ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಗಂಭೀರ ಆರೋಪ ಮಾಡಿದ್ದು, ಮಠದ ಮೂವರು ಟ್ರಸ್ಟಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮೂವರು ಸದಸ್ಯರಿಂದ ಜೀವ ಬೆದರಿಕೆ ಮತ್ತು ಮಾನಸಿಕ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ.
ನಗರದ ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾವುದೇ ಕ್ಷಣದಲ್ಲಾದರೂ ನನ್ನ ಮೇಲೆ ಹಲ್ಲೆ ನಡೆಯುವ ಸಾಧ್ಯತೆಯಿದೆ. ನನಗೆ ಏನಾದರೂ ಅನಾಹುತವಾದರೆ ಅದಕ್ಕೆ ಈ ಆರು ಜನರೇ ಹೊಣೆ” ಎಂದು ಆತಂಕ ವ್ಯಕ್ತಪಡಿಸಿದರು.
ಮಠದ ಆರ್ಥಿಕ ವ್ಯವಹಾರಗಳ ಕುರಿತು ಮಾತನಾಡಿದ ಕಲ್ಲಯ್ಯಜ್ಜನವರು, “ನಾನು ಪೀಠಾಧಿಪತಿಯಾದಾಗ ಆಶ್ರಮಕ್ಕೆ 59 ಲಕ್ಷ ರೂ. ಸಾಲವಿತ್ತು. ಅದನ್ನು ಸಂಪೂರ್ಣ ತೀರಿಸಿ, ಈಗ 4 ಕೋಟಿಗೂ ಅಧಿಕ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸಿದ್ದೇನೆ. ದೇಣಿಗೆಯಾಗಿ ಬಂದ ಪ್ರತಿಯೊಂದು ರೂಪಾಯಿಗೂ ಲೆಕ್ಕ ಇಟ್ಟಿದ್ದೇನೆ. ಎಲ್ಲ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನಿರ್ವಹಿಸಿದ್ದೇನೆ” ಎಂದು ಹೇಳಿದರು.
ಇದೇ ವಿಚಾರ ಕೆಲವರಿಗೆ ಅಸಮಾಧಾನ ಉಂಟುಮಾಡಿದೆ ಎಂದು ಆರೋಪಿಸಿದ ಅವರು, “ಟ್ರಸ್ಟಿಯೊಬ್ಬರು ನನಗೆ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿದರು. ಮಠದ ಹಣವನ್ನು ವೈಯಕ್ತಿಕವಾಗಿ ನೀಡಲು ನಾನು ನಿರಾಕರಿಸಿದ್ದರಿಂದ ನನ್ನ ವಿರುದ್ಧ ಸುಳ್ಳು ಆರೋಪ, ಅಪಪ್ರಚಾರ ನಡೆಸಿ ತೇಜೋವಧೆಗೆ ಯತ್ನಿಸುತ್ತಿದ್ದಾರೆ” ಎಂದು ದೂರಿದರು.
“ಅನೇಕ ವರ್ಷಗಳಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಈಗ ಭಕ್ತರು ಹಾಗೂ ಟ್ರಸ್ಟ್ ಸಮಿತಿಯ ಗಮನಕ್ಕೆ ತರಲು ಮಾಧ್ಯಮಗಳ ಮುಂದೆ ಬಂದಿದ್ದೇನೆ. ಈ ಸಂಬಂಧ ಶೀಘ್ರದಲ್ಲೇ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸುತ್ತೇನೆ” ಎಂದು ತಿಳಿಸಿದರು.
ಇದೇ ವೇಳೆ, “ನನ್ನ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ ಪೀಠ ತ್ಯಾಗಕ್ಕೂ ನಾನು ಸಿದ್ಧ” ಎಂದು ಘೋಷಿಸಿದ ಕಲ್ಲಯ್ಯಜ್ಜನವರು, ಆರೋಪಗಳಿಂದ ಮನನೊಂದು ಸುದ್ದಿಗೋಷ್ಠಿಯಲ್ಲೇ ಭಾವುಕರಾಗಿ ಕಣ್ಣೀರು ಹಾಕಿದರು.

