ಬೆಂಗಳೂರು: ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸಣ್ಣ ರಸ್ತೆ ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ KA 01 MU 9969 ನೋಂದಣಿ ಸಂಖ್ಯೆಯ ಫೋರ್ಡ್ ಎಂಡೋವರ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಣ್ಣ ಅಪಘಾತ ಸಂಭವಿಸಿತ್ತು. ಘಟನಾ ಸ್ಥಳದಲ್ಲಿ ವಿನೀಶ್ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದಾದ ಬಳಿಕ ವಿನೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಹಾಗೂ ಅವರೇ ಕಾರು ಚಲಾಯಿಸುತ್ತಿದ್ದರು ಎಂಬ ಸುದ್ದಿಗಳು ವ್ಯಾಪಕವಾಗಿ ಹರಿದಾಡಿದ್ದವು.
ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಲಕ್ಷ್ಮಿ ದರ್ಶನ್, “ವಿನೀಶ್ ಅವರಿಗೆ ಯಾವುದೇ ಅಪಘಾತವಾಗಿಲ್ಲ. ಅವರು ಸಂಪೂರ್ಣ ಸುರಕ್ಷಿತರಾಗಿದ್ದು, ಆರೋಗ್ಯವಾಗಿದ್ದಾರೆ. ಘಟನೆ ನಡೆದ ವೇಳೆ ಅವರು ಕಾರು ಚಲಾಯಿಸುತ್ತಿರಲಿಲ್ಲ. ಎಂದಿನಂತೆ ಕುಟುಂಬದ ಚಾಲಕರೇ ವಾಹನ ಚಾಲನೆ ಮಾಡುತ್ತಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.
ಇದು ಬೆಂಗಳೂರಿನ ಟ್ರಾಫಿಕ್ನಲ್ಲಿ ಸಾಮಾನ್ಯವಾಗಿ ನಡೆಯುವ ಸಣ್ಣ ರಸ್ತೆ ಅಪಘಾತ ಮಾತ್ರವಾಗಿದ್ದು, ಘಟನೆಯಲ್ಲಿ ಭಾಗಿಯಾಗಿದ್ದ ಬೈಕ್ ಸವಾರರು ತಪ್ಪು ತಮ್ಮದೇ ಎಂದು ಒಪ್ಪಿಕೊಂಡು ಸ್ಥಳದಲ್ಲೇ ಕ್ಷಮೆಯಾಚಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಅಪಘಾತದ ಬಳಿಕ ಬೈಕ್ ಸವಾರರು ಸುರಕ್ಷಿತರಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿನೀಶ್ ಕಾರಿನಿಂದ ಇಳಿದಿದ್ದರು. ಆದರೆ ಆ ಕೆಲವೇ ಕ್ಷಣಗಳ ವಿಡಿಯೋವನ್ನು ತಪ್ಪು ರೀತಿಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
“ಒಂದು ಕುಟುಂಬವಾಗಿ ನಾವು ಈಗಾಗಲೇ ಕಷ್ಟದ ಸಮಯವನ್ನು ಎದುರಿಸುತ್ತಿದ್ದೇವೆ. ಇಂತಹ ಪರಿಶೀಲಿಸದ ಹಾಗೂ ಸುಳ್ಳು ಸುದ್ದಿಗಳ ಪ್ರಸಾರ ನಮ್ಮ ಆತಂಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಯಾವುದೇ ಸುದ್ದಿಯನ್ನು ಹಂಚುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಿ, ವದಂತಿಗಳನ್ನು ನಂಬಬೇಡಿ ಮತ್ತು ಹಂಚಿಕೊಳ್ಳಬೇಡಿ” ಎಂದು ವಿಜಯಲಕ್ಷ್ಮಿ ದರ್ಶನ್ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

