Home Blog

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಹಗರಿಬೊಮ್ಮನಹಳ್ಳಿ: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ಗಿರಿನಳ್ಳಿ ನಾಗಪ್ಪ (52) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಾಗಪ್ಪ ಅವರು ತಮ್ಮ ಮೂರು ಎಕರೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ತೋಟದಲ್ಲಿದ್ದ “ಆಂಕಳ ಮರದಮ್ಮ” ದೇವರ ಮರದ ಬಳಿ ಸಂಜೆ ನೈವೇದ್ಯ ಸಲ್ಲಿಸಿ ಗ್ರಾಮಸ್ಥರು ತೆರಳಿದ ಬಳಿಕ ನಾಗಪ್ಪ ತೋಟದತ್ತ ಹೋಗಿದ್ದರು ಎನ್ನಲಾಗಿದೆ.

ಸಂಜೆಯ ಬಿಸಿಲಿನ ತಾಪ ಹೆಚ್ಚಿದ್ದ ಹಿನ್ನೆಲೆಯಲ್ಲಿ ನಾಗಪ್ಪ ಮರದ ಆಶ್ರಯ ಪಡೆದಿದ್ದರು. ಇದೇ ವೇಳೆ ಸಂಜೆ 5 ಗಂಟೆ ಸುಮಾರಿಗೆ ಗುಡುಗು-ಸಿಡಿಲು ಸಹಿತ ಮಳೆ ಆರಂಭವಾಗಿದೆ.

ಮರದ ಒಂದು ಭಾಗಕ್ಕೆ ಸಿಡಿಲು ಅಪ್ಪಳಿಸಿದ ಪರಿಣಾಮ, ಮರದ ಕೆಳಗೆ ನಿಂತಿದ್ದ ನಾಗಪ್ಪ ಅವರಿಗೆ ಸಿಡಿಲು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿಗೆ ಕಾದಿತ್ತು ಆಘಾತ

ಸಂಜೆಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಪತ್ನಿ ತೋಟದತ್ತ ಹುಡುಕಿಕೊಂಡು ಹೋಗಿದ್ದು, ಪತಿಗೆ ಸಿಡಿಲು ಬಡಿದಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರಲ್ಲಿ ಭೀಕರ ಅಪಘಾತ: ಗೊಬ್ಬರದ ಲಾರಿಗೆ ಕಾರು ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು!

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೊಬ್ಬರ ತುಂಬಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ನಿವಾಸಿಗಳಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಕಾರು ಚಾಲಕ ಎಂದು ಗುರುತಿಸಲಾಗಿದೆ.

ಕುಮಾರ ನರಸಿಂಹಸ್ವಾಮಿ ಅವರು ನಿನ್ನೆ ಪತ್ನಿ ಮತ್ತು ತಂಗಿಯೊಂದಿಗೆ ತುಮಕೂರಿಗೆ ಬಂದಿದ್ದರು. ಇಂದು ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಮಂಡ್ಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲೇ ನಾಲ್ವರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ತನಿಖೆ ವೇಳೆ ಅವರು ಕಾರು ಚಾಲಕ ಎಂಬುದು ದೃಢಪಟ್ಟಿದೆ. ಮೃತದೇಹಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆ ಸಂಬಂಧ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಮುಂಬೈ ವಿರುದ್ಧ ಮಹತ್ವದ ಪಂದ್ಯಕ್ಕೆ RCB ಸಜ್ಜು; ಪ್ಲೇಯಿಂಗ್ 11ನಲ್ಲಿ ಎರಡು ದೊಡ್ಡ ಬದಲಾವಣೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ರಾಯ್‌ಪುರದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಹೆಚ್ಚಿದೆ.

ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್‌ಸಿಬಿ, ಕಳೆದ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ವಿಶೇಷವಾಗಿ ಬ್ಯಾಟಿಂಗ್ ವಿಭಾಗದ ವೈಫಲ್ಯ ತಂಡಕ್ಕೆ ಹಿನ್ನಡೆಯಾಗಿದ್ದು, ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ ಅವರ ಕಳಪೆ ಫಾರ್ಮ್ ತಂಡದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಈ ಇಬ್ಬರನ್ನು ಆಡುವ ಬಳಗದಿಂದ ಹೊರಗಿಡುವ ಸಾಧ್ಯತೆ ಇದೆ.

ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೇಕಬ್ ಬೆಥೆಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ನಡೆಸಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಕಾಣಿಸಿಕೊಳ್ಳಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಬ್ಯಾಟಿಂಗ್ ಮಾಡಲಿದ್ದು, ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜೋರ್ಡನ್ ಕಾಕ್ಸ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆಲ್‌ರೌಂಡರ್ ಆಗಿ ಕೃನಾಲ್ ಪಾಂಡ್ಯ ತಂಡದಲ್ಲಿ ಇರಲಿದ್ದು, ರೊಮಾರಿಯೊ ಶೆಫರ್ಡ್ ಬದಲಿಗೆ ಫಿನಿಶರ್ ಪಾತ್ರದಲ್ಲಿ ವೆಂಕಟೇಶ್ ಅಯ್ಯರ್ ಅವಕಾಶ ಪಡೆಯುವ ಸಾಧ್ಯತೆ ಇದೆ.

ಬೌಲಿಂಗ್ ವಿಭಾಗದಲ್ಲಿ ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಸ್ಥಾನ ಪಡೆಯಲಿದ್ದಾರೆ. ಇಂಪ್ಯಾಕ್ಟ್ ಪ್ಲೇಯರ್ ಆಗಿ ಸುಯಶ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆ ವಿಚಾರ ತಿಂಗಳಲ್ಲಿ ಬಗೆಹರಿಯಲಿದೆ: ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಸಚಿವ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಎಲ್ಲ ವಿಚಾರಗಳು ತಿಂಗಳೊಳಗೆ ಬಗೆಹರಿಯಲಿದ್ದು, ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಯಾರು ಮುಂದುವರಿಯುತ್ತಾರೆ, ಯಾರು ಬದಲಾಗುತ್ತಾರೆ ಎಂಬುದನ್ನು ಅವರೇ ತಿಳಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.

ನಿನ್ನೆ ನಡೆದ ಎಸ್‌ಐಆರ್ ಸಂಬಂಧ ಮುಖ್ಯಮಂತ್ರಿ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುನಿಯಪ್ಪ, “ಇಡೀ ದೇಶದಲ್ಲಿ ಈ ವಿಚಾರ ಗೊಂದಲ ಸೃಷ್ಟಿಸಿದೆ. ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿ ದುರುಪಯೋಗ ಮತ್ತು ತಡೆಗಟ್ಟುವಿಕೆ ಕುರಿತು ಚರ್ಚೆ ಮಾಡಲಾಗಿದೆ” ಎಂದರು.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುತ್ತಿರುವ ಬಗ್ಗೆ ದೇಶದಾದ್ಯಂತ ಅನುಮಾನಗಳು ಮೂಡುತ್ತಿವೆ. ಮತದಾರರ ಪಟ್ಟಿ ಪರಿಷ್ಕರಣೆ ನಡೆಯಬೇಕು ಎನ್ನುವುದರಲ್ಲಿ ವಿರೋಧವಿಲ್ಲ. ಆದರೆ ಬೇಕಾದವರ ಹೆಸರನ್ನು ಉಳಿಸಿ, ಬೇಡವಾದವರ ಹೆಸರನ್ನು ತೆಗೆದುಹಾಕುವ ರೀತಿಯ ಬೆಳವಣಿಗೆಗಳು ಸರಿಯಲ್ಲ ಎಂದು ಹೇಳಿದರು.

ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ನಾಗರಿಕರು ಮತ್ತು ಮತದಾರರ ಹಿತದೃಷ್ಟಿಯಿಂದ ಮತದಾನದ ಹಕ್ಕು ಕಾಪಾಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಬಿಎಲ್‌ಎ-2 ನೇಮಕ ಮಾಡಲಾಗಿದ್ದು, ಅವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, ಲಕ್ಷಾಂತರ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದಾರೆ ಎಂದು ಹೇಳಿದರು.

ಹಣಬಲ ಮತ್ತು ತೋಳುಬಲ ಬಳಸಿದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ರಾಜ್ಯದ ಜನರೇ ಅಂತಿಮ ತೀರ್ಪು ನೀಡುತ್ತಾರೆ. ಕೇರಳದ ಜನರು ಬಹಳ ಜಾಗೃತರಾಗಿದ್ದು, ಅಲ್ಲಿ ಇಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಕೆ.ಹೆಚ್. ಮುನಿಯಪ್ಪ ಅಭಿಪ್ರಾಯಪಟ್ಟರು.

ಕೊನೆಗೂ ವಿಜಯ್‌ಗೆ ಸಿಕ್ತೂ ಮ್ಯಾಜಿಕ್ ನಂಬರ್ ; ವಿಸಿಕೆ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ಬಹುತೇಕ ಫಿಕ್ಸ್!

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ನಡೆದಿದ್ದ ಭಾರೀ ರಾಜಕೀಯ ಕಸರತ್ತು ಅಂತಿಮ ಹಂತ ತಲುಪಿದ್ದು, ನಟ ವಿಜಯ್ ನೇತೃತ್ವದ ಟಿವಿಕೆಗೆ ವಿಸಿಕೆ ಪಕ್ಷ ನಿರ್ಣಾಯಕ ಬೆಂಬಲ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಟಿವಿಕೆ ಒಕ್ಕೂಟದ ಶಾಸಕರ ಸಂಖ್ಯೆ 118ಕ್ಕೆ ಏರಿಕೆಯಾಗಿ ಬಹುಮತದ ಗಡಿ ದಾಟಿದೆ.

ಈಗಾಗಲೇ ಕಾಂಗ್ರೆಸ್‌ನ ಐದು ಹಾಗೂ ಎಡಪಕ್ಷಗಳ ನಾಲ್ಕು ಶಾಸಕರ ಬೆಂಬಲ ಹೊಂದಿದ್ದ ವಿಜಯ್ ಒಕ್ಕೂಟಕ್ಕೆ ವಿಸಿಕೆಯ ಇಬ್ಬರು ಶಾಸಕರ ಸೇರ್ಪಡೆ ದೊಡ್ಡ ಬಲ ನೀಡಿದೆ. ಸರ್ಕಾರ ರಚನೆಗೆ ಬೇಕಾಗಿದ್ದ ಮ್ಯಾಜಿಕ್ ನಂಬರ್ ಕೊನೆಗೂ ಸಿಕ್ಕ ಹಿನ್ನೆಲೆಯಲ್ಲಿ ಟಿವಿಕೆ ಶಿಬಿರದಲ್ಲಿ ಸಂಭ್ರಮ ಮನೆಮಾಡಿದೆ.

ಬಹುಮತ ಖಚಿತವಾದ ತಕ್ಷಣ ವಿಜಯ್ ತಮ್ಮ ನಿವಾಸದಿಂದ ಹೊರಟಿದ್ದು, ರಾಜ್ಯಪಾಲ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ. ಸಂಜೆ ರಾಜ್ಯಪಾಲರು ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿರುವುದರಿಂದ ಅದಕ್ಕೂ ಮುನ್ನವೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ.

ವಿಸಿಕೆ ಇನ್ನೂ ಅಧಿಕೃತ ಪ್ರಕಟಣೆ ನೀಡದಿದ್ದರೂ, ಟಿವಿಕೆ ಸರ್ಕಾರದ ಭವಿಷ್ಯವನ್ನು ನಿರ್ಧರಿಸುವ ‘ಕಿಂಗ್‌ಮೇಕರ್’ ಪಾತ್ರವನ್ನು ವಿಸಿಕೆ ನಿರ್ವಹಿಸಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ಬೈಕ್ ತಪ್ಪಿಸಲು ಹೋಗಿ ಶಿವ ದೇವಸ್ಥಾನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಿಎಂಟಿಸಿ ಬಸ್ ಶಿವ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದೆ. ಘಟಕ-9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್ ಕಡೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಿನಿಂದ ಬೈಕ್ ಬಂದಿರುವುದಾಗಿ ತಿಳಿದುಬಂದಿದೆ.

ಬೈಕ್ ಸವಾರನಿಗೆ ಡಿಕ್ಕಿ ಹೊಡೆಯದಂತೆ ಬಸ್ ಚಾಲಕ ವಾಹನ ನಿಯಂತ್ರಿಸಲು ಯತ್ನಿಸಿದಾಗ, ಬಸ್ ರಸ್ತೆ ಬದಿಯಲ್ಲಿದ್ದ ಶಿವ ದೇಗುಲಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ದೇವಸ್ಥಾನದ ಕಾಂಪೌಂಡ್ ಹಾಗೂ ಗ್ರಿಲ್‌ಗೆ ಹಾನಿಯಾಗಿದೆ. ಬೈಕ್ ಸವಾರನ ಬಲಗೈಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

IPL ಪಂದ್ಯ ನೋಡಿ ಮನೆಗೆ ಮರಳುತ್ತಿದ್ದ ವೇಳೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ನವದೆಹಲಿ: ಐಪಿಎಲ್ ಪಂದ್ಯ ವೀಕ್ಷಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರಿಕೆಟ್ ಅಭಿಮಾನಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಈಶಾನ್ಯ ದೆಹಲಿಯ ಖಜುರಿ ಖಾಸ್ ಫ್ಲೈಓವರ್ ಬಳಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಫ್ಲೈಓವರ್‌ನಿಂದ ಕೆಳಗೆ ಇಳಿಯುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಈಶಾನ್ಯ ದೆಹಲಿಯ ಕರವಾಲ್ ನಗರ ನಿವಾಸಿಗಳಾದ ಹೇಮಂತ್ ತಿವಾರಿ ಹಾಗೂ ರೋಹಿತ್ ಅಲಿಯಾಸ್ ಸೋನು ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 281 ಮತ್ತು 106ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಹಿಮಾಂಶುವನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಬಿಸಿಲು ತಣಿಸಿಕೊಳ್ಳಲು ಕೆರೆಗೆ ಇಳಿದ ಯುವಕರು ಸಾವು: ಕೋಲಾರದಲ್ಲಿ ಅಣ್ಣ-ತಮ್ಮ ದುರಂತ ಅಂತ್ಯ!

0

ಕೋಲಾರ: ಈಜಲು ಹೋಗಿದ್ದ ಅಣ್ಣ-ತಮ್ಮ ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ನಡೆದಿದೆ.

ಚಾಂಪಲ್ಲಿ ಗ್ರಾಮದ ನರೇಂದ್ರ (25) ಮತ್ತು ಚಂದನ್ (23) ಮೃತ ದುರ್ದೈವಿಗಳು. ಇಬ್ಬರೂ ಗಾರೆ ಕೆಲಸಕ್ಕಾಗಿ ಆ ಭಾಗಕ್ಕೆ ತೆರಳಿದ್ದು, ಮಧ್ಯಾಹ್ನದ ಬಿಸಿಲಿನ ನಡುವೆ ಕೆರೆಯಲ್ಲಿ ಈಜಲು ಇಳಿದಿದ್ದರು.

ಈ ವೇಳೆ ನೀರಿನ ಆಳ ಅರಿಯದೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ.

ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದರೂ, ಕುಟುಂಬದವರು ಯಾವುದೇ ದೂರು ನೀಡದ ಕಾರಣ ಮರಣೋತ್ತರ ಪರೀಕ್ಷೆ ನಡೆಸಲಾಗಿಲ್ಲ. ಬಳಿಕ ಹಿರಿಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಆಟವಾಡುತ್ತಿದ್ದ ಮಕ್ಕಳ ಮೇಲೆ ಕಾಂಪೌಂಡ್ ಗೇಟ್ ಬಿದ್ದು ದುರಂತ: 5 ವರ್ಷದ ಮಗು ಸ್ಥಳದಲ್ಲೇ ಸಾವು!

ಬೆಂಗಳೂರು: ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ಕಾಂಪೌಂಡ್ ಗೇಟ್ ಕುಸಿದು ಬಿದ್ದ ಪರಿಣಾಮ 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದ ದ್ವಾರಕಾನಗರದಲ್ಲಿ ನಡೆದಿದೆ.

ಅವಘಡದಲ್ಲಿ ಗೌಸಿಯಾ ಎಂಬ ಮಗು ಮೃತಪಟ್ಟಿದ್ದು, ಅಣ್ಣ ಇಮಾಮ್ ಹಾಗೂ ತಂಗಿ ಶಕಿಲಾ ಗಾಯಗೊಂಡಿದ್ದಾರೆ. ಮತ್ತೊಬ್ಬ 3 ವರ್ಷದ ಮಗು ಸುಮಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಮೃತ ಗೌಸಿಯಾ, ಇಮಾಮ್ ರಮೀಜಾ ದಂಪತಿಯ ಪುತ್ರಿಯಾಗಿದ್ದು, ಕುಟುಂಬವು ಕಳೆದ ಐದು ತಿಂಗಳ ಹಿಂದಷ್ಟೇ ಈ ಬಾಡಿಗೆ ಮನೆಗೆ ವಾಸಕ್ಕೆ ಬಂದಿತ್ತು. ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದ ದಂಪತಿ, ರವಿಶಂಕರ್ ಎಂಬುವವರಿಗೆ ಸೇರಿದ ಮನೆಯಲ್ಲಿ ನೆಲೆಸಿದ್ದರು.

ಘಟನೆಯ ಬಳಿಕ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸಿ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: ಸಿಲಿಂಡರ್ ಸ್ಫೋಟಕ್ಕೆ ನಡುಗಿದ ಗಾಜಿಯಾಬಾದ್, ವೃದ್ಧ ಸಾವು!

ನವದೆಹಲಿ: ದೆಹಲಿಯ ಸಮೀಪದ ಗಾಜಿಯಾಬಾದ್‌ನಲ್ಲಿ ಎಸಿ ಸರ್ವಿಸ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 80 ವರ್ಷದ ವೃದ್ಧ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಟೇಲ್ ನಗರ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಈ ಘಟನೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.

ಮುಂಜಾನೆ ಸುಮಾರು 3:05ರ ವೇಳೆಗೆ ಮೂರು ಅಂತಸ್ತಿನ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿತ್ತು. ಘಟನೆಯಲ್ಲಿ ತ್ರಿಲೋಕಿ ಎಂಬ 80 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.

ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಎಸಿ ಕಂಪ್ರೆಸರ್‌ಗಳು ಸತತ ಸ್ಫೋಟಗೊಂಡ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. ಹಲವು ನೀರಿನ ಮಾರ್ಗಗಳನ್ನು ಬಳಸಿದ ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅವಘಡದಲ್ಲಿ 10 ಕಾರುಗಳು ಹಾಗೂ 10 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!