Home Blog

ಹವಾಮಾನ ಬದಲಾವಣೆಗೆ ಸಜ್ಜಾಗಬೇಕು: ಡಾ. ಸರಿತಾ

ವಿಜಯಸಾಕ್ಷಿ ಸುದ್ದಿ, ಗದಗ: ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಜಿಲ್ಲಾಮಟ್ಟದಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಕಾರ್ಯಕ್ಷಮತೆ ವರದಿ ಸಿದ್ಧಪಡಿಸಬೇಕು ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಿರಿಯ ಸಮಾಲೋಚಕಿ ಡಾ. ಸರಿತಾ ಅಧಿಕಾರಿಗಳಿಗೆ ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹವಾಮಾನ ಬದಲಾವಣೆಯ ಇಲಾಖಾ ಕ್ರಿಯಾ ಯೋಜನೆಗಳ ಕಾರ್ಯಕ್ಷಮತೆ ಸೂಚಕಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅರ್ಥಮಾಡಿಕೊಳ್ಳಬೇಕು. ಗದಗ ಜಿಲ್ಲೆಗೆ ಸಂಬಂಧಿಸಿದ ವರದಿಯನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಹೊಸ ತಂತ್ರಜ್ಞಾನ ಬಳಸಿ ತ್ಯಾಜ್ಯ ನಿರ್ವಹಣೆ, ತ್ಯಾಜ್ಯದಿಂದ ಇಂಧನ ಉತ್ಪಾದನೆ, ನದಿ-ಕೆರೆಗಳ ನೀರಿನ ಗುಣಮಟ್ಟ ಕಾಪಾಡುವುದು ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಹವಾಮಾನ ಬದಲಾವಣೆ ಹಾಗೂ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ಕುರಿತು ಸುದೀರ್ಘ ಮಾಹಿತಿ ನೀಡಿದ ಡಾ. ಸರಿತಾ, ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳ ಜವಾಬ್ದಾರಿಗಳನ್ನು ವಿವರಿಸಿದರು.

ವಿಷಯ ತಜ್ಞ ಶಶಿಕುಮಾರ್ ಜಲ ಸಂಪನ್ಮೂಲ ವಲಯದ ಹವಾಮಾನ ಕ್ರಿಯಾ ಯೋಜನೆ ಕುರಿತು ಮಾಹಿತಿ ನೀಡಿದರು.

ಗದಗ ಜಿಲ್ಲೆಯ ಎನ್‌ಆರ್‌ಡಿಎಂಎಸ್ ಅಧಿಕಾರಿ ಮಂಜುನಾಥ, ಎನ್‌ಆರ್‌ಡಿಎಂಎಸ್ ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಭಾಗವಹಿಸಿದ್ದರು.

“ಹವಾಮಾನ ಬದಲಾವಣೆಯ ಸವಾಲು ಎದುರಿಸಲು ತ್ಯಾಜ್ಯ ನಿರ್ವಹಣೆ, ಹಸಿರು ಇಂಧನ ಬಳಕೆ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು.”

ಡಾ. ಸರಿತಾ

ಹಿರಿಯ ಸಮಾಲೋಚಕಿ, ಎಂಪ್ರಿ ಬೆಂಗಳೂರು

ಶುದ್ಧ ಗಾಳಿಗೆ ಕಪ್ಪತ್ತಗುಡ್ಡವೇ ಕಾರಣ: ವಾಯ್.ಎಸ್. ಮತ್ತೂರ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ತೋಂಟದ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ವಾಯ್.ಎಸ್. ಮತ್ತೂರ ಅವರು ಸಸಿಗಳಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, “ಏಷ್ಯಾದಲ್ಲೇ ಅತ್ಯಂತ ಶುದ್ಧ ಗಾಳಿ ಇರುವ ಪ್ರದೇಶಗಳಲ್ಲಿ ಗದಗ ಸುತ್ತಮುತ್ತಲಿನ ಪರಿಸರವೂ ಒಂದು. ಇದಕ್ಕೆ ಪ್ರಮುಖ ಕಾರಣ ಕಪ್ಪತ್ತಗುಡ್ಡ. ಕಪ್ಪತ್ತಗುಡ್ಡವನ್ನು ಖಾಸಗಿ ಕಂಪನಿಗಳಿಂದ ನಾಶವಾಗದಂತೆ ಹಗಲು-ರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿ ಸಂರಕ್ಷಿಸಿದ ಕೀರ್ತಿ ಪರಮಪೂಜ್ಯ ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿಗಳಿಗೆ ಸಲ್ಲುತ್ತದೆ,” ಎಂದು ಹೇಳಿದರು.

“ಭೂಮಿಯನ್ನು ತಾಯಿಯಂತೆ ಗೌರವಿಸುವುದು ಹಾಗೂ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಾವೆಲ್ಲರೂ ಪರಿಸರ ಉಳಿವಿಗಾಗಿ ಕೈಜೋಡಿಸಬೇಕು,” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಸಿ ನೆಟ್ಟು ಪರಿಸರ ಕಾಳಜಿ ಅಭಿಯಾನಕ್ಕೆ ಕೈಜೋಡಿಸಿದರು.

ಎಚ್.ಕೆ. ಪಾಟೀಲ ಕಡೆಗಣನೆ ಉತ್ತರ ಕರ್ನಾಟಕಕ್ಕೆ ಅನ್ಯಾಯ: ಆಸೀಫ್ ದಂಡಿನ

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ರಾಜಕಾರಣಿ ಎಚ್. ಕೆ. ಪಾಟೀಲ ಅವರನ್ನು ಸಚಿವ ಸಂಪುಟದಲ್ಲಿ ಸಮರ್ಪಕವಾಗಿ ಪರಿಗಣಿಸದಿರುವುದು ಉತ್ತರ ಕರ್ನಾಟಕದ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಅಂಜುಮನ್-ಎ-ಇಸ್ಲಾಂ ಸಂಸ್ಥೆ ಸದಸ್ಯ ಆಸೀಫ್ ಜಿ. ದಂಡಿನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜಕೀಯದಲ್ಲಿ ಸ್ವಚ್ಛ ರಾಜಕಾರಣ, ಆಡಳಿತಾತ್ಮಕ ಅನುಭವ ಹಾಗೂ ಜನಪರ ಬದ್ಧತೆಗೆ ಹೆಸರಾಗಿರುವ ಎಚ್.ಕೆ. ಪಾಟೀಲ ಅವರನ್ನು ಸಚಿವ ಸಂಪುಟ ರಚನೆ ವೇಳೆ ಕಡೆಗಣಿಸಿರುವುದು ಉತ್ತರ ಕರ್ನಾಟಕದ ಜನರಲ್ಲಿ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

ದಶಕಗಳ ಕಾಲ ಶಾಸಕರಾಗಿ ಹಾಗೂ ವಿವಿಧ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ಪಾಟೀಲ ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಅವಧಿಯಲ್ಲಿ ಕರ್ನಾಟಕ ರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ದೇಶದ ಗಮನ ಸೆಳೆದಿತ್ತು ಎಂದು ಉಲ್ಲೇಖಿಸಿದರು.

ಎಚ್.ಕೆ. ಪಾಟೀಲ ಅವರು ಉತ್ತರ ಕರ್ನಾಟಕದ ಧ್ವನಿಯಾಗಿ, ರೈತರ ಹಿತಾಸಕ್ತಿಗಳ ಪರ ಹೋರಾಟಗಾರರಾಗಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಪ್ರತಿಪಾದಿಸಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಅನುಭವ ಹಾಗೂ ಸಾಮರ್ಥ್ಯ ರಾಜ್ಯದ ಅಭಿವೃದ್ಧಿಗೆ ಅಮೂಲ್ಯ ಸಂಪತ್ತಾಗಿದೆ ಎಂದು ಹೇಳಿದರು.

ರಾಜ್ಯ ಆಡಳಿತದಲ್ಲಿ ಪ್ರಾದೇಶಿಕ ಸಮತೋಲನ, ಅನುಭವ ಹಾಗೂ ಜನಪ್ರತಿನಿಧಿತ್ವಕ್ಕೆ ಸೂಕ್ತ ಗೌರವ ದೊರೆಯಬೇಕು. ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಜನರ ಭಾವನೆಗಳನ್ನು ಗೌರವಿಸಿ ಎಚ್.ಕೆ. ಪಾಟೀಲ ಅವರ ಅನುಭವವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

“ಎಚ್.ಕೆ. ಪಾಟೀಲರಂತಹ ಹಿರಿಯ ನಾಯಕರು ಸರ್ಕಾರದ ಬಲ. ಅವರ ಅನುಭವಕ್ಕೆ ಸೂಕ್ತ ಸ್ಥಾನ ದೊರೆತಾಗ ಮಾತ್ರ ಆಡಳಿತ ಇನ್ನಷ್ಟು ಸಮರ್ಥವಾಗಲಿದೆ.”

ಆಸೀಫ್ ಜಿ. ದಂಡಿನ

ಸದಸ್ಯ, ಅಂಜುಮನ್-ಎ-ಇಸ್ಲಾಂ ಸಂಸ್ಥೆ ಗದಗ-ಬೆಟಗೇರಿ

ಅಧಿಕಾರ ಗರ್ವದ ಸಂಕೇತವಲ್ಲ, ಸಮಾಜ ಸೇವೆಯ ಜವಾಬ್ದಾರಿ: ಶ್ರೀಧರ ವಜ್ರಬಂಡಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಎಚ್.ಕೆ. ಪಾಟೀಲರಿಗೆ ಸ್ಥಾನ ಕೈತಪ್ಪಿರುವ ವಿಚಾರಕ್ಕೆ ಉತ್ತರ ಕರ್ನಾಟಕದಲ್ಲಿ ಅಸಮಾಧಾನ ಜೋರಾಗಿದ್ದು, ಕಾಂಗ್ರೆಸ್ ಯುವ ಮುಖಂಡ ಶ್ರೀಧರ ವಜ್ರಬಂಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಧಿಕಾರ ಎಂಬುದು ಗರ್ವದ ಸಂಕೇತವಲ್ಲ, ಅದು ಸಮಾಜ ಸೇವೆಯ ಹೊಣೆಗಾರಿಕೆ” ಎಂಬ ತತ್ವದೊಂದಿಗೆ ರಾಜಕೀಯ ನಡೆಸಿದ ಎಚ್.ಕೆ. ಪಾಟೀಲರಂತಹ ಜನಪರ ನಾಯಕನನ್ನು ಸಚಿವ ಸಂಪುಟದಿಂದ ದೂರ ಇಡುವುದು ಸರಿಯಲ್ಲ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಂತೆ ಜನಸಾಮಾನ್ಯರ ಸೇವೆಯನ್ನೇ ರಾಜಕೀಯ ಧರ್ಮವನ್ನಾಗಿಸಿಕೊಂಡಿರುವ ನಾಯಕ ಎಚ್.ಕೆ. ಪಾಟೀಲರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎನ್ನುವ ಬದ್ಧತೆಯಿಂದ ಅವರು ಕೆಲಸ ಮಾಡಿದ್ದಾರೆ. ಅಂತಹ ಅನುಭವಿ ಹಾಗೂ ಪಕ್ಷ ನಿಷ್ಠ ನಾಯಕನನ್ನು ಕಡೆಗಣಿಸಿರುವುದು ಉತ್ತರ ಕರ್ನಾಟಕದ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಎಚ್.ಕೆ. ಪಾಟೀಲರ ಪಾತ್ರ ಅಪಾರವಾಗಿದೆ. ಪಕ್ಷದ ಮೊದಲ ಸಾಲಿನ ನಾಯಕರನ್ನೇ ಕಡೆಗಣಿಸಿದರೆ ಅದು ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ಕೂಡಲೇ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಅವರ ಪರವಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಶ್ರೀಧರ ವಜ್ರಬಂಡಿ ಎಚ್ಚರಿಕೆ ನೀಡಿದರು.

ಸಚಿವರಾಗಿದ್ದ ಅವಧಿಯಲ್ಲಿ ಎಚ್.ಕೆ. ಪಾಟೀಲರು ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು, ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಯೋಜನೆಗಳನ್ನು ದೇಶದ ಅನೇಕ ರಾಜ್ಯಗಳು ಮಾದರಿಯಾಗಿ ಅಳವಡಿಸಿಕೊಂಡಿವೆ ಎಂದು ಹೇಳಿದರು.

ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಎಚ್.ಕೆ. ಪಾಟೀಲರು ವಿಶೇಷ ಪರಿಶ್ರಮಪಟ್ಟಿದ್ದಾರೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಐತಿಹಾಸಿಕ ಪ್ರಾಚ್ಯಾವಶೇಷಗಳ ಸಂರಕ್ಷಣೆ ಹಾಗೂ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ರಾಜ್ಯದ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಶ್ಲಾಘಿಸಿದರು.

“ಜನಪರ ಕಾಳಜಿ, ಆಡಳಿತ ಅನುಭವ ಮತ್ತು ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ಮುತ್ಸದ್ದಿ ರಾಜಕಾರಣಿಯನ್ನು ಕಡೆಗಣಿಸಿರುವುದು ಅಕ್ಷಮ್ಯ” ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಶ್ರೀಧರ ವಜ್ರಬಂಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಧಿಕಾರ ಎಂದರೆ ಹುದ್ದೆಯ ಅಹಂಕಾರವಲ್ಲ; ಜನರ ಕಣ್ಣೀರನ್ನು ಒರೆಸುವ ಜವಾಬ್ದಾರಿ. ಅಂತಹ ಜನಪರ ನಾಯಕ ಎಚ್.ಕೆ. ಪಾಟೀಲರನ್ನೇ ಸಚಿವ ಸಂಪುಟದಿಂದ ದೂರ ಇಟ್ಟಿರುವುದು ಉತ್ತರ ಕರ್ನಾಟಕದ ಆತ್ಮಗೌರವಕ್ಕೆ ಮಾಡಿದ ಅನ್ಯಾಯ.”
— ಶ್ರೀಧರ ವಜ್ರಬಂಡಿ

ಗ್ರಾಮೀಣ ಭಾಗಕ್ಕೆ ಹೊಸ ಬಸ್‌ ಬಿಡುವಂತೆ ಶಾಸಕ ಚಂದ್ರು ಲಮಾಣಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಘಟಕಕ್ಕೆ ಸಾರಿಗೆ ಇಲಾಖೆಯಿಂದ ಮಂಜೂರಾದ ಎರಡು ನೂತನ ಬಸ್‌ಗಳಿಗೆ ಶನಿವಾರ ಪೂಜೆ ಸಲ್ಲಿಸಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಹಳೆಯ ಬಸ್‌ಗಳು ಆಗಾಗ್ಗೆ ಕೆಟ್ಟು ನಿಲ್ಲುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅದರ ಬಗ್ಗೆ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು. ಆದಷ್ಟು ಹೊಸ ಬಸ್‌ಗಳನ್ನು ಗ್ರಾಮೀಣ ಭಾಗಗಳಿಗೆ ಓಡಿಸುವ ವ್ಯವಸ್ಥೆಯಾಗಬೇಕು ಎಂದು ಹೇಳಿದರು.

“ಲಕ್ಷ್ಮೇಶ್ವರ ಸಾರಿಗೆ ಘಟಕಕ್ಕೆ ಇನ್ನಷ್ಟು ಬಸ್‌ಗಳನ್ನು ಮಂಜೂರು ಮಾಡುವಂತೆ ಹಾಗೂ ಬೆಂಗಳೂರಿಗೆ ಎಸಿ ಕೋಚ್ ಬಸ್‌ ಸೌಲಭ್ಯ ಕಲ್ಪಿಸುವಂತೆ ಇಲಾಖೆಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಕ್ತಿ ಯೋಜನೆಯೊಂದಿಗೆ ಲಕ್ಷ್ಮೇಶ್ವರ ಘಟಕಕ್ಕೆ ಇದುವರೆಗೆ ಸುಮಾರು 16 ನೂತನ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ಘಟಕ ವ್ಯವಸ್ಥಾಪಕಿ ಸವಿತಾ ಆದಿ, ಗ್ಯಾರಂಟಿ ಸಮಿತಿ ಸದಸ್ಯರು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಮಾಲಿ ಕಾರ್ಮಿಕನ ಅಗಲಿಕೆಗೆ ಕಂಬನಿ

ವಿಜಯಸಾಕ್ಷಿ ಸುದ್ದಿ, ಗದಗ: ದುಡಿಮೆಯನ್ನೇ ಬದುಕಿನ ಧರ್ಮವೆಂದು ನಂಬಿ ಗದಗ ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅಬ್ಬುಲ್‌ರಜಾಕ್ ಪೆಂಡಾರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅನಾರೋಗ್ಯಕ್ಕೀಡಾಗಿ ನಿಧನರಾಗಿದ್ದು, ಅವರ ಕುಟುಂಬಕ್ಕೆ ಗದಗ ಎಪಿಎಂಸಿ ಆಡಳಿತ ಮಂಡಳಿ ಮಾನವೀಯ ನೆರವಿನ ಹಸ್ತ ಚಾಚಿದೆ.

ಕೃಷಿ ಮಾರಾಟ ಇಲಾಖೆಯ ‘ಕಾಯಕ ನಿಧಿ ಯೋಜನೆ’ಯಡಿ ₹25 ಸಾವಿರ ಪರಿಹಾರದ ಚೆಕ್ ಅನ್ನು ಎಪಿಎಂಸಿ ಕಾರ್ಯದರ್ಶಿ ಶ್ರೀಮತಿ ಸುವರ್ಣಾ ವಾಲಿಕಾರ ಹಾಗೂ ಸಹ ಕಾರ್ಯದರ್ಶಿ ಎಂ.ಆರ್. ನದಾಫ್ ಅವರು ಮೃತರ ಸಹೋದರ ಮಾಬುಸಾಬ ಪೆಂಡಾರಿ ಅವರಿಗೆ ಹಸ್ತಾಂತರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇದೇ ವೇಳೆ ಗದಗ-ಬೆಟಗೇರಿ ಜನರಲ್ ವರ್ಕರ್ಸ್ ಹಮಾಲರು ಮತ್ತು ಚಕ್ಕಡಿಯವರ ಸಮಿತಿಯೂ ಮೃತ ಕಾರ್ಮಿಕನ ಕುಟುಂಬದ ನೆರವಿಗೆ ಧಾವಿಸಿದೆ. ಸಮಿತಿಯ ಅಧ್ಯಕ್ಷ ಆದಪ್ಪ ಮಾರೆಪ್ಪ ಮಾರೆಪ್ಪನವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ವೆಚ್ಚಕ್ಕಾಗಿ ₹10 ಸಾವಿರ ಧನಸಹಾಯ ನೀಡಿ ಮಾನವೀಯತೆ ಮೆರೆದರು.

ಪರವಾನಗಿ ಪಡೆದ ಹಮಾಲಿ ಕಾರ್ಮಿಕರ ಸಂಕಷ್ಟದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಕೃಷಿ ಮಾರಾಟ ಇಲಾಖೆ ಜಾರಿಗೆ ತಂದಿರುವ ‘ಕಾಯಕ ನಿಧಿ ಯೋಜನೆ’ ಕಾರ್ಮಿಕ ಕುಟುಂಬಗಳಿಗೆ ನಿಜವಾದ ಆಸರೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ಜನರಲ್ ವರ್ಕರ್ಸ್ ಹಮಾಲರು ಮತ್ತು ಚಕ್ಕಡಿಯವರ ಸಮಿತಿಯ ಕಾರ್ಯದರ್ಶಿ ಇಮಾಮಸಾಬ ದಾವಲಸಾಬ ರೋಣದ, ಖಜಾಂಚಿ ಶಂಕ್ರಪ್ಪ ಯರಗುಡಿ, ಸದಸ್ಯರಾದ ಹುಸೇನಸಾಬ ವಡವಿ, ಬಸವರಾಜ ಸೂಡಿ, ಇಮಾಮಹುಸೇನ ರೋಣದ, ದೇವರಾಜ ಬಿನ್ನಾಳ, ಫಕ್ರುಸಾಬ ಘಟ್ಟದ ಸೇರಿದಂತೆ ಹಲವು ಹಮಾಲಿ ಬಂಧುಗಳು ಉಪಸ್ಥಿತರಿದ್ದು, ಅಗಲಿದ ಸಹೋ

‘ಇದು ಯಾರಪ್ಪನ ಜಾಗ ಅಲ್ಲ’: ನೆಪೋಟಿಸಂ ಪ್ರಶ್ನೆಗೆ ಸುದೀಪ್ ಆಕ್ರೋಶ

ಬೆಂಗಳೂರು: ‘ಮ್ಯಾಂಗೋ ಪಚ್ಚ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ನಟ ಸಂಚಿತ್ ಸಂಜೀವ್ ಹಾಗೂ ನಟ ಕಿಚ್ಚ ಸುದೀಪ್ ಅವರಿಗೆ ನೆಪೋಟಿಸಂ ಕುರಿತು ಕೇಳಿದ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ಸಂಚಿತ್ ಸಂಜೀವ್, ಮೊದಲ ಸಿನಿಮಾದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ತನ್ನ ಕೆಲಸವೇ ಜನರಿಗೆ ಉತ್ತರ ನೀಡುತ್ತಿದೆ ಎಂದು ಹೇಳಿದರು.

ಆದರೆ ಮಾಧ್ಯಮಗಳಿಂದ ನೆಪೋಟಿಸಂ ಪ್ರಶ್ನೆ ಕೇಳುತ್ತಿದ್ದಂತೆಯೇ ಕಿಚ್ಚ ಸುದೀಪ್ ಗರಂ ಆಗಿ ಪ್ರತಿಕ್ರಿಯಿಸಿದರು. “ಈ ಪ್ರಶ್ನೆಯನ್ನು ಎಲ್ಲರಿಗೂ ಸಮಾನವಾಗಿ ಕೇಳಬೇಕು. ಬಾಲಿವುಡ್‌ನ ಪ್ರಶ್ನೆಯನ್ನು ಇಲ್ಲಿ ತರಬೇಡಿ” ಎಂದು ಹೇಳಿದರು.

ಕನ್ನಡ ಚಿತ್ರರಂಗದಲ್ಲಿ ಕುಟುಂಬ ಹಿನ್ನೆಲೆಗಿಂತ ಪ್ರತಿಭೆಗೆ ಹೆಚ್ಚಿನ ಮಹತ್ವ ಇದೆ ಎಂದು ಸುದೀಪ್ ಸ್ಪಷ್ಟಪಡಿಸಿದರು. “ಇಲ್ಲಿ ಕಲೆ ಇದ್ದರೆ ಮಾತ್ರ ಬೆಳೆಯಬಹುದು” ಎಂದು ಅವರು ಹೇಳಿದರು.

ತಮ್ಮ ಕುಟುಂಬದ ಉದಾಹರಣೆ ನೀಡಿದ ಅವರು, ತಮ್ಮ ಮಗಳು, ಅಕ್ಕನ ಮಕ್ಕಳು ಎಲ್ಲರೂ ತಮ್ಮ ಇಷ್ಟದಂತೆ ಬಂದಿದ್ದಾರೆ, ಆದರೆ ಎಲ್ಲರೂ ಸಿನಿಮಾ ರಂಗಕ್ಕೆ ಬಂದಿಲ್ಲ ಎಂದು ವಿವರಿಸಿದರು.

ಕೊನೆಯಲ್ಲಿ, ಕನ್ನಡ ಚಿತ್ರರಂಗದಲ್ಲಿ ನೆಪೋಟಿಸಂ ಎಂಬ ಚರ್ಚೆಗೆ ಜಾಗವಿಲ್ಲ ಎಂದು ಹೇಳಿದ ಸುದೀಪ್, ಈ ವಿಚಾರವನ್ನು ಇಲ್ಲಿ ಎಳೆದು ತರುವುದು ಸರಿಯಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ತಿರುಚ್ಚಿ ಈಸ್ಟ್ ಉಪಚುನಾವಣೆಗೆ ರಾಘವ್ ಲಾರೆನ್ಸ್ ಎಂಟ್ರಿ?: ವಿಜಯ್ ಪಕ್ಷದಿಂದ ಸ್ಪರ್ಧೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ವಿಷಯವೆಂದರೆ ತಿರುಚ್ಚಿ ಈಸ್ಟ್ ಕ್ಷೇತ್ರದ ಉಪಚುನಾವಣೆ. ಮುಖ್ಯಮಂತ್ರಿ ವಿಜಯ್ ಅವರು ರಾಜೀನಾಮೆ ನೀಡಿದ್ದ ಈ ಕ್ಷೇತ್ರದಿಂದ ಇದೀಗ ಖ್ಯಾತ ನಟ, ನಿರ್ದೇಶಕ ಹಾಗೂ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಜೋರಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಚರ್ಚೆ ಗರಿಗೆದರುವಂತಾಗಿದೆ. ವಿಜಯ್ ಅವರ ಪಕ್ಷವಾದ ಟಿವಿಕೆ ಪರವಾಗಿ ಲಾರೆನ್ಸ್ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ಅವರ ಅಭಿಮಾನಿಗಳ ಮಧ್ಯೆ ವೇಗವಾಗಿ ಹರಿದಾಡುತ್ತಿವೆ.

ಚಿತ್ರರಂಗದಲ್ಲಿ ಹೆಸರು ಮಾಡಿದ ರಾಘವ್ ಲಾರೆನ್ಸ್, ದೀರ್ಘಕಾಲದಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ಅನಾಥ ಮಕ್ಕಳು, ವಿಕಲಚೇತನರು ಮತ್ತು ವೃದ್ಧರ ನೆರವಿಗಾಗಿ ಅವರು ನಡೆಸುತ್ತಿರುವ ಕಾರ್ಯಗಳು ಸಾರ್ವಜನಿಕ ಮೆಚ್ಚುಗೆ ಪಡೆದಿವೆ. ಇದೇ ಕಾರಣಕ್ಕೆ ರಾಜಕೀಯ ಪ್ರವೇಶ ಮಾಡಿದರೆ ಅವರಿಗೆ ಜನಬೆಂಬಲ ದೊರೆಯಬಹುದು ಎಂಬ ಅಂದಾಜು ವ್ಯಕ್ತವಾಗುತ್ತಿದೆ.

ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. ತಿರುಚ್ಚಿ ಈಸ್ಟ್ ಉಪಚುನಾವಣೆ ದಿನಾಂಕವೂ ಇನ್ನೂ ಪ್ರಕಟವಾಗಿಲ್ಲ. ಹೀಗಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಸಮಯವಿದೆ ಎಂದು ಮೂಲಗಳು ತಿಳಿಸಿವೆ.

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ಸಚಿವ ಸಂಪುಟದಲ್ಲೇ ಮುಂದುವರಿದು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದಿದ್ದಾರೆ. ಅವರು ನಮ್ಮ ಸಚಿವ ಸಂಪುಟದ ಭಾಗವಾಗಿಯೇ ಮುಂದುವರಿಯಲಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ಪ್ರಶ್ನೆಗಳಿಗೆ ಇಂದು ಉತ್ತರಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿ ಈ ಬೆಳವಣಿಗೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದು, ಅನಗತ್ಯ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದ ಅವರು, ರಾಮಲಿಂಗಾರೆಡ್ಡಿ ಅವರು ಪಕ್ಷದೊಂದಿಗೆ ದೀರ್ಘಕಾಲದ ಬಾಂಧವ್ಯ ಹೊಂದಿದ್ದಾರೆ ಎಂದು ತಿಳಿಸಿದರು. ವಿದ್ಯಾರ್ಥಿ ರಾಜಕೀಯದ ದಿನಗಳಿಂದಲೇ ಅವರು ಕಾಂಗ್ರೆಸ್‌ನೊಂದಿಗೆ ಇದ್ದು, ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವಿ ನಾಯಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವಿಷಯವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ತಾವು ಸೇರಿ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದೇವೆ. ಅದರಂತೆ ಅವರು ಪಕ್ಷ ಮತ್ತು ಸರ್ಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿದ್ದಾರೆ ಎಂದು ಸುರ್ಜೇವಾಲ ವಿವರಿಸಿದರು.

ಬಿಜೆಪಿ ಈ ಬೆಳವಣಿಗೆಯನ್ನು ಆಧರಿಸಿ ಸಂಭ್ರಮ ಆಚರಿಸಲು ಮುಂದಾಗಿತ್ತು. ಆದರೆ ಈಗ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದ್ದು, ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ಸಚಿವರಾಗಿ ತಮ್ಮ ಕೆಲಸವನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದರು.

ಶಾರ್ಟ್ ಸರ್ಕ್ಯೂಟ್‌ಗೆ ಖಾಸಗಿ ಬಸ್ ಭಸ್ಮ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗ-ಉಡುಪಿ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಆತಂಕ ಸೃಷ್ಟಿಸಿದೆ. ಬಸ್‌ನಲ್ಲಿದ್ದ 17 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿರುವುದರಿಂದ ಸಂಭವನೀಯ ಭಾರಿ ದುರಂತ ತಪ್ಪಿದೆ.

ಮಾಸ್ತಿಕಟ್ಟೆ ಸಮೀಪ ಸಂಚರಿಸುತ್ತಿದ್ದ ವೇಳೆ ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಚಾಲಕ ಮತ್ತು ನಿರ್ವಾಹಕ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಪ್ರಯಾಣಿಕರು ಇಳಿದ ಕೆಲವೇ ಹೊತ್ತಿನಲ್ಲಿ ಬೆಂಕಿ ಇಡೀ ಬಸ್ ಅನ್ನು ಆವರಿಸಿದ್ದು, ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹುಲಿಕಲ್ ಘಾಟ್ ರಸ್ತೆಯ ಸಮಸ್ಯೆಯಿಂದ ಸಂಪರ್ಕ ಸಾರಿಗೆ ಸೇವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಈ ಬಸ್ ಉಡುಪಿನತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಘಟನೆ ಕುರಿತು ನಗರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಹುಲಿಕಲ್ ಘಾಟ್ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವೂ ಉಂಟಾಯಿತು.

error: Content is protected !!