ಮಂಗಳೂರು: ಗೇರು ಬೆಳೆಗಾರರಿಗೆ ಹೊಸ ಭರವಸೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮಂಗಳೂರಿನಲ್ಲಿ ನಡೆದ ಗೇರು ಮೇಳದಲ್ಲಿ ಮಾತನಾಡಿದ ಸಚಿವ ಈಶ್ವರ್ ಬಿ ಖಂಡ್ರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗೇರು ಕೃಷಿಗೆ ಉತ್ತೇಜನ ನೀಡಲು ₹1 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನರ್ಸರಿಗಳಲ್ಲೇ ಉನ್ನತ ಗುಣಮಟ್ಟದ ಕಸಿ ಮಾಡಿದ ಗೋಡಂಬಿ ಸಸಿಗಳನ್ನು ಬೆಳೆಸಿ ರೈತರಿಗೆ ಕಡಿಮೆ ದರದಲ್ಲಿ ಪೂರೈಸಲು ಸರ್ಕಾರ ಮುಂದಾಗಿದೆ. ಎಂಡೋಸಲ್ಫಾನ್ ದುರಂತದ ಬಳಿಕ ಕುಸಿದಿದ್ದ ಗೇರು ಕೃಷಿಯನ್ನು ಮತ್ತೆ ಲಾಭದಾಯಕವಾಗಿಸಲು ಸರ್ಕಾರ ವಿಶೇಷ ಯೋಜನೆ ರೂಪಿಸಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಗೇರು ಉತ್ಪಾದನೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಕಚ್ಚಾ ಗೋಡಂಬಿ ಆಮದು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಕಷ್ಟ ನಿವಾರಣೆಗೆ ರೈತರಿಗೆ ತಾಂತ್ರಿಕ ಮಾರ್ಗದರ್ಶನ, ಮೌಲ್ಯವರ್ಧನೆ ಮತ್ತು ಸಬ್ಸಿಡಿ ಸಸಿ ವಿತರಣೆಗೆ ಒತ್ತು ನೀಡಲಾಗುತ್ತಿದೆ. ಗೇರು ಕ್ಷೇತ್ರದಲ್ಲಿ ಕರ್ನಾಟಕವನ್ನು ಮತ್ತೆ ಬಲಿಷ್ಠ ರಾಜ್ಯವನ್ನಾಗಿಸುವ ಗುರಿ ಸರ್ಕಾರದದ್ದಾಗಿದೆ ಎಂದು ಖಂಡ್ರೆ ಹೇಳಿದರು.
ಪಶ್ಚಿಮಘಟ್ಟಗಳ ಸಂರಕ್ಷಣೆ ಕುರಿತು ಮಾತನಾಡಿದ ಸಚಿವರು, ಹವಾಮಾನ ವೈಪರೀತ್ಯದಿಂದ ಮಳೆಯ ಸ್ವರೂಪ ಸಂಪೂರ್ಣ ಬದಲಾಗಿದೆ. ಕಡಿಮೆ ಅವಧಿಯಲ್ಲಿ ಅತಿಯಾದ ಮಳೆ ಸುರಿಯುತ್ತಿರುವುದರಿಂದ ಕೃಷಿ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗುತ್ತಿದೆ. ಹೀಗಾಗಿ ಪರಿಸರ ಸಂರಕ್ಷಣೆ ಮತ್ತು ವೃಕ್ಷಾರೋಪಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಗೇರು ಮೇಳದಲ್ಲಿ ಮಕ್ಕಳಿಗಾಗಿ ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ನಡೆಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ಶಾಸಕರು ಮತ್ತು ಗಣ್ಯರು ಉಪಸ್ಥಿತರಿದ್ದರು.

