ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಪ್ರತಿಯೊಬ್ಬರೂ ಜಾತಿ, ಮತ, ಧರ್ಮಗಳ ಗಡಿಯನ್ನು ಮೀರಿ ಸೌಹಾರ್ದತೆಯಿಂದ ಬದುಕಿದಾಗ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ ಎಂದು ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಹೇಳಿದರು.
ಕಾಲೇಜಿನ ಐಕ್ಯುಎಸಿ, ರೆಡ್ಕ್ರಾಸ್, ಎನ್ಎಸ್ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಜನರು ಬಹುತ್ವದ ಭಾರತದ ಸಾಂವಿಧಾನಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಗೌರವಿಸಬೇಕು. ಜಾತಿ, ಮತ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮನೋಭಾವದಿಂದ ದೂರವಿದ್ದು, ಪರಸ್ಪರ ಗೌರವ, ಸಹಕಾರ ಹಾಗೂ ಸಹೋದರತ್ವದೊಂದಿಗೆ ಬದುಕುವ ಮೂಲಕ ದೇಶದ ಏಕತೆ ಮತ್ತು ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ರೆಡ್ಕ್ರಾಸ್ ಘಟಕದ ಸಂಯೋಜಕ ಭೀಮೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಸದ್ಭಾವನಾ ದಿನದ ಮಹತ್ವ ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯನ್ನು ಕಾಪಾಡುವಲ್ಲಿ ಯುವಜನರ ಪಾತ್ರದ ಕುರಿತು ವಿವರಿಸಿದರು.
ಎನ್ಎಸ್ಎಸ್ ಘಟಕದ ಸಂಯೋಜಕ ವಿಜಯಕುಮಾರ ಎಸ್. ಅವರು ಸದ್ಭಾವನಾ ದಿನಾಚರಣೆಯ ಆಶಯದಂತೆ ಹಿಂಸೆಯನ್ನು ತ್ಯಜಿಸಿ, ದೇಶದ ಒಗ್ಗಟ್ಟು, ಶಾಂತಿ ಹಾಗೂ ಸಹೋದರತೆಯನ್ನು ಎತ್ತಿಹಿಡಿಯುವ ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಹ ಸಂಚಾಲಕ ಡಾ. ಮಂಜುನಾಥ ತ್ಯಾಲಗಡಿ, ಕಲಾ ವಿಭಾಗದ ಮುಖ್ಯಸ್ಥೆ ಮಹಾನಂದ ಹಿರೇಮಠ, ಇತಿಹಾಸ ಉಪನ್ಯಾಸಕ ಬಸವಂತಪ್ಪ ದೊಡ್ಡಮನಿ, ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹಾಂತೇಶ, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಹುಸೇನಭಾಷಾ, ನವೀನ ಮರಿಗೌಡರ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

