ವಿಜಯಸಾಕ್ಷಿ ಸುದ್ದಿ, ಧಾರವಾಡ: ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ವೈದ್ಯರು ಮತ್ತು ಸಿಬ್ಬಂದಿಯ ಜವಾಬ್ದಾರಿ. ಸಣ್ಣಪುಟ್ಟ ಲೋಪಗಳಿಂದಲೂ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಮ್ಮ ಕೇಂದ್ರವನ್ನು ಸ್ವಂತ ಸಂಸ್ಥೆಯಂತೆ ಭಾವಿಸಿ ಸಮಯಪಾಲನೆಗೆ ಆದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿ ರೋಗಿಗಳಿಗೆ ಧೈರ್ಯ ಮತ್ತು ನಂಬಿಕೆ ಮೂಡುವ ವಾತಾವರಣ ನಿರ್ಮಿಸಬೇಕು. ಪತಿ-ಪತ್ನಿ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ವರ್ಗಾವಣೆ ನಿಯಮಗಳಲ್ಲಿ ಬದಲಾವಣೆ ತರಲಾಗುವುದು. ಉತ್ತಮ ಸೇವೆ ಸಲ್ಲಿಸುವ ವೈದ್ಯರಿಗೆ ಅದೇ ಸ್ಥಳದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಗುತ್ತಿಗೆ ಆಧಾರದಲ್ಲಿ ಮೂರರಿಂದ ಐದು ವರ್ಷ ಸೇವೆ ಸಲ್ಲಿಸಿರುವ ವೈದ್ಯರನ್ನು ಖಾಯಂಗೊಳಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ತಾಲೂಕು ಆಸ್ಪತ್ರೆಗಳ ಡಯಾಲಿಸಿಸ್ ಕೊರತೆ ಶೀಘ್ರ ಪರಿಹರಿಸಲಾಗುವುದು. ಜಿಲ್ಲಾ ಆಸ್ಪತ್ರೆಯ ಸಾಮರ್ಥ್ಯ ವಿಸ್ತರಣೆ ಹಾಗೂ ಹೊಸ ಆಸ್ಪತ್ರೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅಗತ್ಯವಿರುವ ರೋಗಿಗಳನ್ನು 108 ಆಂಬುಲೆನ್ಸ್ ಮೂಲಕ 20ರಿಂದ 30 ನಿಮಿಷಗಳಲ್ಲಿ ತಾಲೂಕು ಆಸ್ಪತ್ರೆಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸಾ ಸೌಲಭ್ಯಗಳ ಜತೆಗೆ ಮರಣೋತ್ತರ ಪರೀಕ್ಷೆ ವ್ಯವಸ್ಥೆಯನ್ನೂ ಬಲಪಡಿಸಬೇಕು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿಕ್ಷಕರಿಗೆ 15 ದಿನಗಳ ಕಠಿಣ ತರಬೇತಿ ನೀಡಲಾಗುವುದು. ಪ್ರತಿಯೊಂದು ಶಾಲೆಯಲ್ಲೂ ಫುಟ್ಬಾಲ್, ಕ್ರಿಕೆಟ್, ಹಾಕಿ, ಕಬಡ್ಡಿ, ಖೋ-ಖೋ ತಂಡಗಳನ್ನು ರಚಿಸಿ ಶಾಲೆಯಿಂದ ರಾಜ್ಯ ಮಟ್ಟದವರೆಗೆ ಪ್ರತಿಭೆ ಬೆಳೆಸಬೇಕು. ಬ್ಯಾಂಡ್, ಪಥಸಂಚಲನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಉತ್ತೇಜನ ನೀಡಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ ಮೂಲಕ ಮಕ್ಕಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಬೇಕು ಎಂದರು.
ಸಭೆಯಲ್ಲಿ ಶಾಸಕರಾದ ವಿನಯ ಕುಲಕರ್ಣಿ, ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಅಪರ ಜಿಲ್ಲಾಧಿಕಾರಿ ಗೀತಾ, ಜಿಪಂ ಸಿಇಒ ಭುವನೇಶ್ ಪಾಟೀಲ, ಪೂರ್ಣಿಮಾ ಚೂರಿ ಸೇರಿದಂತೆ ಅಧಿಕಾರಿಗಳು, ವೈದ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸರ್ಕಾರಿ ಆಸ್ಪತ್ರೆಗಳು ಜನರ ನಂಬಿಕೆಯ ಕೇಂದ್ರಗಳಾಗಬೇಕು. ಪ್ರತಿಯೊಬ್ಬ ರೋಗಿಗೂ ಗೌರವ, ಗುಣಮಟ್ಟದ ಚಿಕಿತ್ಸೆ ಮತ್ತು ವಿಶ್ವಾಸದ ವಾತಾವರಣ ದೊರೆಯುವಂತೆ ವೈದ್ಯರು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
— ಯು.ಟಿ. ಖಾದರ್ ಫರೀದ್, ಸಚಿವ

