ಮಂಡ್ಯ: ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದ ವೇಳೆ ಬಿರುಗಾಳಿಯ ಅಬ್ಬರಕ್ಕೆ ದೋಣಿ ಮಗುಚಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.
ನಾಪತ್ತೆಯಾಗಿರುವ ಯುವಕನನ್ನು ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿ ಗ್ರಾಮದ ಮಧು (26) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಮಧು ಮೀನು ಹಿಡಿಯಲು ಕೆಆರ್ಎಸ್ ಡ್ಯಾಂ ಹಿನ್ನೀರು ಪ್ರದೇಶಕ್ಕೆ ದೋಣಿಯಲ್ಲಿ ತೆರಳಿದ್ದಾನೆ. ಈ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಅದರ ರಭಸಕ್ಕೆ ದೋಣಿ ನಿಯಂತ್ರಣ ತಪ್ಪಿ ಮಗುಚಿದೆ ಎಂದು ತಿಳಿದುಬಂದಿದೆ.
ದೋಣಿ ಮಗುಚಿದ ಪರಿಣಾಮ ಮಧು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಪ್ರಸ್ತುತ ನಾಪತ್ತೆಯಾದ ಯುವಕನಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳೀಯರು ಕೂಡ ಸಹಕಾರ ನೀಡುತ್ತಿದ್ದಾರೆ. ಈ ಘಟನೆ ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

