೆ ಭವಿಷ್ಯ ಮತ್ತು ಗುರಿ ಸಾಧನೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಂವಾದ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಯೋಸಹಜವಾಗಿ ಉಂಟಾಗುವ ಆಕರ್ಷಣೆಗೆ ಮರುಳಾಗಿ ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳು ಇಡೀ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಗುರಿ ಮತ್ತು ವೃತ್ತಿ ಬದುಕಿನತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಯೊಬ್ಬ ಪೋಷಕರ ಕನಸು ತಮ್ಮ ಮಗಳು ಸ್ವಾವಲಂಬಿಯಾಗಿ ಯಾರ ಮುಂದೆಯೂ ಕೈಚಾಚದಂತಾಗಬೇಕು ಎಂಬುದಾಗಿದೆ. ಆ ಕನಸನ್ನು ನನಸು ಮಾಡಲು ಹೆಣ್ಣುಮಕ್ಕಳು ವಿದ್ಯಾಭ್ಯಾಸದೊಂದಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ವಿದ್ಯಾರ್ಥಿನಿಯರು ಎಚ್ಚರಿಕೆ ವಹಿಸಬೇಕು. ತಮ್ಮ ಪ್ರೊಫೈಲ್‌ಗಳನ್ನು ಖಾಸಗಿಯಾಗಿ ಇಟ್ಟುಕೊಂಡು ಅಪರಿಚಿತರ ಸ್ನೇಹ ವಿನಂತಿಗಳನ್ನು ಸ್ವೀಕರಿಸಬಾರದು. ನಕಲಿ ಪ್ರೀತಿ, ಡೇಟಿಂಗ್ ಆ್ಯಪ್‌ಗಳು ಹಾಗೂ ಮಾನವ ಕಳ್ಳಸಾಗಣೆ ಜಾಲಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಎಚ್ಚರಿಕೆ ನೀಡಿದರು.

ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ ಪ್ರತಿದಿನ ಕನಿಷ್ಠ ನಾಲ್ಕರಿಂದ ಆರು ಗಂಟೆಗಳ ಕಾಲ ಅಧ್ಯಯನಕ್ಕೆ ಮೀಸಲಿಡಬೇಕು. ಶ್ರಮ, ಶಿಸ್ತು ಹಾಗೂ ಗುರಿಯೊಂದಿಗೆ ಮುನ್ನಡೆದರೆ ಐಎಎಸ್, ಐಪಿಎಸ್, ನ್ಯಾಯಾಧೀಶರು, ವಕೀಲರು ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಸಾಧ್ಯ ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.

ಮಹಿಳೆಯರಿಗೆ ಗೌರವ ನೀಡುವ ಸಂಸ್ಕೃತಿ ಮನೆಯಲ್ಲಿಯೇ ಆರಂಭವಾಗಬೇಕು. “ಯತ್ರ ನಾರ್ಯಸ್ತು ಪೂಜ್ಯಂತೆ” ಎಂಬ ಮಾತು ಕೇವಲ ಪಠ್ಯಕ್ಕೆ ಸೀಮಿತವಾಗದೆ ಜೀವನದಲ್ಲಿ ಅಳವಡಿಕೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣ್ಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಸವರಾಜ ಈರಣ್ಣನವರ್ ಅವರ ತಂಡ ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು ಸ್ವಾಗತಿಸಿದರು. ಎಸ್.ಎಸ್. ಗೌಡರ್ ಕಾರ್ಯಕ್ರಮ ನಿರೂಪಿಸಿದರು.

“ಶಿಕ್ಷಣ ಮತ್ತು ಸ್ವಾವಲಂಬನೆಯೇ ವಿದ್ಯಾರ್ಥಿನಿಯರ ಮೊದಲ ಗುರಿಯಾಗಬೇಕು. ತಮ್ಮ ಕಾಲ ಮೇಲೆ ತಾವು ನಿಲ್ಲುವವರೆಗೆ ಪ್ರೀತಿ ಅಥವಾ ಮದುವೆಯಂತಹ ನಿರ್ಧಾರಗಳಿಗೆ ಮುಂದಾಗಬಾರದು.”

ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

ವಿದ್ಯಾರ್ಥಿ ಜೀವನವೇ ಭವಿಷ್ಯದ ಭದ್ರ ಬುನಾದಿ: ಪಿಎಸ್‌ಐ ನಾಗರಾಜ ಗಡಾದ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ನಿರ್ಣಾಯಕ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಆತ್ಮವಿಶ್ವಾಸ, ಶಿಸ್ತು ಮತ್ತು ಗುರಿಯೊಂದಿಗೆ ಮುನ್ನಡೆದರೆ ಯಶಸ್ಸು ಖಚಿತ ಎಂದು ಪಿಎಸ್‌ಐ ನಾಗರಾಜ ಗಡಾದ ಹೇಳಿದರು.

ಪಟ್ಟಣದ ಪುರಸಭೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ 2026-27ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ತಂದೆ-ತಾಯಿಗಳು ಮಕ್ಕಳ ಭವಿಷ್ಯಕ್ಕಾಗಿ ಅಪಾರ ತ್ಯಾಗ ಮಾಡುತ್ತಾರೆ. ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಶಿಸ್ತು, ಸಂಯಮ ಮತ್ತು ಸನ್ನಡತೆಯೊಂದಿಗೆ ಬದುಕಿದರೆ ಅದೇ ಪಾಲಕರಿಗೆ ಹಾಗೂ ಸಮಾಜಕ್ಕೆ ನೀಡುವ ಅತ್ಯುತ್ತಮ ಕೊಡುಗೆಯಾಗುತ್ತದೆ ಎಂದು ಹೇಳಿದರು.

ಕಾಲೇಜಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಸಾಧನೆಯ ಗುರಿಯೊಂದಿಗೆ ಮುನ್ನಡೆಯಬೇಕು. ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮನೋಭಾವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಚಾರ್ಯ ಎ.ವೈ. ಕಳ್ಳಿಮನಿ ಮಾತನಾಡಿ, ಪುರಸಭೆ ಪದವಿ ಪೂರ್ವ ಮಹಾವಿದ್ಯಾಲಯವು ಸುಮಾರು 76 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಇಲ್ಲಿಂದ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕಾಲೇಜಿನ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದ್ದು, ಮುಂದೆಯೂ ಇನ್ನಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು ರೂಪುಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ನೀಲಪ್ಪ ಗೊರವರ, ಯಶವಂತ ಸೂರಣಗಿ ಹಾಗೂ ಅನ್ನಪೂರ್ಣ ದುರ್ಗಣ್ಣವರ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ, ನೂತನ ವಿದ್ಯಾರ್ಥಿ ಸಂಸತ್ತಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಸ್.ಜಿ. ಹುಳಕನವರ, ಮಂಜುನಾಥ ಬೂದಿಹಾಳ, ಎಚ್.ಎಲ್. ಕೋರಿ, ಎಂ.ಎಲ್. ಬೋದ್ಲೆಖಾನ್, ಎಫ್.ಎಂ. ಚಕಾರದ, ಪಿ.ಡಿ. ದೇಶಪಾಂಡೆ, ಎಫ್.ಜಿ. ಕರೆಪ್ಪಗೌಡ್ರ, ಜಿ.ಪಿ. ಹಿರೇಮಠ, ಐ.ಎಂ. ಸಂಗಟಾಳೂರ, ಡಿ.ಎಂ. ಪೂಜಾರ, ಬಿ.ಜೆ. ಪಾಟೀಲ, ಎಂ.ಆರ್. ಬನ್ನಿಕೊಪ್ಪ ಸೇರಿದಂತೆ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ನಾಗವೇಣಿ ಶರಸೂರಿ, ನಾಗಲಕ್ಷ್ಮಿ ಪಾಟೀಲ ಹಾಗೂ ಪವಿತ್ರಾ ಕಿಳ್ಳಿಕ್ಯಾತರ ಕಾರ್ಯಕ್ರಮ ನಿರೂಪಿಸಿದರು.

“ಮೊಬೈಲ್‌ಗೆ ಮಿತಿ ಹಾಕಿ, ಗುರಿಗೆ ಗತಿ ಕೊಡಿ. ಶಿಸ್ತು, ಸಂಯಮ ಮತ್ತು ಪರಿಶ್ರಮವೇ ಯಶಸ್ಸಿನ ನಿಜವಾದ ಸೂತ್ರ.”

ನಾಗರಾಜ ಗಡಾದ, ಪಿಎಸ್‌ಐ

ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕಣ್ಣಿನ ಆರೋಗ್ಯ ತಪಾಸಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕೆಎಸ್‌ಆರ್‌ಟಿಸಿ ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿಯ ಕಣ್ಣಿನ ಆರೋಗ್ಯ ಕಾಪಾಡುವ ಮೂಲಕ ಸುರಕ್ಷಿತ ರಸ್ತೆ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಡಾ. ಮೆಹರವಾಡೆ ಕಣ್ಣಿನ ಆಸ್ಪತ್ರೆ ಹಾಗೂ ಮಾ. ಕುಷ್ಮಾಂಡಾ ಟ್ರಸ್ಟ್ ವತಿಯಿಂದ ‘ಮಿಷನ್ ನೇತ್ರ ಯಾತ್ರೆ’ ಅಭಿಯಾನವನ್ನು ಗದಗ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲಾಯಿತು.

ಅಭಿಯಾನದಡಿ ಜಿಲ್ಲೆಯ ಎಲ್ಲ ಕೆಎಸ್‌ಆರ್‌ಟಿಸಿ ಡಿಪೋಗಳಲ್ಲಿ ಉಚಿತ ಸಮಗ್ರ ನೇತ್ರ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಚಾಲಕರು, ನಿರ್ವಾಹಕರು, ಮೆಕ್ಯಾನಿಕ್‌ಗಳು, ಆಡಳಿತ ಸಿಬ್ಬಂದಿ ಸೇರಿದಂತೆ ಡಿಪೋದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಕಣ್ಣಿನ ಪರೀಕ್ಷೆ ನಡೆಸಲಾಯಿತು.

ದೀರ್ಘಕಾಲ ವಾಹನ ಚಾಲನೆ, ಧೂಳು, ಬಿಸಿಲು ಹಾಗೂ ನಿರಂತರ ಕೆಲಸದ ಒತ್ತಡದಿಂದ ಉಂಟಾಗುವ ದೃಷ್ಟಿ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವ ಉದ್ದೇಶದಿಂದ ಅನುಭವಿ ನೇತ್ರ ತಜ್ಞರು ಮತ್ತು ಆಪ್ಟೊಮೆಟ್ರಿಸ್ಟ್‌ಗಳು ಆಧುನಿಕ ಉಪಕರಣಗಳ ಮೂಲಕ ತಪಾಸಣೆ ನಡೆಸಿದರು. ಈ ವೇಳೆ ಹಲವರಲ್ಲಿ ದೃಷ್ಟಿದೋಷ, ಆರಂಭಿಕ ಹಂತದ ಮೋತಿಬಿಂದು, ಡ್ರೈ ಐ, ಅಲರ್ಜಿ ಹಾಗೂ ವಯೋಸಹಜ ಕಣ್ಣಿನ ಸಮಸ್ಯೆಗಳು ಪತ್ತೆಯಾಗಿದ್ದು, ಸೂಕ್ತ ಚಿಕಿತ್ಸೆ ಹಾಗೂ ವೈದ್ಯಕೀಯ ಸಲಹೆ ನೀಡಲಾಯಿತು.

ದೃಷ್ಟಿದೋಷ ಹೊಂದಿದ್ದ ಸಿಬ್ಬಂದಿಗೆ ಅಗತ್ಯ ಪವರ್‌ನ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಕನ್ನಡಕ ಧರಿಸಿದ ಬಳಿಕ ರಸ್ತೆ ಸೂಚನಾ ಫಲಕಗಳನ್ನು ಸ್ಪಷ್ಟವಾಗಿ ಗುರುತಿಸಲು ಹಾಗೂ ಸುರಕ್ಷಿತವಾಗಿ ವಾಹನ ಚಾಲನೆ ಮಾಡಲು ಅನುಕೂಲವಾಗಿದೆ ಎಂದು ಸಿಬ್ಬಂದಿ ಸಂತಸ ವ್ಯಕ್ತಪಡಿಸಿದರು.

ಶಿಬಿರದಲ್ಲಿ ಕಣ್ಣಿನ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮವೂ ನಡೆಯಿತು. ನಿಯಮಿತ ಕಣ್ಣಿನ ತಪಾಸಣೆಯ ಮಹತ್ವ, ವೈದ್ಯರ ಸಲಹೆಯಂತೆ ಕನ್ನಡಕ ಬಳಕೆ, ವಾಹನ ಚಾಲನೆಯ ವೇಳೆ ಕಣ್ಣಿನ ಒತ್ತಡ ಕಡಿಮೆ ಮಾಡಿಕೊಳ್ಳುವ ವಿಧಾನಗಳು, ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಿಂದ ದೃಷ್ಟಿ ರಕ್ಷಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಿಬ್ಬಂದಿಗೆ ಅರಿವು ಮೂಡಿಸಲಾಯಿತು.

ಉತ್ತಮ ದೃಷ್ಟಿಯು ಸುರಕ್ಷಿತ ವಾಹನ ಚಾಲನೆಯ ಮೂಲಾಧಾರವಾಗಿದ್ದು, ಈ ಅಭಿಯಾನದ ಮೂಲಕ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಆರೋಗ್ಯದ ಜೊತೆಗೆ ಸಾವಿರಾರು ಪ್ರಯಾಣಿಕರ ಸುರಕ್ಷತೆಯನ್ನೂ ಪರೋಕ್ಷವಾಗಿ ಕಾಪಾಡುವ ಕಾರ್ಯ ನಡೆದಿದೆ. ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿಯೂ ಇಂತಹ ಸಮುದಾಯ ನೇತ್ರ ಆರೈಕೆ ಕಾರ್ಯಕ್ರಮಗಳನ್ನು ವಿಸ್ತರಿಸುವುದಾಗಿ ಡಾ. ಮೆಹರವಾಡೆ ಕಣ್ಣಿನ ಆಸ್ಪತ್ರೆ ತಿಳಿಸಿದೆ.

ವಲಸೆ ತಡೆಯಲು ‘ವ್ಹಿಬಿಜಿರಾಮ್’ ಉದ್ಯೋಗದ ಭರವಸೆ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಗ್ರಾಮೀಣ ಕೂಲಿಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಿ ವಲಸೆ ತಡೆಯುವ ಉದ್ದೇಶದಿಂದ ಜುಲೈ 1ರಿಂದ ಜಾರಿಗೆ ಬಂದಿರುವ ವ್ಹಿಬಿಜಿರಾಮ್ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್) ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗ ನೀಡಲಾಗುವುದು ಎಂದು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ನಿರೀಕ್ಷಿತ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಕೂಲಿಕಾರ್ಮಿಕರು ವಲಸೆ ಹೋಗದಂತೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಉದ್ಯೋಗ ಬಯಸುವ ಕಾರ್ಮಿಕರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ–6ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಕೆಲಸ ನೀಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದ್ದು, ನಿಗದಿತ ಅವಧಿಯಲ್ಲಿ ಕೆಲಸ ದೊರೆಯದಿದ್ದರೆ ನಿರುದ್ಯೋಗ ಭತ್ಯೆ ನೀಡಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯೋಜನೆಯಡಿ ಕಾಲುವೆ ಸ್ವಚ್ಛತೆ, ಕೆರೆ ಅಭಿವೃದ್ಧಿ, ಸಸಿ ನೆಡುವುದು, ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ 318 ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಪ್ರತಿ ಕೂಲಿಕಾರ್ಮಿಕರಿಗೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, 125 ದಿನ ಕೆಲಸ ಮಾಡಿದರೆ ₹47,750 ಕೂಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವ ಕಾರ್ಮಿಕರು ತಮ್ಮ ಕಾಯಕಬಂಧು (ಮೇಟ್) ಮೂಲಕ ಹೆಸರು ನೋಂದಾಯಿಸಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು. ಹೊಸ ಗ್ರಾಮೀಣ ಉದ್ಯೋಗ ಕಾರ್ಡ್‌ಗಳು ವಿತರಿಸುವವರೆಗೆ ಹಳೆಯ ನರೇಗಾ ಜಾಬ್ ಕಾರ್ಡ್‌ಗಳೇ ಮಾನ್ಯವಾಗಿರಲಿದ್ದು, ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಯಲ್ಲಿ ಹೆಸರು ನೋಂದಾಯಿಸಿ ಹೊಸ ಕಾರ್ಡ್ ಪಡೆಯಬಹುದಾಗಿದೆ ಎಂದು ಶ್ರೀಧರ್ ಚಿನಗುಂಡಿ ತಿಳಿಸಿದ್ದಾರೆ.

ಸೃಜನಶೀಲ ಮಕ್ಕಳೇ ಸಮಾಜದ ನಿಜವಾದ ಶಕ್ತಿ: ಡಾ. ನಿಂಗು ಸೊಲಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶರಣರ ವಚನಗಳು ನಮ್ಮೊಳಗಿನ ಅವಗುಣಗಳನ್ನು ತೊಡೆದು ಜಾಗೃತ ಮನಸ್ಸಿನ ಬದುಕಿಗೆ ದಾರಿ ತೋರಿಸುತ್ತವೆ. ವಚನ ಸಾಹಿತ್ಯ, ಕಾಯಕ, ದಾಸೋಹ ಹಾಗೂ ಅನುಭಾವ ಮಂಟಪದಂತಹ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನೀಡಿದ ಶರಣ ಸಂಸ್ಕೃತಿಯೇ ಕನ್ನಡಿಗರ ಅಸ್ಮಿತೆಯಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ರಂಗಕರ್ಮಿ ಡಾ. ನಿಂಗು ಸೊಲಗಿ ಹೇಳಿದರು.

ಗದಗ ತಾಲೂಕಿನ ಹೊಸಳ್ಳಿ ಗ್ರಾಮದ ಬೂದೀಶ್ವರ ಮಠದಲ್ಲಿ ಶನಿವಾರ ನಡೆದ 2ನೇ ಮಕ್ಕಳ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾತನಾಡಿದ ಅವರು, ಶರಣರ ‘ಇವ ನಮ್ಮವ’ ಎಂಬ ಸಮಾನತೆಯ ತತ್ವ, ಪಂಪ ಹಾಗೂ ಕನಕದಾಸರಂತಹ ಮಹಾಕವಿಗಳ ಸಂದೇಶ ಕನ್ನಡ ಸಾಹಿತ್ಯದುದ್ದಕ್ಕೂ ಸಾಮರಸ್ಯದ ಮೌಲ್ಯಗಳನ್ನು ಬಿತ್ತಿದೆ ಎಂದು ಹೇಳಿದರು.

ಮೇವುಂಡಿ ಮಲ್ಲಾರಿಯವರಂತಹ ಸಾಹಿತಿಗಳು ತಮ್ಮ ಕೃತಿಗಳ ಮೂಲಕ ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಮಾನವೀಯತೆಯ ಧ್ವನಿ ಎತ್ತಿದ್ದಾರೆ. ಮಕ್ಕಳಲ್ಲಿ ಇಂತಹ ಸಂವೇದನೆಗಳನ್ನು ಬೆಳೆಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಪಂಡಿತ ಪರಂಪರೆ, ಜನಪದ ಪರಂಪರೆ ಹಾಗೂ ವಚನ-ದಾಸ ಪರಂಪರೆ ಎಂಬ ಮೂರು ಪ್ರಮುಖ ಧಾರೆಗಳಿವೆ. ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ವಚನ ಸಾಹಿತ್ಯ, ಕೃಷಿ ಸಂಸ್ಕೃತಿ ಹಾಗೂ ದಾಸೋಹ ತತ್ವಗಳನ್ನು ಅವರ ವಯೋಮಾನಕ್ಕೆ ತಕ್ಕಂತೆ ಕಥೆ, ನಾಟಕ ಹಾಗೂ ವಾಚಿಕೆಯ ಮೂಲಕ ಪರಿಚಯಿಸಬೇಕಿದೆ ಎಂದು ಹೇಳಿದರು.

ಇಂದಿನ ಪರೀಕ್ಷಾ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಮಕ್ಕಳಲ್ಲಿರುವ ಸಹಜ ಕುತೂಹಲ ಮತ್ತು ಸೃಜನಶೀಲತೆಯನ್ನು ಕುಂಠಿತಗೊಳಿಸುತ್ತಿದೆ. ಮಕ್ಕಳು ಕೇವಲ ಅಂಕ ಗಳಿಸುವ ಯಂತ್ರಗಳಲ್ಲ; ಅವರಲ್ಲಿರುವ ಪ್ರತಿಭೆ ಮತ್ತು ಸಂವೇದನೆಗಳನ್ನು ಗುರುತಿಸಿ ಬೆಳೆಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಪಬ್‌ಜಿ ಸೇರಿದಂತೆ ಹಿಂಸಾತ್ಮಕ ವಿಡಿಯೊ ಗೇಮ್‌ಗಳ ಬದಲಿಗೆ ಮಕ್ಕಳಿಗೆ ಜಾನಪದ ಆಟಗಳ ಪರಿಚಯ ಮಾಡಿಕೊಡಬೇಕು. ಇಂತಹ ಆಟಗಳು ಸಾಂಘಿಕ ಮನೋಭಾವ, ಪರಿಸರ ಪ್ರಜ್ಞೆ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸುತ್ತವೆ ಎಂದು ಹೇಳಿದರು.

ಮಕ್ಕಳ ಸಾಹಿತ್ಯದಲ್ಲಿ ಹಳೆಯ ಮೌಲ್ಯಗಳ ಪುನರ್‌ಮೌಲ್ಯಮಾಪನ ಅಗತ್ಯವಾಗಿದೆ. “ಕಣ್ತೆರೆದು ನೋಡು, ಕಿವಿಗೊಟ್ಟು ಕೇಳು, ಬಾಯ್ತೆರೆದು ಹೇಳು” ಎಂಬ ಜಾಗೃತ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸಬೇಕು. ಶಿಕ್ಷಣ ಕೇವಲ ಪರೀಕ್ಷೆಗೆ ಸೀಮಿತವಾಗದೆ, ಪೋಷಕರು, ಶಿಕ್ಷಕರು ಹಾಗೂ ಮಕ್ಕಳು ಸೃಜನಶೀಲ ಚಿಂತನೆಯತ್ತ ಸಾಗುವ ವಾತಾವರಣ ನಿರ್ಮಾಣವಾಗಬೇಕು ಎಂದು ಕರೆ ನೀಡಿದರು.

“ಮಕ್ಕಳು ಬರಿದಾದ ಬಿಳಿ ಹಾಳೆಯಲ್ಲ; ಅವರಲ್ಲಿರುವ ಸೃಜನಶೀಲತೆ, ಕುತೂಹಲ ಮತ್ತು ಸಂವೇದನೆಗಳನ್ನು ಬೆಳೆಸಿದಾಗ ಮಾತ್ರ ಸಮಾಜದ ಭವಿಷ್ಯ ಉಜ್ವಲವಾಗುತ್ತದೆ.”

– ಡಾ. ನಿಂಗು ಸೊಲಗಿ, ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಅಂಚೆ ಸೇವೆಗೆ ಡಿಜಿಟಲ್ ವೇಗ!

0

ವಿಜಯಸಾಕ್ಷಿ ಸುದ್ದಿ, ಗದಗ: ನಗರ ಪ್ರದೇಶಗಳಲ್ಲಿ ಅಂಚೆ ಸೇವೆಯನ್ನು ಇನ್ನಷ್ಟು ವೇಗವಾಗಿ, ಪಾರದರ್ಶಕವಾಗಿ ಹಾಗೂ ಗ್ರಾಹಕ ಸ್ನೇಹಿಯಾಗಿ ರೂಪಿಸುವ ಉದ್ದೇಶದಿಂದ ಗದಗ ನಗರದಲ್ಲಿ ಭಾರತೀಯ ಅಂಚೆ ಇಲಾಖೆಯ ನೂತನ ಸ್ವತಂತ್ರ ವಿತರಣಾ ಕೇಂದ್ರವನ್ನು ಶನಿವಾರ ಉದ್ಘಾಟಿಸಲಾಯಿತು.

ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಗದಗ ವಿಭಾಗೀಯ ಅಂಚೆ ಅಧೀಕ್ಷಕ ಎಸ್.ಎಸ್. ಶಿರಹಟ್ಟಿ, ನಗರಗಳು ಹಾಗೂ ಪಕ್ಕದ ಪ್ರದೇಶಗಳಲ್ಲಿ ಬುಕ್ ಆಗುವ ಪಾರ್ಸೆಲ್‌ಗಳನ್ನು ಗ್ರಾಹಕರಿಗೆ ಅದೇ ದಿನ ತಲುಪಿಸುವಲ್ಲಿ ಸ್ವತಂತ್ರ ವಿತರಣಾ ಕೇಂದ್ರಗಳು ಮಹತ್ವದ ಪಾತ್ರವಹಿಸಲಿವೆ ಎಂದು ಹೇಳಿದರು.

ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರ್ಟ್ ಭಾರತೀಯ ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ಗ್ರಾಹಕರಿಗೆ ಪಾರ್ಸೆಲ್ ಸೇವೆ ಇನ್ನಷ್ಟು ಸುಲಭವಾಗಿ ಹಾಗೂ ವೇಗವಾಗಿ ತಲುಪಲಿದೆ. ತಂತ್ರಜ್ಞಾನದ ಅಳವಡಿಕೆ, ಸಿಬ್ಬಂದಿಯ ದಕ್ಷತೆ ಹಾಗೂ ಗ್ರಾಹಕ ಕೇಂದ್ರಿತ ಸೇವೆಯಿಂದ ಭಾರತೀಯ ಅಂಚೆ ಇಲಾಖೆ ಮತ್ತಷ್ಟು ಜನಪ್ರಿಯ ಸೇವಾ ಸಂಸ್ಥೆಯಾಗಿ ಬೆಳೆಯಲಿದೆ ಎಂದು ತಿಳಿಸಿದರು.

ಗ್ರಾಹಕರ ಅನುಕೂಲಕ್ಕಾಗಿ ಒಟಿಪಿ ಆಧಾರಿತ ಸುರಕ್ಷಿತ ವಿತರಣೆ, ಆನ್‌ಲೈನ್ ಪಾವತಿ, ಎಸ್‌ಎಂಎಸ್ ಅಧಿಸೂಚನೆ ಸೇರಿದಂತೆ ಹಲವು ಆಧುನಿಕ ಸೇವೆಗಳನ್ನು ಅಂಚೆ ಇಲಾಖೆ ಜಾರಿಗೆ ತಂದಿದೆ ಎಂದು ವಿವರಿಸಿದರು.

ಗದಗ ಉಪ ವಿಭಾಗದ ವಿನೋದಕುಮಾರ ಮೇದಾರ ಮಾತನಾಡಿ, ಭಾರತೀಯ ಅಂಚೆ ಇಲಾಖೆಯ ಆಧುನೀಕರಣದ ಭಾಗವಾಗಿ ಆರಂಭಿಸಿರುವ ಸ್ವತಂತ್ರ ವಿತರಣಾ ಕೇಂದ್ರವು ಗ್ರಾಹಕರಿಗೆ ಗುಣಮಟ್ಟದ ಮತ್ತು ತ್ವರಿತ ಸೇವೆ ಒದಗಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಭಾರತೀಯ ಅಂಚೆ ಇಲಾಖೆ ಕೇವಲ ಸರ್ಕಾರಿ ಸಂಸ್ಥೆಯಲ್ಲ, ಅದು ದೇಶದ ಭಾವನಾತ್ಮಕ ಕೊಂಡಿಯಾಗಿದ್ದು, ಖಾಸಗಿ ಸಂಸ್ಥೆಗಳು ತಲುಪದ ಪ್ರದೇಶಗಳಲ್ಲಿಯೂ ಜನಸೇವೆ ಮಾಡುತ್ತಿರುವ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಹೇಳಿದರು.

ರೋಣ ಉಪ ವಿಭಾಗದ ಅಂಚೆ ನಿರೀಕ್ಷಕ ವೆಂಕಟೇಶರೆಡ್ಡಿ ಕೊಳ್ಳಿ, ಐಡಿಸಿ ಮೇಲ್ವಿಚಾರಕ ಡಿ.ಜಿ. ಮ್ಯಾಗೇರಿ ಮಾತನಾಡಿದರು. ಪ್ರಧಾನ ಅಂಚೆ ಪಾಲಕ ಲಕ್ಷ್ಮಣ ಅಸುಂಡಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಪ ಅಂಚೆ ಪಾಲಕರಾದ ಮಂಜುನಾಥ ಕುರಿಯವರ, ಶರಣಪ್ಪ ನಾಯ್ಕರ, ಶಂಕರ ಕುಬ್ಬಳ್ಳಿ, ಬಸವರಾಜ ಶೇಡದ, ಮನೋಹರ ಕಡಿಯವರ ಸೇರಿದಂತೆ ಅಂಚೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೇಘನಾ ಕುಲಕರ್ಣಿ ಪ್ರಾರ್ಥಿಸಿದರು. ಅಂಚೆ ಸಹಾಯಕ ಎಂ.ಟಿ. ಕರಿಗಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

“ಗದಗ-ಬೆಟಗೇರಿ ಅವಳಿ ನಗರದ ಎಲ್ಲಾ ಅಂಚೆ ಪತ್ರಗಳು ಮತ್ತು ಪಾರ್ಸೆಲ್‌ಗಳನ್ನು ಗ್ರಾಹಕರಿಗೆ ತ್ವರಿತವಾಗಿ ತಲುಪಿಸಲು ಒಂದೇ ಸೂರಿನಡಿ 39 ಅಂಚೆ ಬಟವಾಡೆ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಶೇ.100ರಷ್ಟು ಅಂಚೆ ಬಟವಾಡೆಗೆ ಆದ್ಯತೆ ನೀಡಲಾಗುವುದು.”

ಎಸ್.ಎಸ್. ಶಿರಹಟ್ಟಿ, ಗದಗ ವಿಭಾಗೀಯ ಅಂಚೆ ಅಧೀಕ್ಷಕರು

ದಲಿತರ ಸಮಸ್ಯೆಗಳಿಗೆ ಶೀಘ್ರ ನ್ಯಾಯ ಒದಗಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ವಾಯ್. ಹುಬ್ಬಳ್ಳಿ, ಗದಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸಮಸ್ಯೆ, ಪೌರ ಕಾರ್ಮಿಕರ ಸಮಸ್ಯೆ, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು, ದೇವದಾಸಿಯರ ಸಮಸ್ಯೆ ಸೇರಿದಂತೆ ರಾಜ್ಯದಾದ್ಯಂತ ದಲಿತ ಸಮುದಾಯ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿಯಲ್ಲಿ ಎಸ್‌.ಸಿ./ಎಸ್‌.ಟಿ. ಸಮುದಾಯದ ಸಮಸ್ಯೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗವನ್ನು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜೈ ಭೀಮ್ ಸಂಘರ್ಷ ಸಮಿತಿಯ ಉಪಾಧ್ಯಕ್ಷ ಮಂಜುನಾಥ ಎಫ್. ತೌಜಲ್, ರೋಣ ತಾಲೂಕು ಅಧ್ಯಕ್ಷ ಬಸವರಾಜ ಬದಾಮಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಾಷ್ಟ್ರೀನ್ ಜೋಸೆಪ್, ಉಪಾಧ್ಯಕ್ಷ ರಾಜೇಶ ವಿ. ಶೆಟ್ಟರ್, ಯುವ ಘಟಕದ ಜಿಲ್ಲಾಧ್ಯಕ್ಷ ಇಮಾಮಹುಸೇನ ಕುನ್ನಿಬಾವಿ, ಕಾರ್ಯದರ್ಶಿ ಸಮೀರ ಅಹ್ಮದ್ ಕುನ್ನಿಬಾವಿ, ಬಾಬು ಬಳ್ಳಾರಿ, ಮಂಜುನಾಥ ಸಂದಿಮನಿ, ಯುವ ಘಟಕದ ಅಧ್ಯಕ್ಷ ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ಹೇಮಂತ ಹುಬ್ಬಳ್ಳಿ, ವಿರುಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ, ಮಲ್ಲೇಶ ಮೇಳದಾಳಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಜಿ ಸಚಿವ ಮುರುಗೇಶ ನಿರಾಣಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 73ನೇ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಗದಗ ನಗರಕ್ಕೆ ಆಗಮಿಸಿದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಕಂಬಳಿ ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಬಿಜೆಪಿ ಪ್ರಕೊಷ್ಠಗಳ ಸಹ ಸಂಯೋಜಕ ರಮೇಶ ಎನ್. ಸಜ್ಜಗಾರ, ಕುರುಬ ಸಮಾಜದ ಮುಖಂಡ ಶಿವು ಡಂಬಳ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ರಾಜು ಕುರುಡಗಿ, ಬಿಜೆಪಿ ಮುಖಂಡ ಭೀಮಸಿಂಗ್ ರಾಠೋಡ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ನಿವೃತ್ತ ಶಿಕ್ಷಕರಾದ ಚಂದ್ರಶೇಖರ ಜೋರಗಸ್ತಿ, ಗುಡದಪ್ಪ ಹಂಚಿನಾಳ, ಆನಂದ ಬೋಸಗಿ, ಮಂಜುನಾಥ ಶಾಂತಗೇರಿ, ರವಿ ಮಾನ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದ್ಯಮಿಗಳಿಗೆ ಕರ್ನಾಟಕದಲ್ಲಿ ಪ್ರೋತ್ಸಾಹವೇ ಇಲ್ಲ: ಮುರುಗೇಶ ನಿರಾಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ಗೋವಿನಜೋಳ ಆಧಾರಿತ ₹6 ಸಾವಿರ ಕೋಟಿ ವೆಚ್ಚದ ಇಥೆನಾಲ್ ಉತ್ಪಾದನಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಯೋಜನೆಯನ್ನು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಆರೋಪಿಸಿದರು.

ನಗರದ ರೋಟರಿ ವೃತ್ತದ ಮಾನ್ವಿ ಕಟ್ಟಡದಲ್ಲಿ ವಿಜಯ ಎಂಆರ್‌ಎನ್ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ನಿಯಮಿತದ 73ನೇ ಶಾಖೆ ಉದ್ಘಾಟನೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪಿಸಲು ಉದ್ಯಮಿಗಳಿಗೆ ಅಗತ್ಯ ಬೆಂಬಲ ಮತ್ತು ಪ್ರೋತ್ಸಾಹ ದೊರೆಯುತ್ತಿಲ್ಲ. ಇದೇ ಕಾರಣಕ್ಕೆ ಇತರೆ ರಾಜ್ಯಗಳು ಭೂಮಿ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಿ ಬಂಡವಾಳ ಹೂಡಿಕೆಗಳನ್ನು ಸೆಳೆಯುತ್ತಿವೆ. ಪರಿಣಾಮ ರಾಜ್ಯದ ರೈತರು ಮತ್ತು ಯುವಕರಿಗೆ ದೊರೆಯಬೇಕಿದ್ದ ಉದ್ಯೋಗಾವಕಾಶಗಳು ಹೊರರಾಜ್ಯಗಳಿಗೆ ವರ್ಗವಾಗುತ್ತಿವೆ ಎಂದು ಹೇಳಿದರು.

ರಾಜ್ಯ ಸರ್ಕಾರ ವಿದೇಶಿ ಉದ್ಯಮಿಗಳನ್ನು ಆಹ್ವಾನಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ಕನ್ನಡಿಗ ಉದ್ಯಮಿಗಳಿಗೆ ಸೂಕ್ತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಅವರು ಟೀಕಿಸಿದರು.

ನಿರಾಣಿ ಗ್ರೂಪ್ ದೇಶದ ಅಗ್ರ ಸಕ್ಕರೆ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರತಿದಿನ 30 ಲಕ್ಷ ಲೀಟರ್ ಇಥೆನಾಲ್ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಗ್ರೀನ್ ಹೈಡ್ರೋಜನ್, ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿಬಿಜಿ), ಶಿಕ್ಷಣ, ಸಿಮೆಂಟ್ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದು, ಬಿಹಾರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಹೊಸ ಯೋಜನೆಗೆ ಸರ್ಕಾರದಿಂದ ಉತ್ತಮ ಪ್ರೋತ್ಸಾಹ ದೊರೆಯುತ್ತಿದೆ ಎಂದರು.

ಮೆಕ್ಕೆಜೋಳ, ಕಬ್ಬು ಹಾಗೂ ಅಕ್ಕಿಯಿಂದ ಇಥೆನಾಲ್ ಉತ್ಪಾದನೆಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದೆ. ಅದರ ಉಪ ಉತ್ಪನ್ನ ಜಾನುವಾರುಗಳಿಗೆ ಗುಣಮಟ್ಟದ ಆಹಾರವಾಗಲಿದ್ದು, ಹಾಲಿನ ಉತ್ಪಾದನೆಯೂ ಹೆಚ್ಚಲಿದೆ. ಇಥೆನಾಲ್ ಮಿಶ್ರಿತ ಇಂಧನದಿಂದ ಕಚ್ಚಾ ತೈಲ ಆಮದು ವೆಚ್ಚ ಕಡಿಮೆಯಾಗುವುದರೊಂದಿಗೆ ದೇಶದ ಆರ್ಥಿಕತೆಗೆ ಲಾಭವಾಗಲಿದೆ ಎಂದು ಹೇಳಿದರು.

ಬರ ಪರಿಸ್ಥಿತಿ: ಸಾಲ ಮನ್ನಾಗೆ ಆಗ್ರಹ

ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆಗಳು ಹಾನಿಗೀಡಾಗಿದ್ದು, ಅನೇಕ ಕಡೆ ಕೃಷಿ ಭೂಮಿಯೇ ಖಾಲಿ ಉಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ವಿಜಯಕುಮಾರ್ ಗಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕರ್ನಾಟಕದಲ್ಲಿ ಅನುಮತಿ ಸಿಗದ ಕಾರಣ ₹6 ಸಾವಿರ ಕೋಟಿ ಇಥೆನಾಲ್ ಯೋಜನೆಯನ್ನು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಿದ್ದೇವೆ. ರಾಜ್ಯ ಸರ್ಕಾರ ಸ್ಥಳೀಯ ಉದ್ಯಮಿಗಳಿಗೂ ಸಮಾನ ಪ್ರೋತ್ಸಾಹ ನೀಡಬೇಕು.”

– ಮುರುಗೇಶ ನಿರಾಣಿ, ಮಾಜಿ ಸಚಿವ

2028ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ

2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ಯಾರೇ ಆಗಿದ್ದರೂ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಾಗುವುದು. ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದ ಮುಖ್ಯವಾಹಿನಿಗೆ ಬಂದರೆ ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ. ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರೂ ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.