ಮಂಡ್ಯ: ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ಸಂಬಂಧ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಹಣ ಕಳ್ಳತನವಾಗಿದೆ ಎಂದು ಆರೋಪಿಸಿ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಮೇಲುಕೋಟೆ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ, ದೇವಸ್ಥಾನದಲ್ಲಿ ಈ ಹಿಂದೆ ಸಿಸಿ ಕ್ಯಾಮೆರಾಗಳಿಗೆ ಹಾನಿ ಮಾಡುತ್ತಿದ್ದ ಘಟನೆಗಳು ನಡೆದಿದ್ದರಿಂದ ಆಡಳಿತ ಮಂಡಳಿ ರಹಸ್ಯವಾಗಿ ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಆದರೆ 2026ರ ಜನವರಿ 12ರಂದು ಈ ರಹಸ್ಯ ಕ್ಯಾಮೆರಾಗಳಿಗೂ ಹಾನಿ ಮಾಡಿರುವುದು ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಒಳಗಿನ ಸಿಬ್ಬಂದಿಯೇ ಕಳ್ಳತನದಲ್ಲಿ ಭಾಗಿಯಾಗಿರಬಹುದು ಎಂಬ ಗಂಭೀರ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಈ ಸಂಬಂಧ ಶ್ರೀಧರ್ ಪಾರುಪತ್ತೆಗಾರ, ನಾರಾಯಣ ಭಟ್ಟ ಅರ್ಚಕ, ತಿರುವೆಂಗಡಚಾರ್ ಪರಿಚಾರಕ, ಗಂಗಾಧರ್ ಹಾಗೂ ಬಸವರಾಜ್ ಕಾವಲುಗಾರರು ಸೇರಿದಂತೆ ಐದು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇಒ ಶೀಲಾ ಅವರು ಈ ಹಿಂದೆ ಸಂಬಂಧಿತ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದರೂ ಸೂಕ್ತ ಉತ್ತರ ದೊರಕದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೇವಾಲಯದ ಒಳಗಿನವರೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರಾ ಅಥವಾ ಇದರ ಹಿಂದೆ ಬೇರೆ ಜಾಲವಿದೆಯಾ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

