ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದೆ ಎಂಬ ಭಾವನೆ ರೈತರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಪ್ರಸ್ತುತ ಹೊರಡಿಸಿರುವ ಆದೇಶದ ವಿರುದ್ಧ ಕೂಡಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ನಿರಂತರವಾಗಿ ಸಂಕಷ್ಟ ಎದುರಿಸುತ್ತಿದೆ. ರಾಜ್ಯದ ಸಮಸ್ಯೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಪರಿಣಾಮಕಾರಿಯಾಗಿ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅಧಿಕಾರಿಗಳು ಏನೇ ಹೇಳಿದರೂ ರಾಜ್ಯದ ವಾಸ್ತವ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಸ್ತುತ ಆದೇಶದಂತೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರನ್ನು ಬಿಡಬೇಕಾಗಿದೆ. ಇದರಿಂದ ಕರ್ನಾಟಕದಿಂದ ಸುಮಾರು 7.5 ಟಿಎಂಸಿ ನೀರು ಹೊರಹೋಗಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ಕಬಿನಿ ಜಲಾಶಯದ ನೀರಿನ ಸಂಗ್ರಹ ಅರ್ಧಕ್ಕೆ ಇಳಿದಿದೆ. ಕೆಆರ್ಎಸ್ನಿಂದಲೂ ಪ್ರತಿದಿನ ಸುಮಾರು 5,000ರಿಂದ 6,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಇದರಿಂದ ಪ್ರತಿದಿನ ಸುಮಾರು ಅರ್ಧ ಟಿಎಂಸಿ ನೀರು ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಮಳೆಯಾಗುವ ಲಕ್ಷಣಗಳೂ ಕಾಣಿಸುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ನೀರಿನ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.
ಪ್ರತಿ ಬಾರಿ ತಮಿಳುನಾಡು ಸಲ್ಲಿಸುವ ಅರ್ಜಿಗೆ ಪ್ರತಿವಾದಿಯಾಗಿ ನಿಲ್ಲುವ ಬದಲು, ಕರ್ನಾಟಕವೇ ಪಿಟಿಷನರ್ ಆಗಬೇಕು ಎಂದು ಅವರು ಹೇಳಿದ್ದಾರೆ. ಕೇವಲ ಅಂಕಿ-ಅಂಶಗಳನ್ನು ಮಾತ್ರ ಸುಪ್ರೀಂ ಕೋರ್ಟ್ ಮುಂದೆ ಮಂಡಿಸದೆ, ನೀರು ಬಿಡುವುದರಿಂದ ರಾಜ್ಯದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆಯೂ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಶೇಷ ಹಿರಿಯ ನ್ಯಾಯವಾದಿಯನ್ನು ನೇಮಿಸಬೇಕು. ಈಗಿರುವ ವ್ಯವಸ್ಥೆಯಿಂದ ರಾಜ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಮುಖ್ಯಮಂತ್ರಿ ಕೂಡಲೇ ಈ ವಿಚಾರದಲ್ಲಿ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
ಮಂತ್ರಿಮಂಡಲ ರಚನೆ ಸೇರಿದಂತೆ ಹಲವು ವಿಚಾರಗಳಿಗೆ ದೆಹಲಿಗೆ ತೆರಳುವ ಮುಖ್ಯಮಂತ್ರಿ, ಕಾವೇರಿ ನೀರಿನ ವಿಚಾರದಲ್ಲೂ ದೆಹಲಿಗೆ ತೆರಳಿ ಕಾನೂನು ಹಾಗೂ ತಾಂತ್ರಿಕ ತಜ್ಞರೊಂದಿಗೆ ಬದಲಾಗಿರುವ ಪರಿಸ್ಥಿತಿ ಕುರಿತು ಚರ್ಚಿಸಬೇಕು. ರಾಜ್ಯದ ನ್ಯಾಯಾಂಗ ತಂಡಕ್ಕೆ ಹೊಸ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

