ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಿರುವ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿ ಗಡಿಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ಅರ್ಜಿದಾರರು ಹೋರಾಟ ನಡೆಸಿದ್ದು, ಇದೇ ಕಾರಣಕ್ಕೆ ಅವರ ವಿರುದ್ಧ ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಾದಿಸಿದರು.
ಹಿಂದಿನ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದರೂ, ಹೊಸದಾಗಿ ಹೊರಡಿಸಿದ ಆದೇಶವೂ ಕಾನೂನು ನಿಯಮಗಳಿಗೆ ವಿರುದ್ಧವಾಗಿದೆ. ಅರ್ಜಿದಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಮತ್ತು ಗಡಿಪಾರು ಆದೇಶದ ನಡುವೆ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.
ಮಹೇಶ್ ಶೆಟ್ಟಿ ವಿರುದ್ಧ ಒಟ್ಟು 26 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 16 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎರಡು ಪ್ರಕರಣಗಳು ವಿಚಾರಣೆಯಲ್ಲಿದ್ದು, ಎಂಟು ಪ್ರಕರಣಗಳು ತನಿಖಾ ಹಂತದಲ್ಲಿವೆ. ಇತ್ತೀಚಿನ ಐದು ಕ್ಷುಲ್ಲಕ ಪ್ರಕರಣಗಳನ್ನು ಆಧರಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಅರ್ಜಿದಾರರ ಚಟುವಟಿಕೆಗಳಿಂದ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಪುರಾವೆ ಇಲ್ಲ. ಆದ್ದರಿಂದ ಗಡಿಪಾರು ಆದೇಶ ದುರುದ್ದೇಶಪೂರ್ವಕವಾಗಿದೆ ಮತ್ತು ಅದನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಹೇಶ್ ಶೆಟ್ಟಿ ಹಲವು ಬಾರಿ ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡಿದ್ದಾರೆ. ಇತ್ತೀಚೆಗೆ ಏಪ್ರಿಲ್ 13 ಮತ್ತು 15ರಂದು ಹೊಸ ಪ್ರಕರಣಗಳೂ ದಾಖಲಾಗಿವೆ ಎಂದು ತಿಳಿಸಿದರು.
ಅರ್ಜಿದಾರರ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ, ಗಡಿಪಾರು ಕ್ರಮದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಆಗಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಸರ್ಕಾರ ಪರವಾಗಿ ವಾದಿಸಲಾಯಿತು.
ಎರಡೂ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಏಪ್ರಿಲ್ 29ಕ್ಕೆ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿದೆ. ಅಷ್ಟರವರೆಗೆ ಗಡಿಪಾರು ಆದೇಶ ಜಾರಿಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ.

